Home Blog Page 4

ತಮಿಳುನಾಡಿನಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

0

ನವದೆಹಲಿ: ತಮಿಳುನಾಡಿನಲ್ಲಿ ಬಕ್ರೀದ್ ಸೇರಿದಂತೆ ಯಾವುದೇ ದಿನ ಗೋವು ಮತ್ತು ಕರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ವೇಳೆ ಪೀಠ ರಾಜ್ಯ ಸರ್ಕಾರದ ಮನವಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದ್ದು, ಹೈಕೋರ್ಟ್ ಆದೇಶದ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ.

ವಿಚಾರಣೆ ವೇಳೆ ಹೈಕೋರ್ಟ್ ಆದೇಶದ ಕೊನೆಯ ಭಾಗವನ್ನು ಪ್ರಾಥಮಿಕ ಹಂತದಲ್ಲೇ ಮರುಪರಿಶೀಲನೆ ಮಾಡುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ತಮಿಳುನಾಡು ಸರ್ಕಾರ ತನ್ನ ಅರ್ಜಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಗೋಹತ್ಯೆಯನ್ನು ನಿಯಂತ್ರಿಸುವುದೇ ಉದ್ದೇಶವಾಗಿದ್ದು, ರಾಜ್ಯದ ಪ್ರಸ್ತುತ ಕಾನೂನು ಸಂಪೂರ್ಣ ನಿಷೇಧಕ್ಕೆ ಅವಕಾಶ ನೀಡುವುದಿಲ್ಲ ಎಂದು ವಾದಿಸಿದೆ. ಹೈಕೋರ್ಟ್ ನೀಡಿರುವ ಆದೇಶವು ರಾಜ್ಯದ ಶಾಸನಬದ್ಧ ಚೌಕಟ್ಟಿಗೆ ವಿರುದ್ಧವಾಗಿದ್ದು, ಕಾನೂನಿನಲ್ಲಿ ನಿಯಂತ್ರಣಕ್ಕೆ ಮಾತ್ರ ಅವಕಾಶವಿದೆ ಹೊರತು ಸಂಪೂರ್ಣ ನಿಷೇಧಕ್ಕೆ ಅವಕಾಶವಿಲ್ಲ ಎಂದು ಸರ್ಕಾರ ತಿಳಿಸಿದೆ.

ಈ ಪ್ರಕರಣವು ಹಿಂದೂ ಮಕ್ಕಳ್ ಕಚ್ಚಿಯ ಪ್ರಧಾನ ಕಾರ್ಯದರ್ಶಿ ಕೆ. ಸೂರ್ಯ ಪ್ರಶಾಂತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದ ಆರಂಭವಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮಿನಾರಾಯಣ್ ಅವರನ್ನೊಳಗೊಂಡ ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠವು ಮೇ 27ರಂದು, ಬಕ್ರೀದ್ ಹಬ್ಬದ ಮುನ್ನಾದಿನ ಈ ಆದೇಶ ನೀಡಿತ್ತು.

ಅರ್ಜಿದಾರರು ತಮ್ಮ ಮನವಿಯಲ್ಲಿ, ಕಾನೂನಿನಲ್ಲಿ ನಿಗದಿಪಡಿಸಿರುವ ವಧಾಸ್ಥಳಗಳಲ್ಲಿ ಮಾತ್ರ ಗೋಹತ್ಯೆ ನಡೆಯುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಆದರೆ ಹೈಕೋರ್ಟ್ ಯಾವುದೇ ದಿನ, ಯಾವುದೇ ಸ್ಥಳದಲ್ಲಿ ಗೋವು ಮತ್ತು ಕರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಆದೇಶ ಹೊರಡಿಸಿತ್ತು ಎಂದು ತಮಿಳುನಾಡು ಸರ್ಕಾರ ತನ್ನ ಮೇಲ್ಮನವಿಯಲ್ಲಿ ಉಲ್ಲೇಖಿಸಿದೆ.

ಹೈಕೋರ್ಟ್ ತನ್ನ ಆದೇಶದಲ್ಲಿ ಹಾಲು ಉತ್ಪಾದನೆ ಹೆಚ್ಚಿಸುವುದು ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶದಿಂದ ಹೊರಡಿಸಲಾದ ಸರ್ಕಾರಿ ಆದೇಶವನ್ನು ಉಲ್ಲೇಖಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ, ಪ್ರಕರಣದ ಮುಂದಿನ ವಿಚಾರಣೆ ಬಳಿಕ ಅಂತಿಮ ತೀರ್ಮಾನ ಹೊರಬೀಳಲಿದೆ.

ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ವಿಚಾರ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ

0

ನವದೆಹಲಿ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಗಳ ಸ್ವರೂಪವನ್ನು ಬದಲಾಯಿಸಿರುವ ಹೈಕೋರ್ಟ್ ಕ್ರಮದ ಬಗ್ಗೆ ನ್ಯಾಯಪೀಠ ಪ್ರಶ್ನೆ ಎತ್ತಿದೆ.

ಎಚ್.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಹೈಕೋರ್ಟ್ ಹಲ್ಲೆ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಯನ್ನು ರದ್ದುಪಡಿಸಿ, ಲೈಂಗಿಕ ದೌರ್ಜನ್ಯ ಆರೋಪದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠ, ಹೈಕೋರ್ಟ್ ಆದೇಶದ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಆರೋಪಿಯ ವಿರುದ್ಧದ ಚಾರ್ಜ್‌ಗಳನ್ನು ಬದಲಾಯಿಸಲು ಹೈಕೋರ್ಟ್ ಯಾವ ಆಧಾರದ ಮೇಲೆ ಮುಂದಾಗಿದೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ವಿಚಾರಣೆ ವೇಳೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪವಿದ್ದು, ಆ ಪ್ರಕರಣದಲ್ಲಿ ಚಾರ್ಜ್ ಫ್ರೇಮ್ ಆಗಿದೆ. ಆದರೆ ಎಚ್.ಡಿ. ರೇವಣ್ಣ ವಿರುದ್ಧದ ಆರೋಪಗಳು ವಿಭಿನ್ನವಾಗಿವೆ. ಒಂದೇ ಪ್ರಕರಣದ ಹಿನ್ನೆಲೆಯಲ್ಲಿ ತಂದೆಯ ಮೇಲೂ ಅತ್ಯಾಚಾರದ ಆರೋಪವನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೇಲ್ಮನವಿಯ ಕುರಿತು ಉತ್ತರ ಸಲ್ಲಿಸುವಂತೆ ಎಚ್.ಡಿ. ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಮುಂದೂಡಿದೆ.

ನಗರಸಭೆ ಮೇಲೆ ಲೋಕಾಯುಕ್ತರ ದಾಳಿ: ದಾಖಲೆಗಳ ಪರಿಶೀಲನೆ- ದಂಗಾದ ನಗರಸಭೆ ಅಧಿಕಾರಿಗಳು, ಸಿಬ್ಬಂದಿ

0

ಗದಗ: ಗದಗ-ಬೆಟಗೇರಿ ನಗರಸಭೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ನಗರಸಭೆ ಕಚೇರಿಗೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಹಾಗೂ ಎಂಜಿನಿಯರಿಂಗ್ ವಿಭಾಗಗಳಲ್ಲಿ ದಾಖಲೆಗಳ ಇಂಚಿಂಚು ಪರಿಶೀಲನೆ ನಡೆಸಿದರು. ಅಧಿಕಾರಿಗಳ ಪ್ರಶ್ನೆಗಳಿಗೆ ನಗರಸಭೆ ಸಿಬ್ಬಂದಿ ಉತ್ತರಿಸುವಲ್ಲಿ ತೊಡಗಿದ್ದರು.

ವಾಣಿಜ್ಯ ಕಟ್ಟಡಗಳ ಪರವಾನಗಿ ನೀಡುವಲ್ಲಿ ಅಕ್ರಮ, ನಗರಸಭೆ ಆಸ್ತಿಗಳ ಬಾಡಿಗೆ ಸಂಗ್ರಹದಲ್ಲಿ ಅಕ್ರಮ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 6 ಮಂದಿ ಸಿಪಿಐಗಳು ಹಾಗೂ 15ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು. ಗದಗ ಮತ್ತು ಧಾರವಾಡ ಲೋಕಾಯುಕ್ತ ಅಧಿಕಾರಿಗಳು ಸಂಯುಕ್ತವಾಗಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶೋಧ ಕಾರ್ಯ ಮುಂದುವರಿದಿದ್ದು, ದಾಖಲೆಗಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ರಾಮ ಮಂದಿರ ದೇಣಿಗೆ ವಿವಾದ: ಟ್ರಸ್ಟ್, UP ಸರ್ಕಾರಕ್ಕೆ ಸುಪ್ರೀಂ ನೋಟಿಸ್ ಜಾರಿ, ವರದಿ ಸಲ್ಲಿಸಲು ಸೂಚನೆ

0

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಸಂಗ್ರಹಿಸಲಾದ ದೇಣಿಗೆಗಳ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಂಡಿದೆ.

ಈ ಸಂಬಂಧ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತನಿಖೆಯ ಪ್ರಗತಿ ಕುರಿತು ಸ್ಥಿತಿಗತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. ಜೊತೆಗೆ, ಎಸ್‌ಐಟಿ ರಚನೆಗೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸುವಂತೆಯೂ ಸೂಚಿಸಿದೆ.

ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಎಸ್‌ಐಟಿ ಸಿದ್ಧಪಡಿಸಿರುವ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ, ರಾಮ ಮಂದಿರದಲ್ಲಿ ಸಂಗ್ರಹವಾಗಿರುವ ದೇಣಿಗೆಗಳ ನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಕೇಂದ್ರ ತನಿಖಾ ದಳ (ಸಿಬಿಐ) ಮೂಲಕ ತನಿಖೆ, ವಿಧಿವಿಜ್ಞಾನ ಲೆಕ್ಕಪರಿಶೋಧನೆ (Forensic Audit) ಹಾಗೂ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.

ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಈಗಾಗಲೇ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಹಲವರನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಇದೀಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

Stephen Fleming: 17 ವರ್ಷಗಳ ಬಳಿಕ CSKಗೆ ಗುಡ್ ಬೈ ಹೇಳಿದ ಸ್ಟೀಫನ್ ಫ್ಲೆಮಿಂಗ್!

0

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಕೆಳಗಿಳಿದಿದ್ದಾರೆ. ಇದರೊಂದಿಗೆ ಸುಮಾರು 17 ವರ್ಷಗಳ ಕಾಲ ಸಿಎಸ್ಕೆ ತಂಡದೊಂದಿಗೆ ಸಾಗಿದ ಅವರ ಯಶಸ್ವಿ ಪಯಣಕ್ಕೆ ತೆರೆ ಬಿದ್ದಿದೆ.

ತಂಡದ ಕ್ರಿಕೆಟ್ ಕಾರ್ಯಾಚರಣೆಗಳ ಸಮಗ್ರ ಪರಾಮರ್ಶೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತದ ಮಾಜಿ ಬ್ಯಾಟರ್ ಹೇಮಂಗ್ ಬದಾನಿ ಹೊಸ ಕೋಚಿಂಗ್ ತಂಡವನ್ನು ಸೇರಿಕೊಳ್ಳುವ ಪ್ರಮುಖ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಲಿಮಿಟೆಡ್‌ನ ಪೂರ್ಣಾವಧಿ ನಿರ್ದೇಶಕಿ ಹಾಗೂ ಎನ್. ಶ್ರೀನಿವಾಸನ್ ಅವರ ಪುತ್ರಿ ರೂಪಾ ಗುರುನಾಥ್ ಅಧಿಕೃತ ಪ್ರಕಟಣೆ ನೀಡಿದ್ದಾರೆ. “ಸ್ಟೀಫನ್ ಫ್ಲೆಮಿಂಗ್ ನಮ್ಮ ಫ್ರಾಂಚೈಸಿಯ ಪಯಣದಲ್ಲಿ ಕೋಚಿಂಗ್ ವಿಭಾಗದ ಬೆನ್ನೆಲುಬಾಗಿದ್ದರು.

ಕಳೆದ ಎರಡು ದಶಕಗಳ ಅವಧಿಯಲ್ಲಿ ತಂಡದ ಸಂಸ್ಕೃತಿ, ದೃಷ್ಟಿಕೋನ ಮತ್ತು ಯಶಸ್ಸಿನ ಪರಂಪರೆಯನ್ನು ಕಟ್ಟುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಮೈದಾನದಲ್ಲಿನ ಅವರ ಜವಾಬ್ದಾರಿ ಮುಕ್ತಾಯಗೊಂಡಿದ್ದರೂ, ಅವರು ಸದಾ ಸಿಎಸ್ಕೆ ಕುಟುಂಬದ ಅವಿಭಾಜ್ಯ ಅಂಗವಾಗಿರುತ್ತಾರೆ” ಎಂದು ಅವರು ತಿಳಿಸಿದ್ದಾರೆ.

2008ರಲ್ಲಿ ಆಟಗಾರರಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿದ್ದ ಸ್ಟೀಫನ್ ಫ್ಲೆಮಿಂಗ್, 2009ರಲ್ಲಿ ಮುಖ್ಯ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡರು. ಅವರ ಮಾರ್ಗದರ್ಶನದಲ್ಲಿ ಸಿಎಸ್ಕೆ 10 ಐಪಿಎಲ್ ಫೈನಲ್‌ಗಳಿಗೆ ಪ್ರವೇಶಿಸಿ ಹಲವು ಬಾರಿ ಪ್ರಶಸ್ತಿ ಗೆದ್ದಿದ್ದು,

ಚಾಂಪಿಯನ್ಸ್ ಲೀಗ್ ಟ್ರೋಫಿಯನ್ನೂ ತನ್ನದಾಗಿಸಿಕೊಂಡಿತ್ತು. ಆದರೆ ಇತ್ತೀಚಿನ ಋತುಗಳಲ್ಲಿ ತಂಡದ ಪ್ರದರ್ಶನ ಕುಸಿತ ಕಂಡಿತ್ತು. 2024ರಲ್ಲಿ ಪ್ಲೇಆಫ್ ಪ್ರವೇಶಿಸಲು ವಿಫಲವಾಗಿದ್ದ ಸಿಎಸ್ಕೆ, ನಂತರದ ಎರಡು ಸೀಸನ್‌ಗಳಲ್ಲಿ ಕ್ರಮವಾಗಿ 10ನೇ ಮತ್ತು 8ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಫ್ಲೆಮಿಂಗ್ ಮುಖ್ಯ ಕೋಚ್ ಆಗಿರುವ ದಕ್ಷಿಣ ಆಫ್ರಿಕಾದ ಜೋಬರ್ಗ್ ಸೂಪರ್ ಕಿಂಗ್ಸ್ ಹಾಗೂ ಅಮೆರಿಕದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಗಳ ಪ್ರದರ್ಶನವೂ ನಿರೀಕ್ಷಿತ ಮಟ್ಟ ತಲುಪಿರಲಿಲ್ಲ. ವಿಶೇಷವಾಗಿ, ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಋತುವಿನಲ್ಲಿ 10 ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಕೊನೆಯ ಸ್ಥಾನದಲ್ಲಿತ್ತು.

ಈ ನಡುವೆ, ಡಲ್ಲಾಸ್‌ನಲ್ಲಿ ಬೀಡುಬಿಟ್ಟಿರುವ ಸಿಎಸ್ಕೆ ಉನ್ನತಾಧಿಕಾರಿಗಳು ತಂಡದ ಭವಿಷ್ಯದ ಕಾರ್ಯತಂತ್ರ, ಆಟಗಾರರ ಟ್ರೇಡಿಂಗ್, ಕೋಚಿಂಗ್ ವಿಭಾಗದ ಪುನಾರಚನೆ ಹಾಗೂ ನಾಯಕತ್ವದ ಬದಲಾವಣೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ರಾಮಮಂದಿರ ದೇಣಿಗೆ ಹಗರಣ: ಇಂದು ಸುಪ್ರೀಂನಲ್ಲಿ ಅಯೋಧ್ಯೆ ಅರ್ಜಿ ವಿಚಾರಣೆ!

0

ನವದೆಹಲಿ: ಅಯೋಧ್ಯೆಯ ರಾಮಮಂದಿರ ದೇಣಿಗೆ ಹಗರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠದಲ್ಲಿ ನಡೆಯಲಿದೆ. ಪ್ರಕರಣದ ವಿಚಾರಣೆ ದೇಶದಾದ್ಯಂತ ಗಮನ ಸೆಳೆದಿದೆ.

ಈ ನಡುವೆ, ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಹತ್ವದ ಸ್ಪಷ್ಟನೆ ನೀಡಿದ್ದು, ದೇವಾಲಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ನೇಮಕ ಹಾಗೂ ಅವರ ಅಧಿಕಾರಗಳನ್ನು ಅಯೋಧ್ಯೆ ಟ್ರಸ್ಟ್‌ವೇ ನಿರ್ಧರಿಸುತ್ತದೆ, ಸರ್ಕಾರಕ್ಕೆ ಇದರಲ್ಲಿ ಯಾವುದೇ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.

ಭಕ್ತರ ವಿಶ್ವಾಸವನ್ನು ಕಾಪಾಡುವುದು ಸಿಇಓ ಅವರ ಪ್ರಮುಖ ಜವಾಬ್ದಾರಿಯಾಗಿದ್ದು, ಹೊಸ ಸಿಇಓ ದೇವಾಲಯದ ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯನ್ನೂ ವಹಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇರುವುದಿಲ್ಲ ಎಂದು ನೃಪೇಂದ್ರ ಮಿಶ್ರಾ ಸ್ಪಷ್ಟಪಡಿಸಿದ್ದಾರೆ. ಸಿಇಓ ನೇಮಕ ಕುರಿತು ಜುಲೈ 22ರಂದು ಟ್ರಸ್ಟ್‌ನ ಮಹತ್ವದ ಸಭೆ ನಡೆಯಲಿದೆ.

ಇದೇ ವೇಳೆ ದೇಣಿಗೆ ಹಗರಣದ ಆರೋಪದ ವಿಚಾರವಾಗಿ ರಾಜಕೀಯ ವಾಗ್ವಾದವೂ ತೀವ್ರಗೊಂಡಿದೆ. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ್ದು, ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಆಗ್ರಹಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಕೂಡ ಪ್ರಕರಣದ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ಇಡೀ ವ್ಯವಸ್ಥೆಯೇ ಆರೋಪಿಗಳ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದ್ದಾರೆ.

ಇನ್ನೊಂದೆಡೆ, ಬದರಿನಾಥ ದೇಗುಲದ ದೇಣಿಗೆ ದುರುಪಯೋಗದ ಆರೋಪಗಳ ಹಿನ್ನೆಲೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬದರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ ಸಿಇಓಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೂಚನೆ ನೀಡಿದ್ದಾರೆ.

ಉದ್ಯೋಗಕ್ಕಾಗಿ ನೇಪಾಳಕ್ಕೆ ಹೋಗಿದ್ದ ಬೆಳಗಾವಿ ಯುವಕನ ಕೊಲೆ: ಮೃತದೇಹ ಭಾರತಕ್ಕೆ ತರಲು ಕುಟುಂಬದ ಮನವಿ

0

ಬೆಳಗಾವಿ: ಉದ್ಯೋಗ ಅರಸಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಯುವಕನನ್ನು ಆತನ ರೂಮ್‌ಮೇಟ್‌ನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೃತ ಯುವಕನನ್ನು ಖಾನಾಪುರ ಪಟ್ಟಣದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಎಂದು ಗುರುತಿಸಲಾಗಿದೆ.

ನೇಪಾಳದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಹಿಲ್, ತನ್ನೊಂದಿಗೆ ವಾಸವಾಗಿದ್ದ ರೂಮ್‌ಮೇಟ್‌ನಿಂದಲೇ ಕೊಲೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮೃತದೇಹವನ್ನು ಭಾರತಕ್ಕೆ ತರುವ ಸಂಬಂಧ ಕುಟುಂಬಸ್ಥರು ಪೊಲೀಸರ ಮೂಲಕ ಅಗತ್ಯ ಪ್ರಕ್ರಿಯೆ ಆರಂಭಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರಕ್ಕೆ ಮನವಿ ಮಾಡಿದ್ದಾರೆ.

ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಯುವಕನ ದುರಂತ ಸಾವಿನ ಸುದ್ದಿ ಖಾನಾಪುರದಲ್ಲಿ ಶೋಕದ ವಾತಾವರಣ ನಿರ್ಮಿಸಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.

ಗಂಡನ ಮನೆಯವರ ಸಾಲದ ಕಿರುಕುಳ: 3 ವರ್ಷದ ಮಗನೊಂದಿಗೆ ನೇಣುಬಿಗಿದುಕೊಂಡು ತಾಯಿ ಆತ್ಮಹತ್ಯೆ

0

ಬೆಳಗಾವಿ: ಗಂಡನ ಮನೆಯವರಿಂದ ನಿರಂತರವಾಗಿ ನಡೆದಿದ್ದ ಮಾನಸಿಕ ಮತ್ತು ದೈಹಿಕ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ.

ಪ್ರೇಮಾ ನಾಗೇಶ ತಳವಾರ (28) ಮತ್ತು ಪುತ್ರ ಭುವನ (3) ಮೃತರು. ಪೀರನವಾಡಿಯ ಪಾಟೀಲ್ ಗಲ್ಲಿಯಲ್ಲಿರುವ ಮನೆಯಲ್ಲಿ ತಾಯಿ-ಮಗ ಇಬ್ಬರೂ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತನಿಖೆಯ ಪ್ರಾಥಮಿಕ ಮಾಹಿತಿಯಂತೆ, ಗಂಡನ ಮನೆಯವರು ಮಾಡಿಕೊಂಡಿದ್ದ ಸಾಲವನ್ನು ತೀರಿಸುವಂತೆ ಪ್ರೇಮಾ ಅವರ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿತ್ತು. ಇದೇ ವಿಚಾರವಾಗಿ ಪತಿ ಸೇರಿದಂತೆ ಕುಟುಂಬದ ಸದಸ್ಯರು ದಿನನಿತ್ಯ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಕಿರುಕುಳವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಯ ಬಳಿಕ ಮೃತೆಯ ಕುಟುಂಬಸ್ಥರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪತಿ ನಾಗೇಶ ತಳವಾರ, ಅತ್ತೆ ಸುಶೀಲಾ ತಳವಾರ, ಮೈದುನ ಪರಶುರಾಮ ತಳವಾರ, ನಾದಿನಿ ಸಂಗೀತಾ ತಳವಾರ, ಮರೇವ್ವಾ ತಳವಾರ ಹಾಗೂ ಶಾರದಾ ಕಲಕಾಂವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೃತದೇಹಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಹಾಗೂ ಕಿರುಕುಳದ ಆರೋಪಗಳ ಕುರಿತು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.

ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದು ಕಂಡು ಪತಿಯೂ ನೇಣು ಬಿಗಿದುಕೊಂಡು ಸಾವು

0

ತುಮಕೂರು: ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವದಂಪತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಪತ್ನಿ ನೇಣು ಬಿಗಿದುಕೊಂಡಿರುವುದನ್ನು ಕಂಡ ಪತಿ ಕೂಡ ಕೆಲವೇ ಕ್ಷಣಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತರನ್ನು ಶರಣ್ಯ (20) ಮತ್ತು ಗಿರೀಶ್ (28) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಶರಣ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮನೆಗೆ ಬಂದ ಗಿರೀಶ್ ಪತ್ನಿಯ ಮೃತದೇಹವನ್ನು ಕಂಡು ಮಾನಸಿಕವಾಗಿ ಕುಗ್ಗಿ, ಸಮೀಪದ ಹೊಲದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಜೀವ ತೆತ್ತಿದ್ದಾರೆ.

ಘಟನೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಒಂದೆಡೆ ಪ್ರವಾಹ ಭೀತಿ, ಮತ್ತೊಂದೆಡೆ ಬರದ ಆತಂಕ; ಮಳೆಗಾಗಿ ಕಾದು ಕುಳಿತ ಅನ್ನದಾತರು!

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಅಬ್ಬರಿಸುತ್ತಿದ್ದರೆ, ಇನ್ನೂ ಹಲವು ಜಿಲ್ಲೆಗಳಲ್ಲಿ ರೈತರು ಮಳೆಗಾಗಿ ಎದುರು ನೋಡುತ್ತಿದ್ದಾರೆ.

ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ಕಾಡು ಪ್ರಾಣಿಗಳಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ನಿರ್ಮಾಣವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನೀರಿನ ಅಭಾವದ ಪರಿಸ್ಥಿತಿ ಎದುರಾಗಿದೆ. ಕಳೆದ ವರ್ಷವೂ ಇದೇ ಸಮಸ್ಯೆ ಎದುರಾಗಿದ್ದರಿಂದ ಅಧಿಕಾರಿಗಳು ಕಾಡು ಪ್ರಾಣಿಗಳಿಗಾಗಿ ಸಣ್ಣ ಟ್ಯಾಂಕ್‌ಗಳನ್ನು ನಿರ್ಮಿಸಿದ್ದರು. ಆದರೆ ಇದೀಗ ಆ ಟ್ಯಾಂಕ್‌ಗಳಲ್ಲಿನ ನೀರಿನ ಪ್ರಮಾಣವೂ ಕಡಿಮೆಯಾಗುತ್ತಿದೆ.

ಮೇ ತಿಂಗಳಲ್ಲಿ ಸುರಿದ ಅಲ್ಪ ಮಳೆಯಿಂದ ಕೆಲವು ಕೆರೆಗಳು ಭಾಗಶಃ ತುಂಬಿದ್ದರೂ, ಹಲವು ಕೆರೆಗಳು ಸಂಪೂರ್ಣ ಖಾಲಿಯಾಗಿವೆ. ಮಳೆ ಮುಂದುವರಿಯದಿದ್ದರೆ ವನ್ಯಜೀವಿಗಳಿಗೂ ನೀರಿನ ಸಮಸ್ಯೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ.

ಚಿತ್ರದುರ್ಗದಲ್ಲಿ ಬೆಳೆಗಳಿಗೆ ಬರದ ಹೊಡೆತ:

ಕೋಟೆನಾಡು ಚಿತ್ರದುರ್ಗದಲ್ಲೂ ಮಳೆಯ ಕೊರತೆ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಸೂರ್ಯಕಾಂತಿ ಬಿತ್ತನೆಗೂ ಮುನ್ನ ಉತ್ತಮ ಮಳೆಯಾಗಿದ್ದರೂ, ಕಳೆದ ಎರಡು ತಿಂಗಳಿಂದ ಮಳೆ ಬಾರದ ಪರಿಣಾಮ ತೊಗರಿ ಮತ್ತು ಮೆಕ್ಕೆಜೋಳ ಬೆಳೆಗಳು ಒಣಗುತ್ತಿವೆ.

ಚಿತ್ರದುರ್ಗ ತಾಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ರೈತರು ಎಕರೆಗೆ 50ರಿಂದ 60 ಸಾವಿರ ರೂ. ಖರ್ಚು ಮಾಡಿ ಬೆಳೆ ಬೆಳೆದಿದ್ದು, ಫಸಲು ಬರುವ ಮುನ್ನವೇ ಬೆಳೆಗಳು ಹಾಳಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ.

ವಿಜಯಪುರದಲ್ಲೂ ರೈತರ ಸಂಕಷ್ಟ:

ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಜೂನ್ ಮೊದಲ ವಾರದಲ್ಲಿ ಅಲ್ಪ ಮಳೆಯಾದ ಹಿನ್ನೆಲೆಯಲ್ಲಿ ಶೇ.20ರಷ್ಟು ರೈತರು ಬಿತ್ತನೆ ಮಾಡಿದ್ದಾರೆ. ಉಳಿದ ರೈತರು ಮಳೆಗಾಗಿ ಕಾಯುತ್ತಿದ್ದು, ಬಿತ್ತನೆ ಬೀಜ ಹಾಗೂ ಗೊಬ್ಬರಕ್ಕಾಗಿ ಮಾಡಿರುವ ಸಾಲದ ಚಿಂತೆಯಲ್ಲಿ ಸಿಲುಕಿದ್ದಾರೆ.

ಜುಲೈ ಬಂದರೂ ನಿರೀಕ್ಷಿತ ಮಳೆ ಬಾರದ ಕಾರಣ ರೈತರು ಸರ್ಕಾರದಿಂದ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಕೊಡಗಿನಲ್ಲಿ ಮಳೆ ಕಡಿಮೆಯಾದರೂ ಸಮಸ್ಯೆ ಮುಂದುವರಿಕೆ:

ಇತ್ತ ಕೊಡಗು ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಭಾರಿ ಮಳೆಗೆ ಉಂಟಾದ ಸಮಸ್ಯೆಗಳು ಇನ್ನೂ ಮುಂದುವರಿದಿವೆ. ಭಾಗಮಂಡಲ ಹಾಗೂ ಚೆಟ್ಟಿಮಾನಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕತ್ತಲಿನಲ್ಲಿ ದಿನ ಕಳೆಯುವಂತಾಗಿದೆ.

ಭಾರಿ ಗಾಳಿ ಮಳೆಯಿಂದ 16ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆಯ ಚಿತ್ರಣ ವಿಭಿನ್ನವಾಗಿದೆ. ಕೆಲವೆಡೆ ಮಳೆ ಅಬ್ಬರಿಸುತ್ತಿದ್ದರೆ, ಮತ್ತೊಂದೆಡೆ ರೈತರು ಹಾಗೂ ವನ್ಯಜೀವಿಗಳು ನೀರಿಗಾಗಿ ಮಳೆರಾಯನ ನಿರೀಕ್ಷೆಯಲ್ಲಿವೆ.