ಬೆಂಗಳೂರು: ಎಸ್ಐಆರ್ ಪ್ರಕ್ರಿಯೆ ನಡುವೆ ನಟ ಪ್ರಕಾಶ್ ರೈ ಅವರ ಮತದಾರರ ಪಟ್ಟಿಯಲ್ಲಿನ ಹೆಸರು ಡಿಲೀಟ್ ಆಗಿರುವ ವಿಚಾರ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಿಂದ ಎಸ್ಐಆರ್ ಅಡಿಯಲ್ಲಿ ಡಿಲೀಟ್ ಆಗಿರುವ 65 ಲಕ್ಷ ಮತದಾರರಲ್ಲಿ ತಾನೂ ಒಬ್ಬ ಎಂದು ಹೇಳಿಕೊಂಡಿರುವ ಪ್ರಕಾಶ್ ರೈ, ತಮ್ಮ ಹುಟ್ಟೂರು ಹಾಗೂ ಬೆಳೆದ ಕ್ಷೇತ್ರದಿಂದಲೇ ಮತದಾನದ ಹಕ್ಕು ಕಳೆದುಕೊಂಡಿರುವುದಾಗಿ ಇನ್ಸ್ಟಾಗ್ರಾಂ ವಿಡಿಯೊ ಮೂಲಕ ತಿಳಿಸಿದ್ದಾರೆ.
2024ರಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ನಲ್ಲಿ ಮತ ಚಲಾಯಿಸಿದ್ದಾಗಿ ಹೇಳಿರುವ ಪ್ರಕಾಶ್ ರೈ, ಇದೇ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದೆ. ಹೀಗಿದ್ದರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ಪ್ರಕಾಶ್ ರೈ ಅವರ ಮತದಾರರ ಪಟ್ಟಿಯಲ್ಲಿನ ಹೆಸರು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಇರುವ ಆರೋಪ ಹೊಸದಲ್ಲ. 2019ರಲ್ಲೇ ಅವರ ವಿರುದ್ಧ ಈ ಸಂಬಂಧ ದೂರು ದಾಖಲಾಗಿತ್ತು. ಬೆಂಗಳೂರಿನ ಶಾಂತಿನಗರದಲ್ಲಿ ಒಂದು, ಚೆನ್ನೈನ ವಲಚೇರಿಯಲ್ಲಿ ಎರಡು ಹಾಗೂ ತೆಲಂಗಾಣದ ಸೆರಿಲಿಂಗಂಪಲ್ಲಿ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದೆ ಎಂದು ಆರೋಪಿಸಲಾಗಿತ್ತು.
ಈ ಪ್ರಕರಣದ ವಿಚಾರಣೆಗೆ ಗೈರಾಗಿದ್ದ ಹಿನ್ನೆಲೆಯಲ್ಲಿ 2025ರಲ್ಲಿ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಬಳಿಕ ಜುಲೈ 10, 2026ರಂದು ಪ್ರಕಾಶ್ ರೈ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ. ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಆರೋಪವೇ ಎಸ್ಐಆರ್ ವೇಳೆ ಅವರ ಮತ ಡಿಲೀಟ್ ಆಗಲು ಕಾರಣವಾಗಿರಬಹುದೇ ಎಂಬ ಚರ್ಚೆ ನಡೆಯುತ್ತಿದೆ.
ಈ ನಡುವೆ ತಮ್ಮ ಮತವನ್ನು ಮರಳಿ ಪಡೆಯಲು ಹೋರಾಟ ನಡೆಸುವುದಾಗಿ ಪ್ರಕಾಶ್ ರೈ ಸ್ಪಷ್ಟಪಡಿಸಿದ್ದಾರೆ. ಎಷ್ಟು ದಾಖಲೆಗಳನ್ನು ನೀಡಬೇಕಾದರೂ ನೀಡುವುದಾಗಿ ಹೇಳಿರುವ ಅವರು, ತಮ್ಮ ಮತವನ್ನು ಡಿಲೀಟ್ ಮಾಡಿರುವ ವಿಚಾರದಲ್ಲಿ ಸುಮ್ಮನೆ ಕೂರುವುದಿಲ್ಲ ಎಂದು ತಿಳಿಸಿದ್ದಾರೆ.

