Home Blog Page 4

Renukaswamy Case: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ; ಇಂದು ಕೋರ್ಟ್‌ನಿಂದ ಮಹತ್ವದ ನಿರ್ಧಾರ!

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 59ನೇ ಸೆಷನ್ಸ್ ಕೋರ್ಟ್ ಇಂದು ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿ ಕುರಿತು ಆದೇಶ ಪ್ರಕಟಿಸಲಿದೆ.

ಆ.20ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಜೈಲಿನಲ್ಲಿರುವ ಪ್ರದೋಷ್ ಅವರ ನಡವಳಿಕೆ ಕುರಿತು ವರದಿ ಸಲ್ಲಿಸುವಂತೆ ಜೈಲಧಿಕಾರಿಗಳಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜೈಲಧಿಕಾರಿಗಳು ಇಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಜೈಲಧಿಕಾರಿಗಳ ವರದಿಯನ್ನು ಪರಿಶೀಲಿಸಿದ ಬಳಿಕ ನ್ಯಾಯಮೂರ್ತಿ ಸುಜಾತಾ ಮಡಿವಾಳಪ್ಪ ಸಂಬ್ರಾಣಿ ಅವರು ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿ ಕುರಿತು ಆದೇಶ ಪ್ರಕಟಿಸಲಿದ್ದಾರೆ.

ನ್ಯಾಯಾಲಯವು ಅರ್ಜಿಯನ್ನು ಪುರಸ್ಕರಿಸಿದರೆ, ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯ ಹೇಳಿಕೆ ತನಿಖೆ ಹಾಗೂ ವಿಚಾರಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುವ ನಿರೀಕ್ಷೆಯಿದೆ.

ಈ ನಡುವೆ ಪ್ರಕರಣದ ಇನ್ನೂ ಇಬ್ಬರು ಆರೋಪಿಗಳು ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂಬ ಮಾಹಿತಿಯೂ ಇದೆ. ಆದರೆ 17 ಆರೋಪಿಗಳ ಪೈಕಿ ಒಬ್ಬರಿಗೆ ಮಾತ್ರ ಮಾಫಿ ಸಾಕ್ಷಿ ಸ್ಥಾನ ನೀಡುವ ಸಾಧ್ಯತೆ ಇರುವುದರಿಂದ, ನ್ಯಾಯಾಲಯವು ಸಂಬಂಧಿತ ಬಿಎನ್‌ಎಸ್ ಕಾನೂನು ನಿಯಮಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಲಿದೆ.

ಪ್ರದೋಷ್ ಅವರ ಅರ್ಜಿ ಕುರಿತು ನ್ಯಾಯಾಲಯದ ಆದೇಶದ ಬಳಿಕ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದ; ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ!

0

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿದೆ.

ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಲಿದೆ.

ಕಳೆದ ವಿಚಾರಣೆ ವೇಳೆ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿತ್ತು. ಕರ್ನಾಟಕ ನೀರು ಹರಿಸುತ್ತಿಲ್ಲ ಎಂಬ ತಮಿಳುನಾಡಿನ ಆರೋಪವನ್ನು ರಾಜ್ಯ ಸರ್ಕಾರ ತಳ್ಳಿಹಾಕಿತ್ತು.

ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಲ್ಲಿ ತಮಿಳುನಾಡಿಗೆ ಹರಿಸಿರುವ ನೀರಿನ ನಿಖರ ಪ್ರಮಾಣದ ಅಂಕಿ-ಅಂಶ ಹಾಗೂ ದಾಖಲೆಗಳೊಂದಿಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ಕರ್ನಾಟಕ ಸರ್ಕಾರ ಇಂದು ಸಮಗ್ರ ದಾಖಲೆಗಳು ಹಾಗೂ ನೀರು ಹರಿಸಿರುವ ಕುರಿತ ಅಂಕಿ-ಅಂಶಗಳನ್ನು ನ್ಯಾಯಪೀಠದ ಮುಂದೆ ಮಂಡಿಸಲಿದೆ.

ಇದೇ ವೇಳೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಾಳೆ ದೆಹಲಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕಾವೇರಿ ನೀರು ಹರಿಸುವಿಕೆ ಸೇರಿದಂತೆ ರಾಜ್ಯಗಳ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಕುರಿತು ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆಯಿದೆ.

ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವ ಬದಲು 6 ಸಾವಿರ ಕ್ಯೂಸೆಕ್ ನೀರು ಹರಿಸಲು ಮಾತ್ರ ಅವಕಾಶ ನೀಡಬೇಕು ಎಂದು ಕರ್ನಾಟಕ ಈಗಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮನವಿ ಸಲ್ಲಿಸಿದೆ.

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದನ್ನು ಮುಂದಿಟ್ಟುಕೊಂಡು, ನಾಳಿನ CWRC ಸಭೆಯಲ್ಲಿಯೂ ಕರ್ನಾಟಕ ತನ್ನ ವಾದವನ್ನು ಬಲವಾಗಿ ಮಂಡಿಸಲು ಸಜ್ಜಾಗಿದೆ. ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೀರು ಹಂಚಿಕೆ ಮಾಡಬೇಕು ಎಂದು ಕರ್ನಾಟಕ ಒತ್ತಾಯಿಸಲಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಮನವಿಯನ್ನು CWRC ಪುರಸ್ಕರಿಸಲಿದೆಯೇ ಅಥವಾ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುವಂತೆ ಸೂಚಿಸಲಿದೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ಮಹಾರಾಷ್ಟ್ರದ ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; 3 ಶಿಶುಗಳು ಬಲಿ!

0

ಮುಂಬೈ: ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ನವಜಾತ ಶಿಶುಗಳು ಮೃತಪಟ್ಟಿದ್ದಾರೆ.

ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ ವೆಂಟಿಲೇಟರ್ ಸ್ಫೋಟಗೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಘಟನೆ ವೇಳೆ ವಾರ್ಡ್‌ನಲ್ಲಿ ಒಟ್ಟು 39 ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದರು.

ವೆಂಟಿಲೇಟರ್ ಸ್ಫೋಟಗೊಂಡ ಬಳಿಕ ವಾರ್ಡ್‌ನಲ್ಲಿ ಬೆಂಕಿ ಹಾಗೂ ದಟ್ಟ ಹೊಗೆ ಆವರಿಸಿದೆ. ತೀವ್ರ ಸುಟ್ಟಗಾಯಗಳು ಹಾಗೂ ಹೊಗೆಯಿಂದ ಉಸಿರುಗಟ್ಟಿ ಮೂವರು ನವಜಾತ ಶಿಶುಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಯ ವೈದ್ಯರು, ನರ್ಸ್‌ಗಳು ಹಾಗೂ ಇತರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ವಾರ್ಡ್‌ನಲ್ಲಿದ್ದ ಶಿಶುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಅವಘಡದಿಂದ ತೊಂದರೆಗೊಳಗಾದ ಆರು ನವಜಾತ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಳಿದ ಶಿಶುಗಳ ಸುರಕ್ಷತೆ ಹಾಗೂ ಆರೋಗ್ಯದ ಮೇಲೂ ವೈದ್ಯರು ನಿಗಾ ವಹಿಸಿದ್ದಾರೆ.

ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಲಭ್ಯವಾಗುವ ನಿರೀಕ್ಷೆಯಿದೆ.

ರೈಲು ಹತ್ತುವಾಗ ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ಸ್ಥಳದಲ್ಲೇ ದಾರುಣ ಸಾವು

0

ಹಾಸನ: ರೈಲು ಹತ್ತುವ ವೇಳೆ ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿಯೊಬ್ಬರು ಚಕ್ರಗಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೊಳೆನರಸೀಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮೃತರನ್ನು ಹೊಳೆನರಸೀಪುರ ತಾಲೂಕಿನ ಕೆ.ಮುದ್ದನಹಳ್ಳಿ ಗ್ರಾಮದ ನಾಗರಾಜು (48) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ತೆರಳಲು ನಾಗರಾಜು ನಿಲ್ದಾಣಕ್ಕೆ ಬಂದಿದ್ದರು.

ರೈಲು ಹೊರಡಲು ಆರಂಭಿಸಿದ ಸಂದರ್ಭದಲ್ಲಿ ರೈಲು ಹತ್ತಲು ನಾಗರಾಜು ಪ್ರಯತ್ನಿಸಿದ್ದಾರೆ. ಈ ವೇಳೆ ಏಕಾಏಕಿ ಕಾಲು ಜಾರಿ ಹಳಿ ಮೇಲೆ ಬಿದ್ದಿದ್ದಾರೆ. ತಕ್ಷಣವೇ ಚಲಿಸುತ್ತಿದ್ದ ರೈಲು ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಯಶ್ ‘ಟಾಕ್ಸಿಕ್’ ಕಾರ್ಯಕ್ರಮದಲ್ಲಿ ಅವಘಡ! ಸೌಂಡ್ ಬಾಕ್ಸ್ ಕುಸಿದು 4 ವಿದ್ಯಾರ್ಥಿಗಳಿಗೆ ಗಾಯ, FIR ದಾಖಲು

0

ಹೈದರಾಬಾದ್: ನಟ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಅದ್ಧೂರಿ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಎಫ್‌ಐಆರ್ ದಾಖಲಿಸಿದ್ದಾರೆ.

ಆಗಸ್ಟ್ 22ರಂದು ಹೈದರಾಬಾದ್‌ನ ಮಲ್ಲಾ ರೆಡ್ಡಿ ಯೂನಿವರ್ಸಿಟಿಯ ಬೃಹತ್ ಮೈದಾನದಲ್ಲಿ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ಯಶ್, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಸೇರಿದಂತೆ ಹಲವು ಗಣ್ಯರು, ಸಚಿವ ಹಾಗೂ ಶಿಕ್ಷಣ ಸಂಸ್ಥೆಗಳ ಮಾಲೀಕ ಮಲ್ಲಾ ರೆಡ್ಡಿ ಮತ್ತು ನಿರ್ಮಾಪಕ ದಿಲ್ ರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಜನರು, ಅದರಲ್ಲೂ ವಿದ್ಯಾರ್ಥಿಗಳು ಆಗಮಿಸಿದ್ದರು. ಈ ವೇಳೆ ನಟ ಯಶ್ ವೇದಿಕೆಯಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕೆಲ ಯುವಕರು ಸೌಂಡ್ ಬಾಕ್ಸ್ ಅಳವಡಿಸಲು ನಿರ್ಮಿಸಲಾಗಿದ್ದ ಕಬ್ಬಿಣದ ಪೈಪ್‌ಗಳ ಸ್ಟ್ರಕ್ಚರ್ ಮೇಲೆ ಏರಿ ಕುಳಿತಿದ್ದರು ಎನ್ನಲಾಗಿದೆ.

ಯುವಕರ ತೂಕಕ್ಕೆ ಸೌಂಡ್ ಬಾಕ್ಸ್ ಕೆಳಗೆ ಬಿದ್ದಿದ್ದು, ಅದರೊಂದಿಗೆ ಕಬ್ಬಿಣದ ಪೈಪ್‌ಗಳಿಂದ ನಿರ್ಮಿಸಲಾಗಿದ್ದ ಸ್ಟ್ರಕ್ಚರ್ ಕೂಡ ಕುಸಿದಿದೆ. ಸ್ಟ್ರಕ್ಚರ್ ಮೇಲೆ ಕುಳಿತಿದ್ದ ವಿದ್ಯಾರ್ಥಿಗಳೂ ಕೆಳಗೆ ಬಿದ್ದಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಂಬುಲೆನ್ಸ್ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೌಂಡ್ ಬಾಕ್ಸ್ ಹಾಗೂ ಸ್ಟ್ರಕ್ಚರ್ ಕುಸಿದ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಮಲ್ಲಾ ರೆಡ್ಡಿ ಇನ್‌ಸ್ಟಿಟ್ಯೂಟ್‌ನ ಮ್ಯಾನೇಜ್‌ಮೆಂಟ್ ಹಾಗೂ ‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯದಲ್ಲಿ H1N1 ಹಾವಳಿ! 8 ತಿಂಗಳಲ್ಲಿ 4,125 ಕೇಸ್; ಬೆಂಗಳೂರಿನಲ್ಲಿ ಅತಿ ಹೆಚ್ಚು!

0

ಬೆಂಗಳೂರು: ರಾಜ್ಯದಲ್ಲಿ H1N1, ಅಂದರೆ ಹಂದಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನವರಿಯಿಂದ ಆಗಸ್ಟ್‌ವರೆಗೆ ಒಟ್ಟು 4,125 ಪ್ರಕರಣಗಳು ವರದಿಯಾಗಿವೆ.

ಇದರಿಂದ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, H1N1 ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ರಾಜ್ಯದ ಒಟ್ಟು ಪ್ರಕರಣಗಳಲ್ಲಿ ಹೆಚ್ಚಿನ ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗಿವೆ. ಬೆಂಗಳೂರು ಜಿಬಿಎ ವ್ಯಾಪ್ತಿಯಲ್ಲಿ 2,033 ಹಾಗೂ ಬೆಂಗಳೂರು ನಗರದಲ್ಲಿ 982 ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ H1N1 ಪ್ರಕರಣಗಳು ಹೆಚ್ಚಾಗುತ್ತಿರುವುದು ಆರೋಗ್ಯ ಇಲಾಖೆಗೆ ಆತಂಕ ಮೂಡಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

  • ಬೆಂಗಳೂರು ಜಿಬಿಎ: 2,033
  • ಬೆಂಗಳೂರು ನಗರ: 982
  • ಉಡುಪಿ: 293
  • ಮೈಸೂರು: 184
  • ಶಿವಮೊಗ್ಗ: 91
  • ದಕ್ಷಿಣ ಕನ್ನಡ: 87
  • ಬಳ್ಳಾರಿ: 51
  • ಬೆಳಗಾವಿ: 45
  • ಉತ್ತರ ಕನ್ನಡ: 41
  • ಮಂಡ್ಯ: 31
  • ಹಾವೇರಿ: 26
  • ಬೆಂಗಳೂರು ಗ್ರಾಮಾಂತರ: 26
  • ಬೆಂಗಳೂರು ದಕ್ಷಿಣ: 26
  • ದಾವಣಗೆರೆ: 23
  • ಚಾಮರಾಜನಗರ: 20

H1N1 ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಮಾರ್ಗಸೂಚಿ:

H1N1 ಸೋಂಕು ದೃಢಪಟ್ಟವರು ಮನೆಯಲ್ಲಿ ಪ್ರತ್ಯೇಕವಾಗಿರಬೇಕು. ಸೋಂಕು ಹರಡುವುದನ್ನು ತಡೆಯಲು ಮಾಸ್ಕ್ ಧರಿಸಬೇಕು ಹಾಗೂ ಸೋಪ್ ಅಥವಾ ಸ್ಯಾನಿಟೈಸರ್ ಬಳಸಿ ಆಗಾಗ ಕೈಗಳನ್ನು ಸ್ವಚ್ಛಗೊಳಿಸಬೇಕು.

ಬಿಸಿ ನೀರು ಸೇವಿಸುವಂತೆ ಸೂಚಿಸಲಾಗಿದ್ದು, ಮೂಗು ಹಾಗೂ ಕಣ್ಣುಗಳನ್ನು ಪದೇಪದೇ ಕೈಯಿಂದ ಮುಟ್ಟಿಕೊಳ್ಳಬಾರದು. ವೈದ್ಯರ ಸಲಹೆಯಿಲ್ಲದೆ ಸ್ವಯಂ ಔಷಧ ಸೇವನೆ ಮಾಡಬಾರದು.

ರೋಗದ ಲಕ್ಷಣಗಳು ಕಂಡುಬಂದರೆ ಇತರರೊಂದಿಗೆ ಹಸ್ತಲಾಘವ ಮಾಡದಿರುವುದು ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಹೋಗುವುದನ್ನು ತಪ್ಪಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಬಳಸುವಂತೆ ತಿಳಿಸಲಾಗಿದೆ.

ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗದಂತೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯದ ಮಹಿಳಾ ಅಧಿಕಾರಿ ಅನುಮಾನಾಸ್ಪದ ಸಾವು!

0

ನವದೆಹಲಿ: ನವದೆಹಲಿಯ ದ್ವಾರಕಾ ಪ್ರದೇಶದಲ್ಲಿ ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಸಹಾಯಕ ವಿಭಾಗಾಧಿಕಾರಿಯಾಗಿ (ASO) ಕೆಲಸ ಮಾಡುತ್ತಿದ್ದ 30 ವರ್ಷದ ನಾಜಿಯಾ ಖಾನಮ್ ಅವರು ತಮ್ಮ ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ನಾಜಿಯಾ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ.

ನಾಜಿಯಾ ಅವರನ್ನು ಪತಿ ಹಾಗೂ ಅತ್ತೆ-ಮಾವ ದೈಹಿಕ ಮತ್ತು ಮಾನಸಿಕವಾಗಿ ಹಿಂಸಿಸಿ ಕೊಲೆ ಮಾಡಿದ್ದಾರೆ ಎಂದು ಅವರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ನಾಜಿಯಾ ಅವರು ಏಪ್ರಿಲ್ 11ರಂದು ಅಜಮ್ ಅಲಿ ಖಾನ್ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಕೆಲವೇ ದಿನಗಳಿಂದಲೇ ಪತಿ ಅಜಮ್, ಅತ್ತೆ ಸಮೀನ್ ನಿಶಾ ಹಾಗೂ ಮಾವ ಬಾಬರ್ ಅಲಿ ಖಾನ್ ಅವರು ನಾಜಿಯಾಗೆ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನಾಜಿಯಾ ಅವರು ಪೋಷಕರ ಬಳಿ ಪತಿ ಹಾಗೂ ಅತ್ತೆ-ಮಾವನ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದರು ಎನ್ನಲಾಗಿದೆ. ಹಲ್ಲೆ ನಡೆಸುವುದು ಹಾಗೂ ಮನೆಯಿಂದ ಹೊರಹಾಕುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಅವರು ದೂರಿದ್ದರು ಎನ್ನಲಾಗಿದೆ.

ಆಗಸ್ಟ್ 21ರಂದು ಮುಂಜಾನೆ ಸುಮಾರು 4 ಗಂಟೆಗೆ ನಾಜಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅತ್ತೆ ಮನೆಯವರು ಕುಟುಂಬಕ್ಕೆ ಮಾಹಿತಿ ನೀಡಿದ್ದರು.

ಆದರೆ, ನಾಜಿಯಾ ಅವರ ತಂದೆ ತವಾಬ್ ಖಾನ್ ಅವರು ಇದನ್ನು ಕೊಲೆ ಎಂದು ಆರೋಪಿಸಿದ್ದಾರೆ. ನಾಜಿಯಾಳನ್ನು ಕೊಲೆ ಮಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ನೇಣು ಹಾಕಲಾಗಿದೆ ಎಂದು ಅವರು ದೂರಿದ್ದಾರೆ.

ಇನ್ನು ಜಗಳದ ಬಳಿಕ ನಾಜಿಯಾ ಕೋಣೆಯ ಬಾಗಿಲು ಹಾಕಿಕೊಂಡು ಕಿಟಕಿಯ ಸರಳಿಗೆ ನೇಣು ಬಿಗಿದುಕೊಂಡಿದ್ದರು ಎಂದು ಪತಿ ಅಜಮ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ನಾಜಿಯಾ ಅವರ ಮೃತದೇಹವನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಬೇಕು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಪ್ರಕರಣದಲ್ಲಿ ವರದಕ್ಷಿಣೆ ಸಾವು, ಕೌಟುಂಬಿಕ ಹಿಂಸಾಚಾರ ಹಾಗೂ ಕೊಲೆ ಸಂಚಿನ ಸಾಧ್ಯತೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತಿ ಹಾಗೂ ಆತನ ಕುಟುಂಬದವರನ್ನು ವಿಚಾರಣೆಗೊಳಪಡಿಸಲಾಗಿದ್ದು, ನಾಜಿಯಾ ಅವರ ಸಾವಿನ ನಿಖರ ಕಾರಣವನ್ನು ತನಿಖೆಯ ಬಳಿಕವೇ ತಿಳಿಯಬೇಕಿದೆ.

40 ಕಿ.ಮೀ ಚೇಸ್ ಮಾಡಿ ದನಗಳ್ಳರ ಗ್ಯಾಂಗ್ ಬಂಧಿಸಿದ ಯಾದಗಿರಿ ಪೊಲೀಸರು!

0

ಯಾದಗಿರಿ: ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ರೈತರ ನಿದ್ದೆಗೆಡಿಸಿದ್ದ ಅಂತಾರಾಜ್ಯ ದನಗಳ್ಳರ ಗ್ಯಾಂಗ್‌ನ್ನು ಯಾದಗಿರಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ.

ದನಗಳನ್ನು ಕದ್ದು ಸ್ಕಾರ್ಪಿಯೋದಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಪೊಲೀಸರು ಸುಮಾರು 40 ಕಿ.ಮೀ ಬೆನ್ನಟ್ಟಿ ಹಿಡಿದಿದ್ದಾರೆ.

ವಡಗೇರ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಈ ಗ್ಯಾಂಗ್ ದನಗಳನ್ನು ಕಳ್ಳತನ ಮಾಡುತ್ತಿತ್ತು ಎನ್ನಲಾಗಿದೆ. ಮನೆಗಳ ಮುಂದೆ ಹಾಗೂ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನಗಳಿಗೆ ಅರಿವಳಿಕೆ ಇಂಜೆಕ್ಷನ್ ನೀಡಿ, ಅವು ಪ್ರಜ್ಞೆ ತಪ್ಪಿದ ಬಳಿಕ ಸ್ಕಾರ್ಪಿಯೋ ವಾಹನದಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ದ ದನಗಳನ್ನು ಕಸಾಯಿಖಾನೆಗಳಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪೊಲೀಸರನ್ನು ಕಂಡು ವೇಗವಾಗಿ ಪರಾರಿ:

ಕಲಬುರಗಿಯಲ್ಲಿ ತಾತ್ಕಾಲಿಕವಾಗಿ ವಾಸವಿದ್ದ ಗ್ಯಾಂಗ್, ಮತ್ತೊಂದು ದನವನ್ನು ಕದ್ದು ಕಪ್ಪು ಬಣ್ಣದ ಸ್ಕಾರ್ಪಿಯೋದಲ್ಲಿ ಪರಾರಿಯಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ವಡಗೇರ ಹಾಗೂ ಯಾದಗಿರಿ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದರು.

ಪೊಲೀಸರು ವಾಹನವನ್ನು ಬೆನ್ನಟ್ಟಿದರೂ ಆರೋಪಿಗಳು ಸ್ಕಾರ್ಪಿಯೋ ನಿಲ್ಲಿಸದೆ ವೇಗವಾಗಿ ಸಾಗುತ್ತಿದ್ದರು. ಕೊನೆಗೆ ಯಾದಗಿರಿ ತಾಲೂಕಿನ ಯರಗೋಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ರಸ್ತೆಗೆ ಅಡ್ಡಲಾಗಿ ಜೆಸಿಬಿ ಹಾಗೂ ಟ್ರ್ಯಾಕ್ಟರ್ ನಿಲ್ಲಿಸಿದರು.

ವೇಗವಾಗಿ ಬಂದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಜೆಸಿಬಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಜಖಂಗೊಂಡಿದ್ದು, ಆರೋಪಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಹರಿಯಾಣ ಮೂಲದ ಸಮೂನ್, ಅನಿಬ್, ಇರ್ಷಾದ್, ನಪೀಸ್, ಅಜೀಮ್ ಹಾಗೂ ರಾಜಸ್ಥಾನ ಮೂಲದ ನಿತಿನ್ ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ರೈತರಿಗೆ ತೊಂದರೆ ನೀಡುತ್ತಿದ್ದ ದನಗಳ್ಳರ ಗ್ಯಾಂಗ್‌ನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

“ರೂಮ್‌ಗೆ ಬಾ, ಇಲ್ಲ ಅಂದ್ರೆ ಮನೆಯ ಮರ್ಯಾದೆ ಹಾಳು ಮಾಡ್ತೀನಿ!” ಸಹಪಾಠಿ ಕಿರುಕುಳಕ್ಕೆ ಬೇಸತ್ತು ಯುವತಿ ಸೂಸೈಡ್

0

ಬೆಂಗಳೂರು: ಸಹಪಾಠಿಯೊಬ್ಬನ ಕಿರುಕುಳದಿಂದ ಬೇಸತ್ತು 22 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಮೂಲದ ವಾಣಿ (22) ಮೃತ ಯುವತಿ.

ಸುಮಾರು ಒಂದು ವರ್ಷದ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ವಾಣಿ, ನಗರದ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಆಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ಮುನ್ನ ವಾಣಿ ಡೆತ್‌ನೋಟ್ ಬರೆದಿಟ್ಟಿದ್ದು, ಕಾಲೇಜಿನ ಸಹಪಾಠಿಯಾಗಿದ್ದ ಅಭಿಷೇಕ್ ಎ.ಎಸ್. ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಡೆತ್‌ನೋಟ್‌ನಲ್ಲಿ, ಅಭಿಷೇಕ್ ಒಂದು ವರ್ಷದಿಂದ ವಾಟ್ಸ್‌ಆ್ಯಪ್ ಮೂಲಕ ವಿಡಿಯೋ ಹಾಗೂ ಫೋಟೋಗಳನ್ನು ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಅಲ್ಲದೆ, “ರೂಮ್‌ಗೆ ಬಾ, ಇಲ್ಲದಿದ್ದರೆ ನಿಮ್ಮ ಮನೆಯ ಮರ್ಯಾದೆ ಹಾಳು ಮಾಡುತ್ತೇನೆ” ಎಂದು ಬೆದರಿಕೆ ಹಾಕುತ್ತಿದ್ದ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

“ನನ್ನ ಕುಟುಂಬದ ಮರ್ಯಾದೆ ಉಳಿಯಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಮಾಡುತ್ತಿದ್ದೇನೆ. ನನ್ನ ಸಾವಿಗೆ ಅಭಿಷೇಕ್ ಕಾರಣ. ಅವನಿಗೆ ಶಿಕ್ಷೆ ಆಗಬೇಕು, ಅದೇ ನನ್ನ ಕೊನೆಯ ಆಸೆ” ಎಂದು ವಾಣಿ ಬರೆದಿದ್ದಾರೆ.

ಘಟನೆ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್‌ನಲ್ಲಿ ಹೆಸರು ಉಲ್ಲೇಖವಾಗಿರುವ ಅಭಿಷೇಕ್‌ನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

 

‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’: ಡಿಕೆ ಸುರೇಶ್‌ಗೆ ಹೆಚ್‌ಡಿಕೆ ತಿರುಗೇಟು

0

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ಮುಂದುವರಿದಿದೆ.

ಡಿ.ಕೆ. ಸುರೇಶ್ ಮತ್ತು ಸಚಿವ ಎಚ್.ಸಿ. ಬಾಲಕೃಷ್ಣ ಅವರ ಟೀಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

‘ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ’ ಎಂದು ಡಿ.ಕೆ. ಸುರೇಶ್ ಹಾಗೂ ಎಚ್.ಸಿ. ಬಾಲಕೃಷ್ಣ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’ ಎಂದು ವ್ಯಂಗ್ಯವಾಡಿದರು.

ರಾಮನಗರ ತಾಲೂಕಿನ ಅಕ್ಕೂರು ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ನೈಸ್ ರಸ್ತೆ ಟೋಲ್ ಸಂಗ್ರಹದ ವಿರುದ್ಧ ಆರೋಪ ಮಾಡಿದರು. 20 ವರ್ಷಗಳಿಂದ ರೈತರ ಭೂಮಿಯನ್ನು ಪಡೆದುಕೊಂಡರೂ, ಅವರಿಗೆ ಸರಿಯಾದ ಪರಿಹಾರ ನೀಡಿಲ್ಲ. ಸುಮಾರು 4 ಸಾವಿರ ಕುಟುಂಬಗಳಿಗೆ ನಿವೇಶನ ನೀಡುವುದಾಗಿ ಹೇಳಿದ್ದರೂ ಅದು ಇನ್ನೂ ಈಡೇರಿಲ್ಲ. ನೈಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಅಲ್ಲ, ಅದು ರಾಜ್ಯ ಸರ್ಕಾರಕ್ಕೆ ಸೇರಿದ ರಸ್ತೆ. ರೈತರಿಗೆ ಪರಿಹಾರ ನೀಡದೆ ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಸಚಿವ ಎಚ್.ಸಿ. ಬಾಲಕೃಷ್ಣ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ₹600 ಕೋಟಿ ಕಾಮಗಾರಿಯ ಹಣದ ವಿಚಾರದಲ್ಲಿ ತಮ್ಮ ಬಳಿ ವ್ಯಕ್ತಿಯೊಬ್ಬರು ಬಂದು ವಿಷಯ ಪ್ರಸ್ತಾಪಿಸದಂತೆ ಮನವಿ ಮಾಡಿದ್ದರು. ‘ಇವನಿಂದ ನಾನು ಕಲಿಯಬೇಕಾ?’ ಎಂದು ಪ್ರಶ್ನಿಸಿದರು.

ಬೆಂಗಳೂರು–ಮೈಸೂರು ರಸ್ತೆ ನಿರ್ಮಾಣದ ಬಗ್ಗೆಯೂ ಮಾತನಾಡಿದ ಕುಮಾರಸ್ವಾಮಿ, ಮಾಯಗನಹಳ್ಳಿ ಬಳಿ ಬಸ್ ಅಪಘಾತದಲ್ಲಿ ಎಂಟು ಮಕ್ಕಳು ಮೃತಪಟ್ಟ ಬಳಿಕ ಎಚ್.ಡಿ. ದೇವೇಗೌಡರು ಉತ್ತಮ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದರು ಎಂದು ಹೇಳಿದರು.

‘ಕುಮಾರಸ್ವಾಮಿ ಪಾಪದ ಕೊಳೆ ತೊಳೆಯುತ್ತಿದ್ದಾರೆ’ ಎಂಬ ಡಿ.ಕೆ. ಸುರೇಶ್ ಹೇಳಿಕೆಗೂ ತಿರುಗೇಟು ನೀಡಿದ ಅವರು, ರಾಮನಗರ ಹಾಗೂ ಕನಕಪುರದ ಹಿಂದಿನ ಪರಿಸ್ಥಿತಿ, ದೇವೇಗೌಡರ ಕಾಲದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.