ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 20ರಂದು ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಆಡಳಿತ ಮಂಡಳಿ ಕಠಿಣ ಎಚ್ಚರಿಕೆ ನೀಡಿದೆ. ನಿಗದಿತ ದಿನ ಕರ್ತವ್ಯಕ್ಕೆ ಹಾಜರಾಗದ ನೌಕರರ ವಿರುದ್ಧ ‘ನೋ ವರ್ಕ್, ನೋ ಪೇ’ ನಿಯಮ ಜಾರಿಗೊಳಿಸುವುದಾಗಿ ತಿಳಿಸಿದೆ.
ಈ ಕುರಿತು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷಾ ಸ್ಪಷ್ಟನೆ ನೀಡಿದ್ದು, ಎಲ್ಲಾ ಸಾರಿಗೆ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.
ಮೇ 20ರಂದು ನಡೆಯಲಿರುವ ಪ್ರತಿಭಟನೆ ಅಥವಾ ಮುಷ್ಕರದಲ್ಲಿ ಭಾಗಿಯಾಗುವ ನೌಕರರ ವಿರುದ್ಧ ಸೇವಾ ನಿಯಮಾವಳಿಗಳ ಅನ್ವಯ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆಯಾಗಿರುವುದರಿಂದ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಬಾರದು. ಹೀಗಾಗಿ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ನೌಕರರಿಗೆ ರಜೆ ಮಂಜೂರು ಮಾಡುವುದಿಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಮುಷ್ಕರದ ದಿನ ಕರ್ತವ್ಯಕ್ಕೆ ಗೈರಾಗುವ ನೌಕರರ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸಿ, ಆ ದಿನಗಳ ವೇತನವನ್ನು ಕಡಿತಗೊಳಿಸಲಾಗುವುದು. ‘ಕೆಲಸ ಇಲ್ಲದಿದ್ದರೆ ವೇತನವೂ ಇಲ್ಲ’ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಇದಲ್ಲದೆ ಕರ್ತವ್ಯ ಲೋಪ ಎಸಗುವ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಸಾರಿಗೆ ನೌಕರರ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿವೆ.

