Home Blog Page 50

ನಕಲಿ ಮತದಾರರ ಸೇರ್ಪಡೆಗೆ ಕಾಂಗ್ರೆಸ್ ಕುಮ್ಮಕ್ಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡು ನುಸುಳುಕೋರರು ಹಾಗೂ ನಕಲಿ ಮತದಾರರನ್ನು ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ನಿಯಮಗಳನ್ನು ಸಡಿಲಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಯಾವುದೇ ಕಾನೂನಾತ್ಮಕ ದಾಖಲೆಗಳಿಲ್ಲದೆ ಮೌಖಿಕ ಸಾಕ್ಷ್ಯದ ಆಧಾರದ ಮೇಲೆ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಿರುವುದು ನಕಲಿ ಮತದಾರರ ಸೇರ್ಪಡೆಗೆ ದಾರಿ ಮಾಡಿಕೊಡಲಿದೆ ಎಂದು ದೂರಿದರು.

ರಾಜ್ಯದ ಶೇ.80ರಿಂದ 90ರಷ್ಟು ಮನೆಗಳಿಗೆ ಎಸ್‌ಐಆರ್ ನಮೂನೆಗಳು ತಲುಪಿವೆ ಎಂಬ ಅಧಿಕಾರಿಗಳ ಹೇಳಿಕೆ ವಾಸ್ತವಕ್ಕೆ ದೂರವಾಗಿದೆ. ಅನೇಕ ಕಡೆಗಳಲ್ಲಿ ಬಿಎಲ್‌ಒಗಳು ಮನೆಮನೆಗೆ ತೆರಳಿ ನಮೂನೆ ವಿತರಿಸುತ್ತಿಲ್ಲ. ಜಿಲ್ಲಾಧಿಕಾರಿಗಳು ಈ ಬಗ್ಗೆ ತಕ್ಷಣ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಆಡಳಿತಕ್ಕೆ ಬಂದಾಗಲೆಲ್ಲ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗುತ್ತವೆ ಎಂದು ಆರೋಪಿಸಿದ ಜೋಶಿ, ಹಾನಗಲ್ ಘಟನೆ ಹಾಗೂ ಮಾದಕ ವಸ್ತುಗಳ ಜಾಲದ ಬಗ್ಗೆ ಸರ್ಕಾರದ ಮೌನವನ್ನು ಪ್ರಶ್ನಿಸಿದರು.

ಕೆಪಿಎಸ್‌ಸಿ ಸಂವಿಧಾನಬದ್ಧ ಸಂಸ್ಥೆಯಾಗಿದ್ದು, ಅದರಲ್ಲಿರುವ ಲೋಪಗಳನ್ನು ಸರಿಪಡಿಸಬೇಕೇ ಹೊರತು ಸಂಸ್ಥೆಯನ್ನೇ ದುರ್ಬಲಗೊಳಿಸುವುದು ಸರಿಯಲ್ಲ ಎಂದು ಹೇಳಿದರು. ಆರ್‌ಎಸ್‌ಎಸ್ ಕುರಿತು ಕೇಳಿದ ಪ್ರಶ್ನೆಗೆ, ಶತಮಾನದ ಇತಿಹಾಸವಿರುವ ಸಂಘಟನೆ ತನ್ನ ಬಗ್ಗೆ ತಾನೇ ಉತ್ತರಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಸಿ.ಸಿ. ಪಾಟೀಲ, ಮುರಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಇದ್ದರು.

ಮಂತ್ರಿಮಂಡಲ ವಿಳಂಬಕ್ಕೆ ಟೀಕೆ

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 40 ದಿನಗಳಾದರೂ ಸಚಿವ ಸಂಪುಟ ವಿಸ್ತರಣೆ ಆಗದಿರುವುದನ್ನು ಟೀಕಿಸಿದ ಜೋಶಿ, ಕಾಂಗ್ರೆಸ್ ಆಡಳಿತದಲ್ಲಿ ಸಮನ್ವಯದ ಕೊರತೆ ಸ್ಪಷ್ಟವಾಗಿದೆ. ಆಡಳಿತದ ಜವಾಬ್ದಾರಿಗಿಂತ ರಾಜಕೀಯ ಗೊಂದಲವೇ ಹೆಚ್ಚಾಗಿದೆ ಎಂದು ಲೇವಡಿ ಮಾಡಿದರು.

“ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಕಾಂಗ್ರೆಸ್ ನುಸುಳುಕೋರರು ಹಾಗೂ ನಕಲಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನ ನಡೆಸುತ್ತಿದೆ.”

– ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ

ಬೇರ್ಪಟ್ಟ ಬದುಕು ಮತ್ತೆ ಬೆಸೆದ ನ್ಯಾಯಾಲಯ!

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ವರ್ಷಗಳ ಕಾಲ ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದಾಗಿಸುವಲ್ಲಿ ಧಾರವಾಡ ಕುಟುಂಬ ನ್ಯಾಯಾಲಯ ಮಹತ್ವದ ಯಶಸ್ಸು ಸಾಧಿಸಿದೆ. ರಾಜಿ ಸಂಧಾನ ಪ್ರಕ್ರಿಯೆಯಲ್ಲಿ 55 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅವುಗಳಲ್ಲಿ 15 ದಂಪತಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಹೊಸ ಬದುಕು ಆರಂಭಿಸಲು ನಿರ್ಧರಿಸಿದ್ದಾರೆ.

ಪುನರ್ಮಿಲನಗೊಂಡ ದಂಪತಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು ಹೊಸ ಜೀವನಕ್ಕೆ ಕಾಲಿಟ್ಟರು. ಕುಟುಂಬ ಸದಸ್ಯರು, ನ್ಯಾಯಾಧೀಶರು ಹಾಗೂ ನ್ಯಾಯಾಲಯದ ಸಿಬ್ಬಂದಿ ಈ ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ್ ಮಾತನಾಡಿ, ರಾಜಿ ಸಂಧಾನದ ಮೂಲಕ ದಂಪತಿಗಳು ಪರಸ್ಪರ ಹೊಂದಾಣಿಕೆಯಿಂದ ಜೀವನ ಮುಂದುವರಿಸಲು ಒಪ್ಪಿಕೊಂಡಿದ್ದು, ಸಂತೋಷದಿಂದ ಮನೆಗಳಿಗೆ ತೆರಳಿದ್ದಾರೆ ಎಂದು ತಿಳಿಸಿದರು.

ಕುಟುಂಬ ನ್ಯಾಯಾಲಯದ ನ್ಯಾಯಾಧೀಶ ನಾಗರಾಜಪ್ಪ ಎ.ಕೆ. ಅವರ ಮಾಹಿತಿ ಪ್ರಕಾರ, ಪುನರ್ಮಿಲನಗೊಂಡ ದಂಪತಿಗಳಲ್ಲಿ ಕೆಲವರು 5, 10 ಹಾಗೂ 16 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕೇವಲ ಮೂರು ತಿಂಗಳ ಸಂಸಾರದ ಬಳಿಕ ದೂರವಾಗಿದ್ದ ದಂಪತಿಯೂ ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿರುವುದು ವಿಶೇಷವಾಗಿದೆ.

ದಾಂಪತ್ಯದಲ್ಲಿ ಸಂವಾದ, ಹೊಂದಾಣಿಕೆ ಮತ್ತು ಪರಸ್ಪರ ವಿಶ್ವಾಸದ ಮಹತ್ವವನ್ನು ಮನವರಿಕೆ ಮಾಡಿಕೊಟ್ಟ ಪರಿಣಾಮ ಈ ಯಶಸ್ಸು ಸಾಧ್ಯವಾಗಿದೆ. ವಕೀಲರು ಹಾಗೂ ನ್ಯಾಯಾಂಗದ ಸಹಕಾರದಿಂದ ರಾಜಿ ಸಂಧಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ಹಲವು ಕುಟುಂಬಗಳಲ್ಲಿ ಮತ್ತೆ ಸಂತಸ ಮೂಡಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಸೇರಿದಂತೆ ವಕೀಲರು ಉಪಸ್ಥಿತರಿದ್ದರು.

“ಕೌಟುಂಬಿಕ ಸಮಸ್ಯೆಗಳು ಎಲ್ಲರ ಬದುಕಿನಲ್ಲೂ ಬರುತ್ತವೆ. ಆದರೆ ಪರಸ್ಪರ ಅರ್ಥೈಸಿಕೊಳ್ಳುವ ಮನೋಭಾವ ಇದ್ದರೆ ಯಾವುದೇ ಭಿನ್ನಾಭಿಪ್ರಾಯವನ್ನು ನಿವಾರಿಸಿಕೊಂಡು ಸುಖೀ ಜೀವನ ನಡೆಸಬಹುದು.”

– ನಾಗರಾಜಪ್ಪ ಎ.ಕೆ., ನ್ಯಾಯಾಧೀಶರು, ಕುಟುಂಬ ನ್ಯಾಯಾಲಯ

ಕನಸು ದೊಡ್ಡದಿರಲಿ… ಸಾಧನೆ ಅದಕ್ಕಿಂತ ದೊಡ್ಡದಿರಲಿ: ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಯನ್ನು ಹೊಂದಿ ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದ ಮೂಲಕ ಯಶಸ್ಸಿನ ಶಿಖರ ತಲುಪಬೇಕು ಎಂದು ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಕರೆ ನೀಡಿದರು.

ಪಟ್ಟಣದ ಹರಹರ ದೇವಸ್ಥಾನದಲ್ಲಿ ಚಾಣಕ್ಯ ಕರಿಯರ್ ಅಕಾಡೆಮಿ ಹಾಗೂ ಶಾಸಕ ಕೆ. ನೇಮರಾಜ ನಾಯ್ಕ ಅವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ 10 ದಿನಗಳ ಉಚಿತ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ನಿರಂತರ ಶ್ರಮ ಮತ್ತು ಗುರಿ ಸ್ಪಷ್ಟವಾಗಿರಬೇಕು. ದೊಡ್ಡ ಕನಸು ಕಂಡು ಅದನ್ನು ಸಾಕಾರಗೊಳಿಸಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಅಕಾಡೆಮಿ ಮುಖ್ಯಸ್ಥ ಪ್ರದೀಪ್ ಗುಡ್ಡದ ಪ್ರಾಸ್ತಾವಿಕವಾಗಿ ಮಾತನಾಡಿ, 2017ರಲ್ಲಿ ಆರಂಭವಾದ ಚಾಣಕ್ಯ ಕರಿಯರ್ ಅಕಾಡೆಮಿಯಲ್ಲಿ ಇದುವರೆಗೆ 6 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ತರಬೇತಿ ಪಡೆದು ವಿವಿಧ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಐಎಎಸ್, ಐಪಿಎಸ್, ಕೆಎಎಸ್, ಕೆಪಿಎಸ್ ಹಾಗೂ ಪಿಎಸ್‌ಐ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದೆ ಎಂದರು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಿರುವ ಶಾಸಕ ಕೆ. ನೇಮರಾಜ ನಾಯ್ಕ ಹಾಗೂ ಹರಹರ ದೇವಸ್ಥಾನ ಸಮಿತಿಯನ್ನು ಅಭಿನಂದಿಸಿದರು.

ಹರಹರ ದೇವಸ್ಥಾನ ಸಮಿತಿ ಅಧ್ಯಕ್ಷ ಅಕ್ಕಿಶಿವಣ್ಣ ಮಾತನಾಡಿ, ಏಕಾಗ್ರತೆ ಮತ್ತು ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ ಎಂದರು.

ನಂದೀಪುರ ಸುಕ್ಷೇತ್ರದ ಡಾ. ಮಹೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ನವಲಿ ಮಠದ ರುದ್ರಮುನಿ ಸ್ವಾಮೀಜಿ ಹಾಗೂ ಕಡಲಬಾಳು ಗವಿಮಠದ ಮರಿ ಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ದೇವಿಪ್ರಸಾದ್, ಕಿನ್ನಾಳ್ ಸುಭಾಷ್, ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗವಿಸಿದ್ದೇಶ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ 1,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

ಒಳಮೀಸಲಾತಿ ಜಾರಿಗೊಳಿಸಿ ಅಂಗನವಾಡಿ ನೇಮಕಾತಿ ನಡೆಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯಲ್ಲಿ ಸರ್ಕಾರದ ಆದೇಶದಂತೆ ಒಳಮೀಸಲಾತಿ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಭೀಮ ಶಕ್ತಿ ಸಂಘಟನೆ ವತಿಯಿಂದ ಗದಗ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಭೀಮ ಶಕ್ತಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ ಮುಗುಳಿ, ರಾಜ್ಯ ಸರ್ಕಾರವು 2026ರ ಮೇ 8ರಂದು ಹೊರಡಿಸಿರುವ ಆದೇಶದ ಪ್ರಕಾರ ಪರಿಶಿಷ್ಟ ಜಾತಿಗೆ ಮೂರು ಅಥವಾ ಅದಕ್ಕಿಂತ ಹೆಚ್ಚು ಹುದ್ದೆಗಳು ಇದ್ದರೆ ಒಳಮೀಸಲಾತಿ ಅನ್ವಯ ನೇಮಕಾತಿ ನಡೆಸುವುದು ಕಡ್ಡಾಯವಾಗಿದೆ. ಆದರೆ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಶಿಶು ಅಭಿವೃದ್ಧಿ ಯೋಜನೆಯಡಿ ಜೂನ್ 22ರಂದು ಪ್ರಕಟಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಈ ನಿಯಮ ಪಾಲನೆಯಾಗಿಲ್ಲ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿಗೆ ಮೂರುಕ್ಕಿಂತ ಹೆಚ್ಚು ಹುದ್ದೆಗಳಿದ್ದರೂ ಒಳಮೀಸಲಾತಿ ಅನ್ವಯಿಸದೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಿರುವುದು ಸರ್ಕಾರದ ಆದೇಶ ಹಾಗೂ ಸಾಮಾಜಿಕ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ. ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಒಳಮೀಸಲಾತಿ ಅನ್ವಯ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅದಕ್ಕೂ ಮುನ್ನ ಸರ್ಕಾರದ ಆದೇಶದಂತೆ ನೇಮಕಾತಿ ಪ್ರಕ್ರಿಯೆ ತಿದ್ದುಪಡಿ ಮಾಡಬೇಕು. ಇಲ್ಲವಾದರೆ ಕಾನೂನು ಹೋರಾಟದ ಜೊತೆಗೆ ಸಂಬಂಧಿಸಿದ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯ ಕಾನೂನು ಸಲಹೆಗಾರ ಮೈಲಾರಪ್ಪ ಡಿ.ಎಚ್., ಅಣ್ಣಪ್ಪ ಗುತ್ತೇಮ್ಮನವರ, ಅನಿಲ ಸಣ್ಣತಂಗಿಯವರ, ಪ್ರವೀಣ ಅದರಗುಂಚಿ, ಶ್ಯಾಮಸುಂದರ, ಮನು ತುರಾಡಿ, ಸೋಮಣ್ಣ, ಶಿವು ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು.

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ: ಮಿಥುನ್ ಜಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹಾಲಕೆರೆ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನಿರ್ಮಿಸಲಾಗುತ್ತಿರುವ ಜಲಸಂಗ್ರಹಾಗಾರದ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಿ ಗ್ರಾಮಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಹೇಳಿದರು.

ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಜಲಸಂಗ್ರಹಾಗಾರಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ನೀರು ಸಂಗ್ರಹಿಸುವ ವ್ಯವಸ್ಥೆ ಇಲ್ಲದಿರುವುದನ್ನು ಮನಗಂಡು ಶಾಸಕ ಜಿ.ಎಸ್. ಪಾಟೀಲ ಅವರು ತಮ್ಮ ಶಾಸಕರ ಅನುದಾನದಿಂದ ₹20 ಲಕ್ಷ ಮಂಜೂರು ಮಾಡಿದ್ದು, ಗ್ರಾಮ ಪಂಚಾಯಿತಿಯಿಂದ ₹20 ಲಕ್ಷ ನೀಡಲಾಗುತ್ತಿದೆ. ಒಟ್ಟು ₹40 ಲಕ್ಷ ವೆಚ್ಚದಲ್ಲಿ ಜಲಸಂಗ್ರಹಾಗಾರ ನಿರ್ಮಾಣವಾಗಲಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಲಕೆರೆ ಗ್ರಾಮಕ್ಕೆ ಜಲಸಂಗ್ರಹಾಗಾರದ ಅವಶ್ಯಕತೆ ಬಹಳಷ್ಟಿದ್ದು, ಶಾಸಕ ಜಿ.ಎಸ್. ಪಾಟೀಲ ಅವರ ಕೊಡುಗೆ ಶ್ಲಾಘನೀಯವಾಗಿದೆ ಎಂದರು. ಗ್ರಾಮದಲ್ಲಿ ನೆಡುವ ಸಸಿಗಳನ್ನು ಮರಗಳಾಗುವವರೆಗೆ ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಾಲಕೆರೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂದನಗೌಡ ಪಾಟೀಲ, ರೋಣ ಎಇ ರಶ್ಮಿ, ಗಜೇಂದ್ರಗಡ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿದರು.

ಈ ಸಂದರ್ಭದಲ್ಲಿ ಗಿರೀಶಗೌಡ ಮುಲ್ಕಿಪಾಟೀಲ, ಸಿದ್ದನಗೌಡರ ಇನಾಮತಿ, ಸೊಪ್ಪಯ್ಯ ಸ್ವಾಮಿ ಸೊಪ್ಪಿಹಿರೇಮಠ, ಹೊನ್ನಪ್ಪಗೌಡ ಪಾಟೀಲ, ಪಿಡಿಒ ಶರಣಪ್ಪ ನರೇಗಲ್ಲ, ಶಿವಕುಮಾರ ನಂದಿ, ಅಂದನಗೌಡ ಪಾಟೀಲ, ವೀರಣ್ಣ ಹಳ್ಳಿ, ಅಶೋಕ ಮಾಳಗೌಡರ, ಮಹೇಶ್ ಕುರಿ, ಆನಂದ ಹಳ್ಳಿ, ಪರಶುರಾಮ ತೆಲೆಖಾನ, ರಾಮಪ್ಪ ಪೂಜಾರ, ಶರಣಪ್ಪ ಪೂಜಾರ, ನವೀನ್ ಮಾದಿನೂರ, ಪ್ರವೀಣ ಭೈರಗೊಂಡ, ಬಾಳಪ್ಪ ಕುರಿ, ಮಾಂತೇಶ್ ಪ್ರಭಣ್ಣವರ, ಸಿದ್ದಪ್ಪ ಗೆದಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸೇವೆಯಲ್ಲೇ ಸಾರ್ಥಕತೆ ಕಂಡ ಇನ್ನರ್ ವೀಲ್!

0

ವಿಜಯಸಾಕ್ಷಿ ಸುದ್ದಿ, ಗದಗ: ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಂಗವಾಗಿ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಆರ್ಥಿಕವಾಗಿ ಹಿಂದುಳಿದ ಶ್ರವಣ ದೋಷವುಳ್ಳ ವಿದ್ಯಾರ್ಥಿನಿ ಪಲ್ಲವಿ ಭಾನಾಪುರ ಅವರಿಗೆ ಶಿಕ್ಷಣ ಮುಂದುವರಿಸಲು ಅಗತ್ಯ ಪಠ್ಯಪೂರಕ ಸಾಮಗ್ರಿಗಳನ್ನು ವಿತರಿಸಲಾಯಿತು. ಬಡ ರೈತ ಮಹಿಳೆ ಪದ್ಮಾವತಿ ಡೊಂಗಡೆ ಅವರಿಗೆ ಕೃಷಿಗೆ ನೆರವಾಗುವಂತೆ ಬೀಜಗಳನ್ನು ವಿತರಿಸಿದರೆ, ಮತ್ತೊಬ್ಬ ಮಹಿಳೆ ಶೈಲಾ ಅಂಗಡಿ ಅವರಿಗೆ ದೈನಂದಿನ ಜೀವನಕ್ಕೆ ನೆರವಾಗುವ ಉದ್ದೇಶದಿಂದ ಮಿಕ್ಸರ್ ಗ್ರೈಂಡರ್ ನೀಡಲಾಯಿತು.

ಈ ಸಂದರ್ಭದಲ್ಲಿ ಡಿಇಎಸ್‌ಒ ವಿರಾಜ ಕೋಟಕ್ ಅವರು ಕ್ಲಬ್‌ನ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪಿಡಿಸಿ ಪ್ರೇಮಾ ಗುಳಗೌಡರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಅಶ್ವಿನಿ ಜಗತಾಪ್ ಸ್ವಾಗತಿಸಿದರು. ರೇಣುಕಾ ಅಮಾತ್ಯ ಪ್ರಾರ್ಥನೆ ನಡೆಸಿದರೆ, ಸುವರ್ಣ ಮದರಿಮಠ ಇನ್ನರ್ ವೀಲ್ ಪ್ರಾರ್ಥನೆ ನೆರವೇರಿಸಿದರು.

ಪ್ರಸಕ್ತ ಸಾಲಿನ ಅಧ್ಯಕ್ಷೆ ಮಂಜುಳಾ ಅಕ್ಕಿ ವಾರ್ಷಿಕ ಸೇವಾ ಯೋಜನೆಗಳನ್ನು ವಿವರಿಸಿದರು. ಕಾರ್ಯದರ್ಶಿ ಪೂಜಾ ಭೂಮಾ ವಂದಿಸಿದರು. ಜ್ಯೋತಿ ದಾನಪ್ಪಗೌಡರ ಹಾಗೂ ಸ್ಮಿತಾ ಹೊಸೂರ್ ಕಾರ್ಯಕ್ರಮ ನಿರ್ವಹಿಸಿದರು.

ಮೊಸಳೆಯೋ… ಆನೆಯೋ? ಪ್ರಕೃತಿಯ ಈ ಕಲಾಕೃತಿ ನೋಡಿ ಜನ ಅಚ್ಚರಿ!

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪ್ರಕೃತಿಯ ಸೃಷ್ಟಿಯ ಮುಂದೆ ಮನುಷ್ಯನ ಕಲ್ಪನೆಯೂ ಕೆಲವೊಮ್ಮೆ ಮಂಕಾಗುತ್ತದೆ. ಅಂತಹ ಅಪರೂಪದ ಪ್ರಕೃತಿ ವೈಚಿತ್ರ್ಯವೊಂದು ನರೇಗಲ್ಲ–ಗದಗ ರಸ್ತೆಯ ಪೆಟ್ರೋಲ್ ಬಂಕ್ ಸಮೀಪದ ಪ್ರಶಾಂತ ಮೇಸ್ತ್ರಿ ಅವರ ಕಾರ್ ಗ್ಯಾರೇಜ್ ಎದುರು ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಗಿಡ ಮತ್ತು ಜಾಲಿಗಿಡಗಳ ಸಹಜ ಬೆಳವಣಿಗೆಯಿಂದ ರೂಪುಗೊಂಡಿರುವ ಈ ಆಕಾರ ನೋಡಿದವರಿಗೆ ಒಂದೇ ರೀತಿಯಾಗಿ ಕಾಣುವುದಿಲ್ಲ. ಕೆಲವರಿಗೆ ಅದು ಬಾಯಿ ತೆರೆದು ಬೇಟೆಗೆ ಹೊಂಚು ಹಾಕಿರುವ ಮೊಸಳೆಯಂತೆ ಭಾಸವಾದರೆ, ಮತ್ತೂ ಕೆಲವರಿಗೆ ಸೊಂಡಿಲೆತ್ತಿ ಘೀಳಿಡುತ್ತಿರುವ ಆನೆಯಂತೆ ಕಾಣುತ್ತಿದೆ. ಅದರ ತಲೆ, ಬಾಯಿ ಮತ್ತು ಕೋರೆ ಹಲ್ಲುಗಳಂತಿರುವ ಆಕಾರ ಪ್ರಕೃತಿಯ ಅದ್ಭುತ ಕಲಾಕೃತಿಯಂತೆ ಗೋಚರಿಸುತ್ತಿದೆ.

ವಿಶೇಷವೆಂದರೆ, ಈ ರಚನೆಯನ್ನು ಯಾರೂ ಕೃತಕವಾಗಿ ಸೃಷ್ಟಿಸಿಲ್ಲ. ಯಾವುದೇ ಕೊಂಬೆಗಳನ್ನು ಕತ್ತರಿಸಿ ಅಥವಾ ರೂಪಿಸಿ ಮಾಡದೇ, ಗಿಡಗಳ ಸಹಜ ಬೆಳವಣಿಗೆಯಿಂದಲೇ ಈ ವಿಶಿಷ್ಟ ಆಕಾರ ಮೂಡಿದೆ. ಇದೇ ಕಾರಣಕ್ಕೆ ಈ ಮಾರ್ಗದಲ್ಲಿ ಸಂಚರಿಸುವ ಅನೇಕರು ವಾಹನಗಳನ್ನು ನಿಲ್ಲಿಸಿ ಕೆಲ ಹೊತ್ತು ಈ ಪ್ರಕೃತಿ ವೈಚಿತ್ರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಸ್ಥಳೀಯ ನಿವಾಸಿ ಈರಪ್ಪ ಮಣ್ಣೊಡ್ಡರ ಮಾತನಾಡಿ, “ನಾವು ಇಲ್ಲಿಯೇ ಕೆಲಸ ಮಾಡುತ್ತಿದ್ದರೂ ಈ ರಚನೆ ನಮ್ಮ ಗಮನಕ್ಕೆ ಬಂದಿರಲಿಲ್ಲ. ದಾರಿಹೋಕರು ಪದೇಪದೇ ವಾಹನ ನಿಲ್ಲಿಸಿ ನೋಡುತ್ತಿರುವುದನ್ನು ಕಂಡು ಕುತೂಹಲದಿಂದ ಗಮನಿಸಿದಾಗ ಈ ಅಪರೂಪದ ಆಕಾರ ಕಾಣಿಸಿತು. ಇದು ಪ್ರಕೃತಿಯೇ ಮೂಡಿಸಿರುವ ಅದ್ಭುತ ಶಿಲ್ಪ,” ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಸೃಷ್ಟಿಯ ರಹಸ್ಯಗಳನ್ನು ಅರಿಯಲು ದೊಡ್ಡ ಕಣ್ಣಲ್ಲ, ಗಮನಿಸುವ ಕಣ್ಣು ಸಾಕು ಎನ್ನುವುದನ್ನು ಈ ಪ್ರಕೃತಿ ಕಲಾಕೃತಿಯೇ ಸಾಬೀತುಪಡಿಸುತ್ತಿದೆ.

ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ! ಸಂಗೀತ ಲೋಕಕ್ಕೆ ಆಘಾತ

0

ಮೈಸೂರು: ತಮ್ಮ ಸುಮಧುರ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ನಿಧನರಾಗಿದ್ದಾರೆ.

ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಎಸ್. ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು. 1938ರ ಏಪ್ರಿಲ್ 23ರಂದು ಜನಿಸಿದ್ದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಧ್ವನಿಯ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದರು.

ಹಳ್ಳಿಯ ಸೊಗಡಿನ ಜನಪದ ಗೀತೆಗಳಿಂದ ಹಿಡಿದು ಶಾಸ್ತ್ರೀಯ, ಭಾವಗೀತೆ ಹಾಗೂ ವಿವಿಧ ಪ್ರಕಾರದ ಹಾಡುಗಳಿಗೆ ತಮ್ಮ ಧ್ವನಿ ನೀಡಿದ್ದ ಎಸ್. ಜಾನಕಿ ಅವರು ಹಲವು ಭಾಷೆಗಳ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರರಂಗದಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ.

ಎಸ್. ಜಾನಕಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಂಗೀತ ಪ್ರೇಮಿಗಳು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಜೀವನದ ಯಶಸ್ಸು ಹುದ್ದೆಯಲ್ಲ, ಆತ್ಮತೃಪ್ತಿಯಲ್ಲಿ: ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಜೀವನದ ನಿಜವಾದ ಮೌಲ್ಯವು ಹುದ್ದೆ, ಅಧಿಕಾರ ಅಥವಾ ಸಂಪತ್ತಿನಲ್ಲಿ ಅಡಗಿಲ್ಲ. ಬದುಕಿನ ಕೊನೆಯಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲದೆ ಆತ್ಮತೃಪ್ತಿಯಿಂದ ಬದುಕುವುದೇ ನಿಜವಾದ ಯಶಸ್ಸು ಎಂದು ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು.

ನಗರದ ವಾಣಿಜ್ಯ ಭವನದ ಬನಪ್ಪ ಸಂಕಪ್ಪ ಸಂಕಣ್ಣವರ ಸಭಾಭವನದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಲಿಂ. ಪಂಚಾಕ್ಷರಯ್ಯ ಎಸ್. ಸಂಶಿಮಠ ಅವರ ಸ್ಮರಣಾರ್ಥ ಆಯೋಜಿಸಿದ್ದ ಸಂಶಿಮಠ ದತ್ತಿ ಉಪನ್ಯಾಸ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಯುವಕರು ಸರ್ಕಾರಿ ಉದ್ಯೋಗವನ್ನೇ ಅಂತಿಮ ಗುರಿಯಾಗಿಸಿಕೊಳ್ಳದೆ, ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗದತ್ತ ಮುಖ ಮಾಡಬೇಕು. ಸರ್ಕಾರ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ಹೀಗಾಗಿ ಸ್ವಾವಲಂಬನೆ, ಧೈರ್ಯ ಹಾಗೂ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯೋದ್ಯಮ ಸಂಸ್ಥೆಗಳು ವ್ಯಾಪಾರಕ್ಕೆ ಮಾತ್ರ ಸೀಮಿತವಾಗದೆ, ಸಮಾಜಮುಖಿ ಚಟುವಟಿಕೆಗಳು, ಪ್ರತಿಭೆಗಳ ಪ್ರೋತ್ಸಾಹ ಹಾಗೂ ಯುವಜನರಿಗೆ ಮಾರ್ಗದರ್ಶನ ನೀಡುವ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು. “ದೇಹಸಂಪತ್ತು, ವಿಚಾರಸಂಪತ್ತು ಮತ್ತು ಚೈತನ್ಯವೇ ವ್ಯಕ್ತಿಯ ನಿಜವಾದ ಸಂಪತ್ತು” ಎಂದು ಶ್ರೀಗಳು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಸಿದ್ರಾಮಯ್ಯ ಸಂಶಿಮಠ, ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವ ಉದ್ದೇಶದಿಂದ ಈ ದತ್ತಿ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ, ಹಿರಿಯರ ಮಾರ್ಗದರ್ಶನ ಯುವಜನರಿಗೆ ಸ್ಫೂರ್ತಿಯಾಗಿದ್ದು, ಉದ್ಯಮ, ಶಿಕ್ಷಣ, ಕ್ರೀಡೆ ಹಾಗೂ ಸಮಾಜಸೇವೆಯಲ್ಲಿ ಇನ್ನಷ್ಟು ಸಾಧನೆ ಮಾಡಲು ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳು, ಸೈಕ್ಲಿಸ್ಟ್‌ಗಳು, ತರಬೇತುದಾರರು, ಚಾರ್ಟರ್ಡ್ ಅಕೌಂಟೆಂಟ್‌ಗಳು, ರಕ್ತದಾನ, ಶಿಕ್ಷಣ, ವಿಶೇಷಚೇತನರ ಸೇವೆ, ಆರೋಗ್ಯ ಜಾಗೃತಿ, ರೋಟರಿ ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸಮಾಜಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನಿತರ ಪರವಾಗಿ ಶ್ರೀಧರ ಧರ್ಮಾಯತ, ಪ್ರವೀಣ ವಾರಕರ, ರಮೇಶ ಶಿಗ್ಲಿ, ಸರೋಜಾ ಕುಲಕರ್ಣಿ, ಮಾಲತಿ ಇನಾಮತಿ, ಪೂಜಾ ಗುಗ್ಗರಿ ಹಾಗೂ ಕವಿತಾ ದಂಡಿನ ಮಾತನಾಡಿದರು.

ಚನ್ನವೀರಪ್ಪ ಹುಣಸಿಕಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈಶಣ್ಣ ಮುನವಳ್ಳಿ, ವಿ.ಕೆ. ಗುರುಮಠ, ವಿಜಯಕುಮಾರ ಮಾಟಲದಿಣ್ಣಿ, ದತ್ತು ಬೇವಿನಕಟ್ಟಿ ಹಾಗೂ ರಾಘವೇಂದ್ರ ಕಾಲವಾಡ ಪರಿಚಯಿಸಿದರು. ದಾನಯ್ಯ ಗಣಾಚಾರಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜಯದೇವ ಮೆಣಸಗಿ, ಪ್ರಕಾಶ ಉಗಲಾಟದ, ಸಿದ್ರಾಮಪ್ಪ ಉಮಚಗಿ, ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಅರವಿಂದ ಕಾಮತ, ಚಂದ್ರು ಬಾಳಿಹಳ್ಳಿಮಠ ಸೇರಿದಂತೆ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ಕ್ರೀಡಾಪಟುಗಳು, ಸಮಾಜಸೇವಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

“ಜೀವನದ ನಿಜವಾದ ಸಂಪತ್ತು ಹುದ್ದೆ ಅಥವಾ ಹಣವಲ್ಲ; ಆತ್ಮತೃಪ್ತಿ, ಸಮಾಜಸೇವೆ ಮತ್ತು ಚೈತನ್ಯವೇ ಮನುಷ್ಯನ ಶ್ರೇಷ್ಠ ಆಸ್ತಿ.”

— ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ

‘ಕುಡುಕ ನನ್ಮಕ್ಳು’ ಮೊದಲ ಹಂತದ ಚಿತ್ರೀಕರಣ ಪೂರ್ಣ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕಲಾಭೂಮಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಕುಡುಕ ನನ್ಮಕ್ಳು’ ಚಿತ್ರದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.

‘ತುಂಬಾ ಒಳ್ಳೆಯವರು’ ಎಂಬ ಅಡಿ ಬರಹ ಹೊಂದಿರುವ ಚಿತ್ರದ ಚಿತ್ರೀಕರಣವು ಬೆಂಗಳೂರು ನಗರ ಹಾಗೂ ಹೊರವಲಯಗಳಲ್ಲಿ ಸುಮಾರು 20 ದಿನಗಳ ಕಾಲ ನಡೆದಿದ್ದು, ಕಾಮಿಡಿ ಕಿಲಾಡಿಗಳಾದ ಚಂದ್ರಪ್ರಭ, ವಿನೋದ್ ಗೊಬ್ರಗಾಲ, ಮಿಮಿಕ್ರಿ ಗೋಪಿ, ಸಚಿನ್ ಪುರೋಹಿತ್, ಚೈತ್ರಾ ಕೊಟ್ಟೂರು ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ನಟಿಸಿದ್ದಾರೆ.

ಚಿತ್ರಕ್ಕೆ ಆಸ್ಕರ್ ಕೃಷ್ಣ ನಿರ್ದೇಶನವಿದ್ದು, ಮಂಜು ಕವಿ ಸಾಹಿತ್ಯ ಮತ್ತು ಸಂಗೀತ ನೀಡಿದ್ದಾರೆ. ವಿನಯ್ ಗೌಡ ಛಾಯಾಗ್ರಹಣ, ಅಯ್ಯೂರ್ ಸಂಕಲನ, ವೆಂಕಟ್ ಸಂಭಾಷಣೆ ಬರೆದಿದ್ದಾರೆ. ಚಂದ್ರಶೇಖರ ಪಿಆರ್‌ಒ ಆಗಿದ್ದು, ಡಾ. ಪ್ರಭು ಗಂಜಿಹಾಳ ಹಾಗೂ ಡಾ. ವೀರೇಶ ಹಂಡಿಗಿ ಸಹಯೋಗ ನೀಡಿದ್ದಾರೆ.

ಅರುಣ ಎಲ್. ಶೆಟ್ಟಿ, ವೈಶಾಲಿ ಮುರಳೀಧರ್, ಪಲ್ಲವಿ ಅಗ್ನಿಹೋತ್ರಿ, ಬಾಬು ಎಸ್.ಎಚ್. (ತುಮಕೂರು), ರವಿ ನಾಯಕ್, ನಿಂಗರಾಜು ಬಿ., ಲೋಕೇಶ್ ಕೆ.ಎಸ್. ಹಾಗೂ ಸಿದ್ದಲಿಂಗಯ್ಯ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

25, 30, 35 ಮತ್ತು 40 ವರ್ಷದ ನಾಲ್ವರು ವ್ಯಕ್ತಿಗಳ ಬದುಕಿನ ಸುತ್ತ ಸಾಗುವ ಈ ಚಿತ್ರವು, ಮದ್ಯಪಾನದ ದುಷ್ಪರಿಣಾಮಗಳು ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಹಾಸ್ಯದ ಮೂಲಕ ಮನಮುಟ್ಟುವ ರೀತಿಯಲ್ಲಿ ಚಿತ್ರಿಸುತ್ತದೆ ಎಂದು ನಿರ್ದೇಶಕ ಆಸ್ಕರ್ ಕೃಷ್ಣ ತಿಳಿಸಿದ್ದಾರೆ.

ಚಿತ್ರವನ್ನು ದಸರಾ ಅಥವಾ ದೀಪಾವಳಿ ವೇಳೆಗೆ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.