Home Blog Page 4

ಕೊನೆಗೂ ರಿವಿಲ್ ಆಯ್ತು ಜೈಲಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್ ಸೀಕ್ರೆಟ್! 7 ಜನರ ವಿರುದ್ಧ FIR

0

ಆನೇಕಲ್‌: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿ ಹೊರಬಿದ್ದಿದೆ. ಜೈಲಿನೊಳಗೆ ಮೊಬೈಲ್ ಹಾಗೂ ಸಿಮ್‌ ಕಾರ್ಡ್‌ ತಲುಪಲು ನೆರವು ನೀಡಿದ ಆರೋಪದ ಮೇಲೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಜೈಲಿನ ಬ್ಯಾರಕ್‌ನಲ್ಲೇ ಮೊಬೈಲ್ ಬಳಸುತ್ತಿದ್ದ ಆರೋಪ ಕೇಳಿಬಂದಿತ್ತು. ಮೊಬೈಲ್ ಪತ್ತೆಯಾದ ಬಳಿಕ ಪೊಲೀಸರು ಅದರ ಮೂಲ ಹಾಗೂ ಸಿಮ್‌ ಕಾರ್ಡ್‌ನ ವಿವರಗಳನ್ನು ಪರಿಶೀಲಿಸಿದಾಗ ಡಿಜೆ ಹಳ್ಳಿ ಸಂಪರ್ಕ ಪತ್ತೆಯಾಗಿತ್ತು.

ಈ ಪ್ರಕರಣದಲ್ಲಿ ಪ್ರತಾಪ್ ರಾವ್, ತೌಸಿಫ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೇವಣ್ಣಗೆ ಮೊಬೈಲ್ ಸಿಗಲು ಜೈಲು ವಾರ್ಡನ್ ಹಾಗೂ ಕೆ.ಜೆ. ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳಾದ ಸಿದ್ದಿಕ್ ಹಾಗೂ ತೌಫಿಕ್‌ ನೆರವು ನೀಡಿದ್ದರು ಎನ್ನಲಾಗಿದೆ.

ಜೈಲಿನಲ್ಲಿ ಪರಿಚಯವಾಗಿದ್ದ ತೌಫಿಕ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಮೊಬೈಲ್ ಖರೀದಿಸಿದ್ದ ಎನ್ನಲಾಗಿದೆ. ಬಳಿಕ ಸಿದ್ದಿಕ್ ಹೆಸರಿನಲ್ಲಿ ಸಿಮ್‌ ಕಾರ್ಡ್‌ ಪಡೆದು ಅದನ್ನು ಜೈಲಿನೊಳಗೆ ಬಳಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಜ್ವಲ್ ರೇವಣ್ಣ ಒಂದು ಮೊಬೈಲ್‌ಗೆ ಸುಮಾರು ₹1 ಲಕ್ಷ ಹಾಗೂ ಸಿಮ್‌ ಕಾರ್ಡ್‌ಗೆ ₹50 ಸಾವಿರ ಪಾವತಿಸಿದ್ದ ಎನ್ನಲಾಗಿದೆ. ಈ ಸಿಮ್‌ ಕಾರ್ಡ್‌ ಅನ್ನು ಆಂಧ್ರಪ್ರದೇಶದ ಪುಂಗನೂರಿನಲ್ಲಿ ಖರೀದಿಸಲಾಗಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಪತ್ತೆಯಾಗಿದೆ.

ಸಿಮ್‌ ಕಾರ್ಡ್‌ನ ಕಾಲ್‌ ಡಿಟೇಲ್ಸ್‌ ಪರಿಶೀಲಿಸಿದಾಗ ಹಲವು ಯುವತಿಯರು ಹಾಗೂ ಕುಟುಂಬಸ್ಥರಿಗೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಯಾರ್ಯಾರೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆಯೂ ಇದೆ.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ತನಿಖೆಯ ವೇಳೆ ಜೈಲಿನಲ್ಲಿ ಸಂಗ್ರಹಿಸಿದ್ದ ಎನ್ನಲಾದ ಸುಮಾರು 173 ಅಶ್ಲೀಲ ವಿಡಿಯೋಗಳು ಕೂಡ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ವಿಡಿಯೋಗಳ ಕುರಿತು ಕೂಡ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನೊಳಗೆ ಮೊಬೈಲ್ ಹೇಗೆ ಪ್ರವೇಶಿಸಿತು, ಯಾರ್ಯಾರು ಸಹಕರಿಸಿದ್ದರು ಹಾಗೂ ಮೊಬೈಲ್ ಬಳಕೆಯ ಸಂದರ್ಭದಲ್ಲಿ ಯಾರೊಂದಿಗೆ ಸಂಪರ್ಕ ಹೊಂದಲಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಸಿನಿಮಾದಂತೆ ಸರ್ಕಾರದ ಸಾಧನೆ ಹೇಳಿಕೊಳ್ಳುತ್ತಿದ್ದಾರೆ, ಆದ್ರೆ ಕೊಟ್ಟಿದ್ದು ಹಗರಣಗಳನ್ನಷ್ಟೇ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

0

ಬೆಂಗಳೂರು: ಒಂದು ಸಿನಿಮಾ ನೂರು ದಿನ ಪೂರೈಸಿದರೆ ಬಾಕ್ಸ್ ಆಫೀಸ್ ಕಲೆಕ್ಷನ್‌ನೊಂದಿಗೆ ಸಂಭ್ರಮಿಸಲಾಗುತ್ತದೆ. ಆದರೆ, ರಾಜ್ಯ ಸರ್ಕಾರದ ಆಡಳಿತದಲ್ಲಿ ಒಂದೇ ಒಂದು ಉತ್ತಮ ಯೋಜನೆ ಕಾಣುತ್ತಿಲ್ಲ. ಬದಲಾಗಿ ಹಗರಣಗಳನ್ನೇ ನೀಡಲಾಗಿದೆ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಸಾಧನೆ ಏನು ಎಂದು ಪ್ರಶ್ನಿಸಿದರು. ‘ಭಾರತ್ ಜೋಡೋ’ ಹೆಸರಿನಲ್ಲಿ ಕಾಂಗ್ರೆಸ್ ಬೂತ್ ಕಮಿಟಿಗಳಿಗೆ ತಲಾ ₹10 ಲಕ್ಷ ನೀಡುವ ಕಾರ್ಯಕ್ರಮ ರೂಪಿಸಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿದ್ದು, ಜನಸಾಮಾನ್ಯರ ತೆರಿಗೆ ಹಣವನ್ನು ಈ ರೀತಿಯಾಗಿ ಬಳಸುವುದು ದೊಡ್ಡ ದ್ರೋಹ ಎಂದು ಆರೋಪಿಸಿದರು.

ಸರ್ಕಾರ ಘೋಷಣೆ ಮಾಡಿ ಶೋಷಣೆ ಮಾಡುವ ರೀತಿಯಲ್ಲಿ ಆಡಳಿತ ನಡೆಸುತ್ತಿದೆ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ಪಾರ್ಕ್‌ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಲು ಸರ್ಕಾರ ಮುಂದಾಗಿತ್ತು. ಆದರೆ, ಬಿಜೆಪಿ ಹಾಗೂ ವಿಪಕ್ಷಗಳ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಮತ್ತು ಸಚಿವರ ‘ವಿಕೆಟ್’ ಬೀಳುವ ಆತಂಕದಿಂದ ಸದನದಲ್ಲಿ ಮಂಜೂರಾಗಿದ್ದ ಮಸೂದೆಯನ್ನೂ ಸರ್ಕಾರ ವಾಪಸ್ ಪಡೆದಿದೆ ಎಂದು ಆರೋಪಿಸಿದರು.

ಬಿಡಿಎ, ಹೌಸಿಂಗ್ ಬೋರ್ಡ್ ಹಾಗೂ ಕೆಐಎಡಿಬಿಯಲ್ಲಿ ಪಾರ್ಕ್‌ಗಳಿಗೆ ಮೀಸಲಾದ ಜಾಗವನ್ನು ಉಳಿಸದೆ, ತಮಗೆ ಇಷ್ಟ ಬಂದಂತೆ ನಿವೇಶನಗಳಾಗಿ ಪರಿವರ್ತಿಸಿ ಹಂಚಿಕೆ ಮಾಡಲಾಗುತ್ತಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದರು.

ಕೆಐಎಡಿಬಿಯಲ್ಲಿ ಪಾರ್ಕ್‌ ಇರುವ ಜಾಗವನ್ನೇ ಲೇಔಟ್ ನಕ್ಷೆಯಲ್ಲಿ ಬದಲಾವಣೆ ಮಾಡಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಚುನಾವಣಾ ದೇಣಿಗೆ ಸಂಗ್ರಹದ ಉದ್ದೇಶದಿಂದ ಖಾತೆಗಳನ್ನು ಬದಲಾಯಿಸಲಾಗುತ್ತಿದೆ ಎಂದು ದೂರಿದ ಅವರು, ಬಿಡಿಎ, ಪವರ್ ಕಾರ್ಪೊರೇಷನ್ ಹಾಗೂ ಕಾರ್ಮಿಕ ಇಲಾಖೆಯಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬದಲು ಗೃಹ ಸಚಿವರು ಆರ್‌ಎಸ್‌ಎಸ್‌ ಅನ್ನು ಟೀಕಿಸುವುದರಲ್ಲೇ ಮಗ್ನರಾಗಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಕೆಲವು ಪೊಲೀಸ್ ಠಾಣೆಗಳು, ಅದರಲ್ಲೂ ವೈಟ್‌ಫೀಲ್ಡ್‌ ಠಾಣೆಯಂತಹ ಠಾಣೆಗಳು ರಿಯಲ್ ಎಸ್ಟೇಟ್ ದಂಧೆಯ ಕೇಂದ್ರಗಳಾಗಿವೆ ಎಂದು ಆರೋಪಿಸಿದ ಅವರು, ಸಿವಿಲ್ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಲ್ಲೇ ಪಂಚಾಯಿತಿ ನಡೆಸುವ ಅಕ್ರಮ ವ್ಯವಸ್ಥೆ ಸೃಷ್ಟಿಯಾಗಿದೆ ಎಂದು ದೂರಿದರು.

ದಲಿತ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿದ್ದರೂ ಗಮನ ಹರಿಸದ ನಾಯಕರಿಗೆ ಕನಿಷ್ಠ ಮೂರು ನಿಮಿಷದ ‘ವಂದೇ ಮಾತರಂ’ ಹಾಡಲು ಕೂಡ ಸಮಯವಿಲ್ಲ ಎಂದು ವ್ಯಂಗ್ಯವಾಡಿದರು. ಈಗಿನ ಗೃಹ ಸಚಿವರನ್ನು ಆರ್‌ಎಸ್‌ಎಸ್‌ ಉಸ್ತುವಾರಿ ಸಚಿವರನ್ನಾಗಿ ಮಾಡಿ, ಬೇರೊಬ್ಬರನ್ನು ಗೃಹ ಸಚಿವರನ್ನಾಗಿ ನೇಮಿಸಬೇಕು ಎಂದು ಅವರು ಆಗ್ರಹಿಸಿದರು.

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

0

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು. ಪಕ್ಷಕ್ಕೆ ನಿಮ್ಮಂತಹ ಹಿರಿಯ ನಾಯಕರ ಅವಶ್ಯಕತೆ ಇದೆ. ಹೀಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ವಹಿಸಿ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಿದ್ದರಾಮಯ್ಯ ಕೂಡ ಸ್ಪಷ್ಟನೆ ನೀಡಿದ್ದು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ಬಗ್ಗೆ ಮಾತನಾಡಿದ್ದೇನೆಯೇ ಹೊರತು, ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವ ಬಗ್ಗೆ ಹೇಳಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಆದರೂ ಇಂತಹ ಹೇಳಿಕೆಗಳನ್ನು ನೀಡದಂತೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರಿಗೆ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದಿದ್ದ ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.

ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಕಾರ್ಯಕ್ರಮದಲ್ಲೇ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದರು. ಇನ್ನೂ ಸುಮಾರು 10 ವರ್ಷಗಳ ಕಾಲ ರಾಜಕೀಯದಲ್ಲಿ ಇರಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದ್ದರು.

ಬಳಿಕ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರು. ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವ ಹಿನ್ನೆಲೆಯಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.

ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಕಷ್ಟ-ಸುಖಗಳಿಗೆ ಧ್ವನಿಯಾಗಿ ನಿಲ್ಲುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಇದೇ ವೇಳೆ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತಾನು ನಿರ್ಧರಿಸಿರುವುದಾಗಿ ಅವರು ಹೇಳಿದ್ದರು.

ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಹಣ ನೀಡಿ ತಮ್ಮನ್ನು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದರು.

ಹೀಗಾಗಿ 2028ರ ಚುನಾವಣೆಗೆ ಸಂಬಂಧಿಸಿದ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ಕಾಂಗ್ರೆಸ್‌ ವಲಯದಲ್ಲಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದ್ದು, ರಾಹುಲ್ ಗಾಂಧಿ ಅವರ ಸಲಹೆ ಮತ್ತು ಸಿದ್ದರಾಮಯ್ಯ ಅವರ ಸ್ಪಷ್ಟನೆ ರಾಜಕೀಯ ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನವಿಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಪರಮೇಶ್ವರ್, ಸಿದ್ದರಾಮಯ್ಯ ಅವರು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುವುದಾಗಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದಾರೆ. ಅದರಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಚಾರ ಮುಗಿದುಹೋದ ಅಧ್ಯಾಯವಾಗಿದ್ದು, ಇದನ್ನು ಪದೇಪದೇ ಚರ್ಚಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಪ್ರಸ್ತುತ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವುದರಿಂದ ಅವರ ದೆಹಲಿ ಭೇಟಿ ಸಹಜ ಪ್ರಕ್ರಿಯೆಯಾಗಿದೆ. ಈ ಭೇಟಿಗೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು, ಚುನಾವಣೆ ನಡೆಸಬಾರದು ಎಂಬುದು ಕಾಂಗ್ರೆಸ್‌ ಪಕ್ಷದ ನಿರ್ಧಾರವಾಗಿತ್ತು. ಅದರಂತೆ ಕೊನೆಯ ಹಂತದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌. ರವಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ನಿರ್ಣಾಯಕ ಸಭೆಯಲ್ಲಿ ಕೆ.ಎನ್‌. ರಾಜಣ್ಣ ಅವರೂ ಹಾಜರಿದ್ದರು. ಅವರ ಸಮ್ಮತಿಯ ಮೇರೆಗೆ ಅಧ್ಯಕ್ಷರ ಆಯ್ಕೆ ನಡೆದಿದೆ. ಹೀಗಾಗಿ ಈ ವಿಚಾರದಲ್ಲಿ ಯಾವುದೇ ಅಸಮಾಧಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರ ಹುದ್ದೆಯನ್ನು ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರದಡಿ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಮುಂದೆ ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬರದಿದ್ದರೆ ಕೆ.ಎನ್‌. ರಾಜಣ್ಣ ಅವರಿಗೆ ಅಧಿಕಾರ ತಪ್ಪಿದಂತಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅಪೆಕ್ಸ್‌ ಬ್ಯಾಂಕ್‌ ಸ್ವತಂತ್ರ ಹಾಗೂ ಪಕ್ಷಾತೀತ ಸಂಸ್ಥೆಯಾಗಿದೆ ಎಂದು ಹೇಳಿದರು.

ಅದರ ಆಡಳಿತ ಮಂಡಳಿಯ ನಿರ್ದೇಶಕರು ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತಾರೆ. ಹೀಗಾಗಿ ಈ ವಿಚಾರದಲ್ಲಿ ಈಗಲೇ ಯಾವುದೇ ನಿರ್ಧಾರ ಅಥವಾ ಊಹಾಪೋಹಗಳಿಗೆ ಅವಕಾಶವಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

0

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಪಿಕಪ್ ವಾಹನದ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ನಾಗ್ಪುರ-ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಯ ಪಿಂಪಲ್ಗಾಂವ್ ಪ್ರದೇಶದಲ್ಲಿ ಇಂದು (ಸೆಪ್ಟೆಂಬರ್ 11, ಗುರುವಾರ) ಮುಂಜಾನೆ ಈ ಸರಣಿ ದುರಂತ ಸಂಭವಿಸಿದೆ.

ಮೂವರ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು: ಅಪಘಾತದ ಭೀಕರತೆಗೆ ಪಿಕಪ್ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಕೋಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ ಪೊಲೀಸರು: ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ನಿವಾಸಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ವಾಹನದೊಳಗೆ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹರಸಾಹಸ ಪಟ್ಟು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಾಗಾರಕ್ಕೆ ರವಾನಿಸಲಾಗಿದೆ.

ಸಂಚಾರ ಅಡಚಣೆ ಹಾಗೂ ತನಿಖೆ ಆರಂಭ: ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ತಬ್ಧಗೊಂಡು ಅಡಚಣೆ ಉಂಟಾಗಿತ್ತು. ಬಳಿಕ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಭೀಕರ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಆಯಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

0

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಹಾಜರುಪಡಿಸಿ ವಂಚಿಸಲು ಯತ್ನಿಸಿದ ಗಂಭೀರ ಆರೋಪದಡಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಉಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು ಎಂದು ಉಡುಪಿ ಪೊಲೀಸರು ತಿಳಿಸಿದ್ದಾರೆ.

ಪ್ರಶಾಂತ್ ಆಧಾರ್‌ಗೆ ಕೆ.ಟಿ. ಮೊಹಮ್ಮದ್ ಹೆಸರು ನಕಲಿ! ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನೋಮಾನ್ ಎಂಬ ಆರೋಪಿಗೆ ಜಾಮೀನು ನೀಡುವ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಜಾಮೀನುದಾರನಾಗಲು ಮುಂದಾದ ಉಮರ್ ಫಾರೂಕ್, ಪ್ರಶಾಂತ್ ಎಂಬವರ ನೈಜ ಆಧಾರ್ ಕಾರ್ಡ್‌ಗೆ ಕೆ.ಟಿ. ಮೊಹಮ್ಮದ್ ಎಂಬಾತನ ಹೆಸರು ಮತ್ತು ವಿಳಾಸವನ್ನು ನಕಲಿಯಾಗಿ ತಿದ್ದುಪಡಿ ಮಾಡಿ ಸೃಷ್ಟಿಸಿದ್ದನು. ತನ್ನ ಸ್ವಂತ ಲಾಭಕ್ಕಾಗಿ ಮತ್ತೊಬ್ಬ ವ್ಯಕ್ತಿಯಂತೆ ನಟಿಸಿ ಈ ನಕಲಿ ದಾಖಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಂಚಿಸಲು ಯತ್ನಿಸಿದ್ದನು.

ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್: ಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಕೆಯಾದ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಉಡುಪಿ ನಗರ ಠಾಣೆಯ ಪೊಲೀಸರು, ಪ್ರಮುಖ ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಆತನಿಗೆ ಸಹಕರಿಸಿದ ನಿಶಾಂತ್ ಕುಮಾರ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಆದೇಶಿಸಿದೆ.

ಮೊದಲ ವಿವಾಹ ರದ್ದತಿ ತಡೆಯಾಜ್ಞೆ ಇರುವಾಗ 2ನೇ ಪತ್ನಿಗೆ ಜೀವನಾಂಶ ನೀಡಲಾಗದು; ಹೈಕೋರ್ಟ್

0

ಬೆಂಗಳೂರು: ಮೊದಲ ಪತ್ನಿಯೊಂದಿಗೆ ನಡೆದಿದ್ದ ವಿವಾಹ ವಿಚ್ಛೇದನಕ್ಕೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಸಂದರ್ಭದಲ್ಲಿ ನಡೆದ ಎರಡನೇ ವಿವಾಹವನ್ನು ಕಾನೂನುಬದ್ಧ ವಿವಾಹವೆಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಅಂತಹ ಎರಡನೇ ಪತ್ನಿಗೆ ಜೀವನಾಂಶ ಪಡೆಯುವ ಹಕ್ಕು ಇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಎರಡನೇ ಪತ್ನಿಯಾಗಿ ಜೀವನಾಂಶ ನೀಡುವಂತೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಹಿಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ಧಾರವಾಡ ಪೀಠ, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರ ಮಹಿಳೆ ಕನ್ನಡ ತತ್ವಶಾಸ್ತ್ರ ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದು, ಕಾಲೇಜಿನಲ್ಲಿ ಉಪನ್ಯಾಸಕಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಆಕೆ ಅನಕ್ಷರಸ್ಥೆಯಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಿವಾಹಕ್ಕೂ ಮುನ್ನ ಪತಿಯ ಮೊದಲ ವಿವಾಹಕ್ಕೆ ಸಂಬಂಧಿಸಿದ ವಿಚ್ಛೇದನ ಆದೇಶವನ್ನು ಪರಿಶೀಲಿಸಿಯೇ ಮದುವೆಯಾಗಿದ್ದಾಗಿ ಮಹಿಳೆ ಹೇಳಿಕೊಂಡಿದ್ದರು. ಆದರೆ, ಮೊದಲ ಪತ್ನಿಯ ವಿಚ್ಛೇದನ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಬಾಕಿ ಇತ್ತು ಮತ್ತು ಆ ಆದೇಶಕ್ಕೆ ತಡೆಯಾಜ್ಞೆ ಜಾರಿಯಲ್ಲಿತ್ತು ಎಂಬ ವಿಚಾರವನ್ನು ಅರ್ಜಿದಾರರು ಉಲ್ಲೇಖಿಸಿರಲಿಲ್ಲ.

ಹೀಗಾಗಿ ಮೊದಲ ವಿವಾಹದ ವಿಚ್ಛೇದನಕ್ಕೆ ತಡೆಯಾಜ್ಞೆ ಇತ್ತು ಎಂಬ ವಿಷಯ ಅರ್ಜಿದಾರ ಮಹಿಳೆಗೆ ತಿಳಿದಿರಲಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಸುಪ್ರೀಂಕೋರ್ಟ್‌ನ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಮೊದಲ ವಿವಾಹ ಜಾರಿಯಲ್ಲಿರುವ ವಿಷಯವನ್ನು ಮರೆಮಾಚಿ ವಂಚನೆಯಿಂದ ಎರಡನೇ ಮದುವೆಯಾಗಿದ್ದ ಸಂದರ್ಭದಲ್ಲಿ ಮಾತ್ರ ಕೆಲವು ನಿರ್ದಿಷ್ಟ ಪರಿಸ್ಥಿತಿಗಳಲ್ಲಿ ಎರಡನೇ ಪತ್ನಿಗೆ ಜೀವನಾಂಶದ ಹಕ್ಕು ದೊರೆಯಬಹುದು ಎಂದು ಹೇಳಿದೆ.

ಆದರೆ, ಈ ಪ್ರಕರಣದಲ್ಲಿ ಮೊದಲ ಮದುವೆ ಜಾರಿಯಲ್ಲಿರುವ ವಿಚಾರ ಅರ್ಜಿದಾರ ಮಹಿಳೆಗೆ ತಿಳಿದಿತ್ತು ಎಂದು ಪೀಠ ಹೇಳಿದೆ. ಜೊತೆಗೆ, ಹಿಂದೂ ಸಂಪ್ರದಾಯದಂತೆ ವಿವಾಹ ನಡೆದಿತ್ತು ಎಂದು ಮಹಿಳೆ ಹೇಳಿಕೊಂಡಿದ್ದರೂ, ಸಪ್ತಪದಿ ಹಾಗೂ ಪವಿತ್ರ ಅಗ್ನಿಸಾಕ್ಷಿಯಂತಹ ಅಗತ್ಯ ವಿಧಿವಿಧಾನಗಳು ನಡೆದಿಲ್ಲ ಎಂಬುದನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.

ವಿವಾಹದ ವೇಳೆ ಮೊಬೈಲ್‌ನಲ್ಲಿ ಕೆಲವು ಛಾಯಾಚಿತ್ರಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೆ, ಆ ಛಾಯಾಚಿತ್ರಗಳನ್ನು ತೆಗೆದವರು ಯಾರು ಎಂಬುದನ್ನು ಅರ್ಜಿದಾರರು ವಿವರಿಸಿಲ್ಲ ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ

ಪ್ರಕರಣದ ಪ್ರತಿವಾದಿಯಾಗಿರುವ ಪತಿ ಈ ಹಿಂದೆ ಮತ್ತೊಬ್ಬ ಮಹಿಳೆಯನ್ನು ವಿವಾಹವಾಗಿದ್ದರು. ಇಬ್ಬರ ನಡುವೆ ಕೌಟುಂಬಿಕ ಕಲಹ ಉಂಟಾದ ಹಿನ್ನೆಲೆಯಲ್ಲಿ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿತ್ತು.

ಈ ನಡುವೆ ಪತಿ ಮತ್ತೊಂದು ವಿವಾಹಕ್ಕಾಗಿ ಹುಡುಗಿಯನ್ನು ಹುಡುಕುತ್ತಿರುವ ವಿಚಾರ ಅರ್ಜಿದಾರ ಮಹಿಳೆಗೆ ತಿಳಿದಿತ್ತು. ಆಗ ಪತಿ ತಾನು ಈಗಾಗಲೇ ವಿವಾಹವಾಗಿದ್ದು, ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದಿರುವುದಾಗಿ ತಿಳಿಸಿ, ವಿಚ್ಛೇದನ ಆದೇಶದ ಪ್ರತಿಯನ್ನೂ ನೀಡಿದ್ದರು. ಅದನ್ನು ಪರಿಶೀಲಿಸಿದ ಬಳಿಕ ಮಹಿಳೆಯ ಕುಟುಂಬಸ್ಥರು ಎರಡನೇ ವಿವಾಹಕ್ಕೆ ಒಪ್ಪಿಗೆ ನೀಡಿದ್ದರು.

ನಂತರ ಮಹಿಳೆ ಮತ್ತು ಪತಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು. ವಿವಾಹದ ಬಳಿಕ ಸುಮಾರು ಎಂಟು ದಿನಗಳ ಕಾಲ ಪತಿಯ ಮನೆಯಲ್ಲಿ ಇದ್ದ ವೇಳೆ ತನಗೆ ಹಿಂಸೆ ನೀಡಲಾಗುತ್ತಿತ್ತು ಎಂದು ಮಹಿಳೆ ಆರೋಪಿಸಿದ್ದರು. ಮನೆಯಿಂದ ಹೊರಬಂದ ಬಳಿಕ ಜೀವನ ನಿರ್ವಹಣೆಗಾಗಿ ಪತಿಯಿಂದ ಜೀವನಾಂಶ ಕೊಡಿಸುವಂತೆ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು.

ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಪತಿ, ಮೊದಲ ವಿವಾಹದ ವಿಚ್ಛೇದನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಕೌಟುಂಬಿಕ ನ್ಯಾಯಾಲಯದ ವಿಚ್ಛೇದನ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ ಎಂದು ತಿಳಿಸಿದ್ದರು. ಜೊತೆಗೆ, ತಾವು ಅನಾರೋಗ್ಯದಿಂದ ಬಳಲುತ್ತಿದ್ದು ಜೀವನಾಂಶ ನೀಡಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

ಸಾಕ್ಷ್ಯಾಧಾರಗಳು ಹಾಗೂ ಎರಡೂ ಕಡೆಯ ವಾದಗಳನ್ನು ಆಲಿಸಿದ ಕೌಟುಂಬಿಕ ನ್ಯಾಯಾಲಯ, ಮಹಿಳೆ ಸಲ್ಲಿಸಿದ್ದ ಜೀವನಾಂಶದ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಹೈಕೋರ್ಟ್ ಕೂಡ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದ್ದು, ಮೊದಲ ವಿವಾಹದ ವಿಚ್ಛೇದನಕ್ಕೆ ತಡೆಯಾಜ್ಞೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ನಡೆದ ಎರಡನೇ ವಿವಾಹದ ಆಧಾರದ ಮೇಲೆ ಅರ್ಜಿದಾರೆಯನ್ನು ಕಾನೂನುಬದ್ಧ ಪತ್ನಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

KPSC ಪಶುವೈದ್ಯರ ನೇಮಕಾತಿ ಬೆನ್ನಲ್ಲೇ KASನಲ್ಲೂ ಅಕ್ರಮ ಶಂಕೆ: ಅಭ್ಯರ್ಥಿ ಮಮಿತಾ ಮನೆ ಮೇಲೆ ಸಿಐಡಿ ದಿಢೀರ್ ದಾಳಿ!

0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಕೀಯ ಹುದ್ದೆಗಳ ಭಾರಿ ನೇಮಕಾತಿ ಹಗರಣದ ತನಿಖೆ ಕಾವೇರಿರುವ ಬೆನ್ನಲ್ಲೇ, ಇದೀಗ ಪ್ರತಿಷ್ಠಿತ ಕೆಎಎಸ್ (KAS) ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಗಂಭೀರ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ಕೆಎಎಸ್ ಅಭ್ಯರ್ಥಿ ಮಮಿತಾ ಅವರ ಕಲಬುರಗಿಯ ನಿವಾಸದ ಮೇಲೆ ದಿಢೀರ್ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಜೊತೆ ಅಕ್ರಮ ಲಿಂಕ್: 2023-24ನೇ ಸಾಲಿನ ಕೆಎಎಸ್ ಪರೀಕ್ಷೆ ಬರೆದು, ಸಂದರ್ಶನವನ್ನೂ ಮುಗಿಸಿ ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿ ಮಮಿತಾ, ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮೂಲಕ ಅಕ್ರಮ ಮಾರ್ಗದಲ್ಲಿ ಹುದ್ದೆ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಈ ಕುರಿತು ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಹಾಗೂ ಅಭ್ಯರ್ಥಿ ಮಮಿತಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ಆಧಾರದ ಮೇಲೆ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ತಂಡವು, ಕಲಬುರಗಿ ನಗರದ ನ್ಯೂ ಓಝಾ ಲೇಔಟ್‌ನಲ್ಲಿರುವ ಮಮಿತಾ ಅವರ ಮನೆ ಮೇಲೆ ದಾಳಿ ನಡೆಸಿದೆ.

ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳು ಜಫ್ತಿ: ಶೋಧ ಕಾರ್ಯಾಚರಣೆಯ ವೇಳೆ ಕೆಎಎಸ್ ಅಕ್ರಮಕ್ಕೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳು ಹಾಗೂ ಲ್ಯಾಪ್ಟಾಪ್ ಒಂದನ್ನು ಸಿಐಡಿ ಅಧಿಕಾರಿಗಳು ಜಫ್ತಿ ಮಾಡಿದ್ದಾರೆ. ಲ್ಯಾಪ್ಟಾಪ್‌ನಲ್ಲಿರುವ ಡಿಜಿಟಲ್ ಡೇಟಾವನ್ನು ರಿಟ್ರೀವ್ (Retrieve) ಮಾಡಿ ಪರಿಶೀಲಿಸಲು ತಜ್ಞರ ನೆರವು ಪಡೆಯಲಾಗುತ್ತಿದೆ.

ಮಮಿತಾ ಅವರು ಪ್ರಸ್ತುತ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯಾಗಿರುವ ತಮ್ಮ ಸಹೋದರಿ ವಿಜಯಲಕ್ಷ್ಮಿ ಕೋಬಾಳಕರ್ ಅವರೊಂದಿಗೆ ಕಲಬುರಗಿಯಲ್ಲಿ ವಾಸವಿದ್ದಾರೆ. ಸಿಐಡಿ ದಾಳಿ ನಡೆಸಿದ ಸಂದರ್ಭದಲ್ಲಿ ಮಮಿತಾ ಮನೆಯಲ್ಲಿ ಇರಲಿಲ್ಲ, ಸಹೋದರಿ ವಿಜಯಲಕ್ಷ್ಮಿ ಮಾತ್ರ ಹಾಜರಿದ್ದರು ಎಂದು ಮೂಲಗಳು ಖಚಿತಪಡಿಸಿವೆ.

ಇಡಿ ದಾಳಿ ಬೆನ್ನಲ್ಲೇ ಸಿಐಡಿ ತನಿಖೆ ತೀವ್ರ: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಅಕ್ರಮ ಹಣ ವರ್ಗಾವಣೆ (Money Laundering) ನಡೆದಿದೆಯೇ ಎಂಬ ಶಂಕೆಯ ಹಿನ್ನೆಲೆಯಲ್ಲಿ ಆಗಸ್ಟ್ 18ರಂದು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಕೂಡ ಇದೇ ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಇದೀಗ ಸಿಐಡಿ ಅಧಿಕಾರಿಗಳು ಕೂಡ ದಾಳಿ ನಡೆಸಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಕೆಪಿಎಸ್‌ಸಿ ಅಕ್ರಮದ ಜಾಲ ಮತ್ತಷ್ಟು ಬಯಲಾಗುವ ಸಾಧ್ಯತೆಯಿದೆ.

KPSC Scamನಲ್ಲಿ ಮತ್ತೊಂದು ಬಿಗ್ ಟ್ವಿಸ್ಟ್; ಗ್ಯಾನೇಂದ್ರ ಅಕ್ರಮದ ಹಣದಲ್ಲಿ ಗರ್ಲ್ʼಫ್ರೆಂಡ್ʼಗೆ ಚಿನ್ನ, ವಿಲ್ಲಾ ಖರೀದಿ?

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ (CID) ತನಿಖೆ ತೀವ್ರಗೊಂಡಿದ್ದು, ತನಿಖೆ ಮುಂದುವರಿದಂತೆ ಆಘಾತಕಾರಿ ಹಾಗೂ ಸ್ಫೋಟಕ ವಿವರಗಳು ಬಯಲಾಗುತ್ತಿವೆ. ಹಗರಣದ ಪ್ರಮುಖ ಆರೋಪಿಯಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್, ಅಭ್ಯರ್ಥಿಗಳಿಂದ ಅಕ್ರಮವಾಗಿ ವಸೂಲಿ ಮಾಡಿದ ಕೋಟ್ಯಂತರ ರೂಪಾಯಿ ಹಣದಲ್ಲಿ ಐಷಾರಾಮಿ ಜೀವನ ನಡೆಸಿದ್ದು, ಮೋಜು-ಮಸ್ತಿಗೆ ಬಳಸಿಕೊಂಡಿರುವುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿದೆ.

ಗೆಳತಿಗೆ 26 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣ ಗಿಫ್ಟ್: ಬಂಧಿತ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್, ತಮ್ಮ ಅಯೋಧ್ಯೆ ಮೂಲದ ಗರ್ಲ್‌ಫ್ರೆಂಡ್‌ಗೆ ಭಾರಿ ಮೌಲ್ಯದ ಆಭರಣಗಳನ್ನು ಉಡುಗೊರೆಯಾಗಿ ನೀಡಿರುವುದು ಪತ್ತೆಯಾಗಿದೆ. ಬೆಂಗಳೂರಿನ ಡಿಕನ್ಸನ್ ರಸ್ತೆಯಲ್ಲಿರುವ ಪ್ರಸಿದ್ಧ ಜ್ಯುವೆಲ್ಲರಿ ಶಾಪ್‌ಗೆ ಗೆಳತಿಯನ್ನು ಕರೆದುಕೊಂಡು ಹೋಗಿದ್ದ ಗ್ಯಾನೇಂದ್ರ, ಅಲ್ಲಿ ಬರೋಬ್ಬರಿ 26 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಖರೀದಿಸಿ ನೀಡಿದ್ದಾರೆ.

ಬೀದರ್‌ನ ಲಕ್ಷ್ಮಿ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಖಾತೆಯಲ್ಲಿದ್ದ ಬಸವರಾಜ್ ಎಂಬುವವರ ಅಕೌಂಟ್‌ನಿಂದ ಈ ಆಭರಣ ಖರೀದಿಗೆ ಬಿಲ್ ಪಾವತಿಸಲಾಗಿತ್ತು. ಸದ್ಯ ಈ ಬಿಲ್ ಅನ್ನು ಸಿಐಡಿ ಜಫ್ತಿ ಮಾಡಿದ್ದು, ಆಭರಣ ಖರೀದಿಸುತ್ತಿದ್ದ ವೇಳೆ ತೆಗೆದ ಫೋಟೋ ಸಾಕ್ಷ್ಯಗಳೂ ಲಭ್ಯವಾಗಿವೆ. ಅಷ್ಟೇ ಅಲ್ಲದೆ, ಉಡುಗೊರೆ ಪಡೆದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿ ಮಾಡಿದೆ.

ವಿಮಾನ ನಿಲ್ದಾಣ ಸಮೀಪ ಐಷಾರಾಮಿ ವಿಲ್ಲಾ ಖರೀದಿ: ಅಕ್ರಮ ಹಣದ ಮೂಲಕ ಗ್ಯಾನೇಂದ್ರ ಕುಮಾರ್ ತಮ್ಮ ಸಹೋದರ ಕಮಲಾಪತಿ ಹೆಸರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಐಷಾರಾಮಿ ವಿಲ್ಲಾ ಒಂದನ್ನು ಖರೀದಿಸಿದ್ದಾರೆ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ವಿಲ್ಲಾವನ್ನು ಅಕ್ರಮ ಹಣದಿಂದಲೇ ಖರೀದಿಸಲಾಗಿದೆಯೇ ಎಂಬ ಆಯಾಮದಲ್ಲಿ ಸಿಐಡಿ ಅಧಿಕಾರಿಗಳು ತೀವ್ರ ತನಿಖೆ ಮುಂದುವರಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಿ ಡ್ರಿಲ್ ಶುರು: 2024ರ ಫೆಬ್ರವರಿಯಿಂದ 2026ರ ಮಾರ್ಚ್‌ವರೆಗೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ (Exam Controller) ಕರ್ತವ್ಯ ನಿರ್ವಹಿಸಿದ್ದ ಗ್ಯಾನೇಂದ್ರ ಕುಮಾರ್, ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳನ್ನು ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.

ಹೀಗಾಗಿ ಅಕ್ರಮ ಹಣ ವರ್ಗಾವಣೆ (Money Laundering) ಶಂಕೆಯಡಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆಗೆ ಎರಡು ದಿನಗಳ ಕಾಲ ಜೈಲಿನಲ್ಲೇ ಸುದೀರ್ಘ ವಿಚಾರಣೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ಈಗಾಗಲೇ ಗ್ಯಾನೇಂದ್ರ ಅವರ ಮನೆ ಸೇರಿದಂತೆ ಸುಮಾರು 21 ಸ್ಥಳಗಳಲ್ಲಿ ಶೋಧ ಕಾರ್ಯ ಪೂರ್ಣಗೊಳಿಸಿದ್ದಾರೆ.

ಅಣ್ವಸ್ತ್ರ ಸಿಡಿತಲೆಗಳ ಸಂಖ್ಯೆಯಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದ ಭಾರತ!

0

ನವದೆಹಲಿ: ಅಣ್ವಸ್ತ್ರ ಸಿಡಿತಲೆಗಳ ಸಂಖ್ಯೆಯಲ್ಲಿ ಭಾರತವು ಪಾಕಿಸ್ತಾನವನ್ನು ಹಿಂದಿಕ್ಕಿದೆ ಎಂದು ಅಮೆರಿಕ ಮೂಲದ ಫೆಡರೇಶನ್ ಆಫ್ ಅಮೆರಿಕನ್ ಸೈಂಟಿಸ್ಟ್ಸ್ (FAS) ನಡೆಸಿದ ಹೊಸ ಅಧ್ಯಯನ ತಿಳಿಸಿದೆ.

FAS ಪ್ರಕಟಿಸಿರುವ ‘ಭಾರತದ ಪರಮಾಣು ಶಸ್ತ್ರಾಸ್ತ್ರಗಳು-2026’ ಎಂಬ ಲೇಖನದ ಪ್ರಕಾರ, ಭಾರತವು ಅಂದಾಜು 190 ಪರಮಾಣು ಸಿಡಿತಲೆಗಳನ್ನು ಹೊಂದಿದೆ. ಇದು ಪಾಕಿಸ್ತಾನದ ಬಳಿಯಿರುವ ಅಂದಾಜು 170 ಸಿಡಿತಲೆಗಳಿಗಿಂತ ಸುಮಾರು 20ರಷ್ಟು ಹೆಚ್ಚಾಗಿದೆ.

FAS ಪರಮಾಣು ಮಾಹಿತಿ ಯೋಜನೆಯ ನಿರ್ದೇಶಕ ಹ್ಯಾನ್ಸ್ ಕ್ರಿಸ್ಟೆನ್ಸೆನ್ ಅವರ ಪ್ರಕಾರ, ಭಾರತವು ಕಾರ್ಯಾಚರಣೆಗೆ ಸಿದ್ಧವಿರುವ ಉಡಾವಣಾ ವ್ಯವಸ್ಥೆಗಳಿಗಾಗಿ 160ಕ್ಕೂ ಹೆಚ್ಚು ಸಿಡಿತಲೆಗಳನ್ನು ಹೊಂದಿದೆ. ಇದರ ಜೊತೆಗೆ ಉತ್ಪಾದನೆಯ ಹಂತದಲ್ಲಿರುವ ಹೊಸ ಕ್ಷಿಪಣಿ ವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಸಿಡಿತಲೆಗಳನ್ನೂ ಭಾರತ ಹೊಂದಿದೆ ಎಂದು ವರದಿ ತಿಳಿಸಿದೆ.

ಹೊಸ ತಲೆಮಾರಿನ ಪರಮಾಣು ಸಾಮರ್ಥ್ಯದ ಕ್ಷಿಪಣಿ ವ್ಯವಸ್ಥೆಗಳನ್ನು ಭಾರತ ಅಭಿವೃದ್ಧಿಪಡಿಸುತ್ತಿದ್ದು, ತನ್ನ ಪರಮಾಣು ಶಸ್ತ್ರಾಸ್ತ್ರಗಳ ದಾಸ್ತಾನನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂದು ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ.

ವರದಿ ಪ್ರಕಾರ, 2023ರ ವೇಳೆಯಲ್ಲೇ ಭಾರತವು ಅಣ್ವಸ್ತ್ರ ಸಿಡಿತಲೆಗಳ ಸಂಖ್ಯೆಯಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿತ್ತು. ಸದ್ಯ ಪಾಕಿಸ್ತಾನದ ಬಳಿ ಸುಮಾರು 170 ಪರಮಾಣು ಸಿಡಿತಲೆಗಳಿವೆ ಎಂದು ಅಂದಾಜಿಸಲಾಗಿದೆ.

ಯಾವ ದೇಶದಲ್ಲಿ ಎಷ್ಟು ಅಣ್ವಸ್ತ್ರ?

  • ರಷ್ಯಾ: 5,420
  • ಅಮೆರಿಕಾ: 5,042
  • ಚೀನಾ: 620
  • ಫ್ರಾನ್ಸ್: 370
  • ಯುನೈಟೆಡ್ ಕಿಂಗ್‌ಡಮ್: 225
  • ಭಾರತ: 190
  • ಪಾಕಿಸ್ತಾನ: 170
  • ಇಸ್ರೇಲ್: 90
  • ಉತ್ತರ ಕೊರಿಯಾ: 60

ಈ ಅಂಕಿಅಂಶಗಳು FAS ಅಧ್ಯಯನದ ಅಂದಾಜುಗಳಾಗಿದ್ದು, ಪರಮಾಣು ಶಸ್ತ್ರಾಸ್ತ್ರಗಳ ನಿಖರ ದಾಸ್ತಾನುಗಳ ಬಗ್ಗೆ ದೇಶಗಳು ಅಧಿಕೃತವಾಗಿ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ.