Home Blog Page 4

ಬಂಡೀಪುರ ಅರಣ್ಯದಲ್ಲಿ ಎಣ್ಣೆ ಪಾರ್ಟಿ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ನಡೆದ ಅಕ್ರಮ ಮದ್ಯಪಾನ ಪಾರ್ಟಿ ಪ್ರಕರಣದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಮತ್ತು ಪ್ರಕರಣವನ್ನು ಮೇಲಧಿಕಾರಿಗಳಿಂದ ಮುಚ್ಚಿಟ್ಟಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮದ್ದೂರು ವನ್ಯಜೀವಿ ವಲಯದ ಆರ್‌ಎಫ್‌ಒ ಡಿ. ಪುನೀತ್ ಕುಮಾರ್ ಅವರನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ‘ಹುಲಿ ಕಟ್ಟೆ’ ಪ್ರದೇಶದಲ್ಲಿರುವ ಕಳ್ಳಬೇಟೆ ತಡೆ ಶಿಬಿರದ ಎದುರಲ್ಲೇ ರೌಡಿಶೀಟರ್ ಸತೀಶ್ ಅಲಿಯಾಸ್ ಮಹದೇವಪ್ರಸಾದ್ ಹಾಗೂ ಆತನ ಸಹಚರರು ಗಂಗಾಧರ್ ಮತ್ತು ಚೇತನ್ ಮದ್ಯಪಾನ ಪಾರ್ಟಿ ನಡೆಸಿದ್ದಾರೆ. ಶಿಬಿರದ ಸೌರ ಫಲಕವನ್ನು ಮೇಜಾಗಿ ಬಳಸಿಕೊಂಡು ಮದ್ಯದ ಬಾಟಲಿ, ಲೋಟ ಮತ್ತು ಆಹಾರ ಸಾಮಗ್ರಿಗಳೊಂದಿಗೆ ಮೋಜು ಮಾಡಿರುವುದು ಫೋಟೋಗಳಲ್ಲಿ ಸ್ಪಷ್ಟವಾಗಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ತನಿಖೆಯಲ್ಲಿ ಆರ್‌ಎಫ್‌ಒ ಪುನೀತ್ ಕುಮಾರ್ ಅವರು ಘಟನೆ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಇರುವುದು ಹಾಗೂ ಆರೋಪಿಗಳ ವಿವರಗಳನ್ನು ದಾಖಲಿಸದೇ ಇರುವುದರಿಂದ ಕರ್ತವ್ಯ ಲೋಪ ಎಸಗಿರುವುದು ದೃಢಪಟ್ಟಿದೆ.

ಅರಣ್ಯ ಇಲಾಖೆ ಈಗ ಮೂವರು ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಅವರನ್ನು ಪತ್ತೆ ಹಚ್ಚಲು ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮತ್ತೆ ಚೇತರಿಸಿಕೊಂಡ ತುಂಗಭದ್ರಾ ಜಲಾಶಯ: ಮುಂಗಾರು ಆರಂಭದಲ್ಲೇ ಹೆಚ್ಚಿದ ಒಳಹರಿವು

0

ಬಳ್ಳಾರಿ: ಬೇಸಿಗೆಯ ತೀವ್ರತೆಯಿಂದಾಗಿ ನೀರಿನ ಮಟ್ಟ ಕುಸಿದು ಡೆಡ್ ಸ್ಟೋರೇಜ್ ಹಂತ ತಲುಪಿದ್ದ ತುಂಗಭದ್ರಾ ಜಲಾಶಯ ಇದೀಗ ಮುಂಗಾರು ಮಳೆಯ ಕೃಪೆಯಿಂದ ಮತ್ತೆ ಜೀವಂತವಾಗುತ್ತಿದೆ. ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಉತ್ತಮ ಮಳೆಯ ಪರಿಣಾಮ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕೃಷಿ ಆಧಾರಿತ ಪ್ರದೇಶಗಳಲ್ಲಿ ಆಶಾಭಾವನೆ ಮೂಡಿಸಿದೆ.

ಗರಿಷ್ಠ 101 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 10 ಟಿಎಂಸಿ ನೀರು ಲಭ್ಯವಿದೆ. ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ತುಂಗಭದ್ರಾ ಜಲಾಶಯ ಈ ವರ್ಷ ದಾಖಲೆಯ ವೇಗದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ.

ಕಳೆದ ವರ್ಷ ಮಳೆ ಕೊರತೆಯಿಂದಾಗಿ ರೈತರು ನೀರಿನ ಅಭಾವ ಎದುರಿಸಿದ್ದರೆ, ಈ ಬಾರಿ ಪರಿಸ್ಥಿತಿ ಸಂಪೂರ್ಣ ಬದಲಾಗುವ ಲಕ್ಷಣಗಳು ಗೋಚರಿಸುತ್ತಿವೆ. ತುಂಗಭದ್ರಾ ನೀರನ್ನು ಅವಲಂಬಿಸಿರುವ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣದ ವ್ಯಾಪಕ ಕೃಷಿ ಪ್ರದೇಶಗಳಿಗೆ ಇದು ಶುಭಸುದ್ದಿಯಾಗಿದೆ.

ಬಿತ್ತನೆ ಹಂಗಾಮಿನ ಆರಂಭದಲ್ಲೇ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವುದು ರೈತರ ಆತ್ಮವಿಶ್ವಾಸ ಹೆಚ್ಚಿಸಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರಿನ ಭದ್ರತೆ ಸಿಗುವ ನಿರೀಕ್ಷೆ ಬಲಗೊಂಡಿದೆ.

ಅಮೆರಿಕನ್ ಮಹಿಳೆ ಮೇಲಿನ ಅತ್ಯಾಚಾರ ಆರೋಪ: ತನಿಖಾ ದಾಖಲೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ವಿದೇಶಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಹೋಂ ಸ್ಟೇ ಮಾಲೀಕ ಪೊನ್ನಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ತನಿಖೆ ತಡೆಗೆ ನಿರಾಕರಣೆ

ವಿಚಾರಣೆ ವೇಳೆ ನ್ಯಾಯಾಲಯ, ಪ್ರಕರಣದ ದಾಖಲೆಗಳನ್ನು ಪರಿಶೀಲಿಸದೇ ಅರ್ಜಿದಾರರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಅಲ್ಲದೆ, ಇದುವರೆಗೆ ನಡೆದಿರುವ ತನಿಖೆಯ ಸಂಪೂರ್ಣ ದಾಖಲೆಗಳನ್ನು ಜೂನ್ 10ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಅರ್ಜಿದಾರರ ಪರ ವಾದ

ಅರ್ಜಿದಾರರ ಪರ ವಕೀಲರು, ತಮ್ಮ ಕಕ್ಷಿದಾರರು ಯಾವುದೇ ರೀತಿಯ ಅತ್ಯಾಚಾರ ಎಸಗಿಲ್ಲ ಹಾಗೂ ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂದು ವಾದಿಸಿದರು. ಎಫ್‌ಐಆರ್‌ನಲ್ಲಿ ಉಲ್ಲೇಖಿಸದಿದ್ದರೂ ನಂತರದ ಹಂತದಲ್ಲಿ ‘ಸಾಮಾನ್ಯ ಉದ್ದೇಶ’ ಎಂಬ ಅಂಶವನ್ನು ಸೇರಿಸಿ ಬಂಧಿಸಲಾಗಿದೆ ಎಂದು ಅವರು ಆಕ್ಷೇಪಿಸಿದರು.

ಘಟನೆ ನಡೆದ ವೇಳೆ ಅರ್ಜಿದಾರರು ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಸಾಬೀತುಪಡಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಕೀಲರು ತಿಳಿಸಿದರು.

ಸರ್ಕಾರದ ಪರ ವಾದ

ಸರ್ಕಾರದ ಪರ ವಕೀಲರು, ಹೋಂ ಸ್ಟೇ ಮಾಲೀಕರು ಸಂತ್ರಸ್ತೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ದಿನಗಳ ಕಾಲ ಅಲ್ಲೇ ಉಳಿಯುವಂತೆ ಒತ್ತಾಯಿಸಿದ್ದರು ಎಂಬ ಆರೋಪವಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೆ, ಹೊರಗಿನವರೊಂದಿಗೆ ಸಂಪರ್ಕ ಸಾಧಿಸಲು ಅವಕಾಶ ನೀಡದಂತೆ ನಿರ್ಬಂಧ ಹೇರಲಾಗಿತ್ತು ಎಂಬ ಆರೋಪಗಳೂ ತನಿಖೆಯಲ್ಲಿವೆ ಎಂದು ವಿವರಿಸಿದರು.

ಪ್ರಕರಣದ ಹಿನ್ನೆಲೆ

ಏಪ್ರಿಲ್ 12ರಂದು ಅಮೆರಿಕದ ಮಹಿಳಾ ಪ್ರವಾಸಿಗೆಯೊಬ್ಬರು ಅರ್ಜಿದಾರರ ಹೋಂ ಸ್ಟೇಗೆ ಬಂದಿದ್ದರು. ಈ ವೇಳೆ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ, ಅಲ್ಲಿನ ನೌಕರ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡದ ಆರೋಪದ ಹಿನ್ನೆಲೆಯಲ್ಲಿ ಏಪ್ರಿಲ್ 19ರಂದು ಹೋಂ ಸ್ಟೇ ಮಾಲೀಕ ಪೊನ್ನಪ್ಪ ಅವರನ್ನು ಪೊಲೀಸರು ಬಂಧಿಸಿದ್ದರು.

ಪರಿಹಾರ ಕೋರಿ ಅರ್ಜಿ

ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಬಂಧನ ಕ್ರಮವು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿರುವ ಪೊನ್ನಪ್ಪ, ತಮಗೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯಲ್ಲಿ ತನಿಖಾ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಮುಂದಿನ ಆದೇಶ ನೀಡುವ ಸಾಧ್ಯತೆ ಇದೆ.

ಮಾಜಿ ಸಿಎಂಗಳ ಮನೆಗೆ ಸಿಎಂ ಡಿಕೆಶಿ ಭೇಟಿ: ಅಭಿವೃದ್ಧಿಗೆ ಸಲಹೆ, ಹೊಸ ರಾಜಕೀಯ ಸಂಸ್ಕೃತಿಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರದ ಬೆನ್ನಲ್ಲೇ ರಾಜ್ಯದ ಹಿರಿಯ ರಾಜಕೀಯ ನಾಯಕರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಎಸ್. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ಎಂ. ವಿರಪ್ಪ ಮೊಯ್ಲಿ ಅವರ ನಿವಾಸಗಳಿಗೆ ಭೇಟಿ ನೀಡಿ ರಾಜ್ಯದ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆ ಕುರಿತು ಚರ್ಚೆ ನಡೆಸಿದರು.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಸ್. ಸದಾನಂದ ಗೌಡ, “ಹಿಂದಿನ ಮುಖ್ಯಮಂತ್ರಿಗಳನ್ನು ಹಾಲಿ ಸಿಎಂ ಭೇಟಿ ಮಾಡುವುದು ಉತ್ತಮ ರಾಜಕೀಯ ಸಂಪ್ರದಾಯ. ಇದರಿಂದ ದ್ವೇಷ ರಾಜಕಾರಣ ಕಡಿಮೆಯಾಗುತ್ತದೆ. ಆದರೆ ಇದನ್ನು ನಾನು ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡಿದ್ದೇನೆ ಎಂದು ಅರ್ಥೈಸಬಾರದು” ಎಂದು ಸ್ಪಷ್ಟಪಡಿಸಿದರು.

ಸುಮಾರು ಅರ್ಧ ಗಂಟೆ ನಡೆದ ಮಾತುಕತೆಯಲ್ಲಿ ಆಡಳಿತಕ್ಕೆ ಸಂಬಂಧಿಸಿದ ಹಲವು ಸಲಹೆಗಳನ್ನು ನೀಡಿದ್ದಾಗಿ ತಿಳಿಸಿದ ಅವರು, ಮಳೆಗಾಲದ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಆದ್ಯತೆ ನೀಡಬೇಕು, ಸರ್ಕಾರಿ ಸೇವೆಗಳು ಜನರ ಮನೆಬಾಗಿಲಿಗೆ ತಲುಪುವ ವ್ಯವಸ್ಥೆ ಬಲಪಡಿಸಬೇಕು ಹಾಗೂ ಕಂದಾಯ ಇಲಾಖೆಯ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇದಲ್ಲದೆ ತಮ್ಮ ಅವಧಿಯಲ್ಲಿ ಜಾರಿಯಾಗಿದ್ದ ‘ಸಕಾಲ’ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿದರೆ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆಗಳು ದೊರೆಯುತ್ತವೆ ಎಂದು ಮುಖ್ಯಮಂತ್ರಿ ಗಮನಕ್ಕೆ ತಂದಿರುವುದಾಗಿ ಹೇಳಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ವಿರಪ್ಪ ಮೊಯ್ಲಿ ಅವರ ನಿವಾಸಗಳಿಗೂ ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ರಾಜ್ಯದ ಅಭಿವೃದ್ಧಿ ಯೋಜನೆಗಳು, ಆಡಳಿತದ ಆದ್ಯತೆಗಳು ಹಾಗೂ ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು. ಇದಕ್ಕೂ ಮೊದಲು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಲೋಕ ಕಲ್ಯಾಣಕ್ಕಾಗಿ ಲಲಿತಾ ಪರಮೇಶ್ವರಿಗೆ ಹರಿದ್ರಾ ಅರ್ಚನೆ: ಭಕ್ತರ ಮಹಾಸಾಗರ

0

ಮೈಸೂರು: ಅಧಿಕ ಮಾಸದ ಅಂಗವಾಗಿ ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕಾ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಲಲಿತಾ ಪರಮೇಶ್ವರಿ ಅಮ್ಮನವರ ಹರಿದ್ರಾ ಅರ್ಚನೆ ಹಾಗೂ ರುದ್ರಾಭಿಷೇಕ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪರಮಪೂಜ್ಯ ಶ್ರೀ ವೆಂಕಟಾಚಲ ಅವಧೂತ ಗುರುಮಹಾರಾಜರ ಆಶೀರ್ವಾದದೊಂದಿಗೆ ಶ್ರೀ ಅರ್ಜುನ ಅವಧೂತರು ವಿಶೇಷ ಪೂಜಾ ಕೈಂಕರ್ಯ ನಡೆಸಿದರು.

ಲೋಕಕಲ್ಯಾಣ, ಉತ್ತಮ ಮಳೆ-ಬೆಳೆ ಹಾಗೂ ವಿಶ್ವಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಗುರುಗಳ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಸಾಲಿಗ್ರಾಮ, ಮಂತ್ರಾಕ್ಷತೆ, ದೇವಿಗೆ ಅರ್ಚನೆ ಮಾಡಿದ ಅರಿಶಿನ ಹಾಗೂ ತಿರುಪತಿ ಲಾಡು ಪ್ರಸಾದ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತ ಅಂಡರ್-19 ಕ್ರಿಕೆಟ್ ತಂಡದ ನಾಯಕ ಆಯುಷ್ ಮಾತ್ರೆ ಭಾಗವಹಿಸಿ ಅರ್ಜುನ ಗುರೂಜಿಯ ಆಶೀರ್ವಾದ ಪಡೆದರು. ಕನ್ನಡ ಚಿತ್ರರಂಗ, ಕಿರುತೆರೆ ಕ್ಷೇತ್ರದ ಕಲಾವಿದರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಸಹ ಉಪಸ್ಥಿತರಿದ್ದರು.

ಅಧಿಕ ಮಾಸವು ಪೂಜೆ, ಜಪ, ತಪ, ದಾನ-ಧರ್ಮಗಳಿಗೆ ಅತ್ಯಂತ ಪವಿತ್ರವಾದ ಮಾಸವಾಗಿದ್ದು, ಪ್ರತಿ 33 ತಿಂಗಳಿಗೊಮ್ಮೆ ಬರುತ್ತದೆ. ಪರಮಪೂಜ್ಯ ಶ್ರೀ ವೆಂಕಟಾಚಲ ಅವಧೂತರು ಅಧಿಕ ಜೇಷ್ಠ ಮಾಸದಲ್ಲಿ ಜನಿಸಿದ್ದು ಈ ಆಚರಣೆಗೆ ಮತ್ತಷ್ಟು ವಿಶೇಷತೆ ತಂದಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು.

ಸೂರಜ್ ಹೆಗ್ಡೆ ನಿಧನಕ್ಕೆ ರಾಹುಲ್ ಗಾಂಧಿ ಅಂತಿಮ ನಮನ: ಡಾಲರ್ಸ್ ಕಾಲೋನಿ ನಿವಾಸಕ್ಕೆ ಭೇಟಿ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದು, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಬೆಂಗಳೂರಿನಲ್ಲಿ ಅಂತಿಮ ನಮನ ಸಲ್ಲಿಸಿದರು.

ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ, ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸೂರಜ್ ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಸ್ಥಿತರಿದ್ದರು.

ಸೂರಜ್ ಹೆಗ್ಡೆ ಅವರು ಜೂನ್ 7ರಂದು ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದರೂ ಫಲಕಾರಿಯಾಗದೆ ಅವರು ನಿಧನರಾಗಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

ಸೂರಜ್ ಹೆಗ್ಡೆ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದರು.

ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ, ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ನಿರಂತರವಾಗಿ ಕೆಲಸ ಮಾಡಿದ್ದ ಸೂರಜ್ ಹೆಗ್ಡೆ, ಪಕ್ಷದ ಸಂಘಟನಾತ್ಮಕ ಬಲವರ್ಧನೆಗೂ ಮಹತ್ವದ ಕೊಡುಗೆ ನೀಡಿದ್ದರು.

ಅರ್ಜುನ ಗುರೂಜಿ ದರ್ಶನ ಪಡೆದ ಅಂಡರ್-19 ತಂಡದ ನಾಯಕ ಆಯುಷ್ ಮಾತ್ರೆ

0

ಮೈಸೂರು: ಭಾರತೀಯ ಅಂಡರ್-19 ಕ್ರಿಕೆಟ್ ತಂಡದ ನಾಯಕ ಆಯುಷ್ ಮಾತ್ರೆ ಅವರು ಮೈಸೂರಿಗೆ ಭೇಟಿ ನೀಡಿ ಅವಧೂತ ಶ್ರೀ ಅರ್ಜುನ ಗುರೂಜಿ ಅವರ ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಹಾಗೂ ಸ್ನೇಹಿತರೊಂದಿಗೆ ಗುರು ನಿವಾಸಕ್ಕೆ ಆಗಮಿಸಿದ ಅವರು, ಗುರೂಜಿಗಳೊಂದಿಗೆ ಸಮಯ ಕಳೆಯುವ ಮೂಲಕ ಆಶೀರ್ವಾದ ಸ್ವೀಕರಿಸಿದರು.

ಇದರ ಬೆನ್ನಲ್ಲೇ ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕಾ ಸೇವಾ ಟ್ರಸ್ಟ್ ವತಿಯಿಂದ ನಡೆದ ಲಲಿತಾ ಪರಮೇಶ್ವರಿ ಅಮ್ಮನವರ ಹರಿದ್ರಾ ಅರ್ಚನೆ ಕಾರ್ಯಕ್ರಮದಲ್ಲೂ ಭಾಗವಹಿಸಿದ ಆಯುಷ್ ಮಾತ್ರೆ, ವಿಶೇಷ ಪೂಜೆ ಸಲ್ಲಿಸಿ ದೇವಿಯ ಕೃಪೆಗೆ ಪಾತ್ರರಾದರು.

ಕ್ರಿಕೆಟ್ ವಲಯದಲ್ಲಿ ಈಗಾಗಲೇ ತನ್ನದೇ ಛಾಪು ಮೂಡಿಸಿರುವ ಆಯುಷ್ ಮಾತ್ರೆ, ಏಷ್ಯಾಕಪ್ ಹಾಗೂ ದೇಶೀಯ ಟೂರ್ನಿಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಇರಾನಿ ಕಪ್‌ನಲ್ಲಿ ಸಿಡಿಸಿದ 176 ರನ್‌ಗಳ ಅದ್ಭುತ ಇನ್ನಿಂಗ್ಸ್ ಅವರ ಪ್ರತಿಭೆಗೆ ಸಾಕ್ಷಿಯಾಗಿದೆ.

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅವಕಾಶ ಪಡೆದಿದ್ದ ಯುವ ಬ್ಯಾಟರ್, ತನ್ನ ಆಕ್ರಮಣಕಾರಿ ಆಟದ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಕ್ರೀಡಾ ಸಾಧನೆಗಳ ನಡುವೆಯೂ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆಯುಷ್ ಮಾತ್ರೆ ಅವರ ಭೇಟಿ ಇದೀಗ ಚರ್ಚೆಗೆ ಗ್ರಾಸವಾಗಿದೆ.

ಅಕ್ರಮ ಮಣ್ಣು ಗಣಿಗಾರಿಕೆಯ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವು: ಕೋಟುಮಚಗಿಯಲ್ಲಿ ಆಡಳಿತ ವಿರುದ್ದ ಆಕ್ರೋಶ

ಗದಗ: ಮಳೆಗಾಲ ಆರಂಭವಾಗಿದ್ದರೂ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿರುವ ದುಸ್ಥಿತಿ ಗದಗ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಬಯಲಾಗಿದೆ. ನೀರು ತರಲು ತೆರಳಿದ್ದ ವ್ಯಕ್ತಿಯೊಬ್ಬ ಅಕ್ರಮ ಮಣ್ಣು ಗಣಿಗಾರಿಕೆ ನಡೆಸಿ ಬಿಟ್ಟಿದ್ದ ಆಳವಾದ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗ್ರಾಮದ ಚೆನ್ನಯ್ಯ ಬಳಗೇರಮಠ (55) ಮೃತ ದುರ್ದೈವಿ. ಜೂನ್ 2 ರಂದು ಘಟನೆ ನಡೆದಿದ್ದು, ಇದೀಗ ಪ್ರಕರಣದ ವಿರುದ್ಧ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಸುಮಾರು 3 ಕಿಲೋ ಮೀಟರ್ ದೂರದಲ್ಲಿರುವ ಹೊಂಡಗಳಿಗೆ ಹೋಗಿ ನೀರು ತರಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಇದೇ ವೇಳೆ ಅಕ್ರಮ ಮಣ್ಣು ಗಣಿಗಾರಿಕೆ ನಡೆಸಿದ ದಂಧೆಕೋರರು 30 ರಿಂದ 40 ಅಡಿ ಆಳದ ಬೃಹತ್ ಹೊಂಡಗಳನ್ನು ನಿರ್ಮಿಸಿದ್ದು, ಅವೇ ಈಗ ಜೀವಹಾನಿಗೆ ಕಾರಣವಾಗುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

ಕೋಟುಮಚಗಿ ಗ್ರಾಮದ ಸುತ್ತ ನಾಲ್ಕೈದು ಭಾರೀ ಅಕ್ರಮ ಗಣಿಗಾರಿಕೆ ಹೊಂಡಗಳಿದ್ದು, ಅವು “ಸಾವಿನ ಹೊಂಡ”ಗಳಾಗಿ ಪರಿಣಮಿಸಿವೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಗಣಿ ಇಲಾಖೆ ಹಾಗೂ ಜಿಲ್ಲಾಡಳಿತದ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ತಿಂಗಳು ಪಕ್ಕದ ತಿಮ್ಮಾಪೂರ ಗ್ರಾಮದಲ್ಲೂ ಇದೇ ರೀತಿಯ ಹೊಂಡದಲ್ಲಿ ನೀರು ತರಲು ತೆರಳಿದ್ದ ಇಬ್ಬರು ಬಾಲಕಿಯರು ಬಿದ್ದು ಮೃತಪಟ್ಟ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಆದರೂ ಗಣಿ ಇಲಾಖೆ ಮತ್ತು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಇಂತಹ ಅಕ್ರಮ ಗಣಿಗಾರಿಕೆ ಹೊಂಡಗಳಲ್ಲಿ ಬಿದ್ದು ಐದಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಆದರೂ ಅಧಿಕಾರಿಗಳು ತಲೆಕೆಡಿಸಿಕೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. “ಯಾಮಾರಿದ್ರೆ ಶಿವನಪಾದ ಸೇರೋದು ಪಕ್ಕಾ” ಎಂಬ ಭಯ ಜನರಲ್ಲಿ ಮನೆ ಮಾಡಿದೆ.

ಮೃತ ಚೆನ್ನಯ್ಯ ಕುಟುಂಬದ ಆಧಾರಸ್ತಂಭವಾಗಿದ್ದರು. ಅವರ ಸಾವಿನಿಂದ ಕುಟುಂಬ ಕಂಗಾಲಾಗಿದ್ದು, ಸೌಜನ್ಯಕ್ಕೂ ಜಿಲ್ಲಾಡಳಿತದ ಯಾವುದೇ ಅಧಿಕಾರಿ ಭೇಟಿ ನೀಡಿ ಸಾಂತ್ವಾನ ಹೇಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕು, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಂಚನೆ ಹಣದಲ್ಲಿ ಸ್ಟಾರ್‌ಗಳ ಕಾರ್ಯಕ್ರಮ? ಶಿವಂ ಕೇಸ್‌ನಲ್ಲಿ ನಟ-ನಟಿಯರಿಗೆ ಸಿಐಡಿ ಸಮನ್ಸ್ ಸಾಧ್ಯತೆ

ಬೆಳಗಾವಿ: ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಹೂಡಿಕೆದಾರರ ಹಣದಲ್ಲಿ ಸ್ಯಾಂಡಲ್‌ವುಡ್ ತಾರೆಯರನ್ನು ಕರೆಸಿ ಅದ್ದೂರಿ ಕಾರ್ಯಕ್ರಮ ನಡೆಸಲಾಗಿದೆ ಎಂಬ ಅನುಮಾನ ತನಿಖಾ ಸಂಸ್ಥೆಗಳ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಹಲವು ಖ್ಯಾತ ನಟ-ನಟಿಯರಿಗೆ ಸಿಐಡಿ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

ಕೋಟ್ಯಂತರ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಶಿವಾನಂದ ನೀಲಣ್ಣವರ್ ಆಯೋಜಿಸಿದ್ದ ‘ಬೆಳಗಾವಿ ಹಬ್ಬ’ ಕಾರ್ಯಕ್ರಮ ಇದೀಗ ತನಿಖೆಯ ಕೇಂದ್ರಬಿಂದುವಾಗಿದೆ. ಸಾರ್ವಜನಿಕರಿಂದ ಸಂಗ್ರಹಿಸಲಾದ ಹಣವನ್ನೇ ಕಾರ್ಯಕ್ರಮದ ಖರ್ಚಿಗೆ ಬಳಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಹಣದ ಹರಿವಿನ ಕುರಿತು ಸಿಐಡಿ ಆಳವಾದ ಪರಿಶೀಲನೆ ಆರಂಭಿಸಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಾಲಿ ಧನಂಜಯ, ಸಪ್ತಮಿ ಗೌಡ, ನೀನಾಸಂ ಸತೀಶ್, ರಾಗಿಣಿ ದ್ವಿವೇದಿ, ದಿಗಂತ್-ಐಂದ್ರಿತಾ ರೈ, ವಶಿಷ್ಠ ಸಿಂಹ ಹಾಗೂ ರಾಜೇಶ್ ಕೃಷ್ಣನ್ ಸೇರಿದಂತೆ ಹಲವರ ಸಂಭಾವನೆ ವಿವರಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಪಾವತಿಗಳು ಯಾವ ಖಾತೆಯಿಂದ ನಡೆದಿವೆ, ಹಣದ ಮೂಲ ಏನು ಎಂಬುದನ್ನು ಪತ್ತೆಹಚ್ಚಲು ಬ್ಯಾಂಕ್ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಸಿಐಡಿ ಡಿಐಜಿ ಡಾ. ಭೀಮಾಶಂಕರ್ ಗುಳೇದ ಅವರ ಸೂಚನೆಯಂತೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ. ವಂಚನೆ ಪ್ರಕರಣದ ಹಣಕಾಸು ವ್ಯವಹಾರಗಳ ಜಾಡು ಹಿಡಿದಿರುವ ಸಿಐಡಿ, ಈಗ ಚಿತ್ರರಂಗದ ಸಂಪರ್ಕಗಳ ಮೇಲೂ ಕಣ್ಣಿಟ್ಟಿದ್ದು, ಮುಂದಿನ ದಿನಗಳಲ್ಲಿ ತನಿಖೆ ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆಯಿದೆ.

ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್: ಇನ್ಮುಂದೆ 9 ಸಿಲಿಂಡರ್ ಬದಲು 4 ಮಾತ್ರ ಸಿಗಲಿದೆ!

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿದೆ. ಹೊಸ ನಿಯಮದ ಪ್ರಕಾರ, ಯೋಜನೆಯ ಫಲಾನುಭವಿಗಳು ಇನ್ನುಮುಂದೆ ವರ್ಷಕ್ಕೆ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳಿಗೆ ಮಾತ್ರ ಹೆಚ್ಚುವರಿ ಸಬ್ಸಿಡಿ ಪಡೆಯಲಿದ್ದಾರೆ.

ಇಲ್ಲಿಯವರೆಗೆ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಒಂಬತ್ತು ಸಬ್ಸಿಡಿ ಸಿಲಿಂಡರ್‌ಗಳ ಸೌಲಭ್ಯ ಲಭ್ಯವಿತ್ತು. ಇದೀಗ ಆ ಸಂಖ್ಯೆಯನ್ನು ನಾಲ್ಕಕ್ಕೆ ಇಳಿಸಲಾಗಿದ್ದು, ದೇಶದಾದ್ಯಂತ ಯೋಜನೆಯಡಿ ಸಂಪರ್ಕ ಪಡೆದಿರುವ 10.60 ಕೋಟಿ ಕುಟುಂಬಗಳ ಮೇಲೆ ಈ ಬದಲಾವಣೆ ಅನ್ವಯವಾಗಲಿದೆ.

ಕೇಂದ್ರ ಸರ್ಕಾರದ ಪ್ರಕಾರ, ಸರಾಸರಿ ಬಳಕೆಯ ಅಂಕಿ-ಅಂಶಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಉಜ್ವಲ ಯೋಜನೆಯಡಿ ಸಂಪರ್ಕ ಪಡೆದ ಬಹುತೇಕ ಕುಟುಂಬಗಳು ವರ್ಷಕ್ಕೆ ಸರಾಸರಿ 4 ರಿಂದ 5 ಸಿಲಿಂಡರ್‌ಗಳನ್ನು ಮಾತ್ರ ಬಳಸುತ್ತಿರುವುದರಿಂದ, ನೈಜ ಬಳಕೆಗೆ ಅನುಗುಣವಾಗಿ ಸಬ್ಸಿಡಿ ವ್ಯವಸ್ಥೆಯನ್ನು ಮರುಸಂಘಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2016ರಲ್ಲಿ ಆರಂಭಗೊಂಡ ಉಜ್ವಲ ಯೋಜನೆಯಡಿ ಆರಂಭದಲ್ಲಿ ಫಲಾನುಭವಿಗಳಿಗೆ ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್‌ಗಳನ್ನು ನೀಡಲಾಗುತ್ತಿತ್ತು. ಬಳಿಕ ಈ ಸಂಖ್ಯೆಯನ್ನು ಒಂಬತ್ತಕ್ಕೆ ಇಳಿಸಲಾಗಿತ್ತು. ಇದೀಗ ಮತ್ತೊಮ್ಮೆ ಪರಿಷ್ಕರಣೆ ಮಾಡಿ ನಾಲ್ಕು ಸಿಲಿಂಡರ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಇದೇ ವೇಳೆ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳು ಹಾಗೂ ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿನ ಸವಾಲುಗಳ ನಡುವೆಯೂ ದೇಶದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಭಾರತ ತನ್ನ ಎಲ್‌ಪಿಜಿ ಅಗತ್ಯದ ಬಹುಪಾಲನ್ನು ಆಮದು ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪರ್ಯಾಯ ಪೂರೈಕೆ ಮೂಲಗಳನ್ನು ಅಭಿವೃದ್ಧಿಪಡಿಸಲಾಗಿದೆ. ಓಮನ್, ಅಮೆರಿಕ ಹಾಗೂ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳಿಂದ ಎಲ್‌ಪಿಜಿ ಆಮದು ಹೆಚ್ಚಿಸುವ ಮೂಲಕ ಪೂರೈಕೆ ಸರಪಳಿಯನ್ನು ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪ್ರವೀಣ್ ಮಲ್ ಖನುಜಾ ಮಾತನಾಡಿ, ಉಜ್ವಲ ಯೋಜನೆಯ ಗ್ರಾಹಕರ ಸರಾಸರಿ ಬಳಕೆಯನ್ನು ಆಧರಿಸಿ ವರ್ಷಕ್ಕೆ ನಾಲ್ಕು ಸಿಲಿಂಡರ್‌ಗಳಿಗೆ ತಲಾ ₹300 ನೇರ ಸಬ್ಸಿಡಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ವೆಚ್ಚ ಏರಿಕೆಯಾಗಿದ್ದರೂ ಗ್ರಾಹಕರಿಗೆ ಕಡಿಮೆ ದರದಲ್ಲಿ ಸಿಲಿಂಡರ್ ಒದಗಿಸಲು ಸರ್ಕಾರ ಬೆಲೆ ನಿಯಂತ್ರಣ ಕ್ರಮಗಳನ್ನು ಮುಂದುವರಿಸಿದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಹೆಚ್ಚುವರಿ ಸಬ್ಸಿಡಿಯೊಂದಿಗೆ ಮೊದಲ ನಾಲ್ಕು ಸಿಲಿಂಡರ್‌ಗಳು ಕಡಿಮೆ ದರದಲ್ಲಿ ಲಭ್ಯವಾಗಲಿವೆ.

ಕೇಂದ್ರ ಸರ್ಕಾರ ಕಳೆದ ಎರಡು ಹಣಕಾಸು ವರ್ಷಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳಿಗೆ ಸಾವಿರಾರು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದು, ಇಂಧನ ಬೆಲೆ ಏರಿಕೆಯ ಪರಿಣಾಮ ಜನಸಾಮಾನ್ಯರ ಮೇಲೆ ಕಡಿಮೆಯಾಗುವಂತೆ ಕ್ರಮ ಕೈಗೊಂಡಿದೆ ಎಂದು ತಿಳಿಸಿದೆ.

ಗ್ರಾಮೀಣ ಭಾಗದ ಮಹಿಳೆಯರಿಗೆ ಶುದ್ಧ ಇಂಧನ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಜ್ವಲ ಯೋಜನೆಯು ಮುಂದಿನ ದಿನಗಳಲ್ಲೂ ಪರಿಣಾಮಕಾರಿಯಾಗಿ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

error: Content is protected !!