ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಸೇರಿ ತಾಲೂಕಿನಾದ್ಯಂತ ನಡೆಯಲಿರುವ ಹೋಳಿ ಹಬ್ಬವನ್ನು ಎಲ್ಲರೂ ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಬಿ.ವ್ಹಿ. ನ್ಯಾಮಗೌಡ ಹೇಳಿದರು.
ಅವರು ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡುತ್ತಿದ್ದರು.
ಹಬ್ಬಗಳು ನಾಡಿನ ಸಂಪ್ರದಾಯದ ಪ್ರತೀಕ ಮತ್ತು ಪರಸ್ಪರರಲ್ಲಿ ಸ್ನೇಹ, ಸೌಹಾರ್ದತೆ ಬೆಸೆಯುವ ಕೊಂಡಿಯಾಗಿವೆ. ಹಬ್ಬದ ಸಂದರ್ಭದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ರಾಸಾಯನಿಕಯುಕ್ತ ಬಣ್ಣ ಬಳಸಬಾರದು. ಮುಂಜಾಗೃತ ಕ್ರಮವಾಗಿ ಸೂಕ್ತ ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಹಿತಕರ ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಬ್ಬದ ದಿನ ಬೇಕಾಬಿಟ್ಟಿ ವರ್ತನೆಯಿಂದ ಸಾಮಾಜಿಕ ಶಾಂತಿಗೆ ಭಂಗವನ್ನುಂಟುಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಬ್ಬದ ಸಮಯದಲ್ಲಿ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ಹಬ್ಬ ಆಚರಣೆ ಮಾಡಬೇಕು ಎಂದು ಹೇಳಿದರು.
ಪಿಎಸ್ಐ ನಾಗರಾಜ ಗಡದ ಮಾತನಾಡಿ, ಹಬ್ಬದಲ್ಲಿ ರಾಸಾಯನಿಕ ಮಿಶ್ರಿತ ಬಣ್ಣವನ್ನು ಬಳಸಬೇಡಿ, ಹಬ್ಬದ ದಿನ ಬೈಕ್ಗಳ ಕರ್ಕಶ ಶಬ್ದ ಹಾಗೂ ಟ್ರ್ಯಾಕ್ಟರ್ನಲ್ಲಿ ಅಬ್ಬರದ ಸೌಂಡ್ ಮೂಲಕ ಸಾರ್ವಜನಿಕರಿಗೆ, ವಿದ್ಯಾರ್ಥಿಗಳ ಓದಿಗೆ ತೊಂದರೆ ಮಾಡಬೇಡಿ. ಕಳೆದ ಬಾರಿ ವಿದ್ಯಾರ್ಥಿನಿಯರು ಇರುವ ಬಸ್ನಲ್ಲಿ ಬಣ್ಣ ಎರಚಿ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿತ್ತು. ಅಂತಹ ಘಟನೆಗಳು ನಡೆಯದಂತೆ ನಿಗಾವಹಿಸುತ್ತೇವೆ. ಹೋಳಿ ಹಬ್ಬವನ್ನು ಸಹೋದರತ್ವ ಭಾವನೆಯಿಂದ ಶಾಂತಿಯುತ ಮತ್ತು ಅರ್ಥಪೂರ್ಣವಾಗಿ ಆಚರಿಸಿ ಎಂದರು.
ಹಿರಿಯರಾದ ಪಿ.ಬಿ. ಖರಾಟೆ, ಗಂಗಾಧರ ಮೆಣಸಿನಕಾಯಿ ಮಾತನಾಡಿ, ಸ್ನೇಹ ಸೌಹಾರ್ದತೆ ಮತ್ತು ಧಾರ್ಮಿಕ ಬಾಂಧವ್ಯ ವೃದ್ಧಿಸುವ ಪವಿತ್ರ ಹೋಳಿ ಹಬ್ಬಕ್ಕೆ ಸಾಂಪ್ರದಾಯಿಕ, ವೈಜ್ಞಾನಿಕ ಹಿನ್ನೆಲೆಯಿದ್ದು, ಅವುಗಳನ್ನು ಮುಂದಿನ ಸಮಾಜಕ್ಕೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರದ್ದಾಗಿದೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಪೊಲೀಸ್ ಮತ್ತು ಪುರಸಭೆ ಜಂಟಿ ಕಾರ್ಯಾಚರಣೆ ಮೂಲಕ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಈ ವೇಳೆ ಶಿವಣ್ಣ ಕಟಗಿ, ಮಾಬುಸಾಬ ಮುಳುಗುಂದ, ಶರಣು ಗೋಡಿ, ನವೀನ ಹಿರೇಮಠ, ವಿಜಯ ಕುಂಬಾರ, ಹಾಲಪ್ಪ ಸೂರಣಗಿ, ಮಂಜುನಾಥ ಶೆರಸೂರಿ, ಮಲ್ಲೇಶಪ್ಪ ಬಸಾಪುರ, ದಾವೂದಖಾನ ಕಾರಡಗಿ, ಯೂನುಷ್ ಚೌರಿ, ಗೋಪಿ ಪಾಣಿಗಟ್ಟಿ, ಮುತ್ತು ಪಾಣಿಗಟ್ಟಿ, ಭರಮಗೌಡ ಪಾಣಿಗಟ್ಟಿ, ಮಂಜುನಾಥ ಕೊಡಳ್ಳಿ, ಫಕ್ಕೀರೇಶ ಅಣ್ಣಿಗೇರಿ, ಬಸಣ್ಣ ಬೆಂಗಳೂರು, ಜಗದೀಶ ಕೋಲಕಾರ, ಶೇಖಣ್ಣ ಹಂಜಗಿ, ಹಿಂದೂ-ಮುಸ್ಲಿಂ ಬಾಂಧವರು ಇದ್ದರು.
ಮಾ.3ರಂದು ಎಲ್ಲೆಡೆ ಕಾಮರತಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಕೆಲ ಗ್ರಾಮಗಳಲ್ಲಿ ಬಣ್ಣದೋಕುಳಿ ನಡೆಯಲಿದೆ. ಮಾ. 4ರಂದು ತಾಲೂಕಿನ ಗ್ರಾಮೀಣ ಭಾಗದಲ್ಲಿ ಮತ್ತು ಮಾ. 7ರಂದು ಲಕ್ಷ್ಮೇಶ್ವರದಲ್ಲಿ ರಂಗ ಪಂಚಮಿ ನಡೆಯಲಿದೆ. ಇತ್ತೀಚೆಗಷ್ಟೇ ಗ್ರಾಮದೇವಿ ಜಾತ್ರೆ ನಡೆದ ಹಿನ್ನೆಲೆಯಲ್ಲಿ ಈ ವರ್ಷ ಶಿಗ್ಲಿಯಲ್ಲಿ ರಂಗಿನೋಕುಳಿ ಆಡದಿರಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.