Home Blog Page 4

ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಆ.20ರಂದು ನಗರದ ಕನಕ ಭವನದಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಡಿ. ದೇವರಾಜ ಅರಸು ಅವರ ಜೀವನ, ಆಡಳಿತ ಹಾಗೂ ಸಾಮಾಜಿಕ ಸುಧಾರಣೆಗಳ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು. ಒಟ್ಟಾರೆ ಜನ್ಮದಿನಾಚರಣೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ತುಂಬರಮಟ್ಟಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಲ್ಲದೆ, ಅರಸು ಜಯಂತಿ ನಿಮಿತ್ತ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಚನ್ನಮ್ಮ ವೃತ್ತದಿಂದ ಡಿ. ದೇವರಾಜ ಅರಸು ಅವರ ಭಾವಚಿತ್ರದೊಂದಿಗೆ ಮೆರವಣಿಗೆ ಹೊರಟು ಕನಕ ಭವನಕ್ಕೆ ತಲುಪಲಿದೆ ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

೧೦೦ ಮೀಟರ್ ತ್ರಿವರ್ಣ ಯಾತ್ರೆ ಯಶಸ್ವಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ಗದಗ-ಬೆಟಗೇರಿ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಬೃಹತ್ ೧೦೦ ಮೀಟರ್ ತ್ರಿವರ್ಣ ಯಾತ್ರೆ ಶುಕ್ರವಾರ ನಗರದಲ್ಲಿ ಅದ್ದೂರಿಯಾಗಿ ಜರುಗಿತು. ನೂರಾರು ದೇಶಪ್ರೇಮಿಗಳು ಬೃಹತ್ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹೊತ್ತು ಸಾಗುವ ಮೂಲಕ ದೇಶಭಕ್ತಿ, ಏಕತೆ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರಿದರು.

ಲಯನ್ಸ್ ಕ್ಲಬ್ ಆಫ್ ಗದಗ-ಬೆಟಗೇರಿ ಹಾಗೂ ಗದಗ ಜಿಲ್ಲಾ ಬಟ್ಟೆ ವ್ಯಾಪಾರಸ್ಥರ ಸಂಘದ ಸಹಯೋಗದಲ್ಲಿ ನಡೆದ ಯಾತ್ರೆಗೆ ಲಯನ್ಸ್ ಜಿಲ್ಲೆಯ ೩೧೭ಬಿ ನಿಕಟಪೂರ್ವ ಜಿಲ್ಲಾ ಗವರ್ನರ್ ಆನಂದ ಪೋತ್ನೀಸ್ ಚಾಲನೆ ನೀಡಿದರು. ನಗರದ ಬಸವೇಶ್ವರ ಸರ್ಕಲ್ (ಹತ್ತಿಕಾಳ ಕೂಟ)ದಿಂದ ಆರಂಭಗೊಂಡ ಯಾತ್ರೆ ನಾಮಜೋಶಿ ರಸ್ತೆ, ಹುಯಿಲಗೋಳ ನಾರಾಯಣರಾವ್ ವೃತ್ತ, ಮಹೇಂದ್ರಕರ ವೃತ್ತ ಹಾಗೂ ಮಹಾತ್ಮ ಗಾಂಧಿ ವೃತ್ತ ಮಾರ್ಗವಾಗಿ ಸಾಗಿ ಲಯನ್ಸ್ ಭವನದಲ್ಲಿ ಮುಕ್ತಾಯಗೊಂಡಿತು.

ಬೃಹತ್ ತ್ರಿವರ್ಣ ಧ್ವಜದೊಂದಿಗೆ ಸಾಗಿದ ಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಿಸಿತು. ಯಾತ್ರೆಯಲ್ಲಿ ಪಾಲ್ಗೊಂಡವರು ಭಾರತ ಮಾತೆಯ ಘೋಷಣೆಗಳನ್ನು ಮೊಳಗಿಸುತ್ತಾ, ಪುಷ್ಪವೃಷ್ಟಿಗೈದು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಗದಗ ಜಿಲ್ಲಾ ಮಾಜಿ ಸೈನಿಕರ ಸಂಘದ ಮಾಜಿ ಸೈನಿಕರಾದ ಎಸ್.ಆರ್. ಪಾಟೀಲ, ವ್ಹಿ.ಬಿ. ಬಿಂಗಿ, ಎಸ್.ಬಿ. ಸರ್ವಿ, ಶಂಕರಗೌಡ ಪಾಟೀಲ, ಅರವಟಗಿಮಠ, ವಿಜಯ ಬಡಿಗೇರ, ಚವ್ಹಾಣ ಸೇರಿದಂತೆ ಹಲವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಜೈನ್ ಸಮಾಜದ ಮಹಿಳಾ ಸಂಘಟನೆಯಾದ ವೀರ ಬಾಲಿಕಾ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು ತ್ರಿವರ್ಣ ಯಾತ್ರೆಯ ಯಶಸ್ಸಿಗೆ ಕೈಜೋಡಿಸಿದರು.

ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರವೀಣ ವಾರಕರ, ಕಾರ್ಯದರ್ಶಿ ಲಿಂಗರಾಜ ತೋಟದ, ಖಜಾಂಚಿ ರೇಣುಕಪ್ರಸಾದ ಶಿಗ್ಲಿಮಠ, ರಾಜಣ್ಣ ಮಲ್ಲಾಡದ, ರಮೇಶ ಶಿಗ್ಲಿ, ರೇಣುಕಪ್ರಸಾದ ಹಿರೇಮಠ, ರಾಜಣ್ಣ ವೇರ್ಣೆಕರ, ವೀರೇಶ ಪಟ್ಟಣಶೆಟ್ಟಿ, ಡಾ. ಸಿ.ಬಿ. ಹಿರೇಗೌಡ್ರ, ಡಾ. ಜೆ.ಸಿ. ಶಿರೋಳ, ಸಂಜಯ ರುದ್ದಂ, ದತ್ತು ಬೇವಿನಕಟ್ಟಿ, ಅಶ್ವಥ್ ಸುಲಾಖೆ, ಜೆ.ಡಿ. ಉತ್ತರಕರ, ಸಂತೋಷ ಕಬಾಡರ, ಅಂಕಿತ ಸಾವಕರ, ಶಿವಕುಮಾರ ಶೆಟ್ಟರ, ವೀರಣ್ಣ ಬಾಳಿಕಾಯಿ, ರಾಹುಲ್ ಅರಳಿ ಸೇರಿದಂತೆ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಲಯನ್ ಲೇಡೀಸ್ ಕ್ಲಬ್ ಅಧ್ಯಕ್ಷೆ ಅಮೃತಾ ವಾರಕರ, ಕಾರ್ಯದರ್ಶಿ ಅಪರ್ಣಾ ತೋಟದ, ಖಜಾಂಚಿ ಪ್ರಿಯಾ ಶಿಗ್ಲಿಮಠ, ವೀಣಾ ಸುಲಾಖೆ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಡಾ. ಪದ್ಮಾ ಕಬಾಡಿಗೆ ರವೀಂದ್ರನಾಥ ಟ್ಯಾಗೋರ್ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದ ಸಾಹಿತ್ಯ, ನೆಲ, ನಾಡು, ನುಡಿ ಹಾಗೂ ಸಂಸ್ಕೃತಿಗೆ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಗದುಗಿನ ಮಾಣಿಕ್ಯ’ ಎಂದೇ ಖ್ಯಾತರಾದ ಶ್ರೀಮತಿ ಡಾ. ಪದ್ಮಾ ಜೆ. ಕಬಾಡಿ ಅವರಿಗೆ ರವೀಂದ್ರನಾಥ ಟ್ಯಾಗೋರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಹಾಗೂ ಶ್ರೀ ವಿವೇಕಾನಂದ ಸಂಸ್ಥೆ (ರಿ), ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ-2026 ಅಂಗವಾಗಿ ಆ.9ರಂದು ಧಾರವಾಡದ ರಂಗಾಯಣದಲ್ಲಿ ಆಯೋಜಿಸಿದ್ದ ‘ಸಿರಿಗನ್ನಡ ಸ್ವಾತಂತ್ರ್ಯ ಸಂಭ್ರಮ’ ಕಾರ್ಯಕ್ರಮದಲ್ಲಿ ಡಾ. ಪದ್ಮಾ ಕಬಾಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಾಹಿತ್ಯ ಕ್ಷೇತ್ರದ ಜೊತೆಗೆ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಮತ್ತು ಬೆಳವಣಿಗೆಗೆ ಡಾ. ಪದ್ಮಾ ಜೆ. ಕಬಾಡಿ ಅವರು ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅಗಡಿ ಎಂಜಿನಿಯರಿಂಗ್ ಕಾಲೇಜಿನ ಪ್ರೊ. ವೆಂಕಟ ಸುಬ್ಬಾ ಶೆಟ್ಟಿ ಗ್ರಂಥಾಲಯದಲ್ಲಿ ಗ್ರಂಥಾಲಯ ಮಾಹಿತಿ ವಿಜ್ಞಾನ ಕ್ಷೇತ್ರದ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ 134ನೇ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಂಥಾಲಯಗಳ ಮಹತ್ವ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಗ್ರಂಥಪಾಲಕರ ಪಾತ್ರ ಹಾಗೂ ಪುಸ್ತಕ ಓದುವ ಹವ್ಯಾಸ ಬೆಳೆಸುವ ಅಗತ್ಯದ ಕುರಿತು ಚರ್ಚಿಸಲಾಯಿತು. ಜ್ಞಾನಾರ್ಜನೆಗೆ ಗ್ರಂಥಾಲಯಗಳು ಪ್ರಮುಖ ಕೇಂದ್ರಗಳಾಗಿದ್ದು, ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜತೆಗೆ ವಿವಿಧ ವಿಷಯಗಳ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ತಿಳಿಸಲಾಯಿತು.

ಡಾ. ಎಸ್.ಆರ್. ರಂಗನಾಥನ್ ಅವರು ಗ್ರಂಥಾಲಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆ ಹಾಗೂ ಅವರ ಸೇವೆಯನ್ನು ಸ್ಮರಿಸಲಾಯಿತು. ಅವರ ತತ್ವಗಳು ಇಂದಿಗೂ ಗ್ರಂಥಾಲಯಗಳ ಅಭಿವೃದ್ಧಿಗೆ ಮಾರ್ಗದರ್ಶಿಯಾಗಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಪರಶುರಾಮ ಬಾರ್ಕಿ, ಡೀನ್ ಅಕಾಡೆಮಿಕ್ಸ್ ಡಾ. ಸುಭಾಸ್ ಮೇಟಿ, ಆಡಳಿತಾಧಿಕಾರಿ ವಿಕ್ರಂ ಶಿರೋಳ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಹಾಯಕ ಗ್ರಂಥಪಾಲಕರಾದ ಜಗದೀಶ್ ಶಿಗ್ಲಿಮಠ, ವೀರಯ್ಯ ಬಾಳೂರುಮಠ ಹಾಗೂ ಗ್ರಂಥಾಲಯದ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ರಾಜ್ಯದಲ್ಲೇ ಮೊದಲ ಟ್ರಾನ್ಸ್‌ಪ್ಲಾಂಟ್ ಗೇಮ್ಸ್‌ಗೆ ಗದಗ ಸಜ್ಜು

0

ವಿಜಯಸಾಕ್ಷಿ ಸುದ್ದಿ, ಗದಗ: ಅಂಗಾಂಗ ಕಸಿ ಮಾಡಿಸಿಕೊಂಡವರು ಹಾಗೂ ಅಂಗಾಂಗ ದಾನಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಮತ್ತು ಅಂಗಾಂಗ ದಾನದ ಕುರಿತು ಸಮಾಜದಲ್ಲಿರುವ ಭಯ, ತಪ್ಪು ಕಲ್ಪನೆಗಳನ್ನು ನಿವಾರಿಸಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆ.16ರಂದು ಗದಗದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಗದಗ್ ಟ್ರಾನ್ಸ್‌ಪ್ಲಾಂಟ್ ಗೇಮ್ಸ್-2026 ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ತಿಳಿಸಿದರು.

ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಲ್ಪ ಕಿಡ್ನಿ ಕೇರ್ ಫೌಂಡೇಶನ್, ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಎಚ್.ಕೆ. ಪಾಟೀಲ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಂಗಾಂಗ ಕಸಿ ಬಳಿಕವೂ ವ್ಯಕ್ತಿ ಸಾಮಾನ್ಯ ಜೀವನ ನಡೆಸಬಹುದು ಎಂಬ ಸಂದೇಶವನ್ನು ಸಮಾಜಕ್ಕೆ ಸಾರುವುದು ಕ್ರೀಡಾಕೂಟದ ಪ್ರಮುಖ ಉದ್ದೇಶವಾಗಿದೆ ಎಂದರು.

ಕಿಡ್ನಿ ಸೇರಿದಂತೆ ವಿವಿಧ ಅಂಗಾಂಗ ಕಸಿ ಮಾಡಿಸಿಕೊಂಡವರು, ಅಂಗಾಂಗ ದಾನಿಗಳು ಹಾಗೂ ಡಯಾಲಿಸಿಸ್‌ನಲ್ಲಿರುವವರನ್ನು ಒಂದೇ ವೇದಿಕೆಗೆ ಕರೆತಂದು ಕ್ರೀಡಾಕೂಟ ಆಯೋಜಿಸಲಾಗಿದೆ. ವೈದ್ಯರ ಸಲಹೆಯಂತೆ ಕಸಿ ಮಾಡಿಸಿಕೊಂಡವರು ದೈಹಿಕವಾಗಿ ಹೆಚ್ಚು ಒತ್ತಡಕ್ಕೆ ಒಳಗಾಗದ ರೀತಿಯಲ್ಲಿ ಕ್ರೀಡೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಸಂಕಲ್ಪ ಕಿಡ್ನಿ ಕೇರ್ ಫೌಂಡೇಶನ್‌ನ ಡಾ. ಅವಿನಾಶ ಓದುಗೌಡ್ರ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಅಂಗಾಂಗ ಕಸಿ ಮಾಡಿಸಿಕೊಂಡವರು ಹಾಗೂ ದಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಹೃದಯ ಕಸಿ ಮಾಡಿಸಿಕೊಂಡ ವ್ಯಕ್ತಿಯೊಬ್ಬರೂ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಸುಮಾರು 75 ಮಂದಿ ನೋಂದಣಿ ಮಾಡಿಕೊಂಡಿದ್ದು, ಆನ್‌ಸ್ಪಾಟ್ ನೋಂದಣಿಯೊಂದಿಗೆ 75ರಿಂದ 100 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಟ್ರಾನ್ಸ್‌ಪ್ಲಾಂಟ್ ಗೇಮ್ಸ್‌ನಲ್ಲಿ 100 ಮೀ., 200 ಮೀ. ವಾಕಿಂಗ್, ರನ್ನಿಂಗ್, 400 ಮೀ. ವಾಕ್, ಶಾಟ್‌ಪುಟ್, ಡಿಸ್ಕಸ್ ಥ್ರೋ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಕ್ಯಾರಂ, ಟಗ್ ಆಫ್ ವಾರ್ ಹಾಗೂ ಮ್ಯೂಸಿಕಲ್ ಚೇರ್‌ನಂತಹ ಮನರಂಜನಾ ಸ್ಪರ್ಧೆಗಳನ್ನೂ ಆಯೋಜಿಸಲಾಗಿದೆ.

ಡಯಾಲಿಸಿಸ್‌ನಲ್ಲಿರುವವರ ಆರೋಗ್ಯದ ದೃಷ್ಟಿಯಿಂದ ಅವರಿಗೆ ಸೂಕ್ತವಾಗುವ ಲಘು ಕ್ರೀಡೆಗಳನ್ನು ಆಯ್ಕೆ ಮಾಡಲಾಗಿದೆ. ಸ್ಪರ್ಧೆಗಳಲ್ಲಿ ಡೋನರ್, ರಿಸಿಪಿಯೆಂಟ್ ಹಾಗೂ ಡಯಾಲಿಸಿಸ್ ರೋಗಿಗಳೆಂದು ಮೂರು ಪ್ರಮುಖ ವಿಭಾಗಗಳನ್ನು ಮಾಡಲಾಗಿದ್ದು, ವಯಸ್ಸಿನ ಆಧಾರದಲ್ಲಿಯೂ ವರ್ಗೀಕರಣ ಮಾಡಲಾಗಿದೆ ಎಂದು ಡಾ. ಅವಿನಾಶ ಓದುಗೌಡ್ರ ತಿಳಿಸಿದರು.

ಅಂಗಾಂಗ ದಾನದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲೆಯ ಸುಮಾರು 150 ಶಾಲೆಗಳಲ್ಲಿ 7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪ್ರತಿ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸುಮಾರು 120 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಂತಿಮವಾಗಿ ಭಾಷಣ ಸ್ಪರ್ಧೆಯಲ್ಲಿ 10 ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಆರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಆ.16ರಂದು ನಡೆಯುವ ಟ್ರಾನ್ಸ್‌ಪ್ಲಾಂಟ್ ಗೇಮ್ಸ್ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ಆನಂದ ಪೋತ್ನೀಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಶೋಕ ಮಂದಾಲಿ, ಡಾ. ಪವನ್ ಕುರಹಟ್ಟಿ, ಸಂಕಲ್ಪ ಕಿಡ್ನಿ ಕೇರ್ ಫೌಂಡೇಶನ್ ಹಾಗೂ ಕೆ.ಎಚ್. ಪಾಟೀಲ ಆಸ್ಪತ್ರೆಯ ವೈದ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಅಂಗಾಂಗ ಕಸಿ ಮಾಡಿಸಿಕೊಂಡವರು ಸಹ ಸಾಮಾನ್ಯ ಜೀವನ ನಡೆಸಬಹುದು ಎಂಬ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಅಂಗಾಂಗ ದಾನದ ಕುರಿತು ಜನರಲ್ಲಿರುವ ಭಯ ಮತ್ತು ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಟ್ರಾನ್ಸ್‌ಪ್ಲಾಂಟ್ ಗೇಮ್ಸ್‌ನ ಉದ್ದೇಶ.”

                         — ಕೃಷ್ಣಗೌಡ ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ

BNSS ಸೆಕ್ಷನ್ 106ರಡಿ ಬ್ಯಾಂಕ್ ಖಾತೆ ಜಪ್ತಿ, ಫ್ರೀಜ್ʼಗೆ ಪೊಲೀಸರಿಗೆ ಸಂಪೂರ್ಣ ಅಧಿಕಾರ: ಹೈಕೋರ್ಟ್

0

ಬೆಂಗಳೂರು: ತನಿಖೆಯ ಸಂದರ್ಭದಲ್ಲಿ ಬ್ಯಾಂಕ್ ಖಾತೆಗಳನ್ನು ‘ಫ್ರೀಜ್’ ಮಾಡಲು ಪೊಲೀಸರಿಗೆ ಅಧಿಕಾರವಿದ್ದು, ಅದಕ್ಕಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 106 ಅಡಿಯಲ್ಲಿ ತನಿಖಾಧಿಕಾರಿಗಳಿಗೆ ಬ್ಯಾಂಕ್ ಖಾತೆಗಳು ಸೇರಿದಂತೆ ಆಸ್ತಿಗಳನ್ನು ಜಪ್ತಿ ಮಾಡುವ ಅಧಿಕಾರವಿದೆ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಸ್ಪಷ್ಟಪಡಿಸಿದೆ.

ಜಾರ್ ಗೋಲ್ಡ್ ಕಂಪನಿಯ ಬ್ಯಾಂಕ್ ಖಾತೆಗಳನ್ನು ಪೊಲೀಸರು ಫ್ರೀಜ್ ಮಾಡಿದ್ದ ಕ್ರಮವನ್ನು ರದ್ದುಪಡಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ತನಿಖಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಆದೇಶ ನೀಡಿದೆ.

ಸೆಕ್ಷನ್ 106ರಡಿ ಪೊಲೀಸರಿಗೆ ಅಧಿಕಾರ

ಹಳೆಯ ಸಿಆರ್‌ಪಿಸಿ ಸೆಕ್ಷನ್ 102ರ ಹೊಸ ರೂಪವೇ BNSS ಸೆಕ್ಷನ್ 106 ಎಂದು ಹೈಕೋರ್ಟ್ ತಿಳಿಸಿದೆ. ಈ ಸೆಕ್ಷನ್ ಅಡಿಯಲ್ಲಿ ತನಿಖೆಯ ಭಾಗವಾಗಿ ಬ್ಯಾಂಕ್ ಖಾತೆಗಳು ಸೇರಿದಂತೆ ಆಸ್ತಿಗಳನ್ನು ಜಪ್ತಿ ಮಾಡಲು ತನಿಖಾಧಿಕಾರಿಗಳಿಗೆ ಅಧಿಕಾರವಿದೆ. ಆದರೆ, ಪೊಲೀಸರು ಆಸ್ತಿಯನ್ನು ಜಪ್ತಿ ಮಾಡಿದ ಬಳಿಕ ಈ ಕುರಿತು ತಕ್ಷಣವೇ ತಮ್ಮ ಅಧಿಕಾರ ವ್ಯಾಪ್ತಿಯ ಮ್ಯಾಜಿಸ್ಟ್ರೇಟ್‌ಗೆ ವರದಿ ಸಲ್ಲಿಸಬೇಕು ಎಂದು ಪೀಠ ಸ್ಪಷ್ಟಪಡಿಸಿದೆ.

ಸೆಕ್ಷನ್ 107 ಬೇರೆ ಉದ್ದೇಶಕ್ಕೆ

BNSS ಸೆಕ್ಷನ್ 107ರ ಅಡಿಯಲ್ಲಿ ಆಸ್ತಿ ಮುಟ್ಟುಗೋಲು, ಜಪ್ತಿ ತೆರವು ಹಾಗೂ ಆಸ್ತಿಯ ಮರುಸ್ಥಾಪನೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ನ್ಯಾಯಾಲಯದ ಆದೇಶ ಕಡ್ಡಾಯವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ಸೆಕ್ಷನ್ 106 ಮತ್ತು 107 ಎರಡೂ ಪರಸ್ಪರ ಪೂರಕವಾಗಿವೆಯೇ ಹೊರತು, ಒಂದು ಸೆಕ್ಷನ್ ಮತ್ತೊಂದರ ಅಧಿಕಾರವನ್ನು ನಿಯಂತ್ರಿಸುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೈಬರ್ ವಂಚನೆ ಪ್ರಕರಣಗಳಲ್ಲಿ ತ್ವರಿತ ಕ್ರಮ ಅಗತ್ಯ

ಸೈಬರ್ ವಂಚನೆ ಪ್ರಕರಣಗಳಲ್ಲಿ ದೋಚಿದ ಹಣವನ್ನು ಆರೋಪಿಗಳು ಕ್ಷಣಾರ್ಧದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಪ್ರತಿಯೊಂದು ಖಾತೆಯನ್ನು ಫ್ರೀಜ್ ಮಾಡುವ ಮುನ್ನ ನ್ಯಾಯಾಲಯದ ಪೂರ್ವಾನುಮತಿ ಪಡೆಯಬೇಕೆಂದು ನಿಯಮಿಸಿದರೆ, ತನಿಖೆಗೆ ದೊಡ್ಡ ಹಿನ್ನಡೆಯಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಸಾರ್ವಜನಿಕರ ಜೀವನಪೂರ್ತಿ ಉಳಿತಾಯವನ್ನು ರಕ್ಷಿಸುವ ನಿಟ್ಟಿನಲ್ಲಿ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿ ಪೂರ್ವಾನುಮತಿ ಪಡೆಯುವ ನಿಯಮ ಜಾರಿಗೆ ತಂದರೆ ಪ್ರಾಯೋಗಿಕ ಸಮಸ್ಯೆಗಳು ಎದುರಾಗಬಹುದು ಎಂದು ಪೀಠ ವಿವರಿಸಿದೆ.

ಏನಿದು ಪ್ರಕರಣ?

ಅನಿಯಂತ್ರಿತ ಠೇವಣಿ ನಿಷೇಧ ಕಾಯ್ದೆ, 2019ರ ಅಡಿಯಲ್ಲಿ ‘ಜಾರ್ ಗೋಲ್ಡ್ ರಿಟೇಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆಯ ವೇಳೆ ಪೊಲೀಸರು ಕಂಪನಿಗೆ ಸಂಬಂಧಿಸಿದ ಚಿನ್ನ ಹಾಗೂ ಬೆಳ್ಳಿಯನ್ನು ವಶಪಡಿಸಿಕೊಂಡು, ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದರು.

ಬಳಿಕ ಬ್ಯಾಂಕ್ ಖಾತೆಗಳ ಫ್ರೀಜ್ ತೆರವುಗೊಳಿಸುವಂತೆ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, BNSS ಸೆಕ್ಷನ್ 106ರಡಿ ತನಿಖೆಯ ಸಂದರ್ಭದಲ್ಲಿ ಬ್ಯಾಂಕ್ ಖಾತೆ ಸೇರಿದಂತೆ ಆಸ್ತಿಗಳನ್ನು ಜಪ್ತಿ ಮಾಡಲು ಪೊಲೀಸರಿಗೆ ಅಧಿಕಾರವಿದೆ ಎಂದು ಸ್ಪಷ್ಟಪಡಿಸಿದೆ.

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

0

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಅಭಿವೃದ್ಧಿಗಾಗಿ ‘ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ವಿಧಾನಸಭೆಯಲ್ಲಿ ನೂತನ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಶುಕ್ರವಾರ ಮಾತನಾಡಿದ ಅವರು, ಜೂನ್ 3ರಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಚರ್ಚೆ ನಡೆಸಿ, 139 ಶಾಸಕರ ಬೆಂಬಲದೊಂದಿಗೆ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ಅನೇಕ ನಾಯಕರು ರಾಜ್ಯದ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ತಾವು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇವೆ. ಈಗಿನ ಸರ್ಕಾರವೂ ಅದರ ಮುಂದುವರಿಕೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯಲ್ಲಿ ಜನರು ನೀಡುವ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಆದರೆ ಇದೀಗ ತಮಗೆ ಸಿಕ್ಕಿರುವ ಅವಕಾಶದಲ್ಲಿ ವಿಧಾನಸಭೆಯ 224 ಶಾಸಕರೂ ತಮ್ಮ ದೃಷ್ಟಿಯಲ್ಲಿ ಒಂದೇ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ತಮ್ಮ ಆಶಯ. ರಾಜ್ಯದ ಅಭಿವೃದ್ಧಿಗಾಗಿ ಎಲ್ಲರ ಸಹಕಾರ ಮತ್ತು ವಿಶ್ವಾಸ ಪಡೆದುಕೊಂಡು ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದ ಆಡಳಿತದಲ್ಲಿ ಹಲವು ರಾಜಕೀಯ ಮುತ್ಸದ್ಧಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯ, ದೇವರಾಜ ಅರಸು, ಗುಂಡೂರಾವ್, ನಿಜಲಿಂಗಪ್ಪ, ಬಿ.ಡಿ. ಜತ್ತಿ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಚ್.ಡಿ. ದೇವೇಗೌಡ, ಎಸ್.ಎಂ. ಕೃಷ್ಣ, ಧರಂ ಸಿಂಗ್, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ರಾಜ್ಯವನ್ನು ಮುನ್ನಡೆಸಿದ್ದಾರೆ ಎಂದು ಸ್ಮರಿಸಿದರು.

ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ನಾಡಿಗೆ ಕೊಡುಗೆ ನೀಡಿದ್ದಾರೆ. ತಾವು ಯಾರನ್ನೂ ಟೀಕೆ ಮಾಡುವುದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವುದು ತಮ್ಮ ಉದ್ದೇಶ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸಾವರ್ಕರ್ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ರಿಲೀಫ್ – ಕ್ರಿಮಿನಲ್ ಮಾನನಷ್ಟ ದೂರು, ಸಮನ್ಸ್ ರದ್ದು

0

ನವದೆಹಲಿ: ವಿನಾಯಕ ದಾಮೋದರ್ ಸಾವರ್ಕರ್‌ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ರಾಹುಲ್ ಗಾಂಧಿ ಅವರು ರ‍್ಯಾಲಿಯೊಂದರಲ್ಲಿ ಸಾವರ್ಕರ್‌ ಅವರನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ವಕೀಲ ನೃಪೇಂದ್ರ ಪಾಂಡೆ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಲಕ್ನೋ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.

ಈ ಪ್ರಕರಣವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರಿದ್ದ ಪೀಠವು, ಪ್ರಕರಣ ದಾಖಲಿಸಲು ಅಗತ್ಯವಿದ್ದ ಕಾನೂನುಬದ್ಧ ಅನುಮತಿಯ ಕೊರತೆಯನ್ನು ಪ್ರಮುಖವಾಗಿ ಪರಿಗಣಿಸಿದೆ. ಇಂತಹ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ ನಡೆಸಲು ಕಾನೂನಿನ ಅಡಿಯಲ್ಲಿ ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಪೀಠ ಸ್ಪಷ್ಟಪಡಿಸಿದೆ.

ಆದರೆ, ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಅಗತ್ಯವಾದ ಅನುಮತಿ ಪಡೆಯಲಾಗಿಲ್ಲ. ಅನುಮತಿ ಇಲ್ಲದಿರುವುದರಿಂದ ಪ್ರಕರಣ ಮುಂದುವರಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರು ರಾಜ್ಯ ಸರ್ಕಾರ ಹಾಗೂ ದೂರುದಾರರಿಗೆ ತಿಳಿಸಿದ್ದಾರೆ. ‘ಕಾನೂನನ್ನು ಪಾಲಿಸಲೇಬೇಕು’ ಎಂದು ಪೀಠ ಸ್ಪಷ್ಟಪಡಿಸಿದೆ.

ಲಕ್ನೋ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ ಹಾಗೂ ನೃಪೇಂದ್ರ ಪಾಂಡೆ ದಾಖಲಿಸಿದ್ದ ದೂರನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ರದ್ದುಗೊಳಿಸಿದೆ.

ಈ ಹಿಂದೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸಮನ್ಸ್ ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರವು ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿತ್ತು. ಸಮಾಜದಲ್ಲಿ ದ್ವೇಷ ಹಾಗೂ ವೈಷಮ್ಯ ಹರಡುವ ಉದ್ದೇಶದಿಂದಲೇ ರಾಹುಲ್ ಗಾಂಧಿ ಪೂರ್ವಯೋಜಿತವಾಗಿ ಹೇಳಿಕೆ ನೀಡಿದ್ದಾರೆ ಎಂದು ಸರ್ಕಾರ ವಾದಿಸಿತ್ತು.

ಆದರೆ, ಪ್ರಕರಣದ ವಿಚಾರಣೆಗೆ ಅಗತ್ಯವಿರುವ ಅಧಿಕೃತ ಪೂರ್ವಾನುಮತಿ ಇಲ್ಲದಿರುವುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಕೆಳ ನ್ಯಾಯಾಲಯದ ಸಮನ್ಸ್‌ ಹಾಗೂ ಮೂಲ ದೂರನ್ನೇ ರದ್ದುಗೊಳಿಸಿದೆ.

ಕಡಜ ಹುಳಗಳ ದಾಳಿಗೆ 8 ವರ್ಷದ ಬಾಲಕ ಬಲಿ! ತಂದೆಗೂ ಗಂಭೀರ ಗಾಯ

0

ಶಿವಮೊಗ್ಗ: ಮನೆಯ ಹಿಂದಿನ ಬಾಳೆ ಗಿಡದಲ್ಲಿದ್ದ ಕಡಜದ ಗೂಡಿನಿಂದ ದಾಳಿ ನಡೆಸಿದ ಪರಿಣಾಮ 8 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಸಾಗರ ತಾಲೂಕಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ನಡೆದಿದೆ.

ಮೃತ ಬಾಲಕನನ್ನು ನಿಶ್ಚಿತ್ (8) ಎಂದು ಗುರುತಿಸಲಾಗಿದೆ. ಆತ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯ ಹಿಂದಿನ ಬಾಳೆ ಗಿಡದಲ್ಲಿ ಕಡಜದ ಹುಳುವಿನ ಗೂಡು ಇತ್ತು ಎನ್ನಲಾಗಿದೆ. ಈ ವೇಳೆ ಬಾಲಕ ನಿಶ್ಚಿತ್ ಹಾಗೂ ಆತನ ತಂದೆ ವೆಂಕಟೇಶ್ ಮೇಲೆ ಕಡಜದ ಹುಳುಗಳು ದಾಳಿ ನಡೆಸಿವೆ.

ದಾಳಿಯಿಂದ ಗಾಯಗೊಂಡ ತಂದೆ-ಮಗನನ್ನು ತಕ್ಷಣ ಹೆಗ್ಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ನಿಶ್ಚಿತ್ ಮೃತಪಟ್ಟಿದ್ದಾನೆ. ತಂದೆ ವೆಂಕಟೇಶ್ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

‘ನೀವು ಎಂದೆಂದಿಗೂ ಏಕೈಕ ನಟಿ’: ಶ್ರೀದೇವಿ ಜನ್ಮದಿನದಂದು ಭಾವುಕ ಪೋಸ್ಟ್ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ

ದಿವಂಗತ ನಟಿ ಶ್ರೀದೇವಿ ಅವರ ಜನ್ಮದಿನದಂದು ಪ್ರಿಯಾಂಕಾ ಚೋಪ್ರಾ ಭಾವಪೂರ್ಣ ಗೌರವ ಸಲ್ಲಿಸಿದ್ದಾರೆ. ಶ್ರೀದೇವಿ ಅವರ ಸಂಪೂರ್ಣ ಸಿನಿಮಾ ಪಯಣವನ್ನು ದಾಖಲಿಸುವ ‘ಎಂಪ್ರೆಸ್: ದಿ ಡೆಫಿನಿಟಿವ್ ಬಯಾಗ್ರಫಿ ಆಫ್ ಶ್ರೀದೇವಿ’ ಪುಸ್ತಕದ ಮೊದಲ ನೋಟವನ್ನು ಪ್ರಿಯಾಂಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಧೀರಜ್ ಯು. ಕುಮಾರ್ ಬರೆದಿರುವ ಈ ಜೀವನಚರಿತ್ರೆಯನ್ನು ವೆಸ್ಟ್‌ಲ್ಯಾಂಡ್ ಬುಕ್ಸ್ ಪ್ರಕಟಿಸುತ್ತಿದೆ. ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಶ್ರೀದೇವಿ ಹೇಗೆ ಭಾರತೀಯ ಚಿತ್ರರಂಗದ ಮೊದಲ ಮಹಿಳಾ ಸೂಪರ್‌ಸ್ಟಾರ್ ಆಗಿ ಬೆಳೆದರು ಎಂಬುದನ್ನು ಕೃತಿಯಲ್ಲಿ ವಿವರಿಸಲಾಗಿದೆ.

ಶ್ರೀದೇವಿಯ ವೃತ್ತಿಜೀವನದ ಪ್ರಮುಖ ಘಟ್ಟಗಳು, ಅವರು ನಟಿಸಿದ ಸಿನಿಮಾಗಳು, ಸಾಧನೆಗಳು ಹಾಗೂ ಭಾರತೀಯ ಸಿನಿಮಾಗೆ ನೀಡಿದ ಸಾಂಸ್ಕೃತಿಕ ಮತ್ತು ಕಲಾತ್ಮಕ ಕೊಡುಗೆಯನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ.

ಈ ಪುಸ್ತಕದ ಮುಖಪುಟದಲ್ಲೇ ವಿಶೇಷ ಆಕರ್ಷಣೆಯಿದೆ. ಅಮಿತಾಭ್ ಬಚ್ಚನ್ ಅವರು ಶ್ರೀದೇವಿಯ ಪ್ರತಿಭೆಯನ್ನು ಸ್ಮರಿಸುವ ವಿಶೇಷ ಸಾಲುಗಳು ಮುಖಪುಟದಲ್ಲಿ இடம்பெಟ್ಟಿವೆ. ಶ್ರೀದೇವಿ ಅವರ ಅಪ್ರತಿಮ ಪ್ರತಿಭೆಯನ್ನು ಹಿರಿಯ ನಟ ಗೌರವಿಸಿದ್ದಾರೆ.

ಪುಸ್ತಕದ ಫಸ್ಟ್ ಲುಕ್ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ, ಶ್ರೀದೇವಿ ಅವರನ್ನು ‘ಏಕೈಕ ನಟಿ’ ಎಂದು ಬಣ್ಣಿಸಿದ್ದಾರೆ. ‘ನಿಮ್ಮ ನೆನಪು ಸದಾ ಇರುತ್ತದೆ. ಹ್ಯಾಪಿ ಹೆವೆನ್ಲಿ ಬರ್ತ್‌ಡೇ ಶ್ರೀದೇವಿ’ ಎಂದು ಭಾವನಾತ್ಮಕ ಸಂದೇಶ ನೀಡಿದ್ದಾರೆ.

ಶ್ರೀದೇವಿ ಕೇವಲ ನಾಲ್ಕನೇ ವಯಸ್ಸಿನಲ್ಲೇ ಕ್ಯಾಮೆರಾ ಎದುರಿಸಿದ್ದರು. 1967ರ ತಮಿಳು ಸಿನಿಮಾ ‘ಕಂದನ್ ಕರುಣೈ’ ಅವರ ಬಾಲನಟಿಯಾಗಿ ಮೊದಲ ಚಿತ್ರ. ನಂತರ 1972ರಲ್ಲಿ ‘ರಾಣಿ ಮೇರಾ ನಾಮ್’ ಮೂಲಕ ಹಿಂದಿ ಚಿತ್ರರಂಗ ಪ್ರವೇಶಿಸಿದರು.

ಬಹುಭಾಷಾ ಸಿನಿಮಾಗಳಲ್ಲಿ ನಟಿಸಿದ ಶ್ರೀದೇವಿ, ಸಾಲು ಸಾಲು ಯಶಸ್ವಿ ಚಿತ್ರಗಳ ಮೂಲಕ ತಮ್ಮದೇ ಆದ ಸಾಮ್ರಾಜ್ಯ ನಿರ್ಮಿಸಿದರು. ಭಾರತೀಯ ಚಿತ್ರರಂಗದ ಮೊದಲ ಮಹಿಳಾ ಸೂಪರ್‌ಸ್ಟಾರ್ ಎಂಬ ಸ್ಥಾನವನ್ನು ಪಡೆದ ಅವರು ತಮ್ಮ ವಿಶಿಷ್ಟ ಅಭಿನಯದಿಂದ ತಲೆಮಾರುಗಳ ಪ್ರೇಕ್ಷಕರನ್ನು ಗೆದ್ದಿದ್ದರು.

1996ರಲ್ಲಿ ಬೋನಿ ಕಪೂರ್ ಅವರನ್ನು ವಿವಾಹವಾದ ಶ್ರೀದೇವಿ, ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಅವರ ತಾಯಿ. 2018ರಲ್ಲಿ ದುಬೈನಲ್ಲಿ ನಿಧನರಾದ ಶ್ರೀದೇವಿಗೆ ಭಾರತ ಸರ್ಕಾರ 2013ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇದೀಗ ಅವರ ಜೀವನ ಮತ್ತು ಸಿನಿಮಾ ಪಯಣವನ್ನು ಸಮಗ್ರವಾಗಿ ದಾಖಲಿಸಿರುವ ‘ಎಂಪ್ರೆಸ್’ ಪುಸ್ತಕ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಶ್ರೀದೇವಿ ಅಭಿಮಾನಿಗಳಲ್ಲಿ ಈಗಾಗಲೇ ಕುತೂಹಲ ಮೂಡಿಸಿದೆ.