Home Blog Page 4

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ದೇವನಹಳ್ಳಿ: ಬೆಂಗಳೂರು ಹೊರವಲಯದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಟರ್ಮಿನಲ್–1ರಲ್ಲಿ ನಿಂತಿದ್ದ ವಿಮಾನವು ಬೆಂಗಳೂರಿನಿಂದ ಚೆನ್ನೈಗೆ ತೆರಳಬೇಕಾಗಿತ್ತು.

ವಿಮಾನ ಟೇಕ್‌ಆಫ್‌ಗೆ ಸಜ್ಜಾಗಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಪೈಲೆಟ್ ಎಚ್ಚೆತ್ತುಕೊಂಡು ರನ್‌ವೇಯಲ್ಲೇ ವಿಮಾನವನ್ನು ನಿಲ್ಲಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬಳಿಕ ಹಿರಿಯ ತಾಂತ್ರಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿಮಾನದ ತಾಂತ್ರಿಕ ಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಬಿರುಗಾಳಿ–ಆಲಿಕಲ್ಲು ಮಳೆ ಆರ್ಭಟ: ಮನೆ ಮೇಲ್ಛಾವಣಿ ಬಿದ್ದು 6 ವರ್ಷದ ಬಾಲಕಿ ದುರ್ಮರಣ!

ಬೀದರ್: ಜಿಲ್ಲೆ ಹುಲಸೂರು ತಾಲೂಕಿನ ತಹಶೀಲ್ದಾರ್ ಕಚೇರಿ ಸಮೀಪದ ಬಡಾವಣೆಯಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಭೀಕರ ಆರ್ಭಟಕ್ಕೆ ದಾರುಣ ಘಟನೆ ಸಂಭವಿಸಿದೆ.

ಭಾರೀ ಗಾಳಿ ಮತ್ತು ಮಳೆಯ ತೀವ್ರತೆಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದಿದೆ.

ಮೇಲ್ಛಾವಣಿಯ ಮೇಲಿದ್ದ ಭಾರವಾದ ಕಲ್ಲುಗಳು ಮನೆಯೊಳಗೆ ಬಿದ್ದ ಪರಿಣಾಮ, 6 ವರ್ಷದ ಬಾಲಕಿ ಮಾಹೇರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಕುಟುಂಬದ ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಅಬ್ಬರದಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಮಂಡ್ಯದಲ್ಲಿ ಭೀಕರ ಅಪಘಾತ! ಟಾಟಾ ಏಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು, 10 ಕ್ಕೂ ಹೆಚ್ಚು ಮಂದಿಗೆ ಗಾಯ!

ಮಂಡ್ಯ: ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಬಳಿ ಟಾಟಾ ಏಸ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮೃತರನ್ನು ಹಟ್ನ ಗ್ರಾಮದ ತಾಯಮ್ಮ (60) ಎಂದು ಗುರುತಿಸಲಾಗಿದೆ. ದೇವರ ಕಾರ್ಯಕ್ಕೆ ನಾಗಮಂಗಲ ತಾಲೂಕಿನ ಹೆಗಟಿ ಗ್ರಾಮಕ್ಕೆ ತೆರಳಿದ್ದ ಹಟ್ನ ಗ್ರಾಮದ ಜನರು ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಈ ವೇಳೆ ವಾಹನದಲ್ಲಿದ್ದ ತಾಯಮ್ಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಬಳಿಕ ಎಲ್ಲ ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸಂಭವಿಸಿದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಯಿತು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ವಾಹನವನ್ನು ತೆರವುಗೊಳಿಸಿದ್ದಾರೆ.

ಈ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ.

ಸ್ಥಳೀಯರು ರಸ್ತೆ ಸುರಕ್ಷತೆ ಹಾಗೂ ಅತಿಭಾರ ಪ್ರಯಾಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಗುಜರಾತ್ ವಿರುದ್ಧ 92 ರನ್‌ಗಳ ಭರ್ಜರಿ ಜಯ! ಫೈನಲ್‌ಗೆ RCB ಎಂಟ್ರಿ – ಈ ಸಲನೂ ಕಪ್‌ ನಮ್ದೆ?

ನಾಯಕ ರಜತ್ ಪಾಟಿದಾರ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಜಾಕೋಬ್ ಡಫ್ಫಿ ಅವರ ಮಾರಕ ಬೌಲಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಕ್ವಾಲಿಫೈಯರ್-1 ಪಂದ್ಯದಲ್ಲಿ 92 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದ ಆರ್‌ಸಿಬಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ನಾಯಕ ರಜತ್ ಪಾಟಿದಾರ್ ಕೇವಲ 33 ಬಾಲ್‌ಗಳಲ್ಲಿ 9 ಸಿಕ್ಸರ್ ಹಾಗೂ 5 ಫೋರ್ ಸಹಿತ 93 ರನ್ ಸಿಡಿಸಿ ಗುಜರಾತ್ ಬೌಲರ್‌ಗಳನ್ನು ಕಂಗೆಡಿಸಿದರು. ವಿರಾಟ್ ಕೊಹ್ಲಿ 43 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 30 ರನ್‌ಗಳ ಕೊಡುಗೆ ನೀಡಿದರು. ಕೃಣಾಲ್ ಪಾಂಡ್ಯ ಕೂಡ 43 ರನ್ ಗಳಿಸಿ ತಂಡಕ್ಕೆ ಬಲ ನೀಡಿದರು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿತು.

255 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ಆರಂಭದಲ್ಲೇ ಕುಸಿತ ಕಂಡಿತು. ಸಾಯಿ ಸುದರ್ಶನ್ 14 ರನ್‌ಗೆ ಹಿಟ್ ವಿಕೆಟ್ ಆದರೆ, ಶುಭಮನ್ ಗಿಲ್ ಕೇವಲ 2 ರನ್‌ಗೆ ಕ್ಲೀನ್ ಬೌಲ್ಡ್ ಆದರು. ಜೋಸ್ ಬಟ್ಲರ್ 29 ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕರೆದೊಯ್ಯಲು ಸಾಧ್ಯವಾಗಲಿಲ್ಲ. ರಾಹುಲ್ ತೆವಾಟಿಯಾ 68 ರನ್ ಗಳಿಸಿ ಹೋರಾಟ ಮಾಡಿದರೂ, ಉಳಿದ ಬ್ಯಾಟರ್‌ಗಳ ವಿಫಲತೆಯಿಂದ ಗುಜರಾತ್ 19.3 ಓವರ್‌ಗಳಲ್ಲಿ 162 ರನ್‌ಗಳಿಗೆ ಆಲೌಟ್ ಆಯಿತು.

ಆರ್‌ಸಿಬಿ ಪರ ಜಾಕೋಬ್ ಡಫ್ಫಿ 3 ವಿಕೆಟ್ ಪಡೆದು ಮಿಂಚಿದರು. ಭುವನೇಶ್ವರ್ ಕುಮಾರ್, ರಸಿಕ್ ಸಲಾಂ ಹಾಗೂ ಕೃಣಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರೆ, ಜೋಶ್ ಹೇಜಲ್‌ವುಡ್ 1 ವಿಕೆಟ್ ಪಡೆದರು.

ಈ ಜಯದೊಂದಿಗೆ ಆರ್‌ಸಿಬಿ 2009, 2011, 2016 ಹಾಗೂ 2025ರ ನಂತರ ಐದನೇ ಬಾರಿಗೆ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದೆ. ಇದೀಗ ತಂಡ ಮತ್ತೊಮ್ಮೆ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿ ಅಭಿಮಾನಿಗಳು ಉತ್ಸಾಹದಿಂದ ಕಾಯುತ್ತಿದ್ದಾರೆ.

ರಾಜ್ಯಾದ್ಯಂತ ಭಾರೀ ಮಳೆ! ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡಿನ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮಳೆ ಮತ್ತು ಬಿರುಗಾಳಿ ಸಂದರ್ಭಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿದ್ದು, ಹಳೆಯ ಕಟ್ಟಡಗಳು, ಮರಗಳ ಕೆಳಭಾಗ ಮತ್ತು ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಸೂಚಿಸಿದೆ.

ಬಡವರ ಅನ್ನಕ್ಕೂ ಸರ್ವರ್ ಕಂಟಕ!

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಬಯೋಮೆಟ್ರಿಕ್ ಸರ್ವರ್ ಕೈಕೊಟ್ಟ ಪರಿಣಾಮ, ಪಡಿತರ ಪಡೆಯಲು ಫಲಾನುಭವಿಗಳು ಕಳೆದ ಹಲವು ದಿನಗಳಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಹೆಬ್ಬೆಟ್ಟು ಹಾಕಲು ಸಾಧ್ಯವಾಗದೆ ನೂರಾರು ಮಂದಿ ದಿನಪೂರ್ತಿ ಸಾಲಿನಲ್ಲಿ ನಿಂತರೂ ಖಾಲಿಕೈಯಿಂದ ಮನೆಗೆ ಹಿಂತಿರುಗುತ್ತಿರುವ ದೃಶ್ಯ ಗ್ರಾಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಂಗಳವಾರ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿ ಎದುರು ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಆಡಳಿತದ ವಿರುದ್ಧ ಘೋಷಣೆ ಕೂಗಿದರು.
“ಬೇಕೇ ಬೇಕು ನ್ಯಾಯ ಬೇಕು”, “ಸರ್ವರ್ ಸಮಸ್ಯೆ ನಿವಾರಿಸಿ” ಎಂದು ಕೂಗಿದ ಪ್ರತಿಭಟನಾಕಾರರು, ಸಾರ್ವಜನಿಕರಿಗೆ ಮೂಲಭೂತ ಸೇವೆ ಒದಗಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಮಳೆಗಾಲದ ಕೃಷಿ ಚಟುವಟಿಕೆ ಆರಂಭವಾಗಿರುವ ವೇಳೆಯಲ್ಲೇ ರೈತರು ಹೊಲದ ಕೆಲಸ ಬಿಟ್ಟು ನ್ಯಾಯಬೆಲೆ ಅಂಗಡಿ ಮುಂದೆ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ.
“ಬೆಳಗ್ಗೆಯಿಂದ ಸಂಜೆವರೆಗೆ ಕಾಯಿಸುತ್ತಾರೆ. ಕೊನೆಗೆ ‘ಸರ್ವರ್ ಇಲ್ಲ’ ಎಂದು ಮನೆಗೆ ಕಳುಹಿಸುತ್ತಾರೆ. ಎರಡು-ಮೂರು ದಿನಗಳಿಂದ ಬರುತ್ತಿದ್ದರೂ ಪಡಿತರ ಸಿಗುತ್ತಿಲ್ಲ,” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
“ಒಂದೆಡೆ ಕೃಷಿ ಕೆಲಸ, ಮತ್ತೊಂದೆಡೆ ಪಡಿತರದ ಕಷ್ಟ. ಕೆಲಸವೂ ಆಗುತ್ತಿಲ್ಲ, ಪಡೀತರವೂ ಸಿಗುತ್ತಿಲ್ಲ,” ಎಂದು ಅಸಮಾಧಾನ ಹೊರಹಾಕಿದರು.
ಮಹಿಳೆಯರು ಮಾತನಾಡಿ, “ಮನೆಯ ಕೆಲಸ, ಮಕ್ಕಳ ಜವಾಬ್ದಾರಿ ಬಿಟ್ಟು ಬರುತ್ತಿದ್ದೇವೆ. ದಿನವಿಡೀ ಕಾಯಿಸಿದರೂ ಪಡಿತರ ಸಿಗುತ್ತಿಲ್ಲ. ಬಡವರ ಸಂಕಷ್ಟ ಸರ್ಕಾರಕ್ಕೆ ಕಾಣುತ್ತಿಲ್ಲ,” ಎಂದು ಬೇಸರ ವ್ಯಕ್ತಪಡಿಸಿದರು.
ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಬಿಸಿಲಿನಲ್ಲಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ವೃದ್ಧರು, “ಬೆರಳಚ್ಚೇ ಸರಿಯಾಗಿ ಬರುತ್ತಿಲ್ಲ. ಅದರ ಮೇಲೆ ಸರ್ವರ್ ಸಮಸ್ಯೆ. ಪ್ರತಿದಿನ ಬಂದು ಹಿಂತಿರುಗುವುದು ತುಂಬಾ ಕಷ್ಟ,” ಎಂದು ಅಳಲು ತೋಡಿಕೊಂಡರು.
ಅಂಗವಿಕಲರು ಮತ್ತು ವೃದ್ಧ ಮಹಿಳೆಯರು ನೆಲದ ಮೇಲೆಯೇ ಕುಳಿತು ಕಾಯುತ್ತಿರುವ ದೃಶ್ಯ ಜನರ ಮನಕಲುಕಿತು.
“ಸರ್ವರ್ ಸಮಸ್ಯೆ ಇದೆ ಎಂದು ಹೇಳುವುದನ್ನು ಬಿಟ್ಟರೆ ಬೇರೆ ಯಾವುದೇ ಸ್ಪಂದನೆ ಇಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಕೇಳುವವರೇ ಇಲ್ಲ,” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಆಫ್‌ಲೈನ್ ಮೂಲಕವಾದರೂ ಪಡಿತರ ವಿತರಣೆ ಮಾಡಬೇಕು. ಇಲ್ಲವಾದರೆ ತಾಲೂಕು ಮಟ್ಟದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಜನರ ಪ್ರಮುಖ ಆಗ್ರಹಗಳು

  •  ಸರ್ವರ್ ಸಮಸ್ಯೆ ತಕ್ಷಣ ಬಗೆಹರಿಸಬೇಕು
  •  ಆಫ್‌ಲೈನ್ ಮೂಲಕ ಪಡಿತರ ವಿತರಣೆ ಆರಂಭಿಸಬೇಕು
  •  ಹಿರಿಯ ನಾಗರಿಕರು, ಅಂಗವಿಕಲರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಬೇಕು
  •  ಆಹಾರ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು

ಗುಲ್ಮೋಹರ್ ಹೂವಿನ ಸುರಂಗವಾಗಿ ಮಿಂಚಿದ ರಸ್ತೆ!

0
ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಿನ ಮಾರನಬಸರಿ ಗ್ರಾಮದಿಂದ ಕೊಪ್ಪದ ಕ್ರಾಸ್‌ವರೆಗೆ ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಗುಲ್ಮೋಹರ್ ಮರಗಳು ಇದೀಗ ಸಂಚಾರಿಗಳ ಕಣ್ಮನ ಸೆಳೆಯುತ್ತಿವೆ. ಕೆಂಪು-ಕಿತ್ತಳೆ ಬಣ್ಣದ ಹೂವುಗಳಿಂದ ಕಂಗೊಳಿಸುತ್ತಿರುವ ಈ ಮರಗಳು ರಸ್ತೆಯನ್ನೇ ನೈಸರ್ಗಿಕ ಹೂವಿನ ಸುರಂಗವನ್ನಾಗಿ ಮಾರ್ಪಡಿಸಿವೆ.
ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ದಟ್ಟವಾಗಿ ಬೆಳೆದಿರುವ ಮರಗಳು ಪ್ರಯಾಣಿಕರಿಗೆ ತಂಪಾದ ನೆರಳನ್ನು ನೀಡುತ್ತಿದ್ದು, ಬೇಸಿಗೆಯ ಬಿಸಿಲಿನ ಮಧ್ಯೆಯೂ ಮನಸಿಗೆ ಹಿತ ನೀಡುವ ವಾತಾವರಣ ಸೃಷ್ಟಿಸಿವೆ.
ಹೂವುಗಳಿಂದ ಆವೃತವಾಗಿರುವ ರಸ್ತೆಯಲ್ಲಿ ಯುವಕರು, ಪ್ರವಾಸಿಗರು ಹಾಗೂ ಸ್ಥಳೀಯರು ನಿಂತು ಸೆಲ್ಫಿ ತೆಗೆದುಕೊಳ್ಳುವುದು ಸಾಮಾನ್ಯ ದೃಶ್ಯವಾಗಿದೆ. ರಸ್ತೆಯ ಮೇಲೆ ಉದುರಿರುವ ಗುಲ್ಮೋಹರ್ ಹೂವುಗಳು ಪ್ರಕೃತಿಯ ರಂಗೋಲಿಯಂತೆಯೇ ಕಂಗೊಳಿಸುತ್ತಿದ್ದು, ಈ ಮಾರ್ಗವನ್ನು ಮತ್ತಷ್ಟು ಆಕರ್ಷಕವಾಗಿಸಿವೆ.
ಪ್ರಕೃತಿ ಪ್ರೇಮಿಗಳು ಹಾಗೂ ವಾಹನ ಸವಾರರು ಈ ರಸ್ತೆಯ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಈ ದೃಶ್ಯಗಳು ವೈರಲ್ ಆಗುತ್ತಿವೆ.

ಬೆಂಗಳೂರಿನಲ್ಲಿ ಎಬೋಲಾ ಶಂಕಿತ ಪ್ರಕರಣ: ಉಗಾಂಡಾ ಮೂಲದ ಮಹಿಳೆ ಆಸ್ಪತ್ರೆಗೆ ಶಿಫ್ಟ್!

ಬೆಂಗಳೂರು: ರಾಜ್ಯದಲ್ಲಿ ಮೊದಲ ಎಬೋಲಾ ಪ್ರಕರಣ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಉಗಾಂಡಾದಿಂದ ಬೆಂಗಳೂರಿಗೆ ಆಗಮಿಸಿದ್ದ 28 ವರ್ಷದ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಂಡುಬಂದಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಶಂಕಿತ ಮಹಿಳೆಯನ್ನು ನಗರದ ರಾಜೀವ್ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿ ಐಸೋಲೇಷನ್ ವಾರ್ಡ್‌ನಲ್ಲಿ ತೀವ್ರ ನಿಗಾದಲ್ಲಿ ಇರಿಸಿದೆ ಎಂದು ತಿಳಿದುಬಂದಿದೆ.

ಮಹಿಳೆಯಿಂದ ರಕ್ತ ಹಾಗೂ ಅಗತ್ಯ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವೇ ಸೋಂಕಿನ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮಗಳನ್ನು ಹೆಚ್ಚಿಸಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲಿನ ನಿಗಾ ಮತ್ತಷ್ಟು ಕಠಿಣಗೊಳಿಸಲಾಗಿದೆ.

ಸನಾತನ ಸಂರಕ್ಷಣೆಗೆ ಹಿಂದೂ ಸಮಾವೇಶ!

0
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸನಾತನ ಹಿಂದೂ ಧರ್ಮದ ವಿರುದ್ಧ ಹುನ್ನಾರ ನಡೆಸುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಸಂದೇಶ ನೀಡುವ ಉದ್ದೇಶದಿಂದ ಮೇ 31ರಂದು ಗದಗದಲ್ಲಿ ಬೃಹತ್ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.
ಶಿರಹಟ್ಟಿಯ ಟೀಚರ್ ಸೊಸೈಟಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೂ ಸರ್ವ ಸಮಾಜಗಳ ಒಕ್ಕೂಟದ ವತಿಯಿಂದ ಬಸವಾದಿ ಶಿವಶರಣರ ನೇತೃತ್ವದಲ್ಲಿ ಈ ಮಹಾಸಮಾವೇಶ ಆಯೋಜಿಸಲಾಗುತ್ತಿದೆ ಎಂದರು.
ಗದಗ ನಗರದ ವಿಡಿಎಸ್ಟಿಸಿ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ಭಾಗವಹಿಸಲಿದ್ದಾರೆ. ಸಾವಯವ ಕೃಷಿ ಕುರಿತಂತೆ ರೈತರಿಗೆ ತಜ್ಞರಿಂದ ಮಾರ್ಗದರ್ಶನವೂ ಇರಲಿದ್ದು, ಜಿಲ್ಲೆಯ ರೈತರು ಹಾಗೂ ಹಿಂದೂ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಸಂಘಟನೆಯ ಮುಖಂಡ ಸಂತೋಷ ಕುರಿ ಮಾತನಾಡಿ, ಮೇ ೩೧ರಂದು ಮಧ್ಯಾಹ್ನ ೩.೩೦ಕ್ಕೆ ಭೂಮರಡ್ಡಿ ಸರ್ಕಲ್‌ನಿಂದ ಕುಂಭ ಮೆರವಣಿಗೆ ಆರಂಭವಾಗಲಿದ್ದು, ಎರಡು ರಿಂದ ಮೂರು ಸಾವಿರ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಜೆ ೫.೩೦ಕ್ಕೆ ವಿಡಿಎಸ್ಟಿ ಮೈದಾನದಲ್ಲಿ ಬೃಹತ್ ಸಮಾವೇಶವಾಗಿ ರೂಪುಗೊಳ್ಳಲಿದೆ ಎಂದು ಹೇಳಿದರು.
ಈ ಮಹಾಸಭೆಯಲ್ಲಿ ೨೫ರಿಂದ ೩೦ ಸಾವಿರ ಜನ ಭಾಗವಹಿಸುವ ಸಾಧ್ಯತೆ ಇದ್ದು, ೩೦೦ಕ್ಕೂ ಹೆಚ್ಚು ಮಠಗಳ ಮಠಾಧೀಶರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಶ್ರೀಧರ್ ಕುಲಕರ್ಣಿ, ರಾಜೀವರಡ್ಡಿ ಬಮ್ಮನಕಟ್ಟಿ, ವೆಂಕಟೇಶ್ ಕುಲಕರ್ಣಿ, ತಿಪ್ಪಣ್ಣ ಕೊಂಚಗೇರಿ, ಯಲ್ಲಪ್ಪಗೌಡ ಅಣ್ಣಿಗೇರಿ, ರಾಮಣ್ಣ ಕಂಬಳಿ, ಬಸವರಾಜ ತುಳಿ, ಗೂಳಪ್ಪ ಕರಿಗಾರ, ಪರಶುರಾಮ ಡೊಂಕಬಳ್ಳಿ, ನೀಲಪ್ಪ ಖಾನಾಪುರ, ನಾಗರಾಜ ಇಂಗಳಗಿ, ಫಕೀರೇಶ ಕರಿಗಾರ, ಸಂತೋಷ ಸೊಂಟನೂರ, ವಿರುಪಾಕ್ಷಿ ಹಿರೇಮಠ, ದೇವು ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
 “ಹಿಂದೂ ಸಮಾಜದ ಐಕ್ಯತೆ ಮತ್ತು ಜಾಗೃತಿಯೇ ಸಮಾವೇಶದ ಪ್ರಮುಖ ಉದ್ದೇಶ.”
ರಾಜು ಖಾನಪ್ಪನವರ

ರಸ್ತೆ ಅಭಿವೃದ್ಧಿಗೆ ಸಚಿವ ಎಚ್‌ಕೆಪಿ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ದೊಡ್ಡ ಹೆಜ್ಜೆಯಾಗಿ ಕಳಸಾಪುರ ರಸ್ತೆ, ಬೆಟಗೇರಿ ಹಾಗೂ ಕುರಹಟ್ಟಿ ಪೇಟೆ ಭಾಗಗಳಲ್ಲಿ ಒಟ್ಟು ₹3 ಕೋಟಿ ವೆಚ್ಚದ ಸಿ.ಸಿ ರಸ್ತೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ನಗರದ ವಾರ್ಡ್ ಸಂಖ್ಯೆ 34 ಮತ್ತು 35ರ ಕಳಸಾಪುರ ರಸ್ತೆಯ ಇಂಡಿಯನ್ ಬ್ಯಾಂಕ್ ಸಮೀಪ, ವಾರ್ಡ್ ಸಂಖ್ಯೆ 06ರ ಬೆಟಗೇರಿ ಹಾಗೂ ವಾರ್ಡ್ ಸಂಖ್ಯೆ 10ರ ಕುರಹಟ್ಟಿ ಪೇಟೆಯಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಯಾವುದೇ ರಾಜಿ ಆಗಬಾರದು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
“ಸಾರ್ವಜನಿಕರು ವರ್ಷಗಳ ಕಾಲ ಸುಗಮವಾಗಿ ಸಂಚಾರ ಮಾಡಲು ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿ ನಡೆಯಬೇಕು. ನಾಲ್ಕು ತಿಂಗಳೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು,” ಎಂದು ಸೂಚಿಸಿದರು.
ನಗರ ಅಭಿವೃದ್ಧಿಗೆ ಸರ್ಕಾರ ಬದ್ಧ
ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಹಂತದಲ್ಲೂ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ರಸ್ತೆ, ಕುಡಿಯುವ ನೀರು, ಉದ್ಯಾನವನ ಹಾಗೂ ಶಿಕ್ಷಣ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಕಳಸಾಪುರ ಭಾಗದ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ ಸಚಿವರು, ಜಿಮ್ ಸಾಮಗ್ರಿ ಖರೀದಿಗೆ ₹5 ಲಕ್ಷ ಅನುದಾನ ಘೋಷಿಸಿದರು.
ಬೆಟಗೇರಿ ಹಾಗೂ ಕುರಹಟ್ಟಿ ಪೇಟೆ ಭಾಗಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ತಾನ ಯೋಜನೆಯಡಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡಗಳನ್ನು ಸಚಿವರು ಲೋಕಾರ್ಪಣೆ ಮಾಡಿದರು.
“ಅಂಗನವಾಡಿಗಳು ಕೇವಲ ಪೋಷಣಾ ಕೇಂದ್ರಗಳಲ್ಲ, ಮಕ್ಕಳ ಭವಿಷ್ಯದ ಅಡಿಪಾಯ ನಿರ್ಮಿಸುವ ಮೊದಲ ಪಾಠಶಾಲೆಗಳು,” ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ವಾರ್ಡ್‌ನ 35 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ನೀಲವ್ವ ಪರಸಪ್ಪ ಬಜಂತ್ರಿ, ರೇಖವ್ವ ರಾಜಪ್ಪ ಬಜಂತ್ರಿ, ಅನಂತ ಬೋಜಪ್ಪ ಬಜಂತ್ರಿ, ಯಮನವ್ವ ಬಜಂತ್ರಿ, ಮಾಯವ್ವ ಬಜಂತ್ರಿ, ಗವಿಸಿದ್ದಪ್ಪ ಬಜಂತ್ರಿ ಸೇರಿದಂತೆ ಹಲವರು ಸಚಿವರಿಂದ ಹಕ್ಕುಪತ್ರ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.
ಗುಣಮಟ್ಟದಲ್ಲಿ ರಾಜಿ ಬೇಡ
ಕುರಹಟ್ಟಿ ಪೇಟೆ ಕಾಮಗಾರಿಯ ವೇಳೆ ಮಾತನಾಡಿದ ಸಚಿವರು, “ರಸ್ತೆ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತಿರಬೇಕು. ಪ್ರತಿಯೊಂದು ಹಂತದಲ್ಲೂ ಅಧಿಕಾರಿಗಳು ನಿಗಾ ವಹಿಸಬೇಕು,” ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮಗಳಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಉಷಾ ದಾಸರ, ಅನಿಲ ಗರಗ, ದುರಗೇಶ್ ವಿಭೂತಿ, ನಗರಸಭಾ ಸದಸ್ಯೆ ಲಕ್ಷ್ಮವ್ವ ಬಜಂತ್ರಿ, ನಗರಸಭಾ ಸದಸ್ಯ ಇಮ್ತಿಯಾಜ್ ಶಿರಹಟ್ಟಿ, ಜಾಂಗೀರ ಅಣ್ಣಿಗೇರಿ, ಈಶ್ವರ ಗದುಗಿನ, ಹಣಗಿ ಭಾಷಾ, ಇಬ್ರಾಹಿಂ ಶಿರಹಟ್ಟಿ, ಸೋಪೀನ್ ಅಣ್ಣಿಗೇರಿ, ಫಾರುಕ್ ಮಖಾಂದಾರ್, ಯಾಶೀನ್, ಬಸವರಾಜ ಕಡೇಮನಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
 “ನಗರದ ಅಭಿವೃದ್ಧಿಗೆ ಗುಣಮಟ್ಟದ ರಸ್ತೆ ಮತ್ತು ಮೂಲಸೌಕರ್ಯಗಳೇ ಅಡಿಪಾಯ.”
ಎಚ್.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ
error: Content is protected !!