Home Blog Page 6

ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತಿರುಗೇಟು ನೀಡಿದ ನಟಿ ತ್ರಿಶಾ

ಚೆನ್ನೈ: ತಮಿಳುನಾಡಿನಲ್ಲಿ ಸಿನಿಮಾ ಮತ್ತು ರಾಜಕೀಯ ನಡುವಿನ ಗಡಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ನೀಡಿದ ಹೇಳಿಕೆಗೆ ನಟಿ ತ್ರಿಷಾ ಕೃಷ್ಣನ್ ಕಾನೂನುಬದ್ಧ ಪ್ರತಿಕ್ರಿಯೆ ನೀಡಿದ್ದಾರೆ.

ನಟ ವಿಜಯ್ ಅವರ ರಾಜಕೀಯ ಪ್ರವೇಶವನ್ನು ಟೀಕಿಸುವ ವೇಳೆ ತ್ರಿಷಾ ಹೆಸರನ್ನು ಉಲ್ಲೇಖಿಸಲಾಗಿದ್ದು, ಇದರಿಂದ ಸಿನಿಮಾ ಹಾಗೂ ರಾಜಕೀಯ ವಲಯಗಳಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತ್ರಿಷಾ ಪರ ವಕೀಲರು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ — ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ, ಸದಾ ತಟಸ್ಥ ನಿಲುವನ್ನೇ ಅನುಸರಿಸುತ್ತಾರೆ ಎಂದು ಹೇಳಿದ್ದಾರೆ. ತ್ರಿಷಾ ಅವರನ್ನು ಅವರ ಕಲೆಯ ಮೂಲಕವೇ ಗುರುತಿಸಬೇಕು ಹೊರತು ರಾಜಕೀಯ ಸಂಬಂಧಗಳಿಂದಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾರ್ವಜನಿಕ ಹುದ್ದೆಯಲ್ಲಿರುವವರು ಮಾತನಾಡುವಾಗ ಸಮಚಿತ್ತತೆ ಮತ್ತು ಜವಾಬ್ದಾರಿ ಅಗತ್ಯ ಎಂದು ಹೇಳಿಕೆಯಲ್ಲಿ ಒತ್ತಿಹೇಳಲಾಗಿದೆ. ಸಂಬಂಧಿಸದ ವಿಷಯಗಳಲ್ಲಿ ತಮ್ಮ ಕಕ್ಷಿದಾರರ ಹೆಸರನ್ನು ಬಳಸಬಾರದು ಎಂದು ಕೂಡ ಮನವಿ ಮಾಡಲಾಗಿದೆ.

ನೈನಾರ್ ನಾಗೇಂದ್ರನ್ ನೀಡಿದ ವಿವಾದಾತ್ಮಕ ಹೇಳಿಕೆ ಬಳಿಕ ಈ ವಿಚಾರ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಚರ್ಚೆಯಾಗಿ ಪರಿಣಮಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬಿಗ್ ಶಾಕ್: ಆಯ್ಕೆ ಅಸಿಂಧು ಎಂದ ಹೈಕೋರ್ಟ್

0

ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಈ ತೀರ್ಪು ನೀಡಿದೆ.

ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ದೋಷವಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದರೆಂಬ ಆರೋಪವನ್ನು ಪರಿಗಣಿಸಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಲಾಗಿದೆ. ಆದೇಶವನ್ನು ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೆ ಕಳುಹಿಸಲಾಗಿದೆ.

ಆದರೆ ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರನ್ನು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ. ಮೇಲ್ಮನವಿ ಸಲ್ಲಿಸುವವರೆಗೆ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ಮನವಿ ಸಲ್ಲಿಸಿದ್ದರು.

ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದರು. ಅಂತಿಮವಾಗಿ ಕೋರ್ಟ್ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಲಭಿಸಿದೆ.

ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರೋದು ಸುಬ್ಬಾರೆಡ್ಡಿಗೆ ಉಳಿದ ಪ್ರಮುಖ ಮಾರ್ಗವಾಗಿದೆ. ಮುಂದಿನ ಆರು ತಿಂಗಳೊಳಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡದಿದ್ದರೆ ಬಾಗೇಪಲ್ಲಿ ಕ್ಷೇತ್ರಕ್ಕೆ ಮರುಚುನಾವಣೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಗೋವಾ ರೆಸಾರ್ಟ್ ವಿಚಾರ: ಯಾವುದೂ ಬುಕ್ ಆಗಿಲ್ಲ- ಸಚಿವ ದಿನೇಶ್ ಗುಂಡೂರಾವ್

0

ಬೆಳಗಾವಿ: ಶಾಸಕರಿಗೆ ಗೋವಾದಲ್ಲಿ ರೆಸಾರ್ಟ್ ಬುಕ್ ಮಾಡಲಾಗಿದೆ ಎಂಬ ವಿಚಾರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಬೈಲಹೊಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೂ ಬುಕ್ ಆಗಿಲ್ಲ. ಹಾಲಿಡೇಗೆ ನಮ್ಮ ಶಾಸಕರು ಟೂರ್ ಹೋಗಬಾರದಾ? ಎಲ್ಲರೂ ಸೇರಿಯೂ ಹೋಗಬಹುದು, ಬಿಟ್ಟೂ ಹೋಗಬಹುದು. ಅದೇನು ದೊಡ್ಡ ವಿಷಯವಲ್ಲ ಎಂದು ಹೇಳಿದ್ದಾರೆ.

ಮತ್ತೆ ಶಾಸಕರು ಫಾರಿನ್ ಟೂರ್‌ಗೆ ಸಿದ್ಧರಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಯಾರು ಹೋಗುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ವೈಯಕ್ತಿಕ ಟೂರ್‌ಗೆ ಹೊರಟರೆ ನಾವೇನು ಹೋಗಬೇಡಿ ಅಂತ ಹೇಳುವುದಕ್ಕೆ ಆಗುತ್ತಾ?” ಎಂದು ಮರುಪ್ರಶ್ನಿಸಿದರು.

ಸಿಎಂ ಬದಲಾವಣೆ ಗೊಂದಲಕ್ಕೆ ಹೈಕಮಾಂಡ್ ಏಕೆ ಫುಲ್ ಸ್ಟಾಪ್ ಇಡುತ್ತಿಲ್ಲ ಎಂಬ ಪ್ರಶ್ನೆಗೆ, ಯಾರು ಫುಲ್ ಸ್ಟಾಪ್ ಇಟ್ಟಿದ್ದಾರೆ, ಯಾರೂ ಇಟ್ಟಿಲ್ಲ ಎಂದು ಉತ್ತರಿಸಿದರು. ಇದೇ ವೇಳೆ, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.

ನಿರಂತರ ಸಿಎಂ ಬದಲಾವಣೆ ಕೂಗಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಗೊಂದಲ ಮೂಡುತ್ತಿದೆಯೇ ಎಂಬ ಪ್ರಶ್ನೆಗೆ, ನಮ್ಮಲ್ಲಿ ಯಾವುದೇ ಗೊಂದಲವೂ ಇಲ್ಲ. ಮೊನ್ನೆ ನಡೆದ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೆವು. ಹಾವೇರಿಯಲ್ಲಿ ಸಾವಿರ ದಿನದ ಕಾರ್ಯಕ್ರಮವನ್ನೂ ಒಟ್ಟಾಗಿ ಮಾಡಿದ್ದೇವೆ. ಸರ್ಕಾರದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ, ಭಿನ್ನಮತವೂ ಇಲ್ಲ. ಈ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಸಮರ್ಥಿಸಿಕೊಂಡರು.

ಕಾಡಾನೆ ದಾಳಿಗೆ ಚಿಕ್ಕಮಗಳೂರಿನಲ್ಲಿ ಕಾರ್ಮಿಕನ ಸಾವು

0

ಚಿಕ್ಕಮಗಳೂರು: ಹುಣಸೆಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಯಲ್ಲಪ್ಪ ಕಾಡಾನೆ ದಾಳಿಗೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿರುವಳ್ಳಿ ಗ್ರಾಮದ ಯಲ್ಲಪ್ಪ, ನಾಗೇಶ್ ಗೌಡ ಅವರ ತೋಟದಲ್ಲಿ ಕೆಲಸ ಮಾಡುವ ವೇಳೆ ಕಾಡಾನೆ ದಾಳಿಗೆ ಗುರಿಯಾದರು.

ಬಾಳೆಹೊನ್ನೂರು ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುತ್ತಾಡುತ್ತಿದ್ದ ಕಾಡಾನೆ, ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕನ ಮೇಲೆ ದಾಳಿ ನಡೆಸಿದದ್ದು ಸ್ಥಳೀಯರ ಆತಂಕವನ್ನು ಹೆಚ್ಚಿಸಿದೆ. ಅರಣ್ಯ ಇಲಾಖೆ ಈ ಘಟನೆಯ ಕುರಿತು ತ್ವರಿತ ತನಿಖೆ ನಡೆಸುತ್ತಿದ್ದು, ಕಾಡಾನೆ ಸಂಚಾರವನ್ನು ನಿಯಂತ್ರಿಸಲು ತಕ್ಷಣ ಕ್ರಮಗಳನ್ನು ಕೈಗೊಂಡಿದೆ.

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿಯಿಂದ ಚಾಲನೆ

0

ಕೋಲಾರ: ದೇಶದ ಹಾರ್ಮಿಕ ವೀರ್ಯದಲ್ಲಿ ಮತ್ತೊಂದು ಹೊಸ ಘಟ್ಟ – ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕ ನಾಳೆ (ಫೆ.17) ಅಧಿಕೃತ ಚಾಲನೆ ಪಡೆಯುತ್ತಿದೆ. ವರಚುವಲ್ ಉದ್ಘಾಟನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ಈ ಘಟಕವನ್ನು ಉದ್ಘಾಟಿಸಲಿದ್ದಾರೆ.

ಸ್ಥಳೀಯ ಸನ್ನಿವೇಶದಲ್ಲಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ವೈಯಕ್ತಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭದ್ರತಾ ಕ್ರಮಗಳು ಗಟ್ಟಿಯಾಗಿದ್ದು, ಜಿಲ್ಲಾಧಿಕಾರಿ ಎಂ.ಆರ್. ರವಿ ಹಾಗೂ ಎಸ್‌ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ತಪಾಸಣೆ ಮಾಡಿದರು.

16 ಎಕರೆ ಪ್ರದೇಶದಲ್ಲಿ ನಿರ್ಮಿತ ಘಟಕವು ದೇಶದ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ. ಮೊದಲ ಹಂತದಲ್ಲಿ ವರ್ಷಕ್ಕೆ 10 H125 ಮಾದರಿಯ ಹೆಲಿಕಾಪ್ಟರ್‌ಗಳು ಉತ್ಪಾದನೆಗೆ ಬರುತ್ತವೆ. ಸ್ಥಳೀಯ ಉದ್ಯೋಗ ಅವಕಾಶಗಳು, ಕೋಲಾರ ಕೈಗಾರಿಕಾ ಬೆಳವಣಿಗೆ, ಮತ್ತು ರಾಷ್ಟ್ರಮಟ್ಟದ ಹೆಗ್ಗಳಿಕೆ – ಈ ಎಲ್ಲಾ ಅಂಶಗಳು ಈ ಘಟಕದ ಮಹತ್ವವನ್ನು ಹೆಚ್ಚಿಸುತ್ತಿವೆ.

ಪವಿತ್ರಾ ಗೌಡಗೆ ಮತ್ತೆ ನಿರಾಸೆ: ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

ಬೆಂಗಳೂರು: ಪವಿತ್ರಾ ಗೌಡ ಅವರಿಗೆ ಮತ್ತೆ ಜಾಮೀನು ನಿರಾಕರಣೆ ಎದುರಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಅವರು ಮಗಳ ಪರೀಕ್ಷೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿದ್ದರು.

25 ದಿನಗಳ ಕಾಲ ಜಾಮೀನು ನೀಡುವಂತೆ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಅವರು ಜೈಲಿನಲ್ಲೇ ಉಳಿಯಬೇಕಾಗಿದೆ.

ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಕೂಡ ಭಾಗಿಯಾಗಿದ್ದರೆಂದು ಆರೋಪಿಸಲಾಗಿದೆ. ಆರೋಪಿಯು ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ತನಿಖೆಯಲ್ಲಿ ಹೇಳಲಾಗಿದೆ.
ಇದಕ್ಕೂ ಮುನ್ನ ಜೈಲು ಆಹಾರದಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಮನೆ ಊಟಕ್ಕೆ ಅವಕಾಶ ಕೋರಿದ್ದರೂ ನಂತರ ಅದು ರದ್ದುಗೊಂಡಿತ್ತು.

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

0

ನವದೆಹಲಿ/ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿವಾದ ದೀರ್ಘ ವಿರಾಮದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. 2018ರ ಸೆಪ್ಟೆಂಬರ್‌ನಲ್ಲಿ ನೀಡಿದ್ದ ಮಹಿಳಾ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಭಾರತದ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

9 ನ್ಯಾಯಮೂರ್ತಿಗಳ ಪ್ರತ್ಯೇಕ ಪೀಠವು ಏಪ್ರಿಲ್ 7ರಿಂದ ವಿಚಾರಣೆ ಆರಂಭಿಸಲಿದ್ದು, ಏಪ್ರಿಲ್ 22ರಂದು ಮುಕ್ತಾಯಗೊಳಿಸುವ ಉದ್ದೇಶ ಹೊಂದಿದೆ. ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ನ್ಯಾಯಪೀಠ ಈ ಕುರಿತು ತೀರ್ಮಾನ ಪ್ರಕಟಿಸಿದೆ. 9 ನ್ಯಾಯಾಧೀಶರ ಪೀಠದ ಸಂಯೋಜನೆಯನ್ನು ಸಿಜೆಐ ಆಡಳಿತಾತ್ಮಕ ಆದೇಶದ ಮೂಲಕ ಪ್ರತ್ಯೇಕವಾಗಿ ಪ್ರಕಟಿಸಲಾಗುತ್ತದೆ.

ಮಹಿಳಾ ಪ್ರವೇಶ ತೀರ್ಪನ್ನು ಬೆಂಬಲಿಸುವ ಪಕ್ಷಗಳಿಗೆ ಏಪ್ರಿಲ್ 7ರಿಂದ 9ರವರೆಗೆ ವಾದ ಮಂಡಿಸಲು ಅವಕಾಶ ನೀಡಲಾಗಿದ್ದು, ವಿರೋಧಿಸುವ ಪಕ್ಷಗಳಿಗೆ ಏಪ್ರಿಲ್ 14ರಿಂದ 16ರವರೆಗೆ ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 21ರಂದು ಮರುಪ್ರಶ್ನೆ ಸಲ್ಲಿಕೆಗಳು ನಡೆಯಲಿದ್ದು, ಏಪ್ರಿಲ್ 22ರಂದು ವಿಚಾರಣೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

2018ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಪೀಠ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ವಿರೋಧಾಭಿಪ್ರಾಯ ವ್ಯಕ್ತಪಡಿಸಿದ್ದರು. ನಂತರ ಅಕ್ಟೋಬರ್‌ನಲ್ಲಿ ಕೆಲ ಹಿಂದೂ ಪರ ಸಂಘಟನೆಗಳು ತೀರ್ಪು ವಿರೋಧಿಸಿ ಭಾರೀ ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಮರುಪರಿಶೀಲನೆ ಅರ್ಜಿ ಸಲ್ಲಿಸಲಾಗಿತ್ತು.

ಇದರೊಂದಿಗೆ ದರ್ಗಾ ಅಥವಾ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶ, ಪಾರ್ಸಿ ಅಲ್ಲದವರನ್ನು ವಿವಾಹವಾದ ಮಹಿಳೆಯರ ಅಗ್ನಿ ದೇವಾಲಯ ಪ್ರವೇಶ, ದಾವೂದಿ ಬೊಹ್ರಾ ಸಮುದಾಯದ ಬಹಿಷ್ಕಾರ ಹಾಗೂ ಸ್ತ್ರೀ ಜನನಾಂಗ ಛೇದನ ಪದ್ಧತಿ ಸೇರಿದಂತೆ ಹಲವು ಧಾರ್ಮಿಕ ಆಚರಣೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನೂ ಪಟ್ಟಿ ಮಾಡಲಾಗಿದೆ.

ವಸತಿ ಶಾಲೆಯ ಮೂರನೇ ಮಹಡಿಯಿಂದ ಬಿದ್ದು SSLC ವಿದ್ಯಾರ್ಥಿ ಆತ್ಮಹತ್ಯೆ!

0

ಚಿತ್ರದುರ್ಗ: ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಡಿವಿಎಸ್ ಶಾಲೆಯಲ್ಲಿ ನಡೆದಿದೆ.

ಡಿವಿಎಸ್ ವಸತಿ ಶಾಲೆಯ SSLC ವಿದ್ಯಾರ್ಥಿ ಕೊಟ್ರೇಶ್(16) ಮೃತ ದುರ್ಧೈವಿಯಾಗಿದ್ದು, ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು, ಈವರೆಗೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಕೊಟ್ರೇಶ್ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಭರಮಸಾಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

0

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ‘ವಂದೇ ಮಾತರಂ’ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

‘ವಂದೇ ಮಾತರಂ’ ಹೇಳುವ ಮೂಲಕ ರಾಷ್ಟ್ರಗೀತೆಯನ್ನು ಡೀ-ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಆರ್‌ಎಸ್‌ಎಸ್‌ನ ಗೋಳವಲ್ಕರ್ ಅವರು ರಾಷ್ಟ್ರಗೀತೆಯ ಬಗ್ಗೆ ಅಪಸ್ವರ ಎತ್ತಿದ್ದರು. ಒಂದು ದಿನವೂ ರಾಷ್ಟ್ರಗೀತೆಯನ್ನು ಅವರ ಸಂಘದಲ್ಲಿ ಹಾಡಿಲ್ಲ. ಅದಕ್ಕಾಗಿ ವಂದೇ ಮಾತರಂ ಅನ್ನು ಎಲ್ಲೆಡೆ ಕಡ್ಡಾಯಗೊಳಿಸಲಾಗುತ್ತಿದೆ ಎಂದು  ಹೇಳಿದರು.

“ಮೊದಲು ವಂದೇ ಮಾತರಂ, ನಂತರ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದಂತಾಗಿದೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಧಕ್ಕೆ ತರುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ನಡೆಯುತ್ತಿದ್ದಾರೆ,” ಎಂದು ಹರಿಪ್ರಸಾದ್ ಕಿಡಿಕಾರಿದರು.

‘ವಂದೇ ಮಾತರಂ’ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಹಿನ್ನೆಲೆ ಇದನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

“ವಂದೇ ಮಾತರಂನಲ್ಲಿ ದೇವರ ಹೆಸರೂ ಇದೆ. ಎಲ್ಲಾ ಧರ್ಮದವರು ಇರುವ ದೇಶದಲ್ಲಿ ಇದು ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೋಮು ಭಾವನೆ ಕೆರಳಿಸಲು ಇದನ್ನು ಬಳಸಲಾಗುತ್ತಿದೆ. ಇದು ಚುನಾವಣಾ ಗಿಮಿಕ್ ಮಾತ್ರ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

BREAKING: ಧಾರವಾಡ ಹೈಕೋರ್ಟ್ ಸೇರಿ 3 ಜಿಲ್ಲೆಗಳ ಕೋರ್ಟ್‌ʼಗಳಿಗೆ ಬಾಂಬ್ ಬೆದರಿಕೆ ಇ-ಮೇಲ್!

0

ಧಾರವಾಡ: ಧಾರವಾಡ ಹೈಕೋರ್ಟ್ ಪೀಠಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿರುವ ಘಟನೆ ಆತಂಕ ಮೂಡಿಸಿದೆ. ಇ-ಮೇಲ್ ಮೂಲಕ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ರವಾನೆಯಾಗಿದ್ದು, ತಕ್ಷಣವೇ ವಕೀಲರು ಹಾಗೂ ಸಿಬ್ಬಂದಿ ನ್ಯಾಯಾಲಯ ಆವರಣದಿಂದ ಹೊರಬಂದಿದ್ದಾರೆ. ವಿಷಯ ತಿಳಿದು ಗರಗ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಆರಂಭಿಸಿದ್ದಾರೆ.

ಇದೇ ರೀತಿಯ ಇ-ಮೇಲ್ ಬೆದರಿಕೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಕ್ಕೆ ಸಹ ಬಂದಿದೆ. ಅಪರಿಚಿತ ವ್ಯಕ್ತಿ RDX ಸ್ಫೋಟಿಸುವುದಾಗಿ ಮಧ್ಯಾಹ್ನ 12:30ರ ಸಮಯ ಉಲ್ಲೇಖಿಸಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ.
ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಧೀಶರಿಗೆ ಈ ಇ-ಮೇಲ್ ರವಾನೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಷಯ ತಿಳಿದು ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಿ, ಸಿಬ್ಬಂದಿ ಹೊರಬಂದಿದ್ದಾರೆ. ಶ್ವಾನ ದಳ ಮತ್ತು ಭದ್ರತಾ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಇನ್ನೂ ಮಡಿಕೇರಿ ನ್ಯಾಯಾಲಯ ಕ್ಕೂ ಸಹ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನ್ಯಾಯಾಲಯದ ಅಧಿಕೃತ ಇ-ಮೇಲ್ ಐಡಿಗೆ ಬಂದಿರುವ ಈ ಸಂದೇಶದ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ.

ಬಾಂಬ್ ಪತ್ತೆ ದಳ ಹಾಗೂ ಭದ್ರತಾ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರಿದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದರೂ, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!