Home Blog Page 4

ನಿಶ್ಯಬ್ದದ ಬದುಕಿನ ಮಹಾ ಬೆಳಕು : ಪೂಜ್ಯ ಶ್ರೀ ಸಿದ್ಧೇಶ್ವರ ಅಪ್ಪಾಜಿ

ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ಧೇಶ್ವರ ಅಪ್ಪಾಜಿಯವರ ಬದುಕೇ ಒಂದು ನಿಶ್ಯಬ್ದ. ಆ ನಿಶ್ಯಬ್ದವನ್ನು ಶಬ್ದಗಳಲ್ಲಿ ಕಟ್ಟಿಕೊಡುವುದು ಅಸಾಧ್ಯ; ಕಟ್ಟಿಕೊಟ್ಟರೂ ಅದು ಅಪೂರ್ಣವೇ. ಏಕೆಂದರೆ ಅವರ ಬದುಕು ಪದಗಳಿಗೆ ನಿಲುಕದಷ್ಟು ವಿಶಾಲ, ವಿವರಣೆಗೆ ಸಿಗದಷ್ಟು ಆಳ ಹಾಗೂ ಅನುಭವಿಸಿದವರಿಗೆ ಮಾತ್ರ ಅರಿವಾಗುವಷ್ಟು ಆತ್ಮೀಯ.

ಭೂಮಾತೆಯ ಮಡಿಲಲ್ಲಿ ತಮ್ಮ ಶುಭ್ರ ಛಾಯೆಯನ್ನು ಬಿಟ್ಟುಹೋದ ಅನೇಕ ಪುಣ್ಯಾತ್ಮರ ಕುರಿತು ನಾವು ಕೇಳಿದ್ದೇವೆ, ಓದಿದ್ದೇವೆ; ಕೆಲವರನ್ನು ಪ್ರತ್ಯಕ್ಷವಾಗಿ ಕಂಡಿದ್ದೇವೆ. ಆದರೆ ಕೆಲವರು ಯಾವುದೇ ಉಪಮೆಗೆ ನಿಲುಕದವರು. ಅಂತಹ ಮಹನೀಯರನ್ನು ಪರಮಾತ್ಮನೇ ಮನುಕುಲಕ್ಕೆ ಕೊಡುಗೆಯಾಗಿ ನೀಡುತ್ತಾನೆ. ಪೂಜ್ಯ ಸಿದ್ಧೇಶ್ವರ ಅಪ್ಪಾಜಿಯವರು ಅಂತಹ ಅಪರೂಪದ ಪುಣ್ಯಾತ್ಮರಲ್ಲಿ ಒಬ್ಬರು.

ಅವರನ್ನು ಶರಣರೆನ್ನಬಹುದು, ಸಂತರೆನ್ನಬಹುದು, ದಾಸರೆನ್ನಬಹುದು, ಜ್ಞಾನಿ ಅಥವಾ ಆಧ್ಯಾತ್ಮಿಕ ಚೇತನರೆನ್ನಬಹುದು. ಆದರೆ ಈ ಪ್ರತಿಯೊಂದು ಪದವೂ ಅವರ ವ್ಯಕ್ತಿತ್ವದ ಒಂದು ಮುಖವನ್ನು ಮಾತ್ರ ಪರಿಚಯಿಸುತ್ತದೆ. ಈ ಎಲ್ಲ ಗುಣಗಳನ್ನೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು, ಅವುಗಳನ್ನೂ ಮೀರಿದ ಸರಳ, ಸಜ್ಜನಿಕೆಯ ಹಾಗೂ ಶುಭ್ರ ಬದುಕನ್ನು ನಡೆಸಿದ ಅಪೂರ್ವ ವ್ಯಕ್ತಿತ್ವ ಅವರದು.

  • ಅವರ ಸರಳತೆಯೇ ಅವರ ವೈಭವ.
  • ಅವರ ಮೌನವೇ ಅವರ ಸಂದೇಶ.
  • ಅವರ ಜೀವನವೇ ಅವರ ಪ್ರವಚನ.
  • ಅವರ ನಡೆ-ನುಡಿಯೇ ಅವರ ತತ್ವಜ್ಞಾನ.

ದೊಡ್ಡ ದೊಡ್ಡ ಮಾತುಗಳಿಂದ ತಮ್ಮ ಮಹತ್ವವನ್ನು ಸಾರಲಿಲ್ಲ. ಬದಲಾಗಿ, ಬದುಕಿನ ಮೂಲಕವೇ ಮಹತ್ವವೆಂದರೇನು ಎಂಬುದನ್ನು ತೋರಿಸಿದರು. ಜ್ಞಾನವನ್ನು ಪ್ರದರ್ಶಿಸಲಿಲ್ಲ—ಹಂಚಿದರು. ಆಧ್ಯಾತ್ಮವನ್ನು ಕೇವಲ ಬೋಧಿಸಲಿಲ್ಲ—ಬದುಕಿದರು. ವೈರಾಗ್ಯವನ್ನು ವಿವರಿಸಲಿಲ್ಲ—ತಮ್ಮ ಜೀವನದಲ್ಲೇ ಸಾಕಾರಗೊಳಿಸಿದರು.

ಅವರ ಸನ್ನಿಧಿಯಲ್ಲಿ ಕುಳಿತಾಗ ಮನಸ್ಸನ್ನು ಆವರಿಸುತ್ತಿದ್ದ ನೆಮ್ಮದಿ ವಿಶಿಷ್ಟವಾದುದು. ಅವರ ಮಾತುಗಳು ಕಿವಿಗೆ ಬೀಳುವುದಕ್ಕಿಂತ ಮೊದಲು ಹೃದಯವನ್ನು ತಟ್ಟುತ್ತಿದ್ದವು. ಅತ್ಯಂತ ಸರಳವಾಗಿ ಮಾತನಾಡಿದರೂ, ಆ ಮಾತುಗಳ ಆಳವನ್ನು ಅರಿಯಲು ಕೆಲವೊಮ್ಮೆ ಇಡೀ ಬದುಕೇ ಬೇಕೆನಿಸುತ್ತಿತ್ತು.

  • ಅವರನ್ನು ನೋಡುವುದು ಒಂದು ಅನುಭವ.
  • ಅವರನ್ನು ಕೇಳುವುದು ಒಂದು ಪಾಠ.
  • ಅವರೊಂದಿಗೆ ಇರುವುದು ಒಂದು ಸೌಭಾಗ್ಯ.
  • ಅವರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದು ಒಂದು ಆತ್ಮಯಾನ.
  • ಅಂತಹ ಮಹಾತ್ಮರ ಸನ್ನಿಧಿಯಲ್ಲಿ ಇದ್ದವರು ನಿಜಕ್ಕೂ ಸೌಭಾಗ್ಯಶಾಲಿಗಳು.

ಕಾಲ ಕಳೆಯುತ್ತದೆ. ದೇಹಗಳು ಮರೆಯಾಗುತ್ತವೆ. ಧ್ವನಿಗಳು ಮೌನವಾಗುತ್ತವೆ. ಆದರೆ ಕೆಲವು ವ್ಯಕ್ತಿತ್ವಗಳು ಮಾತ್ರ ಕಾಲವನ್ನು ಮೀರಿ ಉಳಿಯುತ್ತವೆ. ಏಕೆಂದರೆ ಅವರು ಬಿಟ್ಟುಹೋಗುವುದು ಕೇವಲ ನೆನಪುಗಳಲ್ಲ; ಒಂದು ಚಿಂತನೆ, ಒಂದು ದಾರಿ, ಒಂದು ಬೆಳಕು ಹಾಗೂ ಬದುಕಿನ ಮೌಲ್ಯ.

ಸಿದ್ಧೇಶ್ವರ ಅಪ್ಪಾಜಿಯವರು ಅಂತಹ ಬೆಳಕಿನ ಪಥಿಕರು. ಅವರ ಬದುಕನ್ನು ಬರೆಯಲು ಶಬ್ದಗಳು ಸಾಲವು. ಅವರ ವ್ಯಕ್ತಿತ್ವವನ್ನು ಅಳೆಯಲು ಅಳತೆಗೋಲು ಸಾಲದು. ಅವರ ಸರಳತೆಯನ್ನು ವರ್ಣಿಸಲು ವಿಶೇಷಣಗಳು ಸಾಲವು.

ಹೀಗಾಗಿ ಅವರ ಬದುಕಿನ ಮುಂದೆ ನಿಂತಾಗ ಪದಗಳೇ ಮೌನವಾಗುತ್ತವೆ. ಆ ಮೌನದಲ್ಲಿಯೇ ಅವರ ಮಹತ್ವವಿದೆ. ಆ ನಿಶ್ಯಬ್ದದಲ್ಲಿಯೇ ಅವರ ಸಂದೇಶವಿದೆ. ಆ ಸರಳತೆಯಲ್ಲಿಯೇ ಅವರ ದಿವ್ಯತೆಯಿದೆ.

ಪೂಜ್ಯ ಶ್ರೀ ಸಿದ್ಧೇಶ್ವರ ಅಪ್ಪಾಜಿಯವರ ಬದುಕು—ನಿಶ್ಯಬ್ದವಾಗಿ ಹೊತ್ತಿ ಉರಿದ ಒಂದು ಜ್ಞಾನಜ್ಯೋತಿ.

ಡಾ. ವಿಜಯ್ ವಿ. ಮುರದಂಡೆ

ಸಹಾಯಕ ಪ್ರಾಧ್ಯಾಪಕರು,

ಕೆಎಲ್‌ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ, ಗದಗ

ಪೆನ್ನು ಹಿಡಿದು ವಲಯ ಮಟ್ಟದಲ್ಲಿ ಮಿಂಚಿದ ಶ್ರಾವಣಿ

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಡಿಜಿಟಲ್‌ ಯುಗದ ಭರಾಟೆಯ ನಡುವೆಯೂ ಪೆನ್ನು-ಪೇಪರ್‌ನೊಂದಿಗೆ ಭಾವನೆಗಳನ್ನು ಅಕ್ಷರ ರೂಪಕ್ಕಿಳಿಸುವ ಕಲೆ ತನ್ನ ಮಹತ್ವವನ್ನು ಕಳೆದುಕೊಂಡಿಲ್ಲ ಎಂಬುದನ್ನು ವಿದ್ಯಾರ್ಥಿನಿ ಶ್ರಾವಣಿ ಕರಿಗಾರ ಅವರ ಸಾಧನೆ ಮತ್ತೊಮ್ಮೆ ಸಾಬೀತುಪಡಿಸಿದೆ.

ಭಾರತೀಯ ಅಂಚೆ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಪತ್ರ ಬರೆಯುವ ಅಭಿಯಾನ 2025-26ರ ‘ನನ್ನ ಆದರ್ಶ ವ್ಯಕ್ತಿಗೊಂದು ಪತ್ರ’ ವಿಷಯದ ಪತ್ರ ಬರೆಯುವ ಸ್ಪರ್ಧೆಯಲ್ಲಿ ಮುಂಡರಗಿಯ ಜಗದ್ಗುರು ತೋಂಟದಾರ್ಯ ವಸತಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರಾವಣಿ ಕರಿಗಾರ ವಲಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಗದಗ ವಿಭಾಗೀಯ ಅಂಚೆ ಅಧೀಕ್ಷಕ ಎಸ್.ಎಸ್. ಶಿರಹಟ್ಟಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿರಹಟ್ಟಿ, ವಿದ್ಯಾರ್ಥಿಗಳಲ್ಲಿ ಬರವಣಿಗೆಯ ಅಭ್ಯಾಸ, ಸೃಜನಶೀಲತೆ ಹಾಗೂ ಸಂವಹನ ಕೌಶಲ್ಯ ಬೆಳೆಸುವ ನಿಟ್ಟಿನಲ್ಲಿ ಅಂಚೆ ಇಲಾಖೆ ವಿವಿಧ ಪತ್ರ ಬರೆಯುವ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಕೈಬರಹದ ಅಭ್ಯಾಸವನ್ನು ಮುಂದುವರಿಸುವುದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಲಿದೆ ಎಂದರು.

ಅಂಚೆ ಇಲಾಖೆಯ ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಪರೀಕ್ಷೆ ನಡೆಸಲಾಗುತ್ತಿದ್ದು, ಅರ್ಹತೆ ಪಡೆದವರಿಗೆ ಪ್ರತಿವರ್ಷ ₹6,000 ಪ್ರೋತ್ಸಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಅಂಚೆ ಇಲಾಖೆಯ ವಿವಿಧ ಉಳಿತಾಯ ಹಾಗೂ ಜನೋಪಯೋಗಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಂಚೆ ಜೀವ ವಿಮಾ ಅಧಿಕಾರಿ ಎಸ್.ಐ. ನಾಯ್ಕ ಮಾತನಾಡಿ, 18 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಗದಗ ನಗರದ ಎ.ಎಸ್.ಎಸ್. ಕಾಮರ್ಸ್ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ವೇತಾ ಸಿ. ಶಿರೂರ ಪ್ರಥಮ ಸ್ಥಾನ ಪಡೆದು ₹25,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪಡೆದಿರುವುದನ್ನು ತಿಳಿಸಿದರು. ಜಿಲ್ಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಿದ್ದಾರೆ ಎಂದರು.

ಮುಂಡರಗಿ ಅಂಚೆ ಕಚೇರಿಯ ಅಂಚೆ ಪಾಲಕ ಹಾಲಪ್ಪ ವಾಮಕೆರಿ, ಶಾಲೆಯ ಪ್ರಾಚಾರ್ಯ ಶರಣಕುಮಾರ ಬುಗಟಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ, ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು ಇಂತಹ ಸ್ಪರ್ಧೆಗಳ ಮುಖ್ಯ ಉದ್ದೇಶ. ಶ್ರಾವಣಿಯಂತಹ ವಿದ್ಯಾರ್ಥಿಗಳ ಸಾಧನೆ ಇತರರಿಗೂ ಪ್ರೇರಣೆಯಾಗಲಿ.

— ಎಸ್.ಎಸ್. ಶಿರಹಟ್ಟಿ, ವಿಭಾಗೀಯ ಅಂಚೆ ಅಧೀಕ್ಷಕ, ಗದಗ

ಶಿಕ್ಷಕರ ನಿರಂತರ ಪರಿಶ್ರಮದಿಂದ ಗದಗಕ್ಕೆ ಶೇ.94 ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸಮಯ ಮೀಸಲಿಡಬೇಕು. ಬೋಧನಾ ಕಾರ್ಯಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದ ಸರಾಸರಿ ಫಲಿತಾಂಶ ಶೇ.93 ಇದ್ದರೆ, ಗದಗ ಜಿಲ್ಲೆ ಶೇ.94ರಷ್ಟು ಫಲಿತಾಂಶ ದಾಖಲಿಸಿ ರಾಜ್ಯದ ಸರಾಸರಿಯನ್ನು ಮೀರಿದೆ. ಇದಕ್ಕೆ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರಂತರ ಪರಿಶ್ರಮವೇ ಕಾರಣ ಎಂದು ಸಂಕನೂರ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಅವಧಿಗೂ ಮುನ್ನ ಹಾಗೂ ನಂತರ ಪರಿಹಾರ ಬೋಧನೆ, ಪರೀಕ್ಷಾ ಸಂದರ್ಭದಲ್ಲಿ ‘ಓದಿನ ಮನೆ’ ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಶ್ರಮಿಸಿದ ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು.

ಶಾಲೆಗಳಲ್ಲಿ ಆನ್‌ಲೈನ್ ಹಾಗೂ ಡಿಜಿಟಲ್ ಕಾರ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಪ್ಯೂಟರ್ ಅಥವಾ ಡೇಟಾ ಎಂಟ್ರಿ ಆಪರೇಟರ್‌ಗಳಂತಹ ಸಹಾಯಕ ಸಿಬ್ಬಂದಿ ಒದಗಿಸುವ ಕುರಿತು ಸರ್ಕಾರ ಗಮನಹರಿಸಬೇಕು. ಇದರಿಂದ ಶಿಕ್ಷಕರು ಬೋಧನೆ, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಕಲಿಕಾ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತದೆ ಎಂದರು.

ಕನ್ನಡದ ಜತೆಗೆ ಇಂಗ್ಲಿಷ್‌ನಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ಅವಕಾಶ ಕಲ್ಪಿಸಲು ದ್ವಿಭಾಷಾ ಬೋಧನಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಶಿಕ್ಷಕರಿಗೆ ಆರು ತಿಂಗಳಿಂದ ಒಂದು ವರ್ಷದವರೆಗೆ ಹಂತ ಹಂತವಾಗಿ ತರಬೇತಿ ನೀಡಿದರೆ ಆತ್ಮವಿಶ್ವಾಸದಿಂದ ದ್ವಿಭಾಷಾ ಬೋಧನೆ ನಡೆಸಲು ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ, ಜ್ಞಾನ, ಸರಳತೆ ಹಾಗೂ ನಿರಂತರ ಕಲಿಕೆಯ ಮನೋಭಾವ ಪ್ರತಿಯೊಬ್ಬ ಶಿಕ್ಷಕರಿಗೂ ಪ್ರೇರಣೆಯಾಗಬೇಕು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿ, ವಿಶ್ವವಿದ್ಯಾಲಯದ ಕುಲಪತಿ, ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿ ಹುದ್ದೆಗೇರಿದ ಅವರ ಜೀವನ ಶಿಕ್ಷಕರಿಗೆ ಆದರ್ಶವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಶಿಕ್ಷಕರನ್ನು ಗೌರವಿಸಲಾಯಿತು. ನಿವೃತ್ತ ಶಿಕ್ಷಕರನ್ನೂ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ವಿ. ಬಳ್ಳಾರಿ, ನಿವೃತ್ತ ಶಿಕ್ಷಕ ಎಸ್.ಎನ್. ಬಳ್ಳಾರಿ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕೆ.ಡಿ. ಬಡಿಗೇರ ಸ್ವಾಗತಿಸಿದರು. ಎಂ.ಎಂ. ಮೇಗಲಮನಿ ನಿರೂಪಿಸಿ, ವಂದಿಸಿದರು.

ಶಿಕ್ಷಕ ವೃತ್ತಿ ಸಮಾಜ ನಿರ್ಮಾಣದ ಪ್ರಮುಖ ಕೊಂಡಿಯಾಗಿದೆ. ಶಿಕ್ಷಕರು ಪಠ್ಯ ಬೋಧನೆಗೆ ಮಾತ್ರ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳು, ಶಿಸ್ತು, ಜವಾಬ್ದಾರಿ ಹಾಗೂ ಆತ್ಮವಿಶ್ವಾಸ ಬೆಳೆಸುವ ಕೆಲಸಕ್ಕೂ ಆದ್ಯತೆ ನೀಡಬೇಕು. ಶಿಕ್ಷಕರ ಗೌರವ ಮತ್ತು ಘನತೆ ಎತ್ತಿಹಿಡಿದಾಗ ಮಾತ್ರ ಉತ್ತಮ ಶಿಕ್ಷಣ ವ್ಯವಸ್ಥೆ ನಿರ್ಮಿಸಲು ಸಾಧ್ಯ.

— ಎಸ್.ವಿ. ಸಂಕನೂರ, ವಿಧಾನ ಪರಿಷತ್ ಶಾಸಕ

ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರದಿದ್ದರೆ ಸಿಎಂಗೆ ವರದಿ: ಡಾ. ಚಂದ್ರು ಲಮಾಣಿ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ವಾಸ್ತವ್ಯ ಮಾಡದೇ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಉನ್ನತ ಅಧಿಕಾರಿಗಳಿಗೆ ಅಧಿಕೃತ ಠರಾವು ಮೂಲಕ ವರದಿ ಸಲ್ಲಿಸಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಕೆ ನೀಡಿದರು.

ಶನಿವಾರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನದ ಅಧ್ಯಕ್ಷತೆ ವಹಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯ ಮಾಡಬೇಕು. ಇದನ್ನು ಖಚಿತಪಡಿಸಲು ಜಿಪಿಎಸ್ ಫೋಟೋ ಹಾಕಬೇಕು. ಕೇಂದ್ರಸ್ಥಾನದಲ್ಲಿ ವಾಸ್ತವ್ಯ ಮಾಡದ ಅಧಿಕಾರಿಗಳು ಕೂಡಲೇ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಬೆಳಗಿನ ಜಾವವೇ ಸಾರಾಯಿ ಮಾರಾಟ?

ಶಿರಹಟ್ಟಿ ಪಟ್ಟಣದ ಕೆಲ ಅಂಗಡಿಗಳಲ್ಲಿ ಬೆಳಗಿನ ಜಾವ 4 ಗಂಟೆಗೇ ಅಕ್ರಮವಾಗಿ ಸಾರಾಯಿ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. “ಚಹಾ ಸಿಗುವುದಿಲ್ಲ, ಆದರೆ ಸಾರಾಯಿ ಸಿಗುತ್ತದೆ. ಇದರಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವ ಘಟನೆಗಳೂ ನಡೆಯುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಲಮಾಣಿ, ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಸೂಚಿಸಿದರು.

ಸಭೆಗೆ ಗೈರುಹಾಜರಾಗಿದ್ದ ಅಬಕಾರಿ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಸುವಂತೆ ತಹಸೀಲ್ದಾರ್ ಕೆ. ರಾಘವೇಂದ್ರರಾವ್ ಹಾಗೂ ಸಿಪಿಐ ಬಿ.ವಿ. ನ್ಯಾಮಗೌಡ ಅವರಿಗೆ ಸೂಚಿಸಿದರು.

ಎಪಿಎಂಸಿ ಸ್ವಚ್ಛಗೊಳಿಸಿ, ಬೀದಿ ವ್ಯಾಪಾರಿಗಳಿಗೆ ವ್ಯವಸ್ಥೆ

ಶಿರಹಟ್ಟಿ ಸರ್ಕಾರಿ ಶಾಲೆ ಸುತ್ತಮುತ್ತ ಒತ್ತುವರಿಯಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಬಸ್ ನಿಲ್ದಾಣದ ಸಮೀಪದ ಬೀದಿ ವ್ಯಾಪಾರದಿಂದ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಪಿಎಂಸಿ ಆವರಣವನ್ನು ಸ್ವಚ್ಛಗೊಳಿಸಿ, ಬೀದಿ ವ್ಯಾಪಾರಿಗಳಿಗೆ ಒಂದು ವಾರದೊಳಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಪಪಂ ಮುಖ್ಯಾಧಿಕಾರಿಗೆ ಶಾಸಕ ಲಮಾಣಿ ಸೂಚಿಸಿದರು.

ಫುಡ್ ಇಲ್ಲದಿದ್ದರೂ ಇಂದಿರಾ ಕ್ಯಾಂಟೀನ್‌ಗೆ ಬಿಲ್?

ಇಂದಿರಾ ಕ್ಯಾಂಟೀನ್‌ನಲ್ಲಿ ಕಳೆದ ಮೂರು ವರ್ಷಗಳಿಂದ ಆಹಾರ ಸಿಗದಿದ್ದರೂ ಪ್ರತಿ ತಿಂಗಳು ಬಿಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ₹5ಕ್ಕೆ ನೀಡುವ ಆಹಾರಕ್ಕೆ ಸರ್ಕಾರ ₹26 ಪಾವತಿಸುತ್ತಿದ್ದು, ಸಾರ್ವಜನಿಕರಿಗೆ ಸಮರ್ಪಕ ಆಹಾರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ತಾಪಂ ಇಒ ಆರ್.ವಿ. ದೊಡ್ಡಮನಿ, ಸಿಪಿಐ ಬಿ.ವಿ. ನ್ಯಾಮಗೌಡ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ, ಪಪಂ ಮುಖ್ಯಾಧಿಕಾರಿ ನೀಲೇಶ ಹಾದಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

165ಕ್ಕೂ ಹೆಚ್ಚು ಅರ್ಜಿ ಸ್ವೀಕಾರ

ಮಧ್ಯಾಹ್ನ 3.30ರವರೆಗೆ 165ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳನ್ನು ಐಪಿಜಿಆರ್‌ಎಸ್ ಮೂಲಕ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಲಾಗಿನ್‌ಗೆ ಕಳುಹಿಸಲಾಗಿದೆ. ಅರ್ಜಿದಾರರಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಉತ್ತರ ನೀಡಲಾಗುವುದು ಎಂದು ತಹಸೀಲ್ದಾರ್ ಕೆ. ರಾಘವೇಂದ್ರರಾವ್ ತಿಳಿಸಿದರು.

ಜನರ ಮನೆಬಾಗಿಲಿಗೆ ಸರ್ಕಾರ; ಅಹವಾಲುಗಳಿಗೆ ತ್ವರಿತ ಪರಿಹಾರ : ಸಂತೋಷ ಲಾಡ್

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಜನರ ಸಮಸ್ಯೆಗಳನ್ನು ಕಚೇರಿಗಳ ಕಡತಕ್ಕೆ ಸೀಮಿತಗೊಳಿಸದೆ, ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಇಲಾಖೆಯನ್ನು ಸ್ಥಾಪಿಸಿದೆ. ಈ ಮೂಲಕ ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ಕಲ್ಪಿಸಲಿದೆ ಎಂದು ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಕಲಘಟಗಿಯ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಆಂದೋಲನ–ಜನಸಂಪರ್ಕ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಅಹವಾಲುಗಳನ್ನು ಆಲಿಸಿ, ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲೂ ಪ್ರಜಾ ಸೇವಾ ಆಂದೋಲನ ಸಭೆ ನಡೆಸಲಾಗುವುದು ಎಂದರು.

ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಜನರು ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸುವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಜನರ ಅಹವಾಲುಗಳನ್ನು ಆಲಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಲಾಗುವುದು ಎಂದು ಲಾಡ್ ಹೇಳಿದರು.

ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ಸರ್ಕಾರ ಜನಪರವಾಗಿದ್ದು, ರೈತರು, ಕಾರ್ಮಿಕರು ಹಾಗೂ ಮಹಿಳೆಯರ ಸಮಸ್ಯೆಗಳನ್ನು ಆಲಿಸಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಅಧಿಕಾರಿಗಳು ನಿಗದಿತ ಸಮಯದಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.

ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರಾಜ್ಯದ ಜನರು ನೀಡಿದ 136 ಸ್ಥಾನಗಳ ಬೆಂಬಲದ ಋಣ ತೀರಿಸುವ ನಿಟ್ಟಿನಲ್ಲಿ ಸರ್ಕಾರ ಜನರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸಲಿದೆ. ಈಗಾಗಲೇ 42ಕ್ಕೂ ಅಧಿಕ ಅಹವಾಲುಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು. ರಾಜ್ಯದ 101 ತಾಲೂಕುಗಳು ಹಾಗೂ ಇತ್ತೀಚೆಗೆ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದರು.

ಶಾಸಕ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ತಾಲೂಕು ಹಾಗೂ ಜಿಲ್ಲಾ ಕಚೇರಿಗಳಲ್ಲಿ ದಾಖಲಿಸಿಕೊಂಡು ಶೀಘ್ರ ಪರಿಹರಿಸಬೇಕು. ಅಧಿಕಾರಿಗಳು ಪ್ರಜೆಗಳ ಸೇವೆಗೆ ಬದ್ಧರಾಗಬೇಕು. ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ವಿಶೇಷಚೇತನರಿಗೆ ತ್ರಿಚಕ್ರ ವಾಹನ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ್ ಟಿ.ಎಚ್.ಎಂ., ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಸ್ನೇಹಲ್ ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ಗೌರಿ ನಿರೂಪಿಸಿದರು.

ಜನರ ಮನೆ ಬಾಗಿಲಿಗೆ ಸರ್ಕಾರ ತೆರಳಲಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹರಿಸಲು ಕ್ರಮ ವಹಿಸಲಾಗುವುದು. ನಿಗದಿತ ಸಮಯದಲ್ಲಿ ಜನರ ಅಹವಾಲುಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

— ಸಂತೋಷ ಲಾಡ್, ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

ಖಾಲಿ ನಿವೇಶನ ಸ್ವಚ್ಛವಾಗಿಡದಿದ್ದರೆ ₹30 ಸಾವಿರದವರೆಗೆ ದಂಡ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನದಲ್ಲಿರುವ ಗಿಡಗಂಟಿ ಹಾಗೂ ಕಸವನ್ನು ತೆರವುಗೊಳಿಸಿ ಸ್ವಚ್ಛವಾಗಿಟ್ಟುಕೊಳ್ಳುವಂತೆ ನಗರಸಭೆ ಸೂಚಿಸಿದೆ.

ಈ ಕುರಿತು ಈಗಾಗಲೇ ಪತ್ರಿಕೆ ಹಾಗೂ ನಗರಸಭೆಯ ಆಟೋಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದ್ದು, ಸೆ.10ರೊಳಗೆ ತಮ್ಮ ಹೆಸರಿನಲ್ಲಿರುವ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸುವಂತೆ ಪೌರಾಯುಕ್ತ ರಾಜಾರಾಮ ಪವಾರ್ ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ನಿವೇಶನ ಸ್ವಚ್ಛಗೊಳಿಸದಿದ್ದರೆ ನಗರಸಭೆಯಿಂದಲೇ ಸ್ವಚ್ಛತಾ ಕಾರ್ಯ ಕೈಗೊಂಡು, ಅದಕ್ಕೆ ತಗಲುವ ವೆಚ್ಚವನ್ನು ಆಸ್ತಿ ಮಾಲೀಕರಿಂದ ವಸೂಲಿ ಮಾಡಲಾಗುವುದು. ನಗರಸಭೆಯಿಂದ ಸ್ವಚ್ಛಗೊಳಿಸಿದ ನಂತರ ಅದರ ವೆಚ್ಚವನ್ನು ಪಾವತಿಸದಿದ್ದಲ್ಲಿ ಸಂಬಂಧಿಸಿದ ಆಸ್ತಿಯ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಿ, ಆಸ್ತಿಯ ಮೇಲೆ ಭೂಜಾ ದಾಖಲೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

20×30 ಅಡಿ ನಿವೇಶನಕ್ಕೆ ₹15 ಸಾವಿರ, 30×40 ಅಡಿಗೆ ₹20 ಸಾವಿರ, 30×50 ಅಡಿಗೆ ₹22 ಸಾವಿರ, 40×60 ಅಡಿಗೆ ₹25 ಸಾವಿರ ಹಾಗೂ 40×60ಕ್ಕಿಂತ ಹೆಚ್ಚಿನ ಅಳತೆಯ ನಿವೇಶನಗಳಿಗೆ ₹30 ಸಾವಿರ ವಸೂಲಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸ್ತಿ ಮಾಲೀಕರು ಯಾವುದೇ ಕ್ರಮಕ್ಕೆ ಅವಕಾಶ ನೀಡದೆ ನಿಗದಿತ ಅವಧಿಯೊಳಗೆ ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್ ಮನವಿ ಮಾಡಿದ್ದಾರೆ.

‘ಪ್ರಜಾ ಸೇವೆ’ ಅರಿವಾಗಿದ್ದು ಮೂರು ವರ್ಷಗಳ ಬಳಿಕವೇ?: ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾಂಗ್ರೆಸ್ ಸರ್ಕಾರ ‘ಪ್ರಜಾ ಸೇವೆ’ ಎಂಬ ಹೊಸ ನಾಟಕ ಆರಂಭಿಸುವ ಮೂಲಕ ಕನ್ನಡಿಗರನ್ನು ಮಂಕು ಮಾಡಲು ಹೊರಟಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.

ಸುಮಾರು 60 ವರ್ಷಗಳ ಕಾಲ ಅಧಿಕಾರ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಪ್ರಜೆಗಳ ಸೇವೆ ಮಾಡಬೇಕೆಂಬುದು ಈಗ ಅರಿವಾದಂತಿದೆ. ಇಷ್ಟು ವರ್ಷಗಳ ಕಾಲ ರಾಜ್ಯವನ್ನು ಕೊಳ್ಳೆ ಹೊಡೆದಿದ್ದು, ಇದೀಗ ಹಗರಣಗಳಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಹೊಸ ಹೊಸ ಹೆಸರುಗಳನ್ನು ಇಟ್ಟು ಜನರ ಗಮನವನ್ನು ಬೇರೆಡೆ ಸೆಳೆಯುವ ವಿಫಲ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ ವೇಳೆ ‘ಪ್ರಜೆಗಳೇ ಪ್ರಭುಗಳು’ ಎಂದು ಹೇಳಿ, ಜನರ ಸೇವೆ ಮಾಡುವುದಾಗಿ ಬಣ್ಣಬಣ್ಣದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷಗಳ ಬಳಿಕ ಪ್ರಜೆಗಳ ಸೇವೆ ಮಾಡಬೇಕೆಂಬುದು ಅರಿವಾಗಿದೆಯೇ? ಅಥವಾ ಲೂಟಿ ಮಾಡಲು ಹೊಸ ಹೆಸರನ್ನು ಬಳಸುತ್ತಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ಕೂಡ ಹತ್ತು ಹಲವು ಹೊಸ ಹೆಸರುಗಳನ್ನು ಇಟ್ಟು ಸರ್ಕಾರದ ಹಣದಲ್ಲಿ ಪ್ರಚಾರ ಪಡೆದಿರುವುದನ್ನು ಯಾರೂ ಮರೆತಿಲ್ಲ. ಇದೀಗ ಮತ್ತೊಂದು ಹೊಸ ಹೆಸರಿನ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.

ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕುವೆ: ಪಿಎಸ್‌ಐ ಶಕುಂತಲಾ ನಾಯಕ್

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ದಕ್ಷ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಶಕುಂತಲಾ ನಾಯಕ್ ಅವರು ನೂತನವಾಗಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕೃತಪುರ ಸೇವಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಕೃತಪುರ ಸೇವಾ ಸಮಿತಿ ಮಾಜಿ ಅಧ್ಯಕ್ಷ ಜಗದೀಶ್ ಎಸ್.ಪಿ., ನೂತನ ಪಿಎಸ್‌ಐ ಶಕುಂತಲಾ ನಾಯಕ್ ಅವರು ಈ ಹಿಂದೆ ಸಂಚಾರಿ ಠಾಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ಜನಮನ್ನಣೆ ಗಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು ಪೊಲೀಸ್ ಇಲಾಖೆಯಲ್ಲಿ ತಮ್ಮದೇ ಆದ ವಿಶೇಷ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಬೆಟಗೇರಿ ಬಡಾವಣೆ ಠಾಣೆಯ ಪಿಎಸ್‌ಐ ಆಗಿ ನೇಮಕಗೊಂಡಿದ್ದು, ತಮ್ಮ ಸೇವೆಯನ್ನು ಯಶಸ್ವಿಯಾಗಿ ಮುಂದುವರಿಸಲಿ ಎಂದು ಹಾರೈಸಿದರು.

ಸಿಪಿಐ ಧೀರಜ್ ಶಿಂಧೆ ಮಾತನಾಡಿ, ಶಕುಂತಲಾ ನಾಯಕ್ ಅವರು ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರೊಂದಿಗೆ ಬೆರೆತು ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಠಾಣೆಗೆ ಬರುವ ಸಾರ್ವಜನಿಕರೊಂದಿಗೆ ಸೌಮ್ಯವಾಗಿ ವರ್ತಿಸಿ ಜನೋಪಯೋಗಿ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಪೊಲೀಸ್ ಇಲಾಖೆಗೆ ಇಂತಹ ನಿಷ್ಠಾವಂತ ಅಧಿಕಾರಿಗಳ ಅಗತ್ಯವಿದ್ದು, ಬಡಾವಣೆ ಠಾಣೆಯಲ್ಲೂ ಅವರು ನಿಸ್ವಾರ್ಥ ಸೇವೆ ಮುಂದುವರಿಸಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಕೃತಪುರ ಸೇವಾ ಸಮಿತಿ ಅಧ್ಯಕ್ಷ ಶಶಿ ಡಿಗ್ಗಾವಿ, ಸಿದ್ದು, ಕಾರ್ತಿಕ್, ಮಂಜು, ರಮೇಶ ಛಲವಾದಿ, ಸ್ವರೂಪ್ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಂಚಾರಿ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ. ಇದೀಗ ಬೆಟಗೇರಿ ಬಡಾವಣೆ ಠಾಣೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಹಗಲಿರುಳು ಸ್ಪಂದಿಸುತ್ತೇನೆ. ಠಾಣಾ ವ್ಯಾಪ್ತಿಯಲ್ಲಿನ ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಸ್ಥಳೀಯರ ಹಿತ ಕಾಪಾಡಲು ನಿರಂತರವಾಗಿ ಶ್ರಮಿಸುತ್ತೇನೆ.

— ಶಕುಂತಲಾ ನಾಯಕ್, ಪಿಎಸ್‌ಐ, ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ

ಖಾಲಿ ಇರುವ ವಕ್ಫ್ ಮಂಡಳಿ ಅಧ್ಯಕ್ಷರ ಹುದ್ದೆಗೆ ತಕ್ಷಣ ನೇಮಕ ಮಾಡಲು ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷರ ಹುದ್ದೆ ಸುಮಾರು ಎರಡು ವರ್ಷಗಳಿಂದ ಖಾಲಿ ಇರುವ ಹಿನ್ನೆಲೆಯಲ್ಲಿ, ಅರ್ಹ ಹಾಗೂ ಸಮರ್ಥ ವ್ಯಕ್ತಿಯನ್ನು ತಕ್ಷಣ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ಜಿಲ್ಲಾಧ್ಯಕ್ಷ ಜಾಫರ್ ಡಾಲಾಯತ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವಕ್ಫ್ ಮಂಡಳಿಗೆ ಪೂರ್ಣ ಪ್ರಮಾಣದ ನಾಯಕತ್ವದ ಕೊರತೆಯಿಂದಾಗಿ ವಕ್ಫ್ ಆಸ್ತಿಗಳ ಸಂರಕ್ಷಣೆ, ನಿರ್ವಹಣೆ ಹಾಗೂ ಅಭಿವೃದ್ಧಿ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿರುವ ವಕ್ಫ್ ಆಸ್ತಿಗಳು ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ಆಸ್ತಿಗಳಾಗಿವೆ. ಅವುಗಳ ಸಮರ್ಪಕ ನಿರ್ವಹಣೆ ಮತ್ತು ಸಂರಕ್ಷಣೆಗೆ ಜವಾಬ್ದಾರಿಯುತ ನಾಯಕತ್ವ ಅಗತ್ಯವಿದೆ. ದಾಖಲೆಗಳ ನಿರ್ವಹಣೆ, ಆಸ್ತಿಗಳ ಸಂರಕ್ಷಣೆ, ಒತ್ತುವರಿ ತಡೆ ಹಾಗೂ ತೆರವು, ಅಭಿವೃದ್ಧಿ ಕಾರ್ಯಗಳು ಮತ್ತು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಮನವಿಗಳ ಕುರಿತು ಪರಿಣಾಮಕಾರಿ ಕ್ರಮ ಕೈಗೊಳ್ಳಲು ಅಧ್ಯಕ್ಷರ ನೇಮಕ ಅನಿವಾರ್ಯವಾಗಿದೆ ಎಂದು ಹೇಳಿದರು.

ರಿಯಾಜಹಮ್ಮದ್ ದೊಡ್ಡಮನಿ ಮಾತನಾಡಿ, ಅಧ್ಯಕ್ಷರ ನೇಮಕದ ಬಳಿಕ ಗದಗ ಜಿಲ್ಲೆಯಲ್ಲಿರುವ ವಕ್ಫ್ ಆಸ್ತಿಗಳ ಸಮಗ್ರ ಮಾಹಿತಿ ಹಾಗೂ ದಾಖಲೆಗಳನ್ನು ಪರಿಶೀಲಿಸಬೇಕು. ಅಕ್ರಮವಾಗಿ ಒತ್ತುವರಿ ಮಾಡಲಾಗಿರುವ ವಕ್ಫ್ ಆಸ್ತಿಗಳನ್ನು ಗುರುತಿಸಿ, ಕಾನೂನುಬದ್ಧವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಕ್ಫ್ ಆಸ್ತಿಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅವುಗಳಿಂದ ಸಮುದಾಯ ಹಾಗೂ ಸಾರ್ವಜನಿಕರಿಗೆ ದೊರೆಯಬೇಕಾದ ಪ್ರಯೋಜನಗಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಸೈಯದ್ ಜಹೀರುದ್ದೀನ್ ಪೀರಜಾದೆ, ಕುತ್ಬುದ್ದೀನ್ ಶೇಖ್, ಡಾ. ಅಬ್ದುಲ್ ರಜಾಕ್ ಮಂಗಳೂರು, ಮಹಬೂಬ್ ಭಾಷಾ ಖಾಜಿ, ನಿಜಾಮುದ್ದೀನ್ ಕಾಟಾಪುರ, ಮಹಮ್ಮದ್ ಸಲೀಂ ಕರಡಿ ಹಾಗೂ ರಿಯಾಜ್ ಅಹ್ಮದ್ ಈಟಿ ಇದ್ದರು.

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

0

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಡೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದರು. ತಾವು ಯಾವುದೋ ದೇವಸ್ಥಾನಕ್ಕೆ ಹೋದಾಗ ಕೆಲವರು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿದ್ದರು. ಮೋದಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರಾ? ಸಂಗೊಳ್ಳಿ ರಾಯಣ್ಣ ಅವರ ರೀತಿಯಲ್ಲಿ ಹೋರಾಡಿದ್ದಾರಾ? ಎಂದು ಪ್ರಶ್ನಿಸಿದರು.

‘2 ಕೋಟಿ ಉದ್ಯೋಗ ಎಲ್ಲಿ? ಅಚ್ಚೇ ದಿನ್ ಎಲ್ಲಿ? ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇನೆ ಎಂದು ಹೇಳಿದ್ದರು, ಮಾಡಿದ್ದಾರಾ? ಪ್ರಧಾನಿ ಆಗಿ 12 ವರ್ಷಗಳಾಗಿವೆ. ವಿದೇಶದಲ್ಲಿರುವ ಕಪ್ಪುಹಣವನ್ನು ತಂದು ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಹಾಕುತ್ತೇನೆ ಎಂದಿದ್ದರು, ಹಾಕಿದ್ದಾರಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಪಾರ್ಲಿಮೆಂಟ್ ಚುನಾವಣೆಯಲ್ಲಿ ಬಿಜೆಪಿಗೆ ಏಕೆ ಮತ ಹಾಕಬೇಕು ಎಂದು ಪ್ರಶ್ನಿಸಿದ ಅವರು, ಜನರಿಗೆ ತಪ್ಪು ಮಾಹಿತಿ ನೀಡಿ ತಪ್ಪು ದಾರಿಗೆ ಎಳೆಯಲಾಗಿದೆ ಎಂದು ಟೀಕಿಸಿದರು.

ಇದೇ ವೇಳೆ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ತಮ್ಮಯ್ಯ, ಯಾರಯ್ಯ ನಿನ್ನ ಮೇಲೆ ಸೋತದ್ದು? ಸಿ.ಟಿ. ರವಿ’ ಎಂದು ವ್ಯಂಗ್ಯವಾಡಿದರು. ಸಿ.ಟಿ. ರವಿ ತಮ್ಮ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿರುವುದಾಗಿ ಉಲ್ಲೇಖಿಸಿದ ಅವರು, ‘ನಾನು ಹೇಳಲ್ಲ, ನಮ್ಮ ಕಡೆ ಅವರನ್ನು ಲೂಟಿ ರವಿ ಎಂದು ಕರೆಯುತ್ತಾರೆ’ ಎಂದು ಟೀಕಿಸಿದರು.

ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸದ ಕಾರಣಕ್ಕೆ ತಮ್ಮ ಮುಖ್ಯಮಂತ್ರಿ ಸ್ಥಾನ ಹೋಯಿತು ಎಂದು ಸಿ.ಟಿ. ರವಿ ಹೇಳಿದ್ದಾರಂತೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಸಂದರ್ಭದಲ್ಲಿ ತಮ್ಮ ರಾಜೀನಾಮೆಯ ಕಾರಣವನ್ನೂ ವಿವರಿಸಿದ ಅವರು, ‘ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ. ಅವರು ರಾಜೀನಾಮೆ ಕೊಡು ಎಂದರು, ಕೊಟ್ಟೆ. ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಕೊಡಬೇಕು ಎಂದು ರಾಜೀನಾಮೆ ಕೊಟ್ಟೆ’ ಎಂದು ತಿಳಿಸಿದರು.

‘ರಾಜಕೀಯದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡ ಯಾವುದೇ ಸರ್ಕಾರ ಇದ್ದರೆ, ಅದು ಸಿದ್ದರಾಮಯ್ಯ ಸರ್ಕಾರ’ ಎಂದು ಹೇಳುವ ಮೂಲಕ ಸಿ.ಟಿ. ರವಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.