Home Blog Page 4

ಬಕ್ರೀದ್ ಹಬ್ಬ! ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ, ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಬೆಂಗಳೂರಿನ ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ಈ ಕುರಿತು ಸಂಚಾರ ಸಲಹೆ ಪ್ರಕಟಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬನ್ನೇರುಘಟ್ಟ ಮುಖ್ಯ ರಸ್ತೆಯ ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ವರೆಗೆ ಹಾಗೂ ಸಾಯಿರಾಂ ಜಂಕ್ಷನ್‌ನಿಂದ ಗುರಪ್ಪನಪಾಳ್ಯವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. 39ನೇ ಕ್ರಾಸ್ ರಸ್ತೆಯಲ್ಲಿಯೂ ಗುರಪ್ಪನಪಾಳ್ಯದಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.

ಈ ಭಾಗದಲ್ಲಿ ವಾಹನ ಸವಾರರಿಗೆ ಡೈರಿ ಸರ್ಕಲ್, ತಿಲಕ ನಗರ, ಈಸ್ಟ್ ಎಂಡ್ ರಸ್ತೆ, ಜಯದೇವ ಜಂಕ್ಷನ್ ಸೇರಿದಂತೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಇದೇ ರೀತಿ ಕೆ.ಎಸ್. ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಕನಕಪುರ ಮುಖ್ಯ ರಸ್ತೆಯ ಸಾರಕ್ಕಿ ಸಿಗ್ನಲ್‌ನಿಂದ ಔಟರ್ ರಿಂಗ್ ರಸ್ತೆಯ ಕೆ.ಎಸ್. ಲೇಔಟ್ ಸಿಗ್ನಲ್ ವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಈ ಮಾರ್ಗದಲ್ಲಿ ಬರುವ ವಾಹನಗಳು ಬನಶಂಕರಿ, ಸಾರಕ್ಕಿ ಮಾರ್ಕೆಟ್, ಬೇಂದ್ರೆ ಸರ್ಕಲ್ ಮೂಲಕ ಪರ್ಯಾಯವಾಗಿ ಸಂಚರಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಬ್ಬದ ಹಿನ್ನೆಲೆಯಲ್ಲಿ ಭಾರಿ ಜನಸಂದಣಿ ನಿರೀಕ್ಷೆಯಿರುವುದರಿಂದ ಸಾರ್ವಜನಿಕರು ಸಹಕರಿಸಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಮಾರ್ಚ್–ಮೇ ಬದಲು ಸೆಪ್ಟೆಂಬರ್–ಅಕ್ಟೋಬರ್‌ಗೆ ಐಪಿಎಲ್? ವೇಳಾಪಟ್ಟಿ ಬದಲಾವಣೆಗೆ ಬಿಸಿಸಿಐ ಚಿಂತನೆ!

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಕುರಿತು ಬಿಸಿಸಿಐ ಚಿಂತನೆ ನಡೆಸುತ್ತಿದೆ.

ಇನ್ನುಮುಂದೆ ಐಪಿಎಲ್ ಅನ್ನು ಮಾರ್ಚ್–ಮೇ ಬದಲು ಸೆಪ್ಟೆಂಬರ್–ಅಕ್ಟೋಬರ್ ತಿಂಗಳಲ್ಲಿ ನಡೆಸುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ.

ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರು ಈ ಕುರಿತು ಮಾತನಾಡಿ, ವೇಳಾಪಟ್ಟಿ ಬದಲಾವಣೆಗೆ ಸಂಬಂಧಿಸಿ ಪ್ರಸಾರಕರ ಜೊತೆ ಚರ್ಚೆ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್–ಅಕ್ಟೋಬರ್ ಅವಧಿ ದೀಪಾವಳಿ ಹಬ್ಬದ ಸಮಯವಾಗಿರುವುದರಿಂದ ಜಾಹೀರಾತು ಹಾಗೂ ವ್ಯವಹಾರ ದೃಷ್ಟಿಯಿಂದ ಹೆಚ್ಚು ಲಾಭದಾಯಕವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಮೇ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣ ಆಟಗಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವೇಳಾಪಟ್ಟಿಯನ್ನು ಬದಲಾಯಿಸುವ ಅಗತ್ಯವಿದೆ ಎಂಬ ಚರ್ಚೆಯೂ ನಡೆಯುತ್ತಿದೆ. ಪರ್ಯಾಯವಾಗಿ ಫೆಬ್ರವರಿ–ಏಪ್ರಿಲ್ ಅವಧಿಯನ್ನು ಪರಿಗಣಿಸಬಹುದಾದರೂ, ಈ ಅವಧಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಅಂತಿಮ ನಿರ್ಧಾರ ಇನ್ನೂ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ, ಐಪಿಎಲ್ ವೇಳಾಪಟ್ಟಿ ಬದಲಾವಣೆ ಕುರಿತು ನಡೆಯುತ್ತಿರುವ ಈ ಚರ್ಚೆ ಕ್ರಿಕೆಟ್ ವಲಯದಲ್ಲಿ ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ!? ಕಾವೇರಿ ನಿವಾಸದಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ ಸಭೆ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಬಿರುಸಿನ ರಾಜಕೀಯ ಚಟುವಟಿಕೆಗಳು ಇಂದು ನಿರ್ಣಾಯಕ ಘಟ್ಟ ತಲುಪಿವೆ. ಇಂದು ಬೆಳಗ್ಗೆ ‘ಕಾವೇರಿ’ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಅವರು ಸಚಿವರೊಂದಿಗೆ ಉಪಾಹಾರ ಸಭೆ ನಡೆಸುತ್ತಿದ್ದಾರೆ. ಈ ಸಭೆಗೆ ಎಲ್ಲಾ ಸಚಿವರು, ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ತಿಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳುತ್ತಿವೆ. ಸಭೆಯ ಬಳಿಕ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

ರಾಜೀನಾಮೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರದ ಹಿನ್ನೆಲೆಯನ್ನು ರಾಜ್ಯದ ಜನತೆಗೆ ವಿವರಿಸುವ ಸಾಧ್ಯತೆ ಇದೆ. ಈಗಾಗಲೇ ಕೆಲ ಸಚಿವರು ನಿರ್ಧಾರ ಬದಲಿಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದರೂ, ಸಿದ್ದರಾಮಯ್ಯ ಅವರು ತಮ್ಮ ನಿಲುವಿನಲ್ಲಿ ದೃಢವಾಗಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಕಾಂಗ್ರೆಸ್ ಶಾಸಕಾಂಗ ಸಭೆ ಇಂದು ಸಂಜೆ ಅಥವಾ ನಾಳೆ ನಡೆಯುವ ಸಾಧ್ಯತೆ ಇದೆ. ಆ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚನೆಯಂತೆ ಮುಂದಿನ ನಾಯಕತ್ವದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಸಿದ್ದರಾಮಯ್ಯ ರಾಜೀನಾಮೆಗೆ ಕೆಲವೇ ಗಂಟೆಗಳು ಬಾಕಿ! ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು

ಬೆಂಗಳೂರ: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಬುಧವಾರ ತಡರಾತ್ರಿ ಸುಮಾರು 11:45ಕ್ಕೆ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಪ್ರಯಾಣಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೋರಿದ್ದರು. ಅದಕ್ಕೆ ರಾಜಭವನವು ಬೆಳಗ್ಗೆ 11:30 ಹಾಗೂ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶ ನೀಡಿತ್ತು.

ಆದರೆ ಸಿಎಂ ಭೇಟಿಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ರಾಜ್ಯಪಾಲರು ರಾಜಧಾನಿಯಿಂದ ದಿಢೀರ್ ನಿರ್ಗಮಿಸಿರುವುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಜ್ಯಪಾಲರು ಇಂದು ಮುಂಬೈನಿಂದ ಮರಳುವ ಕುರಿತು ಇನ್ನೂ ಖಚಿತತೆ ಇಲ್ಲ. ಅವರು ಮರಳಿದ ಬಳಿಕ ಮಧ್ಯಾಹ್ನದ ನಂತರ ಸಿಎಂ ರಾಜೀನಾಮೆ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಮುಂದಿನ ಕೆಲ ಗಂಟೆಗಳು ಅತ್ಯಂತ ನಿರ್ಣಾಯಕವಾಗುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆ: ಶಾಸಕ ಕೆ. ನೇಮಿರಾಜ ನಾಯ್ಕ

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ಮುಂಗಾರು ಹಂಗಾಮಿನ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಕೆ. ನೇಮಿರಾಜ ನಾಯ್ಕ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಮಣ್ಣಿನ ಫಲವತ್ತತೆಯನ್ನು ಹಾಳುಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರು ಕೊಟ್ಟಿಗೆ ಗೊಬ್ಬರ ಸೇರಿದಂತೆ ಸಾವಯವ ಪದ್ಧತಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಇಂದಿನ ಜಾಗತಿಕ ಯುದ್ಧ ಪರಿಸ್ಥಿತಿಯಲ್ಲಿ ರಾಸಾಯನಿಕ ಗೊಬ್ಬರಗಳ ಲಭ್ಯತೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ರೈತರು ನ್ಯಾನೋ ಯೂರಿಯಾ ಹಾಗೂ ಲಿಕ್ವಿಡ್ ಡಿಎಪಿ ಸಿಂಪಡಣೆ ಮೂಲಕ ಬೆಳೆಗಳನ್ನು ರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನ ಹಂಪಸಾಗರ, ತಂಬ್ರಹಳ್ಳಿ, ಕೋಗಳಿ, ಹಗರಿಬೊಮ್ಮನಹಳ್ಳಿ ಹಾಗೂ ಎಪಿಎಂಸಿ ಆವರಣದಲ್ಲಿ ಒಟ್ಟು ಐದು ಬಿತ್ತನೆ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಬಿ. ಪಾಟೀಲ್ ಮಾತನಾಡಿ, ರೈತರಿಗೆ ಅಗತ್ಯವಿರುವ 270 ಕ್ವಿಂಟಲ್ ಬಿತ್ತನೆ ಬೀಜ ಸಂಗ್ರಹವಿದ್ದು, ಪಹಣಿ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ನೀಡಿ ಬೀಜ ಖರೀದಿಸಬಹುದು ಎಂದು ತಿಳಿಸಿದರು. 2, 3, 4 ಮತ್ತು 5 ಕೆಜಿ ಪ್ಯಾಕೆಟ್‌ಗಳಲ್ಲಿ ಬಿತ್ತನೆ ಬೀಜ ಲಭ್ಯವಿದ್ದು, ಎಫ್‌ಐಡಿ ನಿಯಮಾನುಸಾರ ಎಸ್‌ಸಿ ಮತ್ತು ಎಸ್‌ಟಿ ವರ್ಗದ ರೈತರಿಗೆ ರೂ.30 ಹಾಗೂ ಸಾಮಾನ್ಯ ವರ್ಗದ ರೈತರಿಗೆ ರೂ.20 ಸಬ್ಸಿಡಿ ನೀಡಲಾಗುವುದು ಎಂದರು. ರೈತರಿಗೆ ಯಾವುದೇ ರೀತಿಯ ಬಿತ್ತನೆ ಬೀಜ ಕೊರತೆ ಉಂಟಾಗದಂತೆ ಸಾಕಷ್ಟು ಪ್ರಮಾಣದಲ್ಲಿ ಬೀಜ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಹನಸಿ ದೇವರಾಜ್, ಜೆಡಿಎಸ್ ತಾಲೂಕು ಅಧ್ಯಕ್ಷ ವೈ. ಮಲ್ಲಿಕಾರ್ಜುನ್, ಸಿನಿಮಾ ಮಂಜಣ್ಣ, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಶೆಟ್ರು, ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಮುಖಂಡರಾದ ಕೋಗಳಿ ಹನುಮಂತಪ್ಪ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಸಿದ್ದರಾಜು, ಕೃಷಿ ಇಲಾಖೆಯ ಅಧಿಕಾರಿಗಳಾದ ಭೋಜ ನಾಯ್ಕ, ನಾಗಾರ್ಜುನ, ಶಶಿಕುಮಾರ್, ಶಿವಮೂರ್ತಿ ಸೇರಿದಂತೆ ರೈತರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
“ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಂಠಿತವಾಗುತ್ತಿದೆ. ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು.”
ಕೆ. ನೇಮಿರಾಜ ನಾಯ್ಕ, ಶಾಸಕ

ಬಕ್ರೀದ್ ವೇಳೆ ಗೋಹತ್ಯೆ ತಡೆಗೆ ಆಗ್ರಹ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಮಾಂಸ ಮಾರಾಟದ ಅಂಗಡಿಗಳನ್ನು ಸ್ಥಳಾಂತರಿಸಬೇಕು ಹಾಗೂ ಬಕ್ರೀದ್ ವೇಳೆ ಗೋಹತ್ಯೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಹಾಗೂ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಬುಧವಾರ ತಹಸೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಶ್ರೀರಾಮ ಸೇನಾ ತಾಲೂಕು ಅಧ್ಯಕ್ಷ ಈರಣ್ಣ ಪೂಜಾರ ಹಾಗೂ ಹಿಂದೂ ಯುವ ಮುಖಂಡ ಗಂಗಾಧರ ಮೆಣಸಿನಕಾಯಿ, ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನ ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಕೂಗಳತೆಯಲ್ಲೇ ಮೀನು, ಮಟನ್ ಹಾಗೂ ಚಿಕನ್ ಮಾರಾಟ ನಡೆಯುತ್ತಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಮಾಂಸ ಮಾರಾಟದ ಅಂಗಡಿಗಳನ್ನು 15 ದಿನಗಳೊಳಗೆ ಪಟ್ಟಣದ ಹೊರಭಾಗಕ್ಕೆ ಸ್ಥಳಾಂತರಿಸಬೇಕು. ಅಕ್ರಮ ಕಸಾಯಿಖಾನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ತೆರವುಗೊಳಿಸಬೇಕು. ಬಕ್ರೀದ್ ವೇಳೆ ಗೋಹತ್ಯೆ ಹಾಗೂ ಅಕ್ರಮ ಮಾಂಸ ಮಾರಾಟ ನಡೆಯದಂತೆ ಪೊಲೀಸ್ ಇಲಾಖೆ ಹಾಗೂ ಪುರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಶಾಲೆ ಹಾಗೂ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲು ನಿರ್ಬಂಧಿಸುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲವಾದರೆ ಹಿಂದೂ ಸಂಘಟನೆಗಳಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ದುಂಡೇಶ ಕೋಟಗಿ, ವಿಜಯ ಕುಂಬಾರ, ಶಕ್ತಿ ಕತ್ತಿ, ವಿಶಾಲ ಬಟಗುರ್ಕಿ, ನವೀನ ಹಿರೇಮಠ, ಮಹಾಂತೇಶ ರಗಟಿ, ಅಮಿತ ಗುಡಗೇರಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಚುರುಕು

ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮಹತ್ವದ ಸಭೆ ನಡೆಯಿತು.
ಭಾರತ ಚುನಾವಣಾ ಆಯೋಗವು 14-05-2026ರಂದು ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಅದರ ಪೂರ್ವ ತಯಾರಿ ಹಾಗೂ ಸಮಗ್ರ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ ನೀಡುವ ಉದ್ದೇಶದಿಂದ ಸಭೆ ಆಯೋಜಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ಮತದಾರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳ ವಿವರಗಳನ್ನು ಸಭೆಯಲ್ಲಿ ಹಂಚಿಕೊಳ್ಳಲಾಯಿತು.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 967 ಮತಗಟ್ಟೆಗಳಿದ್ದು, 4,48,794 ಪುರುಷ ಮತದಾರರು, 4,56,352 ಮಹಿಳಾ ಮತದಾರರು ಹಾಗೂ 60 ತೃತೀಯಲಿಂಗಿ ಮತದಾರರು ಸೇರಿ ಒಟ್ಟು 9,05,206 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಪ್ರತಿ ಮತಗಟ್ಟೆಗೆ ಒಬ್ಬರಂತೆ 967 ಬಿ.ಎಲ್.ಓಗಳು ಹಾಗೂ ಪ್ರತಿ 10 ಬಿ.ಎಲ್.ಓಗಳಿಗೆ ಒಬ್ಬರಂತೆ 97 ಬಿ.ಎಲ್.ಓ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ. 2002ರ ಮತದಾರರ ಪಟ್ಟಿಗೆ 2025ರ ಮತದಾರರನ್ನು ಮ್ಯಾಪಿಂಗ್ ಮಾಡುವ ಕಾರ್ಯದಲ್ಲಿ ಈಗಾಗಲೇ 8,26,953 ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದ್ದು, ಶೇ.91.36ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ 967 ಮತಗಟ್ಟೆಗಳಿಗೆ ಬೂತ್ ಲೆವೆಲ್ ಏಜೆಂಟ್‌ಗಳ (BLA) ನೇಮಕ ಮಾಡಿ ಪಟ್ಟಿ ಸಲ್ಲಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಲಾಯಿತು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಬಿ.ಎಲ್.ಓಗಳು, ಸಹಾಯಕ ಮತದಾರ ನೋಂದಣಾಧಿಕಾರಿಗಳು ಹಾಗೂ ಮತದಾರ ನೋಂದಣಾಧಿಕಾರಿಗಳೊಂದಿಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಚುನಾವಣಾ ತಹಶೀಲ್ದಾರರು, ಸಹಾಯಕ ಮತದಾರ ನೋಂದಣಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇಂಧನ ದರ ಏರಿಕೆ, ವಿದ್ಯಾರ್ಥಿಗಳ ಸಂಕಷ್ಟಕ್ಕೆ ಮೋದಿ ಸರ್ಕಾರವೇ ಕಾರಣ: ಹುಡೇದ್ ಗುರು ಬಸವರಾಜ್

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪೆಟ್ರೋಲ್-ಡೀಸೆಲ್ ದರ ಏರಿಕೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಜನಸಾಮಾನ್ಯರ ಸಂಕಷ್ಟದ ವಿಚಾರವಾಗಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಹುಡೇದ್ ಗುರು ಬಸವರಾಜ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ವರದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಕಳೆದ ಕೆಲ ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಿಸಿದೆ ಎಂದು ಆರೋಪಿಸಿದರು.
“ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇಂಧನ ದರ ಏರಿಕೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಬದುಕಿಗೆ ದೊಡ್ಡ ಹೊಡೆತವಾಗಿದೆ,” ಎಂದು ಹೇಳಿದರು.
ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಹತ್ವದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲ ಯುವಕರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ದೇಶದ ಮನಸ್ಸನ್ನು ನೋಯಿಸುವಂತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಒಂದೆಡೆ ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಗಳಲ್ಲಿ ತೊಡಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು.
“ದೇಶಕ್ಕಾಗಿ ತ್ಯಾಗ ಮಾಡಬೇಕು ಎಂದು ಜನರಿಗೆ ಕರೆ ನೀಡುವ ಸರ್ಕಾರ ಮೊದಲು ಜನರ ನೋವು ಮತ್ತು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು,” ಎಂದು ಹೇಳಿದರು.
ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಣ್ಣ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ತಕ್ಷಣ ಇಂಧನ ದರ ಏರಿಕೆಯನ್ನು ಹಿಂಪಡೆದು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಸಬೇಕು. ಜೊತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
“ಬೆಲೆ ಏರಿಕೆ ಮತ್ತು ಶಿಕ್ಷಣ ಹಗರಣಗಳಿಂದ ಜನರು ಕಂಗೆಟ್ಟಿದ್ದಾರೆ; ಕೇಂದ್ರ ಸರ್ಕಾರ ಜನರ ಧ್ವನಿಗೆ ಸ್ಪಂದಿಸಬೇಕು.”
ಹುಡೇದ್ ಗುರು ಬಸವರಾಜ್

ಪ್ರತಿ ಮನುಷ್ಯನಲ್ಲಿ ಗಾಂಧೀಜಿ–ಅಂಬೇಡ್ಕರ್ ಪ್ರಜ್ಞೆ ಅಗತ್ಯ: ಎ.ಎಸ್. ಮಕಾನದಾರ

ವಿಜಯಸಾಕ್ಷಿ ಸುದ್ದಿ, ಗದಗ: ಜಾಗತೀಕರಣದ ಕರಿನೆರಳಿನ ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ಮನುಷ್ಯನಲ್ಲೂ ಗಾಂಧೀಜಿ ಪ್ರಜ್ಞೆ ಮತ್ತು ಅಂಬೇಡ್ಕರ್ ಪ್ರಜ್ಞೆ ಮೈಗೂಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಹಿರಿಯ ಸಾಹಿತಿ, ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಗ್ರಂಥಾಲಯ ಅನುಷ್ಠಾನ ಸಮಿತಿಯ ಸಂಚಾಲಕ, ಪ್ರಕಾಶಕ ಎ.ಎಸ್. ಮಕಾನದಾರ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆ ಹಾಗೂ ಕಾರ್ಯಾಗಾರ ಅಂಗವಾಗಿ ಬೆಂಗಳೂರಿನ ಬಿ.ಬಿ.ಎಂ.ಪಿ ಮುಖ್ಯ ಕಚೇರಿಯ ಡಾ. ರಾಜ್‌ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆಯ ಸಹೋದ್ಯೋಗಿ ಶಫಿವುಲ್ಲ ರಚಿಸಿದ “ಸಮಾನತೆಯ ಬೆಳಕು ಡಾ. ಬಿ.ಆರ್. ಅಂಬೇಡ್ಕರ್” ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ರಾಜ್ಯದ 240 ತಾಲೂಕು ಘಟಕಗಳು ಹಾಗೂ 32 ಜಿಲ್ಲಾ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ವಿವಿಧ ಇಲಾಖೆಗಳ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಸೇವಾ ಅವಧಿಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಉನ್ನತ ಅಧಿಕಾರಿಗಳು, ಸಾರ್ವಜನಿಕರು ಹಾಗೂ ರಾಜಕೀಯ ವ್ಯಕ್ತಿಗಳಿಂದ ನಡೆಯುತ್ತಿರುವ ಅನ್ಯಾಯ, ದಬ್ಬಾಳಿಕೆ, ದೌರ್ಜನ್ಯ ಮತ್ತು ಶೋಷಣೆಯನ್ನು ತಡೆಗಟ್ಟಲು ಸರ್ಕಾರದ ಗಮನ ಸೆಳೆಯುವ ಕುರಿತು ಸಭೆಯಲ್ಲಿ ಒತ್ತಾಯಿಸಲಾಯಿತು.
2026ನೇ ಸಾಲಿನ ಸದಸ್ಯತ್ವ ನೋಂದಣಿಯನ್ನು ರಾಜ್ಯದ ಎಲ್ಲಾ 84 ಇಲಾಖೆಗಳ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸುವ ನಿರ್ಧಾರ ಕೈಗೊಳ್ಳಲಾಯಿತು. ಬೆಳಗಾವಿ ವಿಭಾಗೀಯ, ಮೈಸೂರು ವಿಭಾಗೀಯ ಹಾಗೂ ಬೆಂಗಳೂರು ರಾಜ್ಯ ಸಮಾವೇಶಗಳನ್ನು ಶೀಘ್ರದಲ್ಲೇ ಆಯೋಜಿಸಲು ತೀರ್ಮಾನಿಸಲಾಯಿತು.
ರಾಜ್ಯದಲ್ಲಿ ಹಲವು ವರ್ಷಗಳಿಂದ ಖಾಲಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಎಲ್ಲಾ ಇಲಾಖೆಗಳಲ್ಲಿ ರೋಸ್ಟರ್ ಬಿಂದುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಸಭೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು.
ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸಿ. ಹುಬಳ್ಳಿ, ರಾಜ್ಯ ಕಾರ್ಯಾಧ್ಯಕ್ಷ ಜೈ ಭೀಮ್, ರಾಜ್ಯ ಕಾರ್ಯಾಧ್ಯಕ್ಷ ಅನಿಲ್ ಕುಮಾರ್, ನ್ಯಾಯಾಂಗ ಇಲಾಖೆ ಪ್ರಧಾನ ಕಾರ್ಯದರ್ಶಿ ಶಶಿಕಲಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್. ಜಡಗಿ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಶ್ರೀಧರ್ ಕೊಟ್ರೆ, ಜಿಲ್ಲಾ ಗೌರವಾಧ್ಯಕ್ಷ ನಾಗರಾಜ್, ರಾಜ್ಯ ಉಪಾಧ್ಯಕ್ಷ ಮುನಿಕೃಷ್ಣಪ್ಪ, ನ್ಯಾಯಾಂಗ ಇಲಾಖೆ ರಾಜ್ಯ ಪದಾಧಿಕಾರಿಗಳಾದ ಸಂಗಮ ಫರ್ತಾಬಾದ್, ಸುನಿತಾ ಕೊಂಬಿನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೀತಾ ಮೇಲಿನಕೇರಿ, ಅಶೋಕ್ ಕಲಾದಗಿ, ರವಿ ಹಾದಿಮನಿ, ಶಿಕ್ಷಣಪ್ಪ ಮಂಟಾಳೆ, ಬೆಳಗಾವಿ ಜಿಲ್ಲಾಧ್ಯಕ್ಷ ಮಹದೇವ ಐಹೊಳೆ, ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಗೋವಿಂದ ಸಣ್ಣಕ್ಕಿ ಹಾಗೂ ಅಂಬಿಕಾ ಗಾಯಕ್ವಾಡ್ ಸೇರಿದಂತೆ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು.
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಉಪಾಧ್ಯಕ್ಷೆ ಡಾ. ಮಲ್ಲಿಕಾ ಎಂ. ದಾವಣಗೆರೆ, ಕವಿ-ಕಲಾವಿದ ಹಾಗೂ ಸಿನಿಮಾ ನಿರ್ದೇಶಕ ಹರ್ಷ ಹಜರತ್ ಅಲಿ, ಸೌರಭ ಸಾಂಸ್ಕೃತಿಕ ವೇದಿಕೆಯ ರಹಿಮಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
 “ಅನ್ಯಾಯ, ದಬ್ಬಾಳಿಕೆ ಮತ್ತು ಶೋಷಣೆಯನ್ನು ತಡೆಗಟ್ಟಲು ಸಂಘಟಿತ ಹೋರಾಟ ಅಗತ್ಯ. ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳು ಬಲವಾಗಬೇಕು.”
ಎ.ಎಸ್. ಮಕಾನದಾರ, ಸಾಹಿತಿ

ಬಿರುಗಾಳಿ ಅಬ್ಬರಕ್ಕೆ ಮರ ಉರುಳಿ ಬಸ್ ಜಖಂ!

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಂಗಳವಾರ ಸಂಜೆ ನರೇಗಲ್ಲ ಹೋಬಳಿಯಲ್ಲಿ ಬೀಸಿದ ಬಿರುಗಾಳಿ ಹಾಗೂ ರಭಸದ ಮಳೆಗೆ ಮರವೊಂದು ಉರುಳಿ ಶಾಲಾ ವಾಹನ ಜಖಂಗೊಂಡ ಘಟನೆ ನಡೆದಿದೆ.
ಪಟ್ಟಣದ ಶ್ರೀ ಅನ್ನದಾನೇಶ್ವರ ಮಠದ ಆವರಣದಲ್ಲಿದ್ದ ತೇಗಿನ ಮರದ ದೊಡ್ಡ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬಗಳು ಮುರಿದು ಮುಂದೆ ನಿಂತಿದ್ದ ಶಾಲಾ ವಾಹನದ ಮೇಲೆ ಬಿದ್ದವು. ಪರಿಣಾಮ ಬಸ್‌ಗೆ ಹಾನಿಯಾಗಿದೆ.
ಸಂಜೆ 5 ಗಂಟೆ ಸುಮಾರಿಗೆ ಆರಂಭವಾದ ಮಳೆ ಗುಡುಗು, ಮಿಂಚು ಹಾಗೂ ಸಿಡಿಲಿನೊಂದಿಗೆ ಆರ್ಭಟಿಸಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ನರೇಗಲ್ಲ ಪಟ್ಟಣದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಿರುಗಾಳಿಯ ರಭಸಕ್ಕೆ ಕೆಲ ಮನೆಗಳ ತಗಡುಗಳು ಸಪ್ಪಳ ಮಾಡಿದ್ದು, ಜನರು ಆತಂಕಗೊಂಡರು.
ಈಗಾಗಲೇ ಹೆಸರು ಬಿತ್ತಿದ ರೈತರಿಗೆ ಮಳೆ ಆಸರೆಯಾಗಿದ್ದು, ಮುಂದಿನ ಬಿತ್ತನೆ ಕಾರ್ಯಕ್ಕೂ ಹೊಲಗದ್ದೆಗಳಲ್ಲಿ ತೇವಾಂಶ ಹೆಚ್ಚಾಗಿದೆ.
ಬುಧವಾರ ಬೆಳಗ್ಗೆಯೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಕಾಲೇಜು ಸಮಯದಲ್ಲಿ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಬೇಕಾಯಿತು.
ಕಳೆದ ಮಾರ್ಚ್ ತಿಂಗಳಿಂದ ತೀವ್ರ ಬಿಸಿಲಿಗೆ ಬೇಸತ್ತಿದ್ದ ಜನರಿಗೆ ಈ ಮಳೆ ತಂಪಿನ ಅನುಭವ ನೀಡಿದ್ದು, “ನರೇಗಲ್ಲ ಈಗ ಥಂಡಾ ಕೂಲ್” ಎಂದು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.
error: Content is protected !!