Home Blog Page 4

ಬೆಂಗಳೂರು ಸೇರಿ ಕರ್ನಾಟಕದಲ್ಲಿ ಗಾಳಿಯ ಗುಣಮಟ್ಟ ಅತ್ಯುತ್ತಮ; ಇಂದು AQI ಎಷ್ಟಿದೆ?

ಬೆಂಗಳೂರು: ಸಕ್ರಿಯ ಮುಂಗಾರು ಮಳೆಯ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಮಟ್ಟದಲ್ಲಿದ್ದು, ವಾಯು ಮಾಲಿನ್ಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಬೆಂಗಳೂರಿನ ಸರಾಸರಿ AQI ಇಂದು 38 ರಿಂದ 41ರ ನಡುವೆ ದಾಖಲಾಗಿದೆ. ನಗರದ PM10 ಪ್ರಮಾಣ ಸುಮಾರು 47 ಮೈಕ್ರೋಗ್ರಾಂ/ಘನ ಮೀಟರ್ ಹಾಗೂ PM2.5 ಪ್ರಮಾಣ 20 ಮೈಕ್ರೋಗ್ರಾಂ/ಘನ ಮೀಟರ್ ಆಗಿದ್ದು, ಗಾಳಿಯ ಗುಣಮಟ್ಟ ‘ಉತ್ತಮ’ (Good) ವರ್ಗದಲ್ಲಿದೆ.

ಜಯನಗರ, ಮಲ್ಲೇಶ್ವರಂ ಹಾಗೂ ಕೆಂಗೇರಿ ಪ್ರದೇಶಗಳಲ್ಲಿ ಅತ್ಯಂತ ಶುದ್ಧ ಗಾಳಿ ದಾಖಲಾಗಿದ್ದು, ಸಿಲ್ಕ್ ಬೋರ್ಡ್, ಹೆಬ್ಬಾಳ ಮತ್ತು ಟಿನ್‌ಫ್ಯಾಕ್ಟರಿ ಜಂಕ್ಷನ್‌ಗಳಲ್ಲಿಯೂ AQI 50 ರಿಂದ 68ರ ನಡುವೆ ದಾಖಲಾಗಿದ್ದು, ಸಾಧಾರಣ ಮಟ್ಟದಲ್ಲಿದೆ.

ರಾಜ್ಯದ ಇತರೆ ಪ್ರಮುಖ ನಗರಗಳಲ್ಲೂ ಗಾಳಿಯ ಗುಣಮಟ್ಟ ಉತ್ತಮವಾಗಿದೆ. ಮೈಸೂರು ಹಾಗೂ ಮಡಿಕೇರಿಯಲ್ಲಿ AQI 30 ರಿಂದ 35ರ ನಡುವೆ ದಾಖಲಾಗಿದ್ದು, ರಾಜ್ಯದಲ್ಲೇ ಅತ್ಯಂತ ಶುದ್ಧ ವಾತಾವರಣ ಇರುವ ನಗರಗಳಾಗಿವೆ. ಕೋಲಾರ ಮತ್ತು ತುಮಕೂರಿನಲ್ಲಿ AQI 45 ರಿಂದ 50ರ ನಡುವೆ ಇದ್ದು, ಉತ್ತಮ ಶ್ರೇಣಿಯಲ್ಲಿದೆ.

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿಯಲ್ಲಿ AQI 50 ರಿಂದ 65ರ ನಡುವೆ ದಾಖಲಾಗಿದ್ದು, ಸಾಧಾರಣ ಮಟ್ಟದಲ್ಲಿದೆ. ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ನಿರಂತರ ಮಳೆಯ ಪರಿಣಾಮ AQI 32ಕ್ಕಿಂತ ಕಡಿಮೆಯಿದ್ದು, ಅತ್ಯಂತ ಉತ್ತಮ ಗಾಳಿಯ ಗುಣಮಟ್ಟ ದಾಖಲಾಗಿದೆ.

ತಜ್ಞರ ಪ್ರಕಾರ, ಮುಂಗಾರು ಮಳೆಯ ಪರಿಣಾಮ ಧೂಳು ಹಾಗೂ ಹೊಗೆಯ ಕಣಗಳ ಪ್ರಮಾಣ ಕಡಿಮೆಯಾಗಿರುವುದರಿಂದ ಗಾಳಿಯ ಗುಣಮಟ್ಟ ಸುಧಾರಿಸಿದೆ. ಹೀಗಾಗಿ ಉಸಿರಾಟದ ಸಮಸ್ಯೆ ಇರುವವರು, ಹಿರಿಯ ನಾಗರಿಕರು ಹಾಗೂ ಮಕ್ಕಳಿಗೂ ಹೊರಾಂಗಣ ಚಟುವಟಿಕೆಗಳಿಗೆ ಯಾವುದೇ ವಿಶೇಷ ತೊಂದರೆಯಿಲ್ಲ. ಮುಂಗಾರು ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ರಾಜ್ಯದ ವಾಯು ಗುಣಮಟ್ಟ ಮುಂದಿನ ದಿನಗಳಲ್ಲೂ ಉತ್ತಮ ಮಟ್ಟದಲ್ಲೇ ಇರುವ ಸಾಧ್ಯತೆ ಇದೆ.

ಆನೇಕಲ್‌ನಲ್ಲಿ ಭಾರಿ ಮಳೆಗೆ ಖಾಸಗಿ ಶಾಲೆಯ ಗೋಡೆ ಕುಸಿತ; ಇಂದು ಶಾಲೆಗೆ ರಜೆ ಘೋಷಣೆ

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಖಾಸಗಿ ಶಾಲೆಯ ಕಾಂಪೌಂಡ್‌ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕುಸಿದ ಗೋಡೆಯ ಪಕ್ಕದಲ್ಲಿದ್ದ ಕಟ್ಟಡದಲ್ಲಿ ವಾಸಿಸುತ್ತಿದ್ದ ಎರಡು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೆ, ಅಪಾಯದ ಹಿನ್ನೆಲೆಯಲ್ಲಿ ಆ ರಸ್ತೆಯಲ್ಲಿ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಶಾಲೆಗೆ ರಜೆ ಘೋಷಿಸಲಾಗಿದೆ. ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್‌ಗಳು ಕಟ್ಟಡವನ್ನು ಪರಿಶೀಲಿಸಿ ಸುರಕ್ಷಿತವಾಗಿದೆ ಎಂದು ವರದಿ ನೀಡಿದ ಬಳಿಕವೇ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಸೂಚಿಸಲಾಗಿದೆ.

ಸ್ಥಳೀಯ ಆಡಳಿತವು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಗದಗ ಜಿಲ್ಲೆಗೆ ₹78 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ

0

ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಗದಗ ಜಿಲ್ಲೆಯ ರೈತರಿಗೆ ₹78 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ.

ಹತ್ತಿ, ಶೇಂಗಾ, ಮೆಕ್ಕೆಜೋಳ, ಈರುಳ್ಳಿ, ತೊಗರಿ, ಭತ್ತ ಹಾಗೂ ಸಜ್ಜೆ ಬೆಳೆಗಳಿಗೆ ಬೆಳೆ ಕಟಾವು ಆಧಾರಿತ ವಿಮೆ ಪರಿಹಾರವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

38 ವರ್ಷ ದೇಶಸೇವೆ ಸಲ್ಲಿಸಿದ ಯೋಧನಿಗೆ ಅಭೂತಪೂರ್ವ ಸ್ವಾಗತ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಭದ್ರತಾ ಪಡೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಸಬ್ ಇನ್‌ಸ್ಪೆಕ್ಟರ್ ರಾಚಪ್ಪ ಮಸಗಿ ಅವರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ಭವ್ಯ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ರೋಣ ತಾಲೂಕಿನ ನಾಗರಾಳ ಮೂಲದ ಹಾಗೂ ನರಸಾಪುರ ನಿವಾಸಿಯಾಗಿರುವ ರಾಚಪ್ಪ ಮಸಗಿ ಅವರು ಭಾರತೀಯ ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಾಪಸ್ಸಾದ ಹಿನ್ನೆಲೆಯಲ್ಲಿ, ಗದಗ ರೈಲ್ವೆ ನಿಲ್ದಾಣದಲ್ಲಿ ಮಾಜಿ ಸೈನಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ ನೇತೃತ್ವದಲ್ಲಿ ಹೂವಿನ ಸುರಿಮಳೆಗೈದು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಬಳಿಕ ರೈಲ್ವೆ ನಿಲ್ದಾಣದಿಂದ ಹೆಲ್ತ್ ಕ್ಯಾಂಪ್, ಬೆಟಗೇರಿ ಮಾರ್ಗವಾಗಿ ನರಸಾಪುರದವರೆಗೆ ದೇಶಭಕ್ತಿ ಗೀತೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ನಂತರ ನಡೆದ ಸಮಾರಂಭದಲ್ಲಿ ರಾಚಪ್ಪ ಮಸಗಿ ಅವರ ಕುಟುಂಬದವರು ಮಾಜಿ ಸೈನಿಕರು ಹಾಗೂ ವೀರನಾರಿಯರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ದೇಶದ ಗಡಿಯಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶವನ್ನು ಕಾಪಾಡುವ ಸೈನಿಕರ ಸೇವೆ ಅತ್ಯಂತ ಶ್ರೇಷ್ಠವಾಗಿದೆ. ಇಂದು ನಾವೆಲ್ಲರೂ ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಭಾರತೀಯ ಸೈನಿಕರ ತ್ಯಾಗವೇ ಕಾರಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರು, ವೀರನಾರಿಯರು, ಅರೆಸೇನಾ ಪಡೆಗಳ ಯೋಧರು ಹಾಗೂ ನಾಗರಾಳ ಮತ್ತು ನರಸಾಪುರ ಗ್ರಾಮದ ಗಣ್ಯರು, ಸಾರ್ವಜನಿಕರು ಮತ್ತು ದೇಶಪ್ರೇಮಿಗಳು ಉಪಸ್ಥಿತರಿದ್ದರು.

ಜೀತ ಪದ್ಧತಿ-ಮಾನವ ಕಳ್ಳಸಾಗಾಣಿಕೆಗೆ ಕಡಿವಾಣ ಅಗತ್ಯ: ಸಿ.ಎಸ್. ಶಿವನಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: “ಶಾಲೆಯಿಂದ ಹೊರಗುಳಿಯುವ ಮಕ್ಕಳು ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿಯ ಮೊದಲ ಬಲಿಗಳಾಗುತ್ತಿದ್ದಾರೆ. ಪ್ರತಿಯೊಬ್ಬ ಮಗುವಿಗೂ ಶಿಕ್ಷಣದ ಹಕ್ಕು ತಲುಪಿದರೆ ಈ ಸಾಮಾಜಿಕ ಪಿಡುಗನ್ನು ಆರಂಭದಲ್ಲೇ ತಡೆಗಟ್ಟಬಹುದು” ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉದಯೋನ್ಮುಖ ಸ್ವಯಂಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿ ಕಾರ್ಮಿಕ ವಿರೋಧಿ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರೊಂದಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಮಾನವ ಕಳ್ಳಸಾಗಾಣಿಕೆ ಮತ್ತು ಜೀತ ಪದ್ಧತಿ ಸಮಾಜದ ಘೋರ ಪಿಡುಗುಗಳಾಗಿದ್ದು, ಅವುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಕೆಲಸಕ್ಕೆ ತಕ್ಕ ವೇತನ ನೀಡದೆ ದುಡಿಸಿಕೊಳ್ಳುವುದೂ ಜೀತ ಪದ್ಧತಿಯ ಒಂದು ರೂಪವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ಸಮಾಜ ಜಾಗೃತವಾಗಬೇಕು ಎಂದು ಹೇಳಿದರು.

ಜೀತ ಪದ್ಧತಿಯಿಂದ ಮುಕ್ತಗೊಳಿಸುವುದಷ್ಟೇ ಸಾಕಾಗುವುದಿಲ್ಲ. ಸಂತ್ರಸ್ತರಿಗೆ ಬಿಡುಗಡೆ ಪತ್ರ, ಆರ್ಥಿಕ ನೆರವು, ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಪುನರ್ವಸತಿ ಕಲ್ಪಿಸಿದಾಗ ಮಾತ್ರ ಅವರಿಗೆ ನಿಜವಾದ ನ್ಯಾಯ ದೊರೆಯುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜೀತ ಪದ್ಧತಿ ನಡೆಸುವವರಷ್ಟೇ ಅಲ್ಲ, ಅದನ್ನು ಕಂಡೂ ಮೌನವಾಗಿರುವವರೂ ತಪ್ಪಿತಸ್ಥರಾಗುತ್ತಾರೆ. ಇಂತಹ ಪ್ರಕರಣಗಳು ಕಂಡುಬಂದ ತಕ್ಷಣ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಉದಯೋನ್ಮುಖ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ವೈ. ಪಕ್ಕಣ್ಣ ಬೆಲೇರಿ ಮಾತನಾಡಿ, ಜೀತ ಪದ್ಧತಿಯಿಂದ ಮುಕ್ತರಾದ ಸಂತ್ರಸ್ತರ ಅನುಭವಗಳನ್ನೇ ಆಧಾರವಾಗಿಟ್ಟುಕೊಂಡು ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ. ಯಾರೂ ಅಜ್ಞಾನದಿಂದ ಊರು ಬಿಟ್ಟು ಹೋಗಿ ಇಂತಹ ಸಂಕಷ್ಟಗಳಿಗೆ ಸಿಲುಕಬಾರದು ಎಂಬ ಉದ್ದೇಶದಿಂದ ಅಭಿಯಾನ ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದ್ದು, ಜಿ-ಸ್ಕ್ವಾಡ್ ತಂಡದಿಂದ ಕಿರು ನಾಟಕ ಪ್ರದರ್ಶನ ನಡೆಯಿತು. ಬಳಿಕ ಜಾಗೃತಿ ವಾಹನವು ಲಕ್ಕುಂಡಿ, ನಾಗರಾಳ, ಹಳಿಕೇರಿ, ಗದಗ ನಗರ ಸೇರಿದಂತೆ ವಿವಿಧೆಡೆ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ನೀಲಗುಂದ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂದೀಪ್ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

“ಶಾಲೆ ಬಿಟ್ಟ ಪ್ರತಿಯೊಂದು ಮಗುವನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ತರುವುದು ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿ ನಿರ್ಮೂಲನೆಯ ಮೊದಲ ಹೆಜ್ಜೆಯಾಗಿದೆ.”
– ಸಿ.ಎಸ್. ಶಿವನಗೌಡ್ರ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

‘ಹೂಗಾರ’ ಡಬ್ಬಿಂಗ್ ಪೂರ್ಣ; ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕೀರ್ತನ ಮೂವ್ಹಿ ಮೇಕರ್ಸ್ ಹಾಗೂ ಕೆಆರ್‌ಎಸ್ ಪ್ರೊಡಕ್ಷನ್, ಬೆಂಗಳೂರು ಬ್ಯಾನರ್ ಅಡಿಯಲ್ಲಿ ಡಾ. ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಿರ್ಮಾಣವಾಗಿರುವ ‘ಹೂಗಾರ’ ಕನ್ನಡ ಚಲನಚಿತ್ರದ ಡಬ್ಬಿಂಗ್ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಗದಗ ನಗರದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಗೊಳ್ಳಲಿದೆ.

ಚಿತ್ರದ ಚಿತ್ರೀಕರಣವನ್ನು ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸಿದ್ದನಕೊಳ್ಳ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 30 ದಿನಗಳ ಕಾಲ ನಡೆಸಲಾಗಿದೆ. ಉತ್ತರ ಕರ್ನಾಟಕದ ಭಾಷೆ, ಸಂಸ್ಕೃತಿ ಮತ್ತು ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಿರುವುದು ಚಿತ್ರದ ವಿಶೇಷವಾಗಿದೆ.

ಶ್ರೀಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ಮತ್ತೊಂದು ವಿಶೇಷ. “ಇದು ಕೇವಲ ಒಂದು ಕಂಬವಲ್ಲ; ಕರ್ನಾಟಕದ ಆತ್ಮ, ಶಕ್ತಿ, ಶಿಸ್ತು ಮತ್ತು ಸಾಧನೆಯ ಪ್ರತೀಕ” ಎಂದು ಚಿತ್ರದ ನಿರ್ದೇಶಕ ಲೋಕೇಶ್ ವಿದ್ಯಾಧರ ತಿಳಿಸಿದ್ದಾರೆ.

ಚಿತ್ರದಲ್ಲಿ ಲೋಕೇಶ್ ವಿದ್ಯಾಧರ, ಸುನಂದಾ ಕಲ್ಬುರ್ಗಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ದಾನಪ್ಪ, ಮಾಂತೇಶ್ ಹಳ್ಳೂರ, ತೇಜಸ್ ಶಿವರಾಜ್, ಕಿರಣ್ ಹೂಗಾರ, ಅಪೂರ್ವ, ಮುತ್ತುರಾಜ್ ಬುದ್ನಿ, ಕಿಟ್ಟಿ ತಾಳಿಕೋಟೆ, ಕುಮಾರ್ ಬಾಬು, ಸತೀಶ್ ಶೆಟ್ಟಿ, ಮಂಜುಳಾ ಅರಸ್, ಭಾವನಾ ಶಿಂಧೆ, ವಿದ್ಯಾ ಗಂಜಿಹಾಳ, ದಶರಥ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ಮಲ್ಲಕಂಬ ಪ್ರದರ್ಶನವನ್ನು ಸಿದ್ಧಾರೂಢ ಹೂಗಾರ ಹಾಗೂ ಜೈ ಕರ್ನಾಟಕ ಮಲ್ಲಕಂಬ ತಂಡ ನಿರ್ವಹಿಸಿದ್ದು, ಸಂಭಾಷಣೆಯನ್ನು ಶಿವಂ ಬೆಂಗೇರಿ, ಸಾಹಿತ್ಯವನ್ನು ಲೋಕೇಶ್ ವಿದ್ಯಾಧರ, ಶಿವರಾಜ್ ಹಾಗೂ ಕಿನ್ನಾಳ ರಾಜ್ ರಚಿಸಿದ್ದಾರೆ. ಈ ಹಿಂದೆ ‘ಒಬ್ಬಟ್ಟು’ ಚಿತ್ರ ನಿರ್ದೇಶಿಸಿದ್ದ ಲೋಕೇಶ್ ವಿದ್ಯಾಧರ ಅವರೇ ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಚಿತ್ರಕ್ಕೆ ಕೀರ್ತನ ಮೂವ್ಹಿ ಮೇಕರ್ಸ್ ಹಾಗೂ ಕೆಆರ್‌ಎಸ್ ಪ್ರೊಡಕ್ಷನ್ ನಿರ್ಮಾಪಕರಾಗಿದ್ದು, ಟ್ರೇಲರ್ ಬಿಡುಗಡೆ ಬಳಿಕ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ನಾಳಿನ ಸಮಾಜಕ್ಕಾಗಿ ಇಂದೇ ವ್ಯಸನ ವಿರೋಧಿ ಸಂಕಲ್ಪ

0

ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ (ನಂ.2)ಯಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಲಬ್ ಅಧ್ಯಕ್ಷೆ ಮಂಜುಳಾ ಅಕ್ಕಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಸಮಾಜದಲ್ಲಿ ಮಾದಕ ವ್ಯಸನ ತಡೆಗೆ ಸಹಕಾರಿಯಾಗಲಿವೆ ಎಂದು ಹೇಳಿದರು.

ಪ್ರಬಂಧ ಸ್ಪರ್ಧೆಯಲ್ಲಿ ಐದನೇ ತರಗತಿಯ ಜಯಶ್ರೀ ಕೊತಬಾಳ, ವಿದ್ಯಾಶ್ರೀ ಕನ್ನೂರ ಹಾಗೂ ಮುಸ್ಕಾನ್ ಇಲಿ, ಆರನೇ ತರಗತಿಯ ಶಿಫಾ ಎಂಡಿಗೇರಿ, ಅರ್ಪಿತಾ ಮರಾಠಿ ಹಾಗೂ ಸಫಾ ಪಾಟೀಲ್, ಏಳನೇ ತರಗತಿಯ ಪ್ರಿಯಾಂಕ ಹಡಪದ, ಜಾಕಿರಾ ನದಾಫ್ ಹಾಗೂ ಶ್ರೀದೇವಿ ಅಯಾರ್ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು. ಕ್ಲಬ್ ವತಿಯಿಂದ ವಿಜೇತರಿಗೆ ಬಹುಮಾನ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ಪೆನ್ನು ಮತ್ತು ಸಿಹಿ ವಿತರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಎಂ. ರೇಷ್ಮಿ ಮಾತನಾಡಿ, ಇನ್ನರ್ ವೀಲ್ ಕ್ಲಬ್‌ನ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು. ಶಾಲೆಯ ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಈ ಸಂದರ್ಭದಲ್ಲಿ ಕ್ಲಬ್‌ನ ಉಪಾಧ್ಯಕ್ಷೆ ಶಿವಲೀಲಾ ಅಕ್ಕಿ, ಕಾರ್ಯದರ್ಶಿ ಪೂಜಾ ಭೂಮಾ, ಸಂಪಾದಕಿ ಮೀನಾಕ್ಷಿ ಕೊರವನವರ, ಸಿಪಿಸಿಸಿ ಜಯಶ್ರೀ ಉಗಲಾಟದ, ಕೋ-ಸಿಪಿಸಿಸಿ ಶಾರದಾ ಸಜ್ಜನರ, ಮಾಜಿ ಅಧ್ಯಕ್ಷೆ ನೀಲಾಂಬಿಕಾ ಉಗಲಾಟದ, ಹಿರಿಯ ಸದಸ್ಯೆ ಸುಶೀಲಾ ಕೋಟಿ, ಶಿಕ್ಷಕರಾದ ಇಂದಿರಾಬಾಯಿ ಎಸ್.ವಿ., ಪಿ.ಎಫ್. ನಾಗನೂರ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಖಜಾಂಚಿ ವೀಣಾ ಕಾವೇರಿ ನಿರೂಪಿಸಿದರು.

ಗೊಲ್ಲ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಗೊಲ್ಲ (ಯಾದವ) ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿರುವ ಗದಗ ಜಿಲ್ಲಾ ಗೊಲ್ಲ (ಯಾದವ) ಸಂಘ, ಶಾಸಕ ಡಿ.ಟಿ. ಶ್ರೀನಿವಾಸ್ ಹಾಗೂ ಶಾಸಕ ಎಂ. ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಗದಗ ಜಿಲ್ಲಾ ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ಕಾರ್ಯಕಾರಿಣಿ ಸದಸ್ಯ ಹರೀಶ ಪೂಜಾರ, ದಿವಂಗತ ಎ. ಕೃಷ್ಣಪ್ಪ ಹಾಗೂ ಮುನಿಯಪ್ಪ ಮುದ್ದಪ್ಪ ಅವರ ನಂತರ ಯಾವುದೇ ಸರ್ಕಾರದಲ್ಲಿ ಗೊಲ್ಲ ಸಮುದಾಯಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಇದು ಸಮುದಾಯದ ನಿರ್ಲಕ್ಷ್ಯದ ಸಂಕೇತವಾಗಿದ್ದು, ತಕ್ಷಣವೇ ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೊಲ್ಲ (ಯಾದವ) ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಮಧ್ಯಪ್ರವೇಶಿಸಿ, ಡಿ.ಟಿ. ಶ್ರೀನಿವಾಸ್ ಹಾಗೂ ಎಂ. ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಶಕ್ತಿ ಯೋಜನೆ ಯಶಸ್ವಿ ಜಾರಿಗೆ ಶ್ರಮಿಸಿದ ಅಧಿಕಾರಿಗೆ ಗೌರವ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ ಗದಗ ವಿಭಾಗೀಯ ಕಚೇರಿಯ ಸಹಾಯಕ ಸಂಚಾರ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿರುವ ಸವಿತಾ ಆದಿ ಅವರನ್ನು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳ ಮಾತನಾಡಿ, ಸವಿತಾ ಆದಿ ಅವರು ಲಕ್ಷ್ಮೇಶ್ವರ ಘಟಕದಲ್ಲಿ ಆಡಳಿತಾತ್ಮಕ ದಕ್ಷತೆ, ಕಾರ್ಯನಿಷ್ಠೆ ಹಾಗೂ ಸಾರ್ವಜನಿಕ ಸ್ನೇಹಿ ಸೇವೆಯ ಮೂಲಕ ಉತ್ತಮ ಹೆಸರು ಗಳಿಸಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಹಿಳಾ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಸೇವೆ ಒದಗಿಸಿರುವುದು ಶ್ಲಾಘನೀಯವಾಗಿದೆ. ಅವರ ಸೇವಾ ಮನೋಭಾವ ಇತರ ಅಧಿಕಾರಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಲಕ್ಷ್ಮೇಶ್ವರ ಕೆಎಸ್‌ಆರ್‌ಟಿಸಿ ಘಟಕದ ನೂತನ ವ್ಯವಸ್ಥಾಪಕರಾಗಿ ಅಧಿಕಾರ ಸ್ವೀಕರಿಸಿರುವ ಪವಿತ್ರಾ ಪಿ. ಅವರನ್ನು ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಸಾರ್ವಜನಿಕ ಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿ ಶಕ್ತಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸುವಂತೆ ಶುಭ ಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ತಾಲೂಕು ಪಂಚಾಯಿತಿ ಅಧಿಕಾರಿಗಳು, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಆ. 8ರಂದು ಗದಗದಲ್ಲಿ ಸಂಗೀತ ಸಂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗಾನಲಹರಿ ಸಾಂಸ್ಕೃತಿಕ ಕಲಾ ಸಂಸ್ಥೆ, ಹಾವೇರಿ ಹಾಗೂ ಅಜೆಯ ಮ್ಯೂಜಿಕಲ್ ಅಕಾಡೆಮಿ, ಕೊಪ್ಪಳ ಇವರ ಸಹಯೋಗದಲ್ಲಿ ಆಗಸ್ಟ್ 8ರಂದು ಸಂಜೆ ನಗರದ ಭೀಮಸೇನ ಜೋಷಿ ರಂಗಮಂದಿರದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶ್ರೀನಾಥ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷೆ ಶೀಲಾ ಪಾಟೀಲ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ಪ.ಪೂ. ಡಾ. ಕಲ್ಲಯ್ಯಜ್ಜನವರು ಹಾಗೂ ಪ.ಪೂ. ಶಿವಶಾಂತವೀರ ಶರಣರು ವಹಿಸಲಿದ್ದು, ಫೀರಸಾಬ್ ಕೌತಾಳ್ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೀಲಾ ವೀರನಗೌಡ ಪಾಟೀಲ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ. ಎಚ್.ಕೆ. ಪಾಟೀಲ, ಜಿ.ಎಸ್. ಪಾಟೀಲ, ಸಿ.ಸಿ. ಪಾಟೀಲ, ಮುಖಂಡರಾದ ಸಚಿನ್ ಪಾಟೀಲ, ರಾಜಶೇಖರ ಕಲ್ಲೂರ, ಡಾ. ಬಸವರಾಜ ಬಳ್ಳಾರಿ, ಗವಿಸಿದ್ದಪ್ಪ ಪಲ್ಲೇದ, ಡಾ. ಶ್ರೀಧರ ಕುರಡಗಿ, ಸಿದ್ದರಾಮೇಶ್ವರ ಗಡೇದ, ವಿಜಯಕುಮಾರ ಗಡ್ಡಿ, ಇಮಾಮ್ ಮೊರಬದ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಮರ ಜವಳಿ ಹಾಗೂ ಶಶಾಂಕ್ ಗಜಾಕೋಶ ಉಪಸ್ಥಿತರಿದ್ದರು.