Home Blog Page 4

ಸಹಕಾರವೇ ರೈತರ ಸಮೃದ್ಧಿಯ ಹೆಬ್ಬಾಗಿಲು: ಅಶೋಕಪ್ಪ ಯಾವಗಲ್

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ರೈತರ ಆದಾಯ, ಸ್ವಾವಲಂಬನೆ ಹಾಗೂ ಉದ್ಯೋಗ ವೃದ್ಧಿಗೆ ಸಹಕಾರ ಚಳವಳಿ ಮತ್ತಷ್ಟು ಬಲಗೊಳ್ಳಬೇಕಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಪ್ಪ ಯಾವಗಲ್ ಹೇಳಿದರು.

ಜಕ್ಕಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್, ಧಾರವಾಡ ಹಾಲು ಒಕ್ಕೂಟ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಹಕಾರ ಸಚಿವಾಲಯದ ಐದು ವರ್ಷಗಳ ಸಂಭ್ರಮದ ಅಂಗವಾಗಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಸಿಸಿ ಬ್ಯಾಂಕ್‌ನ ಮಾಜಿ ನಿರ್ದೇಶಕ ಸಿ.ಕೆ. ಮಾಳಶೆಟ್ಟಿ ಬ್ಯಾಂಕ್‌ನ ಕೃಷಿ ಸಾಲ, ಉಳಿತಾಯ ಖಾತೆ, ಠೇವಣಿ ಹಾಗೂ ವಿವಿಧ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರೋಣ ತಾಲೂಕು ವೈದ್ಯಾಧಿಕಾರಿ ಡಾ. ಪಿ.ಎಂ. ಕಮತಿ ಮತ್ತು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ಕೆ.ವಿ. ಹಾದಿಮನಿ ಆರೋಗ್ಯಕರ ಜೀವನಶೈಲಿ, ಹೃದಯಾಘಾತ ತಡೆ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತು ಅರಿವು ಮೂಡಿಸಿದರು.

ಕೆಸಿಸಿ ಬ್ಯಾಂಕ್ ವ್ಯವಸ್ಥಾಪಕ ವಿ.ಎಸ್. ಪಾಟೀಲ ಬ್ಯಾಂಕಿಂಗ್ ಸೇವೆಗಳು ಹಾಗೂ ಡಿಜಿಟಲ್ ಸೌಲಭ್ಯಗಳನ್ನು ವಿವರಿಸಿದರೆ, ಧಾರವಾಡ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಜಿ.ಸಿ. ಸಾಲೋಟಿಮಠ ಹಾಲು ಉತ್ಪಾದಕರಿಗೆ ದೊರೆಯುವ ಪ್ರೋತ್ಸಾಹಧನ, ವಿಮೆ ಹಾಗೂ ಅನುದಾನಿತ ಯೋಜನೆಗಳ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಶಿವನಾಗಪ್ಪ ಜಂಬೂನಾಥ ದೊಡ್ಡಮೇಟಿ, ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಿ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಮುಧೋಳ ಸೇರಿದಂತೆ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.

“ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ಸಾಕಾರಗೊಳ್ಳಬೇಕಾದರೆ ರೈತರು ಮತ್ತು ಸಹಕಾರ ಸಂಘಗಳು ಪರಸ್ಪರ ಕೈಜೋಡಿಸಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಬೇಕು.”

ಅಶೋಕಪ್ಪ ಯಾವಗಲ್

ಆಶ್ರಮದ ಪಾವಿತ್ರ್ಯಕ್ಕೆ ಧಕ್ಕೆ ಬಂದರೆ ಸುಮ್ಮನಿರುವುದಿಲ್ಲ: ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ವೀರೇಶ್ವರ ಪುಣ್ಯಾಶ್ರಮವು ತ್ರಿಕಾಲಜ್ಞಾನಿ ಹಾನಗಲ್ ಕುಮಾರೇಶ್ವರರ ಕನಸಿನ ಕೂಸಾಗಿದ್ದು, ಅದರ ಪಾವಿತ್ರ್ಯ, ಪರಂಪರೆ ಮತ್ತು ಮೂಲ ತತ್ವಗಳಿಗೆ ಯಾವುದೇ ಧಕ್ಕೆ ಬರದಂತೆ ಎಲ್ಲರೂ ಜಾಗರೂಕರಾಗಬೇಕು ಎಂದು ಶಿರಹಟ್ಟಿಯ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಉಭಯ ಶ್ರೀಗಳ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಕೀರ್ತನ ಸಮ್ಮೇಳನ ಹಾಗೂ ಅಂಧರ ಗೋಷ್ಠಿಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಆಶ್ರಮವು ಎಲ್ಲರಿಗೂ ತಾಯಿಯಂತಿದ್ದು, ಅದರ ಮೇಲೆ ಯಾರೇ ಕಣ್ಣು ಹಾಕಿದರೂ ಸಹಿಸುವ ಪ್ರಶ್ನೆಯೇ ಇಲ್ಲ. ಆಶ್ರಮದ ರಕ್ಷಣೆ ಮತ್ತು ಪಾವಿತ್ರ್ಯ ಕಾಪಾಡುವುದು ಪ್ರತಿಯೊಬ್ಬ ಭಕ್ತನ ಜವಾಬ್ದಾರಿ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಅನೇಕ ಧಾರ್ಮಿಕ ಸಂಸ್ಥೆಗಳು ಮತ್ತು ಗೌರವಾನ್ವಿತ ಸ್ಥಾನಗಳು ವಿವಾದಕ್ಕೆ ಒಳಗಾಗುತ್ತಿರುವುದು ವಿಷಾದನೀಯ. ಆದರೆ ಸತ್ಯ ಎಲ್ಲರಿಗೂ ಗೊತ್ತಿದ್ದರೂ ಪ್ರತಿಕ್ರಿಯಿಸುವ ಸಮಯ ಇನ್ನೂ ಬಂದಿಲ್ಲ. ಆಶ್ರಮದ ಕಲಾವಿದರು, ಭಕ್ತರು ಹಾಗೂ ಆಡಳಿತ ಮಂಡಳಿ ತಾಳ್ಮೆ ಕಾಪಾಡಿಕೊಂಡರೆ ಎಲ್ಲ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಸಿಗಲಿದೆ ಎಂದು ಹೇಳಿದರು.

ಯಾರಾದರೂ ಆಶ್ರಮದ ಸಮಸ್ಯೆ ಬಗೆಹರಿಸುವ ನೆಪದಲ್ಲಿ ಪ್ರವೇಶಿಸಲು ಯತ್ನಿಸಿದರೆ ಎಚ್ಚರಿಕೆಯಿಂದಿರಬೇಕು. ಕಾಣದ ಕೈಗಳು ಕೆಲವೊಮ್ಮೆ ಧಾರ್ಮಿಕ ಸಂಸ್ಥೆಗಳನ್ನೇ ಗುರಿಯಾಗಿಸುತ್ತವೆ. ಪುಣ್ಯಕ್ಷೇತ್ರದೊಳಗೆ ಪ್ರವೇಶಿಸುವಾಗ ಪಾದರಕ್ಷೆಗಳಷ್ಟೇ ಅಲ್ಲ, ಜಾತಿ ಮತ್ತು ರಾಜಕಾರಣವನ್ನೂ ಹೊರಗಿಟ್ಟು ಬರಬೇಕು ಎಂದು ಕಿವಿಮಾತು ಹೇಳಿದರು.

ಪಂಚಾಕ್ಷರಿ ಗವಾಯಿಗಳು ಮತ್ತು ಪುಟ್ಟರಾಜ ಗವಾಯಿಗಳು ರಾಜಕಾರಣ ಹಾಗೂ ಜಾತೀಯತೆಯಿಂದ ದೂರವಿದ್ದು ಸಂಗೀತ, ಸಾಹಿತ್ಯ, ಕಲೆ ಮತ್ತು ಸೇವೆಯ ಮೂಲಕ ಆಶ್ರಮವನ್ನು ಬೆಳೆಸಿದರು. ಆ ಪರಂಪರೆಯೇ ಮುಂದುವರಿಯಬೇಕು. ಆಶ್ರಮದಲ್ಲಿ ಕಲಾವಿದರು, ಸಂಗೀತಗಾರರು, ಪ್ರವಚನಕಾರರು ಹಾಗೂ ಸಾಹಿತ್ಯ ಸೇವಕರನ್ನು ರೂಪಿಸುವುದೇ ಮುಖ್ಯ ಉದ್ದೇಶವಾಗಿದ್ದು, ಇಲ್ಲಿ ಯಾವುದೇ ರೀತಿಯ ರಾಜಕೀಯ ಅಥವಾ ಜಾತಿ ಪ್ರಭಾವಕ್ಕೆ ಅವಕಾಶ ಇರಬಾರದು ಎಂದು ಹೇಳಿದರು.

ಆಶ್ರಮದ ರಕ್ಷಣೆಗೆ ಎಲ್ಲರೂ ಒಂದಾಗಬೇಕು. ಇಲ್ಲಿ ವ್ಯಕ್ತಿಗಳಿಗಿಂತ ವ್ಯವಸ್ಥೆ, ಪರಂಪರೆ ಮತ್ತು ಮೌಲ್ಯಗಳು ಮುಖ್ಯ. ಕಾಲ ಬದಲಾದರೂ ಆಶ್ರಮದ ಮೂಲ ಸ್ವರೂಪ ಬದಲಾಗಬಾರದು. ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸಿ, ತಾಳ್ಮೆಯಿಂದ ನಡೆದುಕೊಳ್ಳುವುದು ಒಳಿತು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದುಗಿನ ಶಿವಾನಂದ ಬ್ರಹ್ಮಮಠದ ಜಗದ್ಗುರು ಅಭಿನವ ಶಿವಾನಂದ ಮಹಾಸ್ವಾಮಿಗಳು ವಹಿಸಿದ್ದರು. ಯಲಬುರ್ಗಾದ ಬಸವಲಿಂಗೇಶ್ವರ ಶಿವಾಚಾರ್ಯರು, ಗುಳೇದಗುಡ್ಡದ ಅಭಿನವ ಒಪ್ಪತ್ತೇಶ್ವರ ಮಹಾಸ್ವಾಮಿಗಳು, ಅಡ್ನೂರಿನ ಅಭಿನವ ಪಂಚಾಕ್ಷರ ಶಿವಾಚಾರ್ಯರು, ಅರಳಿಹಳ್ಳಿಯ ಗವಿಸಿದ್ದೇಶ್ವರ ತಾತನವರು, ಜಿಗೇರಿಯ ಗುರುಸಿದ್ದೇಶ್ವರ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು.

ಈ ಸಂದರ್ಭದಲ್ಲಿ ಅರಳಹಳ್ಳಿ ಬೃಹನ್ಮಠದ ಶರಣಬಸವಯ್ಯ ತಾತನವರ ‘ಲೀಲಾಮೃತ ಪುರಾಣ’ ಹಾಗೂ ‘ವಿಶ್ವಯೋಗಿ ವೇಮ ಮತ್ತು ಮಹಾಸಾಧ್ವಿ ಬದುಕು-ಚಿಂತನೆ’ ಗ್ರಂಥಗಳನ್ನು ಜಗದ್ಗುರುಗಳ ಸಾನ್ನಿಧ್ಯದಲ್ಲಿ ಲೋಕಾರ್ಪಣೆ ಮಾಡಲಾಯಿತು. ಬಳಿಕ ಪಂ. ಪಂಚಾಕ್ಷರಿ ಗವಾಯಿಗಳ ನಾಟ್ಯ ಸಂಘದ ಕಲಾವಿದರು ‘ಬಂಜೆ ತೊಟ್ಟಿಲು’ ಸಾಮಾಜಿಕ ನಾಟಕ ಪ್ರದರ್ಶಿಸಿದರು.

“ವೀರೇಶ್ವರ ಪುಣ್ಯಾಶ್ರಮದೊಳಗೆ ಜಾತಿ, ರಾಜಕಾರಣ ಹಾಗೂ ಸ್ವಾರ್ಥದ ಪ್ರವೇಶಕ್ಕೆ ಅವಕಾಶ ಇರಬಾರದು. ಪರಂಪರೆ ಮತ್ತು ಪಾವಿತ್ರ್ಯ ಉಳಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿ.”

ಜ. ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು

ಮುಂಗಾರು ಕೊರತೆಯಿಂದ ತುಂಗಭದ್ರಾ ಡ್ಯಾಂ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!

ಕೊಪ್ಪಳ: ಮಳೆ ಕೊರತೆಯಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದ್ದು, ಮುಂಗಾರು ಬೆಳೆಗಳಿಗೆ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ.

ಸರ್ಕಾರದ ನಿರ್ದೇಶನದಂತೆ ಸದ್ಯ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಸಹಕರಿಸುವಂತೆ ನೀರಾವರಿ ನಿಗಮ ಮನವಿ ಮಾಡಿದೆ.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ತುಂಗಭದ್ರಾ ಜಲಾಶಯ ಭರ್ತಿಯಾದರೆ, ಕೃಷಿ ನೀರು ಬಿಡುಗಡೆ ಮಾಡುವ ಕುರಿತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀರಾವರಿ ನೀರು ಸಿಗದ ಹಿನ್ನೆಲೆಯಲ್ಲಿ ಮುಂಗಾರು ಬಿತ್ತನೆ ಮಾಡಿರುವ ಹಾಗೂ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ರೈತರು ಆತಂಕಕ್ಕೆ ಒಳಗಾಗಿದ್ದು, ಮುಂದಿನ ಕೃಷಿ ಚಟುವಟಿಕೆಗಳ ಬಗ್ಗೆ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ.

ಆನೇಕಲ್ ನಿರ್ಜನ ರಸ್ತೆಯಲ್ಲಿ ಭಯಾನಕ ಘಟನೆ! ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರು: ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೈಕ್ ಜೊತೆಗೆ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಮೃತನನ್ನು ಆಂಧ್ರಪ್ರದೇಶದ ಗುಂಟೂರು ಮೂಲದ 26 ವರ್ಷದ ವಂಶಿ ಕೃಷ್ಣ ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಸ್ಥಳೀಯರು ರಸ್ತೆ ಬದಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಬೈಕ್ ಹಾಗೂ ಯುವಕನ ದೇಹ ಸಂಪೂರ್ಣ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಕೋ ತಂಡ ಹಾಗೂ ಶ್ವಾನದಳ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದೆ.

ಮೃತ ವಂಶಿ ಕೃಷ್ಣ ಎಲೆಕ್ಟ್ರಾನಿಕ್ ಸಿಟಿಯ ಪಿಜಿಯಲ್ಲಿ ವಾಸವಾಗಿದ್ದು, ಎನ್‌ಟಿಟಿಎಫ್ ಕಾಲೇಜಿನಲ್ಲಿ ಡಿಪ್ಲೋಮಾ ಇಂಜಿನಿಯರಿಂಗ್ ಪೂರ್ಣಗೊಳಿಸಿದ್ದನು. ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದ ಆತ, ಕಳೆದ ಕೆಲವು ವರ್ಷಗಳಿಂದ ಉದ್ಯೋಗದಲ್ಲಿರಲಿಲ್ಲ ಎಂದು ತಿಳಿದುಬಂದಿದೆ.

ಘಟನೆ ದಿನ ಮಧ್ಯಾಹ್ನ ವಂಶಿ ಕೃಷ್ಣ ಪಿಜಿಯಿಂದ ಬೈಕ್‌ನಲ್ಲಿ ಹೊರಟಿದ್ದ. ನಂತರ ಸಂಜೆ ವೇಳೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಕೆಲವೇ ಗಂಟೆಗಳಲ್ಲಿ ಬಿಕ್ಕನಹಳ್ಳಿ ರಸ್ತೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಬೈಕ್ ನೋಂದಣಿ ಸಂಖ್ಯೆ ಆಧರಿಸಿ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಗುರುತಿಸಿದ್ದಾರೆ.

ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಗಳು, ಮೊಬೈಲ್ ಕರೆ ವಿವರಗಳು ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ, ಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ.

ವಿಜಯಪುರದಲ್ಲಿ ಭೀಕರ ಘಟನೆ: ಹೆಂಡತಿಯ ಕತ್ತು ಕೊಯ್ದು ಭೀಕರ ಕೊಲೆ, ಪತಿ ಅರೆಸ್ಟ್

ವಿಜಯನಗರ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಆಗಸರ ಓಣಿಯಲ್ಲಿ ನಡೆದಿದೆ.

ಪ್ರಭಾವತಿ (50) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರಾಮಮೂರ್ತಿ (55) ಪತ್ನಿಯನ್ನು ಕತ್ತು ಕೊಯ್ದು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಇಂದು ಬೆಳಗಿನ ಜಾವ ಅಥವಾ ರಾತ್ರಿ ವೇಳೆಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ಬಳಿಕ ಆರೋಪಿ ರಾಮಮೂರ್ತಿ ಮನೆಯಲ್ಲೇ ಇದ್ದಿದ್ದು, ಸ್ಥಳಕ್ಕೆ ಆಗಮಿಸಿದ ಪಟ್ಟಣ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಡಿಷನಲ್ ಎಸ್‌ಪಿ ಮಂಜುನಾಥ್ ಹಾಗೂ ಡಿಎಸ್‌ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಪ್ರಕರಣದ ತನಿಖೆ ಆರಂಭಿಸಲಾಗಿದೆ.

ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದು ಶವ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಿತ್ಯ ಬೆಳಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು?

ಬೆಳಗ್ಗೆ ಎದ್ದ ತಕ್ಷಣ ಟೀ ಅಥವಾ ಕಾಫಿ ಸೇವಿಸುವ ಅಭ್ಯಾಸ ಸಾಮಾನ್ಯವಾಗಿದ್ದರೂ, ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕರವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಬದಲಾಗಿ ಬೆಳಗ್ಗೆ ಮೊದಲಿಗೆ ಒಂದು ಗ್ಲಾಸ್ ನೀರು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳುವುದು ದೇಹಕ್ಕೆ ಹೆಚ್ಚಿನ ಪ್ರಯೋಜನಕಾರಿಯಾಗಿದೆ ಎಂದು ತಿಳಿಸಲಾಗಿದೆ.

ರಾತ್ರಿಯ ನಿದ್ರೆಯ ಬಳಿಕ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಬೆಳಗ್ಗೆ ನೀರು ಕುಡಿಯುವುದರಿಂದ ದೇಹ ಪುನಶ್ಚೇತನಗೊಳ್ಳುತ್ತದೆ ಹಾಗೂ ಅಂಗಾಂಗಗಳ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಹೇಳಲಾಗಿದೆ. ಇದರಿಂದ ದೇಹದ ಉಷ್ಣತೆ ನಿಯಂತ್ರಣವಾಗುವುದರ ಜೊತೆಗೆ ಶಕ್ತಿ ಮಟ್ಟವೂ ಹೆಚ್ಚುತ್ತದೆ.

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ (ಮೆಟಾಬಾಲಿಸಂ) ವೇಗಗೊಳ್ಳುತ್ತದೆ, ಇದು ತೂಕ ಇಳಿಕೆಗೆ ಸಹಾಯಕವಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಜೀರ್ಣಕ್ರಿಯೆ ಸುಧಾರಿಸಿ ಪೋಷಕಾಂಶಗಳ ಶೋಷಣೆಯೂ ಉತ್ತಮವಾಗುತ್ತದೆ ಎಂದು ತಿಳಿಸಲಾಗಿದೆ.

ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಬೆಳಗಿನ ನೀರು ಸೇವನೆ ಒತ್ತಡವನ್ನು ಕಡಿಮೆ ಮಾಡಿ ಮನಸ್ಸನ್ನು ಚುರುಕು ಮಾಡುತ್ತದೆ ಎಂದು ಹೇಳಲಾಗಿದ್ದು, ತಲೆನೋವಿನಂತಹ ಸಮಸ್ಯೆಗಳಿಗೂ ಇದು ಪರಿಹಾರಕಾರಿಯಾಗಿದೆ.

ಚರ್ಮದ ಆರೋಗ್ಯಕ್ಕೂ ಬೆಳಗಿನ ನೀರು ಸೇವನೆ ಸಹಕಾರಿ ಆಗಿದ್ದು, ದೇಹದ ತೇವಾಂಶವನ್ನು ಕಾಪಾಡಿ ಚರ್ಮಕ್ಕೆ ನೈಸರ್ಗಿಕ ಹೊಳಪು ನೀಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಆರೋಗ್ಯಕರ ದಿನಾರಂಭಕ್ಕಾಗಿ ಬೆಳಗ್ಗೆ ಒಂದು ಗ್ಲಾಸ್ ಉಗುರುಬೆಚ್ಚಗಿನ ನೀರು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳಲು ಸಲಹೆ ನೀಡಲಾಗಿದೆ.

ಗೃಹಜ್ಯೋತಿ ಮರು ಪರಿಶೀಲನೆಗೆ ಜಾತಿ ಪ್ರಮಾಣಪತ್ರ ಕಡ್ಡಾಯವಾ? ಜನರ ಗೊಂದಲಕ್ಕೆ ತೆರೆ ಎಳೆದ ಬೆಸ್ಕಾಂ!

ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಹಿತಿ ಸಂಗ್ರಹದ ವೇಳೆ ಜಾತಿ ಪ್ರಮಾಣಪತ್ರ ಕೇಳಲಾಗುತ್ತಿರುವ ವಿಚಾರ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಉಚಿತ ವಿದ್ಯುತ್ ಯೋಜನೆಗೆ ಜಾತಿ ಮಾಹಿತಿ ಏಕೆ ಬೇಕು ಎಂಬ ಪ್ರಶ್ನೆ ಎದ್ದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆ ಬೆಸ್ಕಾಂ ಜಾತಿ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಪರಿಶೀಲನೆ ವೇಳೆ ಜಾತಿ ಮಾಹಿತಿ ನೀಡಲು ಇಚ್ಛಿಸದ ಗ್ರಾಹಕರಿಗಾಗಿ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನೂ ಫಾರ್ಮ್‌ನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದೆ.

ಈ ಆಯ್ಕೆಯನ್ನು ಗುರುತಿಸುವ ಮೂಲಕ ಫಲಾನುಭವಿಗಳು ತಮ್ಮ ಜಾತಿ ವಿವರ ನೀಡದೇಯೇ ಮರು ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಗೃಹ ಜ್ಯೋತಿ ಯೋಜನೆಗೆ ಆಧಾರ್ ನಂಬರ್ ಆಧಾರವಾಗಿ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿತ್ತು. ಆದರೆ ಈಗ ಆಧಾರ್ ಜೊತೆಗೆ ವೋಟರ್ ಐಡಿ ಹಾಗೂ ಪ್ಯಾನ್ ಕಾರ್ಡ್ ದಾಖಲೆಗಳನ್ನು ಪರಿಶೀಲನೆಗಾಗಿ ಕೇಳಲಾಗುತ್ತಿದೆ ಎಂದು ತಿಳಿದುಬಂದಿದೆ.

ತೀವ್ರ ವಿರೋಧದ ನಡುವೆ ಜಾತಿ ಮಾಹಿತಿ ಕಡ್ಡಾಯವಲ್ಲ ಎಂಬ ಬೆಸ್ಕಾಂ ಸ್ಪಷ್ಟನೆ ಸಾರ್ವಜನಿಕರಿಗೆ ಸಮಾಧಾನ ತಂದಿದೆ.

ಪ್ರವಾಸಿ ತಾಣಗಳಲ್ಲಿ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದ್ದು,

ಈ ನೀತಿಯಲ್ಲಿ ಕ್ರೂಸ್‌ ಪ್ರವಾಸೋದ್ಯಮ, ಬೀಚ್‌ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು .

ಇಂದು ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಆರು ಜಿಲ್ಲೆಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಿದ್ಧವಾಗುತ್ತಿರುವ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ವಿಷಯಾಧಾರಿತ (Theme-based) ಪ್ರವಾಸೋದ್ಯಮ ಸರ್ಕೀಟ್‌ಗಳು, ಕಡಲತೀರ ಪ್ರವಾಸೋದ್ಯಮ, ಕ್ರೂಸ್‌ ಪ್ರವಾಸೋದ್ಯಮ, ಸಾಹಸ ಕ್ರೀಡೆಗಳು ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಅಂತರರಾಷ್ಟ್ರೀಯ ಕ್ರೂಸ್‌ ಹಡಗುಗಳು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಬಂದರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಮಗ್ರ ಕಾರ್ಯತಂತ್ರ ರೂಪಿಸಬೇಕಿದೆ. ಕ್ರೂಸ್‌ ಪ್ರವಾಸಿಗರು ಕರ್ನಾಟಕದಲ್ಲಿ ಹೆಚ್ಚು ದಿನ ಉಳಿಯುವಂತೆ ಆಕರ್ಷಕ ಪ್ರವಾಸೋದ್ಯಮ ಪ್ಯಾಕೇಜ್‌ಗಳು ಮತ್ತು ಸರ್ಕೀಟ್‌ಗಳನ್ನು ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಮುಖ ಕ್ರೂಸ್‌ ಆಪರೇಟರ್‌ಗಳೊಂದಿಗೆ ಸಭೆ ನಡೆಸಿ, ಅವರ ಹಾಗೂ ಪ್ರವಾಸಿಗರ ನಿರೀಕ್ಷೆಗಳನ್ನು ಆಧರಿಸಿ ನೀತಿಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರಾದ ಕೆಜೆ ಜಾರ್ಜ್‌ ಸೂಚಿಸಿದರು.

ಬೀಚ್‌ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಬ್ಲೂ ಫ್ಲಾಗ್‌ ಬೀಚ್‌ಗಳ ಅಭಿವೃದ್ಧಿ, ಸ್ವಚ್ಛತೆ, ಸುರಕ್ಷತೆ, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ, ಜಲಕ್ರೀಡೆಗಳು (Water Sports), ಸಾಹಸ ಚಟುವಟಿಕೆಗಳು ಹಾಗೂ ಸಮುದ್ರತೀರದಲ್ಲಿ ಗುಣಮಟ್ಟದ ಪ್ರವಾಸಿ ಅನುಭವ ಕಲ್ಪಿಸುವ ಯೋಜನೆಗಳನ್ನು ಹೊಸ ನೀತಿಯಲ್ಲಿ ಸೇರಿಸಬೇಕು ಎಂದು ಅವರು ತಿಳಿಸಿದರು.

ಇದರ ಜೊತೆಗೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಮತ್ತು ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR) ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ, ಮೂಲಭೂತ ಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯವಾದ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಪ್ರವಾಸಿಗರ ಅನುಭವವನ್ನು ಉತ್ತಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಪ್ರವಾಸೋದ್ಯಮ ಎಂದರೆ ಕೇವಲ ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲ; ಪ್ರವಾಸಿಗರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಸಮಗ್ರ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು. ಉತ್ತಮ ಮೂಲಸೌಕರ್ಯ, ಸುಲಭ ಸಂಪರ್ಕ, ಸುರಕ್ಷತೆ ಮತ್ತು ಗುಣಮಟ್ಟದ ಸೇವೆಗಳ ಮೂಲಕವೇ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಉತ್ತಮ ಸ್ಥಾನ ಪಡೆಯಬಹುದಾಗಿದೆ,” ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು .

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕೆಎಸ್‌ಟಿಡಿಸಿ ಹಾಗೂ ಜೆಎಲ್‌ಆರ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

SIR ನಲ್ಲಿ ಲೋಪ ಸಾಬೀತಾದರೆ ಚುನಾವಣಾ ಆಯೋಗವೇ ಕ್ರಮ ಕೈಗೊಳ್ಳಲಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಲೋಪ ಅಥವಾ ನಿಯಮ ಉಲ್ಲಂಘನೆ ನಡೆದಿದ್ದರೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ತಳ್ಳಿಹಾಕಿದರು.

“ಮುಖ್ಯಮಂತ್ರಿಗಳು ಪ್ರತಿಯೊಂದು ಬೂತ್‌ನಲ್ಲೂ ನಡೆಯುವ ಪ್ರಕ್ರಿಯೆಗಳನ್ನು ಪರಿಶೀಲಿಸಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ಕೆಲವರು ಪ್ರಕ್ರಿಯೆಯನ್ನು ವೇಗವಾಗಿ ಮುಗಿಸುವ ಉದ್ದೇಶದಿಂದ ಕೆಲವು ಕ್ರಮ ಕೈಗೊಂಡಿರಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಚುನಾವಣಾ ಆಯೋಗ ಈ ಕುರಿತು ಪರಿಶೀಲನೆ ನಡೆಸಿ, ಅಗತ್ಯವಿದ್ದರೆ ಬಿಎಲ್‌ಒಗಳಿಂದ ವಿವರಣೆ ಪಡೆದು ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಗೆ ನಿಗದಿತ ಮಾನದಂಡ ಹಾಗೂ ನಿಯಮಾವಳಿಗಳಿದ್ದು, ಅವುಗಳ ಅನುಸಾರವೇ ಕಾರ್ಯ ನಡೆಯಬೇಕು. ನಿಯಮ ಉಲ್ಲಂಘನೆಯಾಗಿದ್ದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವುದು ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿದೆ. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ಕಾರ್ಯ ನಡೆದಿರುವುದು ಕಂಡುಬಂದರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದರು.

ಈ ವೇಳೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಕೇಳಿರುವ 12 ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಹೇಳಿದ ಅವರು, ಯಾವುದೇ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಈ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಸಂಬಂಧಿತ ಕಂಪನಿಗೆ ಗೃಹ ಇಲಾಖೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

“ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಘಟನೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ಕಂಪನಿಗೆ ಸೂಚಿಸಲಾಗಿದೆ. ದೊಡ್ಡ ಸಂಸ್ಥೆಗಳಿಗೆ ತಮ್ಮದೇ ಆದ ಜಾಗತಿಕ ನೀತಿ ಹಾಗೂ ಕಾರ್ಯವಿಧಾನ (ಎಸ್‌ಒಪಿ) ಇರುತ್ತದೆ. ಅದರ ಅನುಸಾರವಾಗಿ ಕಾರ್ಯನಿರ್ವಹಿಸಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಅಗತ್ಯ ಮುನ್ನೆಚ್ಚರಿಕೆಗಳು ಪಾಲನೆಯಾಗಿಲ್ಲ ಎನ್ನುವುದು ಪ್ರಾಥಮಿಕವಾಗಿ ಕಂಡುಬರುತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ದೆಹಲಿಯಲ್ಲಿ ಇಂಗ್ಲಿಷ್ʼನಲ್ಲೇ ಪ್ರೆಸ್ಮೀಟ್ ಮಾಡಿ SIR ವಿಚಾರ ಬಹಿರಂಗಪಡಿಸುತ್ತೇನೆ: ರಾಹುಲ್ ಗಾಂಧಿಗೆ ನಿಖಿಲ್ ಸವಾಲ್

ರಾಮನಗರ: ರಾಮನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೂ ಕರ್ನಾಟಕಕ್ಕೆ ಬಂದು ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಅವರು ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಕುಳಿತು ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರದ ಅವಧಿಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಬಂದು ನೋಡಬೇಕು ಎಂದು ಹೇಳಿದರು. ಅಗತ್ಯವಿದ್ದರೆ ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್‌ನಲ್ಲೇ ಪತ್ರಿಕಾಗೋಷ್ಠಿ ನಡೆಸುತ್ತೇನೆ ಎಂದರು.

ರಾಮನಗರದ ಟಿಪ್ಪು ನಗರ, ಯಾರಬ್ ನಗರ ಹಾಗೂ ಮೆಹಬೂಬ್ ನಗರ ವಾರ್ಡ್‌ಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಅವರು, ಅಲ್ಲಿನ ಪರಿಸ್ಥಿತಿಯಿಂದ ಕಾರ್ಯಕರ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಆದರೂ ಜೆಡಿಎಸ್ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ವಿಡಿಯೊ ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಜಿಗಳನ್ನು ಹಂಚುವ ಪ್ರಕ್ರಿಯೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಬಿಎಲ್‌ಎ-2 ಪ್ರತಿನಿಧಿಗಳ ಸಮ್ಮುಖದಲ್ಲಿ ಹಾಗೂ ನಿಯಮಾನುಸಾರ ಕ್ರಮ ನಡೆಯಬೇಕು. ಆದರೆ ರಾಮನಗರ ಜಿಲ್ಲಾಡಳಿತ ನಿಯಮಗಳನ್ನು ಪಾಲಿಸದೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದರು.

ಜಿಲ್ಲಾಧಿಕಾರಿಗಳ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ, ಪ್ರತಿಭಟನೆಗೆ ಹೆದರಿ ಅವರು ಸ್ಥಳದಲ್ಲಿರದೆ ಮುಖ್ಯಮಂತ್ರಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು. ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಕುಣಿಗಲ್‌ನಲ್ಲಿಯೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಕೆಲವು ಜನಪ್ರತಿನಿಧಿಗಳು ಬಿಎಲ್‌ಒಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿಯೂ ತಮ್ಮ ವಿರುದ್ಧ ಅಕ್ರಮ ಮತದಾನ ನಡೆದಿದೆ ಎಂದು ಆರೋಪಿಸಿದ ನಿಖಿಲ್ ಕುಮಾರಸ್ವಾಮಿ, ರಾಮನಗರದ ಜನರು ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.