ವಯನಾಡ್ (ಕೇರಳ): 2024ರ ಭೀಕರ ಭೂಕುಸಿತದ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ವಯನಾಡ್ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೆಪ್ಪಾಡಿ ಸಮೀಪದ ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿ ನಡೆಯುತ್ತಿದ್ದ ರಸ್ತೆ ಸುರಂಗ ನಿರ್ಮಾಣ ಕಾಮಗಾರಿ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ದಳಗಳು ತುರ್ತು ಶೋಧ ಕಾರ್ಯಾಚರಣೆ ಆರಂಭಿಸಿವೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಸುಮಾರು 30 ರಿಂದ 50 ಕಾರ್ಮಿಕರು ಅವಶೇಷಗಳಡಿ ಸಿಲುಕಿರಬಹುದೆಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಸುರಂಗ ಕಾಮಗಾರಿಯಲ್ಲಿ ತೊಡಗಿದ್ದ ಮೂವರು ಸಿಬ್ಬಂದಿಯನ್ನು ರಕ್ಷಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಭೂಕುಸಿತದ ತೀವ್ರತೆಗೆ ಸುರಂಗ ಕಾಮಗಾರಿಗೆ ಬಳಸುತ್ತಿದ್ದ ಕಂಟೇನರ್ಗಳು, ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್, ಕಾರುಗಳು ಹಾಗೂ ಮಣ್ಣು ತೆಗೆಯುವ ಯಂತ್ರಗಳು ಸಂಪೂರ್ಣ ಮಣ್ಣಿನಡಿ ಹೂತುಹೋಗಿವೆ. ಘಟನಾ ಸ್ಥಳದಲ್ಲಿ ಕೆಲವು ಮನೆಗಳು ಮತ್ತು ಹೋಂಸ್ಟೇಗಳೂ ಇರುವುದರಿಂದ ಸ್ಥಳೀಯರನ್ನು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೀನಾಕ್ಷಿ ಸೇತುವೆ ಸಮೀಪದ ನದಿ ಉಕ್ಕಿ ಹರಿಯುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ದೊಡ್ಡ ಮರಗಳು ಉರುಳಿಬಿದ್ದಿರುವುದು ಕಾರ್ಯಾಚರಣೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಆಡಳಿತವನ್ನು ಹೈ ಅಲರ್ಟ್ನಲ್ಲಿ ಇರಿಸಲಾಗಿದೆ. ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಅನಕ್ಕೊಂಪೊಯಿಲ್–ಮೆಪ್ಪಾಡಿ ಸುರಂಗ ಯೋಜನೆ ಕಳೆದ ವರ್ಷ ಆರಂಭವಾಗಿದ್ದು, ಈಗ ಅದೇ ಕಾಮಗಾರಿ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.

