ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಡೆಯಬೇಕಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾಗಿದೆ. 59ನೇ ಸಿಸಿಹೆಚ್ ಕೋರ್ಟ್, ಹೈಕೋರ್ಟ್ನ ಆದೇಶ ಇನ್ನೂ ಹೊರಬಾರದ ಹಿನ್ನೆಲೆಯಲ್ಲಿ ಪ್ರದೋಷ್ ಹೇಳಿಕೆ ದಾಖಲಿಸುವ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಎ14 ಆರೋಪಿ ಪ್ರದೋಷ್ ಅವರನ್ನು ಇಂದು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಹೈಕೋರ್ಟ್ನಲ್ಲಿ ಬಾಕಿ ಇರುವ ಆದೇಶದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನಕುಮಾರ್ ಮನವಿ ಮಾಡಿದರು.
ಹೈಕೋರ್ಟ್ನ ಆದೇಶಕ್ಕಾಗಿ ಹೆಚ್ಚಿನ ಸಮಯಾವಕಾಶ ನೀಡುವಂತೆ ಎಸ್ಪಿಪಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಹೀಗಾಗಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ನ್ಯಾಯಾಲಯಕ್ಕೆ ಹಾಜರಾದ ಪ್ರದೋಷ್ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಸಹಿ ಮಾಡಿದ್ದಾರೆ. ವಿಚಾರಣೆ ಮುಂದೂಡಿಕೆಯಾದ ಬಳಿಕ ಪೊಲೀಸರು ಅವರನ್ನು ಮತ್ತೆ ಜೈಲಿಗೆ ಕರೆದೊಯ್ದಿದ್ದಾರೆ.
ಹೈಕೋರ್ಟ್ ಆದೇಶದ ಬಳಿಕ ಸೋಮವಾರ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆಯಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮುಂದಿನ ಬೆಳವಣಿಗೆಗಳ ಮೇಲೆ ಇದೀಗ ಗಮನ ನೆಟ್ಟಿದೆ.

