Home Blog Page 5

ಪ್ರಕಲ್ಪ ಶಾಲೆಯಲ್ಲಿ ‘ಟ್ರೆಡಿಷನಲ್ ಡೇ’

0

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಪ್ರಕಲ್ಪ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಟ್ರೆಡಿಷನಲ್ ಡೇ’ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ್ದು ಶಾಲಾ ಆವರಣದಲ್ಲಿ ವೈವಿಧ್ಯಮಯ ಸಂಸ್ಕೃತಿಯ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಕನ್ನಡ, ತಮಿಳು, ತೆಲುಗು, ಮರಾಠಿ ಹಾಗೂ ಉತ್ತರ ಭಾರತದ ಸಂಪ್ರದಾಯಿಕ ವೇಷಭೂಷಣಗಳಲ್ಲಿ ಕಂಗೊಳಿಸಿದ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದರು.

ಶಾಲೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಎಸ್.ವಿ. ಹುಬ್ಬಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಉಡುಪಿನ ಸೊಬಗು ಮತ್ತೆ ನೆನಪಾಗಲಿ. ವೇಷ-ಭೂಷಣ ಬದಲಾಗಬಹುದು. ಆದರೆ, ಸಂಸ್ಕೃತಿ ಮತ್ತು ಸಂಸ್ಕಾರ ಎಂದಿಗೂ ಶಾಶ್ವತವಾಗಿರುತ್ತದೆ ಎಂದರು.

ವಿದ್ಯಾರ್ಥಿಗಳು ಪರಂಪರೆಯ ಆಚರಣೆಗಳ ಮಹತ್ವವನ್ನು ವಿವರಿಸಿ, ನಮ್ಮ ಸಂಸ್ಕೃತಿಯನ್ನು ಉಳಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಪಿ.ಎಸ್. ಹುಬ್ಬಳ್ಳಿ ಹಾಗೂ ಮಾರ್ಗದರ್ಶಕರಾದ ಎಸ್.ಎಸ್. ಹುಬ್ಬಳ್ಳಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟ ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಎಂ.ಎಂ. ಡಂಬಳ ಅಭಿನಂದಿಸಿದರು.

ಬೆಂಗಳೂರು: ಎಂ.ಫಾರ್ಮಾ ಎರಡನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

0

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಂ.ಫಾರ್ಮಾ ಕೋರ್ಸ್ ಪ್ರವೇಶ ಎರಡನೇ ಮತ್ತು ಅಂತಿಮ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಫೆ.25ರಂದು ಮಧ್ಯಾಹ್ನ 2 ಗಂಟೆಯೊಳಗೆ ವಿದ್ಯಾರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಫೆ.25ರಂದು ಸಂಜೆ 8 ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು, ಫೆ.26ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟವಾಗಲಿದೆ. ಸೀಟು ಹಂಚಿಕೆಗೊಳ್ಳುವ ವಿದ್ಯಾರ್ಥಿಗಳು ಫೆ.27ರಿಂದ ಮಾರ್ಚ್ 4ರವರೆಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರಗಳನ್ನು ಪಡೆಯಬೇಕು. ನಂತರ, ಮಾರ್ಚ್ 5ರೊಳಗೆ ತಮ್ಮ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು.

ಮಹತ್ವದ ಸೂಚನೆ: ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದುವರೆಗೆ ಯಾವುದೇ ಸೀಟು ಹಂಚಿಕೆಯಾಗದ ಅಥವಾ ಈಗಾಗಲೇ ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಎರಡನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳಿಗೆ ಆಯ್ಕೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ KEA ವೆಬ್‌ಸೈಟ್ ಪರಿಶೀಲಿಸುವಂತೆ ತಿಳಿಸಲಾಗಿದೆ.

 

ಶಾಸಕ ಡಾ. ಚಂದ್ರು ಜನರಿಗೆ ದ್ರೋಹವೆಸಗಿದ್ದಾರೆ: ರಾಮಣ್ಣ ಲಮಾಣಿ 

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಾಸಕ ಡಾ. ಚಂದ್ರು ಲಮಾಣಿ ಭ್ರಷ್ಟಾಚಾರದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದು ಈ ಕ್ಷೇತ್ರದ ಜನರ ನಂಬಿಕೆ, ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ಇವರಿಗೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲದ ಕಾರಣ ಕೂಡಲೇ ರಾಜೀನಾಮೆ ಕೊಟ್ಟು ಪ್ರಾಮಾಣಿಕವಾಗಿ ವೈದ್ಯರ ವೃತ್ತಿ ಮುಂದುವರೆಸಬೇಕು ಎಂದು ಮಾಜಿ ಶಾಸಕರಾದ ರಾಮಣ್ಣ ಲಮಾಣಿ ಮತ್ತು ರಾಮಕೃಷ್ಣ ದೊಡ್ಡಮನಿ ಆಗ್ರಹಿಸಿದರು.

ಅವರು ಸೋಮವಾರ ಪಟ್ಟಣದಲ್ಲಿ ಶಾಸಕರ ಮನೆ ಮೇಲೆ ಲೋಕಾಯುಕ್ತ ದಾಳಿಯಾದ ವೇಳೆ ಬಿಜೆಪಿ ಕಾರ್ಯಕರ್ತರು ಇದು ಕಾಂಗ್ರೆಸ್ ಪಕ್ಷ ಮತ್ತು ಹೆಚ್.ಕೆ. ಪಾಟೀಲರ ಷಡ್ಯಂತ್ರ ಎಂಬ ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶಿರಹಟ್ಟಿ ಮತಕ್ಷೇತ್ರ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದೆ. ದಿ. ಉಪನಾಳ ಗೂಳಪ್ಪನವರು, ಟಿ.ಬಿ. ಬಾಳಿಕಾಯಿ, ಎಸ್.ಎಸ್. ಪಾಟೀಲ, ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ ಮತ್ತು ನಾನು ಸೇರಿ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಕ್ಷೇತ್ರಕ್ಕೆ ಹೆಸರು ತರುವ ಕೆಲಸ ಮಾಡಿದ್ದೇವೆ. ಆದರೆ ವಿದ್ಯಾವಂತನೆಂದು ಜನರು ಕೊಟ್ಟ ಅವಕಾಶವನ್ನು ದುರುಪಯೋಗ ಮಾಡಿಕೊಂಡು ಲಂಚದ ಮೂಲಕ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ವಿದ್ಯೆ ಇದ್ದರೂ ವಿನಯ, ಸಂಸ್ಕಾರವೇ ಇಲ್ಲದ ಅಧಿಕಾರದ ಮದದಿಂದ ಕ್ಷೇತ್ರದ ಅಭಿವೃದ್ಧಿಯ ಹಣ ಕೊಳ್ಳೆ ಹೊಡೆದುಕೊಂಡು ಹೋಗುವ ಇವರಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಜೀವಬೆದರಿಕೆ, ಜಾತಿನಿಂದನೆ ಕೇಸ್ ಮಾಡಿಸುವ ಸಂಸ್ಕೃತಿಯ ಶಾಸಕನಿಂದ ಜನ ರೋಸಿ ಹೋಗಿದ್ದಾರೆ. ಪಕ್ಷಕ್ಕೆ ನೈತಿಕ ಹಕ್ಕಿದ್ದರೆ ಬಿಜೆಪಿ ಪಕ್ಷದವರು ಮತ್ತು ಜನರ ಹಿತದೃಷ್ಟಿಯಿಂದ ರಾಜ್ಯಪಾಲರು ಇವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕ್ಷೇತ್ರಕ್ಕೆ ಕೋಟ್ಯಾಂತರ ರೂ. ಹಣ ಹರಿದು ಬಂದಿದೆ. ಆದರೆ ಡಾ. ಚಂದ್ರು ಲಮಾಣಿ ಕಾಂಗ್ರೆಸ್ ಪಕ್ಷದಿಂದ ನಯಾಪೈಸೆ ದುಡ್ಡು ಬಂದಿಲ್ಲ ಎಂದು ಹೇಳುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುತ್ತಾ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಮಾಡಲು ಸಾಕಷ್ಟು ಕೆಲಸವಿದ್ದರೂ ಅವರ ಚಿತ್ತ ಕೇವಲ ದುಡ್ಡು ಮಾಡುವತ್ತ ಇದೆ. ಆದಾಗ್ಯೂ ಕಾಂಗ್ರೆಸ್ ಪಕ್ಷದ ಪ್ರಶ್ನಾತೀತ ರಾಜರಾಣಿ ಹೆಚ್.ಕೆ. ಪಾಟೀಲರ ಹೆಸರನ್ನು ಎಳೆದು ತರುವ ಕೆಟ್ಟ ಮನಸ್ಥಿತಿ ಜನರಿಗೆ ಅರ್ಥವಾಗುತ್ತದೆ. ವಿದ್ಯಾವಂತರಾದ ಇವರು ಆತ್ಮಸಾಕ್ಷಿಯಿಂದ ರಾಜಕೀಯ ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕು ಎಂದರು.

ಬಳಿಕ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶಾಸಕ ಡಾ. ಚಂದ್ರು ಲಮಾಣಿ ಅವರ ರಾಜೀನಾಮೆ ಪಡೆಯಬೇಕು ಎಂದು ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆ ರಾಮಣ್ಣ ಲಮಾಣಿ (ಶಿಗ್ಲಿ), ಯಲ್ಲಪ್ಪ ಸೂರಣಗಿ, ನೀಲಪ್ಪ ಶರಸೂರಿ, ಶಿವಣ್ಣ ಕಬ್ಬೇರ, ಕಲ್ಲಪ್ಪ ಗಂಗಣ್ಣವರ, ಮನೋಜ ರಾಟೋಡ, ಜಗದೀಶ ಹುಲಿಗೆಮ್ಮನವರ, ಶಿವರಾಜಗೌಡ ಪಾಟೀಲ, ಪರಮೇಶ ಲಮಾಣಿ, ತಿಪ್ಪಣ್ಣ ಸಂಶಿ, ನಾಗರಾಜ ದೊಡ್ಡಮನಿ, ವಾಸೀಂ ಅಕ್ರಮ ಮುಚ್ಚಾಲೆ, ರಾಜು ಓಲೇಕಾರ, ರಾಜರತ್ನ ಹುಲಗೂರ, ನೀಲಪ್ಪ ಪಡಗೇರಿ, ಶಶಿಕಲಾ ಬಡಿಗೇರ, ರಫೀಕ ಕಲಬುರ್ಗಿ, ಸಂತೋಷ ತೇಲಿ, ರಂಜಾನಸಾಬ ನದಾಫ್ ಮುಂತಾದವರಿದ್ದರು.

ಕೆಪಿಸಿಸಿ ಸದಸ್ಯೆ ಸುಜಾತಾ ದೊಡ್ಡಮನಿ, ಚನ್ನಪ್ಪ ಜಗಲಿ, ಕಾಂಗ್ರೆಸ್ ಬ್ಲಾಕ್ ಕಮಿಟಿ ಅಧ್ಯಕ್ಷ ಜಿ.ಆರ್. ಕೊಪ್ಪದ, ಫಕ್ಕಿರೇಶ ಮ್ಯಾಟಣ್ಣವರ, ವಿರೇಂದ್ರ ಪಾಟೀಲ, ನಾಗರಾಜ ಮಡಿವಾಳರ, ಎಸ್.ಪಿ. ಬಳಿಗಾರ, ಶರಣು ಗೋಡಿ, ಸೋಮಣ್ಣ ಬೆಟಗೇರಿ ಮಾತನಾಡಿ, ಭ್ರಷ್ಟಾಚಾರದಿಂದ ಶಿಕ್ಷೆಗೊಳಗಾದ ಶಾಸಕನನ್ನು ಬಿಜೆಪಿ ಸಮರ್ಥಿಸಿಕೊಂಡರೆ, ಬೆಂಬಲಿಸಿದರೆ ಇದು ಬಿಜೆಪಿ ಸಂಸ್ಕೃತಿಯನ್ನು ಸಾಕ್ಷೀಕರಿಸಿದಂತಾಗುತ್ತದೆ. ಬಿಜೆಪಿಗರ ಹೋರಾಟಕ್ಕೆ ಯಾರೂ ಬೆಂಬಲ ನೀಡಬಾರದು. ಹಾಗೇನಾದರೂ ಆದರೆ ಇದಕ್ಕೆ ಕಾಂಗ್ರೆಸ್ ಪಕ್ಷವೂ ದಿಟ್ಟ ಹೋರಾಟಕ್ಕೆ ಸಿದ್ಧ ಎಂದರು.

ಶಾಸಕ ಡಾ. ಚಂದ್ರು ಲಮಾಣಿ ಶಾಸಕ ಸ್ಥಾನದಿಂದ ಅಮಾನತ್ತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸೋಮವಾರ ಶಿರಹಟ್ಟಿಯ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿಯವರನ್ನು ಶಾಸಕ ಸ್ಥಾನದಿಂದ ಅಮಾನತ್ತು ಮಾಡಿ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಗುತ್ತಿಗೆದಾರನಿಂದ ಕಮೀಷನ್ ಹಣ (ಲಂಚ) ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಿರಹಟ್ಟಿ ಮೀಸಲು ಮತಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಕಾಂಗ್ರೆಸ್ ಪಕ್ಷದ ನಾಯಕರ ಕೈವಾಡವಿದೆ ಎಂದು ಬೇರೊಬ್ಬರ ಮೇಲೆ ಗೂಬೆ ಕೂರಿಸುವ ಕೆಲಸ ಆಗಬಾರದು. ಭ್ರಷ್ಟಾಚಾರ ಮಾಡಿರುವ ವ್ಯಕ್ತಿ ತನ್ನ ತಪ್ಪನ್ನು ಒಪ್ಪಿಕೊಳ್ಳದೇ ಬೇರೊಬ್ಬರ ಮೇಲೆ ದೋಷಾರೋಪಣೆ ಮಾಡುವುದು ನೈತಿಕವಾಗಿ ಹಾಗೂ ಕಾನೂನುಬದ್ಧವಾಗಿ ತಪ್ಪಾಗಿದೆ. ಸಾರ್ವಜನಿಕ ಜೀವನದಲ್ಲಿರುವವರು ಹೇಗೆ ನಡೆದುಕೊಳ್ಳಬೇಕು ಎನ್ನುವ ಪರಿಜ್ಞಾನ ಇಲ್ಲದ ಶಾಸಕ ಪಾರದರ್ಶಕ ತನಿಖೆಗೆ ಸಹಕರಿಸಬೇಕು. ನೈತಿಕ ಹೊಣೆಗಾರಿಕೆ ವಹಿಸಿ ಶಾಸಕ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ಉತ್ತರ ಕರ್ನಾಟಕದ ಇತಿಹಾಸದಲ್ಲೇ ತಾಲೂಕಿನಲ್ಲಿ ಯಾವ ಶಾಸಕರೂ ಇಂತಹ ಭ್ರಷ್ಟಾಚಾರದಲ್ಲಿ ಸಿಲುಕಿರುವುದು ಕಂಡುಬಂದಿಲ್ಲ. ಆದರೆ ಹೆಚ್ಚು ಕಲಿತು ವೈದ್ಯಕೀಯ ಸೇವೆ ಮಾಡಿರುವ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಭ್ರಷ್ಟಾಚಾರ ನಡೆಸಿ, ತನ್ನ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಕಮೀಷನ್ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಿಲುಕಿ ತಾಲೂಕಿನ ಮರ್ಯಾದೆಯನ್ನು ಹರಾಜು ಹಾಕಿದ್ದಾರೆ. ಇವರು ಶಾಸಕ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಭ್ರಷ್ಟಾಚಾರ ನಡೆಸಿ ರೂ. 5 ಲಕ್ಷ ಹಣದ ಸಮೇತ ಅಧಿಕಾರಿಗಳ ಕೈಗೆ ಸಿಕ್ಕಿರುವುದರಿಂದ ನ್ಯಾಯಾಧೀಶರ ಆದೇಶದಂತೆ ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದು, ಶಾಸಕ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.

ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹುಮಾಯೂನ್ ಮಾಗಡಿ, ಡಿ.ಕೆ. ಹೊನ್ನಪ್ಪನವರ, ಚನ್ನಪ್ಪ ಜಗಲಿ, ವಿರೇಂದ್ರ ಪಾಟೀಲ, ಶಿವನಗೌಡ ಪಾಟೀಲ, ಮಂಜುನಾಥ ಘಂಟಿ ಮಾತನಾಡಿದರು.

ಇದಕ್ಕೂ ಮೊದಲು ಪಟ್ಟಣದ ಶ್ರೀ ಮಾರುತಿ ದೇವಸ್ಥಾನದಿಂದ ಬೃಹತ್ ಪ್ರತಿಭಟನೆ ನಡೆಸಿ, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ನೆಹರು ವೃತ್ತದ ಮಾರ್ಗವಾಗಿ ತಮಟೆ ಬಾರಿಸುತ್ತ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಕೂಗುತ್ತಾ ತಹಸೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ಮನವಿ ಸಲ್ಲಿಸಿದರು.

ಮುಖಂಡರಾದ ಮಹೇಂದ್ರ ಮುಂಡವಾಡ, ಲಕ್ಷ್ಮಣಗೌಡ ಪಾಟೀಲ, ಫಕ್ಕಿರೇಶ ಮ್ಯಾಟಣ್ಣವರ, ಚನ್ನಪ್ಪ ಜಗಲಿ, ವಿರೂಪಾಕ್ಷ ನಂದೆಣ್ಣವರ, ಹೊನ್ನಪ್ಪ ಶಿರಹಟ್ಟಿ, ಬುಡನಶ್ಯಾ ಮಕಾನದಾರ, ಶಿವನಗೌಡ ಪಾಟೀಲ, ರಮೇಶ ನಿರ್ವಾಣಶೆಟ್ಟರ, ಎಂ.ಕೆ. ಲಮಾಣಿ, ಮಹಾಂತೇಶ ದಶಮನಿ, ಅಜ್ಜುಗೌಡ್ರ ಪಾಟೀಲ, ಸೋಮನಗೌಡ ಮರಿಗೌಡ್ರ, ಚಾಂದಸಾಬ ಮುಳಗುಂದ, ದೇವಪ್ಪ ಲಮಾಣಿ, ಅಶ್ರತಅಲಿ ಢಾಲಾಯತ, ಮಾಬೂಸಾಬ ಲಕ್ಷ್ಮೇಶ್ವರ, ಈರಣ್ಣ ಚವ್ಹಾಣ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿ.ಪಂ ಮಾಜಿ ಅಧ್ಯಕ್ಷೆ ಸುಜಾತ ದೊಡ್ಡಮನಿ ಮಾತನಾಡಿ, ಶಾಸಕ ಚಂದ್ರು ಲಮಾಣಿ ಮಾಡಬಾರದ ಕೆಲಸ ಮಾಡಿ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಸಚಿವ ಎಚ್.ಕೆ. ಪಾಟೀಲರನ್ನು ದೂರುತ್ತಿರುವುದು ಸರಿಯಲ್ಲ. ನಿಮ್ಮ ತಪ್ಪು ಮುಚ್ಚಿಕೊಳ್ಳಲು ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.

ಶಿರಹಟ್ಟಿ ತಾಲೂಕಾಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ಪೂರೈಕೆಗೆ ಸಾರ್ವಜನಿಕರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿಯ ತಾಲೂಕಾಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಸಾರ್ವಜನಿಕರಿಗೆ ವಿತರಿಸುತ್ತಿದ್ದು, ಇದನ್ನು ಪ್ರಶ್ನಿಸಿದರೆ ಆಡಳಿತ ವೈದ್ಯಾಧಿಕಾರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತೇನೆಂದು ಹೇಳುತ್ತಿದ್ದಾರೆಂದು ಸಾರ್ವಜನಿಕರು ಸೋಮವಾರ ಬೆಳಿಗ್ಗೆ ತಾಲೂಕಾ ಆಸ್ಪತ್ರೆಯಲ್ಲಿ ತಮಗೆ ನೀಡಿದ ಅವಧಿ ಮೀರಿದ ಔಷಧಿ ಬಾಟಲ್ ಮತ್ತು ತಪಾಸಣಾ ಪುಸ್ತಕದಲ್ಲಿ ನಮೂದಾಗಿರುವುದನ್ನು ಪ್ರದರ್ಶಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಖಾನಾಪೂರ ಗ್ರಾಮದಲ್ಲಿನ ಆಶಾಬಿ ದೊಡ್ಡಮನಿ ಎಂಬುವರು ಮಾನಸಿಕ ಕಾಯಿಲೆ ಇದ್ದ ಬಗ್ಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವಧಿ ಮೀರಿದ ಔಷಧಿ ಸೇವನೆ ಮಾಡಿರುವುದರಿಂದ ನಿದ್ದೆ ಜಾಸ್ತಿ ಬರುತ್ತಿದ್ದು, ಮೈ-ಕೈ ನೋವು ಜಾಸ್ತಿಯಾಗುತ್ತಿದೆ. ಈ ಬಗ್ಗೆ ಕೇಳಿದರೆ ಇದನ್ನು ನಾವು ಪೂರೈಸಿಲ್ಲ ಎನ್ನುತ್ತಿದ್ದು, ಔಷಧಿ ವಿತರಿಸಿ ತಾವೇ ಸಹಿ ಮಾಡಿ ನೀಡಿದ್ದಾರೆಂದು ಆಶಾಬಿ ದೊಡ್ಡಮನಿ ಆರೋಪಿಸಿದರು.

ದಲಿತ ಮುಖಂಡ ಪ್ರಕಾಶ ಬಡೆಣ್ಣವರ, ಶಿಶಿರ ಪಾಟೀಲ ಮಾತನಾಡಿ, ಅವಧಿ ಮೀರಿದ ಔಷಧಿ ಪೂರೈಕೆ ಮಾಡಿದ್ದರ ಕುರಿತು ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯನ್ನು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡದೇ ನಾವು ಔಷಧಿಯನ್ನೇ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ರೋಗಿಯ ಪುಸ್ತಕದಲ್ಲಿ ಔಷಧಿ ನೀಡಿ ಸಹಿಯನ್ನು ಸಹ ಮಾಡಿದ್ದಾರೆ. ಶಿರಹಟ್ಟಿ ಶಹರವೂ ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶಗಳಿಂದ ಇಲ್ಲಿ ನಿತ್ಯವೂ ನೂರಾರು ಸಂಖ್ಯೆಯಲ್ಲಿ ರೋಗಿಗಳು ಬಂದರೂ ಅವರಿಗೆ ಸಮರ್ಪಕ ಚಿಕಿತ್ಸೆ ಲಭಿಸುತ್ತಿಲ್ಲ. ಗರ್ಭಿಣಿಯರು, ಮಕ್ಕಳು ಸಕಾಲಕ್ಕೆ ಚಿಕಿತ್ಸೆ ಸಿಗದೇ ಬೇರೆ ಊರುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದ್ದು, ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಈ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.

ಈ ಕುರಿತು ತಾಲೂಕಾ ಆರೋಗ್ಯಾಧಿಕಾರಿ ಡಾ. ಸುಭಾಸ ದೈಗೊಂಡ ಮಾತನಾಡಿ, ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಂತೆಯೇ ತಾಲೂಕಾಸ್ಪತ್ರೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರಿಗೆ ಮನವೊಲಿಸುವ ಪ್ರಯತ್ನವಾಗಲೀ, ಇಲ್ಲವೇ ಆರೋಪಗಳಿಗೆ ಉತ್ತರ ನೀಡಲು ಯಾರೂ ಮುಂದೆ ಬರಲಿಲ್ಲ. ಇದಕ್ಕೂ ತಮಗೆ ಸಂಬಂಧವಿಲ್ಲವೆನ್ನುವ ರೀತಿ ಕೆಲ ಸಿಬ್ಬಂದಿಗಳು ತಮ್ಮ ಪಾಡಿಗೆ ಕೆಲಸ ಮಾಡುವಲ್ಲಿ ತಲ್ಲೀನರಾಗಿರುವುದು ಕಂಡುಬಂದಿತು.

ಈ ಕುರಿತು ಪ್ರತಿಕ್ರಿಯೆ ನೀಡಲು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿ ಗೋಪಾಲ್‌ರಾಜ್ ನಿರಾಕರಿಸಿದರು.

ಹೈಕಮಾಂಡ್‌ಗೆ ಪತ್ರ ಬರೆದಿದ್ದು ಸತ್ಯ, ಸಚಿವ ಸ್ಥಾನಕ್ಕಾಗಿ ಅಲ್ಲ; ಶಾಸಕ ಇಕ್ಬಾಲ್ ಹುಸೇನ್ ಸ್ಪಷ್ಟನೆ

0

ರಾಮನಗರ: ರಾಮನಗರದಿಂದ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸುತ್ತಿರುವ ಇಕ್ಬಾಲ್ ಹುಸೇನ್ ಅವರು, ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಪತ್ರ ಬರೆದ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಕಾಂಗ್ರೆಸ್ ಶಾಸಕರು ಪತ್ರ ಬರೆದ ವಿಚಾರ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಕೆಲವು ಸಚಿವರು ತಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನಮಗೆ ಕನಿಷ್ಠ ಗೌರವವನ್ನೂ ಕೊಡುತ್ತಿಲ್ಲ. ಸಂಪುಟದಲ್ಲಿ ಕೆಲವು ಬದಲಾವಣೆ ಆಗಬೇಕು. ಎಲ್ಲಾ ಸಚಿವರನ್ನೂ ಬದಲಾಯಿಸಬೇಕು ಅಂತಲ್ಲ, ಕೆಲವರಿಗೆ ಅವಕಾಶ ಕಲ್ಪಿಸಬೇಕು” ಎಂದರು.

“ಹೈಕಮಾಂಡ್‌ಗೆ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ. ಆದರೆ ನನಗೆ ಸಚಿವ ಸ್ಥಾನ ಬೇಕೆಂದು ನಾನು ಸಹಿ ಹಾಕಿಲ್ಲ. ಬದಲಾವಣೆ ಮಾಡಿ ಅಂತಲೇ ಸಹಿ ಹಾಕಿದ್ದೇನೆ. ನನಗೆ ವಿಧಾನಸಭಾ ಸದಸ್ಯ ಸ್ಥಾನವೇ ಸಾಕು, ಜನರ ಸೇವೆಯನ್ನು ಮುಂದುವರೆಸುತ್ತೇನೆ. ಬೇರೆ ಅನುಭವಸ್ಥ ಶಾಸಕರಿಗೂ ಅವಕಾಶ ಸಿಗಬೇಕು” ಎಂದರು.

ಇಕ್ಬಾಲ್ ಹುಸೇನ್ ಅವರು, ಈ ಪತ್ರವನ್ನು ಎಐಸಿಸಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಹೈಕಮಾಂಡ್ ತಮ್ಮ ಮನವಿಗೆ ಸ್ಪಂದಿಸುವ ಭರವಸೆ ಹೊಂದಿದ್ದು, ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ ಎಂದಿದ್ದಾರೆ.

35ರ ನಂತರ ಮಹಿಳೆಯರು ಆಹಾರದಲ್ಲಿ ಈ ವಿಷಯಗಳನ್ನು ಕಡ್ಡಾಯವಾಗಿ ಗಮನಿಸಬೇಕು!

0

ಸಾಮಾನ್ಯವಾಗಿ 35 ವರ್ಷ ವಯಸ್ಸಿನ ನಂತರ ಮಹಿಳೆಯರ ದೇಹದಲ್ಲಿ ಹಲವು ರೀತಿಯ ಹಾರ್ಮೋನು ಬದಲಾವಣೆಗಳು ಆರಂಭವಾಗುತ್ತವೆ. ಈ ಹಂತದಲ್ಲಿ ಚಯಾಪಚಯ ಕ್ರಿಯೆ ನಿಧಾನಗೊಳ್ಳುವುದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗುತ್ತದೆ.

ಜೊತೆಗೆ ಥೈರಾಯ್ಡ್ ಅಸಮತೋಲನ, ರಕ್ತಹೀನತೆ, ಮೂಳೆ ದುರ್ಬಲತೆ, ವಿಟಮಿನ್ ಡಿ ಹಾಗೂ ವಿಟಮಿನ್ ಬಿ12 ಕೊರತೆ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಕೊಲೆಸ್ಟ್ರಾಲ್ ಸಮಸ್ಯೆಗಳ ಅಪಾಯವೂ ಹೆಚ್ಚಾಗುತ್ತದೆ. ಅನೇಕ ಮಹಿಳೆಯರಲ್ಲಿ ಪಿಸಿಓಎಸ್, ಅನಿಯಮಿತ ಮುಟ್ಟು ಅಥವಾ ಮುಟ್ಟು ನಿಲ್ಲುವ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಹೀಗಾಗಿ 35ರ ನಂತರ ಆಹಾರ ಪದ್ಧತಿಯಲ್ಲಿ ವಿಶೇಷ ಎಚ್ಚರಿಕೆ ಅಗತ್ಯ. ಸರಿಯಾದ ಆಹಾರ ಸೇವನೆಯ ಮೂಲಕ ಈ ಆರೋಗ್ಯ ಸಮಸ್ಯೆಗಳ ಬಹುಪಾಲನ್ನು ನಿಯಂತ್ರಿಸಬಹುದು.

ಯಾವ ಆಹಾರ ಸೇವಿಸಬೇಕು?
ಎಲೆ ತರಕಾರಿಗಳು, ದಾಳಿಂಬೆ, ಬೀಟ್ರೂಟ್ ಮತ್ತು ಬೆಲ್ಲ ಕಬ್ಬಿಣಾಂಶಕ್ಕೆ ಸಹಕಾರಿ. ಧಾನ್ಯಗಳು, ಓಟ್ಸ್ ಮತ್ತು ಹಣ್ಣುಗಳು ಫೈಬರ್ ನೀಡುತ್ತವೆ, ಇದರಿಂದ ಜೀರ್ಣಕ್ರಿಯೆ ಸುಧಾರಿಸಿ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಒಮೆಗಾ–3ಗಾಗಿ ವಾಲ್ನಟ್ಸ್ ಮತ್ತು ಅಗಸೆ ಬೀಜಗಳನ್ನು ಆಹಾರದಲ್ಲಿ ಸೇರಿಸಬಹುದು. ವಿಟಮಿನ್ ಡಿಗಾಗಿ ಸೂರ್ಯನ ಬೆಳಕು ಪಡೆಯುವುದು ಉತ್ತಮ; ಅಗತ್ಯವಿದ್ದರೆ ವೈದ್ಯರ ಸಲಹೆಯಂತೆ ಪೂರಕ ಮಾತ್ರೆಗಳನ್ನು ಸೇವಿಸಬಹುದು. ಜೊತೆಗೆ ದಿನವಿಡೀ ಸಾಕಷ್ಟು ನೀರು ಕುಡಿಯುವುದು ಅತ್ಯಂತ ಮುಖ್ಯ.

ಯಾವ ಆಹಾರ ತಪ್ಪಿಸಬೇಕು?
35ರ ನಂತರ ಹೆಚ್ಚು ಹುರಿದ, ಕರಿದ, ಸಂಸ್ಕರಿಸಿದ ಹಾಗೂ ಜಂಕ್ ಫುಡ್ ಸೇವನೆ ತಪ್ಪಿಸಬೇಕು. ಸಕ್ಕರೆ ಮತ್ತು ಉಪ್ಪಿನ ಪ್ರಮಾಣ ಕಡಿಮೆ ಮಾಡುವುದು ಅಗತ್ಯ, ಏಕೆಂದರೆ ಅವು ತೂಕ ಹೆಚ್ಚಾಗಲು, ರಕ್ತದೊತ್ತಡ ಹಾಗೂ ಸಕ್ಕರೆ ಮಟ್ಟ ಹೆಚ್ಚಲು ಕಾರಣವಾಗುತ್ತವೆ. ಸಕ್ಕರೆ ಪಾನೀಯಗಳು ಮತ್ತು ಪ್ಯಾಕ್ ಮಾಡಿದ ತಿಂಡಿಗಳನ್ನು ದೂರವಿಡುವುದು ಉತ್ತಮ. ಆಗಾಗ ಹೊರಗಿನ ಆಹಾರ ಸೇವನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಆಹಾರ ಮಾತ್ರವಲ್ಲದೆ ಜೀವನಶೈಲಿಯಲ್ಲೂ ಬದಲಾವಣೆ ಅಗತ್ಯ. ಪ್ರತಿದಿನ ಕನಿಷ್ಠ 30 ನಿಮಿಷ ವ್ಯಾಯಾಮ ಅಥವಾ ಚುರುಕಾದ ನಡಿಗೆ, ಉತ್ತಮ ನಿದ್ರೆ, ಒತ್ತಡ ನಿಯಂತ್ರಣ ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು 35ರ ನಂತರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

 

ಗದಗ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ಇಬ್ಬರು ಮಹಿಳೆಯರ ಮೇಲೆ ಹರಿದ ಬಸ್; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

0

ಗದಗ: ನಗರದ ಗದಗ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಇಂದು ನಡೆದ ಭೀಕರ ಅಪಘಾತ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಇಬ್ಬರು ಮಹಿಳೆಯರ ಮೇಲೆ ಸಾರಿಗೆ ಸಂಸ್ಥೆಯ ಬಸ್ ಹರಿದ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

ಘಟನೆ ವಿವರ:

ಪ್ರತ್ಯಕ್ಷದರ್ಶಿಗಳ ಮಾಹಿತಿಯಂತೆ, ಮಹಿಳೆಯರು ಬಸ್ ನಿಲ್ದಾಣದಿಂದ ಹೊರಬರುತ್ತಿದ್ದ ವೇಳೆ ಪ್ಲಾಟ್‌ಫಾರಂ ಕಡೆಗೆ ಬರುತ್ತಿದ್ದ ಬಸ್ ಏಕಾಏಕಿ ವೇಗವಾಗಿ ಅವರತ್ತ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.

ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಮಹಿಳೆಯರು ಬಸ್ ಮುಂಭಾಗದಲ್ಲಿ ಸಿಲುಕುವ ಭೀಕರ ಕ್ಷಣಗಳು ದಾಖಲಾಗಿರುವುದು ಗಮನಕ್ಕೆ ಬಂದಿದೆ.

ಗಾಯಾಳುಗಳ ಸ್ಥಿತಿ:

ಅಪಘಾತದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಅವರಲ್ಲಿ ಓರ್ವ ಮಹಿಳೆಗೆ ಕಾಲಿನಲ್ಲಿ ಗಂಭೀರ ಗಾಯವಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಸಿಬ್ಬಂದಿ ತಕ್ಷಣವೇ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಗಾಯಾಳುಗಳಿಗೆ ಗದಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (GIMS)ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಗಮನಾರ್ಹವಾಗಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಕ್ರಮ:

ಈ ಘಟನೆ ಗದಗ–ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗುತ್ತಿದೆ. ಸಿಸಿ ಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯ ಚಾಲನೆ ಸಂಬಂಧ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಸುರಕ್ಷತೆ ಕುರಿತ ಆತಂಕ:

ಗದಗ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಿರುವ ಸಂದರ್ಭಗಳಲ್ಲಿ ವಾಹನ ಸಂಚಾರ ನಿಯಂತ್ರಣದ ಕೊರತೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಪ್ರಯಾಣಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಾರ್ಚ್‌ 3ರಂದು ಗದಗ–ಬೆಟಗೇರಿ ನಗರಸಭೆ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆ!

0

ಗದಗ: ಗದಗ–ಬೆಟಗೇರಿ ನಗರಸಭೆಯ 10ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯು ದಿನಾಂಕ 03-03-2026ರಂದು ನಡೆಯಲಿದೆ.

ಕರ್ನಾಟಕ ಮುನ್ಸಿಪಾಲಿಟಿ ಕಾಯ್ದೆ–1964ರ ಕಲಂ 42(2)ರಂತೆ ಹಾಗೂ ಸರ್ಕಾರದ ಪ್ರಕಟಣೆ ಸಂಖ್ಯೆ ಯುಡಿಡಿ/10/ಎಮ್‌ಎಲ್‌ಆರ್/2024(1) ದಿನಾಂಕ 05-08-2024 ಮತ್ತು ಗದಗ ಜಿಲ್ಲಾಧಿಕಾರಿಗಳ ನಿರ್ದೇಶನದನ್ವಯ ಈ ಚುನಾವಣೆ ನಡೆಸಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಸಭೆ ಕಾರ್ಯಾಲಯದಲ್ಲಿ ದಿನಾಂಕ 03-03-2026ರಂದು ಮಧ್ಯಾಹ್ನ 2.00 ಗಂಟೆಗೆ ಚುನಾವಣಾ ಸಭೆ ನಡೆಯಲಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಆಸಕ್ತರಾದ ಅಭ್ಯರ್ಥಿಗಳು ಅದೇ ದಿನ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 12.00 ಗಂಟೆಯೊಳಗೆ ನಗರಸಭೆ ಕಾರ್ಯಾಲಯದ ಸಭಾಭವನದಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದು.

ಮಧ್ಯಾಹ್ನ 2.00 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಪರಿಶೀಲನೆಯ ತಕ್ಷಣ ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಅಗತ್ಯವಿದ್ದಲ್ಲಿ ಮತದಾನವನ್ನು ಕೈ ಎತ್ತುವ ಮೂಲಕ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಚುನಾವಣಾ ಸಭೆ ಆರಂಭವಾಗುವ 15 ನಿಮಿಷಗಳ ಮುಂಚಿತವಾಗಿ ಎಲ್ಲಾ ಸದಸ್ಯರು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಸರ್ಕಾರದ ಆದೇಶದಂತೆ ವರ್ಗವಾರು ಮೀಸಲಾತಿ ವಿವರಗಳನ್ನು ಈ ಚುನಾವಣಾ ನೋಟೀಸ್‌ಗೆ ಲಗತ್ತಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ನಗರಸಭೆ ಕಾರ್ಯಾಲಯವನ್ನು ಸಂಪರ್ಕಿಸುವಂತೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಇದನ್ನೊಮ್ಮೆ ಓದಿ!

0

ನೈರ್ಮಲ್ಯದ ದೃಷ್ಟಿಯಿಂದ ಪ್ರತಿದಿನ ಸ್ನಾನ ಮಾಡುವುದು ಅತ್ಯಂತ ಉತ್ತಮ ಅಭ್ಯಾಸ. ಹೀಗಾಗಿ ಬಹುತೇಕ ಜನರು ದಿನವೂ ತಪ್ಪದೆ ಸ್ನಾನ ಮಾಡುತ್ತಾರೆ.

ಕೆಲವರು ತಣ್ಣೀರಿನಲ್ಲಿ, ಇನ್ನೂ ಕೆಲವರು ಉಗುರುಬೆಚ್ಚಗಿನ ನೀರಲ್ಲಿ, ಮತ್ತಷ್ಟು ಮಂದಿ ಚಳಿಗಾಲ ಮಾತ್ರವಲ್ಲದೆ ಬೇಸಿಗೆಯಲ್ಲಿಯೂ ಸುಡು ಬಿಸಿ ನೀರಿನಿಂದಲೇ ಸ್ನಾನ ಮಾಡುವ ಅಭ್ಯಾಸ ಹೊಂದಿರುತ್ತಾರೆ.

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹಕ್ಕೆ ರಿಲ್ಯಾಕ್ಸ್‌ ಸಿಗುತ್ತದೆ, ಸ್ನಾಯುಗಳ ಬಿಗಿತ ಕಡಿಮೆಯಾಗುತ್ತದೆ ಎಂಬ ಭಾವನೆ ಇದೆ. ಆದರೆ ತಜ್ಞರ ಪ್ರಕಾರ, ಅತಿಯಾಗಿ ಬಿಸಿ ನೀರನ್ನು ಬಳಸುವುದು ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹಾಗಾದರೆ ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಉಂಟಾಗುವ ಸಮಸ್ಯೆಗಳೇನು ಎಂಬುದನ್ನು ನೋಡೋಣ.

ಚರ್ಮ ಒಣಗುವುದು:

ಬಿಸಿನೀರಿನ ಸ್ನಾನ ಚರ್ಮದ ನೈಸರ್ಗಿಕ ತೇವಾಂಶ ಮತ್ತು ರಕ್ಷಣಾತ್ಮಕ ತೈಲಗಳನ್ನು ತೆಗೆದುಹಾಕುತ್ತದೆ. ಇದರಿಂದ ಚರ್ಮ ಒಣಗುವುದು, ತುರಿಕೆ, ಕಿರಿಕಿರಿ ಹಾಗೂ ಚರ್ಮದ ಅಲರ್ಜಿ ಸಮಸ್ಯೆಗಳು ಉಂಟಾಗಬಹುದು.

ಕೂದಲು ಮತ್ತು ನೆತ್ತಿಗೆ ಹಾನಿ:

ಬಿಸಿನೀರು ಕೂದಲಿನ ನೆತ್ತಿಯಲ್ಲಿರುವ ನೈಸರ್ಗಿಕ ಎಣ್ಣೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದರಿಂದ ನೆತ್ತಿ ಒಣಗುವುದು, ತಲೆಹೊಟ್ಟು ಹೆಚ್ಚಾಗುವುದು ಹಾಗೂ ಕೂದಲು ಉದುರುವಿಕೆ ಸಮಸ್ಯೆ ತೀವ್ರವಾಗಬಹುದು.

ರಕ್ತದೊತ್ತಡದಲ್ಲಿ ಏರಿಳಿತ:

ಸುಡು ಬಿಸಿನೀರಿನಲ್ಲಿ ಸ್ನಾನ ಮಾಡುವಾಗ ದೇಹದ ರಕ್ತನಾಳಗಳು ಹಿಗ್ಗುತ್ತವೆ. ಇದರಿಂದ ರಕ್ತದೊತ್ತಡ ಹಠಾತ್‌ವಾಗಿ ಕಡಿಮೆಯಾಗಿ ತಲೆತಿರುಗುವಿಕೆ, ಆಯಾಸ ಅಥವಾ ದುರ್ಬಲತೆ ಕಾಣಿಸಿಕೊಳ್ಳಬಹುದು.

ಕಣ್ಣುಗಳಿಗೆ ತೊಂದರೆ:

ಬಿಸಿ ನೀರಿನ ಆವಿಯ ನೇರ ಸಂಪರ್ಕ ಕಣ್ಣುಗಳ ನೈಸರ್ಗಿಕ ತೇವಾಂಶವನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ ಕಣ್ಣುಗಳು ಕೆಂಪಾಗುವುದು, ಉರಿ ಮತ್ತು ತುರಿಕೆ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ದೇಹದ ತಾಪಮಾನ ಅಸಮತೋಲನ:

ನಿರಂತರವಾಗಿ ಬಿಸಿ ನೀರಿನಲ್ಲಿ ಸ್ನಾನ ಮಾಡುವ ಅಭ್ಯಾಸ ದೇಹದ ನೈಸರ್ಗಿಕ ತಾಪಮಾನ ನಿಯಂತ್ರಣ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ. ಇದರಿಂದ ಚಳಿ ಹವಾಮಾನವನ್ನು ಎದುರಿಸುವ ಶಕ್ತಿ ಕಡಿಮೆಯಾಗಬಹುದು.

ತಜ್ಞರ ಸಲಹೆ:

ಸ್ನಾನಕ್ಕೆ ಯಾವಾಗಲೂ ಉಗುರು ಬೆಚ್ಚಗಿನ ನೀರನ್ನು ಬಳಸುವುದು ಉತ್ತಮ. ಇದರಿಂದ ಚರ್ಮದ ತೇವಾಂಶ ಕಾಪಾಡಿಕೊಳ್ಳಬಹುದು, ನೈಸರ್ಗಿಕ ಎಣ್ಣೆಗಳು ಉಳಿಯುತ್ತವೆ ಹಾಗೂ ಕೂದಲು ಮತ್ತು ನೆತ್ತಿಗೆ ಹಾನಿಯಾಗುವುದಿಲ್ಲ.

error: Content is protected !!