Home Blog Page 4

ಪ್ರಾಮಾಣಿಕ ಸೇವೆಯೇ ವ್ಯಕ್ತಿಯ ನಿಜವಾದ ಹಿರಿಮೆ: ಮುಪ್ಪಿನ ಬಸವಲಿಂಗ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹುದ್ದೆ, ಸ್ಥಾನಮಾನಕ್ಕಿಂತ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕತೆ, ಶ್ರದ್ಧೆ ಹಾಗೂ ಸಮರ್ಪಣೆಯಿಂದ ನಿರ್ವಹಿಸುವುದೇ ವ್ಯಕ್ತಿಯ ನಿಜವಾದ ಹಿರಿಮೆ ಎಂದು ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿ ಭಾರತಿ ಶಿರ್ಸಿ ಅವರ ಸೇವಾ ನಿವೃತ್ತಿ ಸನ್ಮಾನ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಶಿಕ್ಷಕರು ಮಕ್ಕಳ ಮನಸ್ಸಿನಲ್ಲಿ ಅಕ್ಷರದ ಜತೆಗೆ ಉತ್ತಮ ವಿಚಾರಗಳ ಬೀಜ ಬಿತ್ತಬೇಕು. ಕನ್ನಡ ಮಾಧ್ಯಮದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು ಎಂದು ಸ್ವಾಮೀಜಿ ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಭಾರತಿ ಶಿರ್ಸಿ, ಬಸವೇಶ್ವರ ಶಾಲೆಯಲ್ಲಿ ೨೨ ವರ್ಷಗಳ ಕಾಲ ಸಲ್ಲಿಸಿದ ಸೇವೆ ತಮ್ಮ ಜೀವನದ ಅಮೂಲ್ಯ ಅಧ್ಯಾಯವಾಗಿದೆ. ಸಂಸ್ಥೆಯೊಂದಿಗಿನ ಸಂಬಂಧ ಕೇವಲ ಉದ್ಯೋಗದ ಸಂಬಂಧವಲ್ಲ; ಅದು ಆತ್ಮೀಯ ಬಂಧವಾಗಿದೆ ಎಂದರು.

ರವೀಂದ್ರನಾಥ ದೊಡ್ಡಮೇಟಿ, ಡಾ. ಜಿ.ಕೆ. ಕಾಳೆ ಸೇರಿದಂತೆ ಗಣ್ಯರು ಭಾರತಿ ಶಿರ್ಸಿ ಅವರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಪ್ರಾಚಾರ್ಯ ವೈ.ಸಿ. ಪಾಟೀಲ, ಮುಖ್ಯ ಶಿಕ್ಷಕ ಸಂಗಮೇಶ ಹೂಲಗೇರಿ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

೨೨ ವರ್ಷಗಳ ಸೇವೆ ನನ್ನ ಜೀವನದ ಅಮೂಲ್ಯ ಅಧ್ಯಾಯ. ಸಂಸ್ಥೆಯೊಂದಿಗಿನ ಸಂಬಂಧ ಕೇವಲ ಉದ್ಯೋಗದ ಸಂಬಂಧವಲ್ಲ; ಅದು ಗುರು–ಶಿಷ್ಯರ ಆತ್ಮೀಯ ಬಂಧ.
— ಭಾರತಿ ಶಿರ್ಸಿ, ನಿವೃತ್ತ ಶಿಕ್ಷಕಿ

ಗದಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನಕ್ಕೆ 6 ಹೆಸರು: ಯುವಜನರಿಗೆ ಶೇ.50ರಷ್ಟು ಆದ್ಯತೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್‌ ಜಿಲ್ಲಾ ಘಟಕಗಳ ಅಧ್ಯಕ್ಷರ ಆಯ್ಕೆಯಲ್ಲಿ ಶೇ.50ರಷ್ಟು ಯುವಜನರಿಗೆ ಆದ್ಯತೆ ನೀಡಲು ಪಕ್ಷದ ವರಿಷ್ಠರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ವೀಕ್ಷಕ ವಿವೇಕ್‌ ಬನ್ಸಾಲ್‌ ಹೇಳಿದರು.

ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಆರು ಮಂದಿಯ ಹೆಸರುಗಳನ್ನು ಪ್ರಸ್ತಾಪಿಸಲಾಗಿದ್ದು, ಈ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲಾಗುವುದು. ಅಂತಿಮವಾಗಿ ವರಿಷ್ಠರು ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷರಾಗಲು ಕನಿಷ್ಠ ಐದು ವರ್ಷ ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿರಬೇಕು ಎಂಬ ನಿಯಮವಿದೆ. ಇದರೊಂದಿಗೆ ಯುವಜನರು, ಮಹಿಳೆಯರು ಹಾಗೂ ದಲಿತರಿಗೆ ಪ್ರಾತಿನಿಧ್ಯ ಕಲ್ಪಿಸುವುದಕ್ಕೂ ಆದ್ಯತೆ ನೀಡಲಾಗುವುದು. ಪಕ್ಷದ ಸಂಘಟನೆ ಮತ್ತು ಸಶಕ್ತೀಕರಣಕ್ಕಾಗಿ ‘ಸಂಘಟನಾ ಸೃಜನಾ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಯುವಜನರ ಧ್ವನಿಯಾಗಿದ್ದಾರೆ ರಾಹುಲ್‌ ಗಾಂಧಿ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಯುವಜನರು ನಡೆಸಿದ ಹೋರಾಟಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೊದಲಿನಿಂದಲೂ ಧ್ವನಿಯಾಗಿದ್ದರು. ದೇಶದ ಯುವಜನರ ಸಮಸ್ಯೆಗಳನ್ನು ಅವರು ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ. ಭಾರತ ಜಗತ್ತಿನಲ್ಲೇ ಅತಿ ಹೆಚ್ಚು ಯುವಶಕ್ತಿ ಹೊಂದಿರುವ ದೇಶವಾಗಿದ್ದು, ಈ ಯುವಶಕ್ತಿಯ ಧ್ವನಿಯಾಗಿ ರಾಹುಲ್‌ ಗಾಂಧಿ ಕೆಲಸ ಮಾಡುತ್ತಿದ್ದಾರೆ ಎಂದು ಬನ್ಸಾಲ್‌ ಹೇಳಿದರು.

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಕುರಿತು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇದರಿಂದ ಯುವಜನತೆ ಸಂಕಷ್ಟಕ್ಕೆ ಸಿಲುಕಿದೆ. ದೇಶದ ವಿದೇಶಾಂಗ ಹಾಗೂ ಆರ್ಥಿಕ ಪರಿಸ್ಥಿತಿಯೂ ಚಿಂತಾಜನಕವಾಗಿದೆ. ದೇಶವನ್ನು ಸಮರ್ಪಕವಾಗಿ ಮುನ್ನಡೆಸಲು ವಿಫಲವಾಗಿರುವ ಕೇಂದ್ರ ಸರ್ಕಾರ ಕಾಂಗ್ರೆಸ್‌ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಮಲ್ಲಿಕಾರ್ಜುನ ಅಕ್ಕಿ, ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್ಲ, ಕೆಪಿಸಿಸಿ ಕಾರ್ಯದರ್ಶಿ ಸತೀಶ ಮೆಹರವಾಡೆ, ಮುಖಂಡರಾದ ರಾಬರ್ಟ್‌ ದದ್ದಾಪುರಿ, ಯುವ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಮುಖಂಡರಾದ ವಾಸಣ್ಣ ಕುರುಡಗಿ, ಸುಜಾತ ದೊಡ್ಡಮನಿ, ಮಿಥುನ್ ಪಾಟೀಲ, ಸಿದ್ದು ಪಾಟೀಲ, ಅಶೋಕ ಮಂದಾಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾವಿನಲ್ಲೂ ಇಬ್ಬರ ಬಾಳಿಗೆ ಬೆಳಕಾದ ಕಲಾವಿದ ವಿಜಯಕುಮಾರ

0

ವಿಜಯಸಾಕ್ಷಿ ಸುದ್ದಿ, ಗದಗ: ರಂಗಭೂಮಿ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ವಿಜಯಕುಮಾರ ವಾಸುದೇವಸಾ ಜಿತೂರಿ (೬೪) ಅವರು ಸೋಮವಾರ ಬೆಟಗೇರಿಯ ಸ್ವಗೃಹದಲ್ಲಿ ನಿಧನರಾದರು.

ಅವರ ನಿಧನದ ಬಳಿಕ ಕುಟುಂಬದವರು ಮಾನವೀಯ ನಿರ್ಧಾರ ಕೈಗೊಂಡಿದ್ದು, ನೇತ್ರದಾನಕ್ಕೆ ಸಮ್ಮತಿ ಸೂಚಿಸಿದ್ದಾರೆ. ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ನೇತ್ರ ತಜ್ಞರ ತಂಡ ನೇತ್ರದಾನ ಪ್ರಕ್ರಿಯೆ ನೆರವೇರಿಸಿತು.

ವಿಜಯಕುಮಾರ ಜಿತೂರಿ ಅವರು ತಾಯಿ, ಪತ್ನಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ಬೆಟಗೇರಿಯಲ್ಲಿ ನೆರವೇರಿತು.

ಲಯನ್ಸ್ ಕ್ಲಬ್‌ನ ರಮೇಶ ಶಿಗ್ಲಿ, ರಾಜಣ್ಣ ಮಲ್ಲಾಡದ, ಗಣಪತಸಾ ಮೇರವಾಡೆ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಜಲಮೂಲಗಳ ಪುನಶ್ಚೇತನಕ್ಕೆ ವಿಬಿಜಿ ರಾಮ್‌ಜಿ ಬಲ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರ ವಲಸೆ ತಡೆಗಟ್ಟುವುದರ ಜತೆಗೆ ಮಣ್ಣು–ನೀರು ಸಂರಕ್ಷಣೆ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ವಿಬಿಜಿ ರಾಮ್‌ಜಿ ಯೋಜನೆ ಪೂರಕವಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ (ವಿಬಿಜಿ ರಾಮ್‌ಜಿ) ಕುಮಾರ ಪೂಜಾರ ಹೇಳಿದರು.

ಗದಗ ತಾಲೂಕಿನ ಅಂತೂರ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಜನೆಯಡಿ ಕೂಲಿ ಮೊತ್ತವನ್ನು ₹382ಕ್ಕೆ ಹೆಚ್ಚಿಸಲಾಗಿದ್ದು, ಎನ್‌ಎಂಎಂಎಸ್ ತಂತ್ರಾಂಶದ ಮೂಲಕ ದಿನಕ್ಕೆ ಎರಡು ಬಾರಿ ಹಾಜರಾತಿ ದಾಖಲಿಸಿ, ಅಳತೆಗೆ ಅನುಗುಣವಾಗಿ ಕೂಲಿ ಪಾವತಿಸಲಾಗುತ್ತದೆ. ಪುರುಷರು ಹಾಗೂ ಮಹಿಳೆಯರಿಗೆ ಯಾವುದೇ ತಾರತಮ್ಯವಿಲ್ಲದೆ ಸಮಾನ ಕೂಲಿ ನೀಡಲಾಗುತ್ತದೆ. ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಹಾಯಕ ನಿರ್ದೇಶಕ (ಪಂರಾ) ಶಿವಕುಮಾರ ವಾಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ಹಾಗೂ ಅಕುಶಲ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವ ಮೂಲಕ ವಿಬಿಜಿ ರಾಮ್‌ಜಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿದೆ. ಕಾಮಗಾರಿಗಳಲ್ಲಿ ಎನ್‌ಎಂಎಂಎಸ್ ತಂತ್ರಾಂಶದ ಮೂಲಕ ಪ್ರತಿದಿನ ಎರಡು ಬಾರಿ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ ಎಂದರು.

ಅಂತೂರ–ಬೆಂತೂರ ಗ್ರಾಮದ ಬೂದೀಶ್ವರ ಸಂಸ್ಥಾನ ಮಠದ ಡಾ. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶಗೌಡ ಪಾಟೀಲ, ಕಾರ್ಯದರ್ಶಿ ಶಾಂತಯ್ಯ ಪ್ರಭಯ್ಯನಮಠ, ಟಿಎಇ ಪ್ರದೀಪ್ ನರೇಗಲ್ಲ, ಗ್ರಾಪಂ ಸಿಬ್ಬಂದಿ ಮಹಾತೇಶ ಮಜ್ಜಿಗುಡ್ಡ, ಅಶೋಕ ಜಿನಗಿ, ಬಿಎಫ್‌ಟಿ ದಾವಲಸಾಬ್ ಚಳ್ಳಮರದ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.

ಸಚಿನ್ ಡಿ. ಪಾಟೀಲರಿಗೆ ಡಿಸಿಸಿ ಅಧ್ಯಕ್ಷ ಪಟ್ಟಕ್ಕೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್ ಡಿ. ಪಾಟೀಲ ಅವರನ್ನು ಗದಗ ಜಿಲ್ಲಾ ಕಾಂಗ್ರೆಸ್‌ ಸಮಿತಿ (ಡಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಕಾಂಗ್ರೆಸ್‌ ಮುಖಂಡರಾದ ಅನ್ವರ ಶಿರಹಟ್ಟಿ ಹಾಗೂ ಭಾಷಾಸಾಬ ಮಲ್ಲಸಮುದ್ರ ಒತ್ತಾಯಿಸಿದ್ದಾರೆ.

ಈ ಕುರಿತು ಗದಗ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ವೀಕ್ಷಕರಾಗಿರುವ ಎಐಸಿಸಿ ಕಾರ್ಯದರ್ಶಿ ವಿವೇಕ್‌ ಬನ್ಸಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಚಿನ್ ಡಿ. ಪಾಟೀಲ ಅವರು ಕಳೆದ 35 ವರ್ಷಗಳಿಂದ ಕಾಂಗ್ರೆಸ್‌ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ದುಡಿದಿದ್ದಾರೆ. ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ಹೋಬಳಿ ಮಟ್ಟದಿಂದ ಬೂತ್‌ಮಟ್ಟದವರೆಗೆ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅನ್ವರ ಶಿರಹಟ್ಟಿ ತಿಳಿಸಿದ್ದಾರೆ.

ವಿಧಾನಸಭೆ, ಲೋಕಸಭೆ, ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸಂಘಟನೆಗೆ ತಮ್ಮದೇ ಆದ ಕಾರ್ಯಕರ್ತರ ಪಡೆಯೊಂದಿಗೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು, ರೈತರು, ದಲಿತರು, ಕೂಲಿ ಕಾರ್ಮಿಕರು, ಮಹಿಳೆಯರು, ದುರ್ಬಲ ವರ್ಗದವರು ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವ ಸಚಿನ್ ಡಿ. ಪಾಟೀಲ ಅವರಿಗೆ ದೂರದೃಷ್ಟಿಯ ನಾಯಕತ್ವ ಗುಣಗಳಿವೆ. ಸರಳ, ಸಜ್ಜನ ಹಾಗೂ ಎಲ್ಲ ವರ್ಗದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರೆಂಬ ಹೆಗ್ಗಳಿಕೆ ಅವರಿಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಳಮಟ್ಟದಿಂದ ಪಕ್ಷ ಸಂಘಟಿಸಿದ ನಿಷ್ಠಾವಂತ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವುದರಿಂದ ಕಾಂಗ್ರೆಸ್‌ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ. ಸಚಿನ್ ಡಿ. ಪಾಟೀಲರಿಗೆ ಅವಕಾಶ ನೀಡಿದರೆ 2028ರ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವಿಗೆ ಅನುಕೂಲವಾಗಲಿದೆ ಎಂದು ಅನ್ವರ ಶಿರಹಟ್ಟಿ ಹಾಗೂ ಭಾಷಾಸಾಬ ಮಲ್ಲಸಮುದ್ರ ಒತ್ತಾಯಿಸಿದ್ದಾರೆ.

ಗದಗದಲ್ಲಿ ₹164 ಕೋಟಿ ಬೆಳೆ ಹಾನಿ: 1.52 ಲಕ್ಷ ರೈತರಿಗೆ ಬೆಳೆ ವಿಮೆ

0

ವಿಜಯಸಾಕ್ಷಿ ಸುದ್ದಿ, ಗದಗ/ಬೆಂಗಳೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಭಾರಿ ಹಾನಿಯಾಗಿದ್ದು, ಪ್ರಾಥಮಿಕ ಅಂದಾಜಿನಂತೆ ₹164 ಕೋಟಿ ಬೆಳೆ ಹಾನಿಯಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಒಟ್ಟು 1,52,349 ರೈತರು ನೋಂದಾಯಿಸಿಕೊಂಡಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗಿನ ಸರ್ಕಾರಿ ನೌಕರರ ಸಂವಾದದಲ್ಲಿ ಮಾಹಿತಿ ನೀಡಿದರು.

ಗದಗ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ ಅವರು, ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಆ.7ರಿಂದ 9ರವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆ, ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಖುದ್ದಾಗಿ ಅವಲೋಕಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕೃಷಿ ಬೆಳೆಗಳಿಗೆ 1,39,653 ಹಾಗೂ ತೋಟಗಾರಿಕೆ ಬೆಳೆಗಳಿಗೆ 12,696 ರೈತರು ನೋಂದಾಯಿಸಿಕೊಂಡಿದ್ದು, ಒಟ್ಟು 1,52,349 ರೈತರು ಬೆಳೆ ವಿಮೆ ವ್ಯಾಪ್ತಿಗೆ ಬಂದಿದ್ದಾರೆ. ಮಳೆ ಕೊರತೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಉಂಟಾಗಿರುವ ಹಾನಿಯನ್ನು ವಿವಿಧ ಹಂತಗಳಲ್ಲಿ ಪರಿಶೀಲಿಸಲಾಗುತ್ತಿದ್ದು, ಈವರೆಗೆ ₹164 ಕೋಟಿ ಹಾನಿ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಗದಗ ಜಿಲ್ಲೆಯ ಬರ ಪರಿಸ್ಥಿತಿ, ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬರ ಪರಿಸ್ಥಿತಿಯಲ್ಲಿ ಅಧಿಕಾರಿಗಳು ತುರ್ತು ಸ್ಪಂದನೆಯೊಂದಿಗೆ ಕಾರ್ಯನಿರ್ವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಕರ್ನಾಟಕ ಸರ್ಕಾರದ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಸರ್ಕಾರದ ಯಶಸ್ಸಿನಲ್ಲಿ ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಪಾತ್ರ ಮಹತ್ವದ್ದಾಗಿದೆ. ಜನಸಾಮಾನ್ಯರ ಸೇವಕರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕೇಂದ್ರ ಸ್ಥಾನದಲ್ಲೇ ಅಧಿಕಾರಿಗಳು ಇರಲಿ

ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ತಮ್ಮ ನಿಯೋಜಿತ ಕೇಂದ್ರ ಸ್ಥಾನದಲ್ಲೇ ವಾಸವಿದ್ದು, ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗಬೇಕು. ಜನರ ಅರ್ಜಿಗಳು ಹಾಗೂ ಕುಂದುಕೊರತೆಗಳು ಅನಗತ್ಯವಾಗಿ ಜಿಲ್ಲಾ ಅಥವಾ ರಾಜ್ಯ ಮಟ್ಟಕ್ಕೆ ತಲುಪದಂತೆ ಸ್ಥಳೀಯ ಹಂತದಲ್ಲಿಯೇ ಪರಿಹರಿಸಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಪ್ರಮುಖ ಜವಾಬ್ದಾರಿ. ಕಚೇರಿಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಾಣಬೇಕು. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆಡಳಿತದಲ್ಲಿ ಪಾರದರ್ಶಕತೆ ತರಬೇಕು. ಭ್ರಷ್ಟಾಚಾರಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಬರದ ಹಿನ್ನೆಲೆಯಲ್ಲಿ ತುರ್ತು ಕ್ರಮ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ವರ್ಚುವಲ್ ಮೂಲಕ ಮಾತನಾಡಿ, ರಾಜ್ಯದ 240 ತಾಲೂಕುಗಳ ಪೈಕಿ 164 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದೆ. ರೈತರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದು, ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಯೂ ಎದುರಾಗಿದೆ ಎಂದರು.

ಗ್ರಾಮೀಣ ಭಾಗದಿಂದ ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿಬಿಜಿ ರಾಮ್ ಜಿ ಯೋಜನೆಯಡಿ ಈಗಾಗಲೇ 51 ಸಾವಿರ ಮಾನವ ದಿನಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಸೆಪ್ಟೆಂಬರ್‌ನಲ್ಲಿ ಬರ ಪರಿಸ್ಥಿತಿ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮಣ ಸವದಿ, ಸಂತೋಷ್ ಎಸ್. ಲಾಡ್, ಅಜಯ್ ಸಿಂಗ್, ವಿಜಯಾನಂದ ಕಾಶಪ್ಪನವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

ಜನಸೇವೆಯೇ ಜನಾರ್ದನ ಸೇವೆ

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಂಬ ಭೇದವಿಲ್ಲದೆ ರಾಜ್ಯದ ಪ್ರಗತಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬ ಸರ್ಕಾರಿ ನೌಕರರೂ ತಮ್ಮ ಜವಾಬ್ದಾರಿಯನ್ನು ಅರಿತು ನಿಸ್ವಾರ್ಥವಾಗಿ ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸಬೇಕು. ಪ್ರತಿಯೊಬ್ಬ ಸರ್ಕಾರಿ ನೌಕರರೂ ‘ಟೀಮ್ ಕರ್ನಾಟಕ’ವಾಗಿ ಜವಾಬ್ದಾರಿಯಿಂದ ಜನಸೇವೆ ಮಾಡಬೇಕು.

— ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ

ಹಾವೇರಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು; ಗಂಡನ ಮನೆಯ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

0

ಹಾವೇರಿ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತದೇಹವನ್ನು ಗಂಡನ ಮನೆಯ ಮುಂದೆ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಹಾನಗಲ್ ತಾಲೂಕಿನ ಕಾಲ್ವೇಕಲ್ಲಾಪೂರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು 24 ವರ್ಷದ ನೀಲಮ್ಮ ನೀರಲಗಿ ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳ ಹಿಂದೆ ನೀಲಮ್ಮ ಅವರ ಪತಿ ಶಿವಾನಂದ ಮೃತಪಟ್ಟಿದ್ದರು. ಇದೀಗ ನೀಲಮ್ಮ ಕೂಡ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಆಸ್ತಿ ವಿಚಾರವಾಗಿ ಗಂಡನ ಮನೆಯವರು ನೀಲಮ್ಮ ಅವರನ್ನು ಕೊಲೆ ಮಾಡಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. 5 ಎಕರೆ ಜಮೀನು ನೀಡಬೇಕಾಗುತ್ತದೆ ಎಂಬ ದುರಾಸೆಯಿಂದಲೇ ನೀಲಮ್ಮ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತದೇಹವನ್ನು ಗಂಡನ ಮನೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಇಬ್ಬರು ಮಕ್ಕಳನ್ನು ಕರೆತಂದು ಕೊಡಬೇಕು ಹಾಗೂ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಬಂಧಿಸಬೇಕು. ಅಲ್ಲಿಯವರೆಗೆ ಮೃತದೇಹವನ್ನು ಇಲ್ಲಿಂದ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಸಾವಿನ ನಿಖರ ಕಾರಣ ಹಾಗೂ ಕುಟುಂಬಸ್ಥರು ಮಾಡಿರುವ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

0

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶ ತಮ್ಮ ಗಮನಕ್ಕೆ ಬಂದಿದೆ. ಸದ್ಯ ಕಾವೇರಿ ಜಲಾನಯನ ಪ್ರದೇಶದಲ್ಲಿನ ಒಳಹರಿವಿನ ಪ್ರಮಾಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

“ನಮ್ಮ ಪರಿಸ್ಥಿತಿಯನ್ನು ನೋಡಿಕೊಂಡು ರೈತರನ್ನು ಕಾಪಾಡುವುದು ನಮ್ಮ ಕರ್ತವ್ಯ. ರೈತರನ್ನೂ ಕಾಪಾಡಬೇಕು, ಕೋರ್ಟ್ ಆದೇಶವನ್ನೂ ಪಾಲಿಸಬೇಕು. ಎರಡನ್ನೂ ಗಮನದಲ್ಲಿಟ್ಟುಕೊಂಡು ನೀರಾವರಿ ಸಚಿವರೊಂದಿಗೆ ಚರ್ಚಿಸುತ್ತೇವೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಬೆಳೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಸೂಚಿಸಲಾಗಿದೆ. ಕಾವೇರಿ ಮಾತ್ರವಲ್ಲದೆ ರಾಜ್ಯದ ಎಲ್ಲ ಜಲಾಶಯಗಳಲ್ಲಿರುವ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಬೆಳೆಗಳ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ರೈತರು ಆತಂಕ ಪಡಬಾರದು ಎಂದು ಮನವಿ ಮಾಡಿದ ಡಿಕೆಶಿ, “ತಾಳ್ಮೆಯಿಂದ ಇರಿ. ನಿಮಗಾಗಿಯೇ ನಾವು ಇದ್ದೇವೆ. ಜನರು ಅಧಿಕಾರ ನೀಡಿರುವುದು ರೈತರನ್ನು ಬದುಕಿಸಲು” ಎಂದು ಹೇಳಿದರು.

ಇದೇ ವೇಳೆ, ನಾಳೆ ಸಚಿವರು ಹಾಗೂ ಪಕ್ಷದ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಪಕ್ಷದ ಮುಂದಿನ ‘ಪ್ಲ್ಯಾನ್ ಆಫ್ ಆಕ್ಷನ್’ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ರಾಜಕೀಯವಾಗಿ ಎದುರಾಗಬಹುದಾದ ಬೆಳವಣಿಗೆಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದರು.

ನಾಡಿದ್ದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ನಾಳೆ ರಾಜಕೀಯ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತೊಂದು ಬೆಳವಣಿಗೆ; ದರ್ಶನ್ ಖುದ್ದು ಹಾಜರಿಗೆ ವಕೀಲರ ಅರ್ಜಿ

0

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮುಂದುವರಿದಿದೆ.

ಪ್ರಕರಣದ ವಿಚಾರಣೆ ವೇಳೆ ಕಳೆದ ಕೆಲ ದಿನಗಳಿಂದ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಆಗಸ್ಟ್ 12ರಂದು ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಪರ ವಕೀಲರು ಮಹತ್ವದ ಅರ್ಜಿ ಸಲ್ಲಿಸಿದ್ದಾರೆ.

ಪ್ರಮುಖ ಸಾಕ್ಷಿಯೊಬ್ಬರ ಪಾಟಿ ಸವಾಲು ಆಗಸ್ಟ್ 12ರಂದು ನಡೆಯಬೇಕಿತ್ತು. ಈ ಸಂದರ್ಭದಲ್ಲಿ ದರ್ಶನ್ ಅವರು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಿರಬೇಕು ಎಂದು ಅವರ ಪರ ವಕೀಲರು ಮನವಿ ಮಾಡಿದ್ದಾರೆ. ಇದುವರೆಗೆ ದರ್ಶನ್ ಸೇರಿದಂತೆ ಕೆಲವು ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುತ್ತಿದ್ದರು. ಆದರೆ ಸಾಕ್ಷಿಯ ಪಾಟಿ ಸವಾಲಿನ ವೇಳೆ ದರ್ಶನ್ ಅವರಿಂದ ಕೆಲವು ಮಾಹಿತಿಗಳನ್ನು ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರ ಖುದ್ದು ಹಾಜರಿ ಅಗತ್ಯ ಎಂದು ವಕೀಲರು ತಿಳಿಸಿದ್ದಾರೆ.

ದರ್ಶನ್ ಪರ ವಕೀಲರು ಸಿಆರ್‌ಪಿಸಿ ಸೆಕ್ಷನ್ 273ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪಾಟಿ ಸವಾಲು ನಡೆಸುವ ಮುನ್ನ ದರ್ಶನ್ ಅವರೊಂದಿಗೆ ಕೆಲವು ವಿಚಾರಗಳನ್ನು ಚರ್ಚಿಸಿ ಮಾಹಿತಿ ಪಡೆಯಬೇಕಿರುವುದರಿಂದ ಅವರನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಇದರ ಕುರಿತು ಆಗಸ್ಟ್ 12ರಂದು ವಾದ ಮಂಡಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ನಾಳೆ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಯನ್ನು ಮುಂದೂಡಲಾಗಿದೆ.

ಇದೇ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ದರ್ಶನ್ ಆಪ್ತ ಪ್ರದೋಷ್ ಅವರು ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ.

ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆಯನ್ನು ಆದಷ್ಟು ಬೇಗ ದಾಖಲಿಸಬೇಕು ಎಂದು ಅವರ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಆದರೆ ದರ್ಶನ್ ಪರ ವಕೀಲರು ಆಗಸ್ಟ್ 18ರವರೆಗೆ ಪ್ರದೋಷ್ ಅವರ ಹೇಳಿಕೆಯನ್ನು ದಾಖಲಿಸದಂತೆ ಮನವಿ ಮಾಡಿದ್ದರು.

ದರ್ಶನ್ ಪರ ವಕೀಲರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಆಗಸ್ಟ್ 18ರವರೆಗೆ ಪ್ರದೋಷ್ ಅವರ ಹೇಳಿಕೆ ಪಡೆಯದಂತೆ ಆದೇಶಿಸಿದೆ. ಹೀಗಾಗಿ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ದರ್ಶನ್ ಹಾಗೂ ಇತರ ಕೆಲವು ಆರೋಪಿಗಳು ಇದುವರೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುತ್ತಿದ್ದರು. ಇದೀಗ ಪ್ರಮುಖ ಸಾಕ್ಷಿಯ ಪಾಟಿ ಸವಾಲಿನ ಸಂದರ್ಭದಲ್ಲಿ ದರ್ಶನ್ ಖುದ್ದು ಹಾಜರಾಗಬೇಕು ಎಂದು ಅವರ ಪರ ವಕೀಲರೇ ಅರ್ಜಿ ಸಲ್ಲಿಸಿರುವುದು ಗಮನ ಸೆಳೆದಿದೆ.

ಇನ್ನು ಪ್ರಕರಣದ 12ನೇ ಆರೋಪಿ ಲಕ್ಷ್ಮಣ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ (ಎಸ್‌ಪಿಪಿ) ನ್ಯಾಯಾಲಯ ಸೂಚಿಸಿದೆ.

ಲಕ್ಷ್ಮಣ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಲಾಗಿದೆ.

ಒಟ್ಟಿನಲ್ಲಿ, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ಖುದ್ದು ಹಾಜರಿ ಕುರಿತ ಅರ್ಜಿ, ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿ ಹಾಗೂ ಲಕ್ಷ್ಮಣ್ ಅವರ ಜಾಮೀನು ಅರ್ಜಿ ಸೇರಿದಂತೆ ಹಲವು ವಿಚಾರಗಳು ಮುಂದಿನ ದಿನಗಳಲ್ಲಿ ನ್ಯಾಯಾಲಯದ ವಿಚಾರಣೆಯಲ್ಲಿ ಮಹತ್ವ ಪಡೆಯಲಿವೆ.

ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ಕಳ್ಳರು; 3 ಲಕ್ಷ ರೂ. ಮೌಲ್ಯದ ದಾಳಿಂಬೆ ಎಗರಿಸಿದ್ರು!

0

ಚಿಕ್ಕಬಳ್ಳಾಪುರ: ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 3 ಲಕ್ಷ ರೂ. ಮೌಲ್ಯದ ದಾಳಿಂಬೆ ಬೆಳೆಯನ್ನು ಕದ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗ್ರಾಮದಲ್ಲಿ ನಡೆದಿದೆ.

ರೈತ ಮಂಜುನಾಥ್‌ ಅವರ ತೋಟದಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ನೀರಿನ ಕೊರತೆಯ ನಡುವೆಯೂ ಹನಿ ಹನಿ ನೀರುಣಿಸಿ ಬೆಳೆ ಉಳಿಸಿಕೊಂಡಿದ್ದ ರೈತನಿಗೆ ಇದೀಗ ದೊಡ್ಡ ಆಘಾತ ಎದುರಾಗಿದೆ.

ತೋಟದಲ್ಲಿದ್ದ 2ರಿಂದ 3 ಟನ್ ದಾಳಿಂಬೆ ಕಳುವಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಕೆಜಿಗೆ ₹130ರಿಂದ ₹150ರವರೆಗೆ ಬೆಲೆ ಇತ್ತು ಎನ್ನಲಾಗಿದೆ. ಉತ್ತಮ ಬೆಲೆ ಸಿಗುತ್ತಿದ್ದ ಹಿನ್ನೆಲೆಯಲ್ಲಿ ಕಳ್ಳರು ದಾಳಿಂಬೆ ಬೆಳೆಯನ್ನು ಗುರಿಯಾಗಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಜುನಾಥ್ ಅವರು ಪತ್ನಿಯ ಚಿನ್ನಾಭರಣಗಳನ್ನು ಅಡವಿಟ್ಟು, ಸಾಲ ಮಾಡಿಕೊಂಡು ಮುಕ್ಕಾಲು ಎಕರೆಯಲ್ಲಿ ದಾಳಿಂಬೆ ಬೆಳೆದಿದ್ದರು. ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ, ಕಷ್ಟಪಟ್ಟು ಬೆಳೆಸಿದ್ದ ಫಸಲು ಕೈಗೆ ಬರುವಷ್ಟರಲ್ಲಿ ಕಳ್ಳರ ಪಾಲಾಗಿದೆ.

ಘಟನೆ ಬಳಿಕ ಸ್ಥಳೀಯ ರೈತರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಕಳ್ಳತನಕ್ಕೆ ಕಡಿವಾಣ ಹಾಕದಿದ್ದರೆ ಮತ್ತಷ್ಟು ರೈತರ ತೋಟಗಳಿಗೂ ಕಳ್ಳರು ಕನ್ನ ಹಾಕುವ ಆತಂಕವಿದೆ ಎಂದು ರೈತರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಅವರು ನಂದಿಗಿರಿಧಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.