Home Blog Page 4

ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ! ಸಂಗೀತ ಲೋಕಕ್ಕೆ ಆಘಾತ

0

ಮೈಸೂರು: ತಮ್ಮ ಸುಮಧುರ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ನಿಧನರಾಗಿದ್ದಾರೆ.

ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಎಸ್. ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು. 1938ರ ಏಪ್ರಿಲ್ 23ರಂದು ಜನಿಸಿದ್ದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಧ್ವನಿಯ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದರು.

ಹಳ್ಳಿಯ ಸೊಗಡಿನ ಜನಪದ ಗೀತೆಗಳಿಂದ ಹಿಡಿದು ಶಾಸ್ತ್ರೀಯ, ಭಾವಗೀತೆ ಹಾಗೂ ವಿವಿಧ ಪ್ರಕಾರದ ಹಾಡುಗಳಿಗೆ ತಮ್ಮ ಧ್ವನಿ ನೀಡಿದ್ದ ಎಸ್. ಜಾನಕಿ ಅವರು ಹಲವು ಭಾಷೆಗಳ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರರಂಗದಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ.

ಎಸ್. ಜಾನಕಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಂಗೀತ ಪ್ರೇಮಿಗಳು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಜೀವನದ ಯಶಸ್ಸು ಹುದ್ದೆಯಲ್ಲ, ಆತ್ಮತೃಪ್ತಿಯಲ್ಲಿ: ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಜೀವನದ ನಿಜವಾದ ಮೌಲ್ಯವು ಹುದ್ದೆ, ಅಧಿಕಾರ ಅಥವಾ ಸಂಪತ್ತಿನಲ್ಲಿ ಅಡಗಿಲ್ಲ. ಬದುಕಿನ ಕೊನೆಯಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲದೆ ಆತ್ಮತೃಪ್ತಿಯಿಂದ ಬದುಕುವುದೇ ನಿಜವಾದ ಯಶಸ್ಸು ಎಂದು ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು.

ನಗರದ ವಾಣಿಜ್ಯ ಭವನದ ಬನಪ್ಪ ಸಂಕಪ್ಪ ಸಂಕಣ್ಣವರ ಸಭಾಭವನದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಲಿಂ. ಪಂಚಾಕ್ಷರಯ್ಯ ಎಸ್. ಸಂಶಿಮಠ ಅವರ ಸ್ಮರಣಾರ್ಥ ಆಯೋಜಿಸಿದ್ದ ಸಂಶಿಮಠ ದತ್ತಿ ಉಪನ್ಯಾಸ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಯುವಕರು ಸರ್ಕಾರಿ ಉದ್ಯೋಗವನ್ನೇ ಅಂತಿಮ ಗುರಿಯಾಗಿಸಿಕೊಳ್ಳದೆ, ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗದತ್ತ ಮುಖ ಮಾಡಬೇಕು. ಸರ್ಕಾರ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ಹೀಗಾಗಿ ಸ್ವಾವಲಂಬನೆ, ಧೈರ್ಯ ಹಾಗೂ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯೋದ್ಯಮ ಸಂಸ್ಥೆಗಳು ವ್ಯಾಪಾರಕ್ಕೆ ಮಾತ್ರ ಸೀಮಿತವಾಗದೆ, ಸಮಾಜಮುಖಿ ಚಟುವಟಿಕೆಗಳು, ಪ್ರತಿಭೆಗಳ ಪ್ರೋತ್ಸಾಹ ಹಾಗೂ ಯುವಜನರಿಗೆ ಮಾರ್ಗದರ್ಶನ ನೀಡುವ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು. “ದೇಹಸಂಪತ್ತು, ವಿಚಾರಸಂಪತ್ತು ಮತ್ತು ಚೈತನ್ಯವೇ ವ್ಯಕ್ತಿಯ ನಿಜವಾದ ಸಂಪತ್ತು” ಎಂದು ಶ್ರೀಗಳು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಸಿದ್ರಾಮಯ್ಯ ಸಂಶಿಮಠ, ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವ ಉದ್ದೇಶದಿಂದ ಈ ದತ್ತಿ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ, ಹಿರಿಯರ ಮಾರ್ಗದರ್ಶನ ಯುವಜನರಿಗೆ ಸ್ಫೂರ್ತಿಯಾಗಿದ್ದು, ಉದ್ಯಮ, ಶಿಕ್ಷಣ, ಕ್ರೀಡೆ ಹಾಗೂ ಸಮಾಜಸೇವೆಯಲ್ಲಿ ಇನ್ನಷ್ಟು ಸಾಧನೆ ಮಾಡಲು ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳು, ಸೈಕ್ಲಿಸ್ಟ್‌ಗಳು, ತರಬೇತುದಾರರು, ಚಾರ್ಟರ್ಡ್ ಅಕೌಂಟೆಂಟ್‌ಗಳು, ರಕ್ತದಾನ, ಶಿಕ್ಷಣ, ವಿಶೇಷಚೇತನರ ಸೇವೆ, ಆರೋಗ್ಯ ಜಾಗೃತಿ, ರೋಟರಿ ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸಮಾಜಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನಿತರ ಪರವಾಗಿ ಶ್ರೀಧರ ಧರ್ಮಾಯತ, ಪ್ರವೀಣ ವಾರಕರ, ರಮೇಶ ಶಿಗ್ಲಿ, ಸರೋಜಾ ಕುಲಕರ್ಣಿ, ಮಾಲತಿ ಇನಾಮತಿ, ಪೂಜಾ ಗುಗ್ಗರಿ ಹಾಗೂ ಕವಿತಾ ದಂಡಿನ ಮಾತನಾಡಿದರು.

ಚನ್ನವೀರಪ್ಪ ಹುಣಸಿಕಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈಶಣ್ಣ ಮುನವಳ್ಳಿ, ವಿ.ಕೆ. ಗುರುಮಠ, ವಿಜಯಕುಮಾರ ಮಾಟಲದಿಣ್ಣಿ, ದತ್ತು ಬೇವಿನಕಟ್ಟಿ ಹಾಗೂ ರಾಘವೇಂದ್ರ ಕಾಲವಾಡ ಪರಿಚಯಿಸಿದರು. ದಾನಯ್ಯ ಗಣಾಚಾರಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜಯದೇವ ಮೆಣಸಗಿ, ಪ್ರಕಾಶ ಉಗಲಾಟದ, ಸಿದ್ರಾಮಪ್ಪ ಉಮಚಗಿ, ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಅರವಿಂದ ಕಾಮತ, ಚಂದ್ರು ಬಾಳಿಹಳ್ಳಿಮಠ ಸೇರಿದಂತೆ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ಕ್ರೀಡಾಪಟುಗಳು, ಸಮಾಜಸೇವಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

“ಜೀವನದ ನಿಜವಾದ ಸಂಪತ್ತು ಹುದ್ದೆ ಅಥವಾ ಹಣವಲ್ಲ; ಆತ್ಮತೃಪ್ತಿ, ಸಮಾಜಸೇವೆ ಮತ್ತು ಚೈತನ್ಯವೇ ಮನುಷ್ಯನ ಶ್ರೇಷ್ಠ ಆಸ್ತಿ.”

— ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ

‘ಕುಡುಕ ನನ್ಮಕ್ಳು’ ಮೊದಲ ಹಂತದ ಚಿತ್ರೀಕರಣ ಪೂರ್ಣ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕಲಾಭೂಮಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಕುಡುಕ ನನ್ಮಕ್ಳು’ ಚಿತ್ರದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.

‘ತುಂಬಾ ಒಳ್ಳೆಯವರು’ ಎಂಬ ಅಡಿ ಬರಹ ಹೊಂದಿರುವ ಚಿತ್ರದ ಚಿತ್ರೀಕರಣವು ಬೆಂಗಳೂರು ನಗರ ಹಾಗೂ ಹೊರವಲಯಗಳಲ್ಲಿ ಸುಮಾರು 20 ದಿನಗಳ ಕಾಲ ನಡೆದಿದ್ದು, ಕಾಮಿಡಿ ಕಿಲಾಡಿಗಳಾದ ಚಂದ್ರಪ್ರಭ, ವಿನೋದ್ ಗೊಬ್ರಗಾಲ, ಮಿಮಿಕ್ರಿ ಗೋಪಿ, ಸಚಿನ್ ಪುರೋಹಿತ್, ಚೈತ್ರಾ ಕೊಟ್ಟೂರು ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ನಟಿಸಿದ್ದಾರೆ.

ಚಿತ್ರಕ್ಕೆ ಆಸ್ಕರ್ ಕೃಷ್ಣ ನಿರ್ದೇಶನವಿದ್ದು, ಮಂಜು ಕವಿ ಸಾಹಿತ್ಯ ಮತ್ತು ಸಂಗೀತ ನೀಡಿದ್ದಾರೆ. ವಿನಯ್ ಗೌಡ ಛಾಯಾಗ್ರಹಣ, ಅಯ್ಯೂರ್ ಸಂಕಲನ, ವೆಂಕಟ್ ಸಂಭಾಷಣೆ ಬರೆದಿದ್ದಾರೆ. ಚಂದ್ರಶೇಖರ ಪಿಆರ್‌ಒ ಆಗಿದ್ದು, ಡಾ. ಪ್ರಭು ಗಂಜಿಹಾಳ ಹಾಗೂ ಡಾ. ವೀರೇಶ ಹಂಡಿಗಿ ಸಹಯೋಗ ನೀಡಿದ್ದಾರೆ.

ಅರುಣ ಎಲ್. ಶೆಟ್ಟಿ, ವೈಶಾಲಿ ಮುರಳೀಧರ್, ಪಲ್ಲವಿ ಅಗ್ನಿಹೋತ್ರಿ, ಬಾಬು ಎಸ್.ಎಚ್. (ತುಮಕೂರು), ರವಿ ನಾಯಕ್, ನಿಂಗರಾಜು ಬಿ., ಲೋಕೇಶ್ ಕೆ.ಎಸ್. ಹಾಗೂ ಸಿದ್ದಲಿಂಗಯ್ಯ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

25, 30, 35 ಮತ್ತು 40 ವರ್ಷದ ನಾಲ್ವರು ವ್ಯಕ್ತಿಗಳ ಬದುಕಿನ ಸುತ್ತ ಸಾಗುವ ಈ ಚಿತ್ರವು, ಮದ್ಯಪಾನದ ದುಷ್ಪರಿಣಾಮಗಳು ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಹಾಸ್ಯದ ಮೂಲಕ ಮನಮುಟ್ಟುವ ರೀತಿಯಲ್ಲಿ ಚಿತ್ರಿಸುತ್ತದೆ ಎಂದು ನಿರ್ದೇಶಕ ಆಸ್ಕರ್ ಕೃಷ್ಣ ತಿಳಿಸಿದ್ದಾರೆ.

ಚಿತ್ರವನ್ನು ದಸರಾ ಅಥವಾ ದೀಪಾವಳಿ ವೇಳೆಗೆ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.

ಅಕ್ರಮ ಮಣ್ಣು ಗಣಿಗಾರಿಕೆಗೆ ಕಡಿವಾಣ ಹಾಕಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮಣ್ಣು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ್ರ ಬಣ) ಜಿಲ್ಲಾಧ್ಯಕ್ಷ ಎಂ.ಪಿ. ಪರ್ವತಗೌಡ್ರ ಎಚ್ಚರಿಕೆ ನೀಡಿದರು.

ಈ ಕುರಿತು ಕರವೇ ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಇತರ ಜಿಲ್ಲೆಗಳಿಗಿಂತ ಗದಗ ಜಿಲ್ಲೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದರಿಂದ ಅಕ್ರಮ ದಂಧೆ ನಿರಾತಂಕವಾಗಿ ಸಾಗುತ್ತಿದೆ ಎಂದು ಆರೋಪಿಸಿದರು.

ಕಾನೂನು ಹಾಗೂ ನಿಯಮಾವಳಿಗಳನ್ನು ಸಂಪೂರ್ಣ ಉಲ್ಲಂಘಿಸಿ ಹಗಲಿರುಳು ಅಕ್ರಮ ಮಣ್ಣು ಸಾಗಾಟ ನಡೆಯುತ್ತಿದ್ದು, ಇದರಿಂದ ಸರ್ಕಾರದ ಆದಾಯಕ್ಕೂ ನಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ದಾಳಿ ನಡೆಸಿ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸಯ್ಯ ಗುಡ್ಡಿಮಠ, ಶರಣಪ್ಪ ಹೊನ್ನಪ್ಪನವರ, ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪಾರ್ವತಿ ಪಾಟೀಲ, ಲಕ್ಷ್ಮಿ ಶಿವಸಿಂಪಿಗೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪರಶುರಾಮ ಬನ್ನುರ, ರೈತ ಸಂಘದ ಬಸವರಾಜ ಬಜಂತ್ರಿ, ಮಂಜುನಾಥ ಹೊನ್ನಪ್ಪನವರ, ಮಂಜುನಾಥ ಭಜಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಅಕ್ರಮ ಮಣ್ಣು ಗಣಿಗಾರಿಕೆಗೆ ಜಿಲ್ಲಾಡಳಿತ ತಕ್ಷಣ ಕಡಿವಾಣ ಹಾಕಬೇಕು. ಇಲ್ಲವಾದರೆ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ತೀವ್ರ ಹೋರಾಟ ಆರಂಭಿಸಲಾಗುವುದು.”

– ಎಂ.ಪಿ. ಪರ್ವತಗೌಡ್ರ, ಜಿಲ್ಲಾಧ್ಯಕ್ಷ, ಕರವೇ (ಎಚ್. ಶಿವರಾಮೇಗೌಡ್ರ ಬಣ)

ವಿದ್ಯಾರ್ಥಿಗಳೊಂದಿಗೆ ಪರಿಸರ ಸಂರಕ್ಷಣೆಯ ಅಭಿಯಾನ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ತಂಬ್ರಹಳ್ಳಿ ಪೊಲೀಸ್ ಠಾಣೆ ಹಾಗೂ ವಸತಿ ಗೃಹದ ಆವರಣದಲ್ಲಿ ಕೆಪಿಜಿ ಶಾಲೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸುಮಾರು 200 ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಮುಂದಿನ ಪೀಳಿಗೆಗೂ ಉತ್ತಮ ಪರಿಸರವನ್ನು ಉಳಿಸಬೇಕಾದರೆ ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಹೇಳಿದರು. “ಪರಿಸರಕ್ಕಾಗಿ ನಾವು, ನಮಗಾಗಿ ಪರಿಸರ” ಎಂಬ ಸಂದೇಶದೊಂದಿಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪಿಎಸ್‌ಐ ನಾಗರಾಜ ಕೊಟಗಿ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಜಿ. ಗಿರೀಶ್, ವಿಎಸ್‌ಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಮಂಜುನಾಥ ಪಾಟೀಲ್, ಬಣಕಾರ ಕೊಟ್ರೇಶ್, ಪೊಲೀಸ್ ಸಿಬ್ಬಂದಿಗಳಾದ ಪ್ರಸನ್ನ, ಕಿರಣ್, ಚೇತನ್, ಚೌಡಪ್ಪ, ಕೊಟ್ರೇಶ್, ಗಣೇಶ್, ಹೈಸ್ಕೂಲ್‌ನ ಪ್ರಶಾಂತ ಹಾಗೂ ಗಡ್ಡಿ ಚನ್ನಬಸವ ಸೇರಿದಂತೆ ಹಲವರು ಭಾಗವಹಿಸಿದ್ದರು.

ದುಷ್ಕರ್ಮಿಗಳಿಂದ ಸರಸ್ವತಿ ದೇವಿ ಮೂರ್ತಿ ಭಗ್ನ: ಆರೋಪಿಗಳ ಬಂಧನಕ್ಕೆ ಆಗ್ರಹ

0

ಗದಗ: ಜಿಲ್ಲೆಯಲ್ಲಿ ಮತ್ತೆ ದೇವರ ಮೂರ್ತಿ ವಿಕೃತಿಗೊಳಿಸಿದ ಘಟನೆ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳು ನಗರದ ಐತಿಹಾಸಿಕ ಶ್ರೀ ಸರಸ್ವತಿ ದೇವಿ ಮೂರ್ತಿಯ ಎದೆಭಾಗವನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ.

ಗದಗ ನಗರದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸರಸ್ವತಿ ದೇವಸ್ಥಾನದಲ್ಲಿ ಈ ಕೃತ್ಯ ನಡೆದಿದ್ದು, ಘಟನೆ ನಿನ್ನೆ ರಾತ್ರಿ ನಡೆದಿರಬಹುದೆಂದು ಶಂಕಿಸಲಾಗಿದೆ. ಶನಿವಾರ ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ.

8ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಈ ದೇವಾಲಯ ಕೇಂದ್ರ ಪುರಾತತ್ವ ಇಲಾಖೆಯ ಅಧೀನದಲ್ಲಿದೆ. ದೇವಾಲಯದ ಐತಿಹಾಸಿಕ ಮಹತ್ವದ ನಡುವೆಯೇ ಮೂರ್ತಿಗೆ ಹಾನಿ ಉಂಟುಮಾಡಿರುವುದು ಭಕ್ತರು ಹಾಗೂ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಐತಿಹಾಸಿಕ ದಾಖಲೆಗಳ ಪ್ರಕಾರ, 16ನೇ ಶತಮಾನದ ಯುದ್ಧದ ಸಂದರ್ಭದಲ್ಲಿಯೂ ಈ ಮೂರ್ತಿಗೆ ಹಾನಿಯಾಗಿತ್ತು. ಇದೀಗ ಮತ್ತೊಮ್ಮೆ ಮೂರ್ತಿ ವಿಕೃತಿಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಕರಣ ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ.

14 ವರ್ಷದ ಅಪ್ರಾಪ್ತೆಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಬಾಲಕಿ

0

ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಜುಲೈ 8ರಂದು ಹೆಚ್ಚಿನ ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲಾದ ಬಾಲಕಿಗೆ ಮನೆಯಲ್ಲೇ ಹೆರಿಗೆಯಾಗಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸದ್ಯ ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಅಪ್ರಾಪ್ತೆಯಾದ ಕಾರಣ ಆಕೆಗೆ ‘ನಿರ್ಭಯಾ ವಾರ್ಡ್‌’ನಲ್ಲಿ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯ ಪ್ರಕಾರ, ಬಾಲಕಿ ಗರ್ಭಿಣಿಯಾಗಿದ್ದ ವಿಷಯವನ್ನು ಪೋಷಕರು ಮುಂಚಿತವಾಗಿ ತಿಳಿಸಿರಲಿಲ್ಲ. ಅಲ್ಲದೆ, ಆಸ್ಪತ್ರೆಗೆ ದಾಖಲಾಗಿರುವ ಬಾಲಕಿಯೊಂದಿಗೆ ಪಾಲಕರು ಇಲ್ಲದಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಪ್ರಾಪ್ತೆಯ ಗರ್ಭಧಾರಣೆಗೆ ಕಾರಣವಾದ ಸಂದರ್ಭಗಳು, ಲೈಂಗಿಕ ದೌರ್ಜನ್ಯ ಅಥವಾ ಇತರೆ ಕಾನೂನು ಉಲ್ಲಂಘನೆಗಳ ಕುರಿತು ತನಿಖೆ ನಡೆಸುವ ಸಾಧ್ಯತೆ ಇದೆ.

‘ಸಂಭಾವನೆ ಕೊಟ್ಟ ಬಳಿಕವೂ ಡಬ್ಬಿಂಗ್ ಬೇಡ ಎಂದರು’; ‘ಕರಾವಳಿ’ ವಿವಾದಕ್ಕೆ ಪ್ರಜ್ವಲ್ ಉತ್ತರ

ಬೆಂಗಳೂರು: ‘ಕರಾವಳಿ’ ಚಿತ್ರದ ಸುತ್ತ ನಡೆಯುತ್ತಿರುವ ವಿವಾದದ ಮಧ್ಯೆ ನಟ ಪ್ರಜ್ವಲ್ ದೇವರಾಜ್ ತಮ್ಮ ಮೌನ ಮುರಿದಿದ್ದಾರೆ. ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರು ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡಿರುವ ಅವರು, ನಿಜವಾದ ಕಾರಣಗಳನ್ನು ಬಹಿರಂಗಪಡಿಸುವ ಮೂಲಕ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಟ್ರೇಲರ್ ಬಿಡುಗಡೆಯ ವೇಳೆ ತಮ್ಮ ಪಾತ್ರಕ್ಕೆ ಅನುಮತಿಯಿಲ್ಲದೆ ಮತ್ತೊಬ್ಬರಿಂದ ಡಬ್ಬಿಂಗ್ ಮಾಡಲಾಗಿತ್ತು. ಇದೇ ವೇಳೆ ತಮ್ಮ ಸಂಭಾವನೆಯೂ ಸಂಪೂರ್ಣವಾಗಿ ಪಾವತಿಯಾಗಿರಲಿಲ್ಲ. ಈ ಎರಡೂ ಕಾರಣಗಳಿಂದಲೇ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ ಎಂದು ಪ್ರಜ್ವಲ್ ಹೇಳಿದ್ದಾರೆ.

ಸಿಕ್ಸ್ ಪ್ಯಾಕ್ ವಿಚಾರವನ್ನು ಮುಂದಿಟ್ಟಿರುವ ಚಿತ್ರತಂಡದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ದೈಹಿಕ ತಯಾರಿಗೂ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಾಕಿ ಹಣ ಪಾವತಿಸಿದ ತಕ್ಷಣ ಡಬ್ಬಿಂಗ್ ಮಾಡಲು ಮತ್ತು ಚಿತ್ರದ ಪ್ರಚಾರದಲ್ಲಿ ಪಾಲ್ಗೊಳ್ಳಲು ತಾವು ಸಿದ್ಧವಾಗಿದ್ದೆ ಎಂದಿದ್ದಾರೆ.

ಸಂಭಾವನೆ ಪಾವತಿಯಾದ ನಂತರ ಚಿತ್ರತಂಡವೇ ತಮ್ಮ ಮ್ಯಾನೇಜರ್‌ಗೆ ಕರೆ ಮಾಡಿ ಡಬ್ಬಿಂಗ್ ಹಾಗೂ ಪ್ರಚಾರಕ್ಕೆ ಬರಬೇಕಿಲ್ಲ ಎಂದು ತಿಳಿಸಿತ್ತು. ಹೀಗಾಗಿ ಚಿತ್ರದಿಂದ ದೂರ ಉಳಿದಿರುವುದು ತಮ್ಮ ನಿರ್ಧಾರವಲ್ಲ, ಚಿತ್ರತಂಡದ ನಿರ್ಧಾರ ಎಂದು ಪ್ರಜ್ವಲ್ ಹೇಳಿದ್ದಾರೆ.

ತಮ್ಮ ಧ್ವನಿ ಪಾತ್ರಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿರುವುದು ನೋವುಂಟು ಮಾಡಿದೆ. ಅವಕಾಶ ನೀಡದೆ ಈ ರೀತಿಯ ಹೇಳಿಕೆ ನೀಡಿರುವುದು ತಮ್ಮ ವೃತ್ತಿಪರ ಗೌರವಕ್ಕೆ ಧಕ್ಕೆ ತಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ವಿವಾದವನ್ನು ಇಲ್ಲಿಗೇ ಮುಕ್ತಾಯಗೊಳಿಸುವುದಾಗಿ ಘೋಷಿಸಿರುವ ಪ್ರಜ್ವಲ್ ದೇವರಾಜ್, ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯಗಳು ಚಿತ್ರದ ಪರಿಶ್ರಮವನ್ನು ಮರೆಮಾಚಬಾರದು ಎಂದು ಹೇಳಿ, ‘ಕರಾವಳಿ’ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಅಕ್ಟೋಬರ್ ಅಥವಾ ನವೆಂಬರ್ʼನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳ ಆಡಳಿತಾವಧಿ ಪೂರ್ಣಗೊಂಡಿದ್ದು, ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಗ್ರಾಮ ಪಂಚಾಯತ್‌ಗಳು ಮೇಲ್ದರ್ಜೆಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಅಗತ್ಯವಾಗಿದೆ. ಈ ಪ್ರಕ್ರಿಯೆಯನ್ನು ಜುಲೈ ಅಂತ್ಯ ಅಥವಾ ಆಗಸ್ಟ್ ಆರಂಭದೊಳಗೆ ಪೂರ್ಣಗೊಳಿಸಿ, ಮೀಸಲಾತಿ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಬಳಿಕ ಆಯೋಗವು 45 ದಿನಗಳೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಿದೆ ಎಂದು ಮಾಹಿತಿ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿರುವುದರಿಂದ ಹೆಚ್ಚಿನ ಸರ್ಕಾರಿ ಸಿಬ್ಬಂದಿ ಆ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದೇ ಕಾರಣಕ್ಕೆ ಚುನಾವಣೆಗೆ ಕಾಲಾವಕಾಶ ಕೋರಲಾಗಿದೆ ಎಂದು ತಿಳಿಸಿದರು.

ಪಂಚಾಯತ್ ರಾಜ್ ವ್ಯವಸ್ಥೆಯ ಮಹತ್ವವನ್ನು ವಿವರಿಸಿದ ಅವರು, ಮಹಾತ್ಮ ಗಾಂಧೀಜಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಕರ್ನಾಟಕದಲ್ಲಿ 1980ರಲ್ಲಿ ನಜೀರ್ ಸಾಬ್ ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿದ್ದರು.

ಬಳಿಕ ದಿವಂಗತ ಪ್ರಧಾನಿ ರಾಜೀವ್ ಗಾಂಧಿ 1989ರಲ್ಲಿ 64ನೇ ಸಾಂವಿಧಾನಿಕ ತಿದ್ದುಪಡಿ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರಲು ಪ್ರಯತ್ನಿಸಿದ್ದರು. ನಂತರ 1992ರಲ್ಲಿ 73ನೇ ಸಾಂವಿಧಾನಿಕ ತಿದ್ದುಪಡಿ ಅಂಗೀಕಾರಗೊಂಡು, 1993ರ ಏಪ್ರಿಲ್ 24ರಿಂದ ದೇಶಾದ್ಯಂತ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂತು ಎಂದು ವಿವರಿಸಿದರು.

ಗ್ರಾಮಗಳ ಆಡಳಿತವನ್ನು ಗ್ರಾಮಸ್ಥರೇ ನಿರ್ವಹಿಸುವುದು ಪಂಚಾಯತ್ ರಾಜ್ ವ್ಯವಸ್ಥೆಯ ಮೂಲ ಉದ್ದೇಶವಾಗಿದ್ದು, ಸ್ಥಳೀಯ ಆಡಳಿತವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

HDK ಪ್ರಧಾನಿ, ಕೇಂದ್ರ ಜಲ ಶಕ್ತಿ ಸಚಿವರಿಂದ ಮಾಹಿತಿ ಪಡೆದು ನದಿ ಜೋಡಣೆ ಯೋಜನೆ ಬಗ್ಗೆ ಮಾತನಾಡಲಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಕುಮಾರಸ್ವಾಮಿ ಅವರು ಮೊದಲು ಪ್ರಧಾನಮಂತ್ರಿ ಹಾಗೂ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿ. ಈ ಯೋಜನೆ ಬಗ್ಗೆ ಮಾಹಿತಿ ಪಡೆದು ನಂತರ ಮಾತನಾಡಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನದಿ ಜೋಡಣೆ ವಿಚಾರ ರಿಯಲ್ ಎಸ್ಟೇಟ್ ವ್ಯವಹಾರವಲ್ಲ, ನೀರಿನ ಪ್ರಮಾಣ ನಿಗದಿಯಾಗಬೇಕು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಯಾವ ಸಮಯದಲ್ಲಿ ಯಾರಿಗೆ ಉತ್ತರ ಕೊಡಬೇಕೋ ಕೊಡುತ್ತೇನೆ” ಎಂದು ತಿಳಿಸಿದರು.

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಸಂಕಲ್ಪ

“ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಯುವಕರಲ್ಲಿ ಹಾಗೂ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಎಲ್ಲರೂ ಪೊಲೀಸರಿಗೆ ಸಹಕಾರ ನೀಡಬೇಕು. ಹೀಗಾಗಿ ಪೊಲೀಸ್ ಇಲಾಖೆಯಿಂದ ‘ಬೇಡ ಬ್ರೋ’ ಅಭಿಯಾನ ನಡೆಸುತ್ತಿದೆ” ಎಂದರು.