Home Blog Page 4

ರಷ್ಯಾದಿಂದ ತೈಲ ಖರೀದಿಸುವಂತೆ ಭಾರತಕ್ಕೆ ಅಮೆರಿಕವೇ ಮನವಿ ಮಾಡಿತ್ತು: ಜೈಶಂಕರ್

0

ಹೆಲ್ಸಿಂಕಿ: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶದಿಂದ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕವೇ ಭಾರತವನ್ನು ಪ್ರೋತ್ಸಾಹಿಸಿತ್ತು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಫಿನ್ಲ್ಯಾಂಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಫಿನ್ಲ್ಯಾಂಡ್‌ನ ಕುಲ್ತಾರಂತಾದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಜೈಶಂಕರ್, ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ಬಳಿಕ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳ ಹಿನ್ನೆಲೆಯಲ್ಲಿ ಭಾರತ ತನ್ನ ಇಂಧನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರಗಳನ್ನು ಕೈಗೊಂಡಿದೆ ಎಂದು ಹೇಳಿದರು.

2022ರಲ್ಲಿ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ ಅಮೆರಿಕ ಹಾಗೂ ಪಾಶ್ಚಾತ್ಯ ರಾಷ್ಟ್ರಗಳು ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳನ್ನು ವಿಧಿಸಿದ್ದವು. ಜೊತೆಗೆ ರಷ್ಯಾದ ತೈಲಕ್ಕೆ ಬೆಲೆ ಮಿತಿಯನ್ನೂ ನಿಗದಿಪಡಿಸಲಾಗಿತ್ತು. ಇದೇ ಅವಧಿಯಲ್ಲಿ ಭಾರತ ರಷ್ಯಾದಿಂದ ತೈಲ ಖರೀದಿಸಲು ಮುಂದಾಗಿತ್ತು ಎಂದು ಅವರು ವಿವರಿಸಿದರು.

ಭಾರತದ ರಷ್ಯಾ ತೈಲ ಖರೀದಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, ಭಾರತ ಯಾವುದೇ ದೇಶದ ಪರ ಅಥವಾ ವಿರೋಧದ ಆಧಾರದ ಮೇಲೆ ಅಲ್ಲ, ಬೆಲೆ ಮತ್ತು ಲಭ್ಯತೆಯನ್ನು ಪರಿಗಣಿಸಿ ತೈಲ ಖರೀದಿ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು. ಆ ಸಂದರ್ಭದಲ್ಲಿ ಯುರೋಪಿಯನ್ ರಾಷ್ಟ್ರಗಳು ಮಧ್ಯಪ್ರಾಚ್ಯದ ತೈಲವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿದ್ದ ಕಾರಣ, ಭಾರತ ತನ್ನ ಇಂಧನ ಅಗತ್ಯತೆ ಪೂರೈಸಲು ಪರ್ಯಾಯ ಮೂಲಗಳತ್ತ ಮುಖ ಮಾಡಬೇಕಾಯಿತು ಎಂದು ಹೇಳಿದರು.

ರಷ್ಯಾದ ತೈಲ ಪೂರೈಕೆ ವಿಶ್ವಾಸಾರ್ಹವಾಗಿದ್ದು, ದೇಶದ ಇಂಧನ ಭದ್ರತೆಯನ್ನು ಕಾಪಾಡುವ ಉದ್ದೇಶದಿಂದಲೇ ಆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೈಶಂಕರ್ ತಿಳಿಸಿದರು.

ಇದೇ ವೇಳೆ ಯುರೋಪಿಯನ್ ರಾಷ್ಟ್ರಗಳ ದ್ವಂದ್ವ ನೀತಿಯನ್ನು ಟೀಕಿಸಿದ ಅವರು, ಭಾರತದಿಂದ ರಫ್ತುಗೊಂಡ ಶಸ್ತ್ರಾಸ್ತ್ರಗಳನ್ನು ಯುರೋಪಿನ ಯಾವುದೇ ದೇಶದ ವಿರುದ್ಧ ಬಳಸಲಾಗಿಲ್ಲ. ಆದರೆ ಯುರೋಪಿನ ಕೆಲವು ರಾಷ್ಟ್ರಗಳು ಮಾರಾಟ ಮಾಡಿದ ಶಸ್ತ್ರಾಸ್ತ್ರಗಳು ಭಾರತದ ವಿರುದ್ಧದ ದಾಳಿಗಳಲ್ಲಿ ಬಳಕೆಯಾಗುತ್ತಿರುವ ಉದಾಹರಣೆಗಳಿವೆ ಎಂದು ಹೇಳಿದರು.

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್: ಚೊಚ್ಚಲ ಪ್ರಶಸ್ತಿಗಾಗಿ ಹರ್ಮನ್ ಪ್ರೀತ್ ಪಡೆ ಸಜ್ಜು

0

ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಇಂದಿನಿಂದ ಅಧಿಕೃತ ಚಾಲನೆ ಸಿಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 12 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಟೂರ್ನಿಯ ಪಂದ್ಯಗಳು ಇಂಗ್ಲೆಂಡ್ ಮತ್ತು ವೇಲ್ಸ್‌ನ ಏಳು ಕ್ರೀಡಾಂಗಣಗಳಲ್ಲಿ ಆಯೋಜನೆಯಾಗಲಿವೆ. ಒಟ್ಟು 33 ಪಂದ್ಯಗಳು ನಡೆಯಲಿದ್ದು, ಜುಲೈ 5ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಟೂರ್ನಿಯ ಉದ್ಘಾಟನಾ ಪಂದ್ಯ ಇಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆತಿಥೇಯ ಇಂಗ್ಲೆಂಡ್ ಮಹಿಳಾ ತಂಡ ಮತ್ತು ಶ್ರೀಲಂಕಾ ಮಹಿಳಾ ತಂಡಗಳು ಮುಖಾಮುಖಿಯಾಗಲಿವೆ.

ಈ ಬಾರಿಯ ವಿಶ್ವಕಪ್‌ನಲ್ಲಿ 12 ತಂಡಗಳನ್ನು ತಲಾ ಆರು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗುಂಪು ಹಂತದಲ್ಲೇ ಹಲವು ರೋಚಕ ಪಂದ್ಯಗಳು ನಡೆಯಲಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.

ಭಾರತ ತಂಡ ತನ್ನ ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಜೂನ್ 14ರಂದು ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯಲಿರುವ ಈ ಪಂದ್ಯ ಟೂರ್ನಿಯ ಪ್ರಮುಖ ಆಕರ್ಷಣೆಯಾಗಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಗೆದ್ದಿದ್ದ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಇದೀಗ ಟಿ20 ವಿಶ್ವಕಪ್ ಕಿರೀಟ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ.

ಭಾರತ ತಂಡದಲ್ಲಿ ಸ್ಮೃತಿ ಮಂಧಾನಾ, ಶಫಾಲಿ ವರ್ಮಾ, ರಿಚಾ ಘೋಷ್, ಜೆಮಿಮಾ ರೋಡ್ರಿಗ್ಸ್ ಹಾಗೂ ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಸೇರಿದಂತೆ ಹಲವು ಪ್ರತಿಭಾವಂತ ಆಟಗಾರ್ತಿಯರು ಸ್ಥಾನ ಪಡೆದಿದ್ದು, ತಂಡದ ಬಲವನ್ನು ಹೆಚ್ಚಿಸಿದ್ದಾರೆ.

ಗೆದ್ದ ತಂಡಕ್ಕೆ ₹22.4 ಕೋಟಿ ಬಹುಮಾನ

ಈ ಬಾರಿಯ ಮಹಿಳಾ ಟಿ20 ವಿಶ್ವಕಪ್‌ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಭಾರೀ ಬಹುಮಾನ ಮೊತ್ತ ಘೋಷಿಸಿದೆ. ಒಟ್ಟು ₹83.93 ಕೋಟಿ ಬಹುಮಾನ ನಿಧಿಯನ್ನು ಮೀಸಲಿಟ್ಟಿದ್ದು, ಚಾಂಪಿಯನ್ ತಂಡಕ್ಕೆ ₹22.4 ಕೋಟಿ ನೀಡಲಾಗುತ್ತದೆ.

ರನ್ನರ್-ಅಪ್ ತಂಡ ₹11.2 ಕೋಟಿ ಬಹುಮಾನ ಪಡೆಯಲಿದ್ದು, ಸೆಮಿಫೈನಲ್‌ನಲ್ಲಿ ಸೋಲುವ ಎರಡು ತಂಡಗಳಿಗೆ ತಲಾ ₹6.46 ಕೋಟಿ ನೀಡಲಾಗುತ್ತದೆ. ಅಲ್ಲದೆ, ಗುಂಪು ಹಂತದ ಪ್ರತಿಯೊಂದು ಪಂದ್ಯದಲ್ಲಿ ಜಯ ಸಾಧಿಸುವ ತಂಡಕ್ಕೆ ₹29 ಲಕ್ಷ ಬಹುಮಾನ ದೊರೆಯಲಿದೆ.

ವಿಶ್ವದ ಅಗ್ರ ಮಹಿಳಾ ಕ್ರಿಕೆಟ್ ತಂಡಗಳು ಭಾಗವಹಿಸುತ್ತಿರುವ ಈ ಟೂರ್ನಿ ಕ್ರಿಕೆಟ್ ಪ್ರಿಯರಿಗೆ ರೋಚಕ ಮನರಂಜನೆ ನೀಡುವ ನಿರೀಕ್ಷೆ ಮೂಡಿಸಿದೆ.

ಅಪಘಾತ ಸಂತ್ರಸ್ತೆಗೆ 36.63 ಲಕ್ಷ ಪರಿಹಾರ: ಆದೇಶ ಪಾಲಿಸದ ಕೆಕೆಆರ್‌ಟಿಸಿ ಬಸ್‌ಗಳ ಜಪ್ತಿ

0

ಬೀದರ್: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯ ನಿಗದಿಪಡಿಸಿದ್ದ ಪರಿಹಾರ ಮೊತ್ತವನ್ನು ಪಾವತಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ ಸಂಸ್ಥೆಯ ಎರಡು ಬಸ್‌ಗಳನ್ನು ನ್ಯಾಯಾಲಯ ಜಪ್ತಿ ಮಾಡಿದೆ.

ಬೀದರ್ ಜಿಲ್ಲೆಯ ಔರಾದ್ ಡಿಪೋಗೆ ಸೇರಿದ ಎರಡು ಬಸ್‌ಗಳ ವಿರುದ್ಧ ಜಪ್ತಿ ಕ್ರಮ ಜರುಗಿದ್ದು, ನ್ಯಾಯಾಲಯದ ಆವರಣದಲ್ಲೇ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಕಮಲನಗರ ಸಮೀಪ 2024ರ ಫೆಬ್ರವರಿ 28ರಂದು ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತ ವೀರಭದ್ರ ಅವರ ಪತ್ನಿ ಸುವರ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, 36 ಲಕ್ಷ 63 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಕೆಕೆಆರ್‌ಟಿಸಿಗೆ ಆದೇಶಿಸಿತ್ತು.

ಆದರೆ ನ್ಯಾಯಾಲಯದ ನಿರ್ದೇಶನದಂತೆ ಪರಿಹಾರ ಪಾವತಿಯಾಗದ ಕಾರಣ, ಔರಾದ್ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಂಸ್ಥೆಯ ಎರಡು ಬಸ್‌ಗಳನ್ನು ಜಪ್ತಿ ಮಾಡುವಂತೆ ಆದೇಶ ನೀಡಿದೆ. ಈ ಬೆಳವಣಿಗೆ ಸಾರಿಗೆ ಸಂಸ್ಥೆಯಲ್ಲಿ ಚರ್ಚೆಗೆ ಕಾರಣವಾಗಿದೆ.

ಭಾರೀ ವಿವಾದದ ನಡುವೆ ಬಿಡದಿ ಟೌನ್ ಶಿಪ್ʼಗೆ ಗ್ರೀನ್ ಸಿಗ್ನಲ್: 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ: ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ.

ಯೋಜನಾ ವ್ಯಾಪ್ತಿಯ ಒಂಬತ್ತು ಕಂದಾಯ ಗ್ರಾಮಗಳ ಪೈಕಿ ಪ್ರಾರಂಭಿಕ ಹಂತದಲ್ಲಿ ಮೂರು ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮಗಳ ಸುಮಾರು 754 ರೈತರಿಗೆ ಸೇರಿದ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಭೂಸ್ವಾಧೀನಕ್ಕೆ ಒಳಪಡುವ ರೈತರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪರಿಹಾರವನ್ನು ಪಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಪ್ರತಿ ಎಕರೆ ಭೂಮಿಗೆ ಕನಿಷ್ಠ 2.14 ಕೋಟಿ ರೂ. ಪರಿಹಾರ ದರವನ್ನು ನಿಗದಿಪಡಿಸಲಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸುತ್ತಿದ್ದಾರೆ. ಆದಾಗ್ಯೂ, ಯೋಜನೆಯನ್ನು ಮಹತ್ವಾಕಾಂಕ್ಷಿ ಯೋಜನೆಯಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಟೌನ್‌ಶಿಪ್ ನಿರ್ಮಾಣ ಪ್ರಕ್ರಿಯೆಯನ್ನು ಮುಂದುವರಿಸುವಲ್ಲಿ ದೃಢ ನಿಲುವು ತಾಳಿದ್ದಾರೆ.

ಇನ್ನೊಂದೆಡೆ, ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಅಧಿಸೂಚನೆಯ ಬಳಿಕ ಬಿಡದಿ ಟೌನ್‌ಶಿಪ್ ಯೋಜನೆ ಸುತ್ತ ರಾಜಕೀಯ ಹಾಗೂ ರೈತ ಹೋರಾಟದ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

ವಿಕಲಚೇತನರ ಆಯುಕ್ತರಿಗೆ ಖಾಸಗಿ ಸಂಸ್ಥೆಗಳಿಗೂ ಪರಿಹಾರ ಆದೇಶಿಸುವ ಅಧಿಕಾರವಿದೆ: ಹೈಕೋರ್ಟ್

ಬೆಂಗಳೂರು: ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ–2016ರ ಅಡಿಯಲ್ಲಿ ರಾಜ್ಯ ವಿಕಲಚೇತನರ ಆಯುಕ್ತರಿಗೆ ಖಾಸಗಿ ಸಂಸ್ಥೆಗಳ ವಿರುದ್ಧವೂ ಆದೇಶ ಹೊರಡಿಸುವ ಹಾಗೂ ಪರಿಹಾರ ನೀಡುವಂತೆ ನಿರ್ದೇಶಿಸುವ ಅಧಿಕಾರವಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಂತ್ರಸ್ತ ಶಿಕ್ಷಕಿಗೆ ಪರಿಹಾರ ನೀಡುವಂತೆ ರಾಜ್ಯ ವಿಕಲಚೇತನರ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಯ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ ವಜಾಗೊಳಿಸಿದ್ದು, ಆಯುಕ್ತರ ಆದೇಶವನ್ನು ಎತ್ತಿಹಿಡಿದಿದೆ.

ಶಿಕ್ಷಕಿಗೆ ನೀಡಲಾಗಿರುವ ₹10 ಲಕ್ಷ ಪರಿಹಾರವನ್ನು ದಂಡ ಎಂದು ಪರಿಗಣಿಸಲಾಗುವುದಿಲ್ಲ. ಗಂಭೀರ ಅಪಘಾತದ ಬಳಿಕ ಅವರು ಭರಿಸಿರುವ ₹46 ಲಕ್ಷಕ್ಕೂ ಅಧಿಕ ವೈದ್ಯಕೀಯ ವೆಚ್ಚದ ಹಿನ್ನೆಲೆಯಲ್ಲಿ ಈ ಮೊತ್ತ ಅತ್ಯಂತ ನ್ಯಾಯಸಮ್ಮತವಾದ ಕನಿಷ್ಠ ಪರಿಹಾರವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಶಿಕ್ಷಕಿಗೆ ಸೌಲಭ್ಯ ಒದಗಿಸಲು ಶಾಲೆಗೆ ನಿರ್ದೇಶನ

ನ್ಯಾಯಾಲಯವು ಶಾಲಾ ಆಡಳಿತ ಮಂಡಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದೆ. ಶಿಕ್ಷಕಿ ಬರ್ನಾಲಿ ರಾವತ್ ಅವರಿಗೆ ತಕ್ಷಣವೇ ಲಿಖಿತ ಮರುನೇಮಕಾತಿ ಆದೇಶ ನೀಡಬೇಕು. ನೆಲಮಹಡಿಯಲ್ಲೇ ವ್ಹೀಲ್‌ಚೇರ್ ಸಂಚಾರಕ್ಕೆ ಅನುಕೂಲವಾಗುವ ತರಗತಿ ಕೊಠಡಿ, ವಿಕಲಚೇತನ ಸ್ನೇಹಿ ಶೌಚಾಲಯ, ಮಾಸಿಕ ₹15,000 ವಾಹನ ಭತ್ಯೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆದೇಶಿಸಿದೆ.

ಇದರ ಜೊತೆಗೆ ಪ್ರತಿ ಎರಡು ಗಂಟೆಗಳಿಗೊಮ್ಮೆ 15 ನಿಮಿಷಗಳ ವಿಶ್ರಾಂತಿ ನೀಡಬೇಕು ಹಾಗೂ ಆರೋಗ್ಯದ ಕಾರಣದಿಂದ ಶಾಲೆಗೆ ಹಾಜರಾಗಲು ಸಾಧ್ಯವಾಗದ ದಿನಗಳಲ್ಲಿ ಆನ್‌ಲೈನ್ ಮೂಲಕ ಪಾಠ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದೆ.

ವಿಕಲಚೇತನ ಸ್ನೇಹಿ ಮೂಲಸೌಕರ್ಯಕ್ಕೆ ಎಸ್‌ಒಪಿ ರೂಪಿಸಲು ಆದೇಶ

ರಾಜ್ಯದ ಎಲ್ಲಾ ಸಾರ್ವಜನಿಕ ಮೂಲಸೌಕರ್ಯಗಳನ್ನು ವಿಕಲಚೇತನ ಸ್ನೇಹಿಯಾಗಿಸಲು ನ್ಯಾಯಾಲಯವು ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಸಂಬಂಧ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ರೂಪಿಸಿ ಜಾರಿಗೊಳಿಸಬೇಕು ಎಂದು ತಿಳಿಸಿದೆ.

ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ಸಾರಿಗೆ ಕೇಂದ್ರಗಳು, ಧಾರ್ಮಿಕ ಸ್ಥಳಗಳು ಹಾಗೂ ವಸತಿ ಸಮುಚ್ಚಯಗಳಲ್ಲಿ ವಿಕಲಚೇತನರಿಗೆ ಅಗತ್ಯ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಪೀಠ ಹೇಳಿದೆ.

ರಾಜ್ಯ ಮಟ್ಟದಲ್ಲಿ ಪ್ರವೇಶಾಧಿಕಾರ ಪ್ರಾಧಿಕಾರ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸುವಂತೆ ಸೂಚಿಸಿರುವ ನ್ಯಾಯಾಲಯ, ವಿಕಲಚೇತನರ ಹಕ್ಕುಗಳ ಕಾಯ್ದೆ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಕಟ್ಟಡ ನಿರ್ಮಾಣವಾಗದಿದ್ದರೆ ಸಾರ್ವಜನಿಕ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ನೀಡಬಾರದು ಎಂದು ನಿರ್ದೇಶಿಸಿದೆ.

ಸಾರ್ವಜನಿಕ ರಸ್ತೆ ಅಥವಾ ಪಾದಚಾರಿ ಮಾರ್ಗದಿಂದ ಕಟ್ಟಡದ ಮುಖ್ಯ ಭಾಗಕ್ಕೆ ಕನಿಷ್ಠ ಒಂದು ಮೆಟ್ಟಿಲುರಹಿತ ಪ್ರವೇಶ ಮಾರ್ಗ ಇರಬೇಕು. ರ್ಯಾಂಪ್‌ಗಳು ನಿಗದಿತ ಮಾನದಂಡಗಳಂತೆ ನಿರ್ಮಾಣವಾಗಬೇಕು. ಎರಡೂ ಬದಿಗಳಲ್ಲಿ ಹ್ಯಾಂಡ್ರೈಲ್‌ಗಳು ಹಾಗೂ ಜಾರದ ಮೇಲ್ಮೈ ಇರಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಇದಲ್ಲದೆ, ಒಟ್ಟು ಪಾರ್ಕಿಂಗ್ ಸ್ಥಳಗಳ ಕನಿಷ್ಠ ಶೇ.2 ಅಥವಾ ಕನಿಷ್ಠ ಒಂದು ಸ್ಥಳವನ್ನು ವಿಕಲಚೇತನರಿಗೆ ಮೀಸಲಿಡಬೇಕು. ಮಾಲ್‌ಗಳು, ವಿಮಾನ ನಿಲ್ದಾಣಗಳಂತಹ ದೊಡ್ಡ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ನಾಲ್ಕು ವಿಶೇಷ ಪಾರ್ಕಿಂಗ್ ಸ್ಥಳಗಳನ್ನು ಒದಗಿಸಬೇಕು ಎಂದು ತಿಳಿಸಿದೆ.

ಪ್ರಕರಣದ ಹಿನ್ನೆಲೆ

2013ರ ಆಗಸ್ಟ್ 22ರಂದು ಶಾಲೆಯ ವಿದ್ಯಾರ್ಥಿನಿಯೊಬ್ಬಳು ಅಂಕಗಳನ್ನು ತಿದ್ದಿದ ವಿಚಾರ ಬೆಳಕಿಗೆ ಬಂದ ಬಳಿಕ, ಶಿಕ್ಷಕರ ಪ್ರಶ್ನೆಗೆ ಹೆದರಿದ ಆಕೆ ಮೊದಲ ಮಹಡಿಯ ಕಿಟಕಿಯ ಹೊರಭಾಗದಲ್ಲಿ ನಿಂತು ಕೆಳಗೆ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಳು.

ಈ ವೇಳೆ ವಿದ್ಯಾರ್ಥಿನಿಯನ್ನು ರಕ್ಷಿಸಲು ಶಿಕ್ಷಕಿ ಬರ್ನಾಲಿ ರಾವತ್ ಸ್ವಯಂಪ್ರೇರಿತವಾಗಿ ಕಿಟಕಿಯ ಹೊರಭಾಗಕ್ಕೆ ಇಳಿದಿದ್ದರು. ಆದರೆ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಿಂದ ಅವರು ಶಾಶ್ವತ ದೈಹಿಕ ವಿಕಲತೆಗೆ ಒಳಗಾಗಿದ್ದರು.

ಶಾಲೆಯು ಆರಂಭದಲ್ಲಿ ಚಿಕಿತ್ಸೆಗಾಗಿ ₹11.63 ಲಕ್ಷ ವೆಚ್ಚ ಭರಿಸಿದ್ದರೂ, ಬಳಿಕ ಹೆಚ್ಚುವರಿ ಸೌಲಭ್ಯ ಮತ್ತು ಪರಿಹಾರ ನೀಡಲು ನಿರಾಕರಿಸಿತ್ತು. ಇದರಿಂದ ಶಿಕ್ಷಕಿ 2019ರಲ್ಲಿ ರಾಜ್ಯ ವಿಕಲಚೇತನರ ಆಯುಕ್ತರ ನ್ಯಾಯಾಲಯದ ಮೊರೆ ಹೋಗಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಆಯುಕ್ತರು 2020ರ ಜೂನ್ 12ರಂದು ಶಿಕ್ಷಕಿಯ ಪರವಾಗಿ ₹10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಶಾಲಾ ಆಡಳಿತ ಮಂಡಳಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಆಯುಕ್ತರ ಆದೇಶವನ್ನು ಮಾನ್ಯಗೊಳಿಸಿ ಅರ್ಜಿಯನ್ನು ತಿರಸ್ಕರಿಸಿದೆ.

ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಇಲ್ಲ: ಆರೋಪಗಳಿಗೆ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದು, ಕುರುಬ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮನವಿಗಳು ಬಂದಿದ್ದರಿಂದ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಮಂಜೂರಾಗಿದೆ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಂದ ಬಂದಿರುವ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘ-ಸಂಸ್ಥೆಗಳಿಗೆ ₹71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಪೂರ್ವಭಾವಿ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ.

ಇದು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ಇತರೆ ಹಿಂದುಳಿದ ಜಾತಿಗಳಿಂದ ಸಲ್ಲಿಕೆಯಾಗಿರುವ ಮನವಿಗಳನ್ನೂ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕುರುಬ ಸಮುದಾಯದ ಜೊತೆಗೆ ಮಡಿವಾಳ, ಲಿಂಗಾಯತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ ಹಾಗೂ ರೆಡ್ಡಿ ಸೇರಿದಂತೆ ವಿವಿಧ ಸಮುದಾಯಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೂ ಪೂರ್ವಭಾವಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಈ ಆದೇಶವು ಅನುದಾನ ಬಿಡುಗಡೆಗೆ ಸಂಬಂಧಿಸಿದ ಅಂತಿಮ ಆದೇಶವಲ್ಲ ಎಂದು ವಿವರಿಸಿರುವ ಅವರು, ಅನುದಾನ ಪಡೆಯಲು ಸಂಬಂಧಿತ ಸಂಘ-ಸಂಸ್ಥೆಗಳು ಜಿಲ್ಲಾಧಿಕಾರಿಗಳ ಮೂಲಕ ಜಮೀನು ಅಥವಾ ನಿವೇಶನದ ದಾಖಲೆಗಳು, ಸ್ಥಳೀಯ ಸಂಸ್ಥೆಗಳ ಕಟ್ಟಡ ಪರವಾನಗಿ, ಮೂರು ವರ್ಷದ ಆಡಿಟ್ ವರದಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳ ಪ್ರಕಾರ ಕಾಮಗಾರಿಯ ಪ್ರಗತಿಯನ್ನು ಮೂರು ಹಂತಗಳಲ್ಲಿ ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಲಾಗುವುದು. ಪ್ರತಿವರ್ಷ ಕಾಮಗಾರಿಯ ಪ್ರಗತಿ ಪರಿಶೀಲನೆಯ ಆಧಾರದ ಮೇಲೆ ಮಂಜೂರಾದ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದು ನಿರಂತರ ಪ್ರಕ್ರಿಯೆಯಾಗಿದ್ದು, ಸರ್ಕಾರದ ಆದೇಶದಂತೆ ಪ್ರವರ್ಗ-1 ಮತ್ತು ಪ್ರವರ್ಗ-2ಎಗೆ ಸೇರಿದ ಜಾತಿಗಳಿಗೆ ಶೇ.70ರಷ್ಟು ಹಾಗೂ ಪ್ರವರ್ಗ-3ಎ ಮತ್ತು 3ಬಿಗೆ ಸೇರಿದ ಜಾತಿಗಳಿಗೆ ಶೇ.30ರಷ್ಟು ಅನುದಾನ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರವರ್ಗ-1 ಮತ್ತು 2ಎ ಅಡಿಯಲ್ಲಿ ಹೆಚ್ಚಿನ ಸಂಖ್ಯೆಯ ಜಾತಿಗಳು ಇರುವುದರಿಂದ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಮಂಜೂರಾಗಿರುವಂತೆ ಕಂಡುಬಂದಿದೆ ಹೊರತು ಇದರಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ವಾರಾಂತ್ಯದಲ್ಲೇ ಇರಾನ್ ಜೊತೆ ಶಾಂತಿ ಒಪ್ಪಂದ?: ಟ್ರಂಪ್ ವಿಶ್ವಾಸ

0

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಅಂತ್ಯಗೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಈ ವಾರಾಂತ್ಯದಲ್ಲೇ ಶಾಂತಿ ಒಪ್ಪಂದಕ್ಕೆ ಸಹಿ ಬೀಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಜೊತೆಗಿನ ಸಂಘರ್ಷ ಅಂತ್ಯಗೊಳಿಸಲು ಮಹತ್ವದ ಒಪ್ಪಂದದ ಅಂತಿಮ ಹಂತ ತಲುಪಿದ್ದೇವೆ ಎಂದು ಹೇಳಿದ್ದಾರೆ. ಶಾಂತಿ ಒಪ್ಪಂದ ಜಾರಿಯಾದ ತಕ್ಷಣ ಜಾಗತಿಕ ತೈಲ ಸಾಗಣೆಗೆ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ತೆರೆಯುವ ಸಾಧ್ಯತೆ ಇದೆ ಎಂದಿದ್ದಾರೆ.

ಈ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಕತಾರ್, ಯುನೈಟೆಡ್ ಅರಬ್ ಎಮಿರೇಟ್ಸ್, ಸೌದಿ ಅರೇಬಿಯಾ, ಬಹ್ರೇನ್ ಹಾಗೂ ಕುವೈತ್ ನಾಯಕರೊಂದಿಗೆ ಮಾತುಕತೆ ನಡೆಸಿರುವುದಾಗಿ ಟ್ರಂಪ್ ತಿಳಿಸಿದ್ದಾರೆ. ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರೊಂದಿಗೂ ಶೀಘ್ರದಲ್ಲೇ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳಿಗೂ ಈ ಒಪ್ಪಂದದಲ್ಲಿ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಟ್ರಂಪ್ ಹೇಳಿದ್ದು, ಸಹಿ ಸಮಾರಂಭದ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಭಾರತೀಯ ಶೂಟಿಂಗ್‌ಗೆ ದೊಡ್ಡ ನಷ್ಟ: ಖ್ಯಾತ ಕೋಚ್ ಜಸ್ಪಾಲ್ ರಾಣಾ ನಿಧನ

0

ನವದೆಹಲಿ: ಭಾರತೀಯ ಶೂಟಿಂಗ್ ಕ್ಷೇತ್ರದ ದಿಗ್ಗಜ, ಖ್ಯಾತ ಕೋಚ್ ಹಾಗೂ ಮಾಜಿ ಶೂಟರ್ ಜಸ್ಪಾಲ್ ರಾಣಾ ಅವರು 49ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕೆಲವು ದಿನಗಳ ಹಿಂದೆ ಜರ್ಮನಿಯ ಮ್ಯೂನಿಕ್‌ನಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ಟೂರ್ನಿಯ ವೇಳೆ ಜಸ್ಪಾಲ್ ರಾಣಾ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆರಂಭದಲ್ಲಿ ಅದನ್ನು ಸಾಮಾನ್ಯ ಅಸಿಡಿಟಿ ಎಂದು ಭಾವಿಸಿ ಅವರು ಪ್ರವಾಸ ಮುಂದುವರಿಸಿದ್ದರು. ಆದರೆ ಭಾರತಕ್ಕೆ ಮರಳುವ ವೇಳೆ ವಿಮಾನ ಪ್ರಯಾಣದ ಸಂದರ್ಭದಲ್ಲೂ ಮತ್ತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿ ತಲುಪುತ್ತಿದ್ದಂತೆಯೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯಕೀಯ ತಪಾಸಣೆಯಲ್ಲಿ ಹೃದಯದ ರಕ್ತನಾಳದಲ್ಲಿ ಗಂಭೀರ ಬ್ಲಾಕೇಜ್ ಇರುವುದು ಪತ್ತೆಯಾಗಿತ್ತು. ವೈದ್ಯರು ಸ್ಟೆಂಟ್ ಅಳವಡಿಸಿ ಚಿಕಿತ್ಸೆ ನೀಡಿದ್ದರೂ, ಮತ್ತೊಂದು ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆಯೇ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಭಾರತೀಯ ಶೂಟಿಂಗ್ ಕ್ರೀಡೆಗೆ ಅಪಾರ ಕೊಡುಗೆ ನೀಡಿದ್ದ ಜಸ್ಪಾಲ್ ರಾಣಾ ಅವರ ಅಗಲಿಕೆ ಕ್ರೀಡಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

260 ಜೀವಗಳನ್ನು ಬಲಿ ಪಡೆದ ಏರ್ ಇಂಡಿಯಾ ದುರಂತಕ್ಕೆ ಒಂದು ವರ್ಷ: ಇನ್ನೂ ಬಹಿರಂಗವಾಗಿಲ್ಲ ಅಪಘಾತದ ನಿಖರ ಕಾರಣ

0

ಅಹಮದಾಬಾದ್: ದೇಶವನ್ನೇ ಬೆಚ್ಚಿಬೀಳಿಸಿದ್ದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದು ಒಂದು ವರ್ಷ ತುಂಬಿದೆ. 2025ರ ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ AI171 ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು 260 ಮಂದಿಯ ಸಾವಿಗೆ ಕಾರಣವಾಗಿತ್ತು.

ಮಧ್ಯಾಹ್ನ 1.38ಕ್ಕೆ ಹಾರಾಟ ಆರಂಭಿಸಿದ್ದ 12 ವರ್ಷ ಹಳೆಯ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನ ನಿಯಂತ್ರಣ ಕಳೆದುಕೊಂಡು ಅಹಮದಾಬಾದ್‌ನ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿತ್ತು.

ಈ ಭೀಕರ ದುರಂತದಲ್ಲಿ ವಿಮಾನದ ಪೈಲಟ್ ಸೇರಿದಂತೆ 241 ಮಂದಿ ಮೃತಪಟ್ಟಿದ್ದರು. ನೆಲದಲ್ಲಿದ್ದ 19 ಮಂದಿ ಸಹ ಪ್ರಾಣ ಕಳೆದುಕೊಂಡ ಪರಿಣಾಮ ಒಟ್ಟು ಮೃತರ ಸಂಖ್ಯೆ 260ಕ್ಕೆ ಏರಿತ್ತು. ದುರಂತದ ಒಂದು ವರ್ಷ ಪೂರ್ಣಗೊಂಡಿದ್ದರೂ ಅಪಘಾತಕ್ಕೆ ಕಾರಣವಾದ ನಿಖರ ಅಂಶಗಳ ಕುರಿತ ಅಂತಿಮ ತನಿಖಾ ವರದಿ ಇನ್ನೂ ಪ್ರಕಟವಾಗಿಲ್ಲ.

ಇದೀಗ ಮೃತಪಟ್ಟವರ ಕುಟುಂಬಗಳ ಪೈಕಿ ಶೇ.96ರಷ್ಟು ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ವಿತರಿಸಲಾಗಿದ್ದು, ಅಂತಿಮ ಪರಿಹಾರ ಮತ್ತು ತನಿಖಾ ವರದಿಗಾಗಿ ಕುಟುಂಬಸ್ಥರು ಇನ್ನೂ ಕಾಯುತ್ತಿದ್ದಾರೆ.

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಿದ ದುಷ್ಕರ್ಮಿಗಳು: ಕೆಲವೇ ಗಂಟೆಗಳಲ್ಲಿ ಶಂಕಿತ ವಶಕ್ಕೆ

0

ಕಾನ್ಪುರ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಘಟನೆಯ ಕೆಲವೇ ಗಂಟೆಗಳಲ್ಲಿ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಕಾನ್ಪುರ-ದೆಹಲಿ ಮಾರ್ಗದ ರೈಲು ಫಿರೋಜಾಬಾದ್ ಜಿಲ್ಲೆಯ ಮಖನ್‌ಪುರ ನಿಲ್ದಾಣದ ಬಳಿ ಸಂಜೆ 7.15ರ ಸುಮಾರಿಗೆ ಸಂಚರಿಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಕಲ್ಲು ಎಸಿ ಕೋಚ್‌ನ ಕಿಟಕಿಗೆ ಬಡಿದ ಪರಿಣಾಮ ಗಾಜು ಹಾನಿಗೊಳಗಾಗಿದ್ದು, ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಅದೇ ಕೋಚ್‌ನಲ್ಲಿ ಇದ್ದ ಮೋಹನ್ ಭಾಗವತ್ ಅವರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆ ಬೆನ್ನಲ್ಲೇ ಆಗ್ರಾ ವಲಯದ ಎಡಿಜಿ ಎಸ್.ಕೆ. ಭಗತ್, ಡಿಐಜಿ ಶೈಲೇಶ್ ಪಾಂಡೆ ಹಾಗೂ ಫಿರೋಜಾಬಾದ್ ಎಸ್‌ಎಸ್‌ಪಿ ಆದಿತ್ಯ ಲಾಂಘೆ ನೇತೃತ್ವದಲ್ಲಿ ತನಿಖೆ ಆರಂಭಿಸಲಾಯಿತು. ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯ ಮಾಹಿತಿಗಳ ಆಧಾರದ ಮೇಲೆ ಒಬ್ಬ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ.

ಸುರಕ್ಷತಾ ಪರಿಶೀಲನೆಗಾಗಿ ರೈಲನ್ನು ತುಂಡ್ಲಾ ಜಂಕ್ಷನ್ ಹೊರಭಾಗದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಪರಿಶೀಲನೆ ಪೂರ್ಣಗೊಂಡ ಬಳಿಕ ಸಂಜೆ 7.41ಕ್ಕೆ ರೈಲು ದೆಹಲಿಯತ್ತ ತನ್ನ ಪ್ರಯಾಣವನ್ನು ಮುಂದುವರಿಸಿತು. ಪ್ರಕರಣದ ಕುರಿತು ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

error: Content is protected !!