Home Blog Page 4

IPL 2026: ಫೈನಲ್ ಟಿಕೆಟ್‌ಗೆ ಹೋರಾಟ: ಇಂದು RCB Vs GT ಕ್ವಾಲಿಫೈಯರ್-1 ರಣರೋಚಕ ಕದನ!

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ ಲೀಗ್ ಹಂತದ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಪ್ಲೇಆಫ್ ಹಂತ ಆರಂಭವಾಗಿದೆ.

ಇಂದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಕ್ವಾಲಿಫೈಯರ್-1 ಗೆದ್ದ ತಂಡ ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದೆ. ಸೋತ ತಂಡಕ್ಕೆ ಇನ್ನೂ ಒಂದು ಅವಕಾಶ ಸಿಗಲಿದ್ದು, ಎಲಿಮಿನೇಟರ್ ಪಂದ್ಯದಲ್ಲಿ ಜಯಶಾಲಿಯಾದ ತಂಡದ ವಿರುದ್ಧ ಕ್ವಾಲಿಫೈಯರ್-2 ಆಡಬೇಕಾಗುತ್ತದೆ.

ಈ ಬಾರಿಯ ಪ್ಲೇಆಫ್‌ನಲ್ಲಿ ಕಳೆದ 8 ವರ್ಷಗಳ ಇತಿಹಾಸವೂ ಮಹತ್ವ ಪಡೆದುಕೊಂಡಿದ್ದು, ಕ್ವಾಲಿಫೈಯರ್-1 ಗೆದ್ದ ತಂಡವೇ ಬಹುತೇಕ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ವಿಶೇಷವಾಗಿದೆ. ಇದರಿಂದ ಇಂದಿನ ಪಂದ್ಯಕ್ಕೆ ಇನ್ನಷ್ಟು ಮಹತ್ವ ಬಂದಿದೆ ಎಂದು ಕ್ರಿಕೆಟ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಧರ್ಮಶಾಲಾ ಪಿಚ್ ಬ್ಯಾಟರ್‌ಗಳಿಗೆ ಅನುಕೂಲಕರವಾಗಿದ್ದು, ಹೆಚ್ಚಿನ ಸ್ಕೋರ್ ಪಂದ್ಯ ನಿರೀಕ್ಷಿಸಲಾಗಿದೆ. 200 ರಿಂದ 220 ರನ್ ಗುರಿ ಸುರಕ್ಷಿತ ಎಂದು ವಿಶ್ಲೇಷಕರು ಹೇಳಿದ್ದಾರೆ. ಇಬ್ಬನಿ ಪರಿಣಾಮದಿಂದ ಚೇಸಿಂಗ್ ಮಾಡುವ ತಂಡಕ್ಕೂ ಲಾಭವಾಗುವ ಸಾಧ್ಯತೆ ಇದೆ. ಟಾಸ್ ಕೂಡ ಮಹತ್ವದ ಪಾತ್ರ ವಹಿಸಲಿದೆ.

RCB ತಂಡದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದೇವದತ್ ಪಡಿಕ್ಕಲ್, ಟಿಂ ಡೇವಿಡ್ ಹಾಗೂ ಜಿತೇಶ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜಲ್‌ವುಡ್ ಪ್ರಮುಖ ಶಕ್ತಿಯಾಗಿದ್ದಾರೆ.

ಇತ್ತ ಗುಜರಾತ್ ಟೈಟಾನ್ಸ್ ತಂಡದಲ್ಲಿ ಶುಭಮನ್ ಗಿಲ್, ಸಾಯಿ ಸುದರ್ಶನ್ ಹಾಗೂ ರಶೀದ್ ಖಾನ್, ಕಗಿಸೋ ರಬಾಡಾ, ಮೊಹಮ್ಮದ್ ಸಿರಾಜ್ ಸೇರಿದಂತೆ ಬಲಿಷ್ಠ ಆಟಗಾರರು ತಂಡದ ಆಧಾರವಾಗಿದ್ದಾರೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ರಾಂಗ್ ಸೈಡ್‌ನಲ್ಲಿ ಅತಿವೇಗವಾಗಿ ಬಂದ ಗೂಡ್ಸ್ ಆಟೋ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಅವರ 9 ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾಂತೇಶ್ ಮಾನೆ ತಮ್ಮ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ರಾಯಬಾಗ ಪಟ್ಟಣದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ವೇಳೆ ಎದುರಿನಿಂದ ರಾಂಗ್ ಸೈಡ್‌ನಲ್ಲಿ ವೇಗವಾಗಿ ಬಂದ ಗೂಡ್ಸ್ ಆಟೋ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ನಂತರ ಗೂಡ್ಸ್ ಆಟೋ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ರಾಯಬಾಗ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆಟೋ ಚಾಲಕನಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಒಂದೇ ಕುಟುಂಬದ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಬೊಮ್ಮನಾಳ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

ಪೆಟ್ರೋಲ್-ಡೀಸೆಲ್ ಬಳಿಕ ಈಗ ಸಿಎನ್‌ಜಿ ಬೆಲೆ ಹೆಚ್ಚಳ; ದೆಹಲಿಯಲ್ಲಿ ಹೊಸ ದರ ಜಾರಿ!

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ನಡುವೆಯೇ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ದರದಲ್ಲೂ ಏರಿಕೆ ಕಂಡುಬಂದಿದೆ.

ಇಂದಿನಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು ಪ್ರತಿ ಕೆಜಿಗೆ ₹2 ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ದರದ ಪ್ರಕಾರ ದೆಹಲಿಯಲ್ಲಿ ಸಿಎನ್‌ಜಿ ಪ್ರತಿ ಕೆಜಿ ಬೆಲೆ ₹8.09ಕ್ಕೆ ತಲುಪಿದೆ. ಇತ್ತೀಚಿನ ದಿನಗಳಲ್ಲಿ ಇದು ಎರಡನೇ ಬಾರಿಗೆ ನಡೆದ ದರ ಏರಿಕೆಯಾಗಿದ್ದು, ಕಳೆದ 12 ದಿನಗಳಲ್ಲಿ ಒಟ್ಟಾರೆ ₹6 ಹೆಚ್ಚಳವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಜಾಗತಿಕ ತೈಲ ಮಾರುಕಟ್ಟೆಯ ಅಸ್ಥಿರತೆ ಮತ್ತು ಇಂಧನ ವೆಚ್ಚದ ಏರಿಕೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಸಿಎನ್‌ಜಿ ಬಳಸುವ ಆಟೋ, ಟ್ಯಾಕ್ಸಿ, ಶಾಲಾ ವ್ಯಾನ್ ಹಾಗೂ ಖಾಸಗಿ ವಾಹನ ಚಾಲಕರಿಗೆ ಈ ದರ ಏರಿಕೆ ದೊಡ್ಡ ಹೊರೆ ತಂದಿದೆ.

ಈ ಬೆಲೆ ಏರಿಕೆಯ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಪ್ರಯಾಣ ದರ ಹಾಗೂ ಸರಕು ಸಾಗಣೆ ದರಗಳಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕ್ವಿನ್ ಸಿಟಿಗೆ ಬಂಪರ್ ಹೂಡಿಕೆ: ಟೊಯೋಟಾದಿಂದ 1,200 ಕೋಟಿ ಇನ್ವೆಸ್ಟ್‌ಮೆಂಟ್!

ಬೆಂಗಳೂರು: ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿ ಯೋಜನೆಗೆ ಮೊದಲ ದೊಡ್ಡ ಹೂಡಿಕೆ ಸೇರ್ಪಡೆಯಾಗಿದೆ.

ಡಾಬಸಪೇಟೆ–ದೊಡ್ಡಬಳ್ಳಾಪುರ ನಡುವೆ ನಿರ್ಮಾಣವಾಗುತ್ತಿರುವ ಈ ಹೊಸ ಕೈಗಾರಿಕಾ ನಗರದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂ. ಹೂಡಿಕೆಯಲ್ಲಿ ‘ಬಿಸಿನೆಸ್ ಇಂಟೆಲಿಜೆಂಟ್ ಹಬ್’ ಸ್ಥಾಪಿಸಲು ಮುಂದಾಗಿದೆ.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಸಮ್ಮುಖದಲ್ಲಿ ಈ ಸಂಬಂಧ ಒಪ್ಪಂದಕ್ಕೆ ಅಧಿಕೃತ ಅಂಕಿತ ಹಾಕಲಾಯಿತು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಟೊಯೋಟಾ ಕಂಪನಿಯ ಸಿಓಒ ಮತ್ತು ವಿಶೇಷ ಯೋಜನೆ ನಿರ್ದೇಶಕ ಸುದೀಪ್ ದಳವಿ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹೂಡಿಕೆಗೆ ಸರ್ಕಾರ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. “ವಿಶ್ವದಲ್ಲೇ ಮೊದಲ ಬಾರಿಗೆ ಈ ರೀತಿಯ ಘಟಕ ಸ್ಥಾಪನೆಯಾಗುತ್ತಿರುವುದು ಸಂತಸದ ವಿಷಯ” ಎಂದು ಅವರು ಹೇಳಿದರು.

ಸಚಿವ ಎಂ.ಬಿ. ಪಾಟೀಲ್ ಅವರು ಮಾತನಾಡಿ, ಕ್ವಿನ್ ಸಿಟಿಯಲ್ಲಿ ನಡೆಯುತ್ತಿರುವ ಇದು ಪ್ರಥಮ ದೊಡ್ಡ ಹೂಡಿಕೆ ಎಂದು ತಿಳಿಸಿದರು. ಟೊಯೋಟಾ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ 1,200 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ ಸುಮಾರು 200 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು. ಜೊತೆಗೆ ಕಂಪನಿಗೆ ಸುಮಾರು 300 ಎಕರೆ ಭೂಮಿ ನೀಡಲಾಗುವುದು ಎಂದರು.

ಕ್ವಿನ್ ಸಿಟಿಯಲ್ಲಿ ವಾಹನ ತಯಾರಿಕೆ, ಪರೀಕ್ಷಾ ಘಟಕಗಳು ಹಾಗೂ ಆಧುನಿಕ ಉತ್ಪಾದನಾ ಕೇಂದ್ರಗಳು ಸ್ಥಾಪನೆಯಾಗಲಿವೆ. ನವೀನತೆ, ಆರೋಗ್ಯ ಸೇವೆ ಮತ್ತು ಐಟಿ ತಂತ್ರಜ್ಞಾನಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳು ಕೂಡ ಇಲ್ಲಿ ಹೂಡಿಕೆ ಮಾಡಲು ಮುಂದಾಗಿವೆ ಎಂದು ಮಾಹಿತಿ ನೀಡಲಾಗಿದೆ.

ಒಟ್ಟು 5,800 ಎಕರೆ ಪ್ರದೇಶದಲ್ಲಿ ಹಂತಹಂತವಾಗಿ ಅಭಿವೃದ್ಧಿಯಾಗುತ್ತಿರುವ ಕ್ವಿನ್ ಸಿಟಿ ಯೋಜನೆಗೆ 48 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷಿಸಲಾಗಿದ್ದು, ಸುಮಾರು 1 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಟೊಯೋಟಾ ಕಂಪನಿಯ ಉನ್ನತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಭಾರತದಲ್ಲಿ ಥೈರಾಯ್ಡ್ ಪ್ರಕರಣಗಳು ಏರಿಕೆ: 4.2 ಕೋಟಿ ಜನರಿಗೆ ಸಮಸ್ಯೆ!

ಭಾರತದಲ್ಲಿ ಥೈರಾಯ್ಡ್ ಸಮಸ್ಯೆ ದಿನೇದಿನೇ ಹೆಚ್ಚುತ್ತಿರುವುದು ವೈದ್ಯಕೀಯ ತಜ್ಞರ ಗಮನ ಸೆಳೆದಿದೆ.

ಇತ್ತೀಚಿನ ವರದಿಗಳ ಪ್ರಕಾರ ದೇಶದಲ್ಲಿ ಸುಮಾರು 4.2 ಕೋಟಿ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ವಿಶೇಷವಾಗಿ ಮಹಿಳೆಯರಲ್ಲಿ ಈ ಕಾಯಿಲೆ ಹೆಚ್ಚು ಕಂಡುಬರುತ್ತಿದ್ದರೂ, ಇತ್ತೀಚೆಗೆ ಮಕ್ಕಳು ಮತ್ತು ಪುರುಷರಲ್ಲಿಯೂ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ತಜ್ಞರ ಪ್ರಕಾರ, ಥೈರಾಯ್ಡ್‌ನಲ್ಲಿ ಮುಖ್ಯವಾಗಿ ಎರಡು ವಿಧಗಳಿವೆ — ಹೈಪೋಥೈರಾಯ್ಡಿಸಮ್ ಮತ್ತು ಹೈಪರ್‌ಥೈರಾಯ್ಡಿಸಮ್. ಇವುಗಳ ಲಕ್ಷಣಗಳು ವಿಭಿನ್ನವಾಗಿರುವುದರಿಂದ ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ. ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಆರೋಗ್ಯ ಸಮಸ್ಯೆ ಗಂಭೀರವಾಗುವ ಸಾಧ್ಯತೆ ಇದೆ ಎಂದು ಸೀನಿಯರ್ ಡೈಟಿಷಿಯನ್ ಗೀತಿಕಾ ಚೋಪ್ರಾ ಅವರು ತಿಳಿಸಿದ್ದಾರೆ.

ಆಹಾರ ಕ್ರಮದ ಬಗ್ಗೆ ಸಲಹೆ ನೀಡಿರುವ ಅವರು, ಥೈರಾಯ್ಡ್ ಸಮಸ್ಯೆ ಇರುವವರು ಪ್ರೋಟೀನ್ ಸಮೃದ್ಧ ಆಹಾರಗಳನ್ನು ಹೆಚ್ಚು ಸೇವಿಸಬೇಕು ಎಂದು ಹೇಳಿದ್ದಾರೆ. ದಾಲ್, ಪನೀರ್, ಮೊಟ್ಟೆ, ಮೊಸರು, ಮೀನು ಮತ್ತು ಚಿಕನ್ ಮೆಟಾಬಾಲಿಸಂ ಸುಧಾರಿಸಲು ಸಹಾಯ ಮಾಡುತ್ತವೆ ಹಾಗೂ ದಣಿವು ಕಡಿಮೆ ಮಾಡುತ್ತವೆ ಎಂದು ವಿವರಿಸಿದ್ದಾರೆ.

ಅದೇ ರೀತಿ, ಪಂಪ್ಕಿನ್ ಸೀಡ್ಸ್, ನಟ್ಸ್, ಸಮುದ್ರ ಆಹಾರ ಮತ್ತು ಸಂಪೂರ್ಣ ಧಾನ್ಯಗಳಲ್ಲಿ ಇರುವ ಸೆಲೆನಿಯಂ ಮತ್ತು ಜಿಂಕ್ ಥೈರಾಯ್ಡ್ ಹಾರ್ಮೋನ್ ಸಮತೋಲನಕ್ಕೆ ಸಹಾಯಕವಾಗುತ್ತವೆ ಎಂದು ತಜ್ಞರು ಹೇಳಿದ್ದಾರೆ. ಐಯೋಡಿನ್ ಕೂಡ ಅಗತ್ಯವಾಗಿದ್ದರೂ ಅದರ ಅತಿಯಾದ ಸೇವನೆ ಹಾನಿಕಾರಕವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾಫ್ಟ್ ಡ್ರಿಂಕ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಫ್ರೈಡ್ ಆಹಾರ ಹಾಗೂ ಹೆಚ್ಚು ಸಕ್ಕರೆ ಇರುವ ಆಹಾರಗಳನ್ನು ಕಡಿಮೆ ಮಾಡುವುದು ಅಗತ್ಯ ಎಂದು ಸಲಹೆ ನೀಡಲಾಗಿದೆ. ಇವು ದೇಹದಲ್ಲಿ ಉರಿಯನ್ನು ಹೆಚ್ಚಿಸಿ ತೂಕ ಹೆಚ್ಚಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದ್ದಾರೆ.

ಗಟ್ ಆರೋಗ್ಯಕ್ಕೂ ವಿಶೇಷ ಗಮನ ನೀಡಬೇಕೆಂದು ತಜ್ಞರು ಸಲಹೆ ನೀಡಿದ್ದು, ಮೊಸರು, ಮಜ್ಜಿಗೆ, ಫರ್ಮೆಂಟೆಡ್ ಫುಡ್ಸ್ ಮತ್ತು ಫೈಬರ್ ಸಮೃದ್ಧ ಆಹಾರಗಳು ಥೈರಾಯ್ಡ್ ನಿಯಂತ್ರಣಕ್ಕೆ ಸಹಾಯಕವಾಗುತ್ತವೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಔಷಧಿಯ ಜೊತೆಗೆ ಸರಿಯಾದ ಆಹಾರ, ಉತ್ತಮ ನಿದ್ರೆ, ನಿಯಮಿತ ವ್ಯಾಯಾಮ ಹಾಗೂ ಥೈರಾಯ್ಡ್ ಪರೀಕ್ಷೆಗಳನ್ನು ನಿರಂತರವಾಗಿ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಜ್ಞರು ಒತ್ತಾಯಿಸಿದ್ದಾರೆ.

ಮಳೆ ವಿಳಂಬವಾದರೆ ಬಿಕ್ಕಟ್ಟು ಖಚಿತ: ಖಾಲಿ ಹಂತಕ್ಕೆ ತಲುಪಿದ ಹಿಡಕಲ್ ಜಲಾಶಯ

ಚಿಕ್ಕೋಡಿ: ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜೀವನಾಡಿ ಎಂದೇ ಗುರುತಿಸಲ್ಪಡುವ ಹಿಡಕಲ್ ಜಲಾಶಯ ಬಿರು ಬೇಸಿಗೆಯ ಪರಿಣಾಮವಾಗಿ ಗಂಭೀರ ಸಂಕಷ್ಟದ ಹಂತಕ್ಕೆ ತಲುಪಿದೆ.

ಮುಂಗಾರು ಮಳೆಯು ಇನ್ನೂ ದೂರದಲ್ಲಿರುವ ಸಂದರ್ಭದಲ್ಲೇ ಜಲಾಶಯದ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಒಟ್ಟು 51 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಸದ್ಯ ಕೇವಲ 8 ಟಿಎಂಸಿ ನೀರು ಮಾತ್ರ ಉಳಿದಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚಿನ ವರ್ಷಗಳಲ್ಲಿ ಬೇಸಿಗೆಯ ಆರಂಭಕ್ಕೂ ಮುನ್ನವೇ ಇಷ್ಟು ದೊಡ್ಡ ಪ್ರಮಾಣದಲ್ಲಿ ನೀರು ಕಡಿಮೆಯಾಗಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.

ಹಿಡಕಲ್ ಜಲಾಶಯವು ಕೇವಲ ಕೃಷಿ ನೀರಾವರಿಗೆ ಮಾತ್ರವಲ್ಲದೆ, ಬೆಳಗಾವಿ ಮಹಾನಗರ, ಹುಕ್ಕೇರಿ ಹಾಗೂ ಸಂಕೇಶ್ವರ ಪಟ್ಟಣಗಳ ಕುಡಿಯುವ ನೀರಿನ ಪ್ರಮುಖ ಮೂಲವಾಗಿದೆ. ಜೊತೆಗೆ 100ಕ್ಕೂ ಹೆಚ್ಚು ಗ್ರಾಮಗಳಿಗೆ ಇದೇ ಜಲಾಶಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ನೀರಿನ ಮಟ್ಟ ಕುಸಿತವಾಗಿರುವುದು ಗ್ರಾಮೀಣ ಹಾಗೂ ನಗರ ಭಾಗದ ಜನರಲ್ಲಿ ಭಾರಿ ಚಿಂತೆ ಮೂಡಿಸಿದೆ.

ಈ ಜಲಾಶಯದಿಂದ ನಡೆಸಲಾಗುತ್ತಿದ್ದ ಏತ ನೀರಾವರಿ ಯೋಜನೆಗಳಿಗೂ ನೀರಿನ ಕೊರತೆಯಿಂದ ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಮಳೆಯ ಕೊರತೆ ಮುಂದುವರಿದರೆ, ಉಳಿದಿರುವ ನೀರು ಕೂಡ ಆವಿಯಾಗಿ ಜಲಾಶಯ “ಡೆಡ್ ಸ್ಟೋರೇಜ್” ಹಂತಕ್ಕೆ ತಲುಪುವ ಭೀತಿ ವ್ಯಕ್ತವಾಗಿದೆ.

ಈ ನಡುವೆ ಸಾರ್ವಜನಿಕರು ಹಾಗೂ ರೈತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಉಳಿದಿರುವ ನೀರನ್ನು ಕೃಷಿ ಅಥವಾ ಇತರೆ ಬಳಕೆಗಳಿಗೆ ಹರಿಸದೆ ಕೇವಲ ಕುಡಿಯುವ ನೀರಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಕುಸಿತದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ದಿನಗಳಲ್ಲಿ ನೀರಿನ ಸಂಕಷ್ಟ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ.

ಬಡವರ ಅಕ್ಕಿ ಕಾಳಸಂತೆಗೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನಲ್ಲಿ ಪಡಿತರ ಅಕ್ಕಿಯ ಅಕ್ರಮ ಮಾರಾಟ ಮತ್ತು ಸಾಗಾಟ ಜಾಲ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ದಂಧೆಕೋರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆಯವರು ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ವೇಳೆ ಸಂಘಟನೆಯ ತಾಲೂಕು ಅಧ್ಯಕ್ಷ ಇಸ್ಮಾಯಿಲ್ ಆಡೂರ ಹಾಗೂ ಮುಖಂಡ ರಮೇಶ ಹಂಗನಕಟ್ಟಿ ಮಾತನಾಡಿ, “ಬಡಜನರ ಹಸಿವು ನೀಗಿಸಲು ಸರ್ಕಾರ ಉಚಿತವಾಗಿ ನೀಡುವ ಪಡಿತರ ಅಕ್ಕಿಯನ್ನು ಕೆಲ ದಂಧೆಕೋರರು ಮನೆಮನೆಗೆ ತೆರಳಿ ಕೆಜಿಗೆ ₹12ರಿಂದ ₹15ಕ್ಕೆ ಖರೀದಿಸಿ, ಬಳಿಕ ಹೆಚ್ಚಿನ ದರಕ್ಕೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.
ಅಕ್ರಮವಾಗಿ ಸಂಗ್ರಹಿಸಲಾಗುವ ಅಕ್ಕಿಯನ್ನು ಲಾರಿಗಳ ಮೂಲಕ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ಸಾಗಾಟ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ಈ ಜಾಲ ನಡೆಯುತ್ತಿದ್ದರೂ ಆಹಾರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮ ಅಕ್ಕಿ ಖರೀದಿ, ಸಂಗ್ರಹ ಹಾಗೂ ಸಾಗಾಟದಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಚೆಕ್‌ಪೋಸ್ಟ್ ಹಾಗೂ ವಿಶೇಷ ನಿಗಾ ಘಟಕ ಸ್ಥಾಪಿಸಿ, ಬಡವರ ಪಾಲಿನ ಪಡಿತರ ಅಕ್ಕಿ ಕಾಳಸಂತೆಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಇಸಾಕಭಾಷಾ ಹರಪನಹಳ್ಳಿ, ಸದಾನಂದ ನಂದೆಣ್ಣವರ, ಶರಣಪ್ಪ ಬಸಾಪುರ, ಪೀರಸಾಬ್ ರಿತ್ತಿ, ಮೈನು ಮೊಮೀನ್, ತನ್ವೀರ್ ರಿತ್ತಿ, ಕರೀಂಸಾಬ್ ಶಿರಹಟ್ಟಿ, ಸಿದ್ದಲಿಂಗೇಶ ಮರಳಿಹಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ: ಸಚಿವ ಎಚ್‌.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅದನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಳಿಗಾಲದ ಅಧಿವೇಶನದ ಸ್ಥಳ ಬದಲಾವಣೆ ಕುರಿತು ಸಚಿವ ಸಂಪುಟದಲ್ಲಿ ಇನ್ನೂ ಯಾವುದೇ ಚರ್ಚೆ ಅಥವಾ ನಿರ್ಣಯವಾಗಿಲ್ಲ. ಮೇ 29ರಂದು ನಡೆಯುವ ಸಾಧ್ಯತೆಯಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಬಹುದು” ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಮಾತನಾಡಿದ ಸಚಿವರು, “ಕೆಲವು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ತೊಂದರೆ ಉಂಟಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ” ಎಂದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾನದ ಹಕ್ಕು ಕಳೆದುಕೊಂಡರೆ ಗ್ಯಾರಂಟಿ ಸೌಲಭ್ಯಗಳು ನಿಲ್ಲುತ್ತವೆ ಎಂಬ ಆತಂಕ ಜನರಲ್ಲಿ ಇದೆ. ಜಿಎಸ್‌ಟಿ ಸಂಬಂಧಿತ ಕಾರಣಗಳಿಂದ ಕೆಲವರ ಯೋಜನೆಗಳು ಸ್ಥಗಿತಗೊಂಡಿದ್ದರೂ, ಸ್ಪಷ್ಟೀಕರಣ ನೀಡಿದ ಪ್ರಕರಣಗಳನ್ನು ಮರುಪರಿಶೀಲಿಸಿ ಸೌಲಭ್ಯ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಟೀಕಿಸಿದ ಸಚಿವರು, “ದೇಶದ ಆರ್ಥಿಕ ಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡದೇ, ಈಗ ಎರಡು–ಮೂರು ದಿನಕ್ಕೊಮ್ಮೆ ದರ ಹೆಚ್ಚಿಸಲಾಗುತ್ತಿದೆ. ಜನರ ಬದುಕಿನೊಂದಿಗೆ ಕೇಂದ್ರ ಸರ್ಕಾರ ಚಲ್ಲಾಟ ಆಡಬಾರದು” ಎಂದು ವಾಗ್ದಾಳಿ ನಡೆಸಿದರು.

ಮೊದಲ ಮಳೆಗೆ ಮೈದುಂಬಿದ ಮಾಲವಿ ಜಲಾಶಯ

ಹಗರಿಬೊಮ್ಮನಹಳ್ಳಿ: ತಾಲೂಕಿನಾದ್ಯಂತ ಸುರಿದ ವರ್ಷದ ಮೊದಲ ಭಾರೀ ಮಳೆಯಿಂದ ಹಗರಿಬೊಮ್ಮನಹಳ್ಳಿ ತಾಲೂಕಿನ ಜೀವನಾಡಿಯಾಗಿರುವ ಮಾಲವಿ ಜಲಾಶಯಕ್ಕೆ ಹೊಸ ಜೀವಕಳೆ ಬಂದಿದೆ. ಜಲಾಶಯದತ್ತ ಮಳೆ ನೀರು ಹರಿದು ಬರುತ್ತಿರುವ ದೃಶ್ಯ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.
ಬೇಸಿಗೆಯ ತೀವ್ರ ಬಿಸಿಲಿನಿಂದ ನೀರಿನ ಮಟ್ಟ ಕುಸಿದಿದ್ದ ಜಲಾಶಯ, ಮೊದಲ ಮಳೆಯಲ್ಲೇ ಮತ್ತೆ ಚೇತರಿಕೆ ಕಾಣತೊಡಗಿದೆ. ಮಳೆಯ ಆಗಮನದಿಂದ ತಾಲೂಕಿನ ಜನರು ಹಾಗೂ ರೈತರು ಸಂತಸಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಂತಾಗಿದೆ.
ಇತ್ತೀಚೆಗೆ ಜಲಾಶಯದಲ್ಲಿ ಹೊಸ ಗೇಟ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಈ ಮಳೆಯೊಂದಿಗೆ ಅದರ ಉಪಯೋಗ ಸ್ಪಷ್ಟವಾಗತೊಡಗಿದೆ. ಹೊಸ ಗೇಟ್‌ನಿಂದ ನೀರಿನ ಸಂಗ್ರಹಣೆ ಹಾಗೂ ನಿರ್ವಹಣೆ ಸುಧಾರಣೆಯಾಗಲಿದ್ದು, ಮುಂದಿನ ದಿನಗಳಲ್ಲಿ ಕೃಷಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ಮಾಲವಿ ಜಲಾಶಯ ತಾಲೂಕಿಗೆ ಕುಡಿಯುವ ನೀರು ಹಾಗೂ ನೀರಾವರಿ ವ್ಯವಸ್ಥೆಯ ಪ್ರಮುಖ ಆಧಾರವಾಗಿದ್ದು, ಮೊದಲ ಮಳೆಯಲ್ಲೇ ಜಲಾಶಯಕ್ಕೆ ನೀರು ಹರಿದು ಬಂದಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

ಸಂತ್ರಸ್ತರ ಅಳಲು ಆಲಿಸಿದ ಸಚಿವ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಅಧಿಕ ಮಳೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಗದಗ ನಗರದ ಗಂಗಿಮಡಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಸೋಮವಾರ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಸ್ಥಳದಲ್ಲೇ ಅಧಿಕಾರಿಗಳಿಂದ ಮಾಹಿತಿ ಪಡೆದು ತುರ್ತು ನೆರವು ಹಾಗೂ ಶಾಶ್ವತ ಪುನರ್ವಸತಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಂತ್ರಸ್ತರೊಂದಿಗೆ ನೇರವಾಗಿ ಮಾತನಾಡಿದ ಸಚಿವರು, “ನಿಮ್ಮ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕನ ಮಾಡಿದ್ದೇನೆ. ಸಂಕಷ್ಟದಲ್ಲಿರುವ ಜನರ ನೆರವಿಗೆ ಸರ್ಕಾರ ಸದಾ ಬದ್ಧವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದು ಧೈರ್ಯ ತುಂಬಿದರು.
ಗಂಗಿಮಡಿ ಪ್ರದೇಶದಲ್ಲಿ ಒಟ್ಟು 96 ಕುಟುಂಬಗಳು ತಗಡಿನ ಶೇಡ್‌ಗಳಲ್ಲಿ ಜೀವನ ಸಾಗಿಸುತ್ತಿದ್ದು, ಭಾರೀ ಮಳೆಯಿಂದ 9 ಶೇಡ್‌ಗಳು ಸಂಪೂರ್ಣ ಕುಸಿದಿವೆ. ಈಗಾಗಲೇ ಜಿಲ್ಲಾಡಳಿತದಿಂದ 88 ಕುಟುಂಬಗಳಿಗೆ ತಲಾ ₹5 ಸಾವಿರ ನೆರವು ವಿತರಿಸಲಾಗಿದ್ದು, ಉಳಿದವರಿಗೆ ಶೀಘ್ರವೇ ಸಹಾಯಧನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಕೆಲವರು ಮನೆಗಳಿದ್ದರೂ ಶೇಡ್‌ಗಳಲ್ಲಿ ವಾಸಿಸುತ್ತಿರುವ ಮಾಹಿತಿ ಗಮನಕ್ಕೆ ಬಂದಿದೆ. ಅರ್ಹರನ್ನು ಗುರುತಿಸಿ ಮೊದಲ ಹಂತದಲ್ಲಿ ನಿರ್ಮಾಣವಾಗುತ್ತಿರುವ 1000 ಮನೆಗಳಲ್ಲಿ ನಿಜವಾದ ಸಂತ್ರಸ್ತರಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
“₹5 ಸಾವಿರ ಸಾಲದು” – ಸಂತ್ರಸ್ತರ ಮನವಿ
ಸಂಪೂರ್ಣ ಹಾನಿಗೊಳಗಾದ 9 ಕುಟುಂಬಗಳು, “₹5 ಸಾವಿರ ನೆರವು ಸಾಕಾಗುವುದಿಲ್ಲ. ಕನಿಷ್ಠ ₹20 ಸಾವಿರ ಸಹಾಯಧನ ನೀಡಬೇಕು” ಎಂದು ಸಚಿವರ ಮುಂದೆ ಮನವಿ ಮಾಡಿದರು. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪ್ರಸ್ತುತ ಸಂತ್ರಸ್ತರು ಶಾಲಾ ಕೊಠಡಿಗಳಲ್ಲಿ ಆಶ್ರಯ ಪಡೆದಿದ್ದು, ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿಗಳು ಈಗಾಗಲೇ ಆಹಾರ, ಆರೋಗ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದಾರೆ. 96 ಕುಟುಂಬಗಳಲ್ಲಿ ಯಾರಿಗೆ ಮನೆ ಇದೆ, ಯಾರಿಗೆ ಇಲ್ಲ ಎಂಬುದರ ಸಮಗ್ರ ಪರಿಶೀಲನೆ ನಡೆಸಿ, ನಗರಸಭೆ ನಿಯಮಾವಳಿಗಳ ಅನ್ವಯ ಅರ್ಹರಿಗೆ ಮನೆ ಮಂಜೂರು ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಾರ್ವಜನಿಕರು, ಸಚಿವರ ಮುಂದೆ ಮಂಜೂರಾದ ಮನೆಗಳ ಮರುಸರ್ವೇ ನಡೆಸಬೇಕು, ಮನೆ ಪಡೆದು ಬಾಡಿಗೆಗೆ ನೀಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಶಾಶ್ವತ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು, ಸೋಲಾರ್ ಲೈಟ್ ಅಳವಡಿಸಬೇಕು, ಮೂಲಭೂತ ಸೌಲಭ್ಯ ಒದಗಿಸಬೇಕು,
ಮನೆ ಸಿಗುವವರೆಗೆ ಇಲ್ಲಿಯೇ ವಾಸಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಕೆಡಿಪಿ ಸಮಿತಿ ಸದಸ್ಯ ಎಸ್‌.ಎನ್‌. ಬಳ್ಳಾರಿ, ನೀಲವ್ವ ಬೋಳನವರ, ಸಿದ್ದು ಪಾಟೀಲ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್ ಶ್ರೀನಿವಾಸಮೂರ್ತಿ, ಡಾ. ಎಸ್‌.ಎಸ್‌. ನೀಲಗುಂದ, ಆರ್‌.ಎಸ್‌. ಬುರಡಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
“ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಅರ್ಹರಿಗೆ ಮನೆ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು.”
ಎಚ್‌.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ 
 “ನಮ್ಮ ಅಳಲಿಗೆ ಸ್ಪಂದಿಸಿ ಸಚಿವರು ಸ್ಥಳಕ್ಕೆ ಬಂದು ಪರಿಶೀಲಿಸಿರುವುದು ನಮಗೆ ಧೈರ್ಯ ತಂದಿದೆ.”
ಗಂಗಿಮಡಿ ನಿವಾಸಿಗಳು
error: Content is protected !!