Home Blog Page 4

ಕೆಂಪೇಗೌಡ ಏರ್‌ಪೋರ್ಟ್‌ಗೆ ಜಾಗತಿಕ ಮನ್ನಣೆ: ಸತತ 3ನೇ ಬಾರಿ ಪ್ರಶಸ್ತಿ!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಮಹತ್ವದ ಸಾಧನೆ ಮಾಡಿದೆ.

‘ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ 2026’ರಲ್ಲಿ ಸತತ ಮೂರನೇ ಬಾರಿಗೆ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಎಂಬ ಗೌರವಕ್ಕೆ ಪಾತ್ರವಾಗಿದೆ.

ಈ ಪ್ರಶಸ್ತಿ ಕೆಂಪೇಗೌಡ ಏರ್‌ಪೋರ್ಟ್‌ನ್ನು ಪ್ರಮುಖ ಜಾಗತಿಕ ಪ್ರಯಾಣ ಕೇಂದ್ರಗಳಲ್ಲಿ ಒಂದಾಗಿ ಮತ್ತೊಮ್ಮೆ ಗುರುತಿಸಿದೆ. ವಿಶ್ವದ ವಿಮಾನ ನಿಲ್ದಾಣಗಳ ಶ್ರೇಯಾಂಕದಲ್ಲೂ ಗಮನಾರ್ಹ ಪ್ರಗತಿ ಸಾಧಿಸಿರುವ ಇದು, 48ನೇ ಸ್ಥಾನದಿಂದ 41ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಅಗ್ರ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ವಿಮಾನ ನಿಲ್ದಾಣಗಳ ಶ್ರೇಷ್ಠತೆಯನ್ನು ಅಳೆಯುವ ಜಾಗತಿಕ ಮಾನದಂಡವಾಗಿರುವ ಸ್ಕೈಟ್ರಾಕ್ಸ್ ಅವಾರ್ಡ್ಸ್, ಚೆಕ್-ಇನ್, ಭದ್ರತೆ, ವಲಸೆ, ಚಿಲ್ಲರೆ ಸೇವೆಗಳು ಸೇರಿದಂತೆ ಹಲವು ಅಂಶಗಳಲ್ಲಿ ಗ್ರಾಹಕ ಅನುಭವವನ್ನು ಪರಿಗಣಿಸಿ ನೀಡಲಾಗುತ್ತದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಸ್ಥಿರ ಸಾಧನೆ ತೋರಿದ ಹಿನ್ನೆಲೆಯಲ್ಲಿ ಈ ಗೌರವ ಲಭಿಸಿದೆ.

ಇದರ ಜೊತೆಗೆ, ಕೆಂಪೇಗೌಡ ಏರ್‌ಪೋರ್ಟ್ ನಾಲ್ಕನೇ ಬಾರಿಗೆ ‘ವಿಶ್ವದ ಅತ್ಯುತ್ತಮ ಆಗಮನದ ವಿಮಾನ ನಿಲ್ದಾಣ’ ಎಂಬ ಮನ್ನಣೆಯನ್ನೂ ಪಡೆದುಕೊಂಡಿದೆ. ಟರ್ಮಿನಲ್ 2ಗೆ ಸ್ಕೈಟ್ರಾಕ್ಸ್‌ನಿಂದ ‘5-ಸ್ಟಾರ್’ ರೇಟಿಂಗ್ ದೊರೆತಿದ್ದು, ಇದು ಭಾರತದ ಮೊದಲ ಟರ್ಮಿನಲ್ ಎಂಬ ದಾಖಲೆ ನಿರ್ಮಿಸಿದೆ.

ಹಾಗೆಯೇ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯ ಕಾರ್ಬನ್ ಮಾನ್ಯತೆ ಕಾರ್ಯಕ್ರಮದಡಿ 5ನೇ ಹಂತ ಹಾಗೂ ಪ್ರವೇಶ ಸಾಧ್ಯತೆ ಮಾನ್ಯತೆಯಡಿ 3ನೇ ಹಂತವನ್ನು ಸಾಧಿಸಿರುವುದು ಈ ವಿಮಾನ ನಿಲ್ದಾಣದ ಜಾಗತಿಕ ಮಟ್ಟದ ಗುಣಮಟ್ಟವನ್ನು ಮತ್ತಷ್ಟು ಎತ್ತಿಹಿಡಿದಿದೆ.

ಒಟ್ಟಾರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಸಾಧನೆಗಳ ಮೂಲಕ ವಿಶ್ವ ಮಟ್ಟದಲ್ಲಿ ತನ್ನ ಪ್ರತಿಷ್ಠೆಯನ್ನು ಬಲಪಡಿಸಿಕೊಂಡಿದೆ.

ಕಳಪೆ ಕ್ರೆಡಿಟ್ ಇದ್ದರೆ ಬ್ಯಾಂಕ್ ಕೆಲಸ ಕಷ್ಟ: ಹೊಸ ನಿಯಮ ಜಾರಿ, CIBIL ಸ್ಕೋರ್ ಕಡ್ಡಾಯ!

0

ನವದೆಹಲಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಬ್ಯಾಂಕ್ ಉದ್ಯೋಗ ಪಡೆಯುವುದು ಇನ್ನಷ್ಟು ಕಠಿಣವಾಗುತ್ತಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಜಾರಿಗೆ ಬಂದಿದೆ.

ಇದೀಗ ಅಭ್ಯರ್ಥಿಗಳ ಕ್ರೆಡಿಟ್ ಸ್ಕೋರ್  ಪರಿಶೀಲನೆ ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೇಲೆ ಹೆಚ್ಚು ಗಮನ ಹರಿಸುತ್ತಿದ್ದರು. ಆದರೆ, ಬ್ಯಾಂಕಿಂಗ್ ವಲಯದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನ ಹೆಚ್ಚಿಸಲು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಸಾರ್ವಜನಿಕರ ಹಣವನ್ನು ನಿರ್ವಹಿಸುವ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಶುದ್ಧ ಹಣಕಾಸು ದಾಖಲೆ ಹೊಂದಿರಬೇಕು ಎಂಬುದು ಬ್ಯಾಂಕುಗಳ ಉದ್ದೇಶವಾಗಿದೆ.

ಸಾಲ ಮರುಪಾವತಿಯಲ್ಲಿ ವಿಳಂಬ ಮಾಡಿರುವವರು ಅಥವಾ ಕ್ರೆಡಿಟ್ ಕಾರ್ಡ್ ಬಾಕಿಗಳನ್ನು ಸರಿಯಾದ ಸಮಯಕ್ಕೆ ಪಾವತಿಸದವರ ವಿಶ್ವಾಸಾರ್ಹತೆಯ ಮೇಲೆ ಬ್ಯಾಂಕುಗಳು ಸಂಶಯ ವ್ಯಕ್ತಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಕಳಪೆ ಕ್ರೆಡಿಟ್ ದಾಖಲೆ ಹೊಂದಿರುವವರಿಗೆ ಉದ್ಯೋಗ ಸಿಗುವುದು ಕಷ್ಟವಾಗಬಹುದು.

ಈ ನಿಯಮ ಎಲ್ಲಾ ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಅನ್ವಯವಾಗಲಿದೆ. ವಿಶೇಷವಾಗಿ ಇಎಂಐ ಪಾವತಿಸದೇ ಇರುವವರು ಅಥವಾ ಬಾಕಿ ಉಳಿಸಿಕೊಂಡಿರುವವರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಆಯ್ಕೆ ಪ್ರಕ್ರಿಯೆ ವೇಳೆ ಅಭ್ಯರ್ಥಿಗಳು ತಮ್ಮ ಸಿಬಿಲ್ ವರದಿಯನ್ನು ಸಲ್ಲಿಸಬೇಕಾಗುತ್ತದೆ. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಥವಾ ಸಮರ್ಪಕ ವಿವರಣೆ ನೀಡಲು ವಿಫಲರಾದರೆ, ಅಂತಿಮವಾಗಿ ಆಯ್ಕೆಯಾಗಿದ್ದರೂ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ.

ಆದರೆ, ಶಿಕ್ಷಣ ಸಾಲ ಪಡೆದ ವಿದ್ಯಾರ್ಥಿಗಳಿಗೆ ಕೆಲವು ಸಡಿಲಿಕೆ ನೀಡಲಾಗಿದೆ. ಹಣಕಾಸಿನ ಅಡಚಣೆಯಿಂದಾಗಿ ಶಿಕ್ಷಣ ಸಾಲದ ಮರುಪಾವತಿ ವಿಳಂಬವಾಗಿದ್ದರೆ, ಅದನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಲಾಗುತ್ತದೆ ಎಂದು ಬ್ಯಾಂಕುಗಳು ತಿಳಿಸಿವೆ.

ತಜ್ಞರ ಪ್ರಕಾರ, ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳು ತಮ್ಮ ಕ್ರೆಡಿಟ್ ಸ್ಕೋರ್‌ನ್ನು ನಿಯಮಿತವಾಗಿ ಪರಿಶೀಲಿಸಿ, ಬಾಕಿ ಇರುವ ಸಾಲಗಳನ್ನು ತಕ್ಷಣ ತೀರಿಸುವುದು ಉತ್ತಮ. ಜೊತೆಗೆ ಬ್ಯಾಂಕಿನಿಂದ ‘ನೋ ಒಬ್ಜೆಕ್ಷನ್ ಸರ್ಟಿಫಿಕೆಟ್’ ಪಡೆದುಕೊಳ್ಳುವುದರಿಂದ ಭವಿಷ್ಯದಲ್ಲಿ ಉದ್ಯೋಗದ ವೇಳೆ ಎದುರಾಗುವ ಸಮಸ್ಯೆಗಳನ್ನು ತಪ್ಪಿಸಬಹುದು.

ಕೋಲ್ಕತ್ತಾ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ಆರೋಪ: ಲಿಫ್ಟ್‌ನಲ್ಲಿ ಸಿಲುಕಿ ವ್ಯಕ್ತಿ ಸಾವು

ಕೋಲ್ಕತ್ತಾ: ಕೋಲ್ಕತ್ತಾದ ಆರ್ಜಿ ಕರ್ ಆಸ್ಪತ್ರೆಗೆ ಸಂಬಂಧಿಸಿದಂತೆ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಲಿಫ್ಟ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಅರೂಪ್ ಬಂಡೋಪಾಧ್ಯಾಯ ಎಂದು ಗುರುತಿಸಲ್ಪಟ್ಟ ಮೃತರು, ತಮ್ಮ ಮಗನ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದರು. ಮಗನ ಕಾಲಿನ ಶಸ್ತ್ರಚಿಕಿತ್ಸೆಯ ನಂತರ ಅವರು ಲಿಫ್ಟ್ ಮೂಲಕ ಕೆಳಕ್ಕೆ ಬರುತ್ತಿದ್ದ ವೇಳೆ, ಲಿಫ್ಟ್ ಅಚಾನಕ್ ಸ್ಥಗಿತಗೊಂಡು ಮೂವರು ಒಳಗೆ ಸಿಲುಕಿಕೊಂಡಿದ್ದರು.

ಬಹಳ ಹೊತ್ತಿನವರೆಗೆ ಅವರು ಹಿಂದಿರುಗದಿದ್ದರಿಂದ ಆತಂಕಗೊಂಡ ಕುಟುಂಬ ಸದಸ್ಯರು ಹುಡುಕಾಟ ಆರಂಭಿಸಿದ್ದು, ಕೊನೆಗೆ ಲಿಫ್ಟ್ ಒಳಗೇ ಅವರ ಶವ ಪತ್ತೆಯಾಗಿದೆ.

ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿಗೆ ಸ್ಪಂದಿಸಲು ಲಿಫ್ಟ್‌ಮ್ಯಾನ್ ಇಲ್ಲದಿರುವುದು ಹಾಗೂ ಲಿಫ್ಟ್ ದುರಸ್ತಿ ಮಾಡದಿರುವುದು ಗಂಭೀರ ನಿರ್ಲಕ್ಷ್ಯ ಎಂದು ಆರೋಪಗಳು ಕೇಳಿಬಂದಿವೆ. ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ಪ್ರೀಮಿಯಮ್ ಪೆಟ್ರೋಲ್ ದರ ಏರಿಕೆ: ಲೀಟರ್‌ಗೆ ₹2.30 ಹೆಚ್ಚಳ

ನವದೆಹಲಿ: ದೇಶದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರವನ್ನು ಲೀಟರ್‌ಗೆ ₹2.30ರಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಈ ಏರಿಕೆ ಆಗಿರಬಹುದು ಎಂದು ಅಂದಾಜಿಸಲಾಗುತ್ತಿದೆ.

ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್ ಹಾಗೂ ಎಚ್ಪಿಸಿಎಲ್ ಈ ದರ ಪರಿಷ್ಕರಣೆ ಮಾಡಿವೆ. ಆದರೆ ಸಾಮಾನ್ಯ ಪೆಟ್ರೋಲ್ ಹಾಗೂ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಹೈ ಆಕ್ಟೇನ್ ಗುಣಮಟ್ಟ ಹೊಂದಿರುವ ಪ್ರೀಮಿಯಮ್ ಪೆಟ್ರೋಲ್ ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸುವುದರಿಂದಾಗಿ ಸಾಮಾನ್ಯ ಪೆಟ್ರೋಲಿಗಿಂತ ಹೆಚ್ಚಿನ ದರದಲ್ಲಿರುತ್ತದೆ.

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಸಾಮಾನ್ಯ ಪೆಟ್ರೋಲ್ ದರ ಸ್ಥಿರವಾಗಿದ್ದು, ಪ್ರೀಮಿಯಮ್ ಪೆಟ್ರೋಲ್ ಮಾತ್ರ ₹2.09ರಿಂದ ₹2.35ರವರೆಗೆ ಏರಿಕೆ ಕಂಡಿದೆ.

ಹಿಡನ್ ಕ್ಯಾಮೆರಾ ಬಳಸಿ 58 ಮಹಿಳೆಯರ ಅಶ್ಲೀಲ ವಿಡಿಯೋ: ಸಂಖ್ಯಾಶಾಸ್ತ್ರಜ್ಞ ಬಂಧನ

ಮುಂಬೈ/ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಆಧ್ಯಾತ್ಮಿಕತೆಯ ಹೆಸರಿನಲ್ಲಿ ಮಹಿಳೆಯರನ್ನು ಮೋಸಗೊಳಿಸಿ ಲೈಂಗಿಕ ಶೋಷಣೆ ನಡೆಸಿದ ಆರೋಪದ ಮೇಲೆ ಪ್ರಭಾವಿ ಸಂಖ್ಯಾಶಾಸ್ತ್ರಜ್ಞ ಅಶೋಕ್ ಖರತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

67 ವರ್ಷದ ಖರತ್, ತನ್ನನ್ನು ‘ಕ್ಯಾಪ್ಟನ್’ ಎಂದು ಪರಿಚಯಿಸಿಕೊಂಡು ಮಹಿಳೆಯರ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿ ಅವರನ್ನು ತನ್ನ ಸಂಪರ್ಕಕ್ಕೆ ಕರೆಸಿಕೊಳ್ಳುತ್ತಿದ್ದರೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ, ಮಹಿಳೆಯರಿಗೆ ಮಾದಕ ದ್ರವ್ಯ ನೀಡಿ ವಶಪಡಿಸಿಕೊಂಡು, ಭಯಭೀತಿಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿತ್ತು. ದಾಳಿ ವೇಳೆ ಅವರ ಕಚೇರಿಯಿಂದ ಗುಪ್ತವಾಗಿ ಚಿತ್ರೀಕರಿಸಲಾದ ಅಶ್ಲೀಲ ವಿಡಿಯೋಗಳನ್ನು ಒಳಗೊಂಡ ಪೆನ್‌ಡ್ರೈವ್ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಒಬ್ಬ ಮಹಿಳೆಯ ದೂರಿನ ಆಧಾರದ ಮೇಲೆ ತನಿಖೆ ಆರಂಭವಾದರೂ, ನಂತರ ಇದು ಹಲವು ಮಹಿಳೆಯರನ್ನು ಒಳಗೊಂಡ ದೊಡ್ಡ ಜಾಲವಿರುವುದು ಬಹಿರಂಗವಾಗಿದೆ.

ಮಹಾರಾಷ್ಟ್ರ ಸರ್ಕಾರ ಈ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದು, ಐಪಿಎಸ್ ಅಧಿಕಾರಿ ತೇಜಸ್ವಿನಿ ಸತ್ಪುಟೆ ನೇತೃತ್ವದಲ್ಲಿ ವಿಚಾರಣೆ ಮುಂದುವರಿದಿದೆ.

2027 ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆ: 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ!

0

ಕಳೆದ ಮೂರು ವರ್ಷಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ಸತತ ಯಶಸ್ಸು ಸಾಧಿಸಿರುವ ಟೀಂ ಇಂಡಿಯಾ ಇದೀಗ 2027ರ ಏಕದಿನ ವಿಶ್ವಕಪ್‌ಗೆ ಕಣ್ಣಿಟ್ಟಿದ್ದು, ಬಿಸಿಸಿಐ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.

2024ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ, 2025ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಅದಾದ ಬಳಿಕ 2026ರಲ್ಲಿ ಮತ್ತೊಮ್ಮೆ ಟಿ20 ವಿಶ್ವಕಪ್ ಜಯಿಸಿ ಐಸಿಸಿ ಟ್ರೋಫಿಗಳಲ್ಲಿ ಹ್ಯಾಟ್ರಿಕ್ ಸಾಧಿಸಿದೆ. ಇದೀಗ ಮುಂದಿನ ಗುರಿಯಾಗಿ 2027ರ ಏಕದಿನ ವಿಶ್ವಕಪ್‌ನ್ನು ಗೆಲ್ಲುವತ್ತ ಗಮನ ಹರಿಸಲಾಗಿದೆ.

2027ರ ಏಕದಿನ ವಿಶ್ವಕಪ್ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲಿದೆ. 2023ರ ಫೈನಲ್‌ನಲ್ಲಿ ಸೋತಿದ್ದ ಟೀಂ ಇಂಡಿಯಾ ಈ ಬಾರಿ ಟ್ರೋಫಿ ಗೆಲ್ಲುವ ದೃಢನಿಶ್ಚಯ ಹೊಂದಿದೆ.

ಈ ಹಿನ್ನೆಲೆ ಬಿಸಿಸಿಐ ಈಗಾಗಲೇ 20 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ವರದಿಯಾಗಿದೆ. ಆಯ್ಕೆ ಮಂಡಳಿ ಈ ಆಟಗಾರರ ಪ್ರದರ್ಶನದ ಮೇಲೆ ಮಾತ್ರ ಗಮನ ಹರಿಸಲಿದ್ದು, ಐಪಿಎಲ್ ಸೇರಿದಂತೆ ವಿವಿಧ ಟೂರ್ನಿಗಳಲ್ಲಿ ಅವರ ಆಟವನ್ನು ನಿಕಟವಾಗಿ ಅವಲೋಕಿಸಲಿದೆ.

ಐಪಿಎಲ್ ನಡೆಯುವ ವೇಳೆ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ನೇತೃತ್ವದ ತಂಡದ ಸದಸ್ಯರಾದ ಶಿವಸುಂದರ್ ದಾಸ್, ಆರ್.ಪಿ. ಸಿಂಗ್, ಅಜಯ್ ರಾತ್ರ ಮತ್ತು ಪ್ರಗ್ಯಾನ್ ಓಜಾ ವಿವಿಧ ನಗರಗಳಲ್ಲಿ ನಡೆಯುವ ಪಂದ್ಯಗಳನ್ನು ವೀಕ್ಷಿಸಲಿದ್ದಾರೆ. ಪ್ರತಿ ಆಯ್ಕೆದಾರರು ವಾರಕ್ಕೆ ಕನಿಷ್ಠ ಒಂದು ಪಂದ್ಯ ವೀಕ್ಷಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮುಂಬೈ, ಕೊಲ್ಕತ್ತಾ, ದೆಹಲಿ, ಬೆಂಗಳೂರು ಹಾಗೂ ಹೈದರಾಬಾದ್‌ನಲ್ಲಿ ನಡೆಯುವ ಪಂದ್ಯಗಳಲ್ಲಿ ಆಯ್ಕೆದಾರರು ಹಾಜರಿದ್ದು ಆಟಗಾರರ ಪ್ರದರ್ಶನವನ್ನು ಸೂಕ್ಷ್ಮವಾಗಿ ಪರಿಶೀಲಿಸಲಿದ್ದಾರೆ.

ಇದರ ಜೊತೆಗೆ 2028ರ ಟಿ20 ವಿಶ್ವಕಪ್ ಹಾಗೂ ಒಲಿಂಪಿಕ್ ಕ್ರೀಡಾಕೂಟವನ್ನು ಗಮನದಲ್ಲಿಟ್ಟುಕೊಂಡು ಈ ಪಟ್ಟಿಯನ್ನು ರೂಪಿಸಲಾಗಿದೆ ಎಂದು ಹೇಳಲಾಗಿದೆ. ಹೀಗಾಗಿ ಈಗಾಗಲೇ ಆಯ್ಕೆಯಾದ 20 ಆಟಗಾರರ ಹೊರತಾಗಿ ಇತರರಿಗೆ ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಗದಗದಲ್ಲಿ ಕಾಡುಹಂದಿ ದಾಳಿ: ಕುರಿ ಕಾಯುತ್ತಿದ್ದವನ ಮೇಲೆ ಅಟ್ಯಾಕ್, ಸ್ಥಿತಿ ಗಂಭೀರ!

0

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ ತಾಂಡಾ ಬಳಿ ಕುರಿ ಮೇಯಿಸುತ್ತಿದ್ದ ವೇಳೆ ಕುರಿಗಾಯಿಯ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ.

ಜಲ್ಲಿಗೇರಿ ತಾಂಡಾದ ನಿವಾಸಿ ಮಹಾಂತೇಶ್ ಚವ್ಹಾನ್ ಅವರು ಕಪ್ಪತ್ತಗುಡ್ಡ ಅರಣ್ಯದ ಅಂಚಿನ ಜಮೀನಿನಲ್ಲಿ ಕುರಿಗಳನ್ನು ಮೇಯಿಸುತ್ತಿದ್ದಾಗ ಕಾಡುಹಂದಿ ಏಕಾಏಕಿ ದಾಳಿ ನಡೆಸಿದೆ. ದಾಳಿಯಲ್ಲಿ ಮಹಾಂತೇಶ್ ಅವರಿಗೆ ಮೊಣಕಾಲು, ಮೊಣಕೈ ಹಾಗೂ ಮುಖ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.

ಕಾಡುಹಂದಿಯನ್ನು ನಾಯಿಗಳು ಬೆನ್ನಟ್ಟಿದ್ದರಿಂದ ಅದು ಆತಂಕಗೊಂಡು ಕುರಿಗಾಯಿಯ ಮೇಲೆ ದಾಳಿ ನಡೆಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಗಾಯಾಳುವನ್ನು ತಕ್ಷಣ ಶಿರಹಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಶಿರಹಟ್ಟಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಬೆಂಗಳೂರಿನ ಪ್ರತಿಷ್ಟಿತ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ-ಕೋಟಿ ವಂಚನೆ ಆರೋಪ: 18 ಜನರ ವಿರುದ್ಧ FIR!

ಬೆಂಗಳೂರು: ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ.

ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನ ಅಸೋಸಿಯೇಷನ್ ಸದಸ್ಯರು ಸಂಗ್ರಹಿಸಿದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಸಂಬಂಧ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್ ನಾಯ್ಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಾಹಿತಿಯ ಪ್ರಕಾರ, ಪ್ರತಿ ಫ್ಲಾಟ್‌ನಿಂದ ವರ್ಷಕ್ಕೆ ಸುಮಾರು 60 ಸಾವಿರ ರೂಪಾಯಿ ಸಂಗ್ರಹಿಸಲಾಗುತ್ತಿದ್ದು, 700 ಫ್ಲಾಟ್‌ಗಳಿಂದ ಒಟ್ಟು ಸುಮಾರು 3.6 ಕೋಟಿ ರೂಪಾಯಿ ವಸೂಲಿ ಮಾಡಲಾಗುತ್ತದೆ. ಆದರೆ, ಈ ಹಣವನ್ನು ಸರಿಯಾದ ನಿರ್ವಹಣೆಗೆ ಬಳಸದೇ ಲೆಕ್ಕಪತ್ರಗಳಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ಸುಮಾರು 1.73 ಕೋಟಿ ರೂಪಾಯಿ ವಂಚನೆ ನಡೆದಿರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಖರ್ಚುಗಳನ್ನು ತಪ್ಪಾಗಿ ತೋರಿಸಿರುವುದು ಗಮನಕ್ಕೆ ಬಂದಿದೆ. ವಾಟರ್‌ಮ್ಯಾನ್‌ಗೆ ಅನಗತ್ಯವಾಗಿ 2 ಲಕ್ಷ ರೂಪಾಯಿ ನೀಡಲಾಗಿದೆ ಎಂದು ದಾಖಲಾಗಿದೆ. ಜೊತೆಗೆ, ಆಡಿಟ್ ವೆಚ್ಚವನ್ನು ಒಂದು ವರ್ಷ 35 ಲಕ್ಷ ರೂಪಾಯಿ, ಮತ್ತೊಂದು ವರ್ಷ 24 ಲಕ್ಷ ರೂಪಾಯಿ ಎಂದು ತೋರಿಸಿರುವುದೂ ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದಲ್ಲದೆ, ಅಸೋಸಿಯೇಷನ್ ಹಣವನ್ನು ಆರೋಪಿಗಳು ತಮ್ಮ ಕುಟುಂಬದ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಹೆಂಡತಿ ಹಾಗೂ ಮನೆ ಕೆಲಸದವರ ಬ್ಯಾಂಕ್ ಖಾತೆಗಳಿಗೂ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬಾಗಲಗುಂಟೆ ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಹಿನ್ನೆಲೆ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ಇಷ್ಟು ದೊಡ್ಡ ಪ್ರಮಾಣದ ವಂಚನೆ ಆರೋಪ ಕೇಳಿಬಂದಿರುವುದು ನಿವಾಸಿಗಳಲ್ಲಿ ಆತಂಕ ಮತ್ತು ಅಸಮಾಧಾನ ಉಂಟುಮಾಡಿದೆ.

ಕನವಳ್ಳಿಯಲ್ಲಿ ಭೀಕರ ಅಗ್ನಿ ಅವಘಡ: ದನದ ಕೊಟ್ಟಿಗೆಗೆ ಬೆಂಕಿ, 10ಕ್ಕೂ ಹೆಚ್ಚು ಎಮ್ಮೆಗಳು ಸಜೀವ ದಹನ!

ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ದನದ ಕೊಟ್ಟಿಗೆಯಲ್ಲಿ ಇದ್ದ 10ಕ್ಕೂ ಹೆಚ್ಚು ಎಮ್ಮೆಗಳು ಸಜೀವವಾಗಿ ದಹನಗೊಂಡ ದುರ್ಘಟನೆ ನಡೆದಿದೆ.

ಗ್ರಾಮದ ರೈತ ಪರಮೇಶ ಜಾಡರ್ ಅವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಬೆಂಕಿ ತೀವ್ರತೆಯಿಂದ ಎಮ್ಮೆಗಳು ಹೊರಬರಲು ಸಾಧ್ಯವಾಗದೇ ಸಜೀವವಾಗಿ ಸುಟ್ಟು ಕರಕಲಾಗಿವೆ.

ಘಟನೆಯಲ್ಲಿ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಎಮ್ಮೆಗಳು ಹಾಗೂ ದನದ ಕೊಟ್ಟಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಕೊನೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಇನ್ನಷ್ಟು ಹಾನಿ ತಪ್ಪಿಸಲಾಗಿದೆ.

ಇದೇ ಕನವಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಐದು ಬಾರಿ ಇಂತಹ ಬೆಂಕಿ ಅವಘಡಗಳು ಸಂಭವಿಸಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದರಿಂದ ಕಿಡಿಗೇಡಿಗಳ ಸಂಚು ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಘಟನೆಯ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳನ್ನು ಶೀಘ್ರ ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Crime News: ಇಬ್ಬರ ಮಕ್ಕಳ ತಾಯಿಗೆ ಡ್ರ್ಯಾಗರ್ ಇರಿದು ಕೊಲೆಗೈದ ಆರೋಪಿ ಅರೆಸ್ಟ್!

ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ಇಬ್ಬರು ಮಕ್ಕಳ ತಾಯಿಯನ್ನು ಡ್ರ್ಯಾಗರ್ ನಿಂದ ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ ಫೀರ್ದೋಸ್ ಬಾನು ಎಂಬ ಮಹಿಳೆಯನ್ನು ಹಫೀಜ್ ಎಂಬ ಯುವಕ ಹತ್ಯೆಗೈದಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ತನಿಖೆ ವೇಳೆ, ಮಹಿಳೆ ಮತ್ತು ಆರೋಪಿಯ ನಡುವೆ ಪರಿಚಯವಿದ್ದು, ಇತ್ತೀಚೆಗೆ ಆಕೆ ಆರೋಪಿಯನ್ನು ದೂರ ಮಾಡಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಫೆಬ್ರವರಿ 28ರಂದು ಇಬ್ಬರ ನಡುವೆ ಗಲಾಟೆಯೂ ನಡೆದಿದ್ದು, ಆ ಸಂದರ್ಭದಲ್ಲಿ ಫೀರ್ದೋಸ್ ಕುಟುಂಬಸ್ಥರು ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಆರೋಪಿಗೆ ಬುದ್ಧಿವಾದ ಹೇಳಿ ಮುಚ್ಚಳಿಕೆ ಬರೆಸಿಕೊಂಡು ರಾಜಿ ಮಾಡಿಸಿದ್ದರು.

ಆದರೆ, ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಫೀರ್ದೋಸ್ ಬಾನು ಅವರನ್ನು ಹಿಂಬಾಲಿಸಿಕೊಂಡು ಬಂದ ಹಫೀಜ್, ಮಾರಕಾಸ್ತ್ರದಿಂದ ಹಲವು ಬಾರಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪಶ್ಚಿಮ ವಲಯ ಡಿಸಿಪಿ ಯತೀಶ್ ಅವರು, ಮೃತ ಮಹಿಳೆ ಮತ್ತು ಆರೋಪಿಗೆ ಪ್ರತ್ಯೇಕವಾಗಿ ಮದುವೆಯಾಗಿದ್ದು, ಮಕ್ಕಳೂ ಇದ್ದಾರೆ ಎಂದು ತಿಳಿಸಿದ್ದಾರೆ. ಆರೋಪಿ ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

error: Content is protected !!