ಬೆಂಗಳೂರು: ನಗರದಲ್ಲಿ ಪಡಿತರ ಅಕ್ಕಿ ಹಾಗೂ ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಭಾರಿ ಅಕ್ರಮ ಮತ್ತು ಅವ್ಯವಹಾರವನ್ನು ಲೋಕಾಯುಕ್ತ ಪೊಲೀಸರು ಬಯಲಿಗೆಳೆದಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಒಟ್ಟು 27 ಆಹಾರ ಸರಬರಾಜು ನಿಗಮದ ಗೋದಾಮುಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಬೆಂಗಳೂರು ನಗರದ 22 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 5 ಗೋದಾಮುಗಳಲ್ಲಿ ನಡೆದ ಪರಿಶೀಲನೆ ವೇಳೆ ದಾಖಲೆಗಳು ಮತ್ತು ದಾಸ್ತಾನು ಪ್ರಮಾಣದಲ್ಲಿ ಗಂಭೀರ ವ್ಯತ್ಯಾಸಗಳು ಕಂಡುಬಂದಿವೆ. ಹಲವು ಗೋದಾಮುಗಳಲ್ಲಿ ಲೆಕ್ಕಕ್ಕೆ ತಕ್ಕಷ್ಟು ಅಕ್ಕಿ ಮತ್ತು ಆಹಾರ ಧಾನ್ಯಗಳು ಇಲ್ಲದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಶಾಂತಿನಗರ ಗೋದಾಮಿನಲ್ಲಿ ನಡೆದ ಪರಿಶೀಲನೆ ವೇಳೆ ದಾಖಲೆಗಳಲ್ಲಿರುವ ಮಾಹಿತಿಗೂ ದಾಸ್ತಾನಿಗೂ ಯಾವುದೇ ಹೊಂದಾಣಿಕೆ ಇಲ್ಲದಿರುವುದು ಪತ್ತೆಯಾಗಿದೆ. ಸುಮಾರು 50 ಕೆ.ಜಿ. ತೂಕದ 1,130 ಅಕ್ಕಿ ಮೂಟೆಗಳ ಲೆಕ್ಕ ಸಿಗದೆ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.
ಈ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಸಮರ್ಪಕ ಉತ್ತರ ದೊರಕಿಲ್ಲ. ಅಲ್ಲದೆ, ಗೋದಾಮಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐದು ಹಮಾಲಿ ಕಾರ್ಮಿಕರಿಗೆ ಯಾವುದೇ ಜೀವ ವಿಮೆ ಸೌಲಭ್ಯ ಕಲ್ಪಿಸದಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರು ದಕ್ಷಿಣದ ಬೊಬ್ಬನಹಳ್ಳಿ ಗೋದಾಮಿನಲ್ಲಿ ದಾಳಿ ನಡೆಸಿದ ವೇಳೆ ಉಸ್ತುವಾರಿ ಅಧಿಕಾರಿ ಅಚ್ಯುತ್ ಯಾವುದೇ ಮಾಹಿತಿ ನೀಡದೆ ಗೈರುಹಾಜರಾಗಿದ್ದರು. ಸ್ಥಳದಲ್ಲಿದ್ದ ಸಿಬ್ಬಂದಿ ಶಿವಲಿಂಗಯ್ಯ ಕೂಡ ಸ್ವೀಕರಿಸಿದ ಅಕ್ಕಿ ಮೂಟೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಲು ವಿಫಲರಾಗಿದ್ದಾರೆ.
ಇದೇ ವೇಳೆ ನಿಯಮ ಉಲ್ಲಂಘಿಸಿ ಲಾರಿಯೊಂದಕ್ಕೆ 25 ಟನ್ ಅಕ್ಕಿ ಮೂಟೆಗಳನ್ನು ಲೋಡ್ ಮಾಡಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ. ಅಲ್ಲಿನ ಹತ್ತು ಹಮಾಲಿ ಕಾರ್ಮಿಕರಿಗೂ ಜೀವ ವಿಮೆ ಸೌಲಭ್ಯ ಒದಗಿಸದಿರುವುದು ಕಂಡುಬಂದಿದೆ.
ಬಸವನಗುಡಿ ಗೋದಾಮಿನಲ್ಲಿ ಅಧಿಕಾರಿಗಳು ನೀಡಿದ ಲಿಖಿತ ಮಾಹಿತಿಗಿಂತ ಕಡಿಮೆ ಪ್ರಮಾಣದ ಅಕ್ಕಿ ದಾಸ್ತಾನು ಇರುವುದನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
ದಾಳಿಯ ವೇಳೆ ಅಧಿಕಾರಿಗಳ ಬಳಿ ಪತ್ತೆಯಾದ ನಗದು ಹಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಅಥವಾ ಸಮರ್ಪಕ ಸಮಜಾಯಿಷಿ ದೊರೆತಿಲ್ಲ. ಜೊತೆಗೆ ಕಾರ್ಮಿಕರಿಗೆ ಜೀವ ವಿಮೆ, ಇಎಸ್ಐ ಹಾಗೂ ಪಿಎಫ್ ಸೌಲಭ್ಯಗಳನ್ನು ನೀಡದೆ ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ.
ಹನುಮಂತನಗರ ಗೋದಾಮಿನಲ್ಲೂ ಇದೇ ರೀತಿಯ ಅಕ್ರಮ ಪತ್ತೆಯಾಗಿದೆ. ಸರ್ಕಾರಿ ದಾಖಲೆಗಳಲ್ಲಿ ನಮೂದಿಸಲಾಗಿದ್ದ ಅಕ್ಕಿ ಹಾಗೂ ರಾಗಿ ದಾಸ್ತಾನು ಪ್ರಮಾಣ ಮತ್ತು ಗೋದಾಮಿನಲ್ಲಿ ಲಭ್ಯವಿದ್ದ ನೈಜ ದಾಸ್ತಾನು ನಡುವೆ ಭಾರಿ ವ್ಯತ್ಯಾಸ ಕಂಡುಬಂದಿದೆ.
ಈ ಮೂಲಕ ಪಡಿತರ ಧಾನ್ಯಗಳ ದುರುಪಯೋಗ ನಡೆದಿರುವ ಶಂಕೆ ಮತ್ತಷ್ಟು ಬಲಗೊಂಡಿದೆ. ಅಲ್ಲದೆ, ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಹಮಾಲಿ ಕಾರ್ಮಿಕರಿಗೆ ಜೀವ ವಿಮೆ, ಇಎಸ್ಐ ಮತ್ತು ಪಿಎಫ್ ಸೌಲಭ್ಯಗಳನ್ನು ನೀಡದೆ ಶೋಷಣೆ ನಡೆಸಲಾಗುತ್ತಿತ್ತು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ.

