Home Blog Page 4

ರಾಮನಗರ ಕ್ವಾರಿ ದುರಂತ: ಮಾಲೀಕನ ಬಂಧನಕ್ಕೆ ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯ!

ಬೆಂಗಳೂರು/ರಾಮನಗರ: ಕಲ್ಲು ಕ್ವಾರಿ ದುರಂತದ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕನನ್ನು ಕೂಡಲೇ ಬಂಧಿಸಬೇಕು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಿಂದೆ ಬಂಡೆ ಓನರ್‌ಗಳೊಂದಿಗೆ ಸಭೆ ನಡೆಸಿ ಲೀಗಲ್ ಆಗಿ ಬ್ಲಾಸ್ಟಿಂಗ್ ಮಾಡುವಂತೆ ಸೂಚಿಸಿದ್ದೆ. ಗರ್ಭಿಣಿ ಚಿರತೆ ಸಾವು ಪ್ರಕರಣದಲ್ಲಿಯೂ ತಾವು ಈ ವಿಷಯ ಪ್ರಸ್ತಾಪಿಸಿದ್ದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ಕ್ವಾರಿ ದುರಂತದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, “ಪ್ರಭಾವಶಾಲಿಗಳು ಇರುವುದರಿಂದ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ. ಆದ್ದರಿಂದ ಕಠಿಣ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ನ್ಯಾಯ ದೊರಕಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕ್ರಷರ್ ಮಾಲೀಕರು ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಕ್ವಾರಿ ಅಕ್ರಮವಾಗಿ ನಡೆಯುತ್ತಿದೆ ಎಂದು ಆರೋಪಿಸಿರುವ ಎಸ್.ಟಿ. ಸೋಮಶೇಖರ್, ಗಣಿ ಇಲಾಖೆ, ಅರಣ್ಯ ಇಲಾಖೆ, ಸ್ಥಳೀಯ ಪೊಲೀಸರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯವರ ಪಾತ್ರವೂ ಪರಿಶೀಲನೆಗೆ ಒಳಪಡಬೇಕು ಎಂದು ಹೇಳಿದ್ದಾರೆ. ಇವರ ವಿರುದ್ಧವೂ ಎಫ್‌ಐಆರ್ ದಾಖಲಿಸಬೇಕು ಎಂದು ಅವರು ಕಿಡಿಕಾರಿದ್ದಾರೆ.

ಈ ಕುರಿತು ಸಿಎಂ ಗಮನಕ್ಕೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಅವರು ತಿಳಿಸಿದ್ದಾರೆ.

 

ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸರ್ಕಾರ ಆದೇಶ; ಈ ತಿಂಗಳಿನಿಂದ ಹೆಚ್ಚುವರಿ ಸಂಬಳ!

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.

ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನವನ್ನು ಶೇಕಡಾ 12.5ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರಿಗೆ ವೇತನ ಹೆಚ್ಚಳದ ಲಾಭ ದೊರೆಯಲಿದೆ.

ಜುಲೈ ತಿಂಗಳ ವೇತನದಲ್ಲೇ ಪರಿಷ್ಕೃತ ವೇತನ ಜಾರಿಗೆ ಬರಲಿದ್ದು, 2025ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೌಕರರಿಗೆ ಬಾಕಿ ಉಳಿದಿರುವ ವೇತನದ ಮೊದಲ ಕಂತಿನ ಹಣವನ್ನೂ ಸರ್ಕಾರ ಬಿಡುಗಡೆ ಮಾಡಿದೆ.

ಈ ವೇತನ ಹೆಚ್ಚಳದಿಂದ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ಸುಮಾರು 72.80 ಕೋಟಿ ರೂಪಾಯಿ ವೆಚ್ಚವಾಗಲಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅವಧಿಯಲ್ಲಿ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದು, ಈ ತಿಂಗಳಿನಿಂದಲೇ ಪರಿಷ್ಕೃತ ವೇತನ ನೌಕರರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

Gold Rate Today: ಗೋಲ್ಡ್ ದರ ಮತ್ತೆ ದುಬಾರಿ, ಗ್ರಾಮ್​ಗೆ 245 ಏರಿಕೆ; ಬೆಳ್ಳಿ ಎಷ್ಟಿದೆ?

ನವದೆಹಲಿ: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಎರಡನೇ ದಿನವೂ ಏರಿಕೆಯಾಗಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನ ಹಾಗೂ ಬೆಳ್ಳಿ ದುಬಾರಿಯಾಗಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹245 ಏರಿಕೆಯಾಗಿದ್ದು, ₹1,32,500ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,44,550 ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,455 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,250 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,841 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,445 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,250 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.

ರಾಮನಗರ ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ

ರಾಮನಗರ, ಜುಲೈ 02: ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತ ಏಳು ಕಾರ್ಮಿಕರ ಜೀವ ಕಸಿದುಕೊಂಡಿದ್ದರೆ, ಮತ್ತೊಂದು ಕಳವಳಕಾರಿ ಬೆಳವಣಿಗೆಯಲ್ಲಿ ಗಂಭೀರವಾಗಿ ಗಾಯಗೊಂಡ ಐವರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ರಕ್ಷಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಂಡೆ ಕುಸಿತದ ಭಾರೀ ಹೊಡೆತಕ್ಕೆ ಕೈ, ಕಾಲು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ರಕ್ತಸ್ರಾವದಿಂದ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ.

ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿದ್ದು, ಗಾಯಾಳುಗಳ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಈ ದುರಂತದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಭೀತಿಯೂ ವ್ಯಕ್ತವಾಗಿದ್ದು, ಆಸ್ಪತ್ರೆಯಲ್ಲಿ ಕಟ್ಟೆಚ್ಚರದ ವೈದ್ಯಕೀಯ ನಿಗಾ ಮುಂದುವರಿದಿದೆ.

ಬೆಂಗಳೂರಿನಲ್ಲಿ ಎರಡನೇ ದಿನವೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ವಿವಿಧೆಡೆ ಜೆಸಿಬಿ ಘರ್ಜನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ.

GBA ಅಧಿಕಾರಿಗಳು ಬೆಳಗ್ಗೆಯಿಂದಲೇ ನಗರದ ವಿವಿಧ ಭಾಗಗಳಲ್ಲಿ ಜೆಸಿಬಿ ಯಂತ್ರಗಳ ಮೂಲಕ ಒತ್ತುವರಿ ತೆರವುಗೊಳಿಸಿದರು.

ನಗರಾಭಿವೃದ್ಧಿ ಸಚಿವರ ಸೂಚನೆಯಂತೆ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಉತ್ತರ ವಲಯದ ಹಲವು ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡಿದ್ದ ಶೆಡ್‌ಗಳು, ತಾತ್ಕಾಲಿಕ ನಿರ್ಮಾಣಗಳು ಹಾಗೂ ಇತರೆ ಅಡೆತಡೆಗಳನ್ನು ತೆರವುಗೊಳಿಸಲಾಯಿತು.

ಸಹಕಾರನಗರ ಮುಖ್ಯರಸ್ತೆ, ಕೊಡಿಗೇನಹಳ್ಳಿ, ವಿದ್ಯಾರಣ್ಯಪುರ ಮುಖ್ಯರಸ್ತೆ, ನಂಜಪ್ಪ ಸರ್ಕಲ್, ಪುಲಿಕೇಶಿನಗರ, ದಿನ್ನೂರು ಮುಖ್ಯರಸ್ತೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜು ಸಮೀಪದ ಫುಟ್‌ಪಾತ್‌ಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ನಿನ್ನೆ ಸರ್ಕಾರ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಇಂದು ಕೂಡ ನಗರದ ವಿವಿಧ ಪ್ರದೇಶಗಳಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಪಾದಚಾರಿಗಳಿಗೆ ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಫುಟ್‌ಪಾತ್‌ಗಳನ್ನು ಅತಿಕ್ರಮಣ ಮುಕ್ತಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕೊನೆಗೂ ಬಯಲಾಯ್ತು ದಾವಣಗೆರೆ ಜಿಲ್ಲಾಸ್ಪತ್ರೆ ಅಗ್ನಿ ದುರಂತದ ಕಾರಣ: ತನಿಖೆಯಲ್ಲಿ ಗೊತ್ತಾಯ್ತು ಅಸಲಿ ಸತ್ಯ

ದಾವಣಗೆರೆ: ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಮಾನವ ನಿರ್ಲಕ್ಷ್ಯವೇ ಕಾರಣವೇ ಎಂಬ ಅನುಮಾನಕ್ಕೆ ಇದೀಗ ತನಿಖೆಯೇ ಬಲ ತುಂಬಿದೆ. ಬಳಸಲು ಯೋಗ್ಯವಲ್ಲದ ವೈದ್ಯಕೀಯ ಯಂತ್ರೋಪಕರಣಗಳನ್ನು ಕಾರ್ಯಾಚರಣೆಗೆ ಬಳಸಿದ್ದೇ ಅವಘಡಕ್ಕೆ ಕಾರಣ ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆಯಂತೆ ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ನೇತೃತ್ವದ ತನಿಖಾ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಅಗ್ನಿ ಕಾಣಿಸಿಕೊಂಡ ಆಪರೇಷನ್ ಥಿಯೇಟರ್‌ನಲ್ಲಿದ್ದ ಅರಿವಳಿಕೆ ವರ್ಕ್ ಸ್ಟೇಷನ್ ಸೇರಿದಂತೆ ಹಲವು ಪ್ರಮುಖ ಸಾಧನಗಳು ತಾಂತ್ರಿಕ ದೋಷದಿಂದ ಬಳಲುತ್ತಿದ್ದವು ಎಂದು ಪತ್ತೆಯಾಗಿದೆ.

ಯಂತ್ರಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಸಂಪೂರ್ಣ ಹಾಳಾಗಿದ್ದರೂ ಅವುಗಳನ್ನು ಬದಲಾಯಿಸದಿರುವುದು ತನಿಖೆಯ ಪ್ರಮುಖ ಅಂಶವಾಗಿದೆ. ನಿರ್ವಹಣೆ ಹೊತ್ತಿದ್ದ ಖಾಸಗಿ ಏಜೆನ್ಸಿ ಈ ಬಗ್ಗೆ ಮೊದಲೇ ಆಸ್ಪತ್ರೆ ಆಡಳಿತಕ್ಕೆ ಲಿಖಿತ ಎಚ್ಚರಿಕೆ ನೀಡಿದ್ದರೂ, ಅದನ್ನು ಗಂಭೀರವಾಗಿ ಪರಿಗಣಿಸದೇ ಅದೇ ಯಂತ್ರಗಳನ್ನು ಬಳಸಲಾಗಿದೆ ಎಂಬುದು ವರದಿಯಲ್ಲಿ ಉಲ್ಲೇಖವಾಗಿದೆ. ಈ ನಿರ್ಲಕ್ಷ್ಯವೇ ಜೂನ್ 30ರಂದು ಸಂಭವಿಸಿದ ಅಗ್ನಿ ಅವಘಡಕ್ಕೆ ಕಾರಣವಾಗಿರಬಹುದು ಎಂದು ತನಿಖಾ ತಂಡ ಶಂಕಿಸಿದೆ.

ಪ್ರಕರಣವನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸಚಿವ ಯುಟಿ ಖಾದರ್ ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಸಚಿವರ ಸೂಚನೆಯಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಮುಖ್ಯ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯಿಂದ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹಿಸಿದೆ.

ಉಪ ವಿಭಾಗಾಧಿಕಾರಿಗಳ ಅಂತಿಮ ವರದಿ ಜಿಲ್ಲಾಧಿಕಾರಿಗಳ ಕೈ ಸೇರಿದ ಬಳಿಕ ತಪ್ಪಿತಸ್ಥ ಅಧಿಕಾರಿಗಳು, ವೈದ್ಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರಿನ ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ! FIR ದಾಖಲು

ಬೆಂಗಳೂರು: ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದಲ್ಲಿರುವ ಸೊಸೈಟಿ ಜನರಲ್ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಸಂಬಂಧ HAL ಪೊಲೀಸ್ ಠಾಣೆಯಲ್ಲಿ ಐವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಕ್ಕಳ ಸಹಾಯವಾಣಿಗೆ ವಿಡಿಯೋ ಸಹಿತ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ದೂರು ಆಧಾರವಾಗಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ  ಹಾಗೂ ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪದ ಪ್ರಕಾರ, ಬೇಬಿ ಕೇರ್‌ನಲ್ಲಿ ಮಕ್ಕಳು ಅಳುವುದು ಅಥವಾ ಗಲಾಟೆ ಮಾಡುವ ಸಂದರ್ಭಗಳಲ್ಲಿ ಸಿಬ್ಬಂದಿ ಹಿಂಸೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಮಕ್ಕಳನ್ನು ವಾಶಿಂಗ್ ಮಷಿನ್ ಒಳಗೆ ಕೂರಿಸುವುದು, ವೆಸ್ಟರ್ನ್ ಕಮೋಡ್‌ನಲ್ಲಿ ಕೂರಿಸಿ ಪೈಪ್ ಮೂಲಕ ನೀರು ಬಿಡುವುದು ಹಾಗೂ ವಾಶ್ ರೂಮ್‌ನಲ್ಲಿ ಕೂಡಿ ಹಾಕುವುದು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ವಿಡಿಯೋಗಳ ಸಹಿತ ದೂರು ಬಂದ ನಂತರ ಮಕ್ಕಳ ಸಹಾಯವಾಣಿ ಪ್ರತಿನಿಧಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ HAL ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಹೇಳಿಕೆ ನೀಡಿದ್ದು, ವಿಡಿಯೋಗಳ ಸತ್ಯಾಸತ್ಯತೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವೈರಲ್ ಆಗಿರುವ ವಿಡಿಯೋ ಹಳೆಯದು ಎಂಬ ಮಾಹಿತಿ ಹೊರಬಂದಿದೆ. ಈ ಬೇಬಿ ಕೇರ್ ಅನ್ನು CAPGEMINI TECHNOLOGY SERVICES ಕಂಪನಿ ಉದ್ಯೋಗಿಗಳ ಮಕ್ಕಳ ಆರೈಕೆಗೆ ನಡೆಸಲಾಗುತ್ತಿತ್ತು ಎಂಬುದೂ ತಿಳಿದುಬಂದಿದೆ.

ಸದ್ಯ ಸುಮಾರು 18 ಮಕ್ಕಳು ಈ ಕೇಂದ್ರದಲ್ಲಿ ಇರುತ್ತಿದ್ದು, ಘಟನೆ ನಂತರ ಅಲ್ಲಿಗೆ ಹೊಸ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ರೋಟರಿ ಕ್ಲಬ್‌ನಲ್ಲಿ ಯಶಸ್ವಿ ರಕ್ತದಾನ ಶಿಬಿರ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ರೋಟರಿ ಕ್ಲಬ್, ಬಸವೇಶ್ವರ ಬ್ಲಡ್ ಸೆಂಟರ್ ಹಾಗೂ ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಗರದ ರೋಟರಿ ಐಕೇರ್ ಸೆಂಟರ್‌ನಲ್ಲಿ ಬುಧವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

ರೋಟರಿ ಕ್ಲಬ್‌ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವೈದ್ಯರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 10ಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.

ರೋಟರಿ 3170ರ ಸಹಾಯಕ ಜಿಲ್ಲಾ ಗವರ್ನರ್ ಶ್ರೀಧರಗೌಡ ಎ. ಧರ್ಮಾಯತ, ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟ, ಕಾರ್ಯದರ್ಶಿ ಅಕ್ಷಯ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಡಾ. ಆರ್.ಜಿ. ಗಚ್ಚಿನಮಠ, ನಿಕಟಪೂರ್ವ ಕಾರ್ಯದರ್ಶಿ ಸುರೇಶ ಕುಂಬಾರ, ಶ್ರೀಧರ ಸುಲ್ತಾನಪೂರ, ಡಾ. ಆರ್.ಬಿ. ಉಪ್ಪಿನ, ವಿಶ್ವನಾಥ ಯಳಮಲಿ, ಇನ್ನರ್‌ವ್ಹೀಲ್ ಕ್ಲಬ್‌ನ ಮಂಜುಳಾ ಅಕ್ಕಿ, ಅಶ್ವಿನಿ ಜಗತಾಪ, ಶಿವಲೀಲಾ ಅಕ್ಕಿ, ಸುಶೀಲಾ ಕೋಟಿ, ನೀಲಾಂಭಿಕಾ ಉಗಲಾಟ, ಸವಿತಾ ಧರ್ಮಾಯತ, ಸಂಧ್ಯಾ ಕೋಟಿ, ಶಿಲ್ಪಾ ಅಕ್ಕಿ, ಪುಷ್ಪಾ ಭಂಡಾರಿ, ಮೀನಾಕ್ಷಿ ಕೊರವನವರ, ಸುವರ್ಣಾ ವಸ್ತ್ರದ, ವೀಣಾ ಕಾವೇರಿ ಹಾಗೂ ರೋಟ್ರಾಕ್ಟ್ ಕ್ಲಬ್‌ನ ಸನ್ಮತಿ, ಸುಮಾ, ಭಾನುಪ್ರಕಾಶ, ಶ್ರುಜನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮಳೆ ಕೊರತೆಗೆ ಮೆಕ್ಕೆಜೋಳ ಬೆಳೆ ಬಲಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ, ಸೂರಣಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದ್ದ ಮೆಕ್ಕೆಜೋಳದ ಬೆಳೆ ಒಣಗುತ್ತಿದ್ದು, ರೈತರು ಅನಿವಾರ್ಯವಾಗಿ ಬೆಳೆ ಹರಗುತ್ತಿದ್ದಾರೆ.

ಮೇ ಕೊನೆ ಹಾಗೂ ಜೂನ್ ಮೊದಲ ವಾರದಲ್ಲಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಕೃಷಿ ಔಷಧ ಖರೀದಿಸಿ ಬಿತ್ತನೆ ಮಾಡಿದ್ದರು. ಆರಂಭದಲ್ಲಿ ಸುರಿದ ಅಲ್ಪ ಮಳೆಯ ಬಳಿಕ ಮಳೆ ಸಂಪೂರ್ಣ ನಿಂತಿದ್ದರಿಂದ ತೇವಾಂಶದ ಕೊರತೆಯಿಂದ ಬೆಳೆ ಬಾಡಿ ಒಣಗಿದೆ. ಈಗ ಮಳೆ ಬಂದರೂ ಬೆಳೆ ಚೇತರಿಸಿಕೊಳ್ಳುವ ಸಾಧ್ಯತೆ ಇಲ್ಲದ ಕಾರಣ ರೈತರು ಹೊಲಗಳನ್ನು ಮತ್ತೆ ಉಳುಮೆ ಮಾಡುತ್ತಿದ್ದಾರೆ.

ಒಂದು ಎಕರೆಗೆ 15ರಿಂದ 20 ಸಾವಿರ ರೂ.ವರೆಗೆ ವೆಚ್ಚ ಮಾಡಿರುವ ರೈತರು ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ಮರುಪಾವತಿ, ಜಾನುವಾರುಗಳಿಗೆ ಮೇವು ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಮಳೆಗಾಗಿ ಕೆಲ ಗ್ರಾಮಗಳಲ್ಲಿ ವಿಶೇಷ ಪೂಜೆಗಳನ್ನೂ ನಡೆಸಲಾಗುತ್ತಿದೆ.

ರೈತ ಮುಖಂಡ ಗಂಗಾಧರ ಗಾಣಿಗೇರ ಮಾತನಾಡಿ, “ಈ ಭಾಗದಲ್ಲಿ ಮೆಕ್ಕೆಜೋಳದ ಬೆಳೆ ಸಂಪೂರ್ಣ ಹಾಳಾಗುತ್ತಿದೆ. ಸರ್ಕಾರ ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ, ಬರಪೀಡಿತ ಪ್ರದೇಶವೆಂದು ಘೋಷಿಸಿ ಸೂಕ್ತ ಪರಿಹಾರ, ಬೆಳೆ ವಿಮೆ ಹಾಗೂ ಕೃಷಿ ಸಾಲ ಮರುಪಾವತಿಗೆ ವಿನಾಯಿತಿ ನೀಡಬೇಕು. ಮುಂದಿನ ಬಿತ್ತನೆಗೆ ವಿಶೇಷ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು,” ಎಂದು ಆಗ್ರಹಿಸಿದರು.

ರೈತರು ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕು: ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ.

ಜಲಾಶಯಕ್ಕೆ ಸದ್ಯ 858 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಮಳೆಯ ಪ್ರಮಾಣದಲ್ಲಿ ಆಗಿರುವ ಹೆಚ್ಚಳದಿಂದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀರಿನ ಮಟ್ಟ ಮತ್ತು ಸಂಗ್ರಹ ಸಾಮರ್ಥ್ಯವನ್ನು ನಿರಂತರವಾಗಿ ಗಮನದಲ್ಲಿಟ್ಟುಕೊಂಡಿರುವ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ 180 ಕ್ಯೂಸೆಕ್ ನೀರನ್ನು ನದಿಗೆ ಹೊರಹರಿಸುತ್ತಿದ್ದಾರೆ.

ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನಿರಂತರ ಮೇಲ್ವಿಚಾರಣೆ ನಡೆಯುತ್ತಿದ್ದು, ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂದಿನ ದಿನಗಳಲ್ಲೂ ಮಳೆ ಮುಂದುವರಿದರೆ ಒಳಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.