Home Blog Page 4

4 ಟೆಸ್ಟ್, 36 ವಿಕೆಟ್… ವಿವ್ ರಿಚರ್ಡ್ಸ್ʼಗೇ ತಲೆನೋವಾಗಿದ್ದ ಬೌಲಿಂಗ್ ದಿಗ್ಗಜ; ಕುಂಬ್ಳೆ ಆಗಮನದಿಂದ ಬದಲಾಯ್ತು ಈ ದಾಖಲೆ!

0

1988ರ ಜನವರಿ. ಮದ್ರಾಸ್‌ನಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯ. ಭಾರತದ ಪರ ಕೇವಲ 19 ವರ್ಷದ ಯುವ ಲೆಗ್‌ಸ್ಪಿನ್ನರ್ ನರೇಂದ್ರ ಹಿರ್ವಾನಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಎದುರಿಗಿದ್ದದ್ದು ವಿವ್ ರಿಚರ್ಡ್ಸ್ ಸೇರಿದಂತೆ ವಿಶ್ವದ ಬಲಿಷ್ಠ ಬ್ಯಾಟಿಂಗ್ ಪಡೆಯಾಗಿತ್ತು. ಆದರೆ ಯುವ ಸ್ಪಿನ್ನರ್ ನೀಡಿದ ಪ್ರದರ್ಶನ ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆಯಿತು.

ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಬರೋಬ್ಬರಿ 54.3 ಓವರ್‌ಗಳನ್ನು ಬೌಲಿಂಗ್ ಮಾಡಿದ ಹಿರ್ವಾನಿ, ಕೇವಲ 136 ರನ್ ನೀಡಿ 16 ವಿಕೆಟ್‌ಗಳನ್ನು ಕಬಳಿಸಿದರು. ವೆಸ್ಟ್ ಇಂಡೀಸ್‌ನ ದಿಗ್ಗಜ ಬ್ಯಾಟರ್ ವಿವ್ ರಿಚರ್ಡ್ಸ್ ಅವರನ್ನೂ ಎರಡೂ ಇನ್ನಿಂಗ್ಸ್‌ಗಳಲ್ಲಿ ಔಟ್ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.

ಈ ಅದ್ಭುತ ಪ್ರದರ್ಶನದೊಂದಿಗೆ ಹಿರ್ವಾನಿ, ಟೆಸ್ಟ್ ಪದಾರ್ಪಣೆಯ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆ ನಿರ್ಮಿಸಿದರು. ಚೊಚ್ಚಲ ಪಂದ್ಯದಲ್ಲೇ ಇಂತಹ ಅಸಾಮಾನ್ಯ ಸಾಧನೆ ಮಾಡಿದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲಿ ಅವರ ಭವಿಷ್ಯದ ಬಗ್ಗೆ ಭಾರೀ ನಿರೀಕ್ಷೆಗಳು ಮೂಡಿದವು.

ಅವರ ಯಶಸ್ಸು ಕೇವಲ ಮೊದಲ ಟೆಸ್ಟ್‌ಗೆ ಸೀಮಿತವಾಗಲಿಲ್ಲ. ನ್ಯೂಜಿಲೆಂಡ್ ವಿರುದ್ಧದ ಮುಂದಿನ ಮೂರು ಟೆಸ್ಟ್ ಪಂದ್ಯಗಳಲ್ಲಿ ಹಿರ್ವಾನಿ ಮತ್ತಷ್ಟು 20 ವಿಕೆಟ್‌ಗಳನ್ನು ಕಬಳಿಸಿದರು. ಇದರೊಂದಿಗೆ ತಮ್ಮ ಮೊದಲ ನಾಲ್ಕು ಟೆಸ್ಟ್ ಪಂದ್ಯಗಳಲ್ಲೇ ಒಟ್ಟು 36 ವಿಕೆಟ್ ಪಡೆದ ಅವರು, ಭಾರತದ ಮುಂದಿನ ದೊಡ್ಡ ಸ್ಪಿನ್ ತಾರೆಯಾಗಿ ಹೊರಹೊಮ್ಮುವ ಸೂಚನೆ ನೀಡಿದರು.

ಆದರೆ ವಿದೇಶಿ ಪಿಚ್‌ಗಳು ಹಿರ್ವಾನಿ ಅವರಿಗೆ ನಿರೀಕ್ಷಿತ ಯಶಸ್ಸು ನೀಡಲಿಲ್ಲ. 1988-89ರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ಟೆಸ್ಟ್ ಪಂದ್ಯಗಳಿಂದ ಅವರು ಕೇವಲ ಆರು ವಿಕೆಟ್ ಪಡೆಯಲು ಸಾಧ್ಯವಾಯಿತು. ಇದಾದ ಬಳಿಕ ನಿಧಾನವಾಗಿ ಭಾರತ ಟೆಸ್ಟ್ ತಂಡದಲ್ಲಿ ಅವರ ಸ್ಥಾನ ಕುಸಿಯತೊಡಗಿತು.

ಇದೇ ಸಮಯದಲ್ಲಿ ಭಾರತದ ಸ್ಪಿನ್ ವಿಭಾಗದಲ್ಲಿ ಅನಿಲ್ ಕುಂಬ್ಳೆ ಅವರ ಬೆಳವಣಿಗೆ ವೇಗ ಪಡೆದುಕೊಂಡಿತು. ಪರಿಣಾಮವಾಗಿ ಹಿರ್ವಾನಿಗೆ ತಂಡದಲ್ಲಿ ಅವಕಾಶಗಳು ಮತ್ತಷ್ಟು ಕಡಿಮೆಯಾದವು. 1995ರಲ್ಲಿ ಪುನರಾಗಮನ ಮಾಡಿದ ಹಿರ್ವಾನಿ ಒಂದು ಪಂದ್ಯದಲ್ಲಿ 59 ರನ್ ನೀಡಿ ಆರು ವಿಕೆಟ್ ಕಬಳಿಸಿ ತಮ್ಮ ಸಾಮರ್ಥ್ಯ ತೋರಿಸಿದರೂ, ಟೆಸ್ಟ್ ತಂಡದಲ್ಲಿ ಶಾಶ್ವತ ಸ್ಥಾನವನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ.

ಆದರೂ ಹಿರ್ವಾನಿಯ ಕ್ರಿಕೆಟ್ ಪಯಣ ಅಲ್ಲಿಗೆ ಅಂತ್ಯವಾಗಲಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ ಅವರು ಹಲವು ವರ್ಷಗಳ ಕಾಲ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಬರೋಬ್ಬರಿ 732 ವಿಕೆಟ್‌ಗಳನ್ನು ಕಬಳಿಸಿರುವ ಹಿರ್ವಾನಿ, ರಣಜಿ ಟ್ರೋಫಿಯಲ್ಲೇ 441 ವಿಕೆಟ್‌ಗಳನ್ನು ಪಡೆದಿದ್ದಾರೆ.

2002-03ರಲ್ಲೂ 34 ವರ್ಷದ ವಯಸ್ಸಿನಲ್ಲಿ 79 ಪ್ರಥಮ ದರ್ಜೆ ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮಲ್ಲಿದ್ದ ಸಾಮರ್ಥ್ಯ ಇನ್ನೂ ಕುಂದಿಲ್ಲ ಎಂಬುದನ್ನು ತೋರಿಸಿಕೊಟ್ಟರು.

ಹೀಗಾಗಿ ನರೇಂದ್ರ ಹಿರ್ವಾನಿಯ ಕಥೆ ಕೇವಲ ಚೊಚ್ಚಲ ಟೆಸ್ಟ್‌ನ 16 ವಿಕೆಟ್‌ಗಳ ದಾಖಲೆಗೆ ಸೀಮಿತವಾಗಿಲ್ಲ. ಅಸಾಧಾರಣ ಆರಂಭದೊಂದಿಗೆ ಅಪಾರ ನಿರೀಕ್ಷೆಗಳನ್ನು ಹುಟ್ಟುಹಾಕಿ, ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವಕಾಶಗಳನ್ನು ಕಳೆದುಕೊಂಡರೂ ದೇಶೀಯ ಕ್ರಿಕೆಟ್‌ನಲ್ಲಿ ವರ್ಷಗಳ ಕಾಲ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ ಅಪರೂಪದ ಸ್ಪಿನ್ನರ್‌ನ ಪಯಣ ಇದಾಗಿದೆ.

ಚೊಚ್ಚಲ ಟೆಸ್ಟ್‌ನಲ್ಲೇ ಇತಿಹಾಸ ಸೃಷ್ಟಿಸಿದ ಹಿರ್ವಾನಿ ನಂತರ ದೀರ್ಘಕಾಲ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗದಿರುವುದು ಭಾರತೀಯ ಕ್ರಿಕೆಟ್‌ನ ಅಪರೂಪದ ಅಧ್ಯಾಯಗಳಲ್ಲಿ ಒಂದಾಗಿದೆ.

ಸಾಲದ ಕಂತು ಕಟ್ಟಲಿಲ್ಲವೆಂದು ಮಹಿಳೆ ಕಿಡ್ನ್ಯಾಪ್? ಚಂದ್ರಾಲೇಔಟ್‌ನಲ್ಲಿ ಮೂವರ ಬಂಧನ

0

ಬೆಂಗಳೂರು: ಸಾಲದ ಹಣ ಹಾಗೂ ಬಡ್ಡಿ ವಿಚಾರಕ್ಕೆ ಮಹಿಳೆಯೊಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿ, ಆಕೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಚಂದ್ರಾಲೇಔಟ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ರೇಷ್ಮಾ ಬಾನು, ನಝತ್ ಹಾಗೂ ಸುಹೇಲ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾಲದ ಹಣ ಪಾವತಿಸದ ಹಿನ್ನೆಲೆ ತಕರಾರು:

ಪೊಲೀಸರ ದೂರಿನ ಪ್ರಕಾರ, ಸಂತ್ರಸ್ತ ಮಹಿಳೆಗೆ ರೇಷ್ಮಾ ಬಾನು ಈ ಹಿಂದೆ ಪರಿಚಯವಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ರೇಷ್ಮಾ ಅವರಿಂದ ಮಹಿಳೆ ₹1 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಬಳಿಕ ರೇಷ್ಮಾ ಮೂಲಕ ನಝತ್ ಪರಿಚಯವಾಗಿದ್ದು, ನಝತ್ ಅವರಿಂದ ₹50 ಸಾವಿರ ಸಾಲ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಝತ್‌ಗೆ ಪ್ರತಿ ತಿಂಗಳು ₹5 ಸಾವಿರದಂತೆ ಕಂತಿನಲ್ಲಿ ಹಣ ಪಾವತಿಸುತ್ತಿದ್ದ ಮಹಿಳೆಗೆ ವೈಯಕ್ತಿಕ ಕಾರಣಗಳಿಂದ ಕಳೆದ ಆರು ತಿಂಗಳಿಂದ ಹಣ ಪಾವತಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಝತ್ ಪದೇಪದೆ ಸಂಪರ್ಕಿಸುತ್ತಿದ್ದರು. ಇದರಿಂದಾಗಿ ಮಹಿಳೆ ನಝತ್ ಅವರ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲಸದ ನೆಪದಲ್ಲಿ ಮನೆಗೆ ಕರೆಸಿ ಹಲ್ಲೆ:

ಮಹಿಳೆ ಮನೆ ಖಾಲಿ ಮಾಡಿಕೊಂಡು ತಾಯಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ, ಕೆಲಸವೊಂದಿದೆ ಹಾಗೂ ಹಣ ಸಿಗಲಿದೆ ಎಂದು ಹೇಳಿ ನಝತ್ ತಮ್ಮ ಮನೆಗೆ ಕರೆಸಿಕೊಂಡಿದ್ದರು ಎನ್ನಲಾಗಿದೆ. ಮಹಿಳೆ ಅಲ್ಲಿಗೆ ತೆರಳಿದ ಬಳಿಕ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ವೇಳೆ ರೇಷ್ಮಾ ಬಾನು ಹಾಗೂ ಆಕೆಯ ಪತಿ ಸುಹೇಲ್ ಕೂಡ ಅಲ್ಲಿಗೆ ಬಂದು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಮಹಿಳೆಯನ್ನು ಆಟೋದಲ್ಲಿ ಕುಂಬಳಗೋಡು ಸಮೀಪದ ಮನೆಯೊಂದಕ್ಕೆ ಕರೆದೊಯ್ದು ಇರಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿಡಿಯೋ ಹರಿಬಿಡುವುದಾಗಿ ಬೆದರಿಕೆ:

ಮಹಿಳೆಯನ್ನು ಮನೆಯಲ್ಲಿ ಇರಿಸಿಕೊಂಡಿದ್ದ ವೇಳೆ ಆಕೆಯನ್ನು ಅವಮಾನಿಸಿ ವಿಡಿಯೋ ಮಾಡಲಾಗಿತ್ತು. ಹಣ ನೀಡದಿದ್ದರೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ.

ಈ ನಡುವೆ ಮಹಿಳೆ ಕಾಣೆಯಾಗಿದ್ದರಿಂದ ಆಕೆಯ ತಾಯಿ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿ ರಕ್ಷಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮಾ ಬಾನು, ನಝತ್ ಹಾಗೂ ಸುಹೇಲ್ ಅವರನ್ನು ಬಂಧಿಸಿರುವ ಪೊಲೀಸರು, ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Karnataka Weather: ರಾಜ್ಯದಲ್ಲಿ ಮುಂಗಾರು ದುರ್ಬಲ; ಕರಾವಳಿ ಸೇರಿ ಹಲವೆಡೆ ಮಳೆ ಸಾಧ್ಯತೆ

0

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ತುಸು ದುರ್ಬಲಗೊಂಡಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ಸೆಪ್ಟೆಂಬರ್ 4 ಮತ್ತು 5ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ.4 ಮತ್ತು 5ರಂದು ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಮಳೆ, ಬಿರುಗಾಳಿ ಸಾಧ್ಯತೆ:

ಸೆ.4ರಂದು ವಿಜಯಪುರ, ಗದಗ, ರಾಯಚೂರು, ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಸೆ.5ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲೂ ಮಳೆ:

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸೆ.4ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಸೆ.5ರಂದು ಇದೇ ಜಿಲ್ಲೆಗಳ ಹಲವೆಡೆ ಮಳೆಯೊಂದಿಗೆ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಎಲ್ಲಿ ಎಷ್ಟು ಮಳೆ?

ಸೆ.3ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ 3 ಸೆಂ.ಮೀ. ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಬಸಗೋಡ, ಗದಗ ಮತ್ತು ಗೋಕರ್ಣದಲ್ಲಿ ತಲಾ 2 ಸೆಂ.ಮೀ. ಮಳೆ ದಾಖಲಾಗಿದೆ.

ಉತ್ತರ ಕನ್ನಡದ ಕಾರವಾರ, ಕುಮಟಾ ಹಾಗೂ ಮಾಣ್ಕಿ, ಕೊಪ್ಪಳದ ತಾವರಗೇರಾ ಸೇರಿದಂತೆ ಹಲವು ಪ್ರದೇಶಗಳಲ್ಲೂ ಮಳೆಯಾಗಿದೆ. ಶಿವಮೊಗ್ಗದ ಆಗುಂಬೆ, ಉಡುಪಿ ಜಿಲ್ಲೆಯ ಬ್ರಹ್ಮಾವರ, ರಾಯಚೂರಿನ ದೇವದುರ್ಗ ಸೇರಿದಂತೆ ಹಲವು ಕಡೆ 1 ಸೆಂ.ಮೀ. ಮಳೆ ದಾಖಲಾಗಿದೆ.

ಮುಂದಿನ ದಿನಗಳಲ್ಲೂ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹಾಗೂ ಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು-ಮಿಂಚು ಹಾಗೂ ಬಲವಾದ ಮೇಲ್ಮೈ ಗಾಳಿಯ ಕುರಿತು IMD ಮುನ್ಸೂಚನೆ ನೀಡಿದೆ.

ಕೆ.ಆರ್. ಮಾರುಕಟ್ಟೆಗೆ ಇನ್ಮುಂದೆ ಎಂಟ್ರಿ ಫೀ; ವಾಹನ, ಸರಕುಗಳಿಗೂ ಶುಲ್ಕ!

0

ಬೆಂಗಳೂರು: ನಗರದ ಐತಿಹಾಸಿಕ ಕೆ.ಆರ್. ಮಾರುಕಟ್ಟೆಯ ಅಭಿವೃದ್ಧಿ ಮತ್ತು ನಿರ್ವಹಣೆಗೆ ಹೊಸ ಶುಲ್ಕ ವ್ಯವಸ್ಥೆ ಜಾರಿಗೆ ತರಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಮುಂದಾಗಿದೆ.

ಇದರ ಭಾಗವಾಗಿ ಮಾರುಕಟ್ಟೆ ಪ್ರವೇಶಿಸುವ ಸರಕು ಸಾಗಣೆ ವಾಹನಗಳು ಹಾಗೂ ವಿವಿಧ ಸರಕುಗಳ ಮೇಲೆ ಪ್ರವೇಶ ಶುಲ್ಕ ವಿಧಿಸಲು ಸ್ಮಾರ್ಟ್ ಗೇಟ್ ವ್ಯವಸ್ಥೆ ಅಳವಡಿಸಲಾಗುತ್ತಿದೆ.

ನಿಗದಿತ ದರದ ಪ್ರಕಾರ, ಆರು ಚಕ್ರ ಅಥವಾ ಅದಕ್ಕಿಂತ ಹೆಚ್ಚಿನ ಸರಕು ವಾಹನಗಳಿಗೆ ಪ್ರತಿ ಪ್ರವೇಶ ಮತ್ತು ನಿರ್ಗಮನಕ್ಕೆ ₹350, ನಾಲ್ಕು ಚಕ್ರದ ಸರಕು ವಾಹನಗಳಿಗೆ ₹100 ಹಾಗೂ ಮೂರು ಚಕ್ರದ ಸರಕು ವಾಹನಗಳಿಗೆ ₹75 ಶುಲ್ಕ ವಿಧಿಸಲಾಗುತ್ತದೆ.

ತರಕಾರಿ, ಹಣ್ಣು, ಹೂವಿಗೂ ಶುಲ್ಕ:

ವಾಹನಗಳ ಪ್ರವೇಶ ಶುಲ್ಕದ ಜತೆಗೆ ಮಾರುಕಟ್ಟೆಗೆ ತರಲಾಗುವ ಸರಕುಗಳಿಗೂ ಪ್ರತ್ಯೇಕ ಶುಲ್ಕ ನಿಗದಿಪಡಿಸಲಾಗಿದೆ. ತರಕಾರಿ, ಹಣ್ಣು, ಹೂವು, ಸೊಪ್ಪು ಸೇರಿದಂತೆ ಹಲವು ಕೃಷಿ ಉತ್ಪನ್ನಗಳಿಗೆ ಪ್ರತಿ ಮೂಟೆ ಅಥವಾ ನಿಗದಿತ ಘಟಕಕ್ಕೆ ₹5 ಶುಲ್ಕ ವಿಧಿಸಲಾಗುತ್ತದೆ.

ಮೊಟ್ಟೆಗಳಿಗೆ ಪ್ರತಿ ಬಾಕ್ಸ್‌ಗೆ ₹10, ಮೀನು ಹಾಗೂ ಸಮುದ್ರ ಉತ್ಪನ್ನಗಳ ಬಾಕ್ಸ್‌ಗೆ ₹10 ಮತ್ತು ಕೋಳಿ ಹಾಗೂ ಇತರ ಮಾಂಸ ಉತ್ಪನ್ನಗಳ ಪ್ರತಿ ಟ್ರೇಗೆ ₹10 ಶುಲ್ಕ ನಿಗದಿಪಡಿಸಲಾಗಿದೆ.

ಡಿಜಿಟಲ್ ಮೂಲಕ ಶುಲ್ಕ ಪಾವತಿ:

ಮಾರುಕಟ್ಟೆ ಪ್ರವೇಶಕ್ಕೂ ಮುನ್ನ ನಿಗದಿತ ಶುಲ್ಕ ಪಾವತಿಸುವ ವ್ಯವಸ್ಥೆ ಜಾರಿಗೆ ಬರಲಿದೆ. ಯುಪಿಐ, ಕ್ಯೂಆರ್ ಕೋಡ್, ಫಾಸ್ಟ್‌ಟ್ಯಾಗ್, ಕಾರ್ಡ್ ಹಾಗೂ ಪಿಒಎಸ್‌ ಸೇರಿದಂತೆ ಡಿಜಿಟಲ್ ವಿಧಾನಗಳ ಮೂಲಕ ಶುಲ್ಕ ಸಂಗ್ರಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಮಾರ್ಟ್ ಗೇಟ್‌ಗಳ ಜತೆಗೆ ವಾಹನಗಳ ಮೇಲ್ವಿಚಾರಣೆಗೆ ಎಎನ್‌ಪಿಆರ್ ಕ್ಯಾಮೆರಾ ಹಾಗೂ ಸಿಸಿಟಿವಿ ವ್ಯವಸ್ಥೆಯನ್ನೂ ಬಳಸುವ ಯೋಜನೆ ಇದೆ.

10 ವರ್ಷಗಳ ಒಪ್ಪಂದ:

ಕೆ.ಆರ್. ಮಾರುಕಟ್ಟೆಯ ಅಭಿವೃದ್ಧಿ, ನಿರ್ವಹಣೆ, ಸಿವಿಲ್ ಕಾಮಗಾರಿ, ಸ್ಮಾರ್ಟ್ ತಂತ್ರಜ್ಞಾನ ಅಳವಡಿಕೆ ಹಾಗೂ ಸರಕು ವಾಹನಗಳಿಂದ ಪ್ರವೇಶ ಶುಲ್ಕ ಸಂಗ್ರಹಿಸುವ ಕಾರ್ಯವನ್ನು 10 ವರ್ಷಗಳ ಅವಧಿಯ ಒಪ್ಪಂದದಡಿ ಕೈಗೊಳ್ಳಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ.

ಹೊಸ ಶುಲ್ಕ ವ್ಯವಸ್ಥೆಯಿಂದ ಮಾರುಕಟ್ಟೆಯ ನಿರ್ವಹಣೆ ಹಾಗೂ ಸ್ವಚ್ಛತೆ ಸುಧಾರಿಸುವ ಉದ್ದೇಶವಿದೆ ಎಂದು ಪಾಲಿಕೆ ತಿಳಿಸಿದೆ. ಆದರೆ ಹೆಚ್ಚುವರಿ ಶುಲ್ಕದ ಹೊರೆ ಅಂತಿಮವಾಗಿ ಸರಕುಗಳ ಬೆಲೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವ್ಯಾಪಾರಿಗಳು ಹಾಗೂ ಗ್ರಾಹಕರಲ್ಲಿ ಆತಂಕವೂ ವ್ಯಕ್ತವಾಗುತ್ತಿದೆ.

Krishna Janmashtami: ಬೆಂಗಳೂರಿನ ಇಸ್ಕಾನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; 3 ಲಕ್ಷ ಭಕ್ತರ ನಿರೀಕ್ಷೆ!

0

ಬೆಂಗಳೂರು: ನಗರ ಸೇರಿದಂತೆ ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದೆ.

ಬೆಂಗಳೂರಿನ ವಿವಿಧ ಶ್ರೀಕೃಷ್ಣ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನ ಪಡೆಯುತ್ತಿದ್ದಾರೆ.

ನಗರದ ಪ್ರಸಿದ್ಧ ಇಸ್ಕಾನ್ ದೇವಾಲಯದಲ್ಲೂ ಜನ್ಮಾಷ್ಟಮಿ ಆಚರಣೆ ಅದ್ಧೂರಿಯಾಗಿ ನಡೆಯುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಮುಖ್ಯ ಮಂದಿರವನ್ನು ವಿಶೇಷವಾಗಿ ನವಿಲಿನ ಅಲಂಕಾರದಿಂದ ಸಿಂಗರಿಸಲಾಗಿದೆ.

ರಂಗಮಂದಿರದಲ್ಲಿ ಶ್ರೀ ರಾಧಾ-ಕೃಷ್ಣ ಉತ್ಸವ ಮೂರ್ತಿಗಳಿಗೆ ವಿಶೇಷ ಅಭಿಷೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಾಲು, ಮೊಸರು, ತುಪ್ಪ, ಜೇನು ಸೇರಿದಂತೆ ವಿವಿಧ ಪವಿತ್ರ ದ್ರವ್ಯಗಳಿಂದ ಅಭಿಷೇಕ ನೆರವೇರಿಸಲಾಗುತ್ತಿದೆ. ಇಸ್ಕಾನ್ ಬೆಂಗಳೂರಿನ ಅಧಿಕೃತ ಮಾಹಿತಿಯ ಪ್ರಕಾರ ಸೆ.4ರಂದು ರಾತ್ರಿ ವಿಶೇಷ ಮಹಾಭಿಷೇಕ ಹಾಗೂ ಮಧ್ಯರಾತ್ರಿ ಮಹಾ ಆರತಿ ನಡೆಯಲಿದೆ.

ಭಕ್ತರ ಅನುಕೂಲಕ್ಕಾಗಿ ರಾತ್ರಿ 12 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್ ಸೇರಿದಂತೆ ನಗರದ ಪ್ರಮುಖ ಕೃಷ್ಣ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ.

ಶ್ರೀಕೃಷ್ಣನ ಜನ್ಮದಿನದ ಅಂಗವಾಗಿ ಭಜನೆ, ಕೀರ್ತನೆ, ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಭಕ್ತರು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಗುಳೆ ತಪ್ಪಿಸಿ, ಊರಲ್ಲೇ ಉದ್ಯೋಗ ಪಡೆಯಿರಿ: ವಿಬಿಜಿ-ರಾಮ್-ಜಿ ಯೋಜನೆಯಡಿ 125 ದಿನ ಕೆಲಸ

0

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗ್ರಾಮೀಣ ಪ್ರದೇಶದ ಕೂಲಿಕಾರರು ಗುಳೆ ಹೋಗುವುದನ್ನು ತಪ್ಪಿಸಿ ತಮ್ಮ ಊರಿನಲ್ಲಿಯೇ ಉದ್ಯೋಗ ಪಡೆದುಕೊಳ್ಳುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ವಿಬಿಜಿ-ರಾಮ್-ಜಿ ಯೋಜನೆಯಡಿ 125 ದಿನಗಳ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ತಾಲೂಕಿನ ನಿಡಗುಂದಿ ಗ್ರಾಮದ ಹೊಸ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ವಿಬಿಜಿ-ರಾಮ್-ಜಿ ಯೋಜನೆಯಡಿ ಆಯೋಜಿಸಿದ್ದ ವಿಭಿನ್ನ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಕೂಲಿಕಾರರು ಉದ್ಯೋಗಕ್ಕಾಗಿ ದೂರದ ಊರುಗಳಿಗೆ ಗುಳೆ ಹೋಗುವ ಬದಲು, ತಮ್ಮ ಗ್ರಾಮದಲ್ಲಿಯೇ ಸರ್ಕಾರ ನಿಗದಿಪಡಿಸಿರುವ ದಿನಗಳವರೆಗೆ ಕೆಲಸ ನಿರ್ವಹಿಸಿ ಉದ್ಯೋಗ ಪಡೆಯಬೇಕು. ಯೋಜನೆಯಡಿ ಲಭ್ಯವಿರುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನೂ ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸರಿಯಾಗಿ ಕೆಲಸ ಮಾಡಿದರೆ ನಿರಂತರ ಉದ್ಯೋಗ

ವಿಬಿಜಿ-ರಾಮ್-ಜಿ ಯೋಜನೆಯಡಿ 125 ದಿನಗಳ ಕೆಲಸ ಪಡೆಯಲು ಕೂಲಿಕಾರರು ಜವಾಬ್ದಾರಿಯಿಂದ ಹಾಗೂ ಗುಣಮಟ್ಟದಿಂದ ಕೆಲಸ ನಿರ್ವಹಿಸಬೇಕು. ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ಮಾತ್ರ ನಿರಂತರವಾಗಿ ಕೆಲಸ ನೀಡಲು ಸಾಧ್ಯವಾಗುತ್ತದೆ. ಆ ಮೂಲಕ 125 ದಿನಗಳ ಕಾಲ ಉದ್ಯೋಗದ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಹೇಳಿದರು.

ಈ ನಿಟ್ಟಿನಲ್ಲಿ ನಿಡಗುಂದಿ ಗ್ರಾಮದ ಪ್ರತಿಯೊಬ್ಬ ಕೂಲಿಕಾರರೂ ಕಾಮಗಾರಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಬೇಕು ಎಂದು ಕರೆ ನೀಡಿದರು.

ಹೊಸ ಕೆರೆ ತಾಲೂಕಿಗೆ ಮಾದರಿಯಾಗಲಿ

ನಿಡಗುಂದಿ ಗ್ರಾಮದ ಹೊಸ ಕೆರೆ ಪ್ರಸ್ತುತ ತನ್ನ ಮೂಲ ಸ್ವರೂಪವನ್ನೇ ಕಳೆದುಕೊಂಡಿದೆ. ಕೆರೆಯಲ್ಲಿ ಮುಳ್ಳುಕಂಟಿಗಳು, ಗಿಡಗಂಟಿಗಳು ಹಾಗೂ ಜಾಲಿ ಮರಗಳು ಬೆಳೆದು, ಅಪಾರ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದೆ. ಇದರಿಂದ ಕೆರೆಯಲ್ಲಿ ನೀರು ನಿಲ್ಲದಂತಾಗಿದ್ದು, ಕೆರೆಯ ಆಕಾರವೂ ಹಾಳಾಗಿದೆ ಎಂದು ಅವರು ಹೇಳಿದರು.

ಕೆರೆಯ ಪುನಶ್ಚೇತನ ಹಾಗೂ ಅಭಿವೃದ್ಧಿಗಾಗಿ ವಿಬಿಜಿ-ರಾಮ್-ಜಿ ಯೋಜನೆಯಡಿ ಅಂದಾಜು 90 ಲಕ್ಷ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೂಲಿಕಾರರು ಶ್ರದ್ಧೆಯಿಂದ ಕೆಲಸ ನಿರ್ವಹಿಸಿ ಕೆರೆಯನ್ನು ಅಭಿವೃದ್ಧಿಪಡಿಸಿದರೆ, ನಿಡಗುಂದಿಯ ಹೊಸ ಕೆರೆ ತಾಲೂಕಿಗೆ ಮಾದರಿ ಕೆರೆಯಾಗಿ ರೂಪುಗೊಳ್ಳಬೇಕು ಎಂದು ಆಶಿಸಿದರು.

ಕೆರೆಯಲ್ಲೇ ಮೂಡಿದ ‘ವಿಬಿಜಿ-ರಾಮ್-ಜಿ’ ಅಕ್ಷರ!

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ನಿಡಗುಂದಿ ಗ್ರಾಮದ ಹೊಸ ಕೆರೆಯ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರ ಮೂಲಕ ‘ವಿಬಿಜಿ-ರಾಮ್-ಜಿ’ ಎಂಬ ಅಕ್ಷರಗಳನ್ನು ರೂಪಿಸಲಾಯಿತು. ಅಕ್ಷರಗಳ ಮಧ್ಯೆ ಮಹಿಳಾ ಕೂಲಿಕಾರರನ್ನು ಕುಳ್ಳಿರಿಸಿ, ಸುತ್ತಲೂ ಇತರ ಕೂಲಿಕಾರರನ್ನು ನಿಲ್ಲಿಸುವ ಮೂಲಕ ವಿನೂತನ ಹಾಗೂ ವಿಭಿನ್ನ ರೀತಿಯ ಐಇಸಿ ಚಟುವಟಿಕೆ ನಡೆಸಲಾಯಿತು.

ಈ ವಿಶಿಷ್ಟ ಕಾರ್ಯಕ್ರಮವು ಕೂಲಿಕಾರರ ಗಮನ ಸೆಳೆಯುವುದರ ಜತೆಗೆ ಯೋಜನೆಯ ಮಹತ್ವ, ಉದ್ಯೋಗಾವಕಾಶ ಹಾಗೂ ಅದರ ಪ್ರಯೋಜನಗಳ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿತು.

ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ

ಸರ್ಕಾರ ಹಾಗೂ ಜಿಲ್ಲಾ ಪಂಚಾಯಿತಿ, ಗದಗ ಅವರ ನಿರ್ದೇಶನದಂತೆ ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.

ಅಭಿಯಾನದಡಿ ಹೊಸ ಜಾಬ್ ಕಾರ್ಡ್ ಮಾಡಿಸುವುದು, ಈಗಾಗಲೇ ಇರುವ ಜಾಬ್ ಕಾರ್ಡ್‌ಗಳಲ್ಲಿ ಅಗತ್ಯ ತಿದ್ದುಪಡಿ ಮಾಡಿಸುವುದು ಹಾಗೂ ಇ-ಕೆವೈಸಿ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಕೂಲಿಕಾರರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆಗೂ ಅವಕಾಶ

ಮತದಾರರ ಪಟ್ಟಿ ಪರಿಷ್ಕರಣೆ–2026ರ ಅಂಗವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ತಿದ್ದುಪಡಿ ಹಾಗೂ ಹೊಸದಾಗಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

18 ವರ್ಷ ಮೇಲ್ಪಟ್ಟ ಯುವಕ-ಯುವತಿಯರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಿಕೊಳ್ಳಬಹುದು. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಅದರಲ್ಲಿ ಯಾವುದೇ ತಿದ್ದುಪಡಿ ಅಗತ್ಯವಿದ್ದರೆ ಸಂಬಂಧಪಟ್ಟ ಗ್ರಾಮದ ಬಿಎಲ್‌ಒ ಅವರನ್ನು ಸಂಪರ್ಕಿಸಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅರ್ಹ ಮತದಾರರು ಮರು ಸೇರ್ಪಡೆಗೆ ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮರೇಶ ಮೂಲಿಮನಿ, ಜಿಲ್ಲಾ ಐಇಸಿ ಸಂಯೋಜಕ ವಿ.ಎಸ್. ಸಜ್ಜನ್, ತಾಂತ್ರಿಕ ಸಹಾಯಕ ಅಜಯ್ ಹೂಗಾರ, ಬಿಲ್ ಕಲೆಕ್ಟರ್ ಮತ್ತಪ್ಪ, ಜಿಕೆಎಂ ಅನಿತಾ ಸಂಗನಾಳ, ಪಂಚಾಯಿತಿ ಸಿಬ್ಬಂದಿ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.

ಗ್ರಾಮೀಣ ಕೂಲಿಕಾರರು ಗುಳೆ ಹೋಗುವ ಬದಲು ತಮ್ಮ ಊರಿನಲ್ಲಿಯೇ ಲಭ್ಯವಾಗುವ ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ವಿಬಿಜಿ-ರಾಮ್-ಜಿ ಯೋಜನೆಯಡಿ ನಿರಂತರ ಉದ್ಯೋಗ ದೊರೆಯಲಿದ್ದು, 125 ದಿನಗಳ ಕೆಲಸದ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಕೂಲಿಕಾರರೂ ಬಳಸಿಕೊಳ್ಳಬೇಕು.

— ಚಂದ್ರಶೇಖರ ಬಿ. ಕಂದಕೂರ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಗಜೇಂದ್ರಗಡ

ಕೂಡ್ಲಿಗಿ ಸರ್ಕಲ್‌ಗೆ ‘ವಾಸವಿ ವೃತ್ತ’ ನಾಮಕರಣಕ್ಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ಅಭಿವೃದ್ಧಿಗೆ 1953ರಿಂದಲೂ ಆರ್ಯವೈಶ್ಯ ಸಮಾಜ ಅಪಾರ ಕೊಡುಗೆ ನೀಡುತ್ತಾ ಬಂದಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಕೂಡ್ಲಿಗಿ ಸರ್ಕಲ್‌ಗೆ ‘ವಾಸವಿ ವೃತ್ತ’ ಎಂದು ನಾಮಕರಣ ಮಾಡಬೇಕು ಎಂದು ಆರ್ಯವೈಶ್ಯ ಸಂಘದ ಅಧ್ಯಕ್ಷ ಕೆ. ರಾಘವೇಂದ್ರ ಆಗ್ರಹಿಸಿದರು.

ಆರ್ಯವೈಶ್ಯ ಸಮಾಜದ ಮುಖಂಡರು ಹಾಗೂ ಸದಸ್ಯರೊಂದಿಗೆ ಶಾಸಕರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಹಗರಿಬೊಮ್ಮನಹಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆ, ಬಂಡಿಹಳ್ಳಿ ಗುಡ್ಡದ ತಿಮ್ಮಪ್ಪನ ತೇರು ಹಾಗೂ ದೇವಸ್ಥಾನ, ಪುರಸಭೆಯ ಉದ್ಯಾನವನ, ಪ್ರೌಢಶಾಲೆ, ಪಿಯು ಕಾಲೇಜು, ಪದವಿ ಕಾಲೇಜು ಹಾಗೂ ಎಲ್‌ಆ್ಯಂಡ್‌ಟಿ ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಆರ್ಯವೈಶ್ಯ ಸಮಾಜ ಸ್ಥಳದಾನ ಹಾಗೂ ವಿವಿಧ ರೀತಿಯ ಕೊಡುಗೆಗಳನ್ನು ನೀಡಿದೆ ಎಂದು ತಿಳಿಸಿದರು.

ಪಟ್ಟಣದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಅಭಿವೃದ್ಧಿಯಲ್ಲಿ ಆರ್ಯವೈಶ್ಯ ಸಮಾಜದ ಪಾತ್ರ ಮಹತ್ವದ್ದಾಗಿದೆ. ಆದ್ದರಿಂದ ಪ್ರಸ್ತುತ ಕೂಡ್ಲಿಗಿ ಸರ್ಕಲ್ ಎಂದು ಕರೆಯಲಾಗುತ್ತಿರುವ ವೃತ್ತಕ್ಕೆ ವಾಸವಿ ವೃತ್ತ ಎಂದು ನಾಮಕರಣ ಮಾಡುವ ಮೂಲಕ ಸಮಾಜದ ಕೊಡುಗೆಯನ್ನು ಗೌರವಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸ್ವೀಕರಿಸಿದ ಶಾಸಕ ನೇಮಿರಾಜ್ ನಾಯಕ್ ಮಾತನಾಡಿ, ಆರ್ಯವೈಶ್ಯ ಸಮಾಜವು ತಾಲೂಕು ಹಾಗೂ ಪಟ್ಟಣದ ಅಭಿವೃದ್ಧಿಗೆ ನೀಡಿರುವ ಗಣನೀಯ ಕೊಡುಗೆ ಶ್ಲಾಘನೀಯವಾಗಿದೆ. ಸಮಾಜದ ಮನವಿಗೆ ಸ್ಪಂದಿಸಿ ಶೀಘ್ರದಲ್ಲಿಯೇ ಕೂಡ್ಲಿಗಿ ವೃತ್ತಕ್ಕೆ ‘ವಾಸವಿ ವೃತ್ತ’ ಎಂದು ನಾಮಕರಣ ಮಾಡಿ, ಅಗತ್ಯ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ರಾಜ್ಯಾಧ್ಯಕ್ಷ ಭರತ್ ಗಂಗಾವತಿ, ಆರ್ಯವೈಶ್ಯ ಸಂಘ ಟ್ರಸ್ಟ್ ಅಧ್ಯಕ್ಷ ಕೆ. ರಾಘವೇಂದ್ರ, ಮಂಜುನಾಥ ಶ್ರೇಷ್ಠಿ, ಸುದರ್ಶನ ಶ್ರೇಷ್ಠಿ, ಲಕ್ಷ್ಮೀಪತಿ, ಬೆಲ್ಲಂಕೊಂಡಿ ರಮೇಶ್, ಗೋಪಾಲ, ವೆಂಕಟಾಚಲಪತಿ ವೇಣುಗೋಪಾಲ, ಕುಮಾರ್ ಇಂಜಿನಿಯರ್, ಪ್ರಭಾಕರ ಶ್ರೇಷ್ಠಿ, ಬೇಳೂರು ಮಾರುತಿ ಶ್ರೇಷ್ಠಿ, ಕುಪ್ಪಾ ಶಿವಕುಮಾರ, ಕುಪ್ಪಾ ಲಕ್ಷ್ಮೀಪತಿ, ಬಾಲಾಜಿ, ಪ್ರವೀಣ್, ಪ್ರಕಾಶ್, ಬಸಾಪುರ ರಾಘವೇಂದ್ರ, ಹನುಮಂತ ಶ್ರೇಷ್ಠಿ, ನಾನ್ಯಾಪೂರ ಕೃಷ್ಣಮೂರ್ತಿ, ರಾಜೇಂದ್ರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರರಿಗೆ ಸ್ವಾಗತ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪಾಧ್ಯಕ್ಷ ರೆಹಾನ್ ರಝಾ ಐನಾಪುರ ಉಪಸ್ಥಿತರಿದ್ದರು.

ಗುಟ್ಕಾ, ತಂಬಾಕು ನಿಷೇಧ ಹಿಂಪಡೆಯದಂತೆ ಸಿಎಂಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾರ್ವಜನಿಕ ಆರೋಗ್ಯ ಹಾಗೂ ಯುವಜನರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗುಟ್ಕಾ ಮತ್ತು ತಂಬಾಕು ನಿಷೇಧವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಆಗ್ರಹಿಸಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ, ಲಕ್ಷ್ಮೇಶ್ವರ ಮಹಿಳಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ವಿವಿಧ ಮಹಿಳಾ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ತಂಬಾಕು ಉತ್ಪನ್ನಗಳ ಬಳಕೆಯಿಂದ ಯುವಜನರ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದ್ದು, ಅನೇಕ ಕುಟುಂಬಗಳ ನೆಮ್ಮದಿ ಹಾಳಾಗುತ್ತಿದೆ. ಆದ್ದರಿಂದ ತಂಬಾಕು ಲಾಬಿ ಅಥವಾ ವ್ಯಾಪಾರಿ ಹಿತಾಸಕ್ತಿಗಳ ಒತ್ತಡಕ್ಕೆ ಮಣಿಯದೆ ನಿಷೇಧವನ್ನು ಕಟ್ಟುನಿಟ್ಟಾಗಿ ಮುಂದುವರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮುಂದಿನ ಪೀಳಿಗೆಯ ಆರೋಗ್ಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಗುಟ್ಕಾ ಮತ್ತು ತಂಬಾಕು ನಿಷೇಧವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದರು.

ಈ ವೇಳೆ ಬಳಗದ ಆಡಳಿತ ಮಂಡಳಿಯ ಮುಖ್ಯಸ್ಥರಾದ ಜಯಲಕ್ಷ್ಮೀ ಗಡ್ಡದೇವರಮಠ, ಜಯಲಕ್ಷ್ಮೀ ಮಹಾಂತಶೆಟ್ಟರ, ರಾಜೇಶ್ವರಿ ಪಾಟೀಲ, ರಮೇಶ ನವಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

‘ಹಜ್ ಟಿಕೆಟ್‌ಗಾಗಿ’ ರಸ್ತೆಯಲ್ಲೇ ಭಿಕ್ಷಾಟನೆ

ವಿಜಯಸಾಕ್ಷಿ ಸುದ್ದಿ, ಗದಗ: “ಅಮ್ಮಾ… ಧರ್ಮ ಮಾಡಿ ತಾಯಿ… ದಯವಿಟ್ಟು ಇಲ್ಲ ಅನ್ನಬೇಡಿ… ನಿಮ್ಮ ಧರ್ಮ ನಿಮ್ಮನ್ನು, ನಿಮ್ಮ ಕುಟುಂಬವನ್ನು ಕಾಪಾಡುತ್ತದೆ… ಚಿಲ್ಲರೆ ಇಲ್ಲ ಅಂತ ಮಾತ್ರ ಹೇಳಬೇಡಿ… ದೇವರು ನಿಮಗೆ ಎಷ್ಟು ಶಕ್ತಿ ಕೊಟ್ಟಿದ್ದಾನೋ ಅಷ್ಟನ್ನಾದರೂ ಕೊಡಿ…”

ಇದು ರಸ್ತೆಯಲ್ಲಿ ಸಾಮಾನ್ಯ ಭಿಕ್ಷುಕರೊಬ್ಬರು ಕೇಳಿದ ಮಾತಲ್ಲ. ಬದಲಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಯನ್ನು ಖಂಡಿಸಿ, ಶಿವರಾಮಕೃಷ್ಣ ಸೇವಾ ಟ್ರಸ್ಟ್ ಸಂಚಾಲಕ ರಾಜೂ ಖಾನಪ್ಪನವರ ನೇತೃತ್ವದಲ್ಲಿ ಹಿಂದೂ ಕಾರ್ಯಕರ್ತರು ನಡೆಸಿದ ವಿನೂತನ ಪ್ರತಿಭಟನೆಯ ದೃಶ್ಯವಿದು.

ಸಚಿವರಿಗೆ ಹಜ್ ಯಾತ್ರೆಗೆ ತೆರಳುವ ಆಸೆಯಿದ್ದರೆ, ಅದಕ್ಕಾಗಿ ಜನರಿಂದ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ವಿಮಾನದ ಟಿಕೆಟ್ ಕೊಡಿಸುತ್ತೇವೆ ಎಂಬ ವ್ಯಂಗ್ಯದ ಮೂಲಕ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಗದಗ ನಗರದ ಹುಯಿಲಗೋಳ ನಾರಾಯಣರಾವ ವರ್ತುಲದಲ್ಲಿ ಶಿವರಾಮಕೃಷ್ಣ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಕೈಯಲ್ಲಿ ಪಾತ್ರೆಗಳನ್ನು ಹಿಡಿದು ಸಾರ್ವಜನಿಕರಿಂದ ಭಿಕ್ಷೆ ಸಂಗ್ರಹಿಸಿದರು.

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಅತ್ಯುತ್ತಮ ಧರ್ಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ತಮಗೂ ಹಜ್ ಯಾತ್ರೆಗೆ ತೆರಳುವ ಆಸೆಯಿದೆ ಎಂದು ಹೇಳಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅಲ್ಲದೆ, ಮಠ-ಮಂದಿರಗಳಿಗೆ ಹೋಗುವುದಿಲ್ಲ ಹಾಗೂ ಅಲ್ಲಿಗೆ ಹೋಗುವ ಅಗತ್ಯವಿಲ್ಲ ಎಂಬರ್ಥದಲ್ಲಿ ಸಚಿವರು ಮಾತನಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಹೇಳಿಕೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನಪ್ರತಿನಿಧಿಯಾಗಿರುವ ಸಚಿವರು ಎಲ್ಲ ಧರ್ಮಗಳ ನಂಬಿಕೆ, ಆಚರಣೆ ಹಾಗೂ ಧಾರ್ಮಿಕ ಕೇಂದ್ರಗಳನ್ನು ಸಮಾನ ಗೌರವದಿಂದ ಕಾಣಬೇಕು ಎಂದು ಆಗ್ರಹಿಸಿದರು.

ಭಿಕ್ಷಾಟನೆಯಲ್ಲೇ ವ್ಯಂಗ್ಯದ ಪ್ರತಿಭಟನೆ!

ಪ್ರತಿಭಟನೆಯ ಪ್ರಮುಖ ಆಕರ್ಷಣೆಯಾಗಿದ್ದು ಕಾರ್ಯಕರ್ತರ ವಿನೂತನ ಭಿಕ್ಷಾಟನೆ. ಸಾಮಾನ್ಯವಾಗಿ ಸಾಮಾಜಿಕ ಸೇವೆ ಅಥವಾ ನೆರವಿಗಾಗಿ ಭಿಕ್ಷೆ ಸಂಗ್ರಹಿಸುವ ಬದಲು, ಸಚಿವರ ಹೇಳಿಕೆಯನ್ನು ವ್ಯಂಗ್ಯಾತ್ಮಕವಾಗಿ ಖಂಡಿಸಲು ಕಾರ್ಯಕರ್ತರು ಈ ವಿಶಿಷ್ಟ ಮಾರ್ಗವನ್ನು ಅನುಸರಿಸಿದರು.

ಸಚಿವರಿಗೆ ನಿಜವಾಗಿಯೂ ಹಜ್ ಯಾತ್ರೆಗೆ ಹೋಗುವ ಆಸೆಯಿದ್ದರೆ, ನಾವು ಜನರಿಂದ ಭಿಕ್ಷೆ ಬೇಡಿ ಹಣ ಸಂಗ್ರಹಿಸುತ್ತೇವೆ. ಅದೇ ಹಣದಲ್ಲಿ ಅವರಿಗೆ ವಿಮಾನದ ಟಿಕೆಟ್ ಮಾಡಿಸಿಕೊಡುತ್ತೇವೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಈ ಮೂಲಕ ಧಾರ್ಮಿಕ ವಿಚಾರಗಳ ಕುರಿತು ರಾಜಕಾರಣಿಗಳು ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಮಾತನಾಡಬೇಕು ಎಂಬ ಸಂದೇಶವನ್ನು ಕಾರ್ಯಕರ್ತರು ರವಾನಿಸಿದರು.

ಗದಗ-ಬೆಟಗೇರಿ ಅವಳಿ ನಗರದಲ್ಲಿ ನಡೆದ ಈ ವಿನೂತನ ಪ್ರತಿಭಟನೆ ಸಾರ್ವಜನಿಕರ ಗಮನ ಸೆಳೆಯಿತು. ಸುಮಾರು 200ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯಲ್ಲಿ ಮಹಾಂತೇಶ ಪಾಟೀಲ, ವೆಂಕಟೇಶ ದೊಡ್ಡಮನಿ, ಹುಲುಗಪ್ಪ ವಾಲ್ಮೀಕಿ, ಶಿವಯೋಗಿ ಹಿರೇಮಠ, ಮಹಾಬಲೇಶ್ವರ ಶೆಟ್ಟರ, ಈರಪ್ಪ ಹೆಬಸೂರು, ಸುನಿಲ್ ಮುಳ್ಳಾಳ, ಕಿರಣ ಹಿರೇಮಠ, ಕುಮಾರ ಮಿಟ್ಟಿಮಠ, ಅಶೋಕ ಬಜಂತ್ರಿ, ಕುಮಾರ ನಡಗೇರಿ, ಮಂಜು ಗುಡಿಮನಿ, ಭರತ್ ಲದ್ದಿ, ಈರಣ್ಣ ವಾಲ್ಮೀಕಿ, ಅಭಿಷೇಕ ಕುರ್ತಕೋಟಿ, ಶಿವಕುಮಾರ ಲದ್ದಿ, ಬಸವರಾಜ ಬನ್ನಿಮರದ, ಕೃಷ್ಣ ಹಂಡಿ, ಶರಣಪ್ಪ ಲಕ್ಕುಂಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮಠ-ಮಂದಿರಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ. ಅವುಗಳೊಂದಿಗೆ ಜನರ ಭಾವನೆ, ಸಂಸ್ಕೃತಿ ಹಾಗೂ ಪರಂಪರೆ ಬೆಸೆದುಕೊಂಡಿವೆ. ಅವುಗಳ ಕುರಿತು ಯಾರೂ ಲಘುವಾಗಿ ಮಾತನಾಡಬಾರದು. ಸಚಿವರು ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಬೇಕು ಅಥವಾ ಹಿಂಪಡೆಯಬೇಕು. ಸಚಿವರಿಗೆ ನಿಜವಾಗಿಯೂ ಹಜ್ ಯಾತ್ರೆಗೆ ತೆರಳುವ ತವಕವಿದ್ದರೆ, ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆಯಲ್ಲಿ ಭಿಕ್ಷಾಟನೆ ನಡೆಸಿ ವಿಮಾನದ ಟಿಕೆಟ್ ಖರೀದಿಸಿ ಕೊಡುತ್ತೇವೆ.

— ರಾಜೂ ಖಾನಪ್ಪನವರ, ಹಿಂದೂ ಸಂಘಟನೆಗಳ ಮುಖಂಡ