Home Blog Page 4

ವ್ಯಸನದಿಂದ ದೂರವಿದ್ದರೆ ದೇಶದ ಭವಿಷ್ಯ ಭದ್ರ: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಯುವಜನತೆ ಸ್ವಯಂ ಪ್ರೇರಣೆಯಿಂದ ದುಶ್ಚಟಗಳಿಂದ ದೂರವಿದ್ದು, ವ್ಯಸನಮುಕ್ತ ಸಮಾಜ ಹಾಗೂ ನಶಾಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಕರೆ ನೀಡಿದರು.

ಬೆಟಗೇರಿಯ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆದರ್ಶ ಶಿಕ್ಷಣ ಸಮಿತಿಯ ಶ್ರೀ ಡಿ.ಎಸ್. ಕುರ್ತಕೋಟಿ ಮೆಮೋರಿಯಲ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ವ್ಯಸನ ಮುಕ್ತ ದಿನಾಚರಣೆ–2026’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಗಸ್ಟ್ 1ರಂದು ಜನಿಸಿದ ಪರಮಪೂಜ್ಯ ಮಹಾಂತ ಶಿವಯೋಗಿಗಳು 1975ರಿಂದ ಸುಮಾರು 42 ವರ್ಷಗಳ ಕಾಲ ‘ಮಹಾಂತ ಜೋಳಿಗೆ’ ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಸಿಗರೇಟ್, ತಂಬಾಕು, ಮದ್ಯಪಾನದಂತಹ ದುಶ್ಚಟಗಳನ್ನು ತ್ಯಜಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು. ಅವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿವರ್ಷ ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸುತ್ತಿದೆ ಎಂದು ತಿಳಿಸಿದರು.

ಇಂದು ಅನೇಕ ಯುವಕರು ಮದ್ಯಪಾನ, ಧೂಮಪಾನ, ತಂಬಾಕು ಹಾಗೂ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಧೂಮಪಾನ ಶ್ವಾಸಕೋಶ, ಮದ್ಯಪಾನ ಯಕೃತ್ತು ಹಾಗೂ ಮಾದಕ ದ್ರವ್ಯಗಳು ನರಮಂಡಲವನ್ನು ಹಾನಿಗೊಳಿಸಿ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನು ಹಾಳು ಮಾಡುತ್ತಿವೆ ಎಂದು ಹೇಳಿದರು.

ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವಿಜ್ಞಾನ ಸಹ ಪ್ರಾಧ್ಯಾಪಕ ಡಾ. ಫಕೀರಪ್ಪ ಗಾಣಿಗೇರ ಉಪನ್ಯಾಸ ನೀಡಿ, ಮಾದಕ ವ್ಯಸನವು ಕೇವಲ ದುಶ್ಚಟವಲ್ಲ, ಅದು ಮೆದುಳಿನಲ್ಲಿ ಉಂಟಾಗುವ ಜೈವಿಕ ಹಾಗೂ ರಾಸಾಯನಿಕ ಬದಲಾವಣೆಗಳಿಂದ ಉಂಟಾಗುವ ಕಾಯಿಲೆಯಾಗಿದೆ ಎಂದು ವಿವರಿಸಿದರು.

ದೇಶದಲ್ಲಿ ಸುಮಾರು 16 ಕೋಟಿ ಜನರು ಮದ್ಯಪಾನ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದು, 6 ಕೋಟಿ ಜನ ತೀವ್ರ ವ್ಯಸನಕ್ಕೆ ಒಳಗಾಗಿದ್ದಾರೆ. ಗಾಂಜಾ, ಒಪಿಯಾಯ್ಡ್‌ಗಳು ಹಾಗೂ ಇತರ ಮಾದಕ ವಸ್ತುಗಳ ಬಳಕೆಯಿಂದ ಲಕ್ಷಾಂತರ ಜನರು ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇತ್ತೀಚೆಗೆ 10 ರಿಂದ 15 ವರ್ಷದ ಮಕ್ಕಳೂ ವೈಟ್ನರ್, ಪೇಂಟ್ ಥಿನ್ನರ್, ಪೆಟ್ರೋಲ್ ವಾಸನೆ ಸೇರಿದಂತೆ ಅಪಾಯಕಾರಿ ವಸ್ತುಗಳ ಮೂಲಕ ವ್ಯಸನಕ್ಕೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಆರಂಭಿಕ ಹಂತದಲ್ಲಿಯೇ ವ್ಯಸನದ ಲಕ್ಷಣಗಳನ್ನು ಗುರುತಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಕೌನ್ಸೆಲಿಂಗ್ ನೀಡಿದರೆ ಅನೇಕ ಜೀವಗಳನ್ನು ಉಳಿಸಬಹುದು. ಯಾರಿಗಾದರೂ ವ್ಯಸನದ ಸಮಸ್ಯೆ ಇದ್ದರೆ ಸರ್ಕಾರಿ ಉಚಿತ ಸಹಾಯವಾಣಿ ‘ಟೆಲಿ-ಮಾನಸ’ ಮೂಲಕವೂ ನೆರವು ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ. ಗೋಡಕಿಂಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ, ಬೆಟಗೇರಿ ಪೊಲೀಸ್ ಠಾಣೆಯ ಪಿಎಸ್‌ಐ ಲಕ್ಷ್ಮಣ ಅರಿ, ಪ್ರಾಧ್ಯಾಪಕ ಬಾಹುಬಲಿ ಜೈನ, ಕಾಲೇಜಿನ ಪ್ರಾಂಶುಪಾಲ ಆರ್.ಆರ್. ಕುಲಕರ್ಣಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವ್ಯಸನ ಮುಕ್ತ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ರಾಜ್ಯ ಪ್ರಶಸ್ತಿ ವಿಜೇತ ಜನಪದ ಕಲಾವಿದ ವೀರಣ್ಣ ಅಂಗಡಿ ದುಶ್ಚಟಗಳ ದುಷ್ಪರಿಣಾಮ ಕುರಿತು ಸ್ವರಚಿತ ಗೀತೆ ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳಿಂದ ವ್ಯಸನ ವಿರೋಧಿ ಕಿರು ನಾಟಕವೂ ಪ್ರದರ್ಶನಗೊಂಡಿತು.

“ಡ್ರಗ್ಸ್‌ಗೆ ‘ನೋ’ ಹೇಳಿ… ಬದುಕಿಗೆ ‘ಯೆಸ್’ ಹೇಳಿ. ಯುವಜನತೆ ವ್ಯಸನದಿಂದ ದೂರವಿದ್ದಾಗ ಮಾತ್ರ ಆರೋಗ್ಯವಂತ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ.”

– ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

30 ವರ್ಷ ಕಳೆದರೂ ಮೂಲಸೌಲಭ್ಯ ಇಲ್ಲ..!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸುಮಾರು 30 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಲಕ್ಷ್ಮೇಶ್ವರದ ಕರೆಗೋರಿ ಆಶ್ರಯ ಬಡಾವಣೆಯಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪುರಸಭೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ನಿವಾಸಿಗಳು ಶನಿವಾರ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಂಜುನಾಥ ಅಂಗಡಿ ಹಾಗೂ ಆನಂದ ಅಮರಶೆಟ್ಟಿ, ಹಲವು ಬಾರಿ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಡಾವಣೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕೊಳಚೆ ನೀರು ರಸ್ತೆಯಲ್ಲೇ ನಿಂತು ದುರ್ವಾಸನೆ ಹರಡುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಮಳೆಗಾಲದಲ್ಲಿ ಸಂಚಾರ ದುಸ್ತರವಾಗಿದೆ. ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ಲ ಪ್ರತಿಕ್ರಿಯಿಸಿ, ಕರೆಗೋರಿ ಆಶ್ರಯ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ₹48 ಲಕ್ಷ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಿವಾಸಿಗಳ ಮನವಿ ಮೇರೆಗೆ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ಲ ಹಾಗೂ ಲಿಂಬಯ್ಯ ಸ್ವಾಮಿಮಠ ಸ್ಥಳಕ್ಕೆ ಭೇಟಿ ನೀಡಿ ಬಡಾವಣೆಯ ಪರಿಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಯಲ್ಲಿ ನಿಂತಿದ್ದ ಮಳೆ ಹಾಗೂ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ಜೆಸಿಬಿ ಯಂತ್ರದ ಮೂಲಕ ತಾತ್ಕಾಲಿಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಆನಂದ ಅಮರಶೆಟ್ಟಿ, ಮಂಜುನಾಥ ಅಂಗಡಿ, ಶಶಿಕಲಾ ಶೇಖಣ್ಣವರ, ಲಕ್ಷ್ಮಣ ನಾವಿ, ಮಲ್ಲಿಕಾರ್ಜುನ ಕರೆಯುತ್ತಿನ, ಮಂಜು ಸೋಗಿ, ಮಹೇಶ ಶಿರಹಟ್ಟಿ, ಗಂಗಾಧರ ಕರೆಯುತ್ತಿನ, ಬಸವರಾಜ ಅಕ್ಕಿ, ಬಸವರಾಜ ಹುಬ್ಬಳ್ಳಿ, ಗಣೇಶ ಉಮಚಗಿ, ಮಂಜುನಾಥ ಹುದ್ದಾರ, ಅಶೋಕ ಗೊರವರ, ಯಲ್ಲಪ್ಪ ಹಿಮ್ಮಡಿ, ಮಂಜುನಾಥ ದೊಡ್ಡಮನಿ, ಗುರುನಾಥ ಬೇಂದ್ರೆ, ಬಸವರಾಜ ಕನವಳ್ಳಿ, ರವಿ ಹುಬ್ಬಳ್ಳಿ, ವರುಣ ಸೊರಟೂರ, ಆನಂದ ಬೂದಿಹಾಳ ಸೇರಿದಂತೆ ಆಶ್ರಯ ಬಡಾವಣೆಯ ನಿವಾಸಿಗಳು ಪಾಲ್ಗೊಂಡಿದ್ದರು.

“ಮೂಲಸೌಲಭ್ಯಕ್ಕಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ರಸ್ತೆ, ಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.”

– ಪ್ರತಿಭಟನಾನಿರತ ಆಶ್ರಯ ಬಡಾವಣೆಯ ನಿವಾಸಿಗಳು

ವಚನದ ಬೆಳಕಿನಲ್ಲಿ ಬೆಳೆಯಲಿ ಮಕ್ಕಳ ಭವಿಷ್ಯ: ಶಿವಕುಮಾರಗೌಡ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಶರಣ ಸಾಹಿತ್ಯ ಮತ್ತು ವಚನ ಸಾಹಿತ್ಯವು ಮನುಷ್ಯನಿಗೆ ಅರಿವು, ವಿದ್ಯೆ ಹಾಗೂ ಸಂಸ್ಕಾರ ನೀಡಿ ಸನ್ಮಾರ್ಗದಲ್ಲಿ ಬದುಕುವ ಶಕ್ತಿಯನ್ನು ನೀಡುತ್ತದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.

ಗದಗ ತಾಲೂಕಿನ ಹೊಸಳ್ಳಿ ಗ್ರಾಮದ ಬೂದೀಶ್ವರ ಸಂಸ್ಥಾನ ಮಠದಲ್ಲಿ ಶನಿವಾರ ನಡೆದ ಗದಗ ಜಿಲ್ಲಾ ದ್ವಿತೀಯ ಮಕ್ಕಳ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಗ್ರಂಥಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ಕೋಶ ಓದಬೇಕು, ದೇಶ ಸುತ್ತಬೇಕು” ಎಂಬ ಗಾದೆಯಂತೆ ಜಗತ್ತು ಮತ್ತು ಬದುಕಿನ ಅರಿವಿಗೆ ಸಾಹಿತ್ಯದ ಅಧ್ಯಯನ ಅಗತ್ಯ. ಶರಣ ಸಾಹಿತ್ಯವು ಕಣ್ಣಿಲ್ಲದವರಿಗೆ ಕಣ್ಣು, ವಿದ್ಯೆಯಿಲ್ಲದವರಿಗೆ ಅರಿವು ಹಾಗೂ ಬದುಕಿಗೆ ಸ್ಪಷ್ಟ ದಾರಿ ತೋರಿಸುವ ದಿವ್ಯಶಕ್ತಿಯಾಗಿದೆ. ಜಾತಿ-ಮತಗಳ ಭೇದ ಮರೆತು “ಮನುಷ್ಯ ಜಾತಿ ಒಂದೇ” ಎಂಬ ಮೌಲ್ಯವನ್ನು ಮಕ್ಕಳಲ್ಲಿ ಬಿತ್ತಲು ಶರಣ ಸಾಹಿತ್ಯದ ಬೋಧನೆ ಅತ್ಯಗತ್ಯ ಎಂದರು.

ಸಮ್ಮೇಳನದ ಸರ್ವಾಧ್ಯಕ್ಷ ಡಾ. ನಿಂಗು ಸೊಲಗಿ ಮಾತನಾಡಿ, ಬಸವಣ್ಣನವರ ವಚನಗಳು ಹಾಗೂ ಶರಣರ ತತ್ವಗಳು ಸಮಾಜಕ್ಕೆ ಸದಾ ದಾರಿದೀಪವಾಗಿವೆ. ವಚನಗಳ ಆದರ್ಶ ಹಾಗೂ ಶರಣ ಸಂಸ್ಕೃತಿಯನ್ನು ಬಾಲ್ಯದಲ್ಲಿಯೇ ಮಕ್ಕಳಿಗೆ ಪರಿಚಯಿಸಬೇಕು. ಶರಣ ಸಂಸ್ಕೃತಿ ಯಾವುದೇ ಒಂದು ವರ್ಗಕ್ಕೆ ಸೀಮಿತವಲ್ಲ; ಅದು ಸಮಸ್ತ ಮಾನವಕುಲದ ಸಾರ್ವಭೌಮ ಸಂಸ್ಕೃತಿಯಾಗಿದೆ ಎಂದು ಹೇಳಿದರು.

“ಇವ ನಮ್ಮವ” ಎಂಬ ಸಮಾನತೆಯ ಭಾವನೆಯನ್ನು ಮಕ್ಕಳಲ್ಲಿ ಬಿತ್ತಿದಾಗ ಮಾತ್ರ ಆದರ್ಶ ಸಮಾಜ ನಿರ್ಮಾಣ ಸಾಧ್ಯ. ಮೇವುಂಡಿ ಮಲ್ಲಾರಿ ಅವರ ಕಥೆಗಳನ್ನು ಉದಾಹರಿಸಿ, ಮಕ್ಕಳಲ್ಲಿ ನೈಸರ್ಗಿಕ ಕುತೂಹಲ, ಸೃಜನಶೀಲತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ ಎಂದರು.

ಇಂದಿನ ಮಕ್ಕಳು ಪ್ರಕೃತಿಯಿಂದ ದೂರವಾಗುತ್ತಿದ್ದಾರೆ. ಅವರಿಗೆ ಜಾನಪದ ಆಟಗಳು, ಕಥೆಗಳು, ಕಾಯಕ ಹಾಗೂ ದಾಸೋಹ ಸಂಸ್ಕೃತಿಯನ್ನು ಶಿಕ್ಷಣದ ಭಾಗವಾಗಿ ಪರಿಚಯಿಸಬೇಕು. ಕೇವಲ ಪರೀಕ್ಷೆಗಾಗಿ ಓದುವ ಶಿಕ್ಷಣವಲ್ಲ, ಜೀವನದ ಸವಾಲುಗಳನ್ನು ಎದುರಿಸುವ ಜೀವನ ಕೌಶಲಗಳನ್ನು ಕಲಿಸುವುದು ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪಣ್ಣ ಇನಾಮತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಮನಸ್ಸು ಬಿಳಿ ಹಾಳೆಯಂತೆ. ಅವರಲ್ಲಿ ನಾವು ಬಿತ್ತುವ ಮೌಲ್ಯಗಳೇ ಅವರ ಭವಿಷ್ಯ ರೂಪಿಸುತ್ತವೆ. ಪೋಷಕರು ತಮ್ಮ ನಿರೀಕ್ಷೆಗಳ ಒತ್ತಡ ಹೇರದೆ, ಮಕ್ಕಳ ಆಸಕ್ತಿ ಮತ್ತು ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದರು.

ಸಾನಿಧ್ಯ ವಹಿಸಿದ್ದ ಅಭಿನವ ಬೂದೀಶ್ವರ ಮಹಾಸ್ವಾಮೀಜಿ ಮಾತನಾಡಿ, ಇಂದಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಹಾಗೂ ಸಮಯದ ಮೌಲ್ಯವನ್ನು ತಿಳಿಸುವ ಅಗತ್ಯವಿದೆ. ಬಾಲ್ಯ ಮತ್ತು ವಿದ್ಯಾಭ್ಯಾಸದ ಅವಧಿಯನ್ನು ಸದುಪಯೋಗಪಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ. ಶಿವಪ್ಪ ಕುರಿ, ಸುಧಾ ಹುಚ್ಚಣ್ಣವರ, ಶಿವಪ್ರಕಾಶ ಮಹಾಜನಶೆಟ್ಟರ, ಸುಲೋಚನಾ ಐಹೊಳೆ, ಡಿ.ಎಸ್. ತಳವಾರ, ಎಂ.ಕೆ. ಲಮಾಣಿ, ನಂದಾ ಕಪ್ಪತ್ತನವರ, ಬೂದಪ್ಪ ಅಂಗಡಿ, ಬಸವರಾಜ ಕೊಟಗಿ, ಪ್ರಕಾಶ ಅಸುಂಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕೆ.ಎ. ಬಳಿಗೇರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಾನಂದ ಧೂಳಪ್ಪನವರ ಹಾಗೂ ಎಸ್.ಎಂ. ಮರಿಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಡಿ.ಎಸ್. ಬಾಪುರಿ ವಂದಿಸಿದರು.

ಕಾರ್ಯಕ್ರಮದಲ್ಲಿ ಝೀ ವಾಹಿನಿಯ ಸ್ಪರ್ಧಿ, ಗದಗ ಜಿಲ್ಲೆಯ ಪ್ರೀತಮ್ ಕಬ್ಬೇರಹಳ್ಳಿ ಅವರಿಗೆ ‘ಬಾಲ ಶರಣಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚೇತನ ಸೊಲಗಿ ತಮ್ಮ ಗಾಯನದ ಮೂಲಕ ವಿದ್ಯಾರ್ಥಿಗಳ ಗಮನ ಸೆಳೆದರು.

ಶಾಸಕ ಡಾ. ಚಂದ್ರು ಲಮಾಣಿ ಜನ್ಮದಿನ: ರೋಗಿಗಳಿಗೆ ಹಾಲು-ಹಣ್ಣು ವಿತರಣೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ನಗರದ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪ್ಪತ್ತನವರ, ಜಾನು ಲಮಾಣಿ, ಬಸವರಾಜ ವಡವಿ, ನಂದಾ ಪಲ್ಲೇದ, ಗೂಳಪ್ಪ ಕರಿಗಾರ, ಅಕ್ಬರಸಾಬ ಯಾದಗಿರಿ, ರಾಮಣ್ಣ ಕಂಬಳಿ, ವಿಠ್ಠಲ ಭಿಡವೆ, ಶ್ರೀನಿವಾಸ ಬಾರಬಾರ, ಪರಶುರಾಮ ಡೊಂಕಬಳ್ಳಿ, ಮಲ್ಲಿಕಾರ್ಜುನ ಕಬಾಡಿ, ವಿನೋದ ಕಪ್ಪತ್ತನವರ, ವೀರನಗೌಡ ಪಾಟೀಲ, ಸಂಜು ಸೋಗಿನ, ಶಶಿ ಪೂಜಾರ, ಜಗದೀಶ ತೇಲಿ, ಸಂತೋಷ ತೋಡೆಕಾರ, ಲಕ್ಷ್ಮಣ ಲಮಾಣಿ, ಬಸವರಾಜ ಕಲ್ಯಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಇಂದು ವಿವೇಕ ಸ್ಮಾರಕ ಉದ್ಘಾಟನೆ, ರಾಮಕೃಷ್ಣ ಆಶ್ರಮಕ್ಕೂ ಭೇಟಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಅಧಿಕಾರಿಗಳು ಬರಮಾಡಿಕೊಂಡರು.

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಗರದ ಓವಲ್ ಮೈದಾನಕ್ಕೆ ತೆರಳಲಿರುವ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತ ಸ್ವಾಗತ ಕೋರಲಿದ್ದಾರೆ.

ಇಂದು ಪ್ರಧಾನಿ ಮೋದಿ, ಸ್ವಾಮಿ ವಿವೇಕಾನಂದರ ಐತಿಹಾಸಿಕ ಮೈಸೂರು ಭೇಟಿಯ ನೆನಪಿಗಾಗಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಅವರು ಉದ್ಘಾಟಿಸಲಿದ್ದಾರೆ.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಯುವಜನರಲ್ಲಿ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರಕ್ಕೂ ರೂಪ ನೀಡಲಾಗಿದೆ.

ಸ್ಮಾರಕ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ನಗರದಲ್ಲಿರುವ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಆಡಿಟೋರಿಯಂನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 6,000 ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮಕ್ಕಾಗಿ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ.

ಆಂಧ್ರ ಪ್ರದೇಶಕ್ಕೆ ಪ್ರಧಾನಿ ಮೋದಿ ಬಂಪರ್ ಗಿಫ್ಟ್: ₹17,900 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

0

ಅಮರಾವತಿ: ಆಂಧ್ರ ಪ್ರದೇಶದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಹತ್ವದ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ₹17,900 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ, ವಿಜಯನಗರಂ ಜಿಲ್ಲೆಯ ಭೋಗಾಪುರಂನಲ್ಲಿ ನಿರ್ಮಿಸಲಾಗಿರುವ ಅಳ್ಳೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.

ಭೋಗಾಪುರಂನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಈ ಯೋಜನೆಗಳು ‘ಸ್ವರ್ಣ ಆಂಧ್ರ’ ನಿರ್ಮಾಣದ ಗುರಿಗೆ ಮತ್ತಷ್ಟು ವೇಗ ನೀಡಲಿವೆ ಎಂದು ಹೇಳಿದರು. ಅಭಿವೃದ್ಧಿ ಕ್ಷೇತ್ರದಲ್ಲಿ ಆಂಧ್ರ ಪ್ರದೇಶ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ಪ್ರವಾಸದ ಪ್ರಮುಖ ಕಾರ್ಯಕ್ರಮವಾಗಿದ್ದ ಭೋಗಾಪುರಂ ವಿಮಾನ ನಿಲ್ದಾಣವನ್ನು ಸುಮಾರು ₹5,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಆಂಧ್ರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಆದಿವಾಸಿ ನಾಯಕ ಅಳ್ಳೂರಿ ಸೀತಾರಾಮ ರಾಜು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಮೊದಲ ಹಂತದಲ್ಲಿ ಈ ವಿಮಾನ ನಿಲ್ದಾಣವು ವರ್ಷಕ್ಕೆ 60 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದು, ಮುಂದಿನ ದಿನಗಳಲ್ಲಿ ಇದನ್ನು 4 ಕೋಟಿ ಪ್ರಯಾಣಿಕರ ಸಾಮರ್ಥ್ಯಕ್ಕೆ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.

ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಳ್ಳೂರಿ ಸೀತಾರಾಮ ರಾಜು ಅವರು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ ಇದೇ ನೆಲದಲ್ಲಿ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದೆ ಎಂದು ಹೇಳಿದರು.

“ಭೋಗಾಪುರಂ ವಿಮಾನ ನಿಲ್ದಾಣವು ಉತ್ತರ ಆಂಧ್ರದ ಅಭಿವೃದ್ಧಿಗೆ ಹೊಸ ರನ್‌ವೇ ಆಗಲಿದೆ. ಇದು ರಾಜ್ಯದ ಯುವಜನತೆಗೆ ಉತ್ತಮ ಭವಿಷ್ಯದ ಲಾಂಚ್‌ಪ್ಯಾಡ್ ಆಗಲಿದೆ” ಎಂದು ಪ್ರಧಾನಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಹಿಂದೆ ವಿಮಾನ ನಿಲ್ದಾಣಗಳಿಗೆ ಒಂದೇ ಕುಟುಂಬದ ಹೆಸರನ್ನು ಇಡುವ ಸಂಪ್ರದಾಯವಿತ್ತು ಎಂದು ಟೀಕಿಸಿದರು.

“ನಮ್ಮ ಸರ್ಕಾರ ಆ ಸಂಪ್ರದಾಯವನ್ನು ಬದಲಿಸಿದೆ. ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಅವರ ಹೆಸರು, ಪಂಜಾಬ್‌ನ ವಿಮಾನ ನಿಲ್ದಾಣಕ್ಕೆ ಸಂತ್ ರವಿದಾಸ್ ಅವರ ಹೆಸರು ಹಾಗೂ ಇದೀಗ ಭೋಗಾಪುರಂ ವಿಮಾನ ನಿಲ್ದಾಣಕ್ಕೆ ಅಳ್ಳೂರಿ ಸೀತಾರಾಮ ರಾಜು ಅವರ ಹೆಸರನ್ನು ಇಡಲಾಗಿದೆ” ಎಂದು ಹೇಳಿದರು.

ಕಾವೇರಿ ನೀರಿನ ಕೊರತೆ ಆತಂಕ: ಬೆಂಗಳೂರಿನಲ್ಲಿ ನೀರಿನ ಬಳಕೆಗೆ ಹೊಸ ನಿಯಮ, ಉಲ್ಲಂಘಿಸಿದರೆ ದಂಡ

ಬೆಂಗಳೂರು: ಮುಂದಿನ ದಿನಗಳಲ್ಲಿ ಕಾವೇರಿ ನೀರಿನ ಲಭ್ಯತೆಯಲ್ಲಿ ಸವಾಲು ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಬೆಂಗಳೂರು ಜಲಮಂಡಳಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಜಲಮಂಡಳಿ ಅಧ್ಯಕ್ಷೆ ಮಂಜುಳಾ, ಪ್ರಸ್ತುತ ಕಾವೇರಿ ಜಲಾಶಯಗಳಲ್ಲಿ ಸುಮಾರು 17 ಟಿಎಂಸಿ ನೀರು ಲಭ್ಯವಿದೆ. ಆದರೆ ಈ ನೀರು ಬೆಂಗಳೂರು ಮಾತ್ರವಲ್ಲದೆ ಮಂಡ್ಯ, ಮೈಸೂರು ಸೇರಿದಂತೆ ಹಲವು ನಗರಗಳು ಹಾಗೂ ಜಿಲ್ಲೆಗಳಿಗೂ ಪೂರೈಕೆ ಮಾಡಬೇಕಿರುವುದರಿಂದ ನೀರಿನ ಬಳಕೆಯಲ್ಲಿ ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಕ್ಕೆ ಸುಮಾರು 2.2 ಟಿಎಂಸಿ ನೀರು ಬೇಕಾಗುತ್ತದೆ. ಹೀಗಾಗಿ ನೀರಿನ ಅನಗತ್ಯ ಬಳಕೆಯನ್ನು ತಡೆಯುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಜಲಮಂಡಳಿ ಸಿದ್ಧಪಡಿಸುತ್ತಿರುವ ಪ್ರಮುಖ ಮಾರ್ಗಸೂಚಿಗಳು:

  • ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸುವಂತಿಲ್ಲ.
  • ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ನಿಷೇಧ.
  • ವಾಹನಗಳ ಸ್ವಚ್ಛತೆಗೆ ಕುಡಿಯುವ ನೀರು ಬಳಸುವಂತಿಲ್ಲ.
  • ನೀರಿನ ಉಳಿತಾಯಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಏರಿಯೇಟರ್‌ಗಳ ಅಳವಡಿಕೆಗೆ ಉತ್ತೇಜನ.
  • ನೀರಿನ ಕೊರತೆ ಇರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ಪೂರೈಕೆ.
  • ಅಗತ್ಯವಿರುವ ಕಡೆಗಳಲ್ಲಿ ರೀ-ಬೋರ್ ವ್ಯವಸ್ಥೆ ಕಲ್ಪಿಸಲು ಕ್ರಮ.

ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ. ಈಗಾಗಲೇ ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸಿದವರ ವಿರುದ್ಧ ಕ್ರಮ ಕೈಗೊಂಡಿದ್ದು,

ಸುಮಾರು 600 ಕೋಟಿ ರೂಪಾಯಿ ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷೆ ಮಂಜುಳಾ ತಿಳಿಸಿದ್ದಾರೆ. ಕಾವೇರಿ ನೀರಿನ ಸಂರಕ್ಷಣೆ ಹಾಗೂ ಸಮರ್ಪಕ ಬಳಕೆಗೆ ಸಾರ್ವಜನಿಕರು ಸಹಕರಿಸುವಂತೆ ಜಲಮಂಡಳಿ ಮನವಿ ಮಾಡಿದೆ.

ಡಿಕೆ ಶಿವಕುಮಾರ್‌ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್; ಸೋಮವಾರ ಸಂಜೆ ನೂತನ ಸಚಿವರ ಪ್ರಮಾಣವಚನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೋಮವಾರ ಸಂಜೆ 4 ಗಂಟೆಗೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

ಕಾಂಗ್ರೆಸ್ ಹೈಕಮಾಂಡ್ ಅಂತಿಮ ಹಂತದ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ನೂತನ ಸಚಿವರ ಪ್ರಮಾಣವಚನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಆಗಸ್ಟ್ 2ರಂದು ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈ ಸೇರಲಿದ್ದು, ಭಾನುವಾರ ಸಂಜೆ ವೇಳೆಗೆ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಖಾಲಿ ಇರುವ 20 ಸಚಿವ ಸ್ಥಾನಗಳ ಪೈಕಿ ಸುಮಾರು 18 ಸ್ಥಾನಗಳನ್ನು ಭರ್ತಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಪ್ರತ್ಯೇಕ ಪಟ್ಟಿಗಳನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದು, ಜಾತಿ ಹಾಗೂ ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತಿದೆ.

ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಹೆಸರುಗಳು:

  • ಎಸ್.ಎಸ್. ಮಲ್ಲಿಕಾರ್ಜುನ – ಲಿಂಗಾಯತ, ದಾವಣಗೆರೆ ಶಾಸಕ
  • ಎನ್. ಚಲುವರಾಯಸ್ವಾಮಿ – ಒಕ್ಕಲಿಗ, ನಾಗಮಂಗಲ ಶಾಸಕ
  • ಜಮೀರ್ ಅಹ್ಮದ್ – ಮುಸ್ಲಿಂ, ಚಾಮರಾಜಪೇಟೆ ಶಾಸಕ
  • ಶರತ್ ಬಚ್ಚೇಗೌಡ – ಒಕ್ಕಲಿಗ, ಹೊಸಕೋಟೆ ಶಾಸಕ
  • ಆನೇಕಲ್ ಶಿವಣ್ಣ – ದಲಿತ, ಆನೇಕಲ್ ಶಾಸಕ
  • ಕೆ.ಎಸ್. ಬಸವಂತಪ್ಪ – ದಲಿತ ಎಡಗೈ, ಮಾಯಕೊಂಡ ಶಾಸಕ
  • ಜೆ.ಎನ್. ಗಣೇಶ – ಪರಿಶಿಷ್ಟ ಪಂಗಡ, ಕಂಪ್ಲಿ ಶಾಸಕ
  • ರುದ್ರಪ್ಪ ಲಮಾಣಿ – ಪರಿಶಿಷ್ಟ ಜಾತಿ, ಹಾವೇರಿ ಶಾಸಕ
  • ಎ.ಎಸ್. ಪೊನ್ನಣ್ಣ – ಕೊಡವ ಸಮುದಾಯ, ವಿರಾಜಪೇಟೆ ಶಾಸಕ
  • ಬೇಳೂರು ಗೋಪಾಲಕೃಷ್ಣ – ಈಡಿಗ ಸಮುದಾಯ, ಸಾಗರ ಶಾಸಕ
  • ಶಿವಣ್ಣನವರ್ – ಕುರುಬ ಸಮುದಾಯ, ಬ್ಯಾಡಗಿ ಶಾಸಕ
  • ಶ್ರೀನಿವಾಸ್ ಮಾನೆ – ಮರಾಠ ಸಮುದಾಯ, ಹಾನಗಲ್ ಶಾಸಕ
  • ಮಂಕಾಳು ವೈದ್ಯ – ಮೊಗವೀರ ಸಮುದಾಯ, ಭಟ್ಕಳ ಶಾಸಕ

ಈ ನಡುವೆ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಸಚಿವ ಸಂಪುಟ ಸೇರ್ಪಡೆ ಕುರಿತು ಕುತೂಹಲ ಹೆಚ್ಚಾಗಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಜಮೀರ್ ಅವರು ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಬಳಿ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದರು ಎನ್ನಲಾಗಿದೆ.

ಜಮೀರ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗುತ್ತದೆಯೇ ಎಂಬುದು ಹೈಕಮಾಂಡ್ ಮಟ್ಟದ ಅಂತಿಮ ಚರ್ಚೆಯಲ್ಲಿ ನಿರ್ಧಾರವಾಗಲಿದೆ.

ಇದೇ ವೇಳೆ, ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಪ್ರಯತ್ನ ಮುಂದುವರಿಸಿದ್ದಾರೆ. ಶಾಸಕ ಅಪ್ಪಾಜಿಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. “ನನಗೆ ಸಚಿವ ಸ್ಥಾನ ತಪ್ಪಿಸಲು ಷಡ್ಯಂತ್ರ ನಡೆದಿದೆ, ಆದರೆ ಈ ಬಾರಿ ಅವಕಾಶ ಸಿಗುವ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

ಅಂತಿಮ ಪಟ್ಟಿಗೆ ಹೈಕಮಾಂಡ್ ಅನುಮೋದನೆ ದೊರೆತ ಬಳಿಕ ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

ಎಥೆನಾಲ್ ಮಿಶ್ರಣ ಇಲ್ಲದಿದ್ದರೆ ಪೆಟ್ರೋಲ್ ಬೆಲೆ ₹125 ತಲುಪುತ್ತಿತ್ತು: ಕೇಂದ್ರ ಸರ್ಕಾರದ ಸ್ಪಷ್ಟನೆ

0

ನವದೆಹಲಿ: ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಮಾಡದೇ ಇದ್ದಿದ್ದರೆ ಜಾಗತಿಕ ಕಚ್ಚಾ ತೈಲದ ಬೆಲೆ ಏರಿಕೆಯ ಸಂದರ್ಭದಲ್ಲಿ ದೇಶದಲ್ಲಿ ಪೆಟ್ರೋಲ್ ದರ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿತ್ತು ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 135 ಡಾಲರ್‌ಗೆ ಏರಿದ್ದ ಸಂದರ್ಭದಲ್ಲಿ, ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ಸುಮಾರು 125 ರೂಪಾಯಿ ತಲುಪುವ ಸಾಧ್ಯತೆ ಇತ್ತು ಎಂದು ಸಚಿವಾಲಯ ಹೇಳಿದೆ.

ಸರ್ಕಾರದ ಎಥೆನಾಲ್ ಮಿಶ್ರಣ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಸಚಿವಾಲಯ, ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣ (E20) ಮಾಡಿರುವುದರಿಂದ ಗ್ರಾಹಕರಿಗೆ ಪ್ರತಿ ಲೀಟರ್ ಪೆಟ್ರೋಲ್ ಅನ್ನು 94.77 ರೂಪಾಯಿ ದರದಲ್ಲಿ ಪಡೆಯಲು ಸಾಧ್ಯವಾಯಿತು ಎಂದು ತಿಳಿಸಿದೆ.

ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದ ಗ್ರಾಹಕರ ಮೇಲೆ ಬೀಳಬಹುದಾದ ಹೆಚ್ಚುವರಿ ಹೊರೆ ತಗ್ಗಿಸುವಲ್ಲಿ E20 ಪೆಟ್ರೋಲ್ ಪ್ರಮುಖ ಪಾತ್ರ ವಹಿಸಿದೆ. ಇದರಿಂದ ಸಂಕಷ್ಟದ ಸಂದರ್ಭದಲ್ಲಿ ಪ್ರತಿ ಲೀಟರ್‌ಗೆ ಸುಮಾರು 30 ರೂಪಾಯಿವರೆಗೆ ಉಳಿತಾಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಇದೇ ವೇಳೆ, ಎಥೆನಾಲ್ ಉತ್ಪಾದನೆಗೆ ಬಡವರಿಗಾಗಿ ಮೀಸಲಿಟ್ಟ ಆಹಾರ ಧಾನ್ಯಗಳನ್ನು ಬಳಸಲಾಗುತ್ತಿದೆ ಅಥವಾ ಭಾರತೀಯ ಆಹಾರ ನಿಗಮದ (FCI) ಸಬ್ಸಿಡಿ ಅಕ್ಕಿಯನ್ನು ಈ ಯೋಜನೆಗೆ ತಿರುಗಿಸಲಾಗುತ್ತಿದೆ ಎಂಬ ಆರೋಪಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.

ಪಶ್ಚಿಮ ಏಷ್ಯಾದ ಸಂಘರ್ಷದ ಬಳಿಕ ಸುಮಾರು 75 ದಿನಗಳ ಕಾಲ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಏರಿಳಿತ ಕಂಡುಬಂದರೂ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ದರಗಳನ್ನು ಸ್ಥಿರವಾಗಿಟ್ಟಿತ್ತು. ಬಳಿಕ ಮೇ ತಿಂಗಳಲ್ಲಿ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ಗೆ 7.50 ರೂಪಾಯಿ ಏರಿಕೆ ಮಾಡಲಾಗಿತ್ತು ಎಂದು ಸಚಿವಾಲಯ ಮಾಹಿತಿ ನೀಡಿದೆ.

ಪ್ರಸ್ತುತ ದೆಹಲಿಯಲ್ಲಿ E20 (91 ಆಕ್ಟೇನ್) ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 102.12 ರೂಪಾಯಿ ಇದ್ದರೆ, 100 ಆಕ್ಟೇನ್ ಪೆಟ್ರೋಲ್ ದರ 169 ರೂಪಾಯಿ ಇದೆ.

ಮೈಸೂರು ನನ್ನ ಮನೆ, ನಾನು ಇಲ್ಲಿನ ಅಳಿಯ: 2028ರಲ್ಲೂ ಕಾಂಗ್ರೆಸ್ ಸರ್ಕಾರದ ವಿಶ್ವಾಸ ವ್ಯಕ್ತಪಡಿಸಿದ ಡಿಕೆಶಿ

0

ಮೈಸೂರು: ಮೈಸೂರು ಪ್ರವಾಸದ ವೇಳೆ ಭರ್ಜರಿ ರೋಡ್‌ ಶೋ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ನಾನು ಮೈಸೂರಿನ ಅಳಿಯ. ಮುಖ್ಯಮಂತ್ರಿ ಆದರೂ ಈ ನಂಟು ಬದಲಾಗುವುದಿಲ್ಲ” ಎಂದು ಹೇಳುವ ಮೂಲಕ ಮೈಸೂರು ಜನರೊಂದಿಗೆ ತಮ್ಮ ಭಾವನಾತ್ಮಕ ಸಂಬಂಧವನ್ನು ವ್ಯಕ್ತಪಡಿಸಿದರು.

ಕಾರಂಜಿ ಕೆರೆ ವೃತ್ತದಿಂದ ಕುರುಬಾರಹಳ್ಳಿ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ ಸಿಎಂ ಡಿಕೆ ಶಿವಕುಮಾರ್, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಪ್ರೀತಿಗೆ ಧನ್ಯವಾದ ಅರ್ಪಿಸಿದರು.

“ರಾಜ್ಯದಲ್ಲಿ ಮತ್ತೊಮ್ಮೆ ಬಲಿಷ್ಠ ಸರ್ಕಾರ ರಚಿಸಲು ಜನರು ಅವಕಾಶ ಮಾಡಿಕೊಡಬೇಕು. ನನಗೆ ಕನಕಪುರವೂ ಒಂದೇ, ಮೈಸೂರೂ ಒಂದೇ. ನಾನು ನಿಮ್ಮೂರಿನ ಅಳಿಯ” ಎಂದು ಹೇಳಿದರು.

ಸಿದ್ದರಾಮಯ್ಯ ಅವರೊಂದಿಗೆ ರಾಜ್ಯಾದ್ಯಂತ ಪ್ರವಾಸ ಮಾಡಿ 136 ಸ್ಥಾನಗಳನ್ನು ಗೆದ್ದಿದ್ದೇವೆ. ಚುನಾವಣೆಗೆ ಮುನ್ನ ಚಾಮುಂಡೇಶ್ವರಿ ತಾಯಿಯ ಬಳಿ ದೊಡ್ಡ ಜವಾಬ್ದಾರಿ ನೀಡುವಂತೆ ಪ್ರಾರ್ಥಿಸಿದ್ದೆವು. ಜನರ ಆಶೀರ್ವಾದದಿಂದ ಸರ್ಕಾರ ರಚಿಸಲು ಸಾಧ್ಯವಾಯಿತು ಎಂದು ನೆನಪಿಸಿಕೊಂಡರು.

ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, “ಜನರ ಆದಾಯ ಕುಸಿದಿದ್ದ ಸಮಯದಲ್ಲಿ ಜಾರಿಗೆ ತಂದ ಯೋಜನೆಗಳು ಇಂದು ದೇಶದ ಗಮನ ಸೆಳೆದಿವೆ” ಎಂದರು.

2028ರ ವಿಧಾನಸಭಾ ಚುನಾವಣೆಯಲ್ಲೂ ಇದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಬರದ ಪರಿಸ್ಥಿತಿ ಇದ್ದರೂ ಮಳೆಯ ನೆರವಿನಿಂದ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದರು.

ಕಾವೇರಿ ನೀರು ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ತಮಿಳುನಾಡಿಗೆ ನೀರು ಬಿಡುವ ಕುರಿತು ಪ್ರತಿಪಕ್ಷಗಳ ಸಲಹೆ ಪಡೆದು ತೀರ್ಮಾನಿಸಲು ಉದ್ದೇಶಿಸಲಾಗಿತ್ತು. ಆದರೆ ಚಾಮುಂಡೇಶ್ವರಿ ತಾಯಿಯ ಕೃಪೆಯಿಂದ ಸಂಕಷ್ಟದ ಪರಿಸ್ಥಿತಿ ದೂರವಾಗಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದ ಕಾಂಗ್ರೆಸ್ ಕಾರ್ಯಕರ್ತರ ಸಭೆ ರದ್ದಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.