Home Blog Page 4

ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಅಬ್ಬರ: ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ಹಲವು ಕಡೆಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ನಿನ್ನೆ ಸುರಿದ ಗಾಳಿ–ಮಳೆಗೆ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ತೆಂಗಿನಮರವೊಂದು ಅಂಗನವಾಡಿ ಶಿಕ್ಷಕಿ ಗೌರಮ್ಮ ಅವರ ಮನೆಯ ಮೇಲೆ ಉರುಳಿಬಿದ್ದಿದೆ. ಘಟನೆಯ ರಭಸಕ್ಕೆ ಮನೆಯ ಮೇಲ್ಚಾವಣಿಯ ಹೆಂಚುಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, ಕಟ್ಟಡಕ್ಕೂ ಹಾನಿ ಉಂಟಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಇದೇ ವೇಳೆ ಬಣಕಲ್ ಮತ್ತು ಮತ್ತಿಕಟ್ಟಿ ಗ್ರಾಮಗಳ ನಡುವಿನ ರಸ್ತೆಯಲ್ಲಿ ವಿದ್ಯುತ್ ಕಂಬ ಅಡ್ಡಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಪರದಾಡುವಂತಾಗಿದೆ. ಹಲವೆಡೆ ತೋಟಗಳ ಬೆಳೆಗಳಿಗೆ ಹಾನಿಯಾಗುವ ಆತಂಕವೂ ವ್ಯಕ್ತವಾಗಿದೆ.

ಇನ್ನು ಚಿತ್ರದುರ್ಗದ ಕೆಲವು ಭಾಗಗಳಲ್ಲಿಯೂ ಮಳೆಯ ಅಬ್ಬರದಿಂದ ಹಾನಿ ಸಂಭವಿಸಿರುವ ವರದಿಗಳು ಬಂದಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಬಂಜರು ಭೂಮಿಯಲ್ಲಿ ಚಿನ್ನದ ಹಣ್ಣು: ಇಂಡಿಯಲ್ಲಿ ದಾಖಲೆ ಬೆಲೆಗೆ ಮಾವು ಮಾರಾಟ!

ವಿಜಯಪುರ: ಜಿಲ್ಲೆಯಲ್ಲೇ ಅಚ್ಚರಿ ಮೂಡಿಸುವ ಘಟನೆ ನಡೆದಿದೆ. ಸಾಮಾನ್ಯವಾಗಿ 500 ರೂ.ಯಿಂದ 2000 ರೂ.ವರೆಗೆ ಮಾರಾಟವಾಗುವ ಮಾವಿನ ಹಣ್ಣು, ಇಲ್ಲಿನ ಇಂಡಿ ಪಟ್ಟಣದಲ್ಲಿ ಬರೋಬ್ಬರಿ ₹1 ಲಕ್ಷಕ್ಕೆ ಮಾರಾಟವಾಗಿದೆ.

ಅನಂತ ಹಾಗೂ ರಾಜಶ್ರೀ ದಂಪತಿಗಳ ತೋಟದಲ್ಲಿ ಬೆಳೆದ ಅಪರೂಪದ ಮಿಯಾಝಕಿ ತಳಿಯ ಮಾವು ಈ ದಾಖಲೆಯ ಬೆಲೆಗೆ ಮಾರಾಟವಾಗಿದೆ. ಬಂಜರು ಭೂಮಿಯಲ್ಲೇ ಬೆಳೆದು ಫಲ ನೀಡಿರುವ ಈ ಮಾವಿನ ಗಿಡಗಳು ಈಗ ಹಣ್ಣುಗಳೊಂದಿಗೆ ಎಲ್ಲರ ಗಮನ ಸೆಳೆದಿವೆ.

ಸುಮಾರು 20 ವರ್ಷಗಳ ಹಿಂದೆ ಆಂಧ್ರಪ್ರದೇಶದ ರಾಜಮಂಡ್ರಿಯಿಂದ ತಲಾ ₹10 ಸಾವಿರಕ್ಕೆ 25 ಮಿಯಾಝಕಿ ಸಸಿಗಳನ್ನು ತಂದು ನೆಟ್ಟಿದ್ದ ದಂಪತಿ, ಇದೀಗ ಪ್ರತಿಯೊಂದು ಗಿಡದಿಂದ 25 ರಿಂದ 30 ಹಣ್ಣುಗಳನ್ನು ಪಡೆಯುತ್ತಿದ್ದಾರೆ.

ಈ ಅಪರೂಪದ ಮಾವಿನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಕೋಲ್ಕತ್ತಾ ಮತ್ತು ಮುಂಬೈನಿಂದ ದಲ್ಲಾಳಿಗಳು ಸಂಪರ್ಕಿಸಿದ್ದು, ಭಾರಿ ಬೇಡಿಕೆ ವ್ಯಕ್ತವಾಗಿದೆ. ವಿದೇಶಗಳಲ್ಲಿ ಈ ಮಾವಿಗೆ ಕೆಜಿಗೆ ₹2 ರಿಂದ ₹2.5 ಲಕ್ಷದವರೆಗೆ ಬೆಲೆ ಇರುವುದಾಗಿ ತಿಳಿದುಬಂದಿದೆ.

ಮೊದಲ ವರ್ಷದಲ್ಲಿ ದಂಪತಿ ಮನೆಯವರೇ ಹಣ್ಣು ಸವಿದಿದ್ದರು. ಆದರೆ ಈ ಬಾರಿ ಬೆಳೆ ಬಂದ ನಂತರ ಸಾಮಾಜಿಕ ಮಾಧ್ಯಮದ ಮೂಲಕ ಜನರಿಗೆ ಪರಿಚಯವಾದ ಪರಿಣಾಮ, ಹಣ್ಣುಗಳಿಗೆ ಭಾರಿ ಬೇಡಿಕೆ ಬಂದಿದೆ.

ಬಂಜರು ಭೂಮಿಯಲ್ಲೇ ಬೆಳೆದು ಯಶಸ್ಸು ಕಂಡ ಈ ಮಿಯಾಝಕಿ ಮಾವು ಇದೀಗ ವಿಜಯಪುರ ಜಿಲ್ಲೆಯಲ್ಲಿ ಚರ್ಚೆಯ ವಿಷಯವಾಗಿದೆ.

ವಾಂಖೆಡೆಯಲ್ಲಿ ಪಂಜಾಬ್ ಅಬ್ಬರ: ಮುಂಬೈ ವಿರುದ್ಧ 7 ವಿಕೆಟ್ ಭರ್ಜರಿ ಜಯ

0

ಮುಂಬೈ: ಐಪಿಎಲ್ 2026ರ 24ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳಿಂದ ಜಯ ದಾಖಲಿಸಿದೆ.

ಈ ಗೆಲುವಿನೊಂದಿಗೆ ಪಂಜಾಬ್ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮುಂಬೈ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಆರಂಭದಲ್ಲೇ ಮುಂಬೈಗೆ ಆಘಾತ ಎದುರಾಯಿತು. ರಿಕಲ್ಟನ್ ಕೇವಲ 2 ರನ್‌ಗೆ ಔಟಾದರೆ, ಸೂರ್ಯಕುಮಾರ್ ಯಾದವ್ ಗೋಲ್ಡನ್ ಡಕ್‌ಗೆ ವಿಕೆಟ್ ಒಪ್ಪಿಸಿದರು. ಅರ್ಶ್‌ದೀಪ್ ಸಿಂಗ್ ಈ ಎರಡೂ ಪ್ರಮುಖ ವಿಕೆಟ್‌ಗಳನ್ನು ಪಡೆದರು.

ನಂತರ ಕ್ವಿಂಟನ್ ಡಿ ಕಾಕ್ ಹಾಗೂ ನಮನ್ ಧೀರ್ ಉತ್ತಮ ಜೊತೆಯಾಟ ಕಟ್ಟಿದರು. ನಮನ್ ಧೀರ್ 31 ಎಸೆತಗಳಲ್ಲಿ 50 ರನ್ ಗಳಿಸಿದರೆ, ಕ್ವಿಂಟನ್ ಡಿ ಕಾಕ್ ಸ್ಫೋಟಕ ಶತಕ ಸಿಡಿಸಿದರು. ಅವರು 60 ಎಸೆತಗಳಲ್ಲಿ 112 ರನ್‌ಗಳ ಅಮೋಘ ಇನಿಂಗ್ಸ್ ಆಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕ ವಿಫಲವಾದ ಕಾರಣ ಮುಂಬೈ 20 ಓವರ್‌ಗಳಲ್ಲಿ 195 ರನ್‌ಗಳಿಗೆ ಸೀಮಿತವಾಯಿತು.

196 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್‌ಗೆ ಪ್ರಾರಂಭಿಕ ಜೋಡಿ ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಉತ್ತಮ ಆರಂಭ ನೀಡಿದರು. ಆರ್ಯ 15 ರನ್‌ಗೆ ಔಟಾದರೂ, ಪ್ರಭ್ಸಿಮ್ರಾನ್ ಸಿಂಗ್ ಅಜೇಯ 80 ರನ್‌ಗಳ ಭರ್ಜರಿ ಆಟವಾಡಿದರು. ನಾಯಕ ಶ್ರೇಯಸ್ ಅಯ್ಯರ್ ಜೊತೆಗೂಡಿ 66 ರನ್‌ಗಳ ಮಹತ್ವದ ಜೊತೆಯಾಟ ಕಟ್ಟಿದರು.

ಪಂಜಾಬ್ ತಂಡ 21 ಎಸೆತಗಳು ಬಾಕಿ ಇರುವಂತೆಯೇ ಗುರಿ ತಲುಪಿ ಗೆಲುವು ದಾಖಲಿಸಿತು. ಇತ್ತ ಮುಂಬೈ ಬೌಲಿಂಗ್ ವಿಭಾಗ ಸಂಪೂರ್ಣವಾಗಿ ಪರಿಣಾಮಕಾರಿತ್ವ ಕಳೆದುಕೊಂಡಿತು. ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯಲು ವಿಫಲರಾದರು.

ಈ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ ಆಡಿದ 5 ಪಂದ್ಯಗಳಲ್ಲಿ 4 ಸೋಲುಗಳೊಂದಿಗೆ 9ನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ಕಿಂಗ್ಸ್ ತನ್ನ ಅಜೇಯ ಓಟ ಮುಂದುವರೆಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಚಿನ್ನಸ್ವಾಮಿ ಟಿಕೆಟ್ ಹಗರಣ ಬಯಲು: KSCA ಸದಸ್ಯನಿಂದ ಬೃಹತ್ ಬ್ಲಾಕ್ ಮಾರ್ಕೆಟ್ ಜಾಲ!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್‌ಗಳ ಬ್ಲಾಕ್ ಮಾರ್ಕೆಟ್ ಮಾರಾಟದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

ಕೆಎಸ್‌ಸಿಎ ಸದಸ್ಯರೊಬ್ಬರು ಹಾಗೂ ಹೋಟೆಲ್ ಕ್ಯಾಪ್ಟನ್ ಸೇರಿ ಈ ಅಕ್ರಮ ದಂಧೆ ನಡೆಸುತ್ತಿದ್ದರೆಂಬುದು ವಿಚಾರಣೆಯಲ್ಲಿ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಕ್ಷ್ಮೀ ಕ್ಯಾಟರ್ಸ್ ಹೋಟೆಲ್‌ನ ಕ್ಯಾಪ್ಟನ್ ಚಂದ್ರಶೇಖರ್ ಬಂಧಿತನಾಗಿದ್ದಾನೆ. ಈತ ₹15,000 ಮೌಲ್ಯದ ಟಿಕೆಟ್‌ಗಳನ್ನು ₹19,000ಕ್ಕೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಲಾಗಿದೆ.

ವಿಚಾರಣೆ ವೇಳೆ ನೀಡಿದ ಮಾಹಿತಿಯ ಆಧಾರದಲ್ಲಿ ಕೆಎಸ್‌ಸಿಎ ಸದಸ್ಯ ಗಣೇಶ್ ಹರಿಕೇಶ್ ಈ ದಂಧೆಯ ಪ್ರಮುಖ ಪಾತ್ರಧಾರಿ ಎಂಬುದು ಬೆಳಕಿಗೆ ಬಂದಿದೆ. ಈತ ಎರಡು ಖಾಸಗಿ ಕಂಪನಿಗಳ ಹೆಸರಿನಲ್ಲಿ ಆನ್‌ಲೈನ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್‌ಗಳನ್ನು ಖರೀದಿಸಿ, ನಂತರ ಅವುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಆರ್‌ಸಿಬಿಯ ಮೊದಲ ಪಂದ್ಯದಲ್ಲಿ 81 ಟಿಕೆಟ್‌ಗಳು ಹಾಗೂ ನಂತರದ ಪಂದ್ಯಕ್ಕೆ 100 ಟಿಕೆಟ್‌ಗಳನ್ನು ಸೇರಿಸಿ ಒಟ್ಟಾರೆ 181 ಟಿಕೆಟ್‌ಗಳ ಅಕ್ರಮ ವ್ಯವಹಾರ ನಡೆದಿರುವುದು ಪತ್ತೆಯಾಗಿದೆ. ಸುಮಾರು ₹17 ಲಕ್ಷಕ್ಕೂ ಅಧಿಕ ಮೌಲ್ಯದ ವ್ಯವಹಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧನದ ಬಳಿಕ ಚಂದ್ರಶೇಖರ್ ನೀಡಿದ ಮಾಹಿತಿಯಂತೆ ಗಣೇಶ್ ಹರಿಕೇಶ್ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಟಿಕೆಟ್ ಪೂರೈಕೆ ಮಾಡಿದ ಖಾಸಗಿ ಕಂಪನಿಗಳಿಗೆ ನೋಟಿಸ್ ನೀಡುವ ಸಿದ್ಧತೆಯೂ ನಡೆಯುತ್ತಿದೆ.

ರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಹೆಸರಘಟ್ಟ ಪೌಲ್ಟ್ರಿ ಫಾರಂನಲ್ಲಿ H5N1 ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರ ಆತಂಕ ಹೆಚ್ಚಾಗಿದೆ. H5N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕನ್ ಪ್ರಿಯರಲ್ಲಿ ಆತಂಕ ಮೂಡಿದೆ.

ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಿದ ಪ್ರಾಥಮಿಕ ತಪಾಸಣೆಯಲ್ಲಿ H5N1 ವೈರಸ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಪೌಲ್ಟ್ರಿ ಫಾರಂನಲ್ಲಿ ಇದ್ದ ಕೋಳಿಗಳನ್ನು ಗುಂಡಿ ತೆಗೆದು ಮುಚ್ಚಲಾಗಿದೆ.

ಈ ಪೌಲ್ಟ್ರಿ ಫಾರಂನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಮಾಡಲಾಗುತ್ತಿತ್ತು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕ್ರಮ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಪಂಚಾಯಿತಿಗಳಿಗೆ ನೋಟಿಸ್ ನೀಡಲಾಗಿದ್ದು, ಕೋಳಿ ಸಾಕಾಣೆ ಶೆಡ್‌ಗಳು ಹಾಗೂ ಕೋಳಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.

ಕೋಳಿ ಸಾಕಾಣೆಗಾರರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಪಶು ವೈದ್ಯಾಧಿಕಾರಿಗಳು ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಸದ್ಯ ಕೇಂದ್ರ ಸರ್ಕಾರದಿಂದ ಬಂದ ಮಾಹಿತಿಯ ಆಧಾರದಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.

ಡಿಜಿ-ಐಜಿಪಿ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ: 2027ರವರೆಗೆ ಅಧಿಕಾರ ಮುಂದುವರಿಕೆ!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರವಾಗಿ, ರಾಜ್ಯ ಪೊಲೀಸ್ ಮುಖ್ಯಸ್ಥ ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಹೊಸ ಆದೇಶದಂತೆ, ಅವರ ಅಧಿಕಾರಾವಧಿ 2027ರ ಅಕ್ಟೋಬರ್ 29ರವರೆಗೆ ಮುಂದುವರಿಯಲಿದೆ.

1993ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಡಾ. ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕಗೊಂಡಿದ್ದರು. ಬಳಿಕ 2025ರ ಆಗಸ್ಟ್‌ನಲ್ಲಿ ಪೂರ್ಣಾವಧಿಗೆ ನೇಮಕಗೊಂಡ ಅವರು, ಮೂಲತಃ ಈ ವರ್ಷದ ಜೂನ್‌ನಲ್ಲಿ ನಿವೃತ್ತಿಯಾಗಬೇಕಿತ್ತು. ಆದರೆ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಸೇವಾವಧಿಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

2006ರ ಸೆಪ್ಟೆಂಬರ್ 22ರಂದು ಹೊರಬಂದ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕನಿಷ್ಠ ಎರಡು ವರ್ಷಗಳ ಅಧಿಕಾರಾವಧಿ ನೀಡುವುದು ಕಡ್ಡಾಯ. ಪ್ರಕಾಶ್ ಸಿಂಗ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ, ಡಾ. ಎಂ.ಎ.ಸಲೀಂ ಅವರ ಅವಧಿಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಲಾಗಿದೆ.

ಸೇವಾ ಅವಧಿಯಲ್ಲಿ ಡಾ. ಎಂ.ಎ.ಸಲೀಂ ಅವರು ಹಲವು ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡಿದ್ದು, ಕಲಬುರಗಿ ಹಾಗೂ ಕುಶಾಲನಗರದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಡಿಜಿಪಿಯಾಗಿ ಅಧಿಕಾರ ಸ್ವೀಕರಿಸುವ ಮೊದಲು ಸಿಐಡಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಸಂಚಾರ ಸುಧಾರಣೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಜಾರಿಗೆ ತಂದು ಜನಪ್ರಿಯತೆ ಗಳಿಸಿದ್ದರು.

ಮದ್ಯಪಾನ ಮಧ್ಯೆ ಉತ್ತರ ಪತ್ರಿಕೆ ಮೌಲ್ಯಮಾಪನ: ಲಾತೂರ್ ಶಿಕ್ಷಕನ ವಿರುದ್ಧ ಆಕ್ರೋಶ!

0

ನವದೆಹಲಿ: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಣ ಕ್ಷೇತ್ರದ ನೈತಿಕತೆಗೆ ಗಂಭೀರ ಪ್ರಶ್ನೆ ಎಬ್ಬಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಅವರು ಮದ್ಯಪಾನ ಮಾಡುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ದೃಶ್ಯಗಳಲ್ಲಿ, ಶಿಕ್ಷಕನು ಸ್ನೇಹಿತರೊಂದಿಗೆ ಕುಳಿತು ಸಿಗರೇಟ್ ಸೇದುತ್ತಾ, ಪಕ್ಕದಲ್ಲೇ ಮದ್ಯದ ಬಾಟಲಿ ಇಟ್ಟುಕೊಂಡು ಪರೀಕ್ಷಾ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಶಿಕ್ಷಣದಂತಹ ಜವಾಬ್ದಾರಿಯುತ ಕ್ಷೇತ್ರದಲ್ಲಿ ಇಂತಹ ವರ್ತನೆ ತೀವ್ರ ಟೀಕೆಗೆ ಗುರಿಯಾಗಿದೆ.

ಈ ಘಟನೆ ಪೋಷಕರು ಮತ್ತು ಶಿಕ್ಷಣ ತಜ್ಞರಲ್ಲಿ ಆತಂಕ ಹುಟ್ಟುಹಾಕಿದ್ದು, ವಿದ್ಯಾರ್ಥಿಗಳ ಭವಿಷ್ಯ ಮತ್ತು ಮೌಲ್ಯಮಾಪನ ಪ್ರಕ್ರಿಯೆಯ ನಿಷ್ಠೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ರಾಮಾಯಣ ಕಥೆಗೆ ಹೊಸ ತಿರುವು: ಪ್ರಕಾಶ್ ರಾಜ್ ಹೇಳಿಕೆ ತೀವ್ರ ಆಕ್ರೋಶ, ಕಾನೂನು ಸಂಕಷ್ಟ!

ಪ್ರಚೋದನಾತ್ಮಕ ಹೇಳಿಕೆಗಳ ಮೂಲಕ ನಿರಂತರವಾಗಿ ಸುದ್ದಿಯಲ್ಲಿರುವ ಪ್ರಕಾಶ್‌ ರಾಜ್‌ ಇದೀಗ ಮತ್ತೊಮ್ಮೆ ಕಾನೂನು ವಿವಾದಕ್ಕೆ ಸಿಲುಕಿರುವಂತೆ ಕಾಣುತ್ತಿದೆ. ರಾಮಾಯಣದ ಕಥನವನ್ನು ವಿಭಿನ್ನ ದೃಷ್ಟಿಕೋನದಿಂದ ವಿವರಿಸಿದ ಅವರ ಮಾತುಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರತಿಕ್ರಿಯೆ ಹುಟ್ಟುಹಾಕಿವೆ.

ವೇದಿಕೆ ಮೇಲಿನ ಭಾಷಣದಲ್ಲಿ, ಅವರು ರಾಮ ಮತ್ತು ರಾವಣರನ್ನು ಪ್ರಾದೇಶಿಕವಾಗಿ ವಿಭಜಿಸಿ ಹೇಳಿಕೆ ನೀಡಿರುವುದು ವಿವಾದದ ಮೂಲವಾಗಿದೆ. ದಕ್ಷಿಣ ಭಾರತದ ಸಂಸ್ಕೃತಿ ಮತ್ತು ಭಾಷಾ ವಿಚಾರವನ್ನು ಉಲ್ಲೇಖಿಸಿ, ಉತ್ತರ ಭಾರತದ ಪ್ರಭಾವದ ವಿರುದ್ಧ ತಮ್ಮ ಅಭಿಪ್ರಾಯವನ್ನು ತೀವ್ರವಾಗಿ ವ್ಯಕ್ತಪಡಿಸಿದ್ದಾರೆ.

ಪ್ರಕಾಶ್ ರಾಜ್ ಹೇಳಿದ್ದೇನು?

ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ ಲಕ್ಷ್ಮಣನಿಗೆ ಹಸಿವಾಗಿರುತ್ತದೆ. ಅಲ್ಲಿ ಹಣ್ಣಿನ ತೋಟ ಒಂದಿರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎನ್ನುತ್ತಾಳೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ’ ಎಂದು ಕಥೆ ಆರಂಭಿಸಿದ್ದಾರೆ ಪ್ರಕಾಶ್ ರಾಜ್.

 ‘ಆ ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ, ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ಮಾಡುತ್ತೇವೆ’ ಎಂದಿದ್ದಾರೆ ಪ್ರಕಾಶ್ ರಾಜ್. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ ಎಂದು ಹೇಳಲಾಗಿದೆ.

ಆಹಾರ ನೀಡುತ್ತಿದ್ದ ಕಾವಾಡಿಗನ ಮೇಲೆ ಕುಮ್ಕಿ ಆನೆ ದಾಳಿ; ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ!

ಹಾಸನ:– ಕಾಡಾನೆ ಸೆರೆ ಕಾರ್ಯಾಚರಣೆಗೆ ದುಬಾರೆ ಸಾಕಾನೆ ಶಿಬಿರದಿಂದ ಬಂದಿದ್ದ ಕುಮ್ಕಿ ಆನೆ ಸುಗ್ರೀವ ಆಹಾರ ನೀಡುತ್ತಿದ್ದ ಕಾವಾಡಿಗನ ಮೇಲೆ ದಾಳಿ ನಡೆಸಿದ ಘಟನೆ ತಾತ್ಕಾಲಿಕ ಸಾಕಾನೆ ಕ್ಯಾಂಪ್‌ನಲ್ಲಿ ನಡೆದಿದೆ.

ಆಹಾರ ನೀಡುತ್ತಿದ್ದ ವೇಳೆ ಆನೆ ಏಕಾಏಕಿ ಕಾವಾಡಿಗ ರಾಜು ಮೇಲೆ ದಾಳಿ ಮಾಡಿ ದಂತದಿಂದ ತಿವಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ರಾಜು ಅವರನ್ನು ತಕ್ಷಣ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬುಧವಾರ ಕಾಡಾನೆ ಸೆರೆ ಕಾರ್ಯಾಚರಣೆಗೆ ಆರು ಸಾಕಾನೆಗಳನ್ನು ನಿಯೋಜಿಸಲಾಗಿತ್ತು. ಸಂಜೆ ವೇಳೆಗೆ ನರಹಂತಕ ಒಂಟಿಕೋರೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಆ ಕಾರ್ಯಾಚರಣೆಯಲ್ಲಿ ಸುಗ್ರೀವ ಪ್ರಮುಖ ಪಾತ್ರವಹಿಸಿತ್ತು. ಆದರೆ ನಂತರ ಆ ಕಾಡಾನೆ ತಪ್ಪಿಸಿಕೊಂಡಿದ್ದು, ಇಂದು ಬೆಳಿಗ್ಗೆ ಮತ್ತೆ ಸೆರೆ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಘಟನೆಯ ನಂತರ ಡಿಸಿಎಫ್ ಸೌರಭ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ.

ಘಟನೆ ಬಳಿಕ ಕುಮ್ಕಿ ಆನೆಗಳಾದ ಸುಗ್ರೀವ ಹಾಗೂ ಲಕ್ಷ್ಮಣರನ್ನು ದುಬಾರೆ ಶಿಬಿರಕ್ಕೆ ವಾಪಸ್ ಕಳುಹಿಸಲಾಗಿದೆ. ಅವುಗಳ ಬದಲಿಗೆ ಬೇರೆ ಎರಡು ಕುಮ್ಕಿ ಆನೆಗಳನ್ನು ನಿಯೋಜಿಸಲು ತೀರ್ಮಾನಿಸಲಾಗಿದ್ದು, ಇಂದಿನ ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನೆಲಮಂಗಲದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ: ಕೊಲೆಯೋ, ಅಸಹಜ ಸಾವೋ? ಪೊಲೀಸರಿಂದ ತನಿಖೆ ಚುರುಕು!

0

ನೆಲಮಂಗಲ: ತಾಲೂಕಿನ ಗಡಿ ಗ್ರಾಮ ಹಳೇ ನಿಜಗಲ್‌ನಲ್ಲಿರುವ ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮೃತ ಮಹಿಳೆಯನ್ನು ತುಮಕೂರು ಮೂಲದ ಯಮುನಾ (35) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಅವರು ಈಗ ಅಸ್ಥಿಪಂಜರ ರೂಪದಲ್ಲಿ ಪತ್ತೆಯಾಗಿದ್ದಾರೆ. ತಲೆಬುರುಡೆ ಹಾಗೂ ಕೈ-ಕಾಲುಗಳ ಕೆಲವು ಮೂಳೆಗಳು ಸ್ಥಳದಲ್ಲಿ ಸಿಕ್ಕಿದ್ದು, ಜೊತೆಗೆ ಮಹಿಳೆಯ ಬ್ಯಾಗ್ ಹಾಗೂ ಐಡಿ ಕಾರ್ಡ್ ಕೂಡ ದೊರೆತಿರುವುದರಿಂದ ಗುರುತು ಪತ್ತೆ ಸಾಧ್ಯವಾಗಿದೆ.

ಯಮುನಾ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಅವರನ್ನು ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಬಳಿಕ ಎಂಟು ವರ್ಷಗಳ ಹಿಂದೆ ರಾಘವೇಂದ್ರ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಅವರು, ಪತಿಯನ್ನು ಬಿಟ್ಟು ಕೆಲ ವರ್ಷ ದೊಡ್ಡಬಳ್ಳಾಪುರದಲ್ಲಿ ಆತನೊಂದಿಗೆ ವಾಸವಿದ್ದರು. ನಂತರ ಎರಡು ವರ್ಷಗಳ ಹಿಂದೆ ಮತ್ತೆ ಪತಿಯ ಮನೆಗೆ ಮರಳಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಮಾರ್ಚ್ 21ರಂದು ಯಮುನಾ ಅವರ ಹುಟ್ಟುಹಬ್ಬ ಇದ್ದು, ಆ ದಿನ ರಾಘವೇಂದ್ರ ಭೇಟಿ ಮಾಡುವಂತೆ ಒತ್ತಾಯಿಸಿದ್ದನೆಂದು ಮಾಹಿತಿ ಲಭ್ಯವಾಗಿದೆ. ಕೆಲಸ ಮುಗಿಸಿ ಆತನನ್ನು ಭೇಟಿಯಾಗಲು ತೆರಳಿದ ನಂತರ ಯಮುನಾ ನಾಪತ್ತೆಯಾಗಿದ್ದರು. ಈ ಕುರಿತು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಅಡಿಕೆ ತೋಟದ ಬಳಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಘವೇಂದ್ರನೇ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಶವವನ್ನು ಅಡಿಕೆ ತೋಟದ ಬಳಿ ಎಸೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!