Home Blog Page 5

ಬಿಡದಿ ಟೌನ್ ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಬೆಂಬಲ.. ಒಟ್ಟಾಗಿ ಹೋರಾಡಲು ತೀರ್ಮಾನ ಎಂದ HDK!

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಿಜೆಪಿ ಸಾಂಕೇತಿಕವಾಗಿ ಬೆಂಬಲ ನೀಡಲು ನಿರ್ಧರಿಸಿದೆ. ಬಿಜೆಪಿ-ಜೆಡಿಎಸ್ ನಾಯಕರು ಒಗ್ಗಟ್ಟಾಗಿ ಹೋರಾಟ ನಡೆಸುವ ತೀರ್ಮಾನಕ್ಕೆ ಬಂದಿದ್ದು, ನಾಳೆ ನಡೆಯಲಿರುವ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಿದ್ದರು.

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಆ.9 ಮತ್ತು 10ರಂದು ಎರಡು ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಬೈರಮಂಗಲದಿಂದ ಕೆಂಗೇರಿವರೆಗೆ ಪಾದಯಾತ್ರೆ ಸಾಗಲಿದ್ದು, ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್-ಬಿಜೆಪಿ ಜಂಟಿ ಸಮಾರೋಪ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಆ.19 ಅಥವಾ 20ರಂದು ಸಮಾರೋಪ ಸಮಾವೇಶ ನಡೆಯುವ ಸಾಧ್ಯತೆ ಇದೆ.

ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನಾಳೆ ಆರಂಭವಾಗಲಿರುವ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ರೈತರ ಪರವಾಗಿ ಈಗಾಗಲೇ ಬಿಜೆಪಿ ಹಲವು ಸಭೆಗಳನ್ನು ನಡೆಸಿದೆ. ಬಿಡದಿ ಟೌನ್‌ಶಿಪ್‌ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್‌ ಯೋಜನೆಗೆ ರೈತರು ಭೂಮಿ ನೀಡಲು ಸಿದ್ಧರಿಲ್ಲ. ರೈತರು ಮತ್ತು ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ಗಮನಿಸುತ್ತಿದೆ. ಹೀಗಾಗಿ ಈ ವಿಚಾರವನ್ನು ಸದನದಲ್ಲಿಯೂ ಪ್ರಸ್ತಾಪಿಸಿ ಚರ್ಚೆ ನಡೆಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ ಎಂದು ಟೀಕಿಸಿದರು. ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ ಮೂರು ವರ್ಷಗಳನ್ನು ಕಳೆದ ಸರ್ಕಾರ ಇದೀಗ ಸಚಿವರ ಖಾತೆ ಹಂಚಿಕೆ ವಿಚಾರದಲ್ಲೂ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ಈ ಸ್ಥಿತಿ ಅದರ ದಿವಾಳಿತನವನ್ನು ತೋರಿಸುತ್ತದೆ ಎಂದು ಕುಮಾರಸ್ವಾಮಿ ಟೀಕಿಸಿದರು.

ತಿಥಿ ಊಟ ಸೇವಿಸಿ 15 ಶಾಲಾ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಸಿದ್ಧಪಡಿಸಿದ್ದ ಭೋಜನ ಸೇವಿಸಿದ 15ಕ್ಕೂ ಹೆಚ್ಚು ವಿಶೇಷಚೇತನ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥರಾದವರನ್ನು ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಭದ್ರಾವತಿಯ ವೇಲೂರ್ ಶೆಡ್ ಪ್ರದೇಶದ ಮನೆಯೊಂದರಲ್ಲಿ ತಿಥಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಲಾಗಿದ್ದ ಊಟವನ್ನು ನ್ಯೂಟೌನ್‌ನ ತರಂಗ ಕಿವುಡು ಮತ್ತು ಮೂಗರ ವಸತಿ ಶಾಲೆಯ ವಿದ್ಯಾರ್ಥಿಗಳು ಸೇವಿಸಿದ್ದರು.

ಊಟ ಸೇವಿಸಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ. ಇದೇ ಭೋಜನ ಸೇವಿಸಿದ್ದ ಮೃತರ ಕುಟುಂಬದ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿದಂತೆ 7ರಿಂದ 8 ಮಂದಿ ಸಾರ್ವಜನಿಕರ ಆರೋಗ್ಯದಲ್ಲೂ ಏರುಪೇರಾಗಿದೆ.

ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣವೇ ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾರನ್ನೂ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯ ಎದುರಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವಿಶೇಷಚೇತನರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಲಾಗಿದೆ.

ಒಂದೇ ಕಾರ್ಯಕ್ರಮದ ಊಟ ಸೇವಿಸಿದ ಹಲವರು ಏಕಕಾಲದಲ್ಲಿ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಆಹಾರ ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಕ್ರಮದ ಬಳಿಕ ಉಳಿದಿದ್ದ ಆಹಾರವನ್ನು ಮಕ್ಕಳಿಗೆ ನೀಡಲಾಗಿತ್ತೇ ಅಥವಾ ಆಹಾರ ತಯಾರಿಕೆಯಲ್ಲೇ ದೋಷ ಸಂಭವಿಸಿತ್ತೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ಕ್ಲಾಸ್… ಇಂದು ಸಮಾಧಾನ! ಕಣ್ಣೀರಿಟ್ಟ ಚೇತನಾ ಪಾಟೀಲಗೆ ರಾಯರಡ್ಡಿ ಧೈರ್ಯ

ಗದಗ: ಬರ ಪರಿಸ್ಥಿತಿ ವರದಿಯಲ್ಲಿ ಲೋಪ ಕಂಡು ನಿನ್ನೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ, ಇಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಅವರಿಗೆ ಸಮಾಧಾನ ಹೇಳಿ ಧೈರ್ಯ ತುಂಬಿದರು.

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದ ಬರ ಪರಿಸ್ಥಿತಿ ಪರಿಶೀಲನಾ ಸಭೆಯಲ್ಲಿ ಬೆಳೆ ಅಂಕಿ-ಅಂಶಗಳ ಕುರಿತು ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ಬಾರದ ಹಿನ್ನೆಲೆಯಲ್ಲಿ ಸಚಿವರು ಗರಂ ಆಗಿದ್ದರು. ಈ ವೇಳೆ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಭಾವುಕರಾಗಿ ಸಭೆಯಲ್ಲೇ ಕಣ್ಣೀರು ಹಾಕಿದ್ದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಶನಿವಾರ ಶಿರಹಟ್ಟಿ ಪಟ್ಟಣದ ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆದ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ಬರ ಪರಿಸ್ಥಿತಿ ಅವಲೋಕನ ಸಭೆಗೂ ಮುನ್ನವೇ ಸಚಿವ ರಾಯರಡ್ಡಿ ಅವರು ಚೇತನಾ ಪಾಟೀಲ ಸೇರಿದಂತೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಾಧಾನಪಡಿಸಿದರು.

ಬೇಜಾರು ಮಾಡಿಕೊಳ್ಳಬೇಡಿ

ಸಭೆ ಆರಂಭಕ್ಕೂ ಮುನ್ನ ಚೇತನಾ ಪಾಟೀಲ ಅವರಿಗೆ ಧೈರ್ಯ ತುಂಬಿದ ಸಚಿವರು, “ನಾನು ವರದಿ ಕೇಳಿದ್ದು ಸ್ಪಷ್ಟತೆ ಇರಲಿ ಎಂದು ಹೇಳಿದ್ದೇನೆ. ಯಾರೂ ಬೇಜಾರು ಮಾಡಿಕೊಳ್ಳಬೇಡಿ. ನಾವೆಲ್ಲರೂ ಒಂದು ತಂಡವಾಗಿ ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸರಿಯಾದ ಹಾಗೂ ನಿಖರ ಮಾಹಿತಿಯೊಂದಿಗೆ ಸಭೆಗೆ ಬರಬೇಕು ಎಂದು ಮತ್ತೊಮ್ಮೆ ತಾಕೀತು ಮಾಡಿದ ಸಚಿವರು, ತಪ್ಪು ಮಾಹಿತಿ ಬಂದಾಗ ಅದನ್ನು ಪ್ರಶ್ನಿಸುವುದು ಅನಿವಾರ್ಯವಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ನಾನು ಟಫ್‌ ಮ್ಯಾನ್‌…

ಈ ವೇಳೆ ತಮ್ಮ ಕಾರ್ಯವೈಖರಿ ಕುರಿತು ಮಾತನಾಡಿದ ರಾಯರಡ್ಡಿ, “ನಾನೊಬ್ಬ ಟಫ್‌ ಮ್ಯಾನ್‌. ನನ್ನ ಭಾಷೆ ಸ್ವಲ್ಪ ಹಾರ್ಡ್‌ ಇದೆ. ಆದರೆ ನಾನು ಅಸಂವಿಧಾನಿಕ ಪದ ಬಳಸುವುದಿಲ್ಲ. ನಾವೆಲ್ಲರೂ ಪಬ್ಲಿಕ್‌ ಸರ್ವೆಂಟ್‌ಗಳು. ನೀವು ನೀಟಾಗಿ ಕೆಲಸ ಮಾಡಿ. ನಾವೆಲ್ಲರೂ ಸಾರ್ವಜನಿಕರ ಪರವಾಗಿ ಕೆಲಸ ಮಾಡುವವರು” ಎಂದರು.

“ನೀವು ಗುಡ್‌ ಆಫೀಸರ್‌ ಆಗಿದ್ದರೆ ಮಾಹಿತಿ ಸರಿಯಾಗಿ ಕೊಡಿ. ನಾನು ಹಲವಾರು ಹುದ್ದೆಗಳನ್ನು ಅನುಭವಿಸಿದ್ದೇನೆ. ಅಧಿಕಾರಿಗಳಿಂದ ನಿಖರ ಮಾಹಿತಿ ನಿರೀಕ್ಷಿಸುವುದು ಸಹಜ” ಎಂದು ಸಚಿವರು ಹೇಳಿದರು.

ನಿನ್ನೆ ನಡೆದ ಸಭೆಯಲ್ಲಿ ಕೃಷಿ ಇಲಾಖೆಯ ಬೆಳೆ ಅಂಕಿ-ಅಂಶಗಳ ಕುರಿತು ಅಸಮಾಧಾನಗೊಂಡಿದ್ದ ಸಚಿವರು, ಕೃಷಿ ಇಲಾಖೆಯ ಬೆಳೆಯನ್ನು ತೋಟಗಾರಿಕೆ ವಿಭಾಗದಲ್ಲಿ ನಮೂದಿಸಿರುವುದು ಸೇರಿದಂತೆ ಹಲವು ಲೋಪಗಳನ್ನು ಪ್ರಶ್ನಿಸಿದ್ದರು. ಸಚಿವರ ಕಠಿಣ ಮಾತುಗಳಿಂದ ಚೇತನಾ ಪಾಟೀಲ ಭಾವುಕರಾಗಿ ಕಣ್ಣೀರು ಹಾಕಿದ್ದರು. ಆದರೆ, “ಕಠಿಣವಾಗಿ ಮಾತನಾಡಿದ್ದು ಕೆಲಸದ ಮೇಲಿನ ಕಾಳಜಿಯಿಂದ, ವೈಯಕ್ತಿಕವಾಗಿ ಯಾರನ್ನೂ ನೋಯಿಸುವ ಉದ್ದೇಶವಿಲ್ಲ” ಎಂಬ ಸಂದೇಶವನ್ನು ಇಂದು ಸಚಿವರು ನೀಡುವ ಮೂಲಕ ಹಿಂದಿನ ಬೆಳವಣಿಗೆಗೆ ಸ್ಪಷ್ಟನೆ ನೀಡಿದರು.

ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ಬರ ಪರಿಸ್ಥಿತಿ, ಬೆಳೆ ಹಾನಿ, ಮಳೆ ಕೊರತೆ, ಕುಡಿಯುವ ನೀರು ಹಾಗೂ ರೈತರ ಸಮಸ್ಯೆಗಳ ಕುರಿತು ಸಭೆಯಲ್ಲಿ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು.

ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ʼನಲ್ಲಿ ಕಿಚ್ಚು: ರಾಹುಲ್ ಗಾಂಧಿಗೆ ನಿಷ್ಠಾವಂತ ಕಾರ್ಯಕರ್ತರಿಂದ ಮಹತ್ವದ ಪತ್ರ!

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ಹಿರಿಯ ನಾಯಕರ ಅಸಮಾಧಾನದ ನಡುವೆಯೇ ಇದೀಗ ಪಕ್ಷದ ಕಾರ್ಯಕರ್ತರೂ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದಾರೆ.

ಪಕ್ಷದ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕೆಲ ನಾಯಕರು ವೈಯಕ್ತಿಕ ರಾಜಕೀಯ ಲಾಭ ಪಡೆಯುತ್ತಿದ್ದಾರೆ ಹಾಗೂ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರ್ಯಕರ್ತರು ಮತ್ತು ನಾಯಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ, ‘ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು’ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಪಕ್ಷದೊಳಗಿನ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಅಸ್ತಿತ್ವದ ಪ್ರಶ್ನೆ ಎದುರಿಸಬೇಕಾಗಬಹುದು ಎಂದು ಕಾರ್ಯಕರ್ತರು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿಚಾರವಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಕೆಲ ನಾಯಕರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹೆಸರನ್ನು ಬಳಸಿಕೊಂಡು ತಮ್ಮ ರಾಜಕೀಯ ಲಾಭಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ರೀತಿಯ ಬೆಳವಣಿಗೆಗಳಿಗೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಲಾಗಿದೆ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷಕ್ಕೆ ದ್ರೋಹ ಬಗೆದವರು ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಕೆಲವರಿಗೆ ಸಚಿವ ಸ್ಥಾನ ನೀಡಿರುವುದು ದುರದೃಷ್ಟಕರ ಎಂದು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಹಾಗೂ ಸಚಿವ ಸ್ಥಾನವನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿರುವ ಶಾಸಕರನ್ನು ಸಂಪುಟದಿಂದ ಕೈಬಿಡಬೇಕು ಎಂದು ನಿಷ್ಠಾವಂತ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಜಾತಿ ಮತ್ತು ಹಣಬಲದ ಆಧಾರದ ಮೇಲೆ ಹೈಕಮಾಂಡ್ ಹೆಸರನ್ನು ಬಳಸಿಕೊಂಡು ಅಧಿಕಾರ ಪಡೆಯುವವರನ್ನು ಬದಿಗೊತ್ತಬೇಕು. ಸಾಮಾನ್ಯ ಕಾರ್ಯಕರ್ತರ ಪರವಾಗಿ ಧ್ವನಿ ಎತ್ತುವ ಹಾಗೂ ಪಕ್ಷಕ್ಕಾಗಿ ನಿಷ್ಠೆಯಿಂದ ಹೋರಾಡುವ ಶಾಸಕರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿರುವ ಅಸಮಾಧಾನದ ನಡುವೆಯೇ ಇದೀಗ ರಾಹುಲ್ ಗಾಂಧಿಗೆ ಬರೆಯಲಾಗಿರುವ ಈ ಬಹಿರಂಗ ಪತ್ರ ರಾಜ್ಯ ಕಾಂಗ್ರೆಸ್‌ನೊಳಗಿನ ಆಂತರಿಕ ಭಿನ್ನಾಭಿಪ್ರಾಯವನ್ನು ಮತ್ತಷ್ಟು ಮುನ್ನೆಲೆಗೆ ತಂದಿದೆ.

ಉಡುಪಿ ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಡೇವಿಡ್ ಹತ್ಯೆಗೆ ಸುಪಾರಿ, ಶಿರೂರು ಬಳಿ ಮೂವರು ಶಾರ್ಪ್ ಶೂಟರ್‌ಗಳು ಅರೆಸ್ಟ್

0

ಉಡುಪಿ: ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ತನಿಖೆಯಲ್ಲಿ ಉಡುಪಿ ಪೊಲೀಸರಿಗೆ ಮಹತ್ವದ ಯಶಸ್ಸು ಸಿಕ್ಕಿದೆ. ಡೇವಿಡ್ ಹತ್ಯೆಯ ಹಿಂದೆ ಹಣಕಾಸಿನ ವ್ಯವಹಾರದ ವಿಚಾರವಿದ್ದು, ಉತ್ತರ ಭಾರತದ ಸುಪಾರಿ ಕಿಲ್ಲರ್‌ಗಳ ಮೂಲಕ ಕೃತ್ಯ ಎಸಗಿಸಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಾರ್ಪ್ ಶೂಟರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಡೇವಿಡ್ ಡಿಸೋಜಾ ಅವರನ್ನು ಹತ್ಯೆಗೈಯಲು ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ ಶಾರ್ಪ್ ಶೂಟರ್‌ಗಳಿಗೆ ಸುಪಾರಿ ನೀಡಲಾಗಿತ್ತು ಎನ್ನಲಾಗಿದೆ. ಸುಪಾರಿ ಪಡೆದಿದ್ದ ಮೂವರ ತಂಡ ಮುದರಂಗಡಿಗೆ ಬಂದು ಹತ್ಯೆ ನಡೆಸಿದ ಬಳಿಕ ಪರಾರಿಯಾಗಲು ಯತ್ನಿಸಿತ್ತು.

ಕೃತ್ಯ ನಡೆದ ಬಳಿಕ ಆರೋಪಿಗಳ ಬೆನ್ನುಹತ್ತಿದ ಉಡುಪಿ ಪೊಲೀಸರು ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿದ್ದರು. ಕೊನೆಗೆ ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಶಿರೂರು ಸಮೀಪ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಲ್ಲಿ ಒಬ್ಬನನ್ನು ರಾಜು ಎಂದು ಗುರುತಿಸಲಾಗಿದ್ದು, ಉಳಿದ ಆರೋಪಿಗಳು ನಕಲಿ ಗುರುತಿನ ಚೀಟಿಗಳನ್ನು ಬಳಸಿಕೊಂಡಿದ್ದರು ಎನ್ನಲಾಗಿದೆ. ಬಂಧಿತರ ಸಂಪೂರ್ಣ ಹೆಸರು ಹಾಗೂ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಡೇವಿಡ್ ಡಿಸೋಜಾ ಹತ್ಯೆಗೆ ಸುಪಾರಿ ನೀಡಿದ ಪ್ರಮುಖ ಆರೋಪಿಗಳು ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಹೀಗಾಗಿ ಬಂಧಿತ ಶಾರ್ಪ್ ಶೂಟರ್‌ಗಳ ವಿಚಾರಣೆ ನಡೆಸಿ ಹತ್ಯೆಯ ಹಿಂದಿನ ಪ್ರಮುಖ ವ್ಯಕ್ತಿಗಳು ಹಾಗೂ ಹಣಕಾಸಿನ ವ್ಯವಹಾರದ ಕುರಿತು ಮಾಹಿತಿ ಕಲೆಹಾಕಲು ತನಿಖೆ ಮುಂದುವರಿಸಲಾಗಿದೆ.

ಮುದರಂಗಡಿಯಲ್ಲಿ ನಡೆದಿದ್ದ ಈ ಭೀಕರ ಶೂಟೌಟ್ ಪ್ರಕರಣದಲ್ಲಿ ಕೃತ್ಯ ಎಸಗಿದ ಆರೋಪಿಗಳನ್ನು ಕ್ಷಿಪ್ರವಾಗಿ ಬಂಧಿಸಿರುವುದು ತನಿಖೆಗೆ ಪ್ರಮುಖ ಮುನ್ನಡೆಯಾಗಿದ್ದು, ಇದೀಗ ಸುಪಾರಿ ನೀಡಿದವರ ಬಂಧನದತ್ತ ಪೊಲೀಸರ ಗಮನ ಕೇಂದ್ರೀಕೃತವಾಗಿದೆ.

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಪೊಲೀಸರ ಮೆಗಾ ಆಪರೇಷನ್; 30 ಕಡೆ ದಾಳಿ, 40 ಮಂದಿ ವಶಕ್ಕೆ

ಬೆಂಗಳೂರು: ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಪತ್ತೆಗಾಗಿ ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸುಮಾರು 30 ಸ್ಥಳಗಳ ಮೇಲೆ ದಾಳಿ ನಡೆಸಿ, ಅನುಮಾನಾಸ್ಪದವಾಗಿ ಕಂಡುಬಂದ 40 ಮಂದಿಯನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ಕೈಗೊಂಡಿದ್ದು, ಅಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿ ಹಾಗೂ ಮಹಿಳೆಯರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಆಧಾರ್, ಪ್ಯಾನ್, ವೋಟರ್ ಐಡಿ ಪರಿಶೀಲನೆ:

ಪೊಲೀಸರು ವಶಕ್ಕೆ ಪಡೆದವರ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಐಡಿ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಖಲೆಗಳಲ್ಲಿನ ಮಾಹಿತಿ ಹಾಗೂ ವ್ಯಕ್ತಿಗಳು ನೀಡುತ್ತಿರುವ ಮಾಹಿತಿಯಲ್ಲಿ ವ್ಯತ್ಯಾಸ ಅಥವಾ ಅನುಮಾನ ಕಂಡುಬಂದವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.

ವ್ಯಕ್ತಿಗಳ ಸ್ವಂತ ಊರು, ಪೋಸ್ಟ್ ಆಫೀಸ್ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ವಿವರಗಳನ್ನೂ ಪೊಲೀಸರು ಕೇಳಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ದಾಖಲೆಗಳಲ್ಲಿ ನಮೂದಿಸಿರುವ ಮಾಹಿತಿಗೂ ವ್ಯಕ್ತಿಗಳು ನೀಡುವ ವಿವರಗಳಿಗೂ ಹೊಂದಾಣಿಕೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

SIR ಮಾಹಿತಿಯೂ ಪರಿಶೀಲನೆ:

ಪೊಲೀಸರು SIRಗೆ ಸಂಬಂಧಿಸಿದ ಮಾಹಿತಿಯನ್ನೂ ಪರಿಶೀಲನೆಯ ಭಾಗವಾಗಿ ಕೇಳುತ್ತಿದ್ದಾರೆ. ಪೊಲೀಸ್ ಕಮಿಷನರ್ ಅವರ ಸೂಚನೆಯ ಮೇರೆಗೆ ಈ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ವಿದೇಶಿ ಪ್ರಜೆಗಳು ಪತ್ತೆಯಾದರೆ ಅವರ ವೀಸಾ, ಪಾಸ್‌ಪೋರ್ಟ್ ಹಾಗೂ ಭಾರತದಲ್ಲಿ ನೆಲೆಸಲು ಹೊಂದಿರುವ ಇತರ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಾಗುವುದು ಎಂದು ಡಿಸಿಪಿ ಹೇಳಿದ್ದಾರೆ.

ದಾಖಲೆಗಳಲ್ಲಿ ಅನುಮಾನ ಕಂಡುಬಂದರೆ FRROಗೆ ಹಾಜರು:

ವಿದೇಶಿ ಪ್ರಜೆಗಳ ದಾಖಲೆಗಳಲ್ಲಿ ಅನುಮಾನ ಕಂಡುಬಂದರೆ ಹೆಚ್ಚಿನ ಪರಿಶೀಲನೆ ನಡೆಸಿ, ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಬಂಧಪಟ್ಟ ವ್ಯಕ್ತಿಗಳು ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ದೃಢಪಟ್ಟರೆ, ನಿಯಮಾನುಸಾರ ಡಿಪೋರ್ಟ್ ಮಾಡುವ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ಈ ಬಾರಿ ಮಣ್ಣಿನ ಗಣೇಶನೇ ಪ್ರತಿಷ್ಠಾಪಿಸಬೇಕು; POP ಮೂರ್ತಿಗೆ ಸರ್ಕಾರದಿಂದ ಸಂಪೂರ್ಣ ಬ್ರೇಕ್!

ಚಿತ್ರದುರ್ಗ: ಸೆಪ್ಟೆಂಬರ್ 14ರಂದು ನಡೆಯಲಿರುವ ಗಣೇಶ ಹಬ್ಬಕ್ಕೂ ಮುನ್ನ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಪರಿಸರ ಸಂರಕ್ಷಣೆಯ ಉದ್ದೇಶದಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಹಾಗೂ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಇನ್ಮುಂದೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಮಾತ್ರ ಅವಕಾಶ ನೀಡುವಂತೆ ಸಚಿವರು ಇಲಾಖೆಗೆ ನಿರ್ದೇಶನ ನೀಡಿದ್ದಾರೆ. POP ಮೂರ್ತಿಗಳು ಮಾರುಕಟ್ಟೆಗೆ ಬಾರದಂತೆ ರಾಜ್ಯದಾದ್ಯಂತ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿದ್ದಾರೆ.

ಹಳ್ಳಿ ಹಳ್ಳಿಯಲ್ಲೂ ತಪಾಸಣೆ:

ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನೆರವು ಪಡೆದು ಗ್ರಾಮೀಣ ಪ್ರದೇಶಗಳಲ್ಲೂ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ.

ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಅಥವಾ ಮಾರಾಟ ಮಾಡುವುದು ಕಂಡುಬಂದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಜಲಮೂಲಗಳಿಗೆ ಅಪಾಯ:

POP ಗಣೇಶ ಮೂರ್ತಿಗಳಿಗೆ ಬಳಸುವ ಬಣ್ಣಗಳಲ್ಲಿ ಪಾದರಸ, ಕ್ಯಾಡ್ಮಿಯಂ ಹಾಗೂ ಸೀಸದಂತಹ ಭಾರ ಲೋಹಗಳು ಇರುವ ಸಾಧ್ಯತೆಯಿದೆ. ಇಂತಹ ಮೂರ್ತಿಗಳನ್ನು ಕೆರೆ, ನದಿ ಹಾಗೂ ಬಾವಿಗಳಲ್ಲಿ ವಿಸರ್ಜಿಸುವುದರಿಂದ ಜಲಮೂಲಗಳು ಕಲುಷಿತಗೊಳ್ಳುವ ಅಪಾಯವಿದೆ.

ಜಲಮಾಲಿನ್ಯದಿಂದ ಜಲಚರಗಳಿಗೂ ಅಪಾಯ ಎದುರಾಗುವುದಲ್ಲದೆ, ಕಲುಷಿತ ನೀರು ಮನುಷ್ಯರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಬಹುದು ಎಂದು ಸಚಿವರು ಎಚ್ಚರಿಸಿದ್ದಾರೆ.

POP ಮೂರ್ತಿ ವಿಸರ್ಜನೆ ಕಾನೂನುಬಾಹಿರ:

ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ, 1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆಗೆ ನಿರ್ಬಂಧವಿದೆ ಎಂದು ಸರ್ಕಾರ ತಿಳಿಸಿದೆ.

ಹೀಗಾಗಿ ಧಾರ್ಮಿಕ ಆಚರಣೆಗಳಿಗೆ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರು ಈ ಬಾರಿ ಮಣ್ಣಿನ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಜಲಮೂಲಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.

ಕಳ್ಳತನದ ಶಂಕೆಯಿಂದ ಪೊಲೀಸರಿಗೆ ಕರೆ; ಮನೆ ಪರಿಶೀಲಿಸಿದಾಗ ಬಾತ್‌ರೂಂನಲ್ಲಿ ಅಸ್ಥಿಪಂಜರ ಪತ್ತೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಹಾವನೂರು ಬಡಾವಣೆಯ ಮನೆಯೊಂದರಲ್ಲಿ ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮೃತಪಟ್ಟು ಸುಮಾರು ಒಂದೂವರೆ ವರ್ಷ ಕಳೆದ ಬಳಿಕ ಅಸ್ಥಿಪಂಜರ ಪತ್ತೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತ ಮಹಿಳೆಯನ್ನು ದಾಕ್ಷಾಯಿಣಿ ಎಂದು ಗುರುತಿಸಲಾಗಿದ್ದು, ಅವರು ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆಯೇ ಅವರು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ನಡೆದ ಮನೆಯ ಬಾಗಿಲು ಸಂಜೆ ವೇಳೆ ತೆರೆದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಯಾರೋ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿರಬಹುದು ಎಂದು ಶಂಕಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯನ್ನು ಪರಿಶೀಲಿಸಿದಾಗ ಬಾತ್‌ರೂಂನಲ್ಲಿ ದಾಕ್ಷಾಯಿಣಿ ಅವರ ಅಸ್ಥಿಪಂಜರ ಪತ್ತೆಯಾಗಿದೆ.

ಎಫ್‌ಎಸ್‌ಎಲ್‌ಗೆ ಅಸ್ಥಿಪಂಜರ ರವಾನೆ:

ಅಸ್ಥಿಪಂಜರವನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಿದ್ದಾರೆ. ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಸೇರಿದಂತೆ ಪ್ರಕರಣದ ಹಲವು ಅಂಶಗಳು ಸ್ಪಷ್ಟವಾಗುವ ಸಾಧ್ಯತೆಯಿದೆ.

ಈ ಪ್ರಕರಣ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಹಿಳೆಯ ಸಾವಿನ ಸಂದರ್ಭ, ಕಾರಣ ಹಾಗೂ ಇಷ್ಟು ದಿನಗಳ ಕಾಲ ಘಟನೆ ಬೆಳಕಿಗೆ ಬಾರದಿರುವ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಲಾಕಪ್‌ ಡೆತ್‌ ಪ್ರಕರಣಕ್ಕೆ ಸಿಐಡಿ ಎಂಟ್ರಿ! ಖಲೀಲುಲ್ಲಾ ಸಾವಿನ ತನಿಖೆ ಚುರುಕು

ಹಗರಿಬೊಮ್ಮನಹಳ್ಳಿ: ಕೌಟುಂಬಿಕ ಕಲಹದ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದ ಕಟ್ಟಡ ಕಾರ್ಮಿಕ ಸಿ. ಖಲೀಲುಲ್ಲಾ (38) ಆಗಸ್ಟ್‌ 1ರ ಮಧ್ಯರಾತ್ರಿ ಠಾಣೆಯಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭವಾಗಿದೆ.

ಪ್ರಕರಣದ ತನಿಖೆಗಾಗಿ ಸಿಐಡಿ ಡಿವೈಎಸ್ಪಿ ಗೋಪಾಲಕೃಷ್ಣ ಟಿ. ನಾಯಕ್ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಶನಿವಾರ ಹಗರಿಬೊಮ್ಮನಹಳ್ಳಿಗೆ ಆಗಮಿಸಿ ಪೊಲೀಸ್ ಠಾಣೆಗೆ ಭೇಟಿ ನೀಡಿತು. ಠಾಣೆಯಲ್ಲಿನ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ ತಂಡ, ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಕಲೆಹಾಕಿತು.

ಇದೇ ವೇಳೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಯೂ ಸ್ಥಳದಲ್ಲಿದ್ದು, ತನಿಖಾ ತಂಡಕ್ಕೆ ಅಗತ್ಯ ಮಾಹಿತಿಯನ್ನು ಒದಗಿಸಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಪ್ರಕರಣದ ವಿವಿಧ ಆಯಾಮಗಳ ಕುರಿತು ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದೆ.

ಇಬ್ಬರು ಪೊಲೀಸರ ಅಮಾನತು:

ಖಲೀಲುಲ್ಲಾ ಅವರ ಪತ್ನಿ ಸಾಹಿಜಾನ್ ಅವರು ಆಗಸ್ಟ್‌ 2ರಂದು ನೀಡಿದ ದೂರಿನ ಆಧಾರದ ಮೇಲೆ ಹೆಡ್‌ ಕಾನ್ ಸ್ಟೇಬಲ್ ರಾಘವೇಂದ್ರ ಹಾಗೂ ಕಾನ್ ಸ್ಟೇಬಲ್ ವೆಂಕಟೇಶ್ ವಿರುದ್ಧ ಹಲ್ಲೆ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಬಳಿಕ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು.

ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾನ್ನವಿ ಆದೇಶ ಹೊರಡಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳು ಹೂವಿನಹಡಗಲಿಯ ಉಪ ಬಂದಿಖಾನೆಯಲ್ಲಿ ಇದ್ದಾರೆ.

ಲಾಕಪ್‌ನಲ್ಲಿ ನಡೆದ ಸಾವು ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ತನಿಖೆ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಗೋಲ್‌ಮಾಲ್? ಮೃತರ ಖಾತೆಗಳಿಗೆ ಹಣ ಜಮೆ, ₹86 ಲಕ್ಷ ರಿಕವರಿ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೂ ನಿರಂತರವಾಗಿ ಹಣ ಜಮೆಯಾಗುತ್ತಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಈ ಸಂಬಂಧ ಇದುವರೆಗೆ ₹86 ಲಕ್ಷ ಹಣವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಾರಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 7,085 ಮೃತ ಫಲಾನುಭವಿಗಳ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.

ಮೃತರ ಖಾತೆಗಳಿಗೆ ಹಣ ಜಮೆ:

ಜಿಲ್ಲೆಯಲ್ಲಿ ಫಲಾನುಭವಿಗಳು ಮೃತಪಟ್ಟಿರುವ ವಿಷಯವನ್ನು ಅವರ ಕುಟುಂಬದ ಸದಸ್ಯರು ಸಂಬಂಧಪಟ್ಟ ಇಲಾಖೆಗೆ ತಿಳಿಸದಿರುವ ಹಲವು ಪ್ರಕರಣಗಳು ಪತ್ತೆಯಾಗಿವೆ. ಬಳಿಕ ಗ್ಯಾರಂಟಿ ಯೋಜನೆಗಳ ಜಾರಿ ಸಮಿತಿ ಹಾಗೂ ಅಧಿಕಾರಿಗಳು ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿದಾಗ ಮೃತರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಬೆಳಕಿಗೆ ಬಂದಿದೆ.

ಮೃತರ ಖಾತೆಗಳಿಂದ ಹಣ ಡ್ರಾ ಮಾಡಿರುವ ಹಾಗೂ ಹಣ ಡ್ರಾ ಮಾಡದೇ ಉಳಿದಿರುವ ಪ್ರಕರಣಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಇದುವರೆಗೆ ₹86 ಲಕ್ಷ ಹಣವನ್ನು ರಿಕವರಿ ಮಾಡಲಾಗಿದ್ದು, ಸರ್ಕಾರಕ್ಕೆ ಒಪ್ಪಿಸಲಾಗಿದೆ ಎಂದು ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗಿದೆ ಎಂದು ಅವರು ಹೇಳಿದ್ದಾರೆ.

₹2ರಿಂದ ₹3 ಕೋಟಿ ಹಣ ತಪ್ಪು ಖಾತೆಗಳಿಗೆ?

ಪ್ರಾಥಮಿಕ ಪರಿಶೀಲನೆಯ ಆಧಾರದ ಮೇಲೆ ಕೊಪ್ಪಳ ಜಿಲ್ಲೆಯಲ್ಲಿ ಮೃತರ ಖಾತೆಗಳ ಮೂಲಕ ಸುಮಾರು ₹2ರಿಂದ ₹3 ಕೋಟಿ ಹಣ ತಪ್ಪು ಖಾತೆಗಳಿಗೆ ಜಮೆಯಾಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ ಸಂಪೂರ್ಣ ಪರಿಶೀಲನೆ ಪೂರ್ಣಗೊಂಡ ಬಳಿಕವಷ್ಟೇ ನಿಖರ ಮೊತ್ತ ತಿಳಿದುಬರಲಿದೆ.

26 ಸಾವಿರ ಮಲ್ಟಿಪಲ್ ಖಾತೆಗಳು ಪತ್ತೆ:

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ ಸುಮಾರು 26,000 ಮಲ್ಟಿಪಲ್ ಖಾತೆಗಳು ಪತ್ತೆಯಾಗಿವೆ. ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆಗಳು ಹೊರ ರಾಜ್ಯಗಳಲ್ಲಿರುವುದು ಕೂಡ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಫಲಾನುಭವಿಯ ಖಾತೆ ಹಾಗೂ ದಾಖಲೆಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

3.13 ಲಕ್ಷ ಫಲಾನುಭವಿಗಳಿಗೆ ಪ್ರತಿ ತಿಂಗಳು ₹63 ಕೋಟಿ:

ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3,13,500 ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದು, ಪ್ರತಿ ತಿಂಗಳು ಸುಮಾರು ₹63 ಕೋಟಿ ಹಣ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುತ್ತಿದೆ.

ಸರ್ಕಾರದ ಸೂಚನೆಯಂತೆ ಇದೀಗ ಪ್ರತಿಯೊಂದು ಫಲಾನುಭವಿಯ ಖಾತೆ, ಮರಣ ದಾಖಲೆಗಳು ಹಾಗೂ ಇತರ ಸಂಬಂಧಿತ ದಾಖಲೆಗಳನ್ನು ತೀವ್ರವಾಗಿ ಪರಿಶೀಲಿಸಲಾಗುತ್ತಿದೆ. ಅಕ್ರಮವಾಗಿ ಹಣ ಪಡೆದಿರುವುದು ದೃಢಪಟ್ಟರೆ ಅಂತಹ ಮೊತ್ತವನ್ನು ವಸೂಲಿ ಮಾಡುವ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.