Home Blog Page 59

ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ: ಕಾಫಿ ತೋಟಕ್ಕೆ ತೆರಳಿದ್ದ ವ್ಯಕ್ತಿ ಸಾವು

0

ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮತ್ತೊಂದು ಜೀವ ಬಲಿ ಪಡೆದಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿ ಪ್ರದೇಶದಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಗಣಪತಿ (49) ಎಂಬ ಬೆಳೆಗಾರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಡಹಗಲೇ ಕಾಡಾನೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಮತ್ತಷ್ಟು ಭೀತಿ ಹುಟ್ಟಿಸಿದೆ.

ಇತ್ತೀಚೆಗೆ ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಕಾಡಾನೆ ದಾಳಿಗೆ ಬಲಿಯಾಗಿದ್ದರೆ, ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಲಜಾಕ್ಷಿ ಕೂಡ ಮೃತಪಟ್ಟಿದ್ದರು.

ಸತತವಾಗಿ ನಡೆಯುತ್ತಿರುವ ಈ ದಾಳಿಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಡಾನೆಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮನೆಮುಂದೆ ನಿಲ್ಲಿಸಿದ್ದ ಗ್ಯಾಸ್ ಸರಬರಾಜು ವಾಹನದಿಂದ ಸಿಲಿಂಡರ್ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

0

ರಾಮನಗರ: ಜಿಲ್ಲೆಯ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆಮುಂದೆ ನಿಲ್ಲಿಸಿದ್ದ ಗ್ಯಾಸ್ ಸರಬರಾಜು ವಾಹನದಿಂದ ಸಿಲಿಂಡರ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹೇಶ್ ನಾಯಕ್ (19) ಮತ್ತು ಗೋವಿಂದರಾಜು (20) ಎಂದು ಗುರುತಿಸಲಾಗಿದೆ. ಆರೋಪಿಗಳು ಗ್ಯಾಸ್ ಸರಬರಾಜು ವಾಹನದಿಂದ 8 ಸಿಲಿಂಡರ್ ಕದ್ದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು.

ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತರಿಂದ 8 ಗ್ಯಾಸ್ ಸಿಲಿಂಡರ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಗೋಕರ್ಣ ಬೀಚ್‌ನಲ್ಲಿ ಗಾಂಜಾ ಸೇವನೆ: ಬೆಂಗಳೂರು ಮೂಲದ ಇಬ್ಬರು ಐಟಿ ಉದ್ಯೋಗಿಗಳ ಬಂಧನ

ಕಾರವಾರ: ಗಾಂಜಾ ಸೇವಿಸಿ ಗೋಕರ್ಣ ಕಡಲ ತೀರದಲ್ಲಿ ಅಮಲಿನಲ್ಲಿ ಅಲೆದಾಡುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಐಟಿ ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಎಂ.ಎಸ್. ಪವನ್ (28) ಮತ್ತು ರಾಘು ಸೆಲ್ವರಂಗನ್ (30) ಎಂದು ಗುರುತಿಸಲಾಗಿದೆ. ಗೋಕರ್ಣದ ರುದ್ರಪಾದದ ಕರಿಯಪ್ಪನ ಕಟ್ಟೆ ಬಳಿ ಇರುವ ಬ್ಲೂ ಪೀನ್ ಬೀಚ್ ಸ್ಟೇಟ್ ರೆಸಾರ್ಟ್ ಎದುರಿನ ಸಮುದ್ರ ತೀರದಲ್ಲಿ ಇಬ್ಬರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನಂತರ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರು ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿದ ಖದೀಮರು

ಚಾಮರಾಜನಗರ: ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನ ಪ್ರಕರಣಗಳು ದಿನೇ ದಿನೇ ಮತ್ತೆ ಹೆಚ್ಚಾಗಿವೆ. ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿರುವ ಬಸವೇಶ್ವರ ಹಾಗೂ ಮಾರಮ್ಮ ದೇವಸ್ಥಾನಗಳ ಬಾಗಿಲುಗಳನ್ನು ಮುರಿದು ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.

ತಡರಾತ್ರಿ ನಡೆದ ಈ ಕಳ್ಳತನದಲ್ಲಿ ಸುಮಾರು 4 ಕೆ.ಜಿ ಬೆಳ್ಳಿ ಹಾಗೂ 30 ಗ್ರಾಂ ಚಿನ್ನಾಭರಣ ಕಳ್ಳರ ಕೈಗೆ ಸಿಕ್ಕಿದ್ದು, ಬಳಿಕ ಅವರು ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ಮೊದಲು ಸಿಸಿಟಿವಿ ಕ್ಯಾಮೆರಾದ ಹಾರ್ಡಿಸ್ಕ್ ತೆಗೆದುಕೊಂಡು ಹೋಗಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ಆರು ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಘಟನೆ ಇನ್ನೂ ಮಾಸುವ ಮುನ್ನವೇ ಮತ್ತೆ ಕಳ್ಳರು ಕೈಚಳಕ ತೋರಿಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇದೀಗ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಡಾಗ್ ಸ್ಕ್ವಾಡ್ ಹಾಗೂ ಬೆರಳಚ್ಚು ತಜ್ಞರ ಸಹಾಯದಿಂದ ಪರಿಶೀಲನೆ ಮುಂದುವರಿದಿದೆ.

ಶೀಘ್ರದಲ್ಲೇ ರಾಜ್ಯದಲ್ಲಿ 56 ಸಾವಿರ ಖಾಲಿ ಹುದ್ದೆಗಳ ಭರ್ತಿ: ಸಚಿವ ಬೋಸರಾಜು

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸುಮಾರು 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವ ಬೋಸರಾಜು ತಿಳಿಸಿದ್ದಾರೆ.

ವಿಧಾನಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಈ ಕುರಿತು ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಸುಮಾರು 2.84 ಲಕ್ಷ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿಲ್ಲ. ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಒಳಮೀಸಲಾತಿ ಹಾಗೂ ಕೋರ್ಟ್ ವಿಚಾರಗಳನ್ನು ನೆಪವನ್ನಾಗಿ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ವಿಳಂಬಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ ಸಚಿವ ಬೋಸರಾಜು, ಒಟ್ಟು 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿಯೇ ನಿರ್ಧಾರವಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದರು.

371ಜೆ ನಿಯಮದ ಪ್ರಕಾರವೂ ನೇಮಕಾತಿ ನಡೆಯಲಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗಿದೆ. ಅಗತ್ಯವಿದ್ದರೆ ಈ ತಿಂಗಳಲ್ಲೇ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಷ್ಟ್ರಧ್ವಜ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

0

ಟೀಮ್ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿನ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ರಾಷ್ಟ್ರಧ್ವಜವನ್ನು ಬಳಸಿದ ರೀತಿಯೇ ವಿವಾದಕ್ಕೆ ಕಾರಣವಾಗಿದೆ.

ಮಾರ್ಚ್ 8ರಂದು ಟಿ20 ವಿಶ್ವಕಪ್ ಫೈನಲ್‌ ನಲ್ಲಿ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ ಗೆಲುವು ದಾಖಲಿಸಿತ್ತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ಪಾಂಡ್ಯ ರಾಷ್ಟ್ರಧ್ವಜವನ್ನು ಮೈಮೇಲೆ ಸುತ್ತಿಕೊಂಡು ಮೈದಾನದಲ್ಲಿ ಮಲಗಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಈ ಹಿನ್ನೆಲೆಯಲ್ಲಿ ಪುಣೆಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವುದಾಗಿ ವಕೀಲ ವಾಜಿದ್ ಖಾನ್ ತಿಳಿಸಿದ್ದಾರೆ. ಸಂಭ್ರಮಾಚರಣೆಯ ವೇಳೆ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆ ಪೋಡಿಯಂ ಮೇಲೆ ಮಲಗಿದ್ದಾಗಲೂ ರಾಷ್ಟ್ರಧ್ವಜವನ್ನು ಮೈಮೇಲೆ ಧರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ (1971) ಪ್ರಕಾರ ರಾಷ್ಟ್ರಧ್ವಜವನ್ನು ವಸ್ತ್ರದಂತೆ ಬಳಸಬಾರದು ಹಾಗೂ ಅದು ನೆಲಕ್ಕೆ ತಾಗಬಾರದು ಎಂಬ ನಿಯಮವಿದೆ. ಪಾಂಡ್ಯ ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸದ್ಯ ಪುಣೆ ಪೊಲೀಸರು ದೂರನ್ನು ಸ್ವೀಕರಿಸಿದ್ದು, ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ. ಆರೋಪ ಸಾಬೀತಾದಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯಡಿ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸುವ ಅವಕಾಶವಿದೆ.

 

ನೀರಿನ ಸಂಪ್ʼಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು..!

ನೆಲಮಂಗಲ: ನೀರಿನ ಸಂಪಿಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಮೃತ ಮಗುವನ್ನು ಬ್ಯಾಡರಹಳ್ಳಿಯ ಅಣ್ಣಯ್ಯ ಮತ್ತು ಋತು ದಂಪತಿಯ ಮಗ ಚಿರಾಗ್ ಎಂದು ಗುರುತಿಸಲಾಗಿದೆ.

ದಂಪತಿ ಸಂಬಂಧಿಕರ ಮದುವೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ಕಾರ್ ತೊಳೆಯಲು ಅಣ್ಣಯ್ಯ ನೀರಿನ ಸಂಪಿನ ಮುಚ್ಚಳ ತೆರೆದು ಮನೆಯೊಳಗೆ ಹೋಗಿದ್ದರು. ಈ ಸಮಯದಲ್ಲಿ ಹೊರಗೆ ಆಟವಾಡುತ್ತಿದ್ದ ಚಿರಾಗ್ ಅಜಾಗರೂಕತೆಯಿಂದ ಸಂಪಿಗೆ ಬಿದ್ದು ಮೃತಪಟ್ಟಿದ್ದಾನೆ.

ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಜೆಟ್ʼನಲ್ಲಿ ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಸಂಬಂಧ ಮಾತನಾಡಿದ ಅವರು, ಈ ಬಜೆಟ್ ಗಮನಿಸಿದರೆ ಈ ಸರಕಾರದ ಆರ್ಥಿಕ- ಬೌದ್ಧಿಕ ದಿವಾಳಿತನವು ಕೂಡ ಪ್ರದರ್ಶನಗೊಂಡಿದೆ. ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ತನ್ನ ರಾಜಕೀಯ ಸಂಧ್ಯಾಕಾಲದಲ್ಲಿರುವ ಈ ಸಂದರ್ಭದಲ್ಲಿ 17ನೇ ಬಜೆಟ್ ಮಂಡಿಸಿದ್ದಾರೆ.

ಅವರಿಗೆ ಒಂದು ಸುವರ್ಣಾವಕಾಶ ಇತ್ತು. ತಮ್ಮ ರಾಜಕೀಯ ಜೀವನದ ಸುದೀರ್ಘ ಅನುಭವದ ಆಧಾರದ ಮೇಲೆ ರಾಜ್ಯದ ಸಂಕಷ್ಟಗಳಿಗೆ ನಾಡಿನ ಜನರ ಅಪೇಕ್ಷೆಗೆ ತಕ್ಕಂತೆ ಉತ್ತರ ಕಂಡುಕೊಳ್ಳುವ ಅವಕಾಶ ಇತ್ತು. ಆದರೆ, ಈ ಬಜೆಟ್ ನೋಡಿದಾಗ ಅಸಹಾಯಕರಾಗಿ ಕೈಚೆಲ್ಲಿದ್ದಾರೆಂಬ ಭಾವನೆ ರಾಜ್ಯದ ಜನರಲ್ಲಿ ಮೂಡಿದೆ ಎಂದು ವಿಶ್ಲೇಷಿಸಿದರು.

ಒಟ್ಟಾರೆಯಾಗಿ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರಕಾರದ ಮೇಲೆ ಆರೋಪ ಮಾಡಿ ಕೈ ತೊಳೆದುಕೊಳ್ಳುವ ಕುತಂತ್ರಕ್ಕೆ ಈ ಬಜೆಟ್ಟನ್ನು ಸೀಮಿತ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಆದಾಯ ಸಂಗ್ರಹದಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಅತಿ ಹೆಚ್ಚು ಸಾಲ ಮಾಡುವ ಮೂಲಕ ಈ ನಾಡಿನ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಎಂದರು.

ಬಂಡೀಪುರ–ನಾಗರಹೊಳೆ ಸಫಾರಿ ಬಂದ್ ನಿರ್ಧಾರ ಸಮರ್ಥಿಸಿದ ಸಚಿವ ಖಂಡ್ರೆ

ಬೆಂಗಳೂರು/ಚಾಮರಾಜನಗರ: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಬಳಿಕ ಷರತ್ತುಬದ್ಧವಾಗಿ ಪುನರಾರಂಭ ಮಾಡಿರುವ ಕ್ರಮವನ್ನು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಧ್ಯಪ್ರವೇಶಿಸಿ, ಸಫಾರಿ ಸ್ಥಗಿತಗೊಳಿಸಿದ್ದರಿಂದ 4 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಸಫಾರಿ ವರ್ಷಗಳಿಂದ ನಡೆಯುತ್ತಿದೆ. ಯಾವುದೇ ಸಮೀಕ್ಷೆ ನಡೆಸದೇ ಏಕಾಏಕಿ ಸಫಾರಿಯನ್ನು ನಿಲ್ಲಿಸಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಖಂಡ್ರೆ, ಸಫಾರಿಯನ್ನು ಏಕಾಏಕಿ ನಿಲ್ಲಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ನವೆಂಬರ್‌ನಲ್ಲಿ 15 ದಿನಗಳ ಅವಧಿಯಲ್ಲಿ ಮೂರು ಅಮೂಲ್ಯ ಜೀವಹಾನಿ ಸಂಭವಿಸಿತ್ತು. ಜೊತೆಗೆ ಒಬ್ಬರು ಶಾಶ್ವತ ಅಂಗವಿಕಲರಾಗಿದ್ದರು. ಈ ನಡುವೆ ಹುಲಿಗಳು ಕಾಡಿನಿಂದ ಹೊರಬಂದು ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಜನರ ಜೀವ ರಕ್ಷಣೆಗಾಗಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು ಎಂದು ಹೇಳಿದರು.

ಚಾಮರಾಜನಗರದಲ್ಲಿ ನಡೆದ ಸಭೆಯಲ್ಲಿ ರೈತ ಸಂಘಟನೆಗಳು ಕೂಡ ಸಫಾರಿ ರಾತ್ರಿ ವೇಳೆಯವರೆಗೆ ನಡೆಯುತ್ತಿರುವುದು, ಹೆಚ್ಚಿನ ವಾಹನ ಸಂಚಾರ ಹಾಗೂ ಪ್ರವಾಸಿಗರ ಒತ್ತಡದಿಂದ ವನ್ಯಜೀವಿಗಳು ಅಶಾಂತಗೊಂಡು ಕಾಡಿನಿಂದ ಹೊರಬರುತ್ತಿವೆ ಎಂದು ಆಕ್ಷೇಪ ವ್ಯಕ್ತಪಡಿಸಿ ಸಫಾರಿ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದವು ಎಂದು ಸಚಿವರು ತಿಳಿಸಿದರು.

ಈ ಮಧ್ಯೆ ಮತ್ತೊಂದು ಹುಲಿ ದಾಳಿ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಸಿಬ್ಬಂದಿ ಹಾಗೂ ವಾಹನಗಳನ್ನು ಕಾಡಿನಂಚಿನ ಗ್ರಾಮಗಳಲ್ಲಿ ನಿಗಾ ವಹಿಸಲು ಬಳಸಲಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ ದಾಳಿ: ಓರ್ವ ಭಾರತೀಯ ಸಿಬ್ಬಂದಿ ಸಾವು!

ಬಾಗ್ದಾದ್: ಇರಾಕ್‌ನ ಬಸ್ರಾ ಸಮೀಪ ಅಮೆರಿಕ ಸ್ವಾಮ್ಯದ ಕಚ್ಚಾ ತೈಲ ಟ್ಯಾಂಕರ್ ಮೇಲೆ ಇರಾನ್ ಸೂಸೈಡ್ ಬೋಟ್ ದಾಳಿ ನಡೆಸಿದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.

ಮಾರ್ಚ್ 11ರಂದು ದಾಳಿಗೊಳಗಾದ “ಸಫೇಸಿಯಾ ವಿಷ್ಣು” ಎಂಬ ಟ್ಯಾಂಕರ್ ಅಮೆರಿಕ ಮೂಲದ ಸಫೇಸಿಯಾ ಟ್ರಾನ್ಸ್ಪೋರ್ಟ್ ಇಂಕ್ ಕಂಪನಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ದಾಳಿಯ ಹೊಣೆಯನ್ನು ಇರಾನ್ ಹೊತ್ತುಕೊಂಡಿದೆ.

ದಾಳಿಯ ಸಂದರ್ಭದಲ್ಲಿ ಹಡಗಿನಲ್ಲಿ ಇದ್ದ ಉಳಿದ 15 ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಬಾಗ್ದಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ರಕ್ಷಿಸಲ್ಪಟ್ಟ ನಾವಿಕರೊಂದಿಗೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾಕ್ ಕರಾವಳಿ ಬಳಿ ನಡೆದ ಈ ದಾಳಿಯಲ್ಲಿ ಎರಡು ತೈಲ ಟ್ಯಾಂಕರ್‌ಗಳನ್ನು ಧ್ವಂಸ ಮಾಡಲಾಗಿದೆ ಎಂದು ಇರಾನ್ ಹೇಳಿಕೊಂಡಿದೆ. ಹಾರ್ಮುಜ್ ಜಲಸಂಧಿಯಲ್ಲಿ ಕನಿಷ್ಠ ಮೂರು ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ.

ಇದಲ್ಲದೆ ಯುಎಇ ಕರಾವಳಿಯಲ್ಲಿ ಒಂದು ಹಡಗಿನ ಮೇಲೆ ದಾಳಿ ನಡೆದಿದ್ದು, ಒಮಾನ್ ಉತ್ತರ ಭಾಗದ ಸಮೀಪ ಮತ್ತೊಂದು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದುಬೈ ವಾಯುವ್ಯ ಭಾಗದಲ್ಲೂ ಮತ್ತೊಂದು ಹಡಗು ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.

ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ದಾಳಿ ನಡೆಸುವುದಾಗಿ ಇರಾನ್ ಈ ಮೊದಲು ಎಚ್ಚರಿಕೆ ನೀಡಿತ್ತು. ಈ ಬೆದರಿಕೆಯ ನಡುವೆಯೂ ಆ ಮಾರ್ಗದಲ್ಲಿ ಸೀಮಿತ ಪ್ರಮಾಣದ ಹಡಗು ಸಂಚಾರ ಮುಂದುವರೆದಿದೆ.

error: Content is protected !!