Home Blog Page 4

ರಾಜ್ಯ ಮಟ್ಟದಲ್ಲಿ ಮಿಂಚಿದ ಶಿಗ್ಲಿ ಶಾಲೆ ವಿದ್ಯಾರ್ಥಿಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದ ಎಸ್.ಎಸ್. ಕೂಡ್ಲಮಠ ಮಾಧ್ಯಮಿಕ ಶಾಲೆಯ 20 ಸ್ಕೌಟ್ಸ್ ಹಾಗೂ 6 ಗೈಡ್ಸ್ ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿದರು.

ಶನಿವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮೆರೆದಿದ್ದು, ತರಬೇತುದಾರ ಶಿಕ್ಷಕರಾದ ಕೆ.ಆರ್. ಲಮಾಣಿ ಹಾಗೂ ಪಿ.ಸಿ. ಹಿರೇಮಠ ಅವರ ವಿಶೇಷ ತರಬೇತಿ ಈ ಯಶಸ್ಸಿಗೆ ಕಾರಣವಾಗಿದೆ.

ಗದಗ ಜಿಲ್ಲೆಯ ಪ್ರತಿನಿಧಿಯಾಗಿ ಶಾಲೆಯ ವಿದ್ಯಾರ್ಥಿ ಮಲ್ಲಿಕಾರ್ಜುನ ಕಾಳಪ್ಪನವರ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು. ತರಬೇತಿ ನೀಡಿದ ಶಿಕ್ಷಕರಾದ ಕೆ.ಆರ್. ಲಮಾಣಿ ಮತ್ತು ಪಿ.ಸಿ. ಹಿರೇಮಠ ಅವರೂ ವಿದ್ಯಾರ್ಥಿಗಳೊಂದಿಗೆ ಸಮಾರಂಭದಲ್ಲಿ ಭಾಗವಹಿಸಿ ಗೌರವ ಸ್ವೀಕರಿಸಿದರು.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಬಳಿಗಾರ, ಕಾರ್ಯದರ್ಶಿ ಸಿ.ಎಂ. ರಾಗಿ, ಮುಖ್ಯೋಪಾಧ್ಯಾಯ ಸಿ.ಬಿ. ಮೊಗಲಿ, ಶಿಕ್ಷಕ ವೃಂದ, ಆಡಳಿತ ಮಂಡಳಿ, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಬೆಳೆ ವಿಮೆ ಗೊಂದಲಕ್ಕೆ ಬೇಸತ್ತ ರೈತರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಹೊಸ ನಿಯಮಗಳಿಂದ ರೈತರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಿ, ಬೆಳೆ ವಿಮೆ ಕಂತು ಪಾವತಿಸಲು ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿ ಲಕ್ಷ್ಮೇಶ್ವರ ತಾಲೂಕು ಸಮಗ್ರ ರೈತ ಹೋರಾಟ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿವಿಧ ಬ್ಯಾಂಕ್‌ಗಳ ಪ್ರಾದೇಶಿಕ ವ್ಯವಸ್ಥಾಪಕರೊಂದಿಗೆ ರೈತರು ಸಭೆ ನಡೆಸಿ, ಬೆಳೆ ವಿಮೆ ಸಮಸ್ಯೆ, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.

ಮನವಿಯಲ್ಲಿ, ಕಳೆದ ಹಲವು ವರ್ಷಗಳಿಂದ ರೈತರು ಬೆಳೆ ವಿಮೆ ಕಂತು ಪಾವತಿಸುತ್ತಿದ್ದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ದಲ್ಲಾಳಿಗಳ ಹಾವಳಿಯಿಂದ ಬಹುತೇಕ ರೈತರು ವಂಚಿತರಾಗಿದ್ದು, ಕೆಲವೇ ರೈತರಿಗೆ ಅಲ್ಪ ಪ್ರಮಾಣದ ಪರಿಹಾರ ಸಿಕ್ಕಿದೆ ಎಂದು ಆರೋಪಿಸಲಾಗಿದೆ.

ಹೊಸ ನಿಯಮದಂತೆ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರು ಬೆಳೆ ಬದಲಾವಣೆ ದೃಢೀಕರಣ ಪತ್ರದೊಂದಿಗೆ ವಿಮೆ ಪಾವತಿಸಬೇಕಿದ್ದು, ಹತ್ತಿ ಹಾಗೂ ಹೆಸರು ಬೆಳೆಗಳಿಗೆ ಜುಲೈ 15 ಕೊನೆಯ ದಿನವಾಗಿರುವುದರಿಂದ ಅನೇಕ ರೈತರು ವಿಮೆ ಪಾವತಿಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಸಾಲ ಪಡೆಯದ ರೈತರಿಗೆ ಸ್ವಘೋಷಣಾ ಪತ್ರದ ಮೂಲಕ ಕರ್ನಾಟಕ ಒನ್ ಹಾಗೂ ಸಿಎಸ್‌ಸಿ ಕೇಂದ್ರಗಳಲ್ಲಿ ವಿಮೆ ಪಾವತಿಸಲು ಅವಕಾಶ ನೀಡಲಾಗಿದ್ದರೂ, ಸರ್ವರ್ ಸಮಸ್ಯೆ, ತಾಂತ್ರಿಕ ತೊಂದರೆ, ದಾಖಲೆಗಳ ಗೊಂದಲ ಹಾಗೂ ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲ ಸಿಬ್ಬಂದಿ ಕೊರತೆಯಿಂದ ರೈತರು ಪರದಾಡುವಂತಾಗಿದೆ ಎಂದು ದೂರಿದರು.

ಅಲ್ಲದೆ, ಅತಿವೃಷ್ಟಿ, ಮಳೆ ಕೊರತೆ ಹಾಗೂ ರೋಗಬಾಧೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಪಾವತಿಸಲು ಅವಕಾಶ ಕಲ್ಪಿಸಬೇಕು. ವಿಮೆ ಪಾವತಿಗೆ ಇನ್ನಷ್ಟು ಕಾಲಾವಕಾಶ ನೀಡುವ ಜೊತೆಗೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಸೋಮವಾರ ಬ್ಯಾಂಕ್‌ಗಳು ಹಾಗೂ ಆನ್‌ಲೈನ್ ಕೇಂದ್ರಗಳ ಮುಂದೆ ರೈತರು ದಿನವಿಡೀ ಕಾದರೂ, ಸರ್ವರ್ ಸಮಸ್ಯೆಯಿಂದ ವಿಮೆ ಪಾವತಿಸಲು ಸಾಧ್ಯವಾಗದೆ ನಿರಾಶರಾಗಿ ಹಿಂತಿರುಗಿದ ದೃಶ್ಯಗಳು ಕಂಡುಬಂದವು.

“ಬೆಳೆ ವಿಮೆ ನಿಯಮಗಳ ಗೊಂದಲ ನಿವಾರಿಸಿ, ಪಾವತಿ ಅವಧಿ ವಿಸ್ತರಿಸದಿದ್ದರೆ ಸಾವಿರಾರು ರೈತರು ವಿಮೆ ಸೌಲಭ್ಯದಿಂದ ವಂಚಿತರಾಗಲಿದ್ದಾರೆ.”

– ಮಂಜುನಾಥ ಮಾಗಡಿ, ತಾಲೂಕು ಅಧ್ಯಕ್ಷ, ಸಮಗ್ರ ರೈತ ಹೋರಾಟ ಸಂಘಟನೆಗಳ ಒಕ್ಕೂಟ

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಕಿಟ್ ವಿತರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ದ್ವಾರಕಾಮಾಯಿ ಫೌಂಡೇಶನ್ ಹಾಗೂ ಅಮೃತಾ ಟೂಲ್ಸ್ ಆ್ಯಂಡ್ ಕ್ರಾಫ್ಟ್ ಪ್ರೈವೇಟ್ ಲಿಮಿಟೆಡ್, ಹೈದರಾಬಾದ್ ಸಹಯೋಗದಲ್ಲಿ ಉಂಡೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 86 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಪುಸ್ತಕ, ಪೆನ್ ಹಾಗೂ ಪೆನ್ಸಿಲ್ ಕಿಟ್‌ಗಳನ್ನು ವಿತರಿಸಲಾಯಿತು.

ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ದ್ವಾರಕಾಮಾಯಿ ಸಂಸ್ಥೆಯ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಮಗ್ರಿಗಳನ್ನು ವಿತರಿಸಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದ್ವಾರಕಾಮಾಯಿ ಸಂಸ್ಥೆಯ ಸ್ವಯಂಸೇವಕರಾದ ಖಾಜಾವಾಲಿ ಮುಲ್ಲಾ, ಗಣೇಶ ಚವಡಿ, ಬಸವರಾಜ ಕಟಗಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆ್ಯಂಗ್ಲೋ ಉರ್ದು ಶಾಲೆಯಲ್ಲಿ ಶಾಲಾ ಸಂಸತ್ ರಚನೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪ್ರತಿಷ್ಠಿತ ಆ್ಯಂಗ್ಲೋ ಉರ್ದು ಬಾಲಕಿಯರ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತನ್ನು ಚುನಾವಣೆಯ ಮೂಲಕ ರಚಿಸಲಾಗಿದೆ.

ಶಾಲಾ ಪ್ರಧಾನ ಮಂತ್ರಿಯಾಗಿ ಕುಮಾರಿ ಮೆಹಕ್ ಕಲೆಗಾರ, ವಿರೋಧ ಪಕ್ಷದ ನಾಯಕಿಯಾಗಿ ಕುಮಾರಿ ಮುಬೀನ್ ಬೇಲೇರಿ, ಸಂಸತ್ ಅಧ್ಯಕ್ಷೆಯಾಗಿ ಕುಮಾರಿ ಆಸ್ಮಾ ಡೋಣಿ, ಶಿಕ್ಷಣ ಸಚಿವೆಯಾಗಿ ಕುಮಾರಿ ರಿಫತ್ ನದಾಫ್, ಆರೋಗ್ಯ ಸಚಿವೆಯಾಗಿ ಕುಮಾರಿ ತಯ್ಯಬಾ ಕಾತರಕಿ, ಪ್ರವಾಸೋದ್ಯಮ ಸಚಿವೆಯಾಗಿ ಕುಮಾರಿ ರೆಹಾನ್ ಗಂಧದ, ಗ್ರಂಥಾಲಯ ಸಚಿವೆಯಾಗಿ ಕುಮಾರಿ ಇನ್ಷಾ ಬೇಪಾರಿ ಹಾಗೂ ಆಹಾರ ಸಚಿವೆಯಾಗಿ ಕುಮಾರಿ ಮೆಹರ್ ಬಾಗೋಡಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಶಾಲಾ ಸಂಸತ್ ಪದಾಧಿಕಾರಿಗಳನ್ನು ಮುಖ್ಯೋಪಾಧ್ಯಾಯ ಎಲ್.ಆರ್. ಇಟಗಿ, ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಐದು ವರ್ಷಗಳಿಂದ ನೀರಿನ ಘಟಕ ಬಂದ್; ಗ್ರಾಮಸ್ಥರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ತಾಲೂಕಿನ ಶಿವಾಜಿನಗರ (ಮಜ್ಜೂರ) ತಾಂಡಾದಲ್ಲಿ ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ವಕೀಲ ರವಿಕಾಂತ ಅಂಗಡಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ರವಿಕಾಂತ ಅಂಗಡಿ, ಸುಮಾರು 550 ಮನೆಗಳು ಹಾಗೂ 2,500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯೇ ಇಲ್ಲ. ಗ್ರಾಮಸ್ಥರು ಫ್ಲೋರೈಡ್ ಅಂಶ ಹೆಚ್ಚಿರುವ ಬೋರ್‌ವೆಲ್ ನೀರನ್ನೇ ಅವಲಂಬಿಸಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಗ್ರಾಮದಲ್ಲಿರುವ ಎರಡು ಶುದ್ಧ ನೀರಿನ ಘಟಕಗಳು ಐದು ವರ್ಷಗಳಿಂದ ಸ್ಥಗಿತಗೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ನೀರು ಶುದ್ಧೀಕರಣ ಘಟಕಗಳನ್ನು ತಕ್ಷಣ ದುರಸ್ತಿಪಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಗ್ರಾಮಸ್ಥರೊಂದಿಗೆ ಕಾನೂನುಬದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಜಿಲ್ಲೆಯ ರೈತರು ಮಳೆ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿ ಎರಡು ದಿನಗಳೊಳಗೆ ಶುದ್ಧ ನೀರಿನ ಘಟಕಗಳನ್ನು ದುರಸ್ತಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಬರಗಾಲ ಘೋಷಣೆ ಕುರಿತು ಸರ್ಕಾರದ ಗಮನಕ್ಕೆ ವಿಷಯ ತರುವುದಾಗಿ ತಿಳಿಸಿದರು. ಅಲ್ಲದೆ, ಬೆಳೆ ಸಾಲ ಪಡೆದ ರೈತರು ಸಮೀಪದ ಸಿಎಸ್‌ಸಿ ಕೇಂದ್ರಗಳಿಗೆ ತೆರಳಿ ಜುಲೈ 16ರೊಳಗೆ ಬೆಳೆ ವಿಮೆ ಪಾವತಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗಣೇಶ ಲಮಾಣಿ, ಭಾಪೂಜಿ ಲಮಾಣಿ, ಪ್ರಕಾಶ ಲಮಾಣಿ, ತುಕಾರಾಮ ಲಮಾಣಿ, ಕೇಶಪ್ಪ ಲಮಾಣಿ, ಅರುಣ ಲಮಾಣಿ, ಜಗದೀಶ ಲಮಾಣಿ, ರವಿ ಲಮಾಣಿ, ರಮೇಶ ಲಮಾಣಿ, ಸುರೇಶ ಲಮಾಣಿ ಸೇರಿದಂತೆ ಶಿವಾಜಿನಗರ (ಮಜ್ಜೂರ) ತಾಂಡಾದ ಗ್ರಾಮಸ್ಥರು ಉಪಸ್ಥಿತರಿದ್ದರು.

“ಐದು ವರ್ಷಗಳಿಂದ ಶುದ್ಧ ನೀರಿನ ಘಟಕಗಳು ಬಂದ್ ಆಗಿರುವುದು ಗ್ರಾಮಸ್ಥರ ದುರ್ದೈವ. ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಕೂಡಲೇ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು.”

– ರಮೇಶ ಮಾನಪ್ಪ ಲಮಾಣಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ

ಬರದ ಬೇಗೆಯಲ್ಲೂ ಮಣ್ಣೆತ್ತಿನ ಹಬ್ಬದ ಸಡಗರ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬರದ ಛಾಯೆ ಆವರಿಸಿದ್ದರೂ ರೈತ ಸಮುದಾಯದ ಸಾಂಪ್ರದಾಯಿಕ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬವನ್ನು ಪಟ್ಟಣದಲ್ಲಿ ಬುಧವಾರ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಪೇಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಮಣ್ಣಿನ ಎತ್ತುಗಳ ಮೂರ್ತಿಗಳ ಖರೀದಿ ಭರಾಟೆ ಜೋರಾಗಿತ್ತು.

ಬೆಳಗ್ಗೆಯಿಂದಲೇ ಕುಟುಂಬ ಸಮೇತರಾಗಿ ಆಗಮಿಸಿದ ಸಾರ್ವಜನಿಕರು ವಿವಿಧ ಗಾತ್ರ ಹಾಗೂ ಬಣ್ಣಬಣ್ಣದ ಮಣ್ಣೆತ್ತಿನ ಮೂರ್ತಿಗಳನ್ನು ಖರೀದಿಸಿದರು. ಲಕ್ಷ್ಮೇಶ್ವರದ ಕುಂಬಾರರ ಕುಟುಂಬಗಳು ತಯಾರಿಸಿದ ಮಣ್ಣಿನ ಎತ್ತುಗಳಿಗೆ ರಾಜ್ಯದ ವಿವಿಧ ಭಾಗಗಳಿಂದಲೂ ಬೇಡಿಕೆ ಇರುವುದರಿಂದ ಹಬ್ಬಕ್ಕೂ ಮುನ್ನವೇ ಹೆಚ್ಚಿನ ಪ್ರಮಾಣದಲ್ಲಿ ಸಗಟು ಮಾರಾಟ ನಡೆದಿತ್ತು.

ಈ ವರ್ಷ ಮಣ್ಣೆತ್ತಿನ ಮೂರ್ತಿಗಳ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ. ಹಿಂದೆ ₹20ಕ್ಕೆ ಸಿಗುತ್ತಿದ್ದ ಸಣ್ಣ ಮೂರ್ತಿಗಳು ಈಗ ₹50ಕ್ಕಿಂತ ಹೆಚ್ಚು ಬೆಲೆಗೆ ಮಾರಾಟವಾದವು. ₹50ರಿಂದ ₹1,000ರವರೆಗೆ ವಿವಿಧ ಮಾದರಿಯ ಮೂರ್ತಿಗಳು ಲಭ್ಯವಿದ್ದರೆ, ವಿಶೇಷ ಅಲಂಕಾರದ ದೊಡ್ಡ ಮೂರ್ತಿಗಳು ₹2,000ರವರೆಗೆ ಮಾರಾಟವಾದವು.

ವಿಶೇಷವಾಗಿ ರಾಸಾಯನಿಕ ಬಣ್ಣಗಳ ಬದಲಿಗೆ ಪರಿಸರ ಸ್ನೇಹಿ ಬಣ್ಣಗಳಿಂದ ತಯಾರಿಸಿದ ಮಣ್ಣಿನ ಎತ್ತುಗಳಿಗೆ ಈ ಬಾರಿ ಹೆಚ್ಚು ಬೇಡಿಕೆ ಕಂಡುಬಂದಿದ್ದು, ಇಷ್ಟದ ಮೂರ್ತಿಗಳನ್ನು ಖರೀದಿಸಲು ಗ್ರಾಹಕರ ನಡುವೆ ಪೈಪೋಟಿಯೂ ಕಂಡುಬಂತು.

ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ರೈತರು ಮಾತ್ರವಲ್ಲದೆ ಪಟ್ಟಣದ ಅನೇಕ ಕುಟುಂಬಗಳು ಮಣ್ಣಿನ ಎತ್ತುಗಳನ್ನು ಮನೆಗೆ ಕೊಂಡೊಯ್ದು ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯಬದ್ಧವಾಗಿ ಹಬ್ಬ ಆಚರಿಸಿದರು. ಕೃಷಿ ಬದುಕಿನ ಅವಿಭಾಜ್ಯ ಅಂಗವಾದ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಸಂಸ್ಕೃತಿ ಇಂದಿಗೂ ಜೀವಂತವಾಗಿರುವುದು ಹಬ್ಬದ ವಿಶೇಷತೆಯಾಗಿದೆ.

ಬರ ಘೋಷಿಸಿ, ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಿಲ್ಲೆಯಾದ್ಯಂತ ಮಳೆಯಿಲ್ಲದೆ ಮುಂಗಾರು ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಸರ್ಕಾರ ಕೂಡಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರಧನ ಬಿಡುಗಡೆ ಮಾಡಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಕರಮಡಿ ಹಾಗೂ ಜಿಲ್ಲಾ ಗೌರವಾಧ್ಯಕ್ಷ ಟಾಕಪ್ಪ ಸಾತಪೂತೆ ಆಗ್ರಹಿಸಿದರು.

ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ ಬಳಿಕ ಒಂದೂವರೆ ತಿಂಗಳಿನಿಂದ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗಿ ನಿಂತಿದ್ದು, ರೈತರು ಭಾರೀ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

ಹೆಸರು, ಗೋವಿನ ಜೋಳ, ಶೇಂಗಾ, ಈರುಳ್ಳಿ, ಜೋಳ, ಎಳ್ಳು ಹಾಗೂ ಉದ್ದು ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಆದ್ದರಿಂದ ತಕ್ಷಣ ಬರ ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಬೆಳೆಗೂ ಪರಿಹಾರ ಘೋಷಿಸಬೇಕು. ಕೆಲವೇ ಬೆಳೆಗಳಿಗೆ ಪರಿಹಾರ ನೀಡುವುದರಿಂದ ರೈತರ ಸಂಕಷ್ಟ ನಿವಾರಣೆಯಾಗುವುದಿಲ್ಲ ಎಂದು ಹೇಳಿದರು.

ಬೆಳೆ ಸಮೀಕ್ಷೆ ನಡೆಸುತ್ತಿರುವ ಪಿಆರ್‌ಒಗಳು ಸಮರ್ಪಕವಾಗಿ ಹೊಲಗಳಿಗೆ ಭೇಟಿ ನೀಡದೆ ಮನಬಂದಂತೆ ಮಾಹಿತಿ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಹಶೀಲ್ದಾರರು ಈ ಕುರಿತು ನಿಗಾ ವಹಿಸಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಳೆದ ವರ್ಷದ ಬೆಳೆ ವಿಮೆ ಹಣ ಹಾಗೂ ಮೆಣಸಿನಕಾಯಿ ಬೆಳೆ ಮಧ್ಯಂತರ ಪರಿಹಾರ ಇನ್ನೂ ರೈತರಿಗೆ ದೊರೆತಿಲ್ಲ. ಬ್ಯಾಂಕುಗಳು ಸಾಲ ಮರುಪಾವತಿಗೆ ರೈತರ ಮೇಲೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು. ಒನ್ ಟೈಮ್ ಸೆಟ್ಲ್‌ಮೆಂಟ್ (ಒಟಿಎಸ್) ಮಾಡಿಕೊಂಡ ರೈತರಿಗೆ ಅದೇ ಬ್ಯಾಂಕುಗಳಲ್ಲಿ ಮತ್ತೆ ಸಾಲ ಸೌಲಭ್ಯ ಕಲ್ಪಿಸಬೇಕು. ಜೊತೆಗೆ ರೈತರ ಜಮೀನುಗಳಿಗೆ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.

ಈ ವರ್ಷದ ಬೆಳೆ ಹಾನಿಯನ್ನು ಪರಿಗಣಿಸಿ ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿದರು.

ಬಳಿಕ ಸಂಘದ ಪದಾಧಿಕಾರಿಗಳು ತಹಶೀಲ್ದಾರ ಧನಂಜಯ ಎಂ. ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಹಿರೇಮಠ, ಶಿರಹಟ್ಟಿ ತಾಲೂಕು ಅಧ್ಯಕ್ಷ ವೀರನಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಜಿಲ್ಲೆಯಲ್ಲಿ ಮುಂಗಾರು ಬೆಳೆಗಳು ಸಂಪೂರ್ಣ ಹಾಳಾಗಿವೆ. ಸರ್ಕಾರ ತಕ್ಷಣ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು.”

– ಯಲ್ಲಪ್ಪ ಕರಮಡಿ, ಜಿಲ್ಲಾಧ್ಯಕ್ಷ, ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ

‘ಅಕ್ಕಾ ಕಫೆ’ಯಿಂದ ಮಹಿಳಾ ಸ್ವಾವಲಂಬನೆಗೆ ಹೊಸ ದಾರಿ

0

ವಿಜಯಸಾಕ್ಷಿ ಸುದ್ದಿ, ನರಗುಂದ: ಸಂಜೀವಿನಿ ಯೋಜನೆಯ ಎಲ್ಲ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿಯೇ ಮೊದಲಾಗಿ ಹಾಗೂ ಮಾದರಿಯಾಗಿ ನರಗುಂದ ತಾಲೂಕಿನಲ್ಲಿ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಂಜೀವಿನಿ ಯೋಜನೆಯ ಮುಖ್ಯ ಪುಸ್ತಕ ಬರಹಗಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಜನರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ಸಂಜೀವಿನಿ ಯೋಜನೆಯನ್ನು ಸಿಬ್ಬಂದಿ ಪ್ರಾಮಾಣಿಕತೆ, ಬದ್ಧತೆ ಹಾಗೂ ಪಾರದರ್ಶಕತೆಯಿಂದ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ತಾಲೂಕಿನಲ್ಲಿ ಶೀಘ್ರವೇ ‘ಅಕ್ಕಾ ಕಫೆ’ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಉಪಹಾರ, ಊಟ ಸೇರಿದಂತೆ ಸಿರಿಧಾನ್ಯ ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ತಲುಪಿಸುವ ವ್ಯವಸ್ಥೆ ರೂಪಿಸಬೇಕು ಎಂದರು. ಸರ್ಕಾರಿ ವಿದ್ಯಾರ್ಥಿನಿಲಯಗಳು ಹಾಗೂ ವಿವಿಧ ಸರ್ಕಾರಿ ಕಾರ್ಯಕ್ರಮಗಳಿಗೆ ಅಕ್ಕಾ ಕಫೆಯ ಮೂಲಕ ಆಹಾರ ಪೂರೈಕೆ ಮಾಡಿದರೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಉತ್ತಮ ಆದಾಯದ ಮೂಲ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರದ ಸಂತೆಗಳನ್ನು ಪುನರಾರಂಭಿಸುವಂತೆ ಸೂಚಿಸಿದ ಅವರು, ರೈತರು ಬೆಳೆದ ತರಕಾರಿಗಳನ್ನು ಸ್ವಸಹಾಯ ಸಂಘಗಳ ಮಹಿಳೆಯರು ಖರೀದಿಸಿ ಮಾರಾಟ ಮಾಡುವ ವ್ಯವಸ್ಥೆ ಜಾರಿಯಾದರೆ ರೈತರು, ಮಹಿಳೆಯರು ಹಾಗೂ ಗ್ರಾಹಕರು ಎಲ್ಲರೂ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಪಾರದರ್ಶಕವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಸಾಲ ಮರುಪಾವತಿ, ಲೆಕ್ಕಪತ್ರ ನಿರ್ವಹಣೆ ಹಾಗೂ ದಾಖಲೆಗಳನ್ನು ನಿಯಮಿತವಾಗಿ ನವೀಕರಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ವಿಐಬಿಜಿ ರಾಮ್-ಜಿ ಯೋಜನೆಯ ಯಶಸ್ವಿ ಅನುಷ್ಠಾನದಲ್ಲಿಯೂ ಸಂಜೀವಿನಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ನರೇಗಾ ಯೋಜನೆಗೆ ನೀಡಿದ ಸಹಕಾರದಂತೆಯೇ ಈ ಯೋಜನೆಗೂ ಸಂಪೂರ್ಣ ಸಹಕಾರ ನೀಡಬೇಕು. ಜೊತೆಗೆ ಪ್ರತಿ ವಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಪಂಚಾಯಿತಿ ಹಾಗೂ ಸಂಜೀವಿನಿ ಸಿಬ್ಬಂದಿ ನಡುವೆ ಸಮನ್ವಯ ಹೆಚ್ಚಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ವ್ಯವಸ್ಥಾಪಕ (ಕೃಷಿ ಜೀವನೋಪಾಯ) ಮಡ್ಡೇಶ ಮಲೀಮಾರ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮೋಹನಕೃಷ್ಣ, ಸಂಜೀವಿನಿ ಯೋಜನೆಯ ಸಿಬ್ಬಂದಿ ಹಾಗೂ ತಾಲೂಕಿನ 13 ಗ್ರಾಮ ಪಂಚಾಯಿತಿಗಳ ಮುಖ್ಯ ಪುಸ್ತಕ ಬರಹಗಾರರು ಉಪಸ್ಥಿತರಿದ್ದರು.

“ಸಂಜೀವಿನಿ ಯೋಜನೆಯನ್ನು ಜಿಲ್ಲೆಯಲ್ಲಿಯೇ ಮಾದರಿಯಾಗಿ ರೂಪಿಸುವ ಗುರಿ ನಮ್ಮದು. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ‘ಅಕ್ಕಾ ಕಫೆ’ ಹಾಗೂ ವಾರದ ಸಂತೆಗಳಂತಹ ಕಾರ್ಯಕ್ರಮಗಳು ಹೆಚ್ಚು ನೆರವಾಗಲಿವೆ.”

ಗದಗ–ಹರಪನಹಳ್ಳಿ ರೈಲು ಮಾರ್ಗಕ್ಕೆ ಶೀಘ್ರ ಚಾಲನೆಗೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ–ಹರಪನಹಳ್ಳಿ ನೂತನ ರೈಲು ಮಾರ್ಗ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಹಾಗೂ ಗದಗ–ಸೊಲ್ಲಾಪುರ ಡಬ್ಲಿಂಗ್ ರೈಲು ಮಾರ್ಗದ ಉದ್ಘಾಟನಾ ಸಮಾರಂಭವನ್ನು ಗದಗದಲ್ಲೇ ಆಯೋಜಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ವಿಕಾಸ ವೇದಿಕೆಯ ಪದಾಧಿಕಾರಿಗಳು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಮ ಅವರಿಗೆ ಮನವಿ ಸಲ್ಲಿಸಿದರು.

ಗದಗ–ಹರಪನಹಳ್ಳಿ ರೈಲು ಮಾರ್ಗದ ಸರ್ವೇಗಾಗಿ ಈಗಾಗಲೇ ₹9 ಲಕ್ಷ ಮಂಜೂರಾಗಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದು ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದರು.

ಗದಗ–ಅಡವಿಸೋಮಾಪುರ–ಡಂಬಳ–ಹೂವಿನಹಡಗಲಿ–ಹರಪನಹಳ್ಳಿ ಮಾರ್ಗವಾಗಿ ಸುಮಾರು 93 ಕಿ.ಮೀ. ಉದ್ದದ ಈ ಹೊಸ ರೈಲು ಮಾರ್ಗ ನಿರ್ಮಾಣವಾದರೆ ವಿಜಯಪುರ, ಬಾಗಲಕೋಟೆ, ಗದಗ ಹಾಗೂ ವಿಜಯನಗರ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಈ ಮಾರ್ಗ ನಿರ್ಮಾಣದಿಂದ ಮೈಸೂರು, ಬೆಂಗಳೂರು, ತಿರುಪತಿ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಹೊಸ ರೈಲುಗಳ ಸಂಚಾರಕ್ಕೂ ಅವಕಾಶ ದೊರೆಯಲಿದ್ದು, ವ್ಯಾಪಾರ, ಶಿಕ್ಷಣ ಹಾಗೂ ಕೃಷಿ ಕ್ಷೇತ್ರಕ್ಕೂ ಉತ್ತೇಜನ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ಗದಗ–ಸೊಲ್ಲಾಪುರ ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗದಗದಿಂದ ಸೊಲ್ಲಾಪುರ ಮಾರ್ಗವಾಗಿ ಹೊಸ ರೈಲುಗಳನ್ನು ಆರಂಭಿಸುವುದರ ಜೊತೆಗೆ ಉದ್ಘಾಟನಾ ಕಾರ್ಯಕ್ರಮವನ್ನು ಗದಗದಲ್ಲೇ ನಡೆಸಬೇಕು ಎಂದು ವಿಕಾಸ ವೇದಿಕೆ ಒತ್ತಾಯಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಈ. ತುಕಾರಾಮ, ಈ ಎಲ್ಲ ಬೇಡಿಕೆಗಳನ್ನು ಕೇಂದ್ರ ರೈಲ್ವೆ ಸಚಿವರು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು, ಗದಗ–ಹರಪನಹಳ್ಳಿ ರೈಲು ಮಾರ್ಗ ಕಾಮಗಾರಿ ಶೀಘ್ರ ಆರಂಭವಾಗಲು ಮತ್ತು ಡಬ್ಲಿಂಗ್ ಮಾರ್ಗದ ಉದ್ಘಾಟನೆ ಗದಗದಲ್ಲೇ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ, ಜಗದೀಶ ಕಂಗೂರಿ, ವೀರಭದ್ರಪ್ಪ ಕಬ್ಬಿಣದ, ವೆಂಕಟೇಶ ಕಬಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಗದಗ–ಹರಪನಹಳ್ಳಿ ರೈಲು ಮಾರ್ಗ ನಿರ್ಮಾಣವಾದರೆ ಉತ್ತರ ಕರ್ನಾಟಕದ ಜನರ ಬಹುಕಾಲದ ಕನಸು ನನಸಾಗಲಿದೆ. ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕಾಮಗಾರಿ ಶೀಘ್ರ ಆರಂಭಿಸಲು ಪ್ರಯತ್ನಿಸುತ್ತೇವೆ.”

– ಈ. ತುಕಾರಾಮ, ಬಳ್ಳಾರಿ ಲೋಕಸಭಾ ಸದಸ್ಯ

ನೀರಿನ ದುರುಪಯೋಗಕ್ಕೆ ಸರ್ಕಾರದ ಕಡಿವಾಣ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಕೆರೆ, ಜಲಾಶಯ ಹಾಗೂ ಡ್ಯಾಮ್‌ಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ನೀರು ಹಾಗೂ ಜನಜೀವನಕ್ಕೆ ಅಗತ್ಯವಾದ ಬಳಕೆಗೆ ಮಾತ್ರ ಮೀಸಲಿಡಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರುದಿಂದ ವಿಡಿಯೋ ಸಂವಾದದ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಲಭ್ಯತೆ, ಜಲಾಶಯಗಳ ನೀರಿನ ಮಟ್ಟ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಮೊದಲ ಆದ್ಯತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ಈ ಹಿನ್ನೆಲೆಯಲ್ಲಿ ಕೆರೆ, ಡ್ಯಾಮ್ ಹಾಗೂ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಕೃಷಿ, ಲಿಫ್ಟ್ ಇರಿಗೇಶನ್, ವಾಹನ ತೊಳೆಯುವುದು, ಕೈಗಾರಿಕಾ ಬಳಕೆ ಸೇರಿದಂತೆ ಅನಿವಾರ್ಯವಲ್ಲದ ಉದ್ದೇಶಗಳಿಗೆ ನೀರು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕೆರೆ ಹಾಗೂ ಜಲಾಶಯಗಳಿಂದ ಅನಧಿಕೃತವಾಗಿ ನೀರು ಎತ್ತುತ್ತಿರುವ ಪಂಪ್‌ಸೆಟ್‌ಗಳನ್ನು ತಕ್ಷಣ ತೆರವುಗೊಳಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಲಿಫ್ಟ್ ಇರಿಗೇಶನ್‌ಗೆ ಅನುಮತಿ ನೀಡಬಾರದು ಎಂದು ಸೂಚಿಸಿದರು.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದಲ್ಲಿ ಪರಿಸ್ಥಿತಿಯನ್ನು ಮರುಪರಿಶೀಲಿಸಿ ಸರ್ಕಾರ ಅಗತ್ಯ ನಿರ್ಧಾರ ಕೈಗೊಳ್ಳಲಿದೆ. ಅಲ್ಲಿಯವರೆಗೆ ಜಾರಿಯಲ್ಲಿರುವ ಎಲ್ಲ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗದಗ ಜಿಲ್ಲಾಡಳಿತ ಭವನದಿಂದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸರ್ಕಾರದ ಎಲ್ಲ ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಕೆರೆ ಹಾಗೂ ಜಲಾಶಯಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಿ, ಅನಧಿಕೃತ ನೀರು ಬಳಕೆಯನ್ನು ತಡೆಯಲಾಗುವುದು. ಬೇಸಿಗೆಯವರೆಗೆ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಲಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಕುಡಿಯುವ ನೀರು ಸಾರ್ವಜನಿಕರ ಹಕ್ಕು. ಯಾವುದೇ ಕಾರಣಕ್ಕೂ ಕೆರೆ, ಡ್ಯಾಮ್ ಹಾಗೂ ಜಲಾಶಯಗಳ ನೀರನ್ನು ಅನಿವಾರ್ಯವಲ್ಲದ ಉದ್ದೇಶಗಳಿಗೆ ಬಳಸಲು ಅವಕಾಶ ನೀಡಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.”

– ಗೌರವ್ ಗುಪ್ತಾ, ಅಪರ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ