Home Blog Page 4

ವಿಷ ಸೇವಿಸಿ ಮುಖ್ಯ ಶಿಕ್ಷಕ ಆತ್ಮಹತ್ಯೆ ಪ್ರಕರಣ: 10 ಮಂದಿ ವಿರುದ್ಧ ದಾಖಲಾಯ್ತು ಎಫ್‌ಐಆರ್!

ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಶಿಕ್ಷಕರು, ಬಿಸಿಯೂಟ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜಯಪ್ಪ ಅವರ ಪತ್ನಿ ಅಂಜನಮ್ಮ ನೀಡಿದ ದೂರಿನ ಆಧಾರದ ಮೇಲೆ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಹಾಗೂ ಇತರರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಉಲ್ಲೇಖಿಸಿರುವಂತೆ, ಕಳೆದ 10 ತಿಂಗಳಿನಿಂದ ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಜಯಪ್ಪ ಅವರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಪರಿಶಿಷ್ಟ ಜಾತಿಗೆ ಸೇರಿದ ಕಾರಣ ಜಾತಿ ನಿಂದನೆ ಮಾಡಲಾಗುತ್ತಿತ್ತು ಎಂದು ಜಯಪ್ಪ ಹಲವು ಬಾರಿ ತಮ್ಮ ಪತ್ನಿಗೆ ತಿಳಿಸಿದ್ದರೆಂದು ಆರೋಪಿಸಲಾಗಿದೆ.

ಶಾಲೆಯಲ್ಲಿ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಮುಖ್ಯ ಶಿಕ್ಷಕರ ನಡುವೆ ಮನಸ್ತಾಪ ಉಂಟಾಗಿದ್ದ ಹಿನ್ನೆಲೆಯಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಇದೇ ವೇಳೆ ಶಾಲೆಯ ಶೌಚಾಲಯಕ್ಕೆ ತೆರಳಿದ ಜಯಪ್ಪ ವಿಷ ಸೇವಿಸಿದ್ದರು ಎನ್ನಲಾಗಿದೆ.

ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಘಟನೆ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರಿಗೆ ಹವಾಮಾನ ತಜ್ಞರ ಭರವಸೆ!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಲಿದೆ ಎಂಬ ವದಂತಿಗಳ ನಡುವೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ರೈತರಿಗೆ ನೆಮ್ಮದಿ ನೀಡುವ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ತೀವ್ರ ಬರಗಾಲ ಉಂಟಾಗುವುದಿಲ್ಲ ಮತ್ತು ಕೃಷಿ ಚಟುವಟಿಕೆಗಳಿಗೆ ಗಮನಾರ್ಹ ತೊಂದರೆಯಾಗುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಕೃಷಿ ಹವಾಮಾನ ತಜ್ಞ ಡಾ. ಎಂ.ಬಿ. ರಾಜೇಗೌಡ, ರಾಜ್ಯದಲ್ಲಿ ಭೀಕರ ಬರಗಾಲ ಬರುತ್ತದೆ ಹಾಗೂ ಶೇಕಡಾ 64ರಷ್ಟು ಮಳೆ ಕೊರತೆಯಾಗುತ್ತದೆ ಎಂಬ ಮಾತುಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದ್ದಾರೆ. ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಶೇಕಡಾ 4ರಿಂದ 8ರಷ್ಟು ಮಳೆ ಕೊರತೆ ಸಂಭವಿಸುವ ಸಾಧ್ಯತೆ ಇದ್ದರೂ, ಅದು ಕೃಷಿಗೆ ದೊಡ್ಡ ಮಟ್ಟದ ಸಮಸ್ಯೆ ಉಂಟುಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

1964-65ರಲ್ಲಿ ದೇಶದಲ್ಲಿ ಶೇಕಡಾ 28ರಷ್ಟು ಮಳೆ ಕೊರತೆಯಾಗಿದ್ದ ಸಂದರ್ಭದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗಿನ ಪರಿಸ್ಥಿತಿ ಅದಕ್ಕಿಂತ ಭಿನ್ನವಾಗಿದ್ದು, ಅಷ್ಟು ದೊಡ್ಡ ಪ್ರಮಾಣದ ಮಳೆ ಕೊರತೆ ಸಂಭವಿಸುವ ಸಾಧ್ಯತೆ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎಲ್ ನಿನೋ ಪ್ರಭಾವವು ನಾಲ್ಕು ವರ್ಷಗಳಿಗೊಮ್ಮೆ ಕಂಡುಬರುವ ಸಾಮಾನ್ಯ ನೈಸರ್ಗಿಕ ವಿದ್ಯಮಾನವಾಗಿದ್ದು, ಮಳೆಯ ಹಂಚಿಕೆ ಸಮರ್ಪಕವಾಗಿದ್ದರೆ ಕೃಷಿ ಚಟುವಟಿಕೆಗಳ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ರಾಜೇಗೌಡ ಹೇಳಿದ್ದಾರೆ. ಇದೇ ವೇಳೆ ವೆಸ್ಟರ್ನ್ ಡಿಸ್ಟರ್ಬೆನ್ಸ್ ಪ್ರಭಾವದಿಂದ ಉತ್ತರ ಹಾಗೂ ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಬಿತ್ತನೆ ಕಾರ್ಯವೂ ಹೆಚ್ಚಾಗಿದೆ. ಕಳೆದ ಬಾರಿ 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದರೆ, ಈ ಬಾರಿ ಅದು 17 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಇದರಿಂದ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಪ್ರತಿಕ್ರಿಯಿಸಿ, ಕಳೆದ ವರ್ಷ ರಾಜ್ಯದಲ್ಲಿ ಸರಾಸರಿ ಶೇಕಡಾ 14ರಷ್ಟು ಅಧಿಕ ಮಳೆಯಾಗಿತ್ತು. ಆದರೆ ಈ ಬಾರಿ ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಸರಾಸರಿ ಶೇಕಡಾ 10ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಮಳೆ ಕೊರತೆಯ ಸಾಧ್ಯತೆ ಇದ್ದರೂ ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗುವ ಭೀತಿ ಇಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದು, ರೈತ ಸಮುದಾಯಕ್ಕೆ ಧೈರ್ಯ ತುಂಬಿದ್ದಾರೆ.

ವರ್ತೂರಿನ ತ್ಯಾಜ್ಯ ನೀರು ಘಟಕದಲ್ಲಿ ಅವಘಡ: ಇಬ್ಬರು ಕಾರ್ಮಿಕರು ನಾಪತ್ತೆ!

ಬೆಂಗಳೂರು: ನಗರದ ವರ್ತೂರಿನ ಬೆಳಗೆರೆಯಲ್ಲಿರುವ ಬಿಡಬ್ಲ್ಯೂಎಸ್ಎಸ್‌ಬಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ನಡೆದ ಅವಘಡದಲ್ಲಿ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದು, ಅವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸುಮಾರು 40 ಅಡಿ ಆಳದ ಟ್ಯಾಂಕ್‌ಗೆ ಕೆಲಸದ ನಿಮಿತ್ತ ಇಳಿದಿದ್ದ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದಿದ್ದಾರೆ. ಈ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಬಿಹಾರದ ಬ್ರಿಜೇಶ್ ಹಾಗೂ ತಮಿಳುನಾಡಿನ ಅಖಿಲೇಶ್ ನಾಪತ್ತೆಯಾಗಿದ್ದಾರೆ. ಟ್ಯಾಂಕ್ ಒಳಗೆ ಆಮ್ಲಜನಕದ ಕೊರತೆ ಇರುವ ಸಾಧ್ಯತೆ ಇದ್ದು, ಇಬ್ಬರ ಸ್ಥಿತಿಗತಿ ಬಗ್ಗೆ ಆತಂಕ ವ್ಯಕ್ತವಾಗಿದೆ.

ಮಾಹಿತಿಯ ಪ್ರಕಾರ, ಕಾರ್ಮಿಕರು ಯಾವುದೇ ಸುರಕ್ಷತಾ ಕಿಟ್, ಆಮ್ಲಜನಕ ಉಪಕರಣ ಅಥವಾ ರಕ್ಷಣಾ ಸಾಧನಗಳಿಲ್ಲದೆ ಟ್ಯಾಂಕ್‌ಗೆ ಇಳಿದಿದ್ದರು. ಇದೇ ಅವಘಡಕ್ಕೆ ಪ್ರಮುಖ ಕಾರಣವಾಗಿರಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಕಾರ್ಮಿಕರನ್ನು ಕೆಲಸಕ್ಕೆ ಇಳಿಸಲಾಗಿತ್ತೇ ಎಂಬ ಪ್ರಶ್ನೆಗಳು ಮೂಡಿವೆ.

ಈ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಕೋರಮಂಗಲದಿಂದ ವರ್ತೂರು ಭಾಗದವರೆಗೆ ಹರಿದು ಬರುವ ಡ್ರೈನೇಜ್ ನೀರು ಸೇರುತ್ತದೆ. ಲಕ್ಷಾಂತರ ಲೀಟರ್ ಸಾಮರ್ಥ್ಯದ ಟ್ಯಾಂಕ್‌ನಲ್ಲಿ ಕೊಳಚೆ ನೀರನ್ನು ಸಂಗ್ರಹಿಸಿ ಬಳಿಕ ಶುದ್ಧೀಕರಣ ಪ್ರಕ್ರಿಯೆ ನಡೆಸಲಾಗುತ್ತದೆ. ಘಟನೆ ನಡೆದ ವೇಳೆ ಕಾರ್ಮಿಕರು ಏಣಿ ಮೂಲಕ ಟ್ಯಾಂಕ್ ಒಳಗೆ ಇಳಿದು ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಸದ್ಯ ನಾಪತ್ತೆಯಾಗಿರುವ ಇಬ್ಬರು ಕಾರ್ಮಿಕರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜು.11ರಂದು ರಾಷ್ಟ್ರೀಯ ಲೋಕ ಅದಾಲತ್

0

ವಿಜಯಸಾಕ್ಷಿ ಸುದ್ದಿ, ಗದಗ: ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 11, 2026ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮನವಿ ಮಾಡಿದೆ.

ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ನ್ಯಾಯಾಲಯದ ವೆಚ್ಚ, ಸಮಯ ಹಾಗೂ ಅನಗತ್ಯ ಆರ್ಥಿಕ ಹೊರೆ ತಪ್ಪುವುದರ ಜೊತೆಗೆ ಪರಸ್ಪರ ಬಾಂಧವ್ಯವನ್ನು ಉಳಿಸಿಕೊಳ್ಳಲು ಸಹ ಸಾಧ್ಯವಾಗಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಶ್ರೀಮತಿ ನಾಗವೇಣಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಿವಿಲ್ ದಾವೆಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಂಎಂಆರ್‌ಡಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ವ್ಯಾಜ್ಯಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀ ಸಂಧಾನಕ್ಕಾಗಿ ಗುರುತಿಸಲಾಗಿದೆ.

ಸಂಬಂಧಿತ ವಕೀಲರು ಹಾಗೂ ಪಕ್ಷಗಾರರಿಗೆ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಕುರಿತು ಮುಂಚಿತವಾಗಿ ಮಾಹಿತಿ ನೀಡಿ, ಸೌಹಾರ್ದಯುತ ಪರಿಹಾರಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. ಜುಲೈ 11ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವಕೀಲರು, ಕಕ್ಷಿದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಲೋಕ ಅದಾಲತ್ ನ್ಯಾಯದ ವೇಗದ ದಾರಿ. ಪರಸ್ಪರ ಒಪ್ಪಂದದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಮಯ, ಹಣ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳುವ ಅಪರೂಪದ ಅವಕಾಶ ಇದಾಗಿದೆ.”

ಶ್ರೀಮತಿ ನಾಗವೇಣಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಶಿಕ್ಷಕರ ತರಬೇತಿ ಕೇಂದ್ರವೇ ದುಸ್ಥಿತಿಯಲ್ಲಿ..!

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿಕ್ಷಕರಿಗೆ ತರಬೇತಿ, ಕಾರ್ಯಾಗಾರ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವಾಗಿರುವ ಶಿರಹಟ್ಟಿ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿಆರ್‌ಸಿ) ಮೂಲ ಸೌಲಭ್ಯಗಳ ಕೊರತೆಯಿಂದ ತತ್ತರಿಸಿದ್ದು, “ಶಿಕ್ಷಕರಿಗೆ ಮಾದರಿಯಾಗಬೇಕಾದ ಕೇಂದ್ರವೇ ದುಸ್ಥಿತಿಗೆ ತಲುಪಿರುವುದು ವಿಪರ್ಯಾಸ” ಎಂಬ ಮಾತುಗಳು ಶಿಕ್ಷಕರ ವಲಯದಲ್ಲಿ ಕೇಳಿ ಬರುತ್ತಿವೆ.

ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರಿಗೆ ತರಬೇತಿ, ಕಾರ್ಯಾಗಾರ, ಸಭೆ ಸೇರಿದಂತೆ ಅನೇಕ ಶೈಕ್ಷಣಿಕ ಚಟುವಟಿಕೆಗಳು ನಡೆಯುವ ಈ ಕೇಂದ್ರ ಹಲವು ವರ್ಷಗಳಿಂದ ದುರಸ್ತಿಯಾಗದೇ ಉಳಿದಿದ್ದು, ಈಗ ಹೆಸರಿಗೆ ಮಾತ್ರ ಕ್ಷೇತ್ರ ಸಂಪನ್ಮೂಲ ಕೇಂದ್ರ ಎಂಬ ಸ್ಥಿತಿಗೆ ತಲುಪಿದೆ ಎಂಬ ಆರೋಪ ವ್ಯಕ್ತವಾಗಿದೆ.

ಹಾಳಾಗುತ್ತಿರುವ ಉಪಗ್ರಹ ಆಧಾರಿತ ತರಬೇತಿ ಪರಿಕರಗಳು

ಶಿಕ್ಷಕರಿಗೆ ಉಪಗ್ರಹ ಆಧಾರಿತ ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ಟೆಲಿಕಾನ್ಫರೆನ್ಸ್‌ಗಳ ಮೂಲಕ ತರಬೇತಿ ನೀಡಲು ಅಳವಡಿಸಲಾಗಿದ್ದ ರೋಟ್ (Receive Only Terminal) ಸೇರಿದಂತೆ ವಿವಿಧ ಪರಿಕರಗಳು ದುರಸ್ತಿಯಲ್ಲಿವೆ. ಇವುಗಳನ್ನು ಸರಿಪಡಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಲಕ್ಷಾಂತರ ರೂ. ಮೌಲ್ಯದ ಪರಿಕರಗಳು ಹಾಳಾಗುವ ಹಂತ ತಲುಪಿವೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಕುಡಿಯುವ ನೀರಿಗೂ ಪರದಾಟ

ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲ. ತರಬೇತಿಗಾಗಿ ಆಗಮಿಸುವ ಶಿಕ್ಷಕರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಶೌಚಾಲಯಗಳು ನಿರ್ವಹಣೆಯ ಕೊರತೆಯಿಂದ ಗಬ್ಬೆದ್ದು ನಾರುತ್ತಿದ್ದು, ಬಳಕೆಗೆ ಯೋಗ್ಯವಾಗಿಲ್ಲ.

ಕಚೇರಿ ಆವರಣದಲ್ಲಿ ಎಲ್ಲೆಂದರಲ್ಲಿ ಡೆಡ್‌ಸ್ಟಾಕ್ ಸಾಮಗ್ರಿಗಳು ಬಿದ್ದಿವೆ. ಕಸ-ಕಡ್ಡಿಗಳು ತುಂಬಿಕೊಂಡಿದ್ದು, ಸ್ವಚ್ಛತೆ ಸಂಪೂರ್ಣವಾಗಿ ಮರೀಚಿಕೆಯಾಗಿದೆ. ತಂತಿ ಬೇಲಿ ಇಲ್ಲದ ಕಾರಣ ಭದ್ರತೆಯ ಕೊರತೆಯೂ ಕಾಡುತ್ತಿದೆ.

ಇತ್ತೀಚೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆದ ಬೆನ್ನಲ್ಲೇ, ಅದರ ಪಕ್ಕದಲ್ಲಿರುವ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿಯೂ ಶಿಕ್ಷಕರಿಂದ ಹಣ ವಸೂಲಿ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಂಭೀರ ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಉಪನಿರ್ದೇಶಕ ಆರ್.ಎಸ್. ಬುರಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ದುರಸ್ತಿ ಕುರಿತು ಪ್ರಸ್ತಾವನೆ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

“ಶಿಕ್ಷಕರಿಗೆ ಗುಣಮಟ್ಟದ ತರಬೇತಿ ನೀಡಬೇಕಾದ ಕ್ಷೇತ್ರ ಸಂಪನ್ಮೂಲ ಕೇಂದ್ರವೇ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಕಟ್ಟಡ, ಶೌಚಾಲಯ, ಕುಡಿಯುವ ನೀರು ಹಾಗೂ ತರಬೇತಿ ಪರಿಕರಗಳ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು.”

— ಹೆಸರು ಹೇಳಲು ಬಯಸದ ಶಿಕ್ಷಕರು

8-9 ವರ್ಷಗಳಿಂದ ಸುಣ್ಣ-ಬಣ್ಣವೇ ಇಲ್ಲ

ಸುಮಾರು 8-9 ವರ್ಷಗಳಿಂದ ಕಟ್ಟಡಕ್ಕೆ ಸುಣ್ಣ-ಬಣ್ಣ ಬಳಿಯದೇ ಇರುವುದರಿಂದ ಗೋಡೆಗಳು ಬಿರುಕು ಬಿಟ್ಟಿದ್ದು, ಕಚೇರಿ ಜೀರ್ಣಾವಸ್ಥೆಯತ್ತ ಸಾಗುತ್ತಿದೆ. ಇದಕ್ಕೆ ಕಾಯಕಲ್ಪ ನೀಡಬೇಕಾದ ಅಧಿಕಾರಿಗಳು ಆಸಕ್ತಿ ವಹಿಸದಿರುವುದು ಶಿಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ.

ಮಣ್ಣು-ನೀರು ಸಂರಕ್ಷಣೆಗೆ ರೈತರು ಮುಂದಾಗಬೇಕು: ಸ್ಪೂರ್ತಿ ಜಿ.ಎಸ್

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ರೈತರು ತಮ್ಮ ಜಮೀನುಗಳಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಆದ್ಯತೆ ನೀಡಿ, ಭವಿಷ್ಯದಲ್ಲಿ ಎದುರಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಬೇಕು ಎಂದು ಉಪ ಕೃಷಿ ನಿರ್ದೇಶಕಿ ಸ್ಪೂರ್ತಿ ಜಿ.ಎಸ್. ಹೇಳಿದರು.

ತಾಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾಭವನದಲ್ಲಿ ಕೃಷಿ ಇಲಾಖೆ ವತಿಯಿಂದ ಖೇತ್ ಬಚಾವೋ ಅಭಿಯಾನ-ಆತ್ಮ ಯೋಜನೆಯಡಿ ಹಮ್ಮಿಕೊಂಡಿದ್ದ ಕಿಸಾನ ಗೋಷ್ಠಿ ಹಾಗೂ ಮರುಭೂಮೀಕರಣ ಮತ್ತು ಬರ ತಡೆಗಟ್ಟುವಿಕೆ ವಿಶ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ರೈತರು ಸಾಧ್ಯವಾದಷ್ಟು ಸಾವಯವ ಕೃಷಿಯತ್ತ ಒಲವು ತೋರಬೇಕು. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಭೂಮಿಯ ಫಲವತ್ತತೆ ಕುಂಠಿತವಾಗುತ್ತಿದ್ದು, ಮುಂದಿನ ಪೀಳಿಗೆಗೆ ಫಲವತ್ತಾದ ಭೂಮಿಯನ್ನು ಉಳಿಸಿಕೊಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.

ಎಲ್ಲ ರೈತರು ಕಡ್ಡಾಯವಾಗಿ ಎಫ್‌ಐಡಿ (FID) ಮಾಡಿಸಿಕೊಳ್ಳಬೇಕು. ಅಗತ್ಯಕ್ಕೆ ಅನುಗುಣವಾಗಿ ಯೂರಿಯಾ ಸೇರಿದಂತೆ ರಸಗೊಬ್ಬರಗಳನ್ನು ಎಫ್‌ಐಡಿ ಮೂಲಕವೇ ಪಡೆಯುವ ವ್ಯವಸ್ಥೆಗೆ ಸಹಕರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 2025-26ನೇ ಸಾಲಿನ ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ರೈತರನ್ನು ಸನ್ಮಾನಿಸಲಾಯಿತು.

ಮೋಹನ ಗುತ್ತೆಮ್ಮನವರ, ಎನ್.ಎಚ್. ಬಂಡಿ, ಬಸವರಾಜ ನಾವಿ ಮಾತನಾಡಿದರು. ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ, ಮಹೇಶ ಬಡ್ನಿ, ಚಂದ್ರಶೇಖರಗೌಡ ಎಸ್.ಎನ್., ಮಂಜುನಾಥ ಭರಮಗೌಡ್ರ, ಆರ್.ಸಿ. ಚಾಕಲಬ್ಬಿ, ಎಂ.ಎಸ್. ಪೂಜಾರ, ಡಿ.ಕೆ. ಅಚಲಕರ್, ನೀಲನಗೌಡ ಪಾಟೀಲ, ಶ್ರೀನಿವಾಸ ಅಳವಂಡಿ, ಅಶೋಕ ಕಪ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಇಂದಿನ ಮಣ್ಣು ಮತ್ತು ನೀರಿನ ಸಂರಕ್ಷಣೆಯೇ ನಾಳಿನ ಕೃಷಿಗೆ ಭದ್ರ ಬುನಾದಿ; ಬರ ಎದುರಿಸಲು ರೈತರು ಈಗಿನಿಂದಲೇ ಸಿದ್ಧರಾಗಬೇಕು.”

ಸ್ಪೂರ್ತಿ ಜಿ.ಎಸ್.
ಉಪ ಕೃಷಿ ನಿರ್ದೇಶಕಿ

ಶಾಂತಿ-ಸೌಹಾರ್ದದಿಂದ ಮೊಹರಂ ಆಚರಿಸಿ: ಪಿಎಸ್‌ಐ ನಾಗರಾಜ ಗಡದ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿರುವ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೊಹರಂ ಹಬ್ಬವನ್ನು ಶಾಂತಿ, ಸೌಹಾರ್ದ ಮತ್ತು ಸಹೋದರತೆಯ ಮನೋಭಾವದಿಂದ ಆಚರಿಸಬೇಕು ಎಂದು ಪಿಎಸ್‌ಐ ನಾಗರಾಜ ಗಡದ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಹಲವು ದಶಕಗಳಿಂದ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರು ಸಹೋದರ ಭಾವದಿಂದ ಮೊಹರಂ ಆಚರಿಸುತ್ತಾ ಬಂದಿದ್ದು, ಈ ಬಾರಿಯೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಭದ್ರತೆ ಒದಗಿಸಲಾಗುವುದು. ಸಮಾಜದಲ್ಲಿ ನೆಮ್ಮದಿ ಮತ್ತು ಸೌಹಾರ್ದ ವಾತಾವರಣ ನಿರ್ಮಾಣವಾಗಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಹಬ್ಬದ ಹೆಸರಿನಲ್ಲಿ ಶಾಂತಿಗೆ ಭಂಗ ತರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಇ-ಚಲನ್ ದಂಡ ಪಾವತಿಗೆ ರಾಜ್ಯ ಸರ್ಕಾರ ಘೋಷಿಸಿರುವ ಶೇ.50 ರಿಯಾಯಿತಿಯ ಪ್ರಯೋಜನ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು. ಜೂನ್ 21ರಿಂದ ಜುಲೈ 10ರವರೆಗೆ ಈ ಸೌಲಭ್ಯ ಲಭ್ಯವಿರಲಿದೆ ಎಂದರು.

ಶಿಗ್ಲಿ ಕ್ರಾಸ್‌ನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಪರವಾಗಿ ಪೂರ್ಣಾಜಿ ಕರಾಟೆ, ಗಂಗಾಧರ ಮೆಣಸಿನಕಾಯಿ, ಎಂ.ಐ. ಮುಳಗುಂದ, ಅಮರೀಶ ತೆಂಬದಮನಿ ಹಾಗೂ ಬಸವರಾಜ ಕಲ್ಲೂರ ಮಾತನಾಡಿದರು.

ಸಭೆಯಲ್ಲಿ ಸುಲೇಮಾನಸಾಬ್ ಕಣಕೆ, ಅಬ್ದುಲಸಾಬ್ ಬೆಟಗೇರಿ, ಎಂ.ಎಚ್. ಶಮಲೆವಾಲೆ, ಭೀಮಣ್ಣ ಯಂಗಾಡಿ, ಮರಿಯಪ್ಪ ಭಜಂತ್ರಿ, ಅಕ್ಬರಸಾಬ್ ಸುಂಡಕೆ, ಮಲ್ಲಿಕಾರ್ಜುನ ವಾರದ, ಡಿ.ಬಿ. ಫಕ್ಕೀರಪ್ಪ, ಮುತ್ತಣ್ಣ ಪೂಜಾರ, ಜಾಫರ್ ಲಕ್ಷ್ಮೇಶ್ವರ, ಖಾಜಾಪೀರ ಜಮಖಂಡಿ, ನೂರಅಹ್ಮದ ಶಿದ್ದಿ, ಮಂಜಪ್ಪ ವಡ್ಡರ, ದಾದಾಪೀರ ತಂಬಾಕ, ಇರ್ಫಾನ ಮಿರ್ಜಾ, ಮುತ್ತು ನೀರಲಗಿ ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ಪ್ರಕಾಶ ಮ್ಯಾಗೇರಿ ನಿರೂಪಿಸಿದರು.

“ಹಬ್ಬಗಳು ಜನರನ್ನು ಒಗ್ಗೂಡಿಸುವ ಸೇತುವೆಗಳಾಗಬೇಕು, ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ.”

– ನಾಗರಾಜ ಗಡದ, ಪಿಎಸ್‌ಐ, ಲಕ್ಷ್ಮೇಶ್ವರ

ಎಚ್.ಕೆ. ಪಾಟೀಲರಿಗೆ ಡಿಸಿಎಂ ಹುದ್ದೆ, ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಾಜಿ ಸಚಿವ ಎಚ್.ಕೆ. ಪಾಟೀಲ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಹಾಗೂ ರೋಣ ಶಾಸಕ, ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಬಸವರಾಜ ಹೊಳಲಾಪೂರ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಎಚ್.ಕೆ. ಪಾಟೀಲ ಹಾಗೂ ಜಿ.ಎಸ್. ಪಾಟೀಲ ಇಬ್ಬರೂ ಮಹತ್ವದ ಕೊಡುಗೆ ನೀಡಿದ್ದಾರೆ. ಇವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳಲಿದ್ದು, ಸಂಘಟನೆಯ ಶಕ್ತಿಯೂ ವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

ಎಚ್.ಕೆ. ಪಾಟೀಲ ಅವರು ಮುತ್ಸದ್ದಿ, ಅಧ್ಯಯನಶೀಲ ಹಾಗೂ ಕಳಂಕರಹಿತ ರಾಜಕಾರಣಿಯಾಗಿ ರಾಜ್ಯದಲ್ಲಿ ವಿಶಿಷ್ಟ ಹೆಸರನ್ನು ಗಳಿಸಿದ್ದಾರೆ.

ಮತ್ತೊಂದೆಡೆ, ಜಿ.ಎಸ್. ಪಾಟೀಲ ಅವರು ಜನಸೇವೆ ಹಾಗೂ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ಇಬ್ಬರು ನಾಯಕರಿಗೂ ಅವಕಾಶ ದೊರೆಯುವ ವಿಶ್ವಾಸ ಕಾರ್ಯಕರ್ತರಲ್ಲಿ ಇದೆ.

ವಿಶೇಷವಾಗಿ “ಸಾವಿರ ಕೆರೆಗಳ ಸರದಾರ” ಎಂದು ಹೆಸರಾಗಿರುವ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕಕ್ಕೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಎಚ್.ಕೆ. ಪಾಟೀಲರ ಅನುಭವ ಮತ್ತು ಜಿ.ಎಸ್. ಪಾಟೀಲರ ಸಂಘಟನಾ ಸಾಮರ್ಥ್ಯವನ್ನು ಸರ್ಕಾರ ಬಳಸಿಕೊಳ್ಳಬೇಕು. ಇಬ್ಬರಿಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ.”

– ರಾಹುಲ್ ಬಸವರಾಜ ಹೊಳಲಾಪೂರ, ಅಧ್ಯಕ್ಷರು, ಲಕ್ಷ್ಮೇಶ್ವರ ತಾಲೂಕು ಯುವ ಕಾಂಗ್ರೆಸ್

ಮತ್ತೊಮ್ಮೆ ಮಿಂಚಿದ ಕ್ರಿಯೇಟಿವ್ ಅಕಾಡೆಮಿ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ನವೋದಯ ಪ್ರವೇಶ ಪರೀಕ್ಷೆ ತರಬೇತಿಯಲ್ಲಿ ರಾಜ್ಯದ ಗಮನ ಸೆಳೆದಿರುವ ಧಾರವಾಡದ ಕ್ರಿಯೇಟಿವ್ ಅಕಾಡೆಮಿ, 2025-26ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲೂ ಗಮನಾರ್ಹ ಸಾಧನೆ ದಾಖಲಿಸಿದೆ. ಕಳೆದ 17 ವರ್ಷಗಳಿಂದ ನಿರಂತರವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಅನೇಕ ವಿದ್ಯಾರ್ಥಿಗಳನ್ನು ನವೋದಯ ಹಾಗೂ ವಿವಿಧ ವಸತಿ ಶಾಲೆಗಳಿಗೆ ಆಯ್ಕೆ ಮಾಡಿಸುತ್ತಿರುವ ಸಂಸ್ಥೆ, ಈ ಬಾರಿಯೂ ತನ್ನ ಯಶಸ್ಸಿನ ಪರಂಪರೆಯನ್ನು ಮುಂದುವರಿಸಿದೆ.

ಇತ್ತೀಚೆಗೆ ಪ್ರಕಟವಾದ ಫಲಿತಾಂಶದಲ್ಲಿ ಕ್ರಿಯೇಟಿವ್ ಅಕಾಡೆಮಿಯ ಮೂವರು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ನವೋದಯ ಶಾಲೆಗೆ ಆಯ್ಕೆಯಾಗುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

ವಿದ್ಯಾರ್ಥಿ ಮೇಘರಾಜ ಗಾಳಿ ಶೇ.96.25 ಅಂಕಗಳನ್ನು ಪಡೆದು ಕೊಪ್ಪಳ ಜಿಲ್ಲೆಯಲ್ಲಿ 25ನೇ ರ‍್ಯಾಂಕ್ ಗಳಿಸಿದ್ದು, ಸಂಸ್ಥೆಯ ಹೆಮ್ಮೆಗೆ ಕಾರಣರಾಗಿದ್ದಾರೆ. ವಿದ್ಯಾರ್ಥಿನಿ ಅಮೃತಾ ಸಜ್ಜನರ ಶೇ.93.75 ಅಂಕಗಳನ್ನು ಪಡೆದು ಗದಗ ಜಿಲ್ಲೆಯಲ್ಲಿ 67ನೇ ರ‍್ಯಾಂಕ್ ಗಳಿಸಿದ್ದರೆ, ಸಂಗಮೇಶ ಚೌದರಿ ಶೇ.91.25 ಅಂಕಗಳೊಂದಿಗೆ ಧಾರವಾಡ ಜಿಲ್ಲೆಯಲ್ಲಿ 117ನೇ ರ‍್ಯಾಂಕ್ ಪಡೆದು ಸಾಧನೆ ಮೆರೆದಿದ್ದಾರೆ.

ಸಂಸ್ಥೆಯ ಈ ಫಲಿತಾಂಶ ವಿದ್ಯಾರ್ಥಿಗಳ ಶ್ರಮ, ಪಾಲಕರ ಸಹಕಾರ ಹಾಗೂ ಶಿಕ್ಷಕರ ಸಮರ್ಪಿತ ಮಾರ್ಗದರ್ಶನದ ಪ್ರತಿಫಲವಾಗಿದೆ ಎಂದು ಶಿಕ್ಷಣ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಸ್ಪರ್ಧಾತ್ಮಕ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಕ್ರಿಯೇಟಿವ್ ಅಕಾಡೆಮಿ, ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಸಾಧನೆಗೈದ ವಿದ್ಯಾರ್ಥಿಗಳು, ಅವರ ಪಾಲಕರು ಹಾಗೂ ತರಬೇತಿ ನೀಡಿದ ಶಿಕ್ಷಕರನ್ನು ಕ್ರಿಯೇಟಿವ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಡಾ. ರಮೇಶ ಉಳ್ಳಾಗಡ್ಡಿ ಅಭಿನಂದಿಸಿ, ಮುಂದಿನ ಶೈಕ್ಷಣಿಕ ಪಯಣಕ್ಕೂ ಶುಭ ಹಾರೈಸಿದ್ದಾರೆ.

“ವಿದ್ಯಾರ್ಥಿಗಳ ಸಾಧನೆಯೇ ನಮ್ಮ ಸಂಸ್ಥೆಯ ನಿಜವಾದ ಸಂಪತ್ತು. ಗುಣಮಟ್ಟದ ತರಬೇತಿ ಮತ್ತು ನಿರಂತರ ಮಾರ್ಗದರ್ಶನದ ಮೂಲಕ ಇನ್ನಷ್ಟು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಯತ್ತ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ.”

– ಡಾ. ರಮೇಶ ಉಳ್ಳಾಗಡ್ಡಿ, ಸಂಸ್ಥಾಪಕ ಅಧ್ಯಕ್ಷರು, ಕ್ರಿಯೇಟಿವ್ ಅಕಾಡೆಮಿ

443 ದಿನಗಳ ನಿರಂತರ ಸೇವೆ: ಆಸ್ಪತ್ರೆ ರೋಗಿಗಳಿಗೆ ಉಚಿತ ಉಪಹಾರ ವಿತರಣೆ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಉಚಿತ ಉಪಹಾರ ವಿತರಿಸುವ ಸೇವಾ ಕಾರ್ಯ 443ನೇ ದಿನಕ್ಕೂ ಯಶಸ್ವಿಯಾಗಿ ಮುಂದುವರಿದಿದ್ದು, ಗುರುವಾರ ಒಂದೇ ದಿನದಲ್ಲಿ ಅತಿ ಹೆಚ್ಚು 110 ಒಳರೋಗಿಗಳಿಗೆ ಉಚಿತ ಉಪಹಾರ ನೀಡಲಾಯಿತು.

ರಾಮನಗರದ ದರ್ಶನ್ ಹೋಟೆಲ್ ಮಾಲೀಕ ಎಸ್.ಎಂ. ಗಂಗಾಧರಯ್ಯ, ಅವರ ಕುಟುಂಬ ಸದಸ್ಯರು ಹಾಗೂ ಆಪ್ತ ಸ್ನೇಹಿತರ ಬಳಗದ ಸಹಯೋಗದಲ್ಲಿ ಈ ಸೇವಾ ಕಾರ್ಯ ನಡೆಯುತ್ತಿದೆ. 2025ರ ಮಾರ್ಚ್ 31ರಂದು ಆರಂಭವಾದ ಈ ಯೋಜನೆ ನಿರಂತರವಾಗಿ ಸಾಗುತ್ತಿದ್ದು, ನೂರಾರು ರೋಗಿಗಳಿಗೆ ನೆರವಾಗುತ್ತಿದೆ.

ಸಾಮಾಜಿಕ ಕಳಕಳಿಯಿಂದ ಆರಂಭವಾದ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ವಿವಿಧ ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರೋಗಿಗಳ ಆರೈಕೆಗೆ ನೆರವಾಗುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯ ಹಲವರಿಗೆ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಪಾನ್ ಶಾಪ್ ಪುಟ್ಟಣ್ಣ, ಆಟೋ ವೀರೇಶ್, ಮಡಿವಾಳರ ಅಶೋಕ್, ಸೇಡಿಗಾರ್ ಪರಶುರಾಮ್ ಹಾಗೂ ದರ್ಶನ್ ಹೋಟೆಲ್ ಸಿಬ್ಬಂದಿ ಉಪಸ್ಥಿತರಿದ್ದರು.

“ಸಮಾಜ ನಮಗೆ ಕೊಟ್ಟಿರುವುದನ್ನು ಸಮಾಜಕ್ಕೇ ಮರಳಿ ನೀಡಬೇಕು ಎಂಬ ಉದ್ದೇಶದಿಂದ ಈ ಸೇವೆ ನಿರಂತರವಾಗಿ ಸಾಗುತ್ತಿದೆ.”

– ಎಸ್.ಎಂ. ಗಂಗಾಧರಯ್ಯ, ದರ್ಶನ್ ಹೋಟೆಲ್ ಮಾಲೀಕರು

error: Content is protected !!