Home Blog Page 4

IPL 2026: ಕೆಕೆಆರ್‌ಗೆ ಹೀನಾಯ ಆರಂಭ; ಗೆಲುವಿಲ್ಲದೆ ದಾಖಲೆ ಬರೆದ ನೈಟ್ ರೈಡರ್ಸ್!

0

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR), 2026ರ ಸೀಸನ್‌ನಲ್ಲಿ ಅಚ್ಚರಿಯ ರೀತಿಯಲ್ಲಿ ಹೀನಾಯ ಪ್ರದರ್ಶನ ನೀಡಿದೆ.

ಸೀಸನ್ ಆರಂಭವಾಗಿ 5 ಪಂದ್ಯಗಳು ಕಳೆದರೂ ತಂಡ ಒಂದೂ ಗೆಲುವು ದಾಖಲಿಸಿಲ್ಲ.

ಇದು ಕೆಕೆಆರ್ ಇತಿಹಾಸದಲ್ಲೇ ಅತ್ಯಂತ ಕಳಪೆ ಆರಂಭವಾಗಿದ್ದು, ಹಿಂದಿನ ವರ್ಷಗಳಲ್ಲಿ ಕಂಡ ಸತತ ಸೋಲುಗಳಿಗಿಂತಲೂ ವಿಭಿನ್ನವಾಗಿ ಈ ಬಾರಿ ಮೊದಲ ಐದು ಪಂದ್ಯಗಳಲ್ಲೇ ಗೆಲುವು ಕಾಣದಿರುವುದು ಗಮನ ಸೆಳೆಯುತ್ತಿದೆ.

ಕೆಕೆಆರ್ ಪಂದ್ಯ ಫಲಿತಾಂಶಗಳು:

  • ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳ ಸೋಲು
  • ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 65 ರನ್‌ಗಳ ಭಾರೀ ಸೋಲು
  • ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯ ಮಳೆಯಿಂದ ರದ್ದು
  • ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 3 ವಿಕೆಟ್‌ಗಳ ಸೋಲು
  • ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 32 ರನ್‌ಗಳ ಸೋಲು
  • ಹಿನ್ನಡೆಯ ಪ್ರಮುಖ ಕಾರಣಗಳು:

ಕೆಕೆಆರ್ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಗಿದ್ದು, ಪವರ್‌ಪ್ಲೇ ಅವಧಿಯಲ್ಲೇ ವಿಕೆಟ್ ಕಳೆದುಕೊಳ್ಳುತ್ತಿರುವುದು ತಂಡಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಜೊತೆಗೆ ಡೆತ್ ಓವರ್‌ಗಳಲ್ಲಿ ಬೌಲಿಂಗ್ ನಿಯಂತ್ರಣ ಕಳೆದುಕೊಳ್ಳುತ್ತಿರುವುದು ಸೋಲಿಗೆ ಕಾರಣವಾಗಿದೆ.

ನಾಯಕ ಅಜಿಂಕ್ಯ ರಹಾನೆ ತಂಡವನ್ನು ಸಮತೋಲನಗೊಳಿಸಲು ಪ್ರಯತ್ನಿಸುತ್ತಿದ್ದರೂ ಮೈದಾನದಲ್ಲಿ ಫಲಿತಾಂಶ ಕಾಣಿಸುತ್ತಿಲ್ಲ. ಸ್ಟಾರ್ ಆಟಗಾರರಾದ ಕ್ಯಾಮರೋನ್ ಗ್ರೀನ್, ಸುನಿಲ್ ನರೈನ್ ಹಾಗೂ ಫಿನ್ ಅಲೆನ್ ಸೇರಿದಂತೆ ಪ್ರಮುಖ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದಿರುವುದು ತಂಡದ ಸಂಕಷ್ಟವನ್ನು ಹೆಚ್ಚಿಸಿದೆ.

ಮುಂದಿನ ಸವಾಲು:

ಸದ್ಯ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಕೆಕೆಆರ್, ಪ್ಲೇ-ಆಫ್ ಹೋರಾಟದಲ್ಲಿ ಉಳಿಯಬೇಕಾದರೆ ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಏಪ್ರಿಲ್ 17ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

ಆದರೂ, ಹಿಂದಿನ ಸೀಸನ್‌ಗಳಲ್ಲಿ ಕಳಪೆ ಆರಂಭದ ನಂತರವೂ ಟ್ರೋಫಿ ಗೆದ್ದ ಇತಿಹಾಸವನ್ನು ನೆನಪಿಸಿಕೊಂಡು, ಈ ಬಾರಿಯೂ ಕೆಕೆಆರ್ ಫೀನಿಕ್ಸ್‌ನಂತೆ ಪುನರುತ್ಥಾನಗೊಳ್ಳಲಿದೆ ಎಂಬ ಆಶಾಭಾವನೆ ಅಭಿಮಾನಿಗಳಲ್ಲಿ ಮುಂದುವರಿದಿದೆ.

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ದುರಂತ: ಮೆರವಣಿಗೆ ಮೇಲೆ ಹರಿದ ಕಾರು; 7 ವರ್ಷದ ಬಾಲಕಿ ಸಾವು!

ಚಿಕ್ಕಮಗಳೂರು: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ನಡೆಯುತ್ತಿದ್ದ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮ ದುರಂತಕ್ಕೆ ತಿರುಗಿದೆ.

ನಿಯಂತ್ರಣ ತಪ್ಪಿದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಗುಂಪಿಗೆ ನುಗ್ಗಿ ಪಲ್ಟಿಯಾದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮಕ್ಕೆ ತನ್ನ ತಂಗಿ ಮನೆಗೆ ಬಂದಿದ್ದ ಸಾನ್ವಿ (7) ಎಂಬ ಬಾಲಕಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಏಕಾಏಕಿ ಜನರ ಮೇಲೆ ಹರಿದು ಪಲ್ಟಿಯಾದ ಪರಿಣಾಮ ಭೀಕರ ದುರಂತ ಸಂಭವಿಸಿದೆ.

ಈ ಘಟನೆ ಹಾಸನದಲ್ಲಿ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು ನೆನಪಿಸುವಂತಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಘಟನೆಯ ನಂತರ ರೊಚ್ಚಿಗೆದ್ದ ನೂರಾರು ಗ್ರಾಮಸ್ಥರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಮುಂಭಾಗ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯಾಳು ಹಾಗೂ ಕಾರು ಚಾಲಕನನ್ನು ಹಾಸನಕ್ಕೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದ ಘಟನೆ ಕೂಡ ನಡೆದಿದೆ. ಇದರಿಂದ ಆಸ್ಪತ್ರೆ ಆವರಣದಲ್ಲಿ ತೀವ್ರ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕ್ರೂಷರ್ ವಾಹನದಲ್ಲಿ ಮಲಗಿದ್ದ ಬಾಲಕ ಸಜೀವ ದಹನ- ಸೊಳ್ಳೆ ಬತ್ತಿ ಹಚ್ಚಿಕೊಂಡು ಮಲಗಿದ್ದಾಗ ದುರಂತ

0

ಗದಗ: ತಾಲೂಕಿನ ಹೊಂಬಳ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದ್ದು, ಕ್ರೂಷರ್ ವಾಹನದಲ್ಲಿ ಮಲಗಿದ್ದ ಬಾಲಕ ಬೆಂಕಿಗೆ ಆಹುತಿಯಾದ ದುರ್ಘಟನೆ ನಡೆದಿದೆ.

ಸೊಳ್ಳೆ ಬತ್ತಿ ಹಚ್ಚಿಕೊಂಡು ವಾಹನದ ಒಳಗೆ ಮಲಗಿದ್ದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ವಾಹನವೇ ಸುಟ್ಟು ಕರಕಲಾಗಿದೆ. ಈ ದುರ್ಘಟನೆಯಲ್ಲಿ ವಾಹನದೊಳಗೆ ಮಲಗಿದ್ದ ಸದಾನಂದ ಉಪ್ಪಾರ್ (14) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವಾಹನದ ಮೇಲ್ಭಾಗದಲ್ಲಿ ಮಲಗಿದ್ದ ಅಣ್ಣ ಮೈಲಾರಿ ಉಪ್ಪಾರ್ (16) ಬೆಂಕಿ ಕಾಣುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇವರು ಮೂಲತಃ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿಗಳಾಗಿದ್ದು, ಹೊಂಬಳ ಗ್ರಾಮದಲ್ಲಿರುವ ಅಜ್ಜ-ಅಜ್ಜಿ ಮನೆಗೆ ಬಂದಿದ್ದರು ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವೈಟ್‌ಫೀಲ್ಡ್‌ನಲ್ಲಿ ದಾರುಣ ಘಟನೆ: 17 ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ತನ್ನ 17 ವರ್ಷದ ಮಗಳನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

40 ವರ್ಷದ ಸುವರ್ಣ ಎಂಬ ಮಹಿಳೆ ತನ್ನ ಮಗಳು ಕಾರುಣ್ಯಳನ್ನು ಹತ್ಯೆ ಮಾಡಿ ನಂತರ ಆತ್ಮಹತ್ಯೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ದಾರುಣ ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಕುರಿತು ಮಾಹಿತಿ ತಿಳಿದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಬಿಹಾರದ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ. ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

57 ವರ್ಷದ ಸಾಮ್ರಾಟ್ ಚೌಧರಿ ರಾಜ್ಯದ ಪ್ರಮುಖ ಒಬಿಸಿ ಸಮುದಾಯವಾದ ಕೊಯೇರಿ ಅಥವಾ ಕುಶ್ವಾಹ ಜಾತಿಗೆ ಸೇರಿದವರಾಗಿದ್ದು, ಈ ಸಮುದಾಯವು ಹಿಂದುಳಿದ ವರ್ಗಗಳಲ್ಲಿ ಮಹತ್ವದ ಸ್ಥಾನ ಹೊಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ತನ್ನದೇ ನಾಯಕನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಏರಿಸುತ್ತಿರುವುದು ವಿಶೇಷವಾಗಿದ್ದು, ಇದುವರೆಗೆ ಮೈತ್ರಿ ಸರ್ಕಾರದಲ್ಲೇ ಭಾಗಿಯಾಗಿದ್ದ ಬಿಜೆಪಿ ಈಗ ಸ್ವತಂತ್ರ ನಾಯಕತ್ವದತ್ತ ಹೆಜ್ಜೆ ಇಟ್ಟಿದೆ.

ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಈ ಬಾರಿ ಸಿಎಂ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ ಎನ್ನಲಾಗಿದೆ. ಜೆಡಿಯು ಪಕ್ಷವು ಇದೇ ಸಮುದಾಯದಿಂದ ನಾಯಕನನ್ನು ಆಯ್ಕೆ ಮಾಡುವಂತೆ ಸೂಚನೆ ನೀಡಿದ್ದುದೂ ತಿಳಿದುಬಂದಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಜೆಡಿಯು 85 ಶಾಸಕರನ್ನು ಹೊಂದಿದ್ದು, ಬಿಜೆಪಿಗಿಂತ ಕೇವಲ ನಾಲ್ಕು ಸ್ಥಾನಗಳು ಕಡಿಮೆ ಇವೆ. 2005ರಿಂದ ಮೈತ್ರಿಯಲ್ಲಿ ಕಿರಿಯ ಪಾಲುದಾರನಾಗಿದ್ದ ಬಿಜೆಪಿ, ಈಗ ಮೊದಲ ಬಾರಿಗೆ ರಾಜ್ಯದ ಉನ್ನತ ಹುದ್ದೆಯನ್ನು ತನ್ನದಾಗಿಸಿಕೊಂಡಿದೆ.

2026-27 ಶೈಕ್ಷಣಿಕ ವರ್ಷ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆ ಆರಂಭ

ಬೆಂಗಳೂರು: ರಾಜ್ಯದ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೇ 29ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯಡಿ ಈ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ಬಾರಿ ಒಟ್ಟು 245 ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದೆ. ಅಕ್ಟೋಬರ್ 3ರಿಂದ 21ರವರೆಗೆ ದಸರಾ ರಜೆ ಹಾಗೂ 2027ರ ಏಪ್ರಿಲ್ 11ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ.

ಶೈಕ್ಷಣಿಕ ಅವಧಿಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 2ರವರೆಗೆ ಮತ್ತು ಎರಡನೇ ಅವಧಿ ಅಕ್ಟೋಬರ್ 22ರಿಂದ 2027ರ ಏಪ್ರಿಲ್ 10ರವರೆಗೆ ನಡೆಯಲಿದೆ.

ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳನ್ನು ನಿಗದಿಪಡಿಸಲಾಗಿದ್ದು, 245 ದಿನಗಳನ್ನು ಕರ್ತವ್ಯದ ದಿನಗಳಾಗಿ ಪರಿಗಣಿಸಲಾಗಿದೆ. ಇದರಲ್ಲಿ ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಗಳಿಗೆ 26 ದಿನಗಳು, ಪಠ್ಯೇತರ ಚಟುವಟಿಕೆಗಳಿಗೆ 24 ದಿನಗಳು, ಮೌಲ್ಯಮಾಪನ ಹಾಗೂ ಫಲಿತಾಂಶ ವಿಶ್ಲೇಷಣೆಗೆ 10 ದಿನಗಳು ಮೀಸಲಾಗಿದೆ. ಸ್ಥಳೀಯ ರಜೆಗಳಿಗೆ 4 ದಿನಗಳನ್ನು ನಿಗದಿ ಮಾಡಲಾಗಿದೆ.

ಇದಲ್ಲದೆ, ಜೂನ್ ಮೊದಲ ವಾರದಲ್ಲೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆ ಮಾಡಲು ಸೂಚನೆ ನೀಡಲಾಗಿದೆ. ಜೂನ್ 30ರೊಳಗೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಿದ್ದು, 6ರಿಂದ 18 ವರ್ಷದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ತರಲು ವಿಶೇಷ ದಾಖಲಾತಿ ಅಭಿಯಾನ ನಡೆಸಲು ಇಲಾಖೆಯು ಸೂಚಿಸಿದೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಈ ಕಾರ್ಯಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಹೊಸಕೋಟೆಯಲ್ಲಿ ಬೆಳ್ಳಂಬೆಳಿಗ್ಗೆ ರಕ್ತಪಾತ: ಮನೆ ಮುಂದೆಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

0

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ದಬ್ಬಗುಂಠಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಭೀಕರ ಕೊಲೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮುಂಜಾನೆ ಸುಮಾರು 4:30ರ ಸಮಯದಲ್ಲಿ ಮನೆ ಮುಂದೆಯೇ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು 40 ವರ್ಷದ ಶಿವಶಂಕರ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ನಿದ್ದೆಯಲ್ಲಿದ್ದ ವೇಳೆ ಶಿವಶಂಕರ್‌ಗೆ ಕರೆ ಬಂದಿದ್ದು, ಅವರು ಮನೆ ಹೊರಗೆ ತೆರಳಿದ ಬಳಿಕ ಮತ್ತೆ ಹಿಂದಿರುಗಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಳಿಕ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೊಲೆಗೈದ ದುಷ್ಕರ್ಮಿಗಳು ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದು, ಕೊಲೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ಕುರಿತು ಮಾಹಿತಿ ಪಡೆದ ಹೊಸಕೋಟೆ ಪೊಲೀಸರು ಹಾಗೂ SOCO ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

 

ಚಲಿಸುತ್ತಿದ್ದ ಕ್ಯಾಂಟರ್ ಟೈರ್ ಸ್ಫೋಟ! KSRTC ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ

ತುಮಕೂರು: ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ದ್ವಾರಾಳು ಬ್ರಿಡ್ಜ್ ಸಮೀಪ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಅದು ನಿಯಂತ್ರಣ ತಪ್ಪಿದೆ. ಇದೇ ವೇಳೆ ಅದರ ಹಿಂದಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಮಾಹಿತಿ ಪಡೆದ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಅಣ್ಣನ ಕೊಲೆಗೆ ಪ್ರತೀಕಾರ: ಆರೋಪಿಗಳ ಮನೆ ಸುಟ್ಟು ಭಸ್ಮ!

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಜಮೀನು ವಿವಾದದಿಂದ ಆರಂಭವಾದ ಜಗಳ ಕೊಲೆ ಮತ್ತು ಪ್ರತೀಕಾರದ ಹಿಂಸೆಗೆ ತಿರುಗಿ ಹತ್ತಾರು ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳಿದೆ.

ಮಲ್ಲಪ್ಪ ಹಾಗೂ ಹನುಮಂತರಾಯನ ಕುಟುಂಬಗಳ ನಡುವೆ ಎರಡು ಎಕರೆ ಜಮೀನಿನ ದಾರಿ ವಿಚಾರವಾಗಿ ಕಳೆದ ನಾಲ್ಕು ವರ್ಷಗಳಿಂದ ವೈಷಮ್ಯ ಮುಂದುವರಿದಿತ್ತು. ಇದೇ ಹಳೆ ದ್ವೇಷದ ಹಿನ್ನೆಲೆ ಹನುಮಂತರಾಯನ ಕುಟುಂಬದವರು ಸೇರಿ 27 ವರ್ಷದ ಪರಮೇಶ್ವರನನ್ನು ತಲ್ವಾರ್ ಹಾಗೂ ದೊಣ್ಣೆಗಳಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅಣ್ಣನನ್ನು ರಕ್ಷಿಸಲು ಹೋಗಿದ್ದ ರೇವಣಸಿದ್ದನಿಗೂ ಗಂಭೀರ ಗಾಯಗಳಾಗಿವೆ.

ಘಟನೆ ಸಂಬಂಧ ಕೆಂಭಾವಿ ಪೊಲೀಸರು ತ್ವರಿತ ಕ್ರಮ ಕೈಗೊಂಡು ಪ್ರಮುಖ ಆರೋಪಿಗಳಾದ ಪರಮಣ್ಣ, ದೇವಿಂದ್ರಪ್ಪ, ಚನ್ನಪ್ಪ ಮತ್ತು ಮಹದೇವಪ್ಪರನ್ನು ಬಂಧಿಸಿದ್ದಾರೆ.

ಇದೇ ವೇಳೆ ಅಣ್ಣನ ಸಾವಿನಿಂದ ಆಕ್ರೋಶಗೊಂಡ ರೇವಣಸಿದ್ದ, ಆರೋಪಿಗಳ ಕುಟುಂಬ ಊರು ಬಿಟ್ಟಿದ್ದ ಸಂದರ್ಭವನ್ನು ಬಳಸಿಕೊಂಡು ಅವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಅಗ್ನಿಕಾಂಡದಲ್ಲಿ ಧಾನ್ಯ, ಬಟ್ಟೆ ಸೇರಿದಂತೆ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳು ಭಸ್ಮವಾಗಿವೆ.

ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ರೇವಣಸಿದ್ದನನ್ನೂ ಪೊಲೀಸರು ಬಂಧಿಸಿದ್ದು, ಒಂದು ಕುಟುಂಬದ ದುಃಖ ಇನ್ನಷ್ಟು ಗಂಭೀರವಾಗುವಂತಾಗಿದೆ.

 

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳ ಗಮನಕ್ಕೆ: ಈ ಎರಡು ದಿನ ನಮ್ಮ ಮೆಟ್ರೋ ಸೇವೆ ವಿಸ್ತರಣೆ!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15, 18 ಹಾಗೂ 24ರಂದು ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ಹಿನ್ನೆಲೆ ನಮ್ಮ ಮೆಟ್ರೋ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ.

ಏಪ್ರಿಲ್ 15 ಮತ್ತು 24ರಂದು ಪಂದ್ಯಾವಳಿ ಹಿನ್ನೆಲೆ ಮೆಟ್ರೋ ಸೇವೆಯನ್ನು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ವೈಟ್‌ಫೀಲ್ಡ್ (ಕಾಡುಗೋಡಿ) ನಿಂದ ರಾತ್ರಿ 12:30ಕ್ಕೆ, ಚಲ್ಲಘಟ್ಟದಿಂದ ರಾತ್ರಿ 12:45ಕ್ಕೆ ರೈಲುಗಳು ಹೊರಡಲಿವೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ ರಾತ್ರಿ 12:45ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 12:30ಕ್ಕೆ ಮತ್ತು ಆರ್.ವಿ ರಸ್ತೆದಿಂದ ರಾತ್ರಿ 2:00ಕ್ಕೆ ಕೊನೆಯ ರೈಲು ಸಂಚರಿಸಲಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್)ದಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಏಪ್ರಿಲ್ 18ರಂದು ನಡೆಯಲಿರುವ ಪಂದ್ಯದ ದಿನ ಯಾವುದೇ ಸಮಯ ವಿಸ್ತರಣೆ ಇರುವುದಿಲ್ಲ. ಮೆಟ್ರೋ ರೈಲುಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ ಎಂದು ಸ್ಪಷ್ಟಪಡಿಸಲಾಗಿದೆ.

error: Content is protected !!