Home Blog Page 535

ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಪಾರು!

0

ಲಕ್ನೋ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಕೌಶಂಬಿ ಜಿಲ್ಲೆಯತ್ತ ಪ್ರಯಾಣಿಸುತ್ತಿದ್ದರು. ಲಕ್ನೋದಲ್ಲಿರುವ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಟೇಕ್ ಆಫ್ ಆಗಿತ್ತು. ಸ್ವಲ್ಪ ಸಮಯದ ಬಳಿಕ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೊಗೆ ಕಾಣಿಸಿಕೊಂಡಿದೆ.

ಇದರಿಂದಾಗಿ ಪೈಲಟ್ ತಕ್ಷಣವೇ ಹೆಲಿಕಾಪ್ಟರ್ ಅನ್ನು ಲಕ್ನೋದಲ್ಲೇ ತುರ್ತು ಲ್ಯಾಂಡಿಂಗ್ ಮಾಡಿಸಿದ್ದಾರೆ.

ಕೌಶಂಬಿಯಲ್ಲಿ ನಡೆಯಲಿದ್ದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಡಿಸಿಎಂ ತೆರಳುತ್ತಿದ್ದರು. ಈ ವೇಳೆ ಅವರೊಂದಿಗೆ ಸಹಾಯಕ ವಿವೇಕ್ ಹಾಗೂ ಇಬ್ಬರು ಪೈಲಟ್‌ಗಳು ಸೇರಿ ಒಟ್ಟು ಐದು ಮಂದಿ ಹೆಲಿಕಾಪ್ಟರ್‌ನಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಘಟನೆ ಬಳಿಕ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಸುರಕ್ಷಿತರಾಗಿದ್ದು, ನಂತರ ಮತ್ತೊಂದು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಪ್ರಯಾಣ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್‌ನಲ್ಲಿ ಹೊಗೆ ಕಾಣಿಸಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ತಜ್ಞರ ತಂಡ ಪರಿಶೀಲನೆ ನಡೆಸುತ್ತಿದೆ.

ನಂದಿನಿ ಬೇಡಿಕೆ ಹೆಚ್ಚಳ: ರೈತರಿಗೆ ಪ್ರೋತ್ಸಾಹ ದರ ಹೆಚ್ಚಿಸಿದ ಚಿಮುಲ್

ಚಿಕ್ಕಬಳ್ಳಾಪುರ: ನಂದಿನಿ ಹಾಲು ಉತ್ಪನ್ನಗಳುಗೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಚಿಮುಲ್) ರೈತರಿಗೆ ಹೆಚ್ಚುವರಿ ದರ ಘೋಷಿಸಿದೆ.

ಪ್ರತಿ ಲೀಟರ್ ಹಾಲಿಗೆ 1.50 ರೂ. ಹೆಚ್ಚುವರಿ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಈ ಯೋಜನೆ ಮೇ ತಿಂಗಳವರೆಗೆ ಜಾರಿಯಲ್ಲಿರುತ್ತದೆ ಎಂದು ಚಿಮುಲ್ ಅಧ್ಯಕ್ಷ ಮಂಜುನಾಥ್ ರೆಡ್ಡಿ ತಿಳಿಸಿದ್ದಾರೆ.

ಈಗಾಗಲೇ ಒಕ್ಕೂಟದಿಂದ 36 ರೂ. 90 ಪೈಸೆ ಹಾಗೂ ಸರ್ಕಾರದ ಸಬ್ಸಿಡಿ ಸೇರಿ ಒಟ್ಟು 41 ರೂ. 90 ಪೈಸೆ ರೈತರಿಗೆ ದೊರೆಯುತ್ತಿದೆ. ಈ ನಿರ್ಧಾರದಿಂದ ಜಿಲ್ಲೆಯ ರೈತ ಸಮುದಾಯಕ್ಕೆ ಹೆಚ್ಚಿನ ನೆರವು ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೈಕಮಾಂಡ್ ಅವಕಾಶ ಕೊಟ್ಟರೆ ಇನ್ನೆರಡು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಹೈಕಮಾಂಡ್ ಅವಕಾಶ ನೀಡಿದರೆ ಇನ್ನೂ ಎರಡು ಬಜೆಟ್ ಮಂಡನೆ ಮಾಡಲು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳಿಗೆ ಪ್ರತಿಕ್ರಿಯೆ ನೀಡಿದರು. ಯಾರೇ ಏನೇ ಹೇಳಿದರೂ ಅದು ತಮ್ಮಿಗೆ ಮುಖ್ಯವಲ್ಲ, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಮುಖ್ಯ ಎಂದು ಹೇಳಿದರು.

ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಮೈಸೂರಿನ ಜನ ಮಾತ್ರವಲ್ಲ, ಇಡೀ ರಾಜ್ಯದ ಜನ ನಾನು ಮುಂದುವರಿಯಬೇಕೆಂದು ಬಯಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳುತ್ತೇನೆ. ಅವಕಾಶ ನೀಡಿದರೆ ಇನ್ನೆರಡು ಬಜೆಟ್ ಮಂಡನೆ ಮಾಡುತ್ತೇನೆ ಎಂದು ಅವರು ಹೇಳಿದರು.

ಈ ವಿಷಯದಲ್ಲಿ ಎಷ್ಟೇ ಪ್ರಶ್ನೆ ಕೇಳಿದರೂ ನನ್ನ ಉತ್ತರ ಒಂದೇ – ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ 15 ಲಕ್ಷ ದೋಚಿದ ಪ್ರಕರಣ: ಐವರು ಆರೋಪಿಗಳ ಬಂಧನ

0

ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಹೇಳಿ 15 ಲಕ್ಷ ರೂಪಾಯಿ ದೋಚಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ಗುರುವಾರ ಸಿನಿಮೀಯ ಶೈಲಿಯಲ್ಲಿ ಈ ದರೋಡೆ ನಡೆದಿತ್ತು.

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ನಂಬಿಸಿ ದುಷ್ಕರ್ಮಿಗಳು ಹಣ ಕಸಿದು ಪರಾರಿಯಾಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ವಿಜಯಪುರ ಪೊಲೀಸರು ತನಿಖೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಗಣೇಶ್ (25), ಸಾಗರ (28), ಮಂಜಪ್ಪ (40), ಷಣ್ಮುಘ (24) ಹಾಗೂ ಷಣ್ಮುಖ (31) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 15 ಲಕ್ಷ ರೂಪಾಯಿ ನಗದು, 4 ಚಿನ್ನದ ನಾಣ್ಯಗಳು, 3 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಕ್ರೇಟಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಬಂಧಿತ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲು ಮನವಿ ಮಾಡಲಾಗಿದೆ. ಈ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸಿದ ವಿಜಯಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅಮೆರಿಕ–ಇರಾನ್ ಯುದ್ಧದ ಪರಿಣಾಮ: ಕಚ್ಚಾ ತೈಲ ದರ ಭಾರೀ ಏರಿಕೆ

0

ಲಂಡನ್: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿದೆ. ಕೋವಿಡ್-19 ಬಳಿಕ ಮೊದಲ ಬಾರಿಗೆ ಒಂದು ಬ್ಯಾರೆಲ್ ತೈಲದ ಬೆಲೆ 90 ಡಾಲರ್ ಗಡಿ ದಾಟಿದೆ.

ಇರಾನ್ ಸೌದಿ ಅರೇಬಿಯಾ ಹಾಗೂ ಕುವೈತ್‌ನಲ್ಲಿರುವ ತೈಲ ಸಂಸ್ಕರಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ತೈಲ ಉತ್ಪಾದನೆ ಕುಸಿತವಾಗಿದೆ. ಇದರ ಪರಿಣಾಮವಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 91.89 ಡಾಲರ್ (ಸುಮಾರು ₹8,440) ತಲುಪಿದೆ.

ಕಳೆದ ಶನಿವಾರ ಯುದ್ಧ ಆರಂಭವಾಗುವ ಮೊದಲು ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 72.50 ಡಾಲರ್ ಇತ್ತು. ಕಳೆದ ಎಂಟು ದಿನಗಳಲ್ಲಿ ಸುಮಾರು 19 ಡಾಲರ್ ಏರಿಕೆಯಾಗಿದೆ.

ಇದೇ ವೇಳೆ ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 90.90 ಡಾಲರ್‌ಗೆ ಏರಿಕೆಯಾಗಿದೆ. ರಷ್ಯಾದ ಉರಲ್ಸ್ ಕಚ್ಚಾ ತೈಲದ ಬೆಲೆ ಕೂಡ ಪ್ರತಿ ಬ್ಯಾರೆಲ್‌ಗೆ 71.97 ಡಾಲರ್ (ಸುಮಾರು ₹6,616) ತಲುಪಿದೆ.

ಫೆಬ್ರವರಿ 27ರಂದು ಉರಲ್ಸ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 57 ಡಾಲರ್ ಇದ್ದು, ಇದೀಗ ಅದರಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.

ಲೈಸೆನ್ಸ್ ನೀಡಲು ಲಂಚ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ!

ಹುಬ್ಬಳ್ಳಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಿಳಾ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ವಲಯ-1 ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹೀನಾ ಕೌಸರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾಳಪ್ಪ ತಳವಾರ್ ಎಂಬವರಿಂದ 3,500 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಣ ಸಮೇತ ಬಂಧಿಸಿದ್ದಾರೆ. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಹೀನಾ ಕೌಸರ್ ಅವರು ಮಾಳಪ್ಪ ಅವರ ಬಳಿ 4,500 ರೂ. ಲಂಚ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇದರಲ್ಲಿ ಮುಂಗಡವಾಗಿ 1,000 ರೂ. ನೀಡಲಾಗಿತ್ತು. ಉಳಿದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಬಜೆಟ್ʼನಲ್ಲಿ ರೈತರು, ಬಡವರ ನಿರ್ಲಕ್ಷ್ಯ: ಬಿಜೆಪಿ ಜಿಲ್ಲಾಧ್ಯಕ್ಷ ಸಂಜಿವ್ ರೆಡ್ಡಿ ಟೀಕೆ

ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರು ಹಾಗೂ ಬಡವರ ಹಿತಾಸಕ್ತಿಗೆ ಸಹಕಾರಿಯಾಗಿಲ್ಲ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಿವ್ ರೆಡ್ಡಿ ಟೀಕಿಸಿದರು.

ಈ ಕುರಿತು ವಿಜಯಸಾಕ್ಷಿ ಪತ್ರಿಕೆಗೆ ಮಾಹಿತಿ ನೀಡಿದ ಅವರು, ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ಪ್ರೋತ್ಸಾಹ ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವಂತಹ ಸ್ಪಷ್ಟ ಯೋಜನೆಗಳು ಬಜೆಟ್‌ನಲ್ಲಿ ಕಾಣುತ್ತಿಲ್ಲ ಎಂದು ಹೇಳಿದರು.

ಬಡವರು ಹಾಗೂ ಸಾಮಾನ್ಯ ಜನರಿಗೆ ಉಪಯೋಗವಾಗುವ ಯೋಜನೆಗಳು ಕಡಿಮೆಯಾಗಿರುವುದು ನಿರಾಶೆ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸರ್ಕಾರ ರೈತರು ಮತ್ತು ಬಡವರ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಿ, ಅವರ ಹಿತಾಸಕ್ತಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.

ಸಿದ್ದರಾಮಯ್ಯ ಬಜೆಟ್ ನಿರಾಶೆ ತಂದಿದೆ: ಶಾಸಕ ಕೆ. ನೇಮಿರಾಜ ನಾಯ್ಕ ಟೀಕೆ

ಹಗರಿಬೊಮ್ಮನಹಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್ ಕುರಿತು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ನೇಮಿರಾಜ ನಾಯ್ಕ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಜಯಸಾಕ್ಷಿ ಜೊತೆಗೆ ಮಾತನಾಡಿದ ಅವರು, ಕಾರ್ಮಿಕರು ಹಾಗೂ ಗ್ರಾಮೀಣ ಜನತೆಗೆ ಪ್ರಯೋಜನವಾಗುವಂತಹ ಯಾವುದೇ ಪ್ರಮುಖ ಯೋಜನೆಗಳನ್ನು ಬಜೆಟ್‌ನಲ್ಲಿ ಸಮರ್ಪಕವಾಗಿ ನೀಡಿಲ್ಲ ಎಂದು ಆರೋಪಿಸಿದರು.

ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕೃಷಿ ಅಭಿವೃದ್ಧಿ, ನೀರಾವರಿ ಯೋಜನೆಗಳ ಅನುಷ್ಠಾನ, 17 ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕಾಗಿತ್ತು. ಆದರೆ ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಬಜೆಟ್ ಮಂಡಿಸಿಲ್ಲ ಎಂದು ಅವರು ಹೇಳಿದರು.

ಇದಲ್ಲದೆ ರೈತರ ಸಾಲದ ಸಮಸ್ಯೆ ಪರಿಹಾರ ಹಾಗೂ ಗ್ರಾಮೀಣ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಸ್ಪಷ್ಟ ಯೋಜನೆಗಳನ್ನು ಘೋಷಿಸಬೇಕಾಗಿತ್ತು. ಜನಪರ ಬಜೆಟ್ ಮಂಡಿಸಬೇಕಿದ್ದ ಕಾಂಗ್ರೆಸ್ ಸರ್ಕಾರ ಈ ವಿಷಯದಲ್ಲಿ ವಿಫಲವಾಗಿದೆ ಎಂದು ಶಾಸಕ ಕೆ. ನೇಮಿರಾಜ ನಾಯ್ಕ ಟೀಕಿಸಿದರು.

India vs New Zealand: ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?

0

ಅಹಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದ ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿರಲಿದೆ ಎಂದು ವರದಿಯಾಗಿದೆ.

ಈ ಪಿಚ್ ಕಪ್ಪು ಹಾಗೂ ಕೆಂಪು ಮಣ್ಣಿನ ಮಿಶ್ರಣದಿಂದ ನಿರ್ಮಿತವಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ಉತ್ತಮ ನೆರವು ನೀಡಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಿಚ್‌ನಂತೆ ಉತ್ತಮ ಬೌನ್ಸ್ ಹೊಂದಿದ್ದು, ಆರಂಭದಲ್ಲಿ ಸೀಮರ್‌ಗಳಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಈ ಪಿಚ್‌ನಲ್ಲಿ 200 ರನ್‌ಗಳಿಗೂ ಹೆಚ್ಚು ಸ್ಕೋರ್ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ಈ ಪಿಚ್‌ನಲ್ಲಿ ಕೇವಲ ಒಂದು ಪಂದ್ಯ ಮಾತ್ರ ನಡೆದಿದ್ದು, ಫೆಬ್ರವರಿ 9ರಂದು ಕೆನಡಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಇದೇ ಪಿಚ್‌ನಲ್ಲಿ ನಡೆದಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 4 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಕೆನಡಾ 8 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತ್ತು.

ಇಲ್ಲಿಯವರೆಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು, ಮೂರು ಪಂದ್ಯಗಳನ್ನೂ ನ್ಯೂಜಿಲೆಂಡ್ ಗೆದ್ದಿದೆ. 2007ರಲ್ಲಿ ನ್ಯೂಜಿಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2016ರಲ್ಲಿ 47 ರನ್‌ಗಳಿಂದ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ಭಾರತ ಕೇವಲ 79 ರನ್‌ಗೆ ಆಲೌಟ್ ಆಗಿತ್ತು. 2021ರ ಪಂದ್ಯದಲ್ಲಿಯೂ ನ್ಯೂಜಿಲೆಂಡ್ 8 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು.

ಅಮೆರಿಕ–ಇರಾನ್ ಯುದ್ಧಕ್ಕೆ 8ನೇ ದಿನ: ಶಸ್ತ್ರಾಸ್ತ್ರ ಉತ್ಪಾದನೆ 4 ಪಟ್ಟು ಹೆಚ್ಚಿಸಲು ಟ್ರಂಪ್ ಆದೇಶ!

0

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಸಂಘರ್ಷದ ನಡುವೆಯೇ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳ ಉತ್ಪಾದನೆಯನ್ನು ನಾಲ್ಕು ಪಟ್ಟು ಹೆಚ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಕ್ಷಣಾ ಕಂಪನಿಗಳಿಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಶುಕ್ರವಾರ ಟ್ರಂಪ್ ದೇಶದ ಪ್ರಮುಖ ರಕ್ಷಣಾ ಉತ್ಪಾದನಾ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಶಸ್ತ್ರಾಸ್ತ್ರ ಉತ್ಪಾದನೆಯನ್ನು ಹೆಚ್ಚಿಸಲು ಕಂಪನಿಗಳಿಗೆ ನಿರ್ದೇಶನ ನೀಡಲಾಗಿದ್ದು, ಕಂಪನಿಗಳು ಈ ಸೂಚನೆಗೆ ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ.

ಇದೇ ವೇಳೆ ಹಲವು ಹೊಸ ಉತ್ಪಾದನಾ ಘಟಕಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಅಮೆರಿಕ ಪ್ರಸ್ತುತ ಉನ್ನತ ಮತ್ತು ಮಧ್ಯಮ ದರ್ಜೆಯ ಯುದ್ಧ ಸಾಮಗ್ರಿಗಳನ್ನು ತಯಾರಿಸುತ್ತಿದ್ದು, ಇವುಗಳನ್ನು ಇರಾನ್ ಮತ್ತು ವೆನೆಜುವೆಲಾದಲ್ಲಿ ನಡೆದ ಇತ್ತೀಚಿನ ಕಾರ್ಯಾಚರಣೆಗಳಲ್ಲಿ ಬಳಸಲಾಗಿದೆ.

ದೀರ್ಘಕಾಲದ ಯುದ್ಧ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಲು ಉತ್ಪಾದನೆ ಹೆಚ್ಚಿಸುವ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಯುದ್ಧ ಇನ್ನಷ್ಟು ಸುಧೀರ್ಘವಾಗುವ ಸಾಧ್ಯತೆ ಇದೆ ಎಂಬ ಆತಂಕ ಜಾಗತಿಕ ಮಟ್ಟದಲ್ಲಿ ವ್ಯಕ್ತವಾಗುತ್ತಿದೆ.

ಇದೀಗ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್ ಸೌದಿ ಅರೇಬಿಯಾದ ಕಚ್ಚಾತೈಲ ನಿಕ್ಷೇಪಗಳನ್ನು ಗುರಿಯಾಗಿಸಿಕೊಂಡಿದೆ. ಶೈಬಾ ತೈಲ ನಿಕ್ಷೇಪದ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯನ್ನು ಸೌದಿ ಅರೇಬಿಯಾ ವಿಫಲಗೊಳಿಸಿದೆ. ಜೊತೆಗೆ ಇರಾಕ್‌ನ ದಕ್ಷಿಣ ಬಸ್ರಾ ಪ್ರಾಂತ್ಯದಲ್ಲಿರುವ ತೈಲ ನಿಕ್ಷೇಪಗಳ ಮೇಲೂ ದಾಳಿ ನಡೆದಿರುವುದಾಗಿ ವರದಿಯಾಗಿದೆ.

ಡ್ರೋನ್ ದಾಳಿಗಳ ಸಮಸ್ಯೆಯನ್ನು ಎದುರಿಸುತ್ತಿರುವ ಅಮೆರಿಕ, ಅವುಗಳನ್ನು ತಡೆಯಲು ಸುಧಾರಿತ ಡ್ರೋನ್ ವಿರೋಧಿ ರಕ್ಷಣಾ ವ್ಯವಸ್ಥೆಗಾಗಿ ಯುಕ್ರೇನ್ ಸಹಾಯವನ್ನು ಕೇಳಿದೆ. ಮಧ್ಯಪ್ರಾಚ್ಯದಲ್ಲಿ ರಷ್ಯಾ ಡ್ರೋನ್ ದಾಳಿಗಳನ್ನು ಯುಕ್ರೇನ್ ಯಶಸ್ವಿಯಾಗಿ ತಡೆದ ಅನುಭವ ಹೊಂದಿರುವ ಹಿನ್ನೆಲೆ ಅಮೆರಿಕ ಈ ಕ್ರಮ ಕೈಗೊಂಡಿದೆ.