Home Blog Page 4

ರಸ್ತೆಯಲ್ಲೇ ಸಂತೆ, ಸಂಚಾರಕ್ಕೆ ಸಂಕಷ್ಟ: ಎಪಿಎಂಸಿ ಮಾರುಕಟ್ಟೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದಲ್ಲಿ ದಿನನಿತ್ಯ ಹಾಗೂ ರವಿವಾರ ನಡೆಯುತ್ತಿರುವ ಸಂತೆ ಮಾರುಕಟ್ಟೆಯನ್ನು ಸ್ಥಳಾಂತರಿಸಿ, ಪಾಳುಬಿದ್ದಿರುವ ಎಪಿಎಂಸಿ ಮಾರುಕಟ್ಟೆಯನ್ನು ದುರಸ್ತಿಗೊಳಿಸಿ ಕಾರ್ಯಾರಂಭ ಮಾಡಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಮಂಗಳವಾರ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಂತೋಷ ಕುರಿ, ಸಂತೆ ಮಾರುಕಟ್ಟೆಯಿಂದಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಿಂದ ವಿವಿಧ ಕೆಲಸಗಳಿಗಾಗಿ ಪಟ್ಟಣಕ್ಕೆ ಆಗಮಿಸುವ ಜನರು ಪೊಲೀಸ್ ಠಾಣೆ, ತಾಲೂಕು ಆಸ್ಪತ್ರೆ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ರೇಷ್ಮೆ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾರುಕಟ್ಟೆ ಮಾರ್ಗವಾಗಿಯೇ ತೆರಳಬೇಕಾದ ಅನಿವಾರ್ಯತೆ ಇದೆ ಎಂದರು.

ಇಕ್ಕಟ್ಟಾದ ರಸ್ತೆಯಲ್ಲಿ ಮಾರುಕಟ್ಟೆ ನಡೆಯುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಹಲವು ಅಪಘಾತಗಳು ಸಂಭವಿಸಿದ ಉದಾಹರಣೆಗಳಿವೆ ಎಂದು ತಿಳಿಸಿದರು.

ಬಸ್ ನಿಲ್ದಾಣದ ಸಮೀಪದಲ್ಲಿರುವ ಸರ್ಕಾರದ ಎಪಿಎಂಸಿ ಜಾಗೆ ಪಾಳುಬಿದ್ದು ಕಸ ಶೇಖರಣಾ ಘಟಕವಾಗಿ ಮಾರ್ಪಟ್ಟಿದೆ. ಇದರಿಂದ ದುರ್ವಾಸನೆ ಬೀರುತ್ತಿದ್ದು, ನಿತ್ಯ ಸಂಚರಿಸುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಎಪಿಎಂಸಿ ಮಾರುಕಟ್ಟೆಯನ್ನು ಕೂಡಲೇ ದುರಸ್ತಿಗೊಳಿಸಿ ದಿನನಿತ್ಯ ಹಾಗೂ ರವಿವಾರ ನಡೆಯುವ ಸಂತೆಯನ್ನು ಅಲ್ಲಿಗೆ ಸ್ಥಳಾಂತರಿಸಬೇಕು. ರೈತರ ವ್ಯಾಪಾರ–ವಹಿವಾಟಿಗೆ ಸೂಕ್ತ ಅವಕಾಶ ಕಲ್ಪಿಸಬೇಕು. ಇಲ್ಲವಾದಲ್ಲಿ ಹೋರಾಟದ ಮೂಲಕ ನ್ಯಾಯಯುತ ಬೇಡಿಕೆ ಈಡೇರಿಸಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಪಪಂ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ರಾಮಣ್ಣ ಕಂಬಳಿ, ಫಕ್ಕೀರೇಶ ರಟ್ಟಿಹಳ್ಳಿ, ವಿಠ್ಠಲ ಭಿಡವೆ, ಸಂತೋಷ ತೋಡೆಕಾರ, ಬಸವರಾಜ ಕಲ್ಯಾಣಿ, ಚಂದ್ರು ಜೋಗೇರ, ಜಗದೀಶ ತೇಲಿ, ಗಣೇಶ ಬಿಢವೆ, ಪರಶುರಾಮ ಡೊಂಕಬಳ್ಳಿ, ಲಕ್ಷ್ಮಣ ಪವಾರ, ಹನಮಂತ ಕುರಿ, ಮಾರುತಿ ಕೋಳಿ, ವಿಶ್ವನಾಥ ಧಳವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Bigg Boss Kannada 13: ಅನುಮತಿ ಇಲ್ಲದೆ ಶೋ ಆರಂಭವಾಗುತ್ತಾ? ಜಿಲ್ಲಾಧಿಕಾರಿ ಹೇಳಿದ್ದೇನು?

0

ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಕಾರ್ಯಕ್ರಮ ನಡೆಸಲು ಅಗತ್ಯ ಅನುಮತಿಗಳ ವಿಚಾರದಲ್ಲಿ ಗೊಂದಲ ಉಂಟಾಗಿದೆ.

ಸೆಪ್ಟೆಂಬರ್ 6ರಂದು ಶೋ ಆರಂಭಿಸುವುದಾಗಿ ಕಲರ್ಸ್ ಕನ್ನಡ ವಾಹಿನಿ ಈಗಾಗಲೇ ಘೋಷಣೆ ಮಾಡಿದ್ದರೂ, ಜಿಲ್ಲಾಡಳಿತಕ್ಕೆ ಈವರೆಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ತಿಳಿಸಿದ್ದಾರೆ.

ಬಿಗ್ ಬಾಸ್ ಶೋ ನಡೆಯುವ ಜಾಲಿವುಡ್‌ ಸಂಸ್ಥೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ‘ಕನ್ಸೆಂಟ್ ಫಾರ್ ಎಸ್ಟಾಬ್ಲಿಷ್‌ಮೆಂಟ್’ಗೆ ಅನುಮತಿ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಅನುಮೋದನೆ ಮಂಡಳಿಯಲ್ಲಿ ಬಾಕಿಯಿದ್ದು, ಪರಿಸರ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಸೂಚನೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆದರೆ ಬಿಗ್ ಬಾಸ್ ಶೋ ನಡೆಸಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವ ಸಂಬಂಧ ಯಾವುದೇ ಅರ್ಜಿ ಬಂದಿಲ್ಲ ಎಂದು ಯಶವಂತ್ ಗುರುಕರ್ ಸ್ಪಷ್ಟಪಡಿಸಿದ್ದಾರೆ.

‘ಜಿಲ್ಲಾಡಳಿತಕ್ಕೆ ಯಾವುದೇ ರೀತಿಯ ಅಪ್ಲಿಕೇಷನ್ ಬಂದಿಲ್ಲ. ಅರ್ಜಿ ಬಂದ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕೂಡ ಬಿಗ್ ಬಾಸ್ ಕಾರ್ಯಕ್ರಮದ ಅನುಮತಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಲು ಅಗತ್ಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

ಆಯೋಜಕರು ಸಲ್ಲಿಸುವ ಅರ್ಜಿಯಲ್ಲಿರುವ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅರ್ಜಿಯಲ್ಲಿರುವ ಅಂಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿಯಮಾನುಸಾರ ಅನುಮತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕಳೆದ ವರ್ಷವೂ ಬಿಗ್ ಬಾಸ್ ಕನ್ನಡ ಶೋಗೆ ಅಗತ್ಯ ಅನುಮತಿಗಳ ವಿಚಾರದಲ್ಲಿ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಅನುಮತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕಾರ್ಯಕ್ರಮ ಆರಂಭಿಸುವ ಘೋಷಣೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ ಎಂದು ಈಗಾಗಲೇ ಘೋಷಿಸಲಾಗಿದೆ. ಕನ್ನಡದ ಜತೆಗೆ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಬಿಗ್ ಬಾಸ್ ಆವೃತ್ತಿಗಳೂ ಇದೇ ದಿನ ಆರಂಭವಾಗಬೇಕಿವೆ.

ಆದರೆ ಕನ್ನಡ ಬಿಗ್ ಬಾಸ್ ಆಯೋಜಕರು ಜಿಲ್ಲಾಡಳಿತದಿಂದ ಅಗತ್ಯ ಅನುಮತಿ ಪಡೆಯಲು ಈವರೆಗೆ ಅರ್ಜಿ ಸಲ್ಲಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ, ನಿಗದಿತ ದಿನಾಂಕದಂದು ಕಾರ್ಯಕ್ರಮ ಆರಂಭವಾಗುತ್ತದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ. ಅನುಮತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಶೋ ಆರಂಭಕ್ಕೆ ಅಂತಿಮ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.

ಶಿರಹಟ್ಟಿಯಲ್ಲಿ 355ನೇ ಆರಾಧನಾ ಮಹೋತ್ಸವದ ಉತ್ತರಾಧನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಉತ್ತರಾಧನೆ ಅಂಗವಾಗಿ ಸೋಮವಾರ ರಾಯರ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿತು.

ಬೆಳಿಗ್ಗೆ ಸುಪ್ರಭಾತದೊಂದಿಗೆ ಪೂಜಾ ಕೈಂಕರ್ಯಗಳು ಆರಂಭಗೊಂಡವು. ಶ್ರೀ ರಾಘವೇಂದ್ರ ಸ್ತೋತ್ರ, ಅಷ್ಟೋತ್ತರ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ಮಧ್ಯಾಹ್ನ 12 ಗಂಟೆಗೆ ರಾಯರ ಪಲ್ಲಕ್ಕಿ ಉತ್ಸವ ನೆರವೇರಿತು. ಬಳಿಕ ಮಧ್ಯಾಹ್ನ 12.30ರ ಸುಮಾರಿಗೆ ನೆರೆದಿದ್ದ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರೀಮಠದ ಅರ್ಚಕ ನರಸಿಂಹ ಆಚಾರ್ಯ ಮಣ್ಣೂರ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ರಾಯರ ನಾಮಸ್ಮರಣೆ ಮಾಡುತ್ತ ಶ್ರೀಮಠದ ಆವರಣದಲ್ಲಿ ಭಕ್ತಿಭಾವ ಮೆರೆದರು.

ಬಳಿಕ ನೈವೇದ್ಯ, ಹಸ್ತೋದಕ, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ನೆರವೇರಿದವು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮೀ ಕಮಿಟಿ ಅಧ್ಯಕ್ಷ ಶಶಿಕಾಂತ ಪಾಶ್ಚಾಪೂರ, ವಿನಾಯಕ ಸದರಜೋಶಿ, ಗುರುನಾಥ ಪಾಟೀಲ, ಸಂತೋಷ ಕುಬೇರ, ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ನರಸಿಂಹ ಕುಲಕರ್ಣಿ, ವಿಲಾಸ ಸೊರಟೂರ, ಡಾ. ವಿಜಯದತ್ತ ಮಂಗಸೂಳಿ, ಜಯತೀರ್ಥ ಕುಲಕರ್ಣಿ, ಆನಂದ ಸೊರಟೂರ, ಸುಧೀರ ಜಮಖಂಡಿ, ಅರುಣ ಸೊರಟೂರ, ಅಮೃತ ಭಾತಖಂಡೆ, ಅನಿಲ ಪಾಶ್ಚಾಪೂರ, ಶ್ರೀನಿವಾಸ ಶಿರಹಟ್ಟಿ, ಶ್ರೀಧರ ಕುಲಕರ್ಣಿ, ಲಚ್ಚಪ್ಪ ಮುಳಗುಂದ, ಉದಯ ಕುಲಕರ್ಣಿ, ಡಾ. ವೇದವ್ಯಾಸ ಮಹಿಷಿ, ವಸಂತ ಪಾಶ್ಚಾಪೂರ, ಅಶೋಕ ಕುಲಕರ್ಣಿ, ರಾಮಣ್ಣ ಅಗ್ನಿಹೋತ್ರಿ, ನಾರಾಯಣ ಅಗ್ನಿಹೋತ್ರಿ, ಸತೀಶ ದೇಶಪಾಂಡೆ, ಗಿರೀಶ ದೇಶಪಾಂಡೆ, ದೀಪು ಸೊರಟೂರ, ವಸಂತ ಬಿಜಾಪೂರ, ಗೌರೀಶ ಕುಬೇರ, ಪ್ರಹ್ಲಾದ ಉಮರ್ಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪಪಂಗೆ ನೂತನ ಕಾರ್ಯಾಲಯ ನಿರ್ಮಿಸಲು ಆಗ್ರಹಿಸಿ ಮನವಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣ ಪಂಚಾಯಿತಿಗೆ ನೂತನ ಕಾರ್ಯಾಲಯ ನಿರ್ಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ಮಂಗಳವಾರ ತಹಶೀಲ್ದಾರ ಕೆ. ರಾಘವೇಂದ್ರ ರಾವ್ ಅವರ ಮೂಲಕ ಪೌರಾಡಳಿತ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ತಾಲೂಕು ಅಧ್ಯಕ್ಷ ಹಸನ ತಹಶೀಲ್ದಾರ, ಅಜ್ಜಪ್ಪ ಬಿಢವೆ, ಶರೀಫ ಗುಡಿಮನಿ, ಶಿವಾನಂದ ಸುಲ್ತಾನಪೂರ, ಮಂಜುನಾಥ ಲಮಾಣಿ, ಎಂ.ಎನ್. ಮೂರಶಿಳ್ಳಿ, ಸಾಧಿಕ ಮುಳಗುಂದ, ಮಂಜುನಾಥ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಕ್ರೀಡಾ ದಿನದ ಸಂಭ್ರಮ: ಗದಗದಲ್ಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ನಡೆಯಿತು.

ಗದಗ ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ವಸಂತ ಸಿದ್ದಮ್ಮನಹಳ್ಳಿ ಅವರು ಪಂದ್ಯಾವಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಶರಣು ಗೋಗೇರಿ, ಬಸವರಾಜ ಹಾತಲಗೇರಿ, ಮಂಜುನಾಥ ಹಾತಲಗೇರಿ, ಕುಸ್ತಿ ತರಬೇತುದಾರ ಬಾಹುಬಲಿ, ಹಾಕಿ ತರಬೇತುದಾರ ಮಂಜು ಬಾಗಡೆ, ಸೈಕ್ಲಿಂಗ್ ತರಬೇತುದಾರ ವಿದ್ಯಾ ಕುಲಕರ್ಣಿ ಸೇರಿದಂತೆ ಮಹಿಳೆಯರು ಹಾಗೂ ಕುಸ್ತಿಪಟುಗಳು ಉಪಸ್ಥಿತರಿದ್ದರು.

ಎಎಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಪಿ.ವಿ. ಗೋಣೆಣ್ಣವರ ನೇಮಕ

0

ವಿಜಯಸಾಕ್ಷಿ ಸುದ್ದಿ, ಗದಗ: ಆಮ್ ಆದ್ಮಿ ಪಕ್ಷದ ಗದಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನಿವೃತ್ತ ಉಪನ್ಯಾಸಕ ಪಿ.ವಿ. ಗೋಣೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ಆದೇಶದ ಮೇರೆಗೆ ಗದಗ ಜಿಲ್ಲಾ ಅಧ್ಯಕ್ಷ ಡಾ. ದಾದಾಪೀರ ಭಾಷಾಸಾಬ ಕಲೇಗಾರ ಅವರು ಗೋಣೆಣ್ಣವರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಮುಂದಿನ ಆದೇಶದವರೆಗೆ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಡಾ. ದಾದಾಪೀರ ಭಾಷಾಸಾಬ ಕಲೇಗಾರ, ಮುನಾಫ ಹರ್ಲಾಪೂರ, ಜಾಕೀರ ನಾಗನೂರ, ಪೀರಸಾಬ ಶೇಖ, ರಾಜೇಂದ್ರಕುಮಾರ ಹಿರೇಮಠ, ರಮೇಶ ಗದಗ, ಸಿರಾಜ ರೋಣದ, ಶೃತಿ ಹಿರೇಮಠ, ರೇಷ್ಮಾ ಜಕ್ಕಲಿ, ಆಂಜನೇಯ ಎಂ., ಮಂಜುನಾಥ ಗಾರ್ಗಿ, ಸಂತೋಷ ಜೈನ್, ಸುಭಾಸ ಕುಂಬಾರ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದು ಶುಭ ಕೋರಿದರು.

ನಾಲ್ವಾಡ ಓಣಿಗೆ ಹೊಸ ಸೌಲಭ್ಯಗಳ ಸ್ಪರ್ಶ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ವಾರ್ಡ್ ನಂ. 24ರ ನಾಲ್ವಾಡ ಓಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಐತಿಹಾಸಿಕ ಪಂಚರ ಹೊಂಡ ಬಾವಿಯ ಸ್ವಚ್ಛತಾ ಮತ್ತು ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಶಾಸಕ ಡಾ. ಎಚ್.ಕೆ. ಪಾಟೀಲ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಈಗಾಗಲೇ ವಾರ್ಡ್ ನಂ. 24ರಲ್ಲಿ ಅತ್ಯಂತ ಅಗತ್ಯವಿರುವ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಂಬರುವ ದಿನಗಳಲ್ಲಿ ಗದಗ-ಬೆಟಗೇರಿ ನಗರಕ್ಕೆ ಹೆಚ್ಚಿನ ಅನುದಾನ ತಂದು ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಾರ್ಡ್ ನಂ. 24ರಲ್ಲಿ ಸಿ.ಸಿ. ರಸ್ತೆ ನಿರ್ಮಾಣ, ಒಳಚರಂಡಿ ನಿರ್ಮಾಣ, ಬೋರ್‌ವೆಲ್ ಕೊರೆಸಿ ನೀರಿನ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಒಟ್ಟು ₹1 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮೂರು ಬೋರ್‌ವೆಲ್‌ಗಳ ನಿರ್ಮಾಣ ಹಾಗೂ ಎರಡು ಹೈಮಾಸ್ಟ್ ಬೀದಿ ದೀಪಗಳ ಅಳವಡಿಕೆಯೂ ಯೋಜನೆಯಲ್ಲಿ ಸೇರಿವೆ.

ಇದೇ ವೇಳೆ ನಾಲ್ವಾಡಗಲ್ಲಿಯ ಓಂಕಾರೇಶ್ವರ ದೇವಸ್ಥಾನದ ಫಾರ್ಮ್ ನಂ. 3ರ ಉತಾರವನ್ನು ಮಾಡಿಸಿ ದೇವಸ್ಥಾನ ಸಮಿತಿಯವರಿಗೆ ವಿತರಿಸಲಾಯಿತು.

ಐತಿಹಾಸಿಕ ಪಂಚರ ಹೊಂಡ ಬಾವಿಯನ್ನು ಸ್ವಚ್ಛಗೊಳಿಸಿ, ಅಲ್ಲಿಂದ ಮೋಟರ್ ಅಳವಡಿಸುವ ಮೂಲಕ ಪೈಪ್‌ಲೈನ್ ಮೂಲಕ ಶಿವಳ್ಳಿಯವರ ಓಣಿ, ಗಾಳಪ್ಪನವರ ಓಣಿ, ಎಲಿಗಾರವರ ಓಣಿ, ಮಕಾನದಾರ ಮನೆ ಲೈನ್ ಹಾಗೂ ವೆಂಕಟೇಶ್ವರ ದೇವಸ್ಥಾನದ ಸುತ್ತಮುತ್ತಲಿನ ನಿವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿವಪ್ಪ ತಿಪ್ಪಣ್ಣ ಬಳ್ಳಾರಿ ಅವರು ಕಾಮಗಾರಿಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಭು ಬುರಬುರೆ, ಬಿ.ಬಿ. ಅಸೂಟಿ, ಎಂ.ಸಿ. ಶೇಖ, ಬರಕತಲಿ ಮುಲ್ಲಾ, ಓಣಿಯ ಹಿರಿಯರಾದ ಬುಡ್ಡಣ್ಣ ಹಬೀಬ, ಅಶೋಕ ಜೈನ, ಈರಣ್ಣ ಲಕ್ಕುಂಡಿ, ಕುಬೇರಪ್ಪ ಪರ್ವತಗೌಡ್ರ, ವಿ.ಕೆ. ಮಟ್ಟಿ, ಅಪ್ಪುರಾಜ ಭದ್ರಕಾಳಿಮಠ, ಪ್ರವೀಣ ವಾರಕರ, ಸಿದ್ದಣ್ಣ ಹರ್ತಿ, ಮಂಜುನಾಥ ಲಕ್ಕುಂಡಿ, ಬಸವರಾಜ ಗಾಳಪ್ಪನವರ, ಬಸವರಾಜ ಹರ್ತಿ, ಮಲ್ಲಪ್ಪ ಅಣ್ಣಿಗೇರಿ, ಶ್ರೀಧರ ವಜ್ರಬಂಡಿ, ನಜೀರ ಕುನ್ನಿಬಾವಿ, ಮಂಜು ಮುಳಗುಂದ ಸೇರಿದಂತೆ ವಾರ್ಡ್ ನಂ. 24ರ ಗುರುಹಿರಿಯರು, ಯುವಕರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

ಒಳ ಮೀಸಲಾತಿ ತೀರ್ಪು ಬರುವವರೆಗೆ ಹಳೆಯ ವ್ಯವಸ್ಥೆ ಮುಂದುವರಿಸಿ: ಸಿಎಂಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಹಾಗೂ ಶೇಕಡಾವಾರು ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಬಂಜಾರ, ಭೋವಿ, ಕೊರಚ ಹಾಗೂ ಕೊರಮ (ಕೊಲಂಬೆ) ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಗದಗಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಘದ ಮುಖಂಡರು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಯಾವುದೇ ಹೊಸ ವರ್ಗೀಕರಣವನ್ನು ಜಾರಿಗೊಳಿಸದೆ ಹಿಂದಿನ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ 2025ರ ಆಗಸ್ಟ್ 19ರಿಂದ 2026ರ ಮೇ 13ರವರೆಗೆ ವಿವಿಧ ಹಂತಗಳಲ್ಲಿ ನಿರ್ಣಯಗಳನ್ನು ಕೈಗೊಂಡಿದೆ. ಆದರೆ, ಒಳ ಮೀಸಲಾತಿಯ ವರ್ಗೀಕರಣ ಹಾಗೂ ಶೇಕಡಾವಾರು ಹಂಚಿಕೆಯನ್ನು ಪ್ರಶ್ನಿಸಿ ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಇನ್ನೂ ಅಂತಿಮ ತೀರ್ಪು ಪ್ರಕಟವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವರ್ಗೀಕರಣಕ್ಕೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿ ಅಂತಿಮವಾಗಿ ಇತ್ಯರ್ಥವಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸುವ ಕುರಿತು ಸರ್ಕಾರವು 2026ರ ಫೆಬ್ರವರಿ 27ರಂದು ನಿರ್ಣಯ ಪ್ರಕಟಿಸಿತ್ತು ಎಂದೂ ಮುಖಂಡರು ಗಮನ ಸೆಳೆದರು.

ಪ್ರಸ್ತುತ WP No. 23399/2026 ಪ್ರಕರಣದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳದಂತೆ ಮಧ್ಯಂತರ ತಡೆ ಆದೇಶ ಜಾರಿಯಲ್ಲಿರುವುದರಿಂದ, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆಯನ್ನೇ ಮುಂದುವರಿಸುವುದು ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಇದೇ ತಿಂಗಳ 13ರಂದು ಆರಂಭವಾಗಲಿರುವ ಕರ್ನಾಟಕ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಬಂಜಾರ, ಭೋವಿ, ಕೊರಚ ಹಾಗೂ ಕೊರಮ (ಕೊಲಂಬೆ) ಸಮುದಾಯಗಳ ಪರವಾಗಿ ಸದನದಲ್ಲಿ ಧ್ವನಿ ಎತ್ತಬೇಕು ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತೂಚ ಚೌಹಾಣ್, ಗುರು ಲಮಾಣಿ, ತುಕಾರಾಮ ಲಮಾಣಿ, ಸಂತೋಷ್ ರಾಥೋಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮನವಿ ಸಲ್ಲಿಕೆಗೆ ಅಖಿಲ ಕರ್ನಾಟಕ ಬಂಜಾರ, ಭೋವಿ, ಕೊರಚ ಹಾಗೂ ಕೊರಮ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಪರಮೇಶ ನಾಯಕ ನೇತೃತ್ವ ವಹಿಸಿದ್ದರು.

KEA ಭರ್ಜರಿ ನೇಮಕಾತಿ: 4,744 ಹುದ್ದೆಗಳಿಗೆ ಈ ತಿಂಗಳಲ್ಲೇ ಅಧಿಸೂಚನೆ!

0

ಬೆಂಗಳೂರು: ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ.

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ಸೆಪ್ಟೆಂಬರ್ ತಿಂಗಳಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹುದ್ದೆಗಳಿಗೆ ಸಂಬಂಧಿಸಿದ ಅರ್ಹತೆ, ಯಾವ ಇಲಾಖೆಯಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಹಾಗೂ ಅಭ್ಯರ್ಥಿಗಳು ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂಬ ವಿವರಗಳನ್ನು KEA ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಿ, ನೀಡಲಾಗಿರುವ ಪಠ್ಯಕ್ರಮದ ಆಧಾರದ ಮೇಲೆ ಈಗಿನಿಂದಲೇ ಪರೀಕ್ಷಾ ತಯಾರಿ ಆರಂಭಿಸುವಂತೆ ಹೆಚ್. ಪ್ರಸನ್ನ ಸಲಹೆ ನೀಡಿದ್ದಾರೆ.

ಯಾವ ವಿದ್ಯಾರ್ಹತೆಗೆ ಎಷ್ಟು ಹುದ್ದೆಗಳು?

ಒಟ್ಟು 4,744 ಹುದ್ದೆಗಳಲ್ಲಿ ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಇವೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ 2,062 ತಾಂತ್ರಿಕೇತರ ಹುದ್ದೆಗಳು ಲಭ್ಯವಿವೆ.

ಇದರ ಜೊತೆಗೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ 261 ತಾಂತ್ರಿಕ ಹುದ್ದೆಗಳು ಕೂಡ ಖಾಲಿ ಇದ್ದು, ಇವುಗಳ ನೇಮಕಾತಿಗೂ ಅಧಿಸೂಚನೆ ಹೊರಬೀಳಲಿದೆ.

ಪ್ರಸ್ತುತ ಗುರುತಿಸಲಾಗಿರುವ ಹುದ್ದೆಗಳ ಜತೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಇಲಾಖೆಗಳು ಹಾಗೂ ಹೊಸ ಹುದ್ದೆಗಳು ನೇಮಕಾತಿ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು KEA ಮಾಹಿತಿ ನೀಡಿದೆ.

ಹೀಗಾಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ, ಪಿಯುಸಿ ಹಾಗೂ ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಪ್ರಮುಖ ಅವಕಾಶವಾಗಲಿದೆ. ಅಧಿಸೂಚನೆ ಬಿಡುಗಡೆಯಾದ ಬಳಿಕ ಅರ್ಜಿ ಸಲ್ಲಿಕೆ ದಿನಾಂಕ, ವಯೋಮಿತಿ, ಶುಲ್ಕ, ಪರೀಕ್ಷಾ ವಿಧಾನ ಸೇರಿದಂತೆ ಸಂಪೂರ್ಣ ವಿವರಗಳನ್ನು KEA ಪ್ರಕಟಿಸಲಿದೆ.

ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳಿಗೆ ಬೀಗ; ತ್ಯಾಜ್ಯ ಶುಲ್ಕ ವಿರೋಧಿಸಿ 2 ದಿನ ಬಂದ್‌ಗೆ ಕರೆ!

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋಳಿ ಮಾಂಸದ ತ್ಯಾಜ್ಯ ವಿಲೇವಾರಿ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಕಳೆದ 15 ದಿನಗಳಿಂದ ಹೊಸ ನೋಟಿಸ್ ಜಾರಿಗೊಳಿಸಿದ್ದು, ಕೋಳಿ ಮಾಂಸದ ಅಂಗಡಿಗಳಿಂದ ಉತ್ಪತ್ತಿಯಾಗುವ ತ್ಯಾಜ್ಯಕ್ಕೆ ಪ್ರತಿ ಕೆಜಿಗೆ ₹5 ಶುಲ್ಕ ಪಾವತಿಸುವಂತೆ ಸೂಚಿಸಿದೆ. ಈ ಕ್ರಮವನ್ನು ವಿರೋಧಿಸಿ ಬೆಂಗಳೂರಿನ ಚಿಕನ್ ಅಂಗಡಿ ಮಾಲೀಕರು ಸೆಪ್ಟೆಂಬರ್ 3 ಮತ್ತು 4ರಂದು ಎರಡು ದಿನ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕೋಳಿ ಮಾಂಸದ ತ್ಯಾಜ್ಯ ಸಂಗ್ರಹಣೆಗೆ ಪ್ರತಿ ಕೆಜಿಗೆ ₹5 ಶುಲ್ಕ ವಿಧಿಸಿರುವುದು ಸರಿಯಲ್ಲ ಎಂದು ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಆಕ್ಷೇಪ ವ್ಯಕ್ತಪಡಿಸಿದೆ. ಈ ಹಿಂದೆ ಕೋಳಿ ತ್ಯಾಜ್ಯವನ್ನು ಖಾಸಗಿ ಸಂಸ್ಥೆಗಳು ವ್ಯಾಪಾರಿಗಳಿಂದ ಹಣ ನೀಡಿ ಖರೀದಿಸುತ್ತಿದ್ದವು. ಬಳಿಕ ಅದನ್ನು ವಿವಿಧ ಕೈಗಾರಿಕೆಗಳಿಗೆ ರವಾನೆ ಮಾಡಲಾಗುತ್ತಿತ್ತು. ಈ ತ್ಯಾಜ್ಯವನ್ನು ಪ್ರಾಣಿಗಳ ಆಹಾರ ಸೇರಿದಂತೆ ವಿವಿಧ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಈಗ ಅದೇ ತ್ಯಾಜ್ಯಕ್ಕಾಗಿ ಸರ್ಕಾರವೇ ವ್ಯಾಪಾರಿಗಳಿಂದ ಶುಲ್ಕ ವಸೂಲಿ ಮಾಡುತ್ತಿರುವುದರ ಉದ್ದೇಶವೇನು ಎಂಬ ಪ್ರಶ್ನೆಯನ್ನು ಪೌಲ್ಟ್ರಿ ಉದ್ಯಮಿಗಳು ಎತ್ತಿದ್ದಾರೆ. ತ್ಯಾಜ್ಯ ವಿಲೇವಾರಿ ವ್ಯವಸ್ಥೆಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪವಿದ್ದು, ಇದೊಂದು ದೊಡ್ಡ ಮಾಫಿಯಾ ರೂಪ ಪಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಸರ್ಕಾರ ಕೂಡಲೇ ನೂತನ ಶುಲ್ಕವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ಸರ್ಕಾರದ ಕ್ರಮವನ್ನು ವಿರೋಧಿಸಿ ಸೆಪ್ಟೆಂಬರ್ 3 ಮತ್ತು 4ರಂದು ನಗರದಾದ್ಯಂತ ಚಿಕನ್ ಅಂಗಡಿಗಳನ್ನು ಬಂದ್ ಮಾಡುವುದಾಗಿ ಸಂಘಟನೆ ತಿಳಿಸಿದೆ.

ಇನ್ನು ಚಿಕನ್ ಅಂಗಡಿ ಮಾಲೀಕರು ಕೂಡ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಬಂದು ಕೋಳಿ ಮಾಂಸ ಮಾರಾಟದ ಮೂಲಕ ಜೀವನ ಕಟ್ಟಿಕೊಂಡಿರುವ ಸಣ್ಣ ವ್ಯಾಪಾರಿಗಳಿಗೆ ಈ ಶುಲ್ಕ ಹೆಚ್ಚುವರಿ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

ಪ್ರತಿ ತಿಂಗಳು ತ್ಯಾಜ್ಯ ವಿಲೇವಾರಿ ಶುಲ್ಕದ ರೂಪದಲ್ಲಿ ಹೆಚ್ಚುವರಿಯಾಗಿ ಸುಮಾರು ₹5 ಸಾವಿರದಿಂದ ₹7 ಸಾವಿರದವರೆಗೆ ಹೊರೆಯಾಗುವ ಸಾಧ್ಯತೆಯಿದೆ. ಈಗಾಗಲೇ ವ್ಯಾಪಾರದಲ್ಲಿ ಹಲವು ಖರ್ಚುಗಳಿದ್ದು, ಈ ಹೆಚ್ಚುವರಿ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲ. ಸರ್ಕಾರ ಬಡ ಹಾಗೂ ಸಣ್ಣ ವ್ಯಾಪಾರಿಗಳ ಪರವಾಗಿ ನಿಲ್ಲಬೇಕು ಎಂದು ಅಂಗಡಿ ಮಾಲೀಕರು ಮನವಿ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಕೋಳಿ ಮಾಂಸದ ತ್ಯಾಜ್ಯಕ್ಕೆ ಹಣ ಸಂಗ್ರಹಿಸುವ ಕ್ರಮವನ್ನು ಒಪ್ಪುವುದಿಲ್ಲ ಎಂದು ವ್ಯಾಪಾರಿಗಳು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಕಾನೂನಿನ ಮೊರೆ ಹೋಗುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ಕೋಳಿ ಮಾಂಸದ ತ್ಯಾಜ್ಯ ವಿಲೇವಾರಿ ಶುಲ್ಕದ ವಿಚಾರದಲ್ಲಿ ಸರ್ಕಾರ ಮತ್ತು ಪೌಲ್ಟ್ರಿ ವ್ಯಾಪಾರಿಗಳ ನಡುವಿನ ಸಂಘರ್ಷ ತೀವ್ರಗೊಂಡಿದೆ. ಸೆಪ್ಟೆಂಬರ್ 3 ಮತ್ತು 4ರಂದು ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳು ಬಂದ್ ಆಗಲಿರುವ ಹಿನ್ನೆಲೆಯಲ್ಲಿ ಮಾಂಸಪ್ರಿಯರಿಗೆ ಎರಡು ದಿನ ತೊಂದರೆಯಾಗುವ ಸಾಧ್ಯತೆಯಿದೆ.