Home Blog Page 4

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಶೇಷ ದರ್ಶನಕ್ಕೆ 2000 ರೂ ನಿಗದಿ: ಸರ್ಕಾರ ವಿರುದ್ಧ ಧ್ವನಿ ಎತ್ತಿದ ಕರ್ನಾಟಕ ಸೇನೆ ಪಡೆ

0

ಮೈಸೂರು: ಚಾಮುಂಡೇಶ್ವರಿ ದೇವರ ಆಷಾಢ ಶುಕ್ರವಾರ ವಿಶೇಷ ದರ್ಶನಕ್ಕೆ 2000 ರೂ. ಶುಲ್ಕ ವಿಧಿಸಿರುವ ರಾಜ್ಯ ಸರ್ಕಾರದ ನಿರ್ಧಾರ ಭಾರೀ ವಿರೋಧಕ್ಕೆ ಗುರಿಯಾಗಿದೆ. ಈ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ಸೇನೆ ಪಡೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಧಾರ್ಮಿಕ ಕ್ಷೇತ್ರವನ್ನು ವ್ಯಾಪಾರೀಕರಣ ಮಾಡಲಾಗುತ್ತಿದೆ ಮತ್ತು ಭಕ್ತರ ಭಾವನೆಗಳನ್ನು ಲೆಕ್ಕಿಸದೇ ಹಣ ವಸೂಲಿ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾಕಾರರು ಆಷಾಢ ಮಾಸದಲ್ಲಿ ದೇವಿಯ ದರ್ಶನಕ್ಕೆ ಬರುವ ಭಕ್ತರನ್ನು ಕಡೆಗಣಿಸಿ, 2000 ರೂ. ಟಿಕೆಟ್ ಮೂಲಕ ಪ್ರವೇಶವನ್ನು ನಿಯಂತ್ರಿಸುವುದು ಅನ್ಯಾಯ ಎಂದು ಹೇಳಿದ್ದಾರೆ. ಹಿಂದಿನ 50 ರೂ. ಹಾಗೂ 300 ರೂ. ದರ್ಶನ ವ್ಯವಸ್ಥೆಯನ್ನು ರದ್ದುಪಡಿಸಿರುವುದು ಸಾಮಾನ್ಯ ಭಕ್ತರಿಗೆ ದೊಡ್ಡ ಹೊಡೆತವಾಗಿದೆ ಎಂದು ದೂರಿದ್ದಾರೆ.

ಚಾಮುಂಡಿ ಬೆಟ್ಟವು ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಸ್ಥಳವಾಗಿದ್ದು, ಇದನ್ನು ವ್ಯಾಪಾರ ಕೇಂದ್ರವನ್ನಾಗಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. “ತಿರುಪತಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲೂ ಇಂತಹ ಭಾರಿ ಶುಲ್ಕ ಇಲ್ಲ” ಎಂದು ಪ್ರತಿಭಟನಾಕಾರರು ಹೋಲಿಕೆ ಮಾಡಿದ್ದಾರೆ.

ಸರ್ಕಾರ ತಕ್ಷಣ 2000 ರೂ. ವಿಶೇಷ ದರ್ಶನ ಶುಲ್ಕವನ್ನು ಹಿಂಪಡೆಯಬೇಕು ಮತ್ತು ಹಿಂದಿನ ದರ ವ್ಯವಸ್ಥೆಯನ್ನು ಪುನಃ ಜಾರಿಗೆ ತರಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಗಿದೆ.

ಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್! ಯತೀಂದ್ರ ಖಾತೆ ಬದಲಾಯಿಸಿ; ಡಿಕೆ ಶಿವಕುಮಾರ್‌ಗೆ ಪತ್ರ ಬರೆದ ಹೋರಾಟಗಾರರು

ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಂದ ನಗರಾಭಿವೃದ್ಧಿ ಖಾತೆಯನ್ನು ತಕ್ಷಣವೇ ಹಿಂಪಡೆದು ಬದಲಿ ಇಲಾಖೆ ನೀಡುವಂತೆ ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದೆ.

ವೇದಿಕೆಯ ಪರ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್ ಸಲ್ಲಿಸಿರುವ ಪತ್ರದಲ್ಲಿ, ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಾರ್ವತಿ ಆರೋಪಿಗಳಾಗಿರುವ ಹಿನ್ನೆಲೆಯಲ್ಲಿ, ಅವರ ಪುತ್ರರಾಗಿರುವ ಯತೀಂದ್ರ ಅದೇ ಇಲಾಖೆಯ ಸಚಿವರಾಗಿರುವುದು ‘ಹಿತಾಸಕ್ತಿ ಸಂಘರ್ಷ’ಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಲಾಗಿದೆ.

ಪ್ರಕರಣ ಈಗಾಗಲೇ ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಿಮಿನಲ್ ಪ್ರಕರಣ, ಕರ್ನಾಟಕ ಹೈಕೋರ್ಟ್ ಹಾಗೂ ಜಾರಿ ನಿರ್ದೇಶನಾಲಯದ ತನಿಖೆಯ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಮೇಲಿನ ಅಧಿಕಾರ ನಿಷ್ಪಕ್ಷಪಾತ ತನಿಖೆಯ ಕುರಿತು ಸಾರ್ವಜನಿಕರಲ್ಲಿ ಅನುಮಾನ ಹುಟ್ಟಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪಾರದರ್ಶಕ ಆಡಳಿತ ಹಾಗೂ ನಿಷ್ಪಕ್ಷಪಾತ ತನಿಖೆ ದೃಷ್ಟಿಯಿಂದ ಯತೀಂದ್ರ ಅವರಿಗೆ ನಗರಾಭಿವೃದ್ಧಿ ಖಾತೆಯ ಬದಲು ಮತ್ತೊಂದು ಇಲಾಖೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವೇದಿಕೆ ಒತ್ತಾಯಿಸಿದೆ.

15 ದಿನದ ನವಜಾತ ಹೆಣ್ಣು ಮಗುವನ್ನು ಕೈಚೀಲದಲ್ಲಿ ಕಟ್ಟಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ದುಷ್ಟರು

ಶಿವಮೊಗ್ಗ: ಹೊಸನಗರ ತಾಲೂಕಿನ ಗವಟೂರು ಹೊಳೆ ಬಳಿ ಹೃದಯ ಕಲಕುವ ಘಟನೆ ನಡೆದಿದೆ. ಕೇವಲ 10ರಿಂದ 15 ದಿನಗಳ ನವಜಾತ ಹೆಣ್ಣು ಮಗುವನ್ನು ಕೈಚೀಲದಲ್ಲಿ ಹಾಕಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ಬಿಳಿ ಬಟ್ಟೆಯಲ್ಲಿ ಸುತ್ತಿದ ಮಗುವನ್ನು ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿ ನೇತು ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಾತ್ರಿ ವೇಳೆ ಮಗುವಿನ ಅಳುವ ಶಬ್ದ ಕೇಳಿದ ಸ್ಥಳೀಯ ನಿವಾಸಿ ಸ್ಥಳ ಪರಿಶೀಲಿಸಿದಾಗ ಚೀಲದೊಳಗೆ ನವಜಾತ ಶಿಶು ಇರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಮಾಹಿತಿ ಪಡೆದ ರಿಪ್ಪನ್‌ಪೇಟೆ ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ. ಆರೋಗ್ಯ ತಪಾಸಣೆಯಲ್ಲಿ 1.6 ಕೆ.ಜಿ ತೂಕವಿರುವ ಮಗು ಆರೋಗ್ಯವಾಗಿರುವುದು ತಿಳಿದುಬಂದಿದ್ದು, ಹೆಚ್ಚಿನ ಆರೈಕೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸದ್ಯ ಮಗು ಶಿಶು ಆರೈಕೆ ಕೇಂದ್ರದಲ್ಲಿ ಸುರಕ್ಷಿತವಾಗಿದ್ದು, ನವಜಾತ ಶಿಶುವನ್ನು ಬಿಟ್ಟು ಹೋದವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬ್ರೆಜಿಲ್ ವಿಶ್ವಕಪ್ ಕನಸು ಭಗ್ನ: ನಾರ್ವೆ ಕ್ವಾರ್ಟರ್ ಫೈನಲ್ʼಗೆ, ಕಣ್ಣೀರಿನೊಂದಿಗೆ ನಿವೃತ್ತಿ ಘೋಷಿಸಿದ ನೇಮರ್

ನ್ಯೂಯಾರ್ಕ್: 2026ರ ಫಿಫಾ ವಿಶ್ವಕಪ್ ಪ್ರೀ-ಕ್ವಾರ್ಟರ್ ಫೈನಲ್‌ನಲ್ಲಿ ಐದು ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡಕ್ಕೆ ನಾರ್ವೆ ವಿರುದ್ಧ ಆಘಾತಕಾರಿ ಸೋಲು ಎದುರಾಗಿದ್ದು, ಈ ಸೋಲಿನ ಬೆನ್ನಲ್ಲೇ ಬ್ರೆಜಿಲ್‌ನ ಸ್ಟಾರ್ ಫುಟ್ಬಾಲ್ ಆಟಗಾರ ನೇಮರ್ ತಮ್ಮ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

ಮೆಟ್‌ಲೈಫ್ ಸ್ಟೇಡಿಯಂನಲ್ಲಿ ಭಾನುವಾರ ತಡರಾತ್ರಿ ನಡೆದ ಪಂದ್ಯದಲ್ಲಿ ನಾರ್ವೆ 2-1 ಗೋಲುಗಳ ಅಂತರದಲ್ಲಿ ಬ್ರೆಜಿಲ್‌ನ್ನು ಮಣಿಸಿ ಮೊದಲ ಬಾರಿಗೆ ಫಿಫಾ ವಿಶ್ವಕಪ್ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿತು. ನಾರ್ವೆ ಪರ ಯುವ ಸ್ಟಾರ್ ಎರ್ಲಿಂಗ್ ಹಾಲೆಂಡ್ ಎರಡು ಗೋಲುಗಳನ್ನು ದಾಖಲಿಸಿ ತಂಡದ ಐತಿಹಾಸಿಕ ಗೆಲುವಿನ ರೂವಾರಿಯಾದರು.

1990ರ ಬಳಿಕ ಬ್ರೆಜಿಲ್ ತಂಡವು ವಿಶ್ವಕಪ್‌ನಿಂದ ಇಷ್ಟು ಆರಂಭಿಕ ಹಂತದಲ್ಲೇ ಹೊರಬಿದ್ದಿರುವುದು ಇದೇ ಮೊದಲ ಬಾರಿ. ಈ ಸೋಲು ಬ್ರೆಜಿಲ್ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದ್ದು, ತಂಡದ ವಿಶ್ವಕಪ್ ಅಭಿಯಾನಕ್ಕೆ ಅಕಾಲಿಕ ತೆರೆ ಬಿದ್ದಿದೆ.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ನೇಮರ್ ಪಂದ್ಯದುದ್ದಕ್ಕೂ ಹೋರಾಟ ನಡೆಸಿ, ಇಂಜುರಿ ಟೈಮ್‌ನ 90+10ನೇ ನಿಮಿಷದಲ್ಲಿ ಬ್ರೆಜಿಲ್ ಪರ ಏಕೈಕ ಗೋಲು ದಾಖಲಿಸಿದರು. ಆದರೆ ಆ ಗೋಲು ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಕಾಗಲಿಲ್ಲ.

ಪಂದ್ಯದ ಬಳಿಕ ಭಾವುಕರಾಗಿ ಮಾತನಾಡಿದ ನೇಮರ್, ತಮ್ಮ 16 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಫುಟ್ಬಾಲ್ ಪಯಣಕ್ಕೆ ವಿದಾಯ ಹೇಳುತ್ತಿರುವುದಾಗಿ ಘೋಷಿಸಿದರು.

“ನಾನು ಸಾಕಷ್ಟು ಪ್ರಯತ್ನಿಸಿದ್ದೇನೆ. ಆದರೆ ಈಗ ಎಲ್ಲವೂ ಮುಗಿದಿದೆ. ನಾನು ಎಲ್ಲಿಂದ ನನ್ನ ವೃತ್ತಿಜೀವನ ಆರಂಭಿಸಿದ್ದೆನೋ, ಇಂದು ಅಲ್ಲಿಯೇ ಅದಕ್ಕೆ ತೆರೆ ಎಳೆಯುತ್ತಿದ್ದೇನೆ,” ಎಂದು ನೇಮರ್ ಕಣ್ಣೀರಿನೊಂದಿಗೆ ಹೇಳಿದರು.

ಈ ಪಂದ್ಯದಲ್ಲಿ ದಾಖಲಿಸಿದ ಗೋಲಿನೊಂದಿಗೆ ನೇಮರ್ ಬ್ರೆಜಿಲ್ ಪರ 130 ಪಂದ್ಯಗಳಲ್ಲಿ 80 ಗೋಲು ಹಾಗೂ 59 ಅಸಿಸ್ಟ್‌ಗಳನ್ನು ದಾಖಲಿಸಿದ್ದಾರೆ. ಈ ಮೂಲಕ ಮಾಜಿ ದಿಗ್ಗಜ ಪೆಲೆ ಅವರ ದಾಖಲೆಯನ್ನು ಹಿಂದಿಕ್ಕಿ, ಬ್ರೆಜಿಲ್ ಪರ ಸಾರ್ವಕಾಲಿಕ ಅತಿ ಹೆಚ್ಚು ಗೋಲು ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಒಂದೆಡೆ ನಾರ್ವೆ ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟು ಸಂಭ್ರಮಿಸಿದರೆ, ಮತ್ತೊಂದೆಡೆ ಬ್ರೆಜಿಲ್‌ಗೆ ಸೋಲಿನ ಆಘಾತದೊಂದಿಗೆ ಫುಟ್ಬಾಲ್ ದಿಗ್ಗಜ ನೇಮರ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೂ ಭಾವನಾತ್ಮಕ ತೆರೆ ಬಿದ್ದಿದೆ.

ಕರ್ನಾಟಕದಲ್ಲಿ 56 ಸಾವಿರಕ್ಕೂ ಹೆಚ್ಚು ಮಂದಿಗೆ ತಮಗೇ ತಿಳಿಯದೆ HIV ಸೋಂಕು: ಪತ್ತೆಗಾಗಿ ಆರೋಗ್ಯ ಇಲಾಖೆಯ ವಿಶೇಷ ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ ಹೆಚ್‌ಐವಿ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ (ಕೆಎಸ್‌ಎಪಿಎಸ್) ಹಮ್ಮಿಕೊಂಡಿರುವ ‘ಮೊಬಿಲೈಸೇಶನ್ ಫಾರ್ ಏಡ್ಸ್ ಸುರಕ್ಷಾ’ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಲಾಗಿದೆ. ಹೆಚ್‌ಐವಿ ಸೋಂಕಿತರನ್ನು ಗುರುತಿಸಿ, ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸುವ ಮೂಲಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಜೂನ್ 28, 2026ರವರೆಗಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ 2,05,350 ಮಂದಿ ಹೆಚ್‌ಐವಿ ಸೋಂಕಿತರು ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯಕರ ಜೀವನ ನಡೆಸುತ್ತಿದ್ದಾರೆ. ಆದರೆ, ಸುಮಾರು 56,406 ಮಂದಿ ತಮ್ಮ ಹೆಚ್‌ಐವಿ ಸೋಂಕಿನ ಬಗ್ಗೆ ಅರಿವಿಲ್ಲದೆ ಇರುವ ಸಾಧ್ಯತೆ ಇದೆ ಎಂದು ಸಂಸ್ಥೆ ತಿಳಿಸಿದೆ. ಇಂತಹವರನ್ನು ಪತ್ತೆಹಚ್ಚಿ ಚಿಕಿತ್ಸೆ ವ್ಯಾಪ್ತಿಗೆ ತರುವುದು ಅಭಿಯಾನದ ಪ್ರಮುಖ ಗುರಿಯಾಗಿದೆ.

ಸಮಾಜದಲ್ಲಿ ಹೆಚ್‌ಐವಿ ಸೋಂಕಿತರ ಬಗ್ಗೆ ಇರುವ ತಾರತಮ್ಯ ಹಾಗೂ ಕೀಳರಿಮೆಯ ಮನೋಭಾವವನ್ನು ನಿವಾರಿಸುವ ಉದ್ದೇಶದಿಂದ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಎಂಬ ಸಂದೇಶದಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸ್ವಯಂಪ್ರೇರಿತ ಹಾಗೂ ಸಂಪೂರ್ಣ ಗೌಪ್ಯತೆಯೊಂದಿಗೆ ಹೆಚ್‌ಐವಿ ತಪಾಸಣೆ ಮಾಡಿಸಿಕೊಳ್ಳುವಂತೆ ಸಂಸ್ಥೆ ಕರೆ ನೀಡಿದೆ.

ಹೆಚ್‌ಐವಿಯನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಇದೇ ವೇಳೆ ‘ಪತ್ತೆಯಾಗದಿದ್ದರೆ = ಹರಡುವುದಿಲ್ಲ (Undetectable = Untransmittable – U=U)’ ಎಂಬ ವೈಜ್ಞಾನಿಕ ಸಂದೇಶಕ್ಕೂ ಅಭಿಯಾನದಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ.

ಅದರಂತೆ, ಹೆಚ್‌ಐವಿ ಸೋಂಕಿತರು ನಿಯಮಿತವಾಗಿ ಎಆರ್‌ಟಿ ಚಿಕಿತ್ಸೆ ಪಡೆದು ವೈರಸ್ ಪ್ರಮಾಣವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ, ಅವರಿಂದ ಲೈಂಗಿಕ ಸಂಗಾತಿಗೆ ಸೋಂಕು ಹರಡುವುದಿಲ್ಲ. ಇದರಿಂದ ಸೋಂಕಿತರು ದೀರ್ಘಕಾಲ ಆರೋಗ್ಯಕರ ಹಾಗೂ ಉತ್ಪಾದಕ ಜೀವನ ನಡೆಸಬಹುದು ಎಂದು ಸಂಸ್ಥೆ ವಿವರಿಸಿದೆ.

ಅಭಿಯಾನದ ಭಾಗವಾಗಿ ‘ಬ್ರೇಕ್‌ಫ್ರೀ ಕ್ಯೂಆರ್ ಕೋಡ್’ ಅನ್ನು ಪರಿಚಯಿಸಲಾಗಿದ್ದು, ಸಾರ್ವಜನಿಕರು ಇದನ್ನು ಸ್ಕ್ಯಾನ್ ಮಾಡುವ ಮೂಲಕ ಹೆಚ್‌ಐವಿ ಅಪಾಯದ ಕುರಿತು ಮಾಹಿತಿ ಪಡೆಯಬಹುದು. ಜೊತೆಗೆ ಗೌಪ್ಯ ಆಪ್ತ ಸಮಾಲೋಚನೆ ಹಾಗೂ ತಪಾಸಣಾ ಕೇಂದ್ರಗಳ ಮಾಹಿತಿಯನ್ನೂ ಸುಲಭವಾಗಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ.

ಪ್ರತಿಯೊಬ್ಬ ವಯಸ್ಕರೂ ತಮ್ಮ ಹೆಚ್‌ಐವಿ ಸ್ಥಿತಿಯನ್ನು ತಿಳಿದುಕೊಳ್ಳಬೇಕು. ಗರ್ಭಿಣಿಯರು ಕಡ್ಡಾಯವಾಗಿ ಹೆಚ್‌ಐವಿ ಹಾಗೂ ಸಿಫಿಲಿಸ್ ತಪಾಸಣೆಗೆ ಒಳಗಾಗಬೇಕು. ಲೈಂಗಿಕ ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಕರುನಾಡಿಗೆ ಜೀವಕಳೆ ತಂದ ಮುಂಗಾರು ಮಳೆ; KRS ಡ್ಯಾಂ ಒಳಹರಿವು 4,291 ಕ್ಯೂಸೆಕ್ʼಗೆ ಏರಿಕೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಸುಮಾರು ಆರು ತಿಂಗಳ ಬಳಿಕ ಜಲಾಶಯಕ್ಕೆ ಉತ್ತಮ ಪ್ರಮಾಣದಲ್ಲಿ ನೀರು ಹರಿದುಬಂದಿದ್ದು, ರೈತರು ಹಾಗೂ ಜನರಲ್ಲಿ ಆಶಾಭಾವನೆ ಮೂಡಿಸಿದೆ.

ನಿನ್ನೆ 1,449 ಕ್ಯೂಸೆಕ್ ಇದ್ದ ಒಳಹರಿವು ಇಂದು 4,291 ಕ್ಯೂಸೆಕ್ಗೆ ಏರಿಕೆಯಾಗಿದೆ. ಕಾವೇರಿ ಕೊಳ್ಳದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಕೆಆರ್‌ಎಸ್‌ಗೆ ಮತ್ತೆ ಜೀವಕಳೆ ಬಂದಂತಾಗಿದೆ.

ಪ್ರಸ್ತುತ ಜಲಾಶಯದಲ್ಲಿ 764 ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದು, ಸದ್ಯ 80.90 ಅಡಿ ನೀರು ಸಂಗ್ರಹವಾಗಿದೆ.

ಕೆಆರ್‌ಎಸ್ ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಇದ್ದು, ಪ್ರಸ್ತುತ 11.487 ಟಿಎಂಸಿ ನೀರು ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಆರ್‌ಎಸ್ ಜಲಾಶಯದ ಇಂದಿನ ಮಾಹಿತಿ:

  • ಗರಿಷ್ಠ ನೀರಿನ ಮಟ್ಟ: 124.80 ಅಡಿ
  • ಪ್ರಸ್ತುತ ನೀರಿನ ಮಟ್ಟ: 80.90 ಅಡಿ
  • ಒಳಹರಿವು: 4,291 ಕ್ಯೂಸೆಕ್
  • ಹೊರಹರಿವು: 764 ಕ್ಯೂಸೆಕ್
  • ಒಟ್ಟು ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಪ್ರಸ್ತುತ ನೀರಿನ ಸಂಗ್ರಹ: 11.487 ಟಿಎಂಸಿ

ದೇವಸ್ಥಾನದಲ್ಲೇ ಕೋಟ್ಯಾಂತರ ರೂ.ಮೌಲ್ಯದ ಬೆಳ್ಳಿ ದೋಚಿದ ಕಳ್ಳರು..! ಸಾಧು-ಸಂತರು ಮಲಗಿದ್ದಾಗಲೇ ಕಳ್ಳರ ಕೈಚಳಕ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಭಾರೀ ಕಳ್ಳತನ ಎಸಗಿದ್ದು, ಸುಮಾರು ₹1.20 ಕೋಟಿ ಮೌಲ್ಯದ ಬೆಳ್ಳಿ ಆಭರಣ ಹಾಗೂ ಪೂಜಾ ಸಾಮಗ್ರಿಗಳನ್ನು ದೋಚಿ ಪರಾರಿಯಾಗಿದ್ದಾರೆ.

ತಡರಾತ್ರಿ ನಡೆದ ಈ ಕಳ್ಳತನ ಬೆಳಿಗ್ಗೆ ದೇವಸ್ಥಾನ ಸಿಬ್ಬಂದಿ ಗಮನಕ್ಕೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕಳ್ಳರು ದೇವಸ್ಥಾನದಲ್ಲಿದ್ದ ಸುಮಾರು 35 ಕೆಜಿ ತೂಕದ ಬೆಳ್ಳಿಯ ದೇವರ ಮುಖ, 10 ಕೆಜಿ ತೂಕದ ಬೆಳ್ಳಿಯ ದೇವರ ಮೂರ್ತಿ ಹಾಗೂ 60 ಕೆಜಿಗೂ ಅಧಿಕ ತೂಕದ ಬೆಳ್ಳಿ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ವೇಳೆ ದೇವಸ್ಥಾನದಲ್ಲೇ ಸಾಧು-ಸಂತರು ಮಲಗಿದ್ದರೂ, ಯಾರಿಗೂ ಸುಳಿವು ಸಿಗದಂತೆ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಅಲ್ಲದೆ, ದೇವಸ್ಥಾನದ ಸಿಸಿಟಿವಿ ಕ್ಯಾಮೆರಾಗಳು ಬಂದ್ ಆಗಿದ್ದರಿಂದ ತನಿಖೆಗೆ ತೊಂದರೆಯಾಗಿದ್ದು, ಕಳ್ಳರು ಇದನ್ನೇ ದುರುಪಯೋಗಪಡಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಿಂತಾಮಣಿಯಲ್ಲಿ ಡಬಲ್ ಮರ್ಡರ್! ಪತ್ನಿ-ನಾದಿನಿಯ ಕತ್ತು ಕೊಯ್ದು ಮಕ್ಕಳೊಂದಿಗೆ ಎಸ್ಕೇಪ್ ಆದ ಪತಿ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದ ಭೀಕರ ಡಬಲ್ ಮರ್ಡರ್ ಪ್ರಕರಣ ಆತಂಕ ಸೃಷ್ಟಿಸಿದೆ. 25 ವರ್ಷದ ಶಮಾ ಹಾಗೂ 21 ವರ್ಷದ ರೇಷ್ಮಾ ಎಂಬ ಅಕ್ಕ-ತಂಗಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಪ್ರಕರಣದಲ್ಲಿ ಶಮಾ ಅವರ ಪತಿ ಏಜಾಜ್ ಪ್ರಮುಖ ಶಂಕಿತನಾಗಿದ್ದು, ಕೃತ್ಯ ಎಸಗಿದ ಬಳಿಕ ಮೂವರು ಮಕ್ಕಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಆರೋಪಿಯ ಬಂಧನಕ್ಕಾಗಿ ಚಿಂತಾಮಣಿ ನಗರ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಮೃತರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಗಾಂಜಾ ಸೇವನೆಯ ಮತ್ತಿನಲ್ಲೇ ಆರೋಪಿ ಈ ಕೃತ್ಯ ಎಸಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಇತ್ತ, ಚಿಂತಾಮಣಿ ನಗರದಲ್ಲಿ ಗಾಂಜಾ ಮಾರಾಟ ನಿಯಂತ್ರಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ಆರೋಪಿಯ ಬಂಧನದ ಬಳಿಕವೇ ಸ್ಪಷ್ಟವಾಗಲಿದೆ.

ಜಮೀನು ವಿವಾದ: ಶಿವಶರಣ ಹರಳಯ್ಯ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ ಹಲ್ಲೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ದಲಿತ ಸಮುದಾಯದ ಶಿವಶರಣ ಹರಳಯ್ಯ ಮಠದ ಪೀಠಾಧಿಪತಿ ಬಸವ ಹರಳಯ್ಯ ಶ್ರೀಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಠದ ಪಕ್ಕದ ಜಮೀನಿನ ವಿವಾದವೇ ಹಲ್ಲೆಗೆ ಕಾರಣ ಎನ್ನಲಾಗಿದ್ದು, ಜಮೀನಿನ ಮಾಲೀಕ ಸಿದ್ದೇಶ್ವರ ಹಾಗೂ ಆತನ ಸಹಚರರ ವಿರುದ್ಧ ಆರೋಪ ಕೇಳಿಬಂದಿದೆ.

ಸುಮಾರು ಒಂದು ವರ್ಷದಿಂದ ಮಠದ ಪ್ರವೇಶ ದ್ವಾರದ ಜಾಗಕ್ಕೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಆದರೆ ಪ್ರಕರಣ ಇತ್ಯರ್ಥವಾಗುವ ಮುನ್ನವೇ ಭಾನುವಾರ ರಾತ್ರಿ ಆರೋಪಿಗಳು ಮಠಕ್ಕೆ ನುಗ್ಗಿ ಹರಳಯ್ಯ ಶ್ರೀಗಳು ಹಾಗೂ ಶಾಲಾ ಬಸ್ ಚಾಲಕ ಭೀಮರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಮೂಗು ಮತ್ತು ಬಾಯಿಗೆ ತೀವ್ರ ಪೆಟ್ಟಾಗಿದೆ.

ಹಲ್ಲೆಯ ಬಳಿಕ ದೂರು ನೀಡಲು ಐಮಂಗಲ ಪೊಲೀಸ್ ಠಾಣೆಗೆ ತೆರಳಿದ್ದ ಶ್ರೀಗಳ ಹಿಂದೆ ಠಾಣೆಗೂ ನುಗ್ಗಿದ ಆರೋಪಿಗಳು ಅಲ್ಲಿಯೂ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಶ್ರೀಗಳು ಕುಳಿತಿದ್ದ ಕುರ್ಚಿಯನ್ನು ಒದ್ದು ಮುರಿದು ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ.

ಗಾಯಾಳುಗಳಾದ ಹರಳಯ್ಯ ಶ್ರೀಗಳು ಹಾಗೂ ಚಾಲಕ ಭೀಮರಾಜ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಪೊಲೀಸ್ ಠಾಣೆಗೆ ಬಂದರೂ ರಕ್ಷಣೆ ಸಿಗುತ್ತಿಲ್ಲ. ಸ್ವಾಮೀಜಿಯೇ ಸುರಕ್ಷಿತರಲ್ಲದಿದ್ದರೆ ಸಾಮಾನ್ಯ ಜನರ ಸ್ಥಿತಿ ಏನು?” ಎಂದು ಹರಳಯ್ಯ ಶ್ರೀಗಳು ಪ್ರಶ್ನಿಸಿದ್ದು, ಐಮಂಗಲ ಪಿಎಸ್‌ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಲಾರ್ಡ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾ ಮಹಿಳಾ ತಂಡ: 7ನೇ ಟಿ20 ವಿಶ್ವಕಪ್ ಕಿರೀಟದೊಂದಿಗೆ ಹೊಸ ದಾಖಲೆ

ಲಾರ್ಡ್ಸ್: 2026ರ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಏಳನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ಏಳು ಏಕದಿನ ವಿಶ್ವಕಪ್ ಹಾಗೂ ಏಳು ಟಿ20 ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದ ಮೊದಲ ತಂಡ ಎಂಬ ಐತಿಹಾಸಿಕ ಸಾಧನೆಯನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.

ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿ, ಆಸ್ಟ್ರೇಲಿಯಾಕ್ಕೆ 151 ರನ್‌ಗಳ ಗುರಿ ನೀಡಿತು.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಆರಂಭದಿಂದಲೇ ಆತ್ಮವಿಶ್ವಾಸದಿಂದ ಬ್ಯಾಟಿಂಗ್ ನಡೆಸಿತು. ಫೋಬೆ ಲಿಚ್‌ಫೀಲ್ಡ್ 48 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರೆ, ಅನುಭವಿ ಬೆತ್ ಮೂನಿ 64 ರನ್‌ಗಳ ಅಮೋಘ ಪ್ರದರ್ಶನ ನೀಡಿ ಗೆಲುವಿನ ಭದ್ರ ಬುನಾದಿ ಹಾಕಿದರು. ಅಂತಿಮವಾಗಿ ಆಸ್ಟ್ರೇಲಿಯಾ 17 ಎಸೆತಗಳು ಬಾಕಿ ಇರುವಾಗಲೇ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಇಂಗ್ಲೆಂಡ್ ಪರ ನಾಯಕಿ ನ್ಯಾಟ್ ಸಿವರ್-ಬ್ರಂಟ್ 53 ಎಸೆತಗಳಲ್ಲಿ ಅಜೇಯ 58 ರನ್ ಗಳಿಸಿ ತಂಡವನ್ನು ಗೌರವಯುತ ಮೊತ್ತದತ್ತ ಕೊಂಡೊಯ್ದರು. ಫ್ರೇಯಾ ಕೆಂಪ್ 28 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿ ಉತ್ತಮ ಬೆಂಬಲ ನೀಡಿದರು. ಆದರೆ ಉಳಿದ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. ಆಮಿ ಜೋನ್ಸ್ 6 ರನ್ ಮತ್ತು ಡ್ಯಾನಿ ವ್ಯಾಟ್ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಆಸ್ಟ್ರೇಲಿಯಾ ಪರ ಕಿಮ್ ಗಾರ್ಥ್, ಲೂಸಿ ಹ್ಯಾಮಿಲ್ಟನ್ ಹಾಗೂ ಜಾರ್ಜಿಯಾ ವೇರ್‌ಹ್ಯಾಮ್ ಶಿಸ್ತುಬದ್ಧ ಬೌಲಿಂಗ್ ಪ್ರದರ್ಶಿಸಿ ಇಂಗ್ಲೆಂಡ್ ತಂಡವನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಮಹಿಳಾ ತಂಡ ಮತ್ತೊಮ್ಮೆ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದ್ದು, ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ದಾಖಲೆಯ ಏಳನೇ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.