Home Blog Page 4

ವಿದ್ಯಾರ್ಥಿನಿ ವೀಣಾ ಹಾನಾಪೂರ ಪ್ರಕರಣಕ್ಕೆ ಹೊಸ ತಿರುವು?

0

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಡಾ. ವೀಣಾ ಹಾನಾಪೂರ ಅವರ ಸಂಶಯಾಸ್ಪದ ಸಾವಿನ ಪ್ರಕರಣದಲ್ಲಿ ಹೊಸ ಅನುಮಾನಗಳು ಮೂಡಿದ್ದು, ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿನ ಸಿಸಿಟಿವಿ ಕ್ಯಾಮೆರಾಗಳು ಕಳೆದ ಒಂದು ತಿಂಗಳಿಂದ ಕಾರ್ಯನಿರ್ವಹಿಸದಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರನ್ನು ಮೃತ ವಿದ್ಯಾರ್ಥಿನಿಯ ಪಾಲಕರೊಂದಿಗೆ ಭೇಟಿ ಮಾಡಿದ ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ಹಿರಿಯ ವಕೀಲ ರವಿಕಾಂತ ಅಂಗಡಿ, ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಸುರಕ್ಷತೆಯ ಹೊಣೆ ಹೊತ್ತಿರುವ ವಿಶ್ವವಿದ್ಯಾಲಯದಲ್ಲಿ ಒಂದು ತಿಂಗಳಿಂದ ಸಿಸಿಟಿವಿ ವ್ಯವಸ್ಥೆ ಸ್ಥಗಿತಗೊಂಡಿರುವುದು ಗಂಭೀರ ಆಡಳಿತಾತ್ಮಕ ವೈಫಲ್ಯವಾಗಿದೆ. ಇಂತಹ ಪ್ರಕರಣದಲ್ಲಿ ಸತ್ಯವನ್ನು ಮುಚ್ಚಿಹಾಕುವ ಯಾವುದೇ ಪ್ರಯತ್ನವನ್ನು ಉತ್ತರ ಕರ್ನಾಟಕ ಮಹಾಸಭಾ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ವಿದ್ಯಾರ್ಥಿನಿಯ ಸಾವಿನಂತಹ ಗಂಭೀರ ಘಟನೆ ನಡೆದಿದ್ದರೂ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳ ಸ್ಪಂದನೆ ತೃಪ್ತಿಕರವಾಗಿಲ್ಲ. ಪ್ರಕರಣದಲ್ಲಿ ಯಾರನ್ನಾದರೂ ರಕ್ಷಿಸುವ ಅಥವಾ ಸಾಕ್ಷ್ಯಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಪ್ರಕರಣವನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಿ, ಡಿಜಿಟಲ್ ಸಾಕ್ಷ್ಯಗಳು, ಮೊಬೈಲ್ ಕರೆ ವಿವರಗಳು, ಸಿಸಿಟಿವಿ ತಾಂತ್ರಿಕ ದಾಖಲೆಗಳು, ವಸತಿ ನಿಲಯದ ಹಾಜರಾತಿ ದಾಖಲೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಪಾತ್ರವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಸಿಸಿಟಿವಿ ವ್ಯವಸ್ಥೆ ಕಾರ್ಯನಿರ್ವಹಿಸದಿರುವುದು ಮೇಲ್ನೋಟಕ್ಕೆ ಗಂಭೀರ ಆಡಳಿತಾತ್ಮಕ ಲೋಪವಾಗಿದ್ದು, ಈ ಕುರಿತು ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಗೃಹ ಸಚಿವರನ್ನು ಭೇಟಿ ಮಾಡಿ ಯಾವುದೇ ಪ್ರಭಾವಕ್ಕೆ ಅವಕಾಶ ನೀಡದೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಕುಲಪತಿ, ರಿಜಿಸ್ಟ್ರಾರ್, ವಸತಿ ನಿಲಯದ ವಾರ್ಡನ್ ಸೇರಿದಂತೆ ಕರ್ತವ್ಯಲೋಪ ಎಸಗಿರುವುದು ಸಾಬೀತಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಡಾ. ವೀಣಾ ಹಾನಾಪೂರ ಅವರ ಕುಟುಂಬಕ್ಕೆ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ರವಿಕಾಂತ ಅಂಗಡಿ ಸ್ಪಷ್ಟಪಡಿಸಿದರು.

“ಒಂದು ತಿಂಗಳಿಂದ ಸಿಸಿಟಿವಿ ಕಾರ್ಯನಿರ್ವಹಿಸದಿರುವುದು ಸಾಮಾನ್ಯ ಲೋಪವಲ್ಲ. ವೀಣಾ ಹಾನಾಪೂರ ಪ್ರಕರಣದ ಸತ್ಯ ಹೊರಬರಲು ನಿಷ್ಪಕ್ಷಪಾತ ತನಿಖೆಯೇ ಏಕೈಕ ಮಾರ್ಗ.”

– ರವಿಕಾಂತ ಅಂಗಡಿ, ರಾಜ್ಯಾಧ್ಯಕ್ಷರು, ಉತ್ತರ ಕರ್ನಾಟಕ ಮಹಾಸಭಾ

ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ನಾಗರಾಜ ಮಡಿವಾಳ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಯಾವುದೇ ಲೋಪವಿಲ್ಲದೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಬಾಕಿ ಅರ್ಜಿಗಳ ವಿಲೇವಾರಿ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯ ವೇಳೆ ಲಕ್ಷ್ಮವ್ವ ಬಾಲೇಹೊಸೂರ ಎಂಬ ಮಹಿಳೆ ತನ್ನ ಮಕ್ಕಳೊಂದಿಗೆ ಆಗಮಿಸಿ, ಕಳೆದ ಮೂರು ವರ್ಷಗಳಿಂದ ಪಡಿತರ ಚೀಟಿಗಾಗಿ ಅಲೆದಾಡುತ್ತಿದ್ದರೂ ಇನ್ನೂ ಸೌಲಭ್ಯ ದೊರೆತಿಲ್ಲ ಎಂದು ಅಳಲು ತೋಡಿಕೊಂಡರು. ಈ ಕುರಿತು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಹೆಸ್ಕಾಂ ಎಇಇ ಆಂಜನಪ್ಪ ಬಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೃತ್ಯುಂಜಯ ಗುಡ್ಡದನ್ವೇರಿ, ಕೆಎಸ್‌ಆರ್‌ಟಿಸಿ ಅಧಿಕಾರಿ ಪವಿತ್ರಾ ಪಿ., ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ತಾಪಂ ಇಒ ಮಂಜುಳಾ ಹಕಾರಿ ಉಪಸ್ಥಿತರಿದ್ದರು.

ಜನ್ಮದಿನವನ್ನು ಸಮಾಜಸೇವೆಗೆ ಮೀಸಲಿಟ್ಟ ಕಪ್ಪತ್ತಗಿರಿ ಫೌಂಡೇಶನ್

0

ವಿಜಯಸಾಕ್ಷಿ ಸುದ್ದಿ, ಗದಗ: ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ ಸಮಾಜಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಸಂದೇಶದೊಂದಿಗೆ ಕಪ್ಪತ್ತಗಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷೆ ಚಂದ್ರಕಲಾ ಇಟಗಿಮಠ ಅವರು ತಮ್ಮ ಹಾಗೂ ಪುತ್ರನ ಜನ್ಮದಿನದ ಅಂಗವಾಗಿ ಎರಡು ದಿನಗಳ ಕಾಲ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದರು.

ಜುಲೈ 31ರಂದು ಬೆಳದಡಿ ತಾಂಡಾದ ಬ್ರಹ್ಮಾನಂದಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 160 ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ, ಸ್ವಚ್ಛತೆ, ಪೌಷ್ಟಿಕ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಮಲ್ಲಸಮುದ್ರದ ಆನಂದ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವೃದ್ಧರೊಂದಿಗೆ ಆತ್ಮೀಯವಾಗಿ ಸಮಯ ಕಳೆದರು.

ಆಗಸ್ಟ್ 1ರಂದು ಬೆಟಿಗೇರಿಯ ಮಂಜು ಶಿಕ್ಷಣ ಸಂಸ್ಥೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ, ಅವರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ನಡೆಸಲಾಯಿತು.

ಆರೋಗ್ಯ ತಪಾಸಣೆಯನ್ನು ಡಾ. ದೀಪಾ ಮೂರಶಿಳ್ಳಿನ ಹಾಗೂ ಡಾ. ಕಲ್ಲೇಶ್ ಮೂರಶಿಳ್ಳಿನ ನಡೆಸಿ, ಮಕ್ಕಳಿಗೆ ಆರೋಗ್ಯದ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎ.ಎಸ್. ಮಕಾನದಾರ, ಆನಂದ ವೃದ್ಧಾಶ್ರಮದ ಸಂಸ್ಥಾಪಕ ಗಂಗಾಧರ, ತೋಟಯ್ಯ ಗುಡ್ಡಿಮಠ, ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಕರು, ಗ್ರಾಮಸ್ಥರು ಹಾಗೂ ಕಪ್ಪತ್ತಗಿರಿ ಫೌಂಡೇಶನ್ ಸದಸ್ಯರು ಭಾಗವಹಿಸಿದ್ದರು.

ಸಮಾಜದ ಆರೋಗ್ಯ, ಶಿಕ್ಷಣ, ವಿಶೇಷ ಚೇತನ ಮಕ್ಕಳು ಹಾಗೂ ವೃದ್ಧರ ಸೇವೆಗೆ ಜನ್ಮದಿನವನ್ನು ಸಮರ್ಪಿಸಿದ ಕಪ್ಪತ್ತಗಿರಿ ಫೌಂಡೇಶನ್‌ನ ಈ ಸಮಾಜಮುಖಿ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಜಾನುವಾರುಗಳ ಆರೋಗ್ಯದ ಬಗ್ಗೆ ರೈತರು ಜಾಗೃತರಾಗಲಿ: ಹಿರೇಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: ಜಾನುವಾರುಗಳ ಆರೋಗ್ಯ ಕಾಪಾಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಾಗಿ ರೈತರ ಆದಾಯವೂ ವೃದ್ಧಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕ ಎಚ್.ಜಿ. ಹಿರೇಗೌಡ್ರ ಹೇಳಿದರು.

ನರಗುಂದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಧಾರವಾಡ ಹಾಲು ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲು-ಬಾಯಿ ರೋಗ, ಕಪ್ಪು ಕಾಲು, ಗಂಟಲುಬಾಚೆ, ಬ್ರೂಸೆಲ್ಲೋಸಿಸ್ ಸೇರಿದಂತೆ ವಿವಿಧ ರೋಗಗಳಿಂದ ಜಾನುವಾರುಗಳನ್ನು ರಕ್ಷಿಸಲು ನಿಯಮಿತ ಲಸಿಕೆ, ಪಶುವೈದ್ಯರ ಸಲಹೆ, ಸ್ವಚ್ಛ ಗೋಶಾಲೆ ಹಾಗೂ ಸಮತೋಲನ ಆಹಾರ ಅತ್ಯಗತ್ಯ ಎಂದು ತಿಳಿಸಿದರು.

ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಕಳಸದ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರಿಗೆ ನ್ಯಾಯಯುತ ಬೆಲೆ, ಪಶುವೈದ್ಯಕೀಯ ಸೇವೆ, ಕೃತಕ ಗರ್ಭಧಾರಣೆ, ಮೇವು ಅಭಿವೃದ್ಧಿ, ಪಶು ಆಹಾರ ಹಾಗೂ ತರಬೇತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ನರಗುಂದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರು ಹಾಗೂ ಹಾಲು ಪರೀಕ್ಷಕರಿಗೆ ಜಾನುವಾರುಗಳ ಆರೋಗ್ಯ, ಹಸಿರು ಮೇವು, ಶುದ್ಧ ಹಾಲು ಉತ್ಪಾದನೆ ಹಾಗೂ ಹೈನುಗಾರಿಕೆ ಕುರಿತು ತಜ್ಞರಿಂದ ತರಬೇತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ, ಧಾರವಾಡ ಹಾಲು ಒಕ್ಕೂಟದ ಅಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಡಿಸಿ ಕಚೇರಿ ಚಲೋಗೆ ತಿಮ್ಮಾಪೂರ ರೈತರ ಬೆಂಬಲ

0

ವಿಜಯಸಾಕ್ಷಿ ಸುದ್ದಿ, ಗದಗ: ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗಸ್ಟ್ 5ರಂದು ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯಲಿರುವ ‘ಡಿಸಿ ಕಚೇರಿ ಚಲೋ’ ಬೃಹತ್ ಪ್ರತಿಭಟನೆಗೆ ತಿಮ್ಮಾಪೂರ ಗ್ರಾಮದ ರೈತರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಿಮ್ಮಾಪೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಿ.ಆರ್. ನಾರಾಯಣರೆಡ್ಡಿ ಬಣ) ಗ್ರಾಮ ಘಟಕ ಕೋಟುಮಚಿಗಿ ವತಿಯಿಂದ ರೈತ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ, 2025-26ನೇ ಸಾಲಿನ ಎಲ್ಲ ಬೆಳೆಗಳ ವಿಮೆಯನ್ನು ತಕ್ಷಣ ಮಂಜೂರು ಮಾಡಬೇಕು, ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು, ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಕಪ್ಪತ್ತಗುಡ್ಡ ಅರಣ್ಯವನ್ನು ಸಂರಕ್ಷಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ. ಸರ್ಕಾರ ಕೂಡಲೇ ಇವುಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳಿಗಾಗಿ ಎಂಟು ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಯಶಸ್ಸು ಸಾಧಿಸಿದ್ದಾರೆ. ಅದೇ ರೀತಿಯಲ್ಲಿ ರೈತರು ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ನ್ಯಾಯ ದೊರೆಯಲಿದೆ. ರಾಷ್ಟ್ರೀಕೃತ ಬ್ಯಾಂಕ್ ಸಾಲ ಹಾಗೂ ಬೆಳೆ ವಿಮೆ ಕುರಿತು ಎರಡು-ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಆಗಸ್ಟ್ 5ರ ಹೋರಾಟ ಉಗ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.

ರೈತ ಮುಖಂಡ ಶರಣಪ್ಪ ಮ್ಯಾಗೇರಿ ಮಾತನಾಡಿ, ಆಗಸ್ಟ್ 5ರಂದು ನಡೆಯುವ ಪ್ರತಿಭಟನೆಗೆ ತಿಮ್ಮಾಪೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗದಗಕ್ಕೆ ತೆರಳಿ ಭಾಗವಹಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಕೋಟುಮಚಿಗಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಘೋಷಿಸಿತು. ಬಳಿಕ “ರೈತರ ಶಕ್ತಿ ಬಹಳ ಇದೆ” ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ಸಂಕಲ್ಪ ಕೈಗೊಳ್ಳಲಾಯಿತು.

ಸಭೆಯಲ್ಲಿ ಹುಚ್ಚಿರಪ್ಪ ಬಡೆಗೇರ, ಪಾಲಾಕ್ಷಯ್ಯ ಬಳಗೇರಮಠ, ಮಲ್ಲಪ್ಪ ರಮಾಣೆ, ಸಂತೋಷ ಮುತ್ತಾಳ, ಮುನಿಯಪ್ಪ ಶಿಂಗಟಾಲಕೇರಿ, ಮುತ್ತಪ್ಪ ಜಗ್ಗಲ, ಹುಚ್ಚಿರಪ್ಪ ಜೋಗಿನ, ಶಿವರಾಜ ಒಂಟೇಲಿ, ಮಾದೇಗೌಡ ಸಂಕನಗೌಡ್ರ, ಪರಪ್ಪ ಕಡಗದ, ಬೀರಪ್ಪ ಕಂಬಳಿ, ರೇಣಕಪ್ಪ ಕಿನ್ನಾಳ, ಬಾಬು ದಿವಟಿ, ಜಗದೀಶ್ ಮಲ್ಲನವರ ಸೇರಿದಂತೆ ನೂರಾರು ರೈತರು, ಕೂಲಿ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಶಿಕ್ಷಣದಿಂದಲೇ ಸಮಾಜದ ಭವಿಷ್ಯ ಬದಲಿಸಿ: ಶಾಸಕ ಕೆ. ನೇಮಿರಾಜ ನಾಯ್ಕ್

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮೂಲಮಂತ್ರವಾಗಿದ್ದು, ಹಡಪದ ಸಮಾಜದ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಅವರನ್ನು ಉನ್ನತ ಶಿಕ್ಷಣದೊಂದಿಗೆ ಉತ್ತಮ ಉದ್ಯೋಗಸ್ಥರನ್ನಾಗಿ ರೂಪಿಸಬೇಕು ಎಂದು ಶಾಸಕ ಕೆ. ನೇಮಿರಾಜ ನಾಯ್ಕ್ ಕರೆ ನೀಡಿದರು.

ಪಟ್ಟಣದ ಹರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಅವರ 892ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಡಪದ ಅಪ್ಪಣ್ಣ ಅವರು 12ನೇ ಶತಮಾನದ ವಚನ ಚಳುವಳಿ ಹಾಗೂ ಸಾಮಾಜಿಕ ಕ್ರಾಂತಿಯ ಪ್ರಮುಖ ಹರಿಕಾರರಲ್ಲಿ ಒಬ್ಬರಾಗಿದ್ದು, ಬಸವಣ್ಣನವರ ಆಪ್ತ ಸಹಚರ ಹಾಗೂ ಅನುಭವ ಮಂಟಪದ ಪ್ರಮುಖ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಜೀವನ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.

ಹಡಪದ ಸಮಾಜವು ಇನ್ನೂ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರ ಇಂತಹ ಸಮುದಾಯಗಳಿಗೆ ಹೆಚ್ಚಿನ ಅನುದಾನ ಹಾಗೂ ಸೌಲಭ್ಯ ಕಲ್ಪಿಸಬೇಕಿದೆ. ಸಮಾಜದ ಮನವಿಗೆ ಸ್ಪಂದಿಸಿ ಸಮುದಾಯ ಭವನ ನಿರ್ಮಾಣಕ್ಕೆ ಈ ವರ್ಷ ₹25 ಲಕ್ಷ ಹಾಗೂ ಮುಂದಿನ ವರ್ಷ ಮತ್ತೊಂದು ₹25 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದ ಅವರು, ಸರ್ಕಾರದಿಂದ ಇನ್ನಷ್ಟು ನೆರವು ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಆಶೀರ್ವಚನ ನೀಡಿದ ಅನ್ನದಾನಿ ಭಾರತಿ ಹಡಪದ ಅಪ್ಪಣ್ಣ ಮಹಾಸ್ವಾಮಿಗಳು, ಮುಂಡ್ರಿಗಿ, ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಸುಮಾರು 240ಕ್ಕೂ ಹೆಚ್ಚು ವಚನಗಳನ್ನು ರಚಿಸಿರುವ ಮಹಾನ್ ಶಿವಶರಣರು ಎಂದು ಸ್ಮರಿಸಿದರು. ಸಮಾಜದ ಮಕ್ಕಳು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು. ಪೋಷಕರು ಎಷ್ಟೇ ಕಷ್ಟ ಬಂದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಸರ್ಕಾರವೂ ಹಡಪದ ಸಮಾಜವನ್ನು ಗುರುತಿಸಿ ಮೀಸಲಾತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜದ ಗಣ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಹೆಚ್. ಮಂಜುನಾಥ, ಜಿಲ್ಲಾಧ್ಯಕ್ಷ ಡಾ. ಮಲ್ಲಪ್ಪ ಬ್ಯಾಲಾಳು, ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಗೌಡ್ರು, ರೆಡ್ಡಿ ಸಮಾಜದ ಅಧ್ಯಕ್ಷ ಬಸವರಾಜ ರೆಡ್ಡಿ, ಕುಮಾರಿ ಕಾವೇರಿ, ಶಿವ ಸಿಂಪಿಗರ ಸಮಾಜದ ಅಧ್ಯಕ್ಷ ಉಮಾಪತಿ ಹನಸಿ, ನರೇಗಲ್ಲು ಬಸವರಾಜ ಸೇರಿದಂತೆ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಬಸವಲೋಕ ತಂಡ ಪ್ರಾರ್ಥನೆ ಸಲ್ಲಿಸಿತು. ಹಾಲೇಶ್ ಹುಚ್ಚನಗೌಡ ಸ್ವಾಗತಿಸಿ ನಿರೂಪಿಸಿದರು.

“ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಸಮುದಾಯದ ಭವಿಷ್ಯ ಉಜ್ವಲವಾಗುತ್ತದೆ, ಪ್ರತಿಯೊಬ್ಬ ಪೋಷಕರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.”

– ಕೆ. ನೇಮಿರಾಜ ನಾಯ್ಕ್, ಶಾಸಕ

ರೈತರ ವಿಶ್ವಾಸಕ್ಕೆ ಮತ್ತೆ ಮೋದಿ ಮುದ್ರೆ: ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಡಿ.ವೈ. ಹುನಗುಂದ

0

ವಿಜಯಸಾಕ್ಷಿ ಸುದ್ದಿ, ಗದಗ: 2026–27ರಿಂದ 2030–31ರವರೆಗೆ ಮುಂದಿನ ಐದು ವರ್ಷಗಳ ಕಾಲ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ಮುಂದುವರಿಸಲು ಕೇಂದ್ರ ಸರ್ಕಾರ ₹3.15 ಲಕ್ಷ ಕೋಟಿಗೂ ಅಧಿಕ ಅನುದಾನ ಮೀಸಲಿಟ್ಟಿರುವುದು ರೈತಪರ ಆಡಳಿತಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಡಿ.ವೈ. ಹುನಗುಂದ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯು ಇಂದು ವಿಶ್ವದ ಅತಿದೊಡ್ಡ ನೇರ ನಗದು ವರ್ಗಾವಣೆ (ಡಿಬಿಟಿ) ಯೋಜನೆಗಳಲ್ಲಿ ಒಂದಾಗಿ ಬೆಳೆದಿದೆ. ಆಧಾರ್ ದೃಢೀಕರಣ, ಫೇಸ್ ಆಥೆಂಟಿಕೇಶನ್ ಹಾಗೂ ಡಿಜಿಟಲ್ ತಂತ್ರಜ್ಞಾನದ ಮೂಲಕ ಯಾವುದೇ ಮಧ್ಯವರ್ತಿಗಳಿಲ್ಲದೆ ನೆರವು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ತಲುಪುತ್ತಿರುವುದು ಯೋಜನೆಯ ದೊಡ್ಡ ಯಶಸ್ಸಾಗಿದೆ ಎಂದರು.

ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಕೃಷಿ ಬಜೆಟ್ ಅನ್ನು ₹21,933 ಕೋಟಿಯಿಂದ ₹1,27,290 ಕೋಟಿಗೂ ಅಧಿಕ ಮೊತ್ತಕ್ಕೆ ಏರಿಕೆ ಮಾಡಿರುವುದು ರೈತರ ಅಭಿವೃದ್ಧಿಗೆ ನೀಡುತ್ತಿರುವ ಆದ್ಯತೆಯನ್ನು ತೋರಿಸುತ್ತದೆ. ರೈತರಿಗೆ ಪ್ರಾದೇಶಿಕ ಭಾಷೆಯಲ್ಲಿ ಕೃಷಿ ಮಾಹಿತಿ ತಲುಪಿಸಲು ‘ಭಾರತ್ ವಿಸ್ತಾರ’ ಹಾಗೂ ‘ಭಾಷಿಣಿ’ ಎಐ ತಂತ್ರಜ್ಞಾನ ಜಾರಿಗೊಳಿಸುತ್ತಿರುವುದೂ ರೈತ ಸಬಲೀಕರಣದ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ₹6,000 ಅನ್ನು ಮೂರು ಕಂತುಗಳಲ್ಲಿ ನೇರವಾಗಿ ಜಮೆ ಮಾಡಲಾಗುತ್ತಿದೆ. ಇದುವರೆಗೆ 23 ಕಂತುಗಳ ಮೂಲಕ ₹4.47 ಲಕ್ಷ ಕೋಟಿಗೂ ಅಧಿಕ ಮೊತ್ತ ರೈತರ ಖಾತೆಗೆ ವರ್ಗಾವಣೆಯಾಗಿದ್ದು, ಇತ್ತೀಚಿನ ಕಂತಿನಲ್ಲಿ 9.49 ಕೋಟಿಗೂ ಅಧಿಕ ರೈತರಿಗೆ ₹18,984 ಕೋಟಿಗೂ ಹೆಚ್ಚು ಹಣ ಜಮೆಯಾಗಿದೆ ಎಂದು ಮಾಹಿತಿ ನೀಡಿದರು.

ನೀತಿ ಆಯೋಗದ ವರದಿ ಪ್ರಕಾರ, ಶೇ.92ಕ್ಕೂ ಹೆಚ್ಚು ರೈತರು ಈ ನೆರವನ್ನು ಕೃಷಿ ಹೂಡಿಕೆಗೆ ಬಳಸಿದ್ದು, ಶೇ.85ರಷ್ಟು ರೈತರ ಆದಾಯ ಹೆಚ್ಚಳವಾಗಿದೆ. ಜೊತೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಹಾಗೂ ಪಿಎಂ ಕಿಸಾನ್ ಮಾನ್-ಧನ್ ಯೋಜನೆಯಂತಹ ಕಾರ್ಯಕ್ರಮಗಳ ಮೂಲಕ ರೈತರಿಗೆ ಇನ್ನಷ್ಟು ಭದ್ರತೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಈ ರೈತಪರ ನಿರ್ಧಾರವನ್ನು ಜಿಲ್ಲೆಯ ಸಮಸ್ತ ರೈತ ಸಮುದಾಯದ ಪರವಾಗಿ ಸ್ವಾಗತಿಸಿ ಅಭಿನಂದಿಸುತ್ತೇನೆ ಎಂದು ಡಿ.ವೈ. ಹುನಗುಂದ ತಿಳಿಸಿದ್ದಾರೆ.

“ಮುಂದಿನ ಐದು ವರ್ಷಗಳಿಗೂ ಪಿಎಂ ಕಿಸಾನ್ ಯೋಜನೆ ಮುಂದುವರಿಸಿರುವುದು ರೈತರ ಕಲ್ಯಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಚಲ ಬದ್ಧತೆಯ ಪ್ರತೀಕ.”

– ಡಿ.ವೈ. ಹುನಗುಂದ, ಜಿಲ್ಲಾಧ್ಯಕ್ಷರು, ಬಿಜೆಪಿ ರೈತ ಮೋರ್ಚಾ

ಗುರುಮಾತೆಗೆ ಶಿಷ್ಯರ ಗೌರವದ ನಮನ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸುಮಾರು 36 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಆದರ್ಶ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಿ.ಜಿ. ಶಿರಸಿ ಅವರಿಗೆ 1989–90ರಿಂದ 1995–96ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಶಾಲೆಯ ಆವರಣದಲ್ಲಿ ಆತ್ಮೀಯ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಹಲವು ವರ್ಷಗಳ ಬಳಿಕ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಮಾತೆಯೊಂದಿಗೆ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಿ ಭಾವುಕರಾದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಆಡಳಿತಾಧಿಕಾರಿ ಡಾ. ಜಿ.ಕೆ. ಕಾಳೆ ಮಾತನಾಡಿ, ಶಿಕ್ಷಕರಿಗೆ ನಿವೃತ್ತಿ ಇರಬಹುದು; ಆದರೆ ಅವರು ರೂಪಿಸಿದ ವಿದ್ಯಾರ್ಥಿಗಳ ಸಾಧನೆಗಳಲ್ಲಿ ಅವರ ಸೇವೆ ಸದಾ ಜೀವಂತವಾಗಿರುತ್ತದೆ. ಬಿ.ಜಿ. ಶಿರಸಿ ಅವರು ಶಿಕ್ಷಣದ ಜೊತೆಗೆ ಶಿಸ್ತು, ಸಮಯಪಾಲನೆ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿದ ಆದರ್ಶ ಶಿಕ್ಷಕಿಯಾಗಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿ ರವೀಂದ್ರನಾಥ ದೊಡ್ಡಮೇಟಿ ಮಾತನಾಡಿ, ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವವೇ ಶಿಕ್ಷಕರ ಜೀವನದ ನಿಜವಾದ ಸಂಪತ್ತು. ಬಿ.ಜಿ. ಶಿರಸಿ ಅವರ ಮಾರ್ಗದರ್ಶನದಿಂದ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದು ಅವರ ಸೇವೆಯ ದೊಡ್ಡ ಗೌರವವಾಗಿದೆ ಎಂದರು.

ಈ ವೇಳೆ ಹಳೆಯ ವಿದ್ಯಾರ್ಥಿಗಳ ಪರವಾಗಿ ಗುರುಮಾತೆಗೆ ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ, ಮೌಲ್ಯಯುತ ಪುಸ್ತಕ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ಜಿ. ಶಿರಸಿ, “ಶಿಕ್ಷಕರಿಗೆ ಸಿಗುವ ಅತಿ ದೊಡ್ಡ ಪ್ರಶಸ್ತಿ ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವ. ಹಲವು ವರ್ಷಗಳ ನಂತರವೂ ನನ್ನನ್ನು ನೆನಪಿಸಿಕೊಂಡು ನೀಡಿದ ಈ ಸನ್ಮಾನ ನನ್ನ ಜೀವನದ ಅಮೂಲ್ಯ ಕ್ಷಣ” ಎಂದು ಭಾವುಕರಾದರು.

ಶಿವಕುಮಾರ ಹಿರೇಮಠ ಸ್ವಾಗತಿಸಿದರು. ಸವಿತಾ ಪಾಟೀಲ ನಿರೂಪಿಸಿದರು. ಶ್ಯಾಮಸುಂದರ ಪ್ರಭಾಕರ ಅನಿಸಿಕೆ ಹಂಚಿಕೊಂಡರು. ವೀರಭದ್ರಪ್ಪ ಮೆಣಸಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂದೀಶ ಎಸ್. ಅಚ್ಚಿ ಅಭಿನಂದನಾ ಪತ್ರ ವಾಚಿಸಿದರು. ಪ್ರಶಾಂತ ಹಲಕುರ್ಕಿ ವಂದಿಸಿದರು.

ಶಾಲೆಯ ಶಿಕ್ಷಕರು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಮಾತೆಯ ಶಿಕ್ಷಣ ಸೇವೆಯನ್ನು ಕೊಂಡಾಡಿದರು.

“ಶಿಕ್ಷಕರಿಗೆ ದೊರೆಯುವ ಅತಿ ದೊಡ್ಡ ಪ್ರಶಸ್ತಿ ಎಂದರೆ ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವ.”

– ಬಿ.ಜಿ. ಶಿರಸಿ, ನಿವೃತ್ತ ಮುಖ್ಯ ಶಿಕ್ಷಕಿ

ಗ್ರಾಮೀಣ ವಿದ್ಯುತ್ ಸೇವೆಯ ಸಾರಥಿಗೆ ಗೌರವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಜಕ್ಕಲಿ ಗ್ರಾಮದ ಗ್ರಾಮ ವಿದ್ಯುತ್ ಪ್ರತಿನಿಧಿಯಾಗಿ 22 ವರ್ಷಗಳ ಕಾಲ ಹೆಸ್ಕಾಂ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಹೇಶ ಹಿರೇಮಠ ಅವರಿಗೆ ಶನಿವಾರ ನರೇಗಲ್ಲ ಹೆಸ್ಕಾಂ ಕಚೇರಿಯಲ್ಲಿ ಆತ್ಮೀಯ ಸನ್ಮಾನ ಹಾಗೂ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ರೋಣ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿ.ಟಿ. ರಾಜೂರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಸ್ಕಾಂ ಇಲಾಖೆ ಮತ್ತು ಗ್ರಾಹಕರ ನಡುವಿನ ಸಂಪರ್ಕ ಕೊಂಡಿಯಾಗಿ ಮಹೇಶ ಹಿರೇಮಠ ಅವರು ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಪ್ರಜ್ಞೆಯಿಂದ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಲಾಖೆಗೆ ಉತ್ತಮ ಹೆಸರು ತಂದಿದ್ದಾರೆ ಎಂದು ಶ್ಲಾಘಿಸಿದರು.

ರೋಣ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ಕೋಚಿ ಮಾತನಾಡಿ, ಗ್ರಾಮೀಣ ವಿದ್ಯುತ್ ಸರಬರಾಜು, ಬಾಕಿ ವಸೂಲಿ ಹಾಗೂ ಇಲಾಖೆಯ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದ ಅವರ ಸೇವೆ ಯುವ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದರು.

ಸನ್ಮಾನ ಸ್ವೀಕರಿಸಿದ ಮಹೇಶ ಹಿರೇಮಠ, ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದಲೇ ತಮ್ಮ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದನ್ನೇ ಕರ್ತವ್ಯವೆಂದು ಭಾವಿಸಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಎಚ್. ಅಮರಶೆಟ್ಟಿ, ಎಂ.ಎನ್. ಮುಲ್ಲಾ, ಐ.ಎ. ಚೌಭಾರಿ, ವಿ.ಆರ್. ಸರ್ವಿ, ಎಂ.ಜೆ. ಹುಡೇದ, ವೀರೇಶ ಸಜ್ಜನ್, ಮರಿಯಪ್ಪ ಅಳವಂಡಿ, ಶರಣಪ್ಪ ಚವಡಿ, ಮಹೇಶ ಹಡಪದ, ಪ್ರಕಾಶ ವಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಗ್ರಾಮ ವಿದ್ಯುತ್ ಪ್ರತಿನಿಧಿಗಳು ಹಾಗೂ ಹಿರೇಮಠ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

“ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿ ಮಹೇಶ ಹಿರೇಮಠ ಅವರು ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದ್ದಾರೆ.”

– ವಿ.ಟಿ. ರಾಜೂರ, ಕಾರ್ಯನಿರ್ವಾಹಕ ಅಭಿಯಂತರ, ಹೆಸ್ಕಾಂ ರೋಣ ವಿಭಾಗ

ಅಕ್ಷರ ಬಿತ್ತಿದ ಗುರುಗೆ ಅಭಿಮಾನದ ವಿದಾಯ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಂಡು ಪಠ್ಯದ ಜೊತೆಗೆ ಜೀವನ ಮೌಲ್ಯಗಳ ಶಿಕ್ಷಣ ನೀಡಿ ವಿದ್ಯಾರ್ಥಿಗಳ ಪ್ರೀತಿ ಗಳಿಸಿದ ಕನ್ನಡ ಶಿಕ್ಷಕ ಎಸ್.ಎಚ್. ಶೆಟ್ಟಿನಾಯಕರ ಅವರು ಈ ಶಾಲೆಯ ಆದರ್ಶ ಶಿಕ್ಷಕರಾಗಿದ್ದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಸಿ.ಸಿ. ಕುರಹಟ್ಟಿ ಹೇಳಿದರು.

ಲಕ್ಕುಂಡಿಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಸ್.ಎಚ್. ಶೆಟ್ಟಿನಾಯಕರವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿ, ಮುಖ್ಯೋಪಾಧ್ಯಾಯರಿಗೆ ಹೆಗಲಾಗಿ, ಗ್ರಾಮಸ್ಥರಿಗೆ ಆತ್ಮೀಯ ಸ್ನೇಹಿತರಾಗಿ, ಶಾಲಾ ಆಡಳಿತಕ್ಕೆ ಸಲಹೆಗಾರರಾಗಿ ಹಾಗೂ ಮಕ್ಕಳಿಗೆ ತಂದೆ-ತಾಯಿಯಂತೆ ಸೇವೆ ಸಲ್ಲಿಸಿದ ಅವರ 14 ವರ್ಷಗಳ ಸೇವೆ ಶಾಲೆಯ ಇತಿಹಾಸದಲ್ಲಿ ಸ್ಮರಣೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕ ಎನ್.ಸಿ. ಮುಕ್ಕಣ್ಣವರ ಮಾತನಾಡಿ, ವಿದ್ಯಾರ್ಥಿಗಳ ಹೃದಯ ಗೆದ್ದ ಶಿಕ್ಷಕರಾಗಿ ಶೆಟ್ಟಿನಾಯಕರ ಸೇವೆ ಸಾರ್ಥಕವಾಗಿದೆ. ಶಾಲೆಯ ಅಭಿವೃದ್ಧಿ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ಅವರು ಸಲ್ಲಿಸಿದ ಕೊಡುಗೆ ಶ್ಲಾಘನೀಯ ಎಂದರು.

ನಿವೃತ್ತ ಯೋಧ ದತ್ತಾತ್ರೇಯ ಜೋಶಿ ಮಾತನಾಡಿ, ಶಿಕ್ಷಣ ಅತ್ಯಂತ ಪವಿತ್ರ ಕ್ಷೇತ್ರವಾಗಿದ್ದು, ಅದಕ್ಕೆ ಶೆಟ್ಟಿನಾಯಕರವರು ಹೊಸ ಶಕ್ತಿ ತುಂಬಿದ್ದಾರೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್. ಪೂಜಾರ ಮಾತನಾಡಿ, “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ” ಎಂಬ ಮಾತಿನಂತೆ ಶೆಟ್ಟಿನಾಯಕರವರು ತಮ್ಮ ಶಿಕ್ಷಕ ಸೇವೆಯ ಮೂಲಕ ಗುರುಗಳ ಮಹತ್ವವನ್ನು ಎತ್ತಿಹಿಡಿದಿದ್ದಾರೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಎಚ್. ಶೆಟ್ಟಿನಾಯಕರ, ಗದಗ ತಾಲೂಕಿನ ಕೀರಿಟಗೇರಿಯಲ್ಲಿ ಆರಂಭವಾದ ತಮ್ಮ ಶಿಕ್ಷಕ ಜೀವನ ಲಕ್ಕುಂಡಿಯಲ್ಲಿ ಪೂರ್ಣಗೊಂಡಿದೆ. 39 ವರ್ಷಗಳ ಶಿಕ್ಷಕ ಸೇವೆ ಎಲ್ಲರ ಪ್ರೀತಿ, ವಿಶ್ವಾಸ ಹಾಗೂ ಸಹಕಾರದಿಂದ ಸಾರ್ಥಕವಾಗಿದೆ. ಕೀರಿಟಗೇರಿ ಹಾಗೂ ಲಕ್ಕುಂಡಿ ಗ್ರಾಮಸ್ಥರು ಶಾಲೆಯ ಅಭಿವೃದ್ಧಿಗೆ ನೀಡಿದ ಸಹಕಾರವನ್ನು ಜೀವನಪೂರ್ತಿ ಸ್ಮರಿಸುತ್ತೇನೆ ಎಂದು ಭಾವುಕರಾದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಮುಖ್ಯೋಪಾಧ್ಯಾಯಿನಿ ಜ್ಯೋತಿ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ವೀರಯ್ಯ ಗಂಧದ, ಎಸ್‌ಡಿಎಂಸಿ ಅಧ್ಯಕ್ಷ ರಮಜಾನಸಾಬ ತಹಶೀಲ್ದಾರ, ಅಶೋಕ ಬೂದಿಹಾಳ, ಮಲ್ಲಿಕಾರ್ಜುನ ಹಗರಿ, ಬಸವರಾಜ ಪುರದ, ಅಶೋಕ ಗದಗೀನ, ನಾಗಪ್ಪ ಕುಂಬಾರ, ಮಹಾಂತೇಶ ಕುಂಬಾರ, ಶ್ರೀಧರ ಮಲ್ಲಾಡದ, ಕೆ.ಎಂ. ವಡವಿ, ಟಿ.ಎಂ. ಶಿರಹಟ್ಟಿ, ಮಹೇಶಗೌಡ ಪಾಟೀಲ, ಶಿವಣ್ಣ ಕಟಕಟಿ, ವೀರೇಶ ಹಡಪದ, ಯಲ್ಲಪ್ಪಗೌಡ ಸಂಕನಗೌಡ, ಮಲ್ಲಪ್ಪ ದಂಡಿನ ಸೇರಿದಂತೆ ಶಿಕ್ಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶೋಭಾ ಪೂಜಾರ ಪ್ರಾರ್ಥಿಸಿದರು. ಕೀರ್ತಿ ಮ್ಯಾಗೇರಿ ಸ್ವಾಗತಿಸಿದರು. ವೈ.ವೈ. ಬೆಟಗೇರಿ ನಿರೂಪಿಸಿದರು. ಎಂ.ಎನ್. ಮುನಶಿ ವಂದಿಸಿದರು.

“ಪಠ್ಯದ ಜೊತೆಗೆ ಜೀವನ ಮೌಲ್ಯಗಳನ್ನು ಬೋಧಿಸಿ ವಿದ್ಯಾರ್ಥಿಗಳ ಮನ ಗೆದ್ದ ಶಿಕ್ಷಕ ಎಸ್.ಎಚ್. ಶೆಟ್ಟಿನಾಯಕರ ಸೇವೆ ಸದಾ ಸ್ಮರಣೀಯ.”

– ಸಿ.ಸಿ. ಕುರಹಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರು