Home Blog Page 4

ಲಕ್ಷ್ಮೇಶ್ವರದಲ್ಲಿ ಮೊಳಗಿದ ಮಂಚರಿಗಾಥಾ ಭಜನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ಪಾಂಡುರಂಗ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರಾವಣ ಮಾಸದ ಶ್ರೀ ಜ್ಞಾನೇಶ್ವರಿ ಪಾರಾಯಣದ ರಜತ ಮಹೋತ್ಸವ ಹಾಗೂ ಶ್ರೀ ಪಾಂಡುರಂಗ–ರಕುಮಾಯಿ ನೂತನ ಮೂರ್ತಿಗಳ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಅಪರೂಪದ ಮಂಚರಿಗಾಥಾ ಭಜನೆ ಸಾವಿರಾರು ಭಕ್ತರನ್ನು ತನ್ನತ್ತ ಸೆಳೆಯುತ್ತಿದೆ.

ಕಳೆದ ಮಂಗಳವಾರದಿಂದ ಆರಂಭವಾಗಿರುವ ಐದು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಸಮಾರೋಪಗೊಳ್ಳಲಿದ್ದು, ಪ್ರತಿಷ್ಠಾಪನಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಮಂಚರಿಗಾಥಾ ಭಜನೆ ಗಮನ ಸೆಳೆಯುತ್ತಿದೆ.

ಮಂಗಳವಾರದಿಂದ ನೂರಾರು ಸಮಾಜ ಬಾಂಧವರು ಮುಂಜಾನೆ ಹಾಗೂ ಸಂಜೆ ಮಂಚರಿಗಾಥಾ ಭಜನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ವಿನೂತನ ಹಾಗೂ ವೈಶಿಷ್ಟ್ಯಪೂರ್ಣ ಭಜನೆಯ ಧ್ವನಿ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಧ್ವನಿಸುತ್ತಿದ್ದು, ಭಜನೆ ಆಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ಮಂಚರಿಗಾಥಾ ಭಜನೆ ಆಯೋಜಿಸುತ್ತಿರುವುದು ಇದೇ ಮೊದಲ ಬಾರಿಗೆ ಎನ್ನಲಾಗುತ್ತಿದ್ದು, ಸಮಾಜ ಬಾಂಧವರು ಅತ್ಯಂತ ಉತ್ಸಾಹ ಮತ್ತು ಭಕ್ತಿಭಾವದಿಂದ ಪಾಲ್ಗೊಳ್ಳುತ್ತಿದ್ದಾರೆ.

ಸುಮಾರು 537 ಅಭಂಗಗಳನ್ನು ಒಳಗೊಂಡಿರುವ ಮಂಚರಿಗಾಥಾ, ಸದ್ಗುರು ತುಕಾರಾಮ ಮಹಾರಾಜರು ಕೈಬರಹದಲ್ಲಿ ರಚಿಸಿರುವ ಅಮೂಲ್ಯ ಗ್ರಂಥವೆಂದು ತಿಳಿದುಬಂದಿದೆ. ಈ ಗ್ರಂಥಕ್ಕೆ ವಿಶೇಷ ಧಾರ್ಮಿಕ ಹಿನ್ನೆಲೆಯಿದ್ದು, ಭಕ್ತಿಭಾವದಿಂದ ಇದರ ಪಾರಾಯಣ ಹಾಗೂ ಭಜನೆ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮಂಚರಿಗಾಥಾವನ್ನು ಭಕ್ತಿಯಿಂದ ಅನುಷ್ಠಾನ ಮಾಡಿ ಭಜಿಸಿದರೆ ವಿಶೇಷ ಫಲ ದೊರೆಯುತ್ತದೆ ಎಂಬ ಧಾರ್ಮಿಕ ನಂಬಿಕೆಯೂ ಇದೆ. ವಾಶಿ ಕ್ಷೇತ್ರದಲ್ಲಿ ವಾಸಕರ ಮಹಾರಾಜರ ಮನೆಯಲ್ಲಿ ಈ ಅಪರೂಪದ ಗ್ರಂಥ ಇಂದಿಗೂ ಸಂರಕ್ಷಿಸಲ್ಪಟ್ಟಿದೆ ಎಂದು ಹೇಳಲಾಗುತ್ತಿದೆ.

ಲಕ್ಷ್ಮೇಶ್ವರದಲ್ಲಿ ಮಂಚರಿಗಾಥಾ ಭಜನೆ ಆಚರಿಸಲಾಗುತ್ತಿರುವುದು ಕರ್ನಾಟಕದಲ್ಲಿಯೇ ಪ್ರಥಮ ಎಂಬುದು ವಿಶೇಷವಾಗಿದೆ.

ಕಳೆದ ನಾಲ್ಕು ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ನಡೆಯುತ್ತಿದ್ದು, ಇದರೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಯಶಸ್ವಿಯಾಗಿ ನಡೆಯುತ್ತಿವೆ.

ಐದು ದಿನಗಳ ಕಾರ್ಯಕ್ರಮ ಶನಿವಾರ ಮುಕ್ತಾಯಗೊಳ್ಳಲಿದ್ದು, ಮಧ್ಯಾಹ್ನ 12.30ಕ್ಕೆ ದೇವಸ್ಥಾನದ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಕೊಲ್ಲಾಪುರದ ವಾರಕರಿ ರತ್ನ ಹ.ಭ.ಪ. ತುಕಾರಾಮ ಪವಾರ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ ಹಾಗೂ ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ದಾಖಲೆ ನೀಡಿ ಜಾಬ್ ಕಾರ್ಡ್ ಪಡೆಯಿರಿ: ಕುಮಾರ ಪುಜಾರ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಬಿಜಿ ರಾಮ್‌ಜಿ ಯೋಜನೆಯಡಿ ಇನ್ನೂ ನೋಂದಣಿಯಾಗದ ಕೂಲಿಕಾರರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹೊಸ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ನಿರ್ದೇಶಕ (ವಿಬಿಜಿ ರಾಮ್‌ಜಿ) ಕುಮಾರ ಪುಜಾರ ಕರೆ ನೀಡಿದರು.

ತಾಲೂಕಿನ ಲಕ್ಕುಂಡಿ ಗ್ರಾಮದ ದಂಡಿನ ದುರ್ಗಾದೇವಿ ಕೆರೆಯಿಂದ ಮೊಟ ಬಸಪ್ಪ ಗುಡಿಯವರೆಗೆ ನೀರು ಹರಿಯುವ ಕೋಡಿ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)’ ಕಾಯ್ದೆಯ ಐಇಸಿ ಚಟುವಟಿಕೆಯಡಿ ಹಮ್ಮಿಕೊಂಡಿದ್ದ ಜಾಬ್ ಕಾರ್ಡ್ ಮೇಳದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದರು.

ವಿಬಿಜಿ ರಾಮ್‌ಜಿ ಯೋಜನೆಯಡಿ ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು. ಜೊತೆಗೆ ಯೋಜನೆಯಡಿ ಲಭ್ಯವಿರುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮೀಣ ಕೂಲಿಕಾರರಿಗೆ ಆದ್ಯತೆಯ ಮೇರೆಗೆ ಶೇ.100ರಷ್ಟು ಉದ್ಯೋಗ ಒದಗಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಹಂತದಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಕುಮಾರ ಪುಜಾರ ಹೇಳಿದರು.

ಜಾಬ್ ಕಾರ್ಡ್ ಮೇಳದ ಮೂಲಕ ಈಗಾಗಲೇ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಜನರು ಹೊಸ ಜಾಬ್ ಕಾರ್ಡ್‌ಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಕೆಲ ಕುಟುಂಬಗಳಲ್ಲಿ ಕುಟುಂಬ ವಿಭಜನೆ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳು ಹಾಗೂ ಕುಂದುಕೊರತೆಗಳಿದ್ದು, ಅವುಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮೀರ್ ನಾಯಕ ಮಾತನಾಡಿ, ಜಾಬ್ ಕಾರ್ಡ್ ಹೊಂದಿರುವ ಪ್ರತಿಯೊಂದು ಗ್ರಾಮೀಣ ಕುಟುಂಬವು ವರ್ಷದಲ್ಲಿ 125 ದಿನಗಳ ಉದ್ಯೋಗ ಪಡೆಯುವ ಕಾನೂನುಬದ್ಧ ಹಕ್ಕನ್ನು ಹೊಂದಿದೆ ಎಂದು ತಿಳಿಸಿದರು.

ಉದ್ಯೋಗಕ್ಕಾಗಿ ದೂರದ ಊರುಗಳಿಗೆ ವಲಸೆ ಹೋಗಿ ಕಷ್ಟ-ನಷ್ಟ ಅನುಭವಿಸುವ ಅಗತ್ಯವಿಲ್ಲ. ತಮ್ಮ ಸ್ವಂತ ಗ್ರಾಮದಲ್ಲಿಯೇ ವಿಬಿಜಿ ರಾಮ್‌ಜಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ಪಂಚಾಯಿತಿಯ ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಬಿಜಿ ರಾಮ್‌ಜಿ ಯೋಜನೆಯಡಿ ಇನ್ನೂ ನೋಂದಣಿಯಾಗದ ಕೂಲಿಕಾರರು ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು. ಉದ್ಯೋಗದ ಹಕ್ಕನ್ನು ಬಳಸಿಕೊಂಡು ತಮ್ಮ ಊರಿನಲ್ಲಿಯೇ ಕೆಲಸ ಮಾಡಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು.

– ಕುಮಾರ ಪುಜಾರ, ತಾಪಂ ನಿರ್ದೇಶಕ (ವಿಬಿಜಿ ರಾಮ್‌ಜಿ)

ಎಲ್ಲಾ ತಾಲೂಕುಗಳ ಬರ ಘೋಷಣೆಗೆ ರಾಜು ಕುರುಡಗಿ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಮಳೆ ಕೈಕೊಟ್ಟು ಮುಂಗಾರು ಬೆಳೆಗಳು ಹಾನಿಗೊಂಡು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲೆಯಲ್ಲಿ ಹೆಸರು, ಗೋವಿನಜೋಳ, ಹತ್ತಿ, ಈರುಳ್ಳಿ, ಸೋಯಾಬಿನ್, ಉದ್ದು ಹಾಗೂ ಶೇಂಗಾ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದರು. ಆದರೆ ನಿರೀಕ್ಷಿತ ಮಳೆಯಾಗದೆ ಬಹುತೇಕ ಬೆಳೆಗಳು ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.

ಪ್ರತಿ ಎಕರೆಗೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೂಲಿಗಾಗಿ ರೈತರು ₹15 ಸಾವಿರದಿಂದ ₹25 ಸಾವಿರದವರೆಗೆ ವೆಚ್ಚ ಮಾಡಿದ್ದಾರೆ. ಇದೀಗ ಬೆಳೆ ಕೈಕೊಟ್ಟಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಗದಗ, ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ ಹಾಗೂ ನರಗುಂದ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿ ತೀವ್ರವಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಜಂಟಿ ಸಮೀಕ್ಷೆಯಲ್ಲಿ ಜಿಲ್ಲಾದ್ಯಂತ ₹218 ಕೋಟಿಗೂ ಅಧಿಕ ಬೆಳೆ ನಷ್ಟ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಯಾವುದೇ ತಾಲೂಕನ್ನು ಕಡೆಗಣಿಸದೆ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ತಕ್ಷಣವೇ ಪರಿಹಾರ ನೀಡಬೇಕು.

– ತೋಟಪ್ಪ (ರಾಜು) ಕುರುಡಗಿ, ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ

ಸಭಾಧ್ಯಕ್ಷ ಸ್ಥಾನ ಕ್ಷೇತ್ರದ ಸೇವೆಗೆ ಅಡ್ಡಿಯಾಗದು: ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರವಾದ ರೋಣ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ ಡಂಬಳ ಹೋಬಳಿಗೆ ಆಗಮಿಸಿದ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಕದಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಎಸ್. ಪಾಟೀಲ, ಸಭಾಧ್ಯಕ್ಷ ಸ್ಥಾನದ ಜವಾಬ್ದಾರಿ ದೊರೆತಿದ್ದರೂ ರೋಣ ವಿಧಾನಸಭಾ ಕ್ಷೇತ್ರದ ಜನರ ಸೇವೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಭರವಸೆ ನೀಡಿದರು.

ನಾನು ಸಭಾಧ್ಯಕ್ಷನಾಗಿದ್ದರೂ ಕ್ಷೇತ್ರದ ಜನರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ನನ್ನ ನಿಕಟ ಸಂಪರ್ಕ ನಿರಂತರವಾಗಿರಲಿದೆ. ಸಭಾಧ್ಯಕ್ಷ ಸ್ಥಾನ ಕ್ಷೇತ್ರದ ಜನರ ಸೇವೆಗೆ ಅಡ್ಡಿಯಾಗುವುದಿಲ್ಲ. ಅದೇ ರೀತಿ, ನನ್ನಿಂದಲೂ ಸಭಾಧ್ಯಕ್ಷ ಸ್ಥಾನದ ಘನತೆಗೆ ಯಾವುದೇ ಧಕ್ಕೆಯಾಗದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.

ತಾವು ಈ ಹಂತಕ್ಕೆ ಬರಲು ಕ್ಷೇತ್ರದ ಜನರು, ಕಾರ್ಯಕರ್ತರು ಹಾಗೂ ಹಿರಿಯರ ಪ್ರೀತಿ, ಸಹಕಾರ ಮತ್ತು ಮಾರ್ಗದರ್ಶನವೇ ಪ್ರಮುಖ ಕಾರಣವಾಗಿದೆ. ತಮಗೆ ದೊರೆತಿರುವ ಈ ಮಹತ್ವದ ಗೌರವವನ್ನು ಉಳಿಸಿಕೊಂಡು ಗದಗ ಜಿಲ್ಲೆ ಹಾಗೂ ರೋಣ ಕ್ಷೇತ್ರಕ್ಕೆ ಇನ್ನಷ್ಟು ಗೌರವ ತರುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ದ್ವೇಷ, ಆವೇಶವಿಲ್ಲದೆ ಸದನ ನಡೆಸುವ ಜವಾಬ್ದಾರಿ

ವಿಧಾನಸಭೆಯ ಕಲಾಪವನ್ನು ಯಾವುದೇ ದ್ವೇಷ ಅಥವಾ ಆವೇಶಕ್ಕೆ ಅವಕಾಶ ನೀಡದೆ ಸುಸೂತ್ರವಾಗಿ ನಡೆಸುವುದು ಸಭಾಧ್ಯಕ್ಷನ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿ.ಎಸ್. ಪಾಟೀಲ ಹೇಳಿದರು.

ಸಭಾಧ್ಯಕ್ಷ ಸ್ಥಾನದಲ್ಲಿದ್ದರೂ ಜನರೊಂದಿಗೆ ಒಡನಾಟ ಮುಂದುವರಿಸುವುದರ ಜತೆಗೆ ಆ ಸ್ಥಾನಕ್ಕೆ ಇರುವ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕಾಗಿದೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಕ್ಷೇತ್ರದ ಜನರು ಸಂಪೂರ್ಣ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಮಂತ್ರಿ ಸ್ಥಾನದ ಜವಾಬ್ದಾರಿ ಹಾಗೂ ಅದರ ವ್ಯಾಪ್ತಿಯ ಬಗ್ಗೆ ಜನರಿಗೆ ಹೆಚ್ಚಿನ ಅರಿವಿದೆ. ಆದರೆ ಸಭಾಧ್ಯಕ್ಷ ಸ್ಥಾನದ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಹಲವರಿಗೆ ಪೂರ್ಣ ಮಾಹಿತಿ ಇಲ್ಲ. ಇದರಿಂದ ಇನ್ನು ಮುಂದೆ ತಾವು ಕ್ಷೇತ್ರದ ಜನರ ಕೈಗೆ ಸುಲಭವಾಗಿ ಸಿಗುವುದಿಲ್ಲ ಎಂಬ ಪ್ರೀತಿಯ ಆತಂಕ ಕೆಲವರಲ್ಲಿದೆ ಎಂದು ಹೇಳಿದರು.

ಆದರೆ, ಕೆಲವೇ ತಿಂಗಳುಗಳಲ್ಲಿ ಸಭಾಧ್ಯಕ್ಷ ಸ್ಥಾನದ ಜವಾಬ್ದಾರಿ ಹಾಗೂ ಅದರ ವ್ಯಾಪ್ತಿಯ ಬಗ್ಗೆ ಎಲ್ಲರಿಗೂ ಸ್ಪಷ್ಟ ಅರಿವಾಗಲಿದೆ. ಕ್ಷೇತ್ರದ ಜನರೊಂದಿಗಿನ ಸಂಬಂಧ ಮತ್ತು ಸಂಪರ್ಕದಲ್ಲಿ ಯಾವುದೇ ಅಂತರ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದರು.

ಸಭಾಧ್ಯಕ್ಷರಾದ ಬಳಿಕ ಡಂಬಳ ಹೋಬಳಿ ಭಾಗಕ್ಕೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕದಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜಿ.ಎಸ್. ಪಾಟೀಲ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಹೂಮಾಲೆ ಹಾಕಿ ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರೋಣ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗನಗೌಡ (ಮಿಥುನ) ಜಿ. ಪಾಟೀಲ, ಮರಿಯಪ್ಪ ಸಿದ್ದಣ್ಣವರ, ಮಹೇಶ ಗಡಗಿ, ಸೋಮಣ್ಣ ಗುಡ್ಡದ, ಕುಬೇರಪ್ಪ ಕೊಳ್ಳಾರ, ರೇವಣಸಿದ್ದ ಕರಿಗಾರ, ಕಳ್ಳೆಪ್ಪ ಪೂಜಾರ, ಬಸವರಡ್ಡಿ ಬಂಡಿಹಾಳ, ಬಾಬುಸಾಬ ಮೂಲಿಮನಿ, ನೂರಹಮ್ಮದ ಸರಕಾವಾಸ, ಕನಕಮೂರ್ತಿ ನರೇಗಲ್ಲ, ಮಲ್ಲಿಕಾರ್ಜುನ ಕಾರಪುಡಿ, ಜಯಮ್ಮ ಯಲಭೋವಿ, ಮಹಾದೇವಮ್ಮ ಕೊಳ್ಳಾರ, ಜ್ಯೋತಿ ಕುರಿ, ಕುಬೇರ ನಾಯ್ಕ, ನಾಗರಾಜ ಸಜ್ಜನ, ಸುರೇಶ ಗಡಗಿ, ಮಾರುತಿ ಎಮ್ಮಿ, ಕಾಶಣ್ಣ ಅಳವಂಡಿ, ಹನಮಂತ ಗದಗಿನ, ಮಲ್ಲಿಕಾರ್ಜುನ ಪ್ಯಾಟಿ, ಬಶೀರಹಮ್ಮದ ಒಡ್ಡಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಸಭಾಧ್ಯಕ್ಷ ಸ್ಥಾನ ನನಗೆ ದೊರೆತಿರುವುದು ದೊಡ್ಡ ಜವಾಬ್ದಾರಿಯಾಗಿದೆ. ಆದರೆ ಈ ಜವಾಬ್ದಾರಿ ನನ್ನ ಕ್ಷೇತ್ರದ ಜನರ ಸೇವೆಗೆ ಎಂದಿಗೂ ಅಡ್ಡಿಯಾಗುವುದಿಲ್ಲ. ಜನರೊಂದಿಗೆ ನಿಕಟ ಸಂಪರ್ಕ ಉಳಿಸಿಕೊಂಡು, ಸಭಾಧ್ಯಕ್ಷ ಸ್ಥಾನದ ಘನತೆಯನ್ನು ಕಾಪಾಡುತ್ತಲೇ ಗದಗ ಜಿಲ್ಲೆ ಮತ್ತು ರೋಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

– ಜಿ.ಎಸ್. ಪಾಟೀಲ, ಕರ್ನಾಟಕ ವಿಧಾನಸಭಾಧ್ಯಕ್ಷರು

ಜನಾಕ್ರೋಶದ ಮುಂದೆ ಕಾಂಗ್ರೆಸ್ ಮಂಡಿಯೂರಿದೆ’: ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಆರ್.ಅಶೋಕ್ ವಾಗ್ದಾಳಿ!

0

ಬೆಂಗಳೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್, “ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾಗಿದೆ” ಎಂದು ಟೀಕಿಸಿದ್ದಾರೆ.

ನಾಗೇಂದ್ರ ಅವರನ್ನು ರಕ್ಷಿಸುವ ಉದ್ದೇಶದಿಂದ ವಿಧಾನಮಂಡಲ ಅಧಿವೇಶನವನ್ನೇ ರದ್ದುಪಡಿಸಲಾಗಿತ್ತು ಎಂದು ಆರೋಪಿಸಿದ ಅವರು, ಕೊನೆಗೂ ಬಿಜೆಪಿಯ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಪಡೆಯುವ ಮೂಲಕ ತನ್ನ ಮಾನ ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಇನ್ನೂ ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ವೇಳೆ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಅವರು, ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ವೇಳೆ ಭಾವುಕರಾಗಿ ಕಣ್ಣೀರು ಹಾಕಿರುವ ಅವರು, ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಜನತಾ ನ್ಯಾಯಾಲಯಕ್ಕೆ ಬಂದು ಎಲ್ಲವನ್ನೂ ಎದುರಿಸಿ ಎಂದು ಬಿಜೆಪಿಗರಿಗೆ ಬಹಿರಂಗ ಸವಾಲು ಕೂಡ ಹಾಕಿದ್ದಾರೆ..

ದಾವಣಗೆರೆಯಲ್ಲಿ ರೈತರ ಪ್ರತಿಭಟನೆ: ಎಸಿ ಕಚೇರಿಗೆ ಮುತ್ತಿಗೆ ಯತ್ನ; ರೇಣುಕಾಚಾರ್ಯ ಸೇರಿ 200ಕ್ಕೂ ಹೆಚ್ಚು ಮಂದಿ ವಶಕ್ಕೆ

0

ದಾವಣಗೆರೆ: ಗುಟ್ಕಾ ನಿಷೇಧ ಆದೇಶ ಹಿಂಪಡೆಯಬೇಕು ಹಾಗೂ ಅಪ್ಪರ್ ಭದ್ರಾ ಯೋಜನೆಗೆ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ರೈತರು ನಡೆಸಿದ ಪ್ರತಿಭಟನೆ ಶುಕ್ರವಾರ ತೀವ್ರಗೊಂಡಿತು.

ಎಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ರೈತ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಸೇರಿದಂತೆ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.

ಜಿಲ್ಲೆಯ ವಿವಿಧ ಭಾಗಗಳಿಂದ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಪಾದಯಾತ್ರೆ ಶುಕ್ರವಾರ ದಾವಣಗೆರೆ ನಗರ ಪ್ರವೇಶಿಸಿತು. ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್ ಹಾಗೂ ಲೋಕಿಕೆರೆ ನಾಗರಾಜ್ ನೇತೃತ್ವದಲ್ಲಿ ರೈತರು ಜಯದೇವ ವೃತ್ತದಿಂದ ಎಸಿ ಕಚೇರಿಯತ್ತ ಮೆರವಣಿಗೆ ನಡೆಸಿದರು.

ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಮಾರುಕಟ್ಟೆ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಅಡಿಕೆ ಬೆಲೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ನಿಷೇಧ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಅಪ್ಪರ್ ಭದ್ರಾ ಯೋಜನೆಗೆ 3 ಟಿಎಂಸಿ ನೀರು ಬಿಡುಗಡೆ ಮಾಡುವ ಸರ್ಕಾರದ ನಿರ್ಧಾರಕ್ಕೂ ರೈತರು ವಿರೋಧ ವ್ಯಕ್ತಪಡಿಸಿದರು. ಈ ಕುರಿತು ಹಲವು ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಮಾಡಾಳ್ ಮಲ್ಲಿಕಾರ್ಜುನ್ ಆರೋಪಿಸಿದರು.

ಪಿಬಿ ರಸ್ತೆಯಲ್ಲಿ ಪ್ರತಿಭಟನೆ:

ಪಾದಯಾತ್ರೆ ಪಿಬಿ ರಸ್ತೆಗೆ ತಲುಪಿದಾಗ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಕೆಲವರು ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ನಂತರ ಪ್ರತಿಭಟನಾಕಾರರು ಎಸಿ ಕಚೇರಿ ಆವರಣಕ್ಕೆ ಪ್ರವೇಶಿಸಲು ಮುಂದಾದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲು ಯತ್ನಿಸಿದ ಸಂದರ್ಭದಲ್ಲಿ ಎರಡೂ ಕಡೆಯವರ ನಡುವೆ ತಳ್ಳಾಟ ಹಾಗೂ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಸೋಮವಾರ ದಾವಣಗೆರೆ ಬಂದ್‌ಗೆ ಎಚ್ಚರಿಕೆ:

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್ ಸೇರಿದಂತೆ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುಟ್ಕಾ ನಿಷೇಧ ಆದೇಶ ಹಿಂಪಡೆಯಬೇಕು ಹಾಗೂ ಅಪ್ಪರ್ ಭದ್ರಾ ಯೋಜನೆಗೆ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಪ್ರತಿಭಟನಾ ಮುಖಂಡರು ಒತ್ತಾಯಿಸಿದ್ದಾರೆ.

ಬೇಡಿಕೆಗಳನ್ನು ಈಡೇರಿಸದಿದ್ದರೆ ಸೋಮವಾರ ದಾವಣಗೆರೆ ಬಂದ್ ನಡೆಸುವುದಾಗಿ ಪ್ರತಿಭಟನಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕಣ್ಣೀರಿಟ್ಟುಕೊಂಡೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ; ‘ಜನತಾ ನ್ಯಾಯಾಲಯಕ್ಕೆ ಬನ್ನಿ’ ಎಂದು ಬಿಜೆಪಿ ನಾಯಕರಿಗೆ ಸವಾಲ್

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಕ್ಷದ ವರಿಷ್ಠರಿಗೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿರುವ ಅವರು, ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳನ್ನು ಜನರ ಮುಂದೆ ಸಮರ್ಥವಾಗಿ ಎದುರಿಸುವುದಾಗಿ ಹೇಳಿದ ಅವರು, ಬಿಜೆಪಿಯವರು ಜನತಾ ನ್ಯಾಯಾಲಯಕ್ಕೆ ಬರಲಿ ಎಂದು ಸವಾಲು ಹಾಕಿದರು.

ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ನಾಗೇಂದ್ರ, ವಿಧಾನಸಭೆ ಕಲಾಪದ ವೇಳೆ ಹಲವು ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು. ನೋಟಿಸ್ ನೀಡಿ ಚರ್ಚೆಗೆ ಬರುವಂತೆ ಕೇಳಿಕೊಂಡರೂ ವಿಪಕ್ಷಗಳು ಸ್ಪಂದಿಸಲಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿ, KPSC ಅಕ್ರಮ, ಕಾವೇರಿ ನೀರಿನ ವಿಚಾರ ಹಾಗೂ ಕಸ್ತೂರಿ ರಂಗನ್ ವರದಿ ಸೇರಿದಂತೆ ಹಲವು ವಿಷಯಗಳ ಕುರಿತು ಸದನದಲ್ಲಿ ಚರ್ಚೆ ನಡೆಯಬೇಕಿತ್ತು. ಆದರೆ ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿದವು. ಇದೀಗ ಯಾವುದೇ ಸ್ಪಷ್ಟ ವಿಷಯವಿಲ್ಲದೆ ಪಾದಯಾತ್ರೆ ನಡೆಸಲು ಮುಂದಾಗಿವೆ ಎಂದು ನಾಗೇಂದ್ರ ಟೀಕಿಸಿದರು.

ಬಿಜೆಪಿ ನಾಯಕರು ಮನುಸ್ಮೃತಿ ವಿಚಾರಧಾರೆ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. “ಇದು ವೇದ ಕಾಲವಲ್ಲ, ಪುರಾಣ ಕಾಲವಲ್ಲ. ಇದು ಸಂವಿಧಾನದ ಕಾಲ, ಅಂಬೇಡ್ಕರ್ ಯುಗ” ಎಂದರು.

ದಲಿತರು, ಆದಿವಾಸಿಗಳು ಹಾಗೂ ಬಡವರು ಅಧಿಕಾರಕ್ಕೆ ಬರಬಾರದು ಎಂಬ ಮನಸ್ಥಿತಿ ಬಿಜೆಪಿಯಲ್ಲಿದೆ. ತಾವು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡು ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ನಾಗೇಂದ್ರ ಸ್ಪಷ್ಟಪಡಿಸಿದರು.

“ನಾನು ಹಣ ವರ್ಗಾವಣೆಗೆ ಆದೇಶ ಮಾಡಿದ್ದೇನಾ? ನನ್ನ ನೋಟ್‌ಶೀಟ್ ಇದೆಯಾ? ಪ್ರಕರಣದಲ್ಲಿ ನನ್ನ ಪಾತ್ರವಿದೆ ಎಂಬುದಕ್ಕೆ ದಾಖಲೆ ತೋರಿಸಲಿ” ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆಯಲಾಗಿದೆ ಎಂದು ಹೇಳಿದ ಅವರು, ತಮ್ಮ ವಿರುದ್ಧದ ಆರೋಪಗಳು ತನಿಖೆಯ ಮೂಲಕ ಸುಳ್ಳೆಂದು ಸಾಬೀತಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಕರಣದ ತನಿಖೆ ನಡೆಸಿದ SIT ಮತ್ತು CID ಅಧಿಕಾರಿಗಳ ಮೇಲೆ ವಿಶ್ವಾಸವಿದೆ. ED ಮತ್ತು CBI ತನಿಖೆಯ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಪ್ರಕರಣದಲ್ಲಿ ತಮ್ಮನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿರುವುದಾಗಿ ತಿಳಿಸಿದರು.

ಮೊದಲ ಚಾರ್ಜ್‌ಶೀಟ್‌ನಲ್ಲಿ ತಮ್ಮ ಹೆಸರು ಇರಲಿಲ್ಲ. ತಾವು ಸಚಿವರಾದ ಬಳಿಕ ಸಲ್ಲಿಸಲಾದ ಎರಡನೇ ಚಾರ್ಜ್‌ಶೀಟ್‌ನಲ್ಲಿ ತಮ್ಮ ಹೆಸರನ್ನು ಸೇರಿಸಲಾಗಿದೆ ಎಂದು ಅವರು ಆರೋಪಿಸಿದರು.

ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಕ್ರಮವನ್ನು ಸ್ವಾಗತಿಸುವುದಾಗಿ ಹೇಳಿದ ನಾಗೇಂದ್ರ, ಇದೇ ಮಾನದಂಡವನ್ನು ಇತರ ರಾಜಕಾರಣಿಗಳ ಪ್ರಕರಣಗಳಲ್ಲೂ ಅನುಸರಿಸಬೇಕು ಎಂದು ಆಗ್ರಹಿಸಿದರು.

“ಕುಮಾರಸ್ವಾಮಿ ಅವರ ವಿಚಾರದಲ್ಲಿ ಯಾಕೆ ಪ್ರಾಸಿಕ್ಯೂಷನ್‌ಗೆ ಕಳುಹಿಸಲಿಲ್ಲ? ನನಗೆ ಒಂದು ನ್ಯಾಯ, ಅವರಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳಲ್ಲೂ ಕಾನೂನು ಪ್ರಕ್ರಿಯೆ ಸಮಾನವಾಗಿ ನಡೆಯಬೇಕು ಎಂದು ಹೇಳಿದರು.

ಜನಾರ್ದನ ರೆಡ್ಡಿ, ಶ್ರೀರಾಮುಲು ವಿರುದ್ಧ ಟೀಕೆ:

ಬಳ್ಳಾರಿ ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ವಿರುದ್ಧವೂ ನಾಗೇಂದ್ರ ವಾಗ್ದಾಳಿ ನಡೆಸಿದರು.

“ಬಳ್ಳಾರಿಯಲ್ಲಿರುವ ನಾಯಕರು ಬನ್ನಿ. ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಹೇಳಿದ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಜನರ ಮುಂದೆ ಚರ್ಚಿಸಲು ಸಿದ್ಧ. ED ಮತ್ತು CBI ತನಿಖೆಯ ಹೆಸರಿನಲ್ಲಿ ತಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಯಾವುದೇ ತನಿಖೆಯನ್ನು ಕಾನೂನುಬದ್ಧವಾಗಿ ಎದುರಿಸುವುದಾಗಿ ಹೇಳಿದರು.

‘ರಾಜೀನಾಮೆಯಿಂದ ಸರ್ಕಾರದ ಕೆಲಸಕ್ಕೆ ಅಡ್ಡಿಯಾಗಬಾರದು’:

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ನಾಯಕರು ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಪಕ್ಷದ ವರಿಷ್ಠರಿಗೆ ಮುಜುಗರ ಉಂಟಾಗಬಾರದು ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.

ಮುಂದಿನ ದಿನಗಳಲ್ಲಿ ತಮ್ಮ ಮೇಲಿನ ಆರೋಪಗಳ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದ ನಾಗೇಂದ್ರ, ಚುನಾವಣೆಯ ಸಂದರ್ಭದಲ್ಲಿ ಈ ವಿಚಾರವನ್ನು ಜನರ ಮುಂದೆ ಇಡುವುದಾಗಿ ತಿಳಿಸಿದರು. “ನಾನು ಹೋರಾಟ ಮುಂದುವರಿಸುತ್ತೇನೆ. ಅನ್ಯಾಯವಾದರೆ ಅದನ್ನು ಪ್ರಶ್ನಿಸುತ್ತೇನೆ” ಎಂದು ನಾಗೇಂದ್ರ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ಆರೋಪ: ಸಮಗ್ರ ತನಿಖೆಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಹೆಚ್ಚುವರಿ ಪ್ರಭಾರ ಹಂಚಿಕೆ, ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಮಗ್ರ ತನಿಖೆ ನಡೆಸುವಂತೆ ಮುಸ್ಲಿಂ ಸಮಾಜದ ಯುವಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಾಮಾಜಿಕ ಕಾರ್ಯಕರ್ತ ಇಮಾಮಸಾಬ ಡಂಬಳ ಮಾತನಾಡಿ, ಉಚ್ಚ ನ್ಯಾಯಾಲಯ ಹಾಗೂ ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಹೆಚ್ಚುವರಿ ಹುದ್ದೆಗಳ ಪ್ರಭಾರ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಒಬ್ಬೊಬ್ಬ ಸಿಬ್ಬಂದಿಗೆ ನಾಲ್ಕೈದು ಹುದ್ದೆಗಳ ಹೆಚ್ಚುವರಿ ಜವಾಬ್ದಾರಿ ನೀಡಿರುವುದರಿಂದ ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಲಭ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಸಾರ್ವಜನಿಕರು ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ವಸತಿ ನಿಲಯಗಳಲ್ಲಿ ಮೂಲಸೌಕರ್ಯ ಮತ್ತು ಗುಣಮಟ್ಟದ ಆಹಾರದ ಕೊರತೆಯಿದ್ದು, ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿಯೂ ನಿಯಮಬಾಹಿರತೆ ನಡೆದಿದೆ ಎಂದು ಆರೋಪಿಸಿದರು. ಇಲಾಖೆಯಲ್ಲಿನ ಎಲ್ಲ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜೇಸಾಬ ಶಿರಹಟ್ಟಿ, ಅಮನ್ ಬೋದ್ಲೆಖಾನ, ಆಸೀಫ್ ಯಲಿಗಾರ, ಗೌಸಮೋದಿನ್ ಸೂಡಿ, ಜೈಲಾನಿ ಶಿರಹಟ್ಟಿ, ಇರ್ಷಾದಅಹ್ಮದ ದಂಡಿನ, ಜಾಕೀರಹುಸೇನ ಮಾಲ್ದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾರ್ವಜನಿಕರಿಗೆ ನ್ಯಾಯ ದೊರೆಯಬೇಕಾದರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಸಮಗ್ರ ತನಿಖೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

– ಇಮಾಮಸಾಬ ಡಂಬಳ, ಸಾಮಾಜಿಕ ಕಾರ್ಯಕರ್ತ

ಬರ ಘೋಷಣೆಯಲ್ಲಿ ಗದಗ ಜಿಲ್ಲೆಗೆ ಅನ್ಯಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಸೇರಿಸಿರುವುದು ಜಿಲ್ಲೆಯ ರೈತರಿಗೆ ಮಾಡಿದ ಅನ್ಯಾಯ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಅಲಿ ಎಚ್. ಕೊಪ್ಪಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗಿಲ್ಲ. ಬಿತ್ತನೆ ಮಾಡಿದ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದು, ಬರ ಅಧ್ಯಯನ ಯಾವ ಆಧಾರದ ಮೇಲೆ ನಡೆಸಲಾಗಿದೆ ಎಂಬುದು ಪ್ರಶ್ನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಗದಗ ಜಿಲ್ಲೆಯ ಎಲ್ಲ ಏಳು ತಾಲೂಕುಗಳಲ್ಲಿ ಮರು ಸಮೀಕ್ಷೆ ನಡೆಸಿ, ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಗದಗ ಜಿಲ್ಲೆಯ ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಎಲ್ಲ ಏಳು ತಾಲೂಕುಗಳಲ್ಲಿ ಮರು ಸಮೀಕ್ಷೆ ನಡೆಸಿ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು.

– ಹಾಜಿಅಲಿ ಎಚ್. ಕೊಪ್ಪಳ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಬಂದ್ ಆತಂಕಕ್ಕೆ ತೆರೆ; ಕೆಂಚಲಾಪೂರ ಶಾಲೆ ಪುನರಾರಂಭ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಳೆದ ಒಂದು ವಾರದಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ಪಟ್ಟಣದ ಕೆಂಚಲಾಪೂರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುನರಾರಂಭಗೊಂಡಿದ್ದು, ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸೀಮಿಕೇರಿ ಶಾಲೆಗೆ ಭೇಟಿ ನೀಡಿ ಪಾಲಕರು, ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳ ಸಭೆ ನಡೆಸುವ ಮೂಲಕ ಉಂಟಾಗಿದ್ದ ಗೊಂದಲವನ್ನು ನಿವಾರಿಸುವ ಪ್ರಯತ್ನ ನಡೆಸಿದರು.

ಸುಮಾರು 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಯಲ್ಲಿ ಕಳೆದ ಎರಡು-ಮೂರು ವರ್ಷಗಳಿಂದ ಉಂಟಾದ ನಿರ್ಲಕ್ಷ್ಯದಿಂದ ಮಕ್ಕಳು ವರ್ಗಾವಣೆ ಪ್ರಮಾಣಪತ್ರ ಪಡೆದು ಬೇರೆ ಶಾಲೆಗಳಿಗೆ ದಾಖಲಾದ ಕಾರಣ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೂನ್ಯ ದಾಖಲಾತಿ ಉಂಟಾಗಿತ್ತು. ಇದರಿಂದ ಶಾಲೆಯನ್ನು ಮುಚ್ಚಲಾಗುತ್ತಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿತ್ತು.

ಸಾರ್ವಜನಿಕರ ಆಕ್ರೋಶ ಮತ್ತು ಶಾಲೆ ಉಳಿಸಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲಕರ ಮನವೊಲಿಸಿ ಮಕ್ಕಳನ್ನು ಮತ್ತೆ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದ್ದರು. ಅದರಂತೆ ಮಂಗಳವಾರ ಶಾಲೆ ಪುನರಾರಂಭಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಪಾಲಕರು, ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳ ಸಭೆಗೆ ವಿಶೇಷ ಮಹತ್ವ ದೊರೆಯಿತು.

ಸಭೆಯಲ್ಲಿ ಮಾತನಾಡಿದ ಯುವ ಮುಖಂಡ ಮಂಜುನಾಥ ಮಾಗಡಿ, ಕೆಂಚಲಾಪೂರ ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದ್ದು, ಈ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಈ ಭಾಗದ ಜನರು ಶಾಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.

ಬಳಿಕ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸೀಮಿಕೇರಿ, ಶಿಕ್ಷಕರು ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸದಿರುವುದರಿಂದ ಶಾಲೆ ಈ ಸ್ಥಿತಿಗೆ ತಲುಪಿದೆ ಎಂಬ ಪಾಲಕರು ಹಾಗೂ ಸಾರ್ವಜನಿಕರ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂತಹ ಪರಿಸ್ಥಿತಿಯು ಇಡೀ ಶಿಕ್ಷಣ ಇಲಾಖೆಗೆ ಕೆಟ್ಟ ಹೆಸರು ತರುವಂತಾಗಿದೆ ಎಂದು ಹೇಳಿದರು.

ಶಾಲೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಶಿಕ್ಷಕರು ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಕ ವೃತ್ತಿಯ ಗೌರವವನ್ನು ಕಾಪಾಡಿಕೊಂಡು ವೃತ್ತಿ ಬದುಕನ್ನು ಸಾರ್ಥಕಗೊಳಿಸಬೇಕು ಎಂದು ಪರೋಕ್ಷ ಎಚ್ಚರಿಕೆ ನೀಡಿದರು.

ಇದೇ ವೇಳೆ ಶಾಲೆಗೆ ಒಬ್ಬ ಶಿಕ್ಷಕರನ್ನು ಸ್ಥಳದಲ್ಲಿಯೇ ನಿಯೋಜಿಸುವ ಭರವಸೆ ನೀಡಿ, ಸಂಬಂಧಿತ ಶಿಕ್ಷಕರ ಹೆಸರನ್ನು ಘೋಷಿಸಿದರು. ಅವರು ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು. ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವರಾಜ ಸೀಮಿಕೇರಿ ಭರವಸೆ ನೀಡಿದರು.

ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸುಲೇಮಾನ ಮುಜಾವರ, ಶಿಕ್ಷಣ ಸಂಯೋಜಕ ಆರ್.ಬಿ. ಜೋಶಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಹವಾಲ್ದಾರ, ಸಿಆರ್‌ಪಿಗಳಾದ ಉಮೇಶ ನೇಕಾರ, ಶ್ರೀನಿವಾಸ ಮತ್ತೂರ, ಎನ್.ಎ. ಮುಲ್ಲಾ, ಶಿಕ್ಷಕರಾದ ಚಂದ್ರಕಾಂತ ನೇಕಾರ, ಬಿ.ಎಂ. ಕುಂಬಾರ, ಡಿ.ಬಿ. ದೊಡ್ಡಮನಿ, ಶಾಲೆಯ ಮುಖ್ಯಶಿಕ್ಷಕಿ ಎಲ್.ಕೆ. ಹೆಬ್ಬಳ್ಳಿ ಸೇರಿದಂತೆ ಓಣಿಯ ಹಿರಿಯರು, ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕೆಂಚಲಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಶಾಲೆಯನ್ನು ಉಳಿಸಿ ಬೆಳೆಸಲು ಶಿಕ್ಷಣ ಇಲಾಖೆ, ಶಿಕ್ಷಕರು, ಪಾಲಕರು ಹಾಗೂ ಸಾರ್ವಜನಿಕರೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಾಲೆಯ ಹಿಂದಿನ ವೈಭವವನ್ನು ಮರಳಿ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

— ಶಿವರಾಜ ಸೀಮಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ