ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಕೈದಿಗಳಾಗಿದ್ದು, ಬೀದರ್ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟಿದ್ದರು.
ಮಾಹಿತಿ ಪ್ರಕಾರ, ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆಗೆ ಜೈಲಿನ ಕಂಪೌಂಡ್ ಹಾರಿ ಮೂವರು ಕೈದಿಗಳು ಪರಾರಿಯಾಗಿದ್ದಾರೆ. ಕೈದಿಗಳು ತಪ್ಪಿಸಿಕೊಳ್ಳಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಲಾಕಪ್ನಲ್ಲಿ ಇರಬೇಕಾದ ಕೈದಿಗಳನ್ನು ಮಧ್ಯರಾತ್ರಿ ಹೊರಗೆ ಬಿಡಲಾಗಿದ್ದು ಹೇಗೆ ಎಂಬ ಪ್ರಶ್ನೆ ಇದೀಗ ಎದ್ದಿದೆ. ಜೈಲಿನ ಕೆಲ ಸಿಬ್ಬಂದಿ ಹಾಗೂ ಅಧಿಕಾರಿಗಳ ನೆರವಿನಿಂದಲೇ ಈ ಪರಾರಿ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಘಟನೆ ಸಂಬಂಧ ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದೇ ವೇಳೆ, ಕಳೆದ ಜುಲೈ 3ರಂದು ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಎಂಬಾತ ಕೂಡ ಪರಾರಿಯಾಗಿದ್ದ. ಠಾಣೆಗೆ ಕರೆತಂದಿದ್ದ ಆರೋಪಿಯು ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಘಟನೆ ನಡೆದಿತ್ತು. ಕಳೆದ ಕೆಲ ದಿನಗಳ ಅಂತರದಲ್ಲಿ ನಡೆದ ಈ ಎರಡು ಪರಾರಿ ಪ್ರಕರಣಗಳು ಪೊಲೀಸ್ ಇಲಾಖೆ ಹಾಗೂ ಜೈಲು ಭದ್ರತೆ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

