Home Blog Page 4

ಕಾವೇರಿ ವಿವಾದದ ನಡುವೆಯೇ ಕರ್ನಾಟಕಕ್ಕೆ ಜಲ ಭಾಗ್ಯ; ಭರ್ತಿಯಾಗುವ ಹಂತದಲ್ಲಿ ಕಬಿನಿ, ಹಾರಂಗಿಯಿಂದಲೂ ಭಾರಿ ನೀರು ಬಿಡುಗಡೆ

0

ಮೈಸೂರು: ರಾಜ್ಯದಲ್ಲಿ ಬರದ ಆತಂಕದ ನಡುವೆಯೇ ಜನರಿಗೆ ಕೊಂಚ ನೆಮ್ಮದಿ ನೀಡುವ ಬೆಳವಣಿಗೆ ನಡೆದಿದೆ. ನೆರೆಯ ಕೇರಳದ ವಯನಾಡು ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮೈಸೂರು ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಕಬಿನಿ ಡ್ಯಾಂ ಭರ್ತಿಯಾಗುವ ಹಂತ ತಲುಪಿದೆ.

ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರಿನ ಒಳಹರಿವು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ ವೇಗವಾಗಿ ಏರಿಕೆಯಾಗಿದೆ.

ಸದ್ಯ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ಗರಿಷ್ಠ 2,284 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈಗಾಗಲೇ 2,280 ಅಡಿ ನೀರು ಸಂಗ್ರಹವಾಗಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ.

ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸುಮಾರು 8 ಸಾವಿರದಿಂದ 10 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು, ಕಬಿನಿ ನದಿ ಪಾತ್ರದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯದಲ್ಲಿ ಸದ್ಯ ಸುಮಾರು 18 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದೆಡೆ ಕೊಡಗು ಭಾಗದ ಹಾರಂಗಿ ಜಲಾಶಯಕ್ಕೂ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ 11,800ಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವು ದಾಖಲಾಗಿದೆ.

ಸುರಕ್ಷತಾ ಕ್ರಮವಾಗಿ ಹಾರಂಗಿ ಜಲಾಶಯದಿಂದ 13,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನಾಲ್ಕು ಕ್ರಸ್ಟ್ ಗೇಟ್‌ಗಳು ಹಾಗೂ ವಿದ್ಯುತ್ ಘಟಕದ ಮೂಲಕ ನೀರು ಹೊರಬಿಡಲಾಗುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕೇರಳದಲ್ಲಿ ಭಾರೀ ಮಳೆ ಆರ್ಭಟ; ಭೂಕುಸಿತಕ್ಕೆ ಮೂವರು ಬಲಿ, ಹಲವೆಡೆ ರಕ್ಷಣಾ ಕಾರ್ಯಾಚರಣೆ

0

ಕೇರಳ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದಲ್ಲಿ ಭೂಕುಸಿತ ಪ್ರಕರಣಗಳು ಹೆಚ್ಚುತ್ತಿದ್ದು, ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವೆಡೆ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಇಡುಕ್ಕಿ ಜಿಲ್ಲೆಯ ಕುದಯತ್ತೂರು ಸಮೀಪದ ಅಡೂರ್ಮಾಲ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿ ಮನೆ ಕುಸಿದ ಪರಿಣಾಮ ಸುಮತಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯ ವೇಳೆ ನೆರೆಹೊರೆಯವರು ಸುಮತಿ ಅವರ ಪತಿ ಮತ್ತು ಮಗನನ್ನು ರಕ್ಷಿಸಿದ್ದು, ಗಾಯಗೊಂಡ ಇಬ್ಬರನ್ನೂ ತೋಡುಪುಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತದಿಂದ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ರಕ್ಷಣಾ ದಳ, ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಅವಶೇಷಗಳಡಿಯಿಂದ ಸುಮತಿ ಅವರ ಮೃತದೇಹವನ್ನು ಹೊರತೆಗೆದರು.

ಇನ್ನೊಂದೆಡೆ, ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನ ಪಯ್ಯನಿತೋಟಂ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೋಸೆಫ್ ಎಂಬ ಯುವಕ ಮೃತಪಟ್ಟಿದ್ದಾರೆ. ಅವರ ತಾಯಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಮತ್ತೊಂದು ದುರ್ಘಟನೆಯಲ್ಲಿ ಇಡುಕ್ಕಿ ಜಿಲ್ಲೆಯ ವಾಗಮನ್ ಪ್ರದೇಶದಲ್ಲಿ ಮನೆಯ ಮೇಲೆ ಭೂಕುಸಿತ ಸಂಭವಿಸಿ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ. ಕೊಟ್ಟಾಯಂನ ವೈಕೋಮ್ ಮೂಲದವರಾದ ನಾಯರ್ ಅವರ ಮೃತದೇಹವನ್ನು ಹಲವು ಗಂಟೆಗಳ ಶೋಧ ಕಾರ್ಯದ ಬಳಿಕ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಆಡಳಿತ ಎಚ್ಚರಿಕೆ ವಹಿಸಿದ್ದು, ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಮೈಸೂರಿಗೆ ಡಿಕೆಶಿ: ಕಾಂಗ್ರೆಸ್‌ನಿಂದ ಭರ್ಜರಿ ಸ್ವಾಗತ

0

ಬೆಂಗಳೂರು/ಮೈಸೂರು: ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮೈಸೂರು ಪ್ರವಾಸ ಕೈಗೊಂಡಿರುವ ಡಿ.ಕೆ. ಶಿವಕುಮಾರ್ ಅವರ ಆಗಮನವನ್ನು ಕಾಂಗ್ರೆಸ್ ಐತಿಹಾಸಿಕ ಕಾರ್ಯಕ್ರಮವನ್ನಾಗಿ ರೂಪಿಸಿದೆ. ಕಾರಂಜಿ ಕೆರೆ ವೃತ್ತದಿಂದ ಕುರುಬಾರಹಳ್ಳಿ ವೃತ್ತದವರೆಗೆ ನಡೆಯಲಿರುವ ಭವ್ಯ ಮೆರವಣಿಗೆಯ ಮೂಲಕ ಪಕ್ಷದ ಸಂಘಟನಾ ಬಲ ಪ್ರದರ್ಶಿಸಲು ನಾಯಕರು ಮುಂದಾಗಿದ್ದಾರೆ.

ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿದ್ದು, ರಸ್ತೆ ಬದಿಯಲ್ಲಿ ಮರದ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನಗರದ ಪ್ರಮುಖ ಭಾಗಗಳಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದ್ದು, ಕಾರ್ಯಕರ್ತರು ಸಂಭ್ರಮದ ವಾತಾವರಣ ನಿರ್ಮಿಸಿದ್ದಾರೆ.

ಮುಖ್ಯಮಂತ್ರಿಗೆ ಕ್ರೇನ್ ಮೂಲಕ ವಿಶೇಷ ಹಾರ ಹಾಕಿ ಸ್ವಾಗತಿಸುವ ಕಾರ್ಯಕ್ರಮ ರೂಪಿಸಲಾಗಿದೆ. ವೀಳ್ಯದ ಎಲೆ, ಮಲ್ಲಿಗೆ ಹಾಗೂ ತಾವರೆ ಹೂಗಳಿಂದ ತಯಾರಿಸಲಾದ ಬೃಹತ್ ಹಾರ ಈ ಸ್ವಾಗತದ ಪ್ರಮುಖ ಆಕರ್ಷಣೆಯಾಗಲಿದೆ.

ಮೆರವಣಿಗೆ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಆಗಸ್ಟ್ 2ಕ್ಕೆ ಪೊಲೀಸ್ ಕಾನ್ಸ್ʼಟೇಬಲ್ ಪರೀಕ್ಷೆ: ಹಿಜಾಬ್ ಸೇರಿ ಧಾರ್ಮಿಕ ಉಡುಪುಗಳಿಗೆ ಅವಕಾಶವಿಲ್ಲ – ಖರ್ಗೆ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆ ಆಗಸ್ಟ್ 2ರಂದು ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಕ್ರಮಮುಕ್ತವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆಗೆ ಸಂಬಂಧಿಸಿದ ಉಡುಪು ನಿಯಮಗಳು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಅಭ್ಯರ್ಥಿಗಳಿಗೆ ಪ್ರಕಟಿಸಲಾಗಿದೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪರೀಕ್ಷೆಯ ವೇಳೆ ಹಿಜಾಬ್ ಸೇರಿದಂತೆ ಮುಖ, ತಲೆ ಅಥವಾ ಕಿವಿಯನ್ನು ಮುಚ್ಚುವ ಯಾವುದೇ ರೀತಿಯ ಉಡುಪುಗಳಿಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಧಾರ್ಮಿಕ ಉಡುಪುಗಳ ಬಗ್ಗೆ ಯಾವುದೇ ಗೊಂದಲ ಉಂಟಾಗದಂತೆ ಎಲ್ಲಾ ನಿಯಮಗಳನ್ನು ಪ್ರವೇಶ ಪತ್ರದಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಲಾಗುತ್ತದೆ ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ 24 ಗಂಟೆಗಳ ಮುಂಚಿತವಾಗಿ ಸ್ಯಾನಿಟೈಸೇಶನ್ ಕಾರ್ಯ ನಡೆಯಲಿದ್ದು, ಪರೀಕ್ಷಾ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೂ ಮೊಬೈಲ್ ಫೋನ್ ಬಳಕೆಗೆ ಅವಕಾಶ ಇರುವುದಿಲ್ಲ. ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ತರಬೇತಿ ಕೇಂದ್ರಗಳ ಮೇಲೂ ವಿಶೇಷ ನಿಗಾ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಜನಿವಾರ, ಶಿವದಾರ, ಉಡದಾರ, ಮಾಂಗಲ್ಯ ಸರ, ಮುಗುತಿ, ಕುಂಕುಮ, ಉಂಗುರ, ತಾಯತ ಸೇರಿದಂತೆ ಧರಿಸಬಹುದಾದ ವಸ್ತುಗಳ ಕುರಿತು ಅಭ್ಯರ್ಥಿಗಳಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ಸುಮಾರು ಎರಡೂವರೆ ಗಂಟೆ ಮುಂಚಿತವಾಗಿ ಆಗಮಿಸಿ ಪರಿಶೀಲನೆಗೆ ಒಳಗಾಗುವಂತೆ ಸೂಚಿಸಲಾಗಿದೆ.

ಇದೇ ವೇಳೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಎಚ್. ಅವರು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆಯ ಪ್ರಮುಖ ನಿಯಮಗಳು:

  • ಹಿಜಾಬ್ ಸೇರಿದಂತೆ ತಲೆ, ಕಿವಿ ಅಥವಾ ಮುಖ ಮುಚ್ಚುವ ಉಡುಪುಗಳಿಗೆ ಅವಕಾಶವಿಲ್ಲ.
  • ಶೂ, ಟೋಪಿ ಹಾಗೂ ಹೆಚ್ಚಿನ ಜೇಬುಗಳಿರುವ ಜೀನ್ಸ್ ಧರಿಸುವಂತಿಲ್ಲ.
  • ಪರೀಕ್ಷಾ ಕೊಠಡಿಗೆ ಮೊಬೈಲ್, ನೀರಿನ ಬಾಟಲಿ, ಆಹಾರ ಪದಾರ್ಥ, ಪುಸ್ತಕ, ಚೀಟಿ, ನೋಟ್‌ಪ್ಯಾಡ್, ಪ್ಲಾಸ್ಟಿಕ್ ಪೌಚ್, ಸ್ಕೆಲ್, ರಬ್ಬರ್, ಪೆನ್ಸಿಲ್ ಬಾಕ್ಸ್ ಸೇರಿದಂತೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
  • ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು.

ಪರೀಕ್ಷೆಯನ್ನು ಅಕ್ರಮರಹಿತವಾಗಿ ನಡೆಸುವ ಉದ್ದೇಶದಿಂದ ಈ ಎಲ್ಲಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಾನುಕುಂಟೆ ಕೆಎಂಎಫ್ ಘಟಕದಲ್ಲಿ ಕಳಪೆ ಪಶು ಆಹಾರ ತಯಾರಿಸಿ ಭಾರೀ ಗೋಲ್ಮಾಲ್!?

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ (KMF) ತಯಾರಿಸುತ್ತಿರುವ ನಂದಿನಿ ಪಶು ಆಹಾರದ ಗುಣಮಟ್ಟದ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ರಾಜಾನುಕುಂಟೆಯ ಕೆಎಂಎಫ್ ಪಶು ಆಹಾರ ಘಟಕದಲ್ಲಿ ಕಳಪೆ ಕಚ್ಚಾ ವಸ್ತುಗಳನ್ನು ಬಳಸಿ ಆಹಾರ ಉತ್ಪಾದನೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಸಂಬಂಧ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪವೂ ಕೇಳಿಬಂದಿದ್ದು, ಕಳೆದ ಎರಡು ತಿಂಗಳಲ್ಲಿ ಕಳಪೆ ಪಶು ಆಹಾರ ಸೇವನೆಯಿಂದ ಸುಮಾರು 1,600 ಹಸುಗಳು ಸಾವನ್ನಪ್ಪಿವೆ ಹಾಗೂ ಸಾವಿರಾರು ಜಾನುವಾರುಗಳು ಅನಾರೋಗ್ಯಕ್ಕೆ ತುತ್ತಾಗಿವೆ ಎಂದು ರೈತರು ಆರೋಪಿಸಿದ್ದಾರೆ.

ಆರೋಪಗಳ ಪ್ರಕಾರ, ಪಶು ಆಹಾರ ತಯಾರಿಕೆಗೆ ಅಗತ್ಯವಿರುವ ಕಾಕಂಬಿ (Molasses) ಖರೀದಿಯಲ್ಲಿ ಗುಣಮಟ್ಟದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಕಡಿಮೆ ಗುಣಮಟ್ಟದ TRS ಹೊಂದಿದ್ದ ಕಚ್ಚಾ ವಸ್ತುಗಳನ್ನು ಖರೀದಿಸಿ, ಲ್ಯಾಬ್ ಪರೀಕ್ಷೆಯಲ್ಲಿ ಗುಣಮಟ್ಟ ದೃಢಪಡಿಸದೇ ಸುಮಾರು 86,000 ಮೆಟ್ರಿಕ್ ಟನ್ ಪಶು ಆಹಾರವನ್ನು ಉತ್ಪಾದಿಸಲಾಗಿದೆ ಎನ್ನಲಾಗಿದೆ.

ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಹಸುಗಳ ಆರೋಗ್ಯ ಹದಗೆಟ್ಟಿದ್ದು, ಹಾಲಿನ ಉತ್ಪಾದನೆ ಕುಸಿದಿದೆ ಎಂದು ರೈತರು ದೂರಿದ್ದಾರೆ. ಕೆಟ್ಟ ವಾಸನೆ ಹಾಗೂ ಕಳಪೆ ಗುಣಮಟ್ಟದಿಂದ ಹಸುಗಳು ಆಹಾರ ಸೇವಿಸಲು ನಿರಾಕರಿಸುತ್ತಿದ್ದು, ಹಲವು ಜಾನುವಾರುಗಳು ಗರ್ಭಧಾರಣೆಯ ಸಮಸ್ಯೆ, ಅನಾರೋಗ್ಯ ಹಾಗೂ ಸಾವಿಗೆ ಒಳಗಾಗಿವೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಆನೇಕಲ್, ನೆಲಮಂಗಲ, ರಾಮನಗರ ಹಾಗೂ ಚನ್ನಪಟ್ಟಣ ಭಾಗದ ಹೈನುಗಾರರು ಈ ಬೆಳವಣಿಗೆಯಿಂದ ಆತಂಕಗೊಂಡಿದ್ದಾರೆ. ಹಾಲು ಸಂಗ್ರಹ ಕೇಂದ್ರಗಳಲ್ಲಿ ರೈತರಿಗೆ ನಂದಿನಿ ಪಶು ಆಹಾರವನ್ನೇ ಖರೀದಿಸುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಬಮೂಲ್ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಸುಮಾರು 14,500 ಮೆಟ್ರಿಕ್ ಟನ್ ಪಶು ಆಹಾರ ಮಾರಾಟವಾಗುತ್ತಿದ್ದು, ಕಳಪೆ ಆಹಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತರು ಟನ್‌ಗಟ್ಟಲೆ ಪಶು ಆಹಾರವನ್ನು ರಾಜಾನುಕುಂಟೆ ಘಟಕಕ್ಕೆ ಹಿಂತಿರುಗಿಸುತ್ತಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾವೇರಿ ವಿವಾದ: ನೀರನ್ನ ಇನ್ನೂ ಬಿಟ್ಟಿಲ್ಲ, ನಾಳೆ ಸಭೆಯ ಬಳಿಕ ತೀರ್ಮಾನ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಡ್ಯಾಂ ತುಂಬಿದರೆ ನೀರನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಜಲಾಶಯಗಳ ಪರಿಸ್ಥಿತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇನ್ನೂ ನಾವು ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಆದರೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ ಮತ್ತೊಂದು ಜಲಾಶಯ ತುಂಬುವ ಸ್ಥಿತಿಯಲ್ಲಿದೆ. ಡ್ಯಾಂ ತುಂಬಿದರೆ ನೀರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು.

ಸರ್ವಪಕ್ಷ ಸಭೆ ಕರೆಯುವ ವಿಚಾರಕ್ಕೆ ಬಿಜೆಪಿ ಟೀಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಸರ್ವಪಕ್ಷ ಸಭೆ ಕರೆಯುವಂತೆ ಸಲಹೆ ನೀಡಿದ್ದು ಬಿಜೆಪಿಯವರೇ. ಈಗ ಅದನ್ನೇ ಟೀಕಿಸುತ್ತಿದ್ದಾರೆ. ಅವರು ಆರೋಪ ಮಾಡಲಿ. ನಾವು ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳುತ್ತೇವೆ” ಎಂದರು.

ಆಗಸ್ಟ್ 2ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕಾವೇರಿ ನೀರು ಹಂಚಿಕೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಮುಂದಿನ ಕ್ರಮಗಳ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

“ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ. ಇಂದು ಸಂಜೆ ಮತ್ತೊಂದು ಡ್ಯಾಂ ತುಂಬುವ ಹಂತಕ್ಕೆ ಬರಬಹುದು. ಅಂತಹ ಪರಿಸ್ಥಿತಿಯಲ್ಲಿ ನೀರನ್ನು ತಡೆಹಿಡಿಯುವುದು ಸಾಧ್ಯವಿಲ್ಲ. ನಾಳಿನ ಸರ್ವಪಕ್ಷ ಸಭೆಯ ಬಳಿಕ ಸರ್ಕಾರ ಮುಂದಿನ ತೀರ್ಮಾನ ಪ್ರಕಟಿಸುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕಾವೇರಿ ಹೋರಾಟದ ಹೊಡೆತಕ್ಕೆ ವಿಜಯ್ ಸಿನಿಮಾ: ಮಂಡ್ಯದಲ್ಲಿ ‘ಜನ ನಾಯಗನ್’ ಪ್ರದರ್ಶನ ಸ್ಥಗಿತ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದದ ಕಾವು ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಕ್ಕೆ ನೇರ ಹೊಡೆತ ನೀಡಿದೆ. ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಚಿತ್ರದ ಪ್ರದರ್ಶನ ರದ್ದಾಗಿದ್ದು, ಕಾವೇರಿ ಹೋರಾಟ ಚಿತ್ರರಂಗಕ್ಕೂ ವಿಸ್ತರಿಸಿದಂತಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿದ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯ ರೈತರು ಹಾಗೂ ಕನ್ನಡಪರ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿವೆ. ಇದೇ ಆಕ್ರೋಶ ‘ಜನ ನಾಯಗನ್’ ಸಿನಿಮಾ ಪ್ರದರ್ಶನದ ಮೇಲೂ ವ್ಯಕ್ತವಾಯಿತು.

ಮಂಡ್ಯದ ಗುರುಶ್ರೀ ಚಿತ್ರಮಂದಿರಕ್ಕೆ ಧಾವಿಸಿದ ಪ್ರತಿಭಟನಾಕಾರರು ಚಿತ್ರದ ಪೋಸ್ಟರ್‌ಗಳನ್ನು ಹರಿದು ಹಾಕಿ, ತಮಿಳುನಾಡಿಗೆ ನೀರು ಬಿಡಬಾರದು ಎಂದು ಘೋಷಣೆ ಕೂಗಿದರು. ಸಿನಿಮಾ ಪ್ರದರ್ಶನವನ್ನು ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಚಿತ್ರಮಂದಿರ ಆಡಳಿತ ಮಂಡಳಿ ಭದ್ರತಾ ಕಾರಣಗಳಿಂದ ಎಲ್ಲಾ ಪ್ರದರ್ಶನಗಳನ್ನು ರದ್ದುಗೊಳಿಸಿದ ಬಳಿಕ ಪ್ರತಿಭಟನೆ ಶಾಂತವಾಯಿತು. ಇದೇ ವೇಳೆ ಕೆಲವರು ಟೈರ್‌ಗಳಿಗೆ ಬೆಂಕಿ ಹಚ್ಚಲು ಯತ್ನಿಸಿದರೂ ಪೊಲೀಸರು ತಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡರು.

ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಅನ್ಯಾಯ ಎಂದು ರೈತ ಸಂಘಟನೆಗಳು ವಾದಿಸಿವೆ. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಕಾವೇರಿ ವಿವಾದದ ಕುರಿತು ಮುಂದಿನ ತೀರ್ಮಾನ ಕೈಗೊಳ್ಳಲು ಆಗಸ್ಟ್ 2ರಂದು ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರದ ಮುಂದಿನ ಹೆಜ್ಜೆಯತ್ತ ಎಲ್ಲರ ಗಮನ ನೆಟ್ಟಿದೆ.

ಮಂಡ್ಯದಲ್ಲಿ ಪ್ರದರ್ಶನ ಸ್ಥಗಿತಗೊಂಡಿದ್ದರೂ, ರಾಜ್ಯದ ಇತರೆ ಭಾಗಗಳಲ್ಲಿ ‘ಜನ ನಾಯಗನ್’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಎಚ್. ವಿನೋದ್ ನಿರ್ದೇಶನದ ಈ ಚಿತ್ರವು ವಿಶ್ವದಾದ್ಯಂತ 260 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ವಿಜಯ್ ಅವರ ವಿದಾಯ ಚಿತ್ರ ಎಂಬ ಕಾರಣಕ್ಕೂ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮಾನಸಿಕ ಅಸ್ವಸ್ಥನನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣ: ಸರ್ಕಾರ, ಪೊಲೀಸರ ವಿರುದ್ಧ ಹೈಕೋರ್ಟ್ ಕಿಡಿ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಸಣಾಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ತಮ್ಮ ವಿರುದ್ಧ ಯಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದ ಚಂದ್ರು ಬಿನ್ ಶಿವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಪೊಲೀಸರ ನಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಹೇಳಿಕೆಗಳನ್ನು ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ನ್ಯಾಯಪೀಠ, “ಇವರು ಪೊಲೀಸ್ ಅಧಿಕಾರಿಯೋ ಅಥವಾ ರಾಜಕಾರಣಿಯೋ? ರಾಜ್ಯದಲ್ಲಿ ಕಾನೂನಿನ ಪ್ರಕಾರ ಆಡಳಿತ ನಡೆಯುತ್ತಿದೆಯೇ ಅಥವಾ ವ್ಯಕ್ತಿಯೊಬ್ಬರ ಆದೇಶದಂತೆ ನಡೆಯುತ್ತಿದೆಯೇ? ಆರೋಪಿಯನ್ನು ಗಡಿಪಾರು ಮಾಡುತ್ತೇನೆ, ರೌಡಿ ಶೀಟರ್ ತೆರೆಯುತ್ತೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವುದು ಪೊಲೀಸ್ ಅಧಿಕಾರಿಗೆ ಶೋಭೆಯಲ್ಲ. ಹಾಗಿದ್ದರೆ ಖಾಕಿ ಸಮವಸ್ತ್ರ ಬಿಚ್ಚಿ ರಾಜಕಾರಣಿಯ ಬಟ್ಟೆ ಹಾಕಿಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಇಂತಹ ವರ್ತನೆ ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿಕಾರಿತು.

ಇದೇ ವೇಳೆ, “ಒಬ್ಬ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸುವುದು ಎಂದರೆ ಏನರ್ಥ? ಇಂತಹ ಅಮಾನವೀಯ ಘಟನೆಗಳು ಈ ದೇಶದಲ್ಲಿ ನಿಂತುಹೋಗಿ ಎಷ್ಟೋ ವರ್ಷಗಳಾಗಿವೆ. ಪ್ರಜಾಪ್ರಭುತ್ವದಲ್ಲಿ ಇಂತಹ ಕೃತ್ಯಗಳು ಅಕ್ಷಮ್ಯ” ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪ್ರಕರಣಕ್ಕೆ ಸಂಬಂಧಿಸಿದ ದೂರು ಹಾಗೂ ಪ್ರತಿದೂರುಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿರುವ ಹೈಕೋರ್ಟ್, ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲರು, ಸುಮಾರು 100ಕ್ಕೂ ಹೆಚ್ಚು ಜನರ ಗುಂಪು ಮಾನಸಿಕ ಅಸ್ವಸ್ಥ ಯುವಕನನ್ನು ಕಲ್ಲಿನ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದೆ. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಡಿಪಾರು, ರೌಡಿ ಶೀಟರ್ ಹಾಗೂ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಇದು ದೂರು ಮತ್ತು ಪ್ರತಿದೂರು ದಾಖಲಾಗಿರುವ ಪ್ರಕರಣವಾಗಿದ್ದು, ಯಾರನ್ನೂ ರಕ್ಷಿಸುವ ಉದ್ದೇಶ ಇಲ್ಲ. ಎಸ್‌ಪಿ ಅವರ ಹೇಳಿಕೆಯನ್ನು ನಕಾರಾತ್ಮಕವಾಗಿ ಪರಿಗಣಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ ಪ್ರಕಾರ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಈ ಎಫ್‌ಐಆರ್‌ ರದ್ದುಪಡಿಸುವಂತೆ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

ಪೂಜೆಯ ನೆಪದಲ್ಲಿ ₹2.5 ಕೋಟಿ ವಂಚನೆ: 10 ಕೋಟಿ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ದೋಖಾ

0

ಬೆಂಗಳೂರು: ದುಷ್ಟಶಕ್ತಿ ನಿವಾರಣೆ ಹಾಗೂ ವಿಶೇಷ ಪೂಜೆ ಮಾಡುವ ನೆಪದಲ್ಲಿ ಚಾಮರಾಜಪೇಟೆಯ ಮಹಿಳೆಯೊಬ್ಬರಿಂದ ₹2.5 ಕೋಟಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹಣ ನೀಡಿದರೆ ₹10 ಕೋಟಿ ಹಿಂದಿರುಗಿಸುವುದಾಗಿ ನಂಬಿಸಿ ವಂಚಿಸಿರುವ ಆರೋಪದ ಮೇರೆಗೆ ಬಾಬಾ ಎಂದು ಪರಿಚಯಿಸಿಕೊಂಡಿದ್ದ ವ್ಯಕ್ತಿ ಸೇರಿದಂತೆ ಮೂವರ ವಿರುದ್ಧ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದೂರುದಾರರಾದ ಕುಮುದಾ ಅವರು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಚಾಮರಾಜಪೇಟೆಯಲ್ಲಿ ವಾಸವಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಅವರ ಪುತ್ರ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು, ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸಿದ್ದರಿಂದಲೇ ಈ ಅನಾಹುತ ಸಂಭವಿಸಿದೆ ಎಂದು ಆರೋಪಿಗಳು ನಂಬಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮನೆಯ ಮೇಲೆ ಸಾಲ ಪಡೆಯುವ ವಿಚಾರದಲ್ಲಿ ಪರಿಚಯವಾಗಿದ್ದ ಮಧ್ಯವರ್ತಿಗಳ ಮೂಲಕ ಅಪ್ಸರ್ ಪಾಷಾ ಎಂಬಾತನನ್ನು ‘ಬಾಬಾ’ ಎಂದು ಪರಿಚಯಿಸಲಾಗಿತ್ತು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ನಡೆಸುವುದಾಗಿ ಹೇಳಿ ಆರಂಭದಲ್ಲೇ ₹8 ಲಕ್ಷ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಇದಾದ ಬಳಿಕ ಇನ್ನಷ್ಟು ಹಣದ ಅಗತ್ಯವಿದೆ ಎಂದು ನಂಬಿಸಿದ ಆರೋಪಿಗಳು, ರಿಸರ್ವ್ ಬ್ಯಾಂಕ್‌ನಿಂದ ₹500 ಕೋಟಿ ಬರಲಿದ್ದು, ಅದನ್ನು ಪಡೆಯಲು ತಾತ್ಕಾಲಿಕವಾಗಿ ಹಣ ಬೇಕಾಗಿದೆ. ಈಗ ₹2.5 ಕೋಟಿ ನೀಡಿದರೆ ಬಳಿಕ ₹10 ಕೋಟಿ ಹಿಂದಿರುಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿಗಳ ಮಾತು ನಂಬಿದ ಕುಮುದಾ ಅವರು ಚಾಮರಾಜಪೇಟೆಯಲ್ಲಿದ್ದ ತಮ್ಮ ಮನೆಯನ್ನು ₹8.5 ಕೋಟಿಗೆ ಮಾರಾಟ ಮಾಡಿ, ಅದರಲ್ಲಿ ₹2.5 ಕೋಟಿ ಆರೋಪಿಗಳಿಗೆ ನೀಡಿದ್ದಾರೆ. ಬಳಿಕ ಹಣವನ್ನು ವಾಪಸ್ ಕೇಳಿದಾಗ ಆರೋಪಿಗಳು ಹಣ ನೀಡದೆ ವಂಚಿಸಿರುವುದು ಬೆಳಕಿಗೆ ಬಂದಿದೆ.

ಇಷ್ಟೇ ಅಲ್ಲದೆ, ಹಣ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ಸಂಬಂಧ ಬಾಬಾ ಎಂದು ಹೇಳಲಾಗಿರುವ ಅಪ್ಸರ್ ಪಾಷಾ ಹಾಗೂ ಮಧ್ಯವರ್ತಿಗಳಾದ ಶಂಕರ್ ಮತ್ತು ಭರತ್ ವಿರುದ್ಧ ಸಿಸಿಬಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.

ಚಿನ್ನದ ಕನಸು ಭಗ್ನ: ಕಾಮನ್ವೆಲ್ತ್ ಗೇಮ್ಸ್ʼನಲ್ಲಿ ನೀರಜ್ ಚೋಪ್ರಾಗೆ ಬೆಳ್ಳಿ ಪದಕ!

0

ಗ್ಲಾಸ್ಗೋ: ಕಾಮನ್ವೆಲ್ತ್ ಕ್ರೀಡಾಕೂಟದ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಭಾರತದ ಸ್ಟಾರ್ ಅಥ್ಲೀಟ್ ಹಾಗೂ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಮತ್ತೊಂದು ಪದಕ ತಂದುಕೊಟ್ಟಿದ್ದಾರೆ. ಚಿನ್ನದ ಪದಕದ ಪ್ರಮುಖ ಸ್ಪರ್ಧಿಯಾಗಿದ್ದ ನೀರಜ್ ಅಂತಿಮವಾಗಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ತಮ್ಮ ಅತ್ಯುತ್ತಮ ಪ್ರಯತ್ನದಲ್ಲಿ 85.83 ಮೀಟರ್ ದೂರ ಜಾವೆಲಿನ್ ಎಸೆದು ಎರಡನೇ ಸ್ಥಾನ ಪಡೆದರು. ಭಾರತದ ಮತ್ತೋರ್ವ ಅಥ್ಲೀಟ್ ಯಶ್ವೀರ್ ಸಿಂಗ್ 85.41 ಮೀಟರ್ ಎಸೆದು ಮೂರನೇ ಸ್ಥಾನ ಪಡೆದು ಕಂಚಿನ ಪದಕ ತನ್ನದಾಗಿಸಿಕೊಂಡರು.

ಫೈನಲ್‌ಗೆ ಅರ್ಹತೆ ಪಡೆದಿದ್ದ ಭಾರತದ ಇನ್ನೋರ್ವ ಸ್ಪರ್ಧಿ ರೋಹಿತ್ ಯಾದವ್ 81.56 ಮೀಟರ್ ಎಸೆದು ಏಳನೇ ಸ್ಥಾನಕ್ಕೆ ತೃಪ್ತಿಪಟ್ಟರು. ಅವರು ಪದಕ ಗೆಲ್ಲುವಲ್ಲಿ ವಿಫಲರಾದರು.

ಇತ್ತ ಶ್ರೀಲಂಕಾದ ರುಮೇಶ್ ತರಂಗ ಪತಿರಗೆ 89.75 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದರು.

ಜಾವೆಲಿನ್ ಫೈನಲ್ ಫಲಿತಾಂಶ

  1. ರುಮೇಶ್ ತರಂಗ ಪತಿರಗೆ (ಶ್ರೀಲಂಕಾ) – 89.75 ಮೀಟರ್ (ಚಿನ್ನ)
  2. ನೀರಜ್ ಚೋಪ್ರಾ (ಭಾರತ) – 85.83 ಮೀಟರ್ (ಬೆಳ್ಳಿ)
  3. ಯಶ್ವೀರ್ ಸಿಂಗ್ (ಭಾರತ) – 85.41 ಮೀಟರ್ (ಕಂಚು)
  4. ಆಂಡರ್ಸನ್ ಪೀಟರ್ಸ್ – 83.88 ಮೀಟರ್
  5. ಡೌ ಸ್ಮಿಟ್ – 82.88 ಮೀಟರ್
  6. ಕೆಶಾರ್ನ್ ವಾಲ್ಕಾಟ್ – 82.55 ಮೀಟರ್
  7. ರೋಹಿತ್ ಯಾದವ್ – 81.56 ಮೀಟರ್
  8. ಬೆನ್ ಈಸ್ಟ್ – 81.12 ಮೀಟರ್

ಭಾರತದ ಪರ ಇಬ್ಬರು ಅಥ್ಲೀಟ್‌ಗಳು ಪದಕ ಗೆಲ್ಲುವ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದೇಶದ ಪದಕ ಬೇಟೆಗೆ ಮತ್ತಷ್ಟು ಬಲ ತುಂಬಿದ್ದಾರೆ.