Home Blog Page 65

ಬೆಂಗಳೂರು| ಹುಳಿಮಾವು ಸೈಟ್‌ನಲ್ಲಿ ಸ್ಫೋಟಕ ವಸ್ತು ಪತ್ತೆ; ಸ್ಥಳದಲ್ಲಿ ಆತಂಕ!

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಆತಂಕ ವಾತಾವರಣ ಉಂಟಾಗಿದೆ.

ಪರಿಶೀಲನೆ ವೇಳೆ, ಬಂಡೆ ಒಡೆಯಲು ಬಳಸುವ ಜಿಲೆಟಿನ್, ಕೇಪ್‌ಗಳು ಮತ್ತು 13 ಜೆಲ್ ಪ್ಯಾಕೆಟ್‌ಗಳು, 23 ಎಲೆಕ್ಟ್ರಿಕ್ ಡಿವೈಸುಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಒಂದು ಟ್ರ್ಯಾಕ್ಟರ್ ಮತ್ತು ಜೆಸಿಬಿಯೂ ವಶಕ್ಕೆ ತೆಗೆದುಕೊಂಡಿದ್ದಾರೆ. ಪರಿಸ್ಥಿತಿಯಿಂದ ತಿಳಿದುಬಂದಂತೆ, ಸೈಟ್‌ನಲ್ಲಿ ಕಾರ್ಮಿಕರು ಕಳೆದ ಹದಿನೈದು ದಿನಗಳಿಂದ ಡ್ರಿಲ್ ಮಾಡುತ್ತಿದ್ದವರು. ಇಂದು ಒಂದೇ ಸಾರಿ ಬ್ಲಾಸ್ಟ್ ಮಾಡಲು ಯತ್ನಿಸುತ್ತಿದ್ದು, ಅಕ್ಕಪಕ್ಕದ ಮೂರು–ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಸೈಟಿನಲ್ಲಿ ಹಿಂದೆ ಸಣ್ಣ ಪ್ರಮಾಣದ ಬ್ಲಾಸ್ಟ್ ಆಗಿರುವುದಕ್ಕೂ ಮಾಹಿತಿ ಲಭ್ಯವಿದೆ.

ಜಾಗದ ಮಾಲೀಕರು ಯಾರು ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಸ್ಥಳದಲ್ಲಿ ಬಿಬಿಎಂಪಿ ಕೆಲಸ ನಡೆಯುತ್ತಿರುವ ಬಗ್ಗೆ ಶಂಕೆಗಳು ವ್ಯಕ್ತವಾಗಿವೆ. ಈ ಹಿಂದೆ ಎನ್‌ಸಿಐಆರ್‌ ದಾಖಲಿಸಿ ಕಾರ್ಮಿಕರಿಗೆ ವಾರ್ನಿಂಗ್ ನೀಡಲಾಗಿತ್ತು, “ಇನ್ಮುಂದೆ ಮಾಡೊದಿಲ್ಲ” ಎಂದು ಹೇಳಿದರು. ಆದರೆ, ಇಂದು ಅವರು ಜೆಸಿಬಿ ಮತ್ತು ಇಟಾಚಿ ಉಪಕರಣಗಳನ್ನು ಬಳಸಿಕೊಂಡು ಕೆಲಸ ಮುಂದುವರಿಸಿದ್ದನ್ನು ಪೊಲೀಸರು ಕಂಡಿದ್ದಾರೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ಪರಿಶೀಲನೆ ನಡೆಸಿವೆ. ಪೊಲೀಸರು ಬರ್ತಿದ್ದಂತೆ ಕಾರ್ಮಿಕರು ಸ್ಥಳವನ್ನು ತೊರೆದು ಓಡಿದ್ದಾರೆ. ಸದ್ಯ, ಹುಳಿಮಾವು ಪೊಲೀಸರು ಸ್ಥಳವನ್ನು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು, ಸಂಪೂರ್ಣ ತನಿಖೆ ಕೈಗೊಂಡಿದ್ದಾರೆ.

ಗದಗ| ಮನೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು! ಇನ್ನಿಬ್ಬರಿಗೆ ಗಾಯ

0

ಗದಗ :-ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ‌ಮಧ್ಯಾಹ್ನ ನಡೆದಿದೆ.

ಯಲ್ಲಪ್ಪ ಕೆಳಗೇರಿ ಅವರಿಗೆ ಸೇರಿರುವ ಹಳೆಯ ಮನೆಯ ಗೋಡೆಯನ್ನು ಕೆಡುವು ಸಂದರ್ಭದಲ್ಲಿ, ಗೋಡೆ ಏಕಾಏಕಿ ಕಾರ್ಮಿಕರ ಮೇಲೆ ಕುಸಿದಿದೆ. ಇದರಿಂದಾಗಿ ಮಣ್ಣಿನ ಅವಶೇಷದಡಿ ಸಿಲುಕಿದ ಪರಿಣಾಮ ನಾಗಪ್ಪ ದೊಡ್ಡಮನಿ (60) ಮತ್ತು ಶೇಖಪ್ಪ ಪರಸಪ್ಪನವರ್ (55) ಮೃತಪಟ್ಟಿದ್ದಾರೆ. ಗಾಯಗೊಂಡ ಸ್ಥಿತಿಯಲ್ಲಿದ್ದ ಇಬ್ಬರನ್ನೂ ತಕ್ಷಣ ನರಗುಂದ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ವಿರುದ್ಧ ಗಂಭೀರ ಆರೋಪ: ಹುದ್ದೆಯಿಂದ ಅಮಾನತು

0

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಆಡಿಯೋ ಲೀಕ್ ಪ್ರಕರಣದ ಹಿನ್ನೆಲೆಯಲ್ಲಿ ಅವರನ್ನು ಗೌರವಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಲಾಗಿದೆ.

ಜಗನ್ನಾಥ್ ಶೇಗಜಿ ಅವರು ಬೇರೆ ಗುತ್ತಿಗೆದಾರರೊಂದಿಗೆ ಮಾತನಾಡಿರುವ ಆಡಿಯೋ ಒಂದು ಲೀಕ್ ಆಗಿದ್ದು, ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷರಾಗಿರುವುದರಲ್ಲೇ ಸಣ್ಣ ಗುತ್ತಿಗೆದಾರರಿಗೆ ಬಿಡ್ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಆಡಿಯೋದಲ್ಲಿ ಸಣ್ಣ ಗುತ್ತಿಗೆದಾರರಿಂದ ಶೇ.3 ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ಪ್ರಕರಣದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಜಗನ್ನಾಥ್ ಶೇಗಜಿ ಅವರನ್ನು ಗೌರವಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಿದ್ದಾರೆ. ಗೌರವಾಧ್ಯಕ್ಷ ಸ್ಥಾನದಲ್ಲಿದ್ದುಕೊಂಡೇ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಘ ತಿಳಿಸಿದೆ.

ಆದರೆ, ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಜಗನ್ನಾಥ್ ಶೇಗಜಿ ಅವರು, “ಬಿಡ್ ವಿತ್‌ಡ್ರಾ ಮಾಡಲು ನಾನು ಯಾರ ಮೇಲೂ ಒತ್ತಾಯ ಮಾಡಿಲ್ಲ. ಇಂಜಿನಿಯರ್‌ಗಳೇ ಗುತ್ತಿಗೆದಾರರ ನಡುವೆ ಕಾಂಪ್ರೋಮೈಸ್ ಮಾಡಿಸಿದ್ದಾರೆ. ವಿತ್‌ಡ್ರಾ ಮಾಡುವವರಿಗೆ ಶೇ.3 ರಷ್ಟು ಹಣ ನೀಡುವಂತೆ ಸ್ವತಃ ಮುಖ್ಯ ಇಂಜಿನಿಯರ್ ಹೇಳಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಕೆಲವು ಗುತ್ತಿಗೆದಾರರು ನನ್ನ ಬಳಿ ಬಂದು ಶೇ.3 ಬೇಡ, ಶೇ.2.5 ಮಾಡಿ ಎಂದು ಕೇಳಿದ್ದರು. ನೀವು ಕಾಂಪ್ರೋಮೈಸ್ ಮಾಡಿಕೊಂಡಿದ್ದೀರಿ, ಮಾಡಿಕೊಂಡ ಮೇಲೆ ಮಾತಾಡಿದಷ್ಟು ಕೊಡಿ ಎಂದು ಮಾತ್ರ ಹೇಳಿದ್ದೇನೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ” ಎಂದು ಅವರು ತಿಳಿಸಿದ್ದಾರೆ.ಇದಲ್ಲದೆ, “ಟೆಂಡರ್ ಬಾಕ್ಸ್ ಓಪನ್ ಮಾಡಲು ಮಾತ್ರ ನಾನು ಒತ್ತಾಯಿಸಿದ್ದೇನೆ. ನನ್ನ ಮುಖಕ್ಕೆ ಮಸಿ ಬಳಿಯುವ ಉದ್ದೇಶದಿಂದ ಈ ಕುತಂತ್ರ ನಡೆಸಲಾಗಿದೆ. ಹಣ ಕೊಡುವ ಈ ಪದ್ದತಿ ಹಿಂದಿನಿಂದಲೂ ಇದೆ. ಈ ಪದ್ದತಿ ಬಂದ್ ಆಗಬೇಕು ಎಂದು ನಾನು ಹೇಳುತ್ತಿದ್ದೇನೆ” ಎಂದು ಜಗನ್ನಾಥ್ ಶೇಗಜಿ ಹೇಳಿದರು.

ಚಿತ್ರದುರ್ಗ ಜಿಲ್ಲೆಯ 7,880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ

0

ನವದೆಹಲಿ: ಚಿತ್ರದುರ್ಗ ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಎದುರಿಸಿದ ಪ್ರಕೃತಿ ವಿಕೋಪಗಳಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ.

ಲೋಕಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಆರ್.ಎನ್.ಕೆ. ಠಾಕೂರ್ ಅವರು ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2016ರಿಂದ ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು, ಇದುವರೆಗೆ ರಾಜ್ಯದಲ್ಲಿ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಗೆ ಬಿಡುಗಡೆಗೊಂಡಿರುವ 12.40 ಕೋಟಿ ರೂ. ಪರಿಹಾರವು ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತ ಕುಟುಂಬಗಳಿಗೆ ಮಹತ್ವದ ಆರ್ಥಿಕ ನೆರವಾಗಿದ್ದು, ಅವರ ಜೀವನೋಪಾಯಕ್ಕೆ ಹೊಸ ಭರವಸೆಯನ್ನು ನೀಡಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ರೈತರಿಗೆ ಸಂಕಷ್ಟದ ಸಮಯದಲ್ಲಿ ರಕ್ಷಾಕವಚ ಒದಗಿಸಲಾಗುತ್ತಿದ್ದು, ಬೆಳೆ ನಷ್ಟದ ಭಾರವನ್ನು ತಗ್ಗಿಸಲು ಈ ಯೋಜನೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಜೈಲಿನಿಂದ ಬಂದು ಜೆಡಿಯು ಶಾಸಕನಾಗಿ ಅನಂತ್ ಸಿಂಗ್ ಪ್ರಮಾಣ ವಚನ: ಸಿಎಂ ನಿತೀಶ್ ಕುಮಾರ್ ಕಾಲಿಗೆ ಬಿದ್ದು ಆಶೀರ್ವಾದ

0

ಪಾಟ್ನಾ: ಕೋರ್ಟ್ ಅನುಮತಿಯೊಂದಿಗೆ ಜೈಲಿನಿಂದ ಹೊರಬಂದ ಜೆಡಿಯು ಮುಖಂಡ ಮೊಕಾಮಾ ಅನಂತ್ ಸಿಂಗ್ ಅವರು ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅನಂತ್ ಸಿಂಗ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ದುಲಾರ್ಚಂದ್ ಯಾದವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಂತ್ ಸಿಂಗ್ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲು ಮಾತ್ರ ಪಾಟ್ನಾ ಸಿವಿಲ್ ನ್ಯಾಯಾಲಯವು ಅವರಿಗೆ ತಾತ್ಕಾಲಿಕ ಅನುಮತಿ ನೀಡಿತ್ತು. ಜಾಮೀನು ಇನ್ನೂ ಅನುಮೋದನೆಯಾಗದ ಹಿನ್ನೆಲೆಯಲ್ಲಿ, ವಿಧಾನಸಭಾ ಕಲಾಪ ಮುಗಿದ ಕೂಡಲೇ ಅವರು ಮತ್ತೆ ಬೇವೂರ್ ಜೈಲಿಗೆ ಮರಳಬೇಕಾಗಿದೆ.

ಸಾಂವಿಧಾನಿಕ ನಿಯಮಾವಳಿಗಳ ಪ್ರಕಾರ, ಶಾಸಕರೊಬ್ಬರು ಸದನದಲ್ಲಿ ಭಾಗವಹಿಸುವುದನ್ನು 188ನೇ ವಿಧಿ ಕಡ್ಡಾಯಗೊಳಿಸಿದ್ದು, ಪ್ರಮಾಣ ವಚನ ಸ್ವೀಕರಿಸದೇ ಕಾರ್ಯನಿರ್ವಹಿಸುವುದನ್ನು 193ನೇ ವಿಧಿ ನಿಷೇಧಿಸುತ್ತದೆ. ಈ ಹಿನ್ನೆಲೆ, ಸಿಂಗ್ ಅವರಿಗೆ ಸದನದಲ್ಲಿ ಹಾಜರಾಗಲು ಕಾನೂನುಬದ್ಧ ಅವಕಾಶ ನೀಡಲಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅನಂತ್ ಸಿಂಗ್ ಅವರು, “ನಾನು ನಿರಪರಾಧಿ. ನನಗೆ ನ್ಯಾಯ ಸಿಗುತ್ತದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನಸಭೆ ಆವರಣದಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಸಿಬ್ಬಂದಿ, ಸಿಸಿಟಿವಿ ಕಣ್ಗಾವಲು, ತ್ವರಿತ ಪ್ರತಿಕ್ರಿಯೆ ಪಡೆಗಳು ಹಾಗೂ ಬೆಂಗಾವಲು ವಾಹನಗಳನ್ನು ನಿಯೋಜಿಸಲಾಗಿತ್ತು.

ಬೆಂಬಲಿಗರ ಸಭೆಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಎಲ್ಲಾ ಪ್ರವೇಶ ದ್ವಾರಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಯಿತು.  ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಅನಂತ್ ಸಿಂಗ್ ಅವರು ಆರ್ಜೆಡಿಯ ವೀಣಾ ದೇವಿ ಅವರನ್ನು 28,206 ಮತಗಳ ಅಂತರದಿಂದ ಸೋಲಿಸಿ ನಿರ್ಣಾಯಕ ಜಯ ಸಾಧಿಸಿದ್ದರು.

ಪತ್ನಿಯ ಮೇಲೆ ಪತಿ ಕ್ರೌರ್ಯ: ಕುಡಿತದ ಅಮಲಲ್ಲಿ ತಲೆ ಬೋಳಿಸಿ ಅವಮಾನ

0

ಬಾಗಲಕೋಟೆ: ಮಹಿಳೆಯರ ಮೇಲಿನ ಹಿಂಸಾಚಾರ ಮತ್ತೊಮ್ಮೆ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿರುವ ಘಟನೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಮನೆಗೆ ಬಂದ ವ್ಯಕ್ತಿಯೊಬ್ಬ, ತನ್ನ ಪತ್ನಿಯ ನಡತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿ, ಆಕೆಯನ್ನು ಮಾನಸಿಕ ಹಾಗೂ ದೈಹಿಕವಾಗಿ ಹಿಂಸಿಸಿರುವುದು ಬೆಳಕಿಗೆ ಬಂದಿದೆ.

ಉಮೇಶ್ ಕೊಟ್ಟಲಗಿ ಎಂಬಾತನೇ ಈ ಅಮಾನವೀಯ ಕೃತ್ಯ ನಡೆಸಿದ ಆರೋಪಿಯಾಗಿದ್ದು, ಪತ್ನಿಗೆ ಕಬ್ಬು ಕಡಿಯುವ ಕೊಯ್ತಾ ತೋರಿಸಿ ಬೆದರಿಕೆ ಹಾಕಿದ ಬಳಿಕ, ಆಕೆಯ ತಲೆ ಬೋಳಿಸಿ ವಿಕೃತಿ ಮೆರೆದಿದ್ದಾನೆ ಎನ್ನಲಾಗಿದೆ. ಈ ಘಟನೆ ಗ್ರಾಮದಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

ಮಹಿಳೆಯ ದೂರಿನ ಮೇರೆಗೆ ಸಾವಳಗಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮಹಿಳೆಯರ ಗೌರವ ಹಾಗೂ ಭದ್ರತೆಗೆ ಧಕ್ಕೆಯಾಗುವ ಇಂತಹ ಘಟನೆಗಳನ್ನು ಕಠಿಣವಾಗಿ ನಿಗ್ರಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮಂಜೇಶ್ವರದಲ್ಲಿ ಎರಡು ಸಾವು, ಬೀದರ್‌ನಲ್ಲಿ ವಕೀಲನ ಮೇಲೆ ಚಾಕು ದಾಳಿ: ರಾಜ್ಯದ ವಿವಿಧೆಡೆ ಹಿಂಸಾಚಾರ

0

ಮಂಗಳೂರು: ಕೌಟುಂಬಿಕ ಕಲಹ ಮತ್ತು ಕ್ಷುಲ್ಲಕ ಕಾರಣಗಳು ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಭೀಕರ ಹಿಂಸಾಚಾರಕ್ಕೆ ಕಾರಣವಾಗಿರುವ ಘಟನೆಗಳು ವರದಿಯಾಗಿವೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬೀದರ್ ಜಿಲ್ಲೆಯಲ್ಲಿ ವಕೀಲನ ಮೇಲೆ ಚಾಕು ದಾಳಿ ನಡೆದಿದೆ.

ಮಂಜೇಶ್ವರ ತಾಲೂಕಿನ ತೂಮಿನಾಡಿನಲ್ಲಿ ನಡೆದ ಕೌಟುಂಬಿಕ ಕಲಹದಲ್ಲಿ ಜುಮೈಲ (18) ಮತ್ತು ಶೇಕುಂಞ (55) ಮೃತರಾಗಿದ್ದಾರೆ. ಆರೋಪಿ ಉಮರ್ ಫಾರೂಕ್ ಅನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಫಾರೂಕ್ ಹಾಗೂ ಪತ್ನಿ ತಾಹಿರ ನಡುವೆ ಕಲಹ ನಡೆಯುತ್ತಿದ್ದು, ವಿಚ್ಛೇದನದ ಹಂತಕ್ಕೂ ವಿಚಾರ ತಲುಪಿತ್ತು. ಇದೇ ವೇಳೆ ಆಸ್ತಿ ತನ್ನ ಹೆಸರಿಗೆ ಮಾಡಿಕೊಡುವಂತೆ ಫಾರೂಕ್ ಒತ್ತಾಯಿಸಿದ್ದಾನೆ ಎನ್ನಲಾಗಿದೆ.

ಈ ವಿಚಾರವಾಗಿ ಉಮರ್ ಫಾರೂಕ್ ಮತ್ತು ಆತನ ಬಾವ ಶೇಕುಂಞ ನಡುವೆ ಜಗಳ ಆರಂಭವಾಗಿದ್ದು, ಜಗಳ ಬಿಡಿಸಲು ಹೋದ ಜುಮೈಲಗೆ ಕತ್ತಿ ತಗುಲಿ ಆಕೆ ಮೃತಪಟ್ಟಿದ್ದಾಳೆ. ಗಂಭೀರ ಗಾಯಗೊಂಡಿದ್ದ ಶೇಕುಂಞ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಿದೇಶದಿಂದ ಕೆಲ ತಿಂಗಳ ಹಿಂದಷ್ಟೇ ಮರಳಿದ್ದ ಫಾರೂಕ್ ಮಾದಕ ವ್ಯಸನಿಯಾಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಇನ್ನೊಂದು ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ವಕೀಲನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬೆನ್ ಚಿಂಚೊಳ್ಳಿ ನಿವಾಸಿ 26 ವರ್ಷದ ಅನಿಲ್ ಕುಮಾರ್ ಗಾಯಗೊಂಡಿದ್ದು, ಹಂದಿ ಸಾಕಾಣಿಕೆ ವಿಚಾರವಾಗಿ ನಡೆದ ಜಗಳ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.

ಘಟನೆ ಸಂಬಂಧ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಗಾಯಗೊಂಡ ಅನಿಲ್ ಕುಮಾರ್‌ಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್ ಉಚಿತ!

0

ಬೆಂಗಳೂರು: ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನು ಸಹ ಉಚಿತವಾಗಿ ವಿತರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

2026–27ನೇ ಶೈಕ್ಷಣಿಕ ಸಾಲಿನಲ್ಲಿ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಅನುಮೋದನೆ ನೀಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದ ಸುಮಾರು 61 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.

ಈ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ 1ರಿಂದ 12ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕದ ಜೊತೆಗೆ ನೋಟ್‌ಬುಕ್ ವಿತರಣೆ ಮಾಡಲಾಗುತ್ತಿದೆ. ಈ ಹಿಂದೆ 1ರಿಂದ 10ನೇ ತರಗತಿಯವರೆಗೆ ಪಠ್ಯಪುಸ್ತಕ ಮಾತ್ರ ನೀಡಲಾಗುತ್ತಿದ್ದು, ನೋಟ್‌ಬುಕ್‌ಗಳನ್ನು ಪೋಷಕರು ಖರೀದಿಸಬೇಕಾಗಿತ್ತು. ಇದೀಗ 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೂ ಪುಸ್ತಕಗಳನ್ನು ನೀಡಲಾಗುತ್ತಿರುವುದರಿಂದ ಪೋಷಕರ ಆರ್ಥಿಕ ಹೊರೆ ಗಣನೀಯವಾಗಿ ಕಡಿಮೆಯಾಗಲಿದೆ.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಿಸಲು ಶಿಕ್ಷಣ ಇಲಾಖೆ ಸರ್ಕಾರಕ್ಕೆ 30 ಕೋಟಿ 83 ಲಕ್ಷ 25 ಸಾವಿರ ರೂ. ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದು, ಶಾಲಾ ಶಿಕ್ಷಣ ಇಲಾಖೆಗೆ 290.46 ಕೋಟಿ ರೂ. ಅನುದಾನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಪಠ್ಯಪುಸ್ತಕಗಳ ಕಾಗದ ಮತ್ತು ಮುದ್ರಣ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು, ಹೆಚ್ಚುವರಿ ಪುಸ್ತಕಗಳಿಗೆ ಸುಳ್ಳು ಬೇಡಿಕೆ ಸಲ್ಲಿಸಿ ಸರ್ಕಾರದ ಹಣ ದುರುಪಯೋಗ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದಲ್ಲದೆ, ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು, 4ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕಗಳು, ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕಗಳು ಹಾಗೂ 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ವಿತರಿಸಲು ಸೂಚಿಸಲಾಗಿದೆ.

ಕೆಟಿಪಿಪಿ ಕಾಯ್ದೆ–1999ರ ನಿಯಮಗಳಂತೆ ಪಾರದರ್ಶಕ ಟೆಂಡರ್ ಮೂಲಕ ಕರ್ನಾಟಕ ಪುಸ್ತಕ ಸಂಘದ ಮೂಲಕ ಪುಸ್ತಕಗಳನ್ನು ಮುದ್ರಿಸಿ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಒಟ್ಟು 264.62 ಕೋಟಿ ರೂ. ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆಯಡಿ ಪುಸ್ತಕ ವಿತರಣೆಗೆ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದಡಿ ಹೊಸ ಕಾರ್ಯಕ್ರಮಗಳಿಗೆ 25.841 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.

ಶೈಕ್ಷಣಿಕ ವರ್ಷದ ಆರಂಭದಲ್ಲೇ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ತಲುಪುವಂತೆ ಎಸ್‌ಎಟಿಎಸ್ ಮೂಲಕ ಶಾಲೆಗಳಿಂದ ಬೇಡಿಕೆಯ ಮಾಹಿತಿಯನ್ನು ಪಡೆದು ಎಲ್ಲಾ ವಿವರಗಳನ್ನು ದಾಖಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಮೋದಿ–ಟ್ರಂಪ್ ಒಪ್ಪಂದ ಭಾರತ–ಅಮೆರಿಕ ಸಹಕಾರಕ್ಕೆ ಐತಿಹಾಸಿಕ ಮೈಲುಗಲ್ಲು: ಬೊಮ್ಮಾಯಿ

0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನಡುವೆ ನಡೆದ ಒಪ್ಪಂದವು ವಿಶ್ವದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ ಮತ್ತು ದೃಢ ನಾಯಕತ್ವವು ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿಯನ್ನು ಯಶಸ್ವಿಯಾಗಿ ಕಾಪಾಡುತ್ತಿದೆ ಎಂದು ಶ್ಲಾಘಿಸಿದ್ದಾರೆ. ಪ್ರಧಾನಿಯವರ ನಾಯಕತ್ವದ ಸಾಮರ್ಥ್ಯದಿಂದ ಭಾರತಕ್ಕೆ ಅನುಕೂಲಕರವಾದ ಜಾಗತಿಕ ಅವಕಾಶಗಳನ್ನು ಬಳಸಿಕೊಂಡು ದೇಶದ ಅಭಿವೃದ್ಧಿಗೆ ಪೂರಕವಾದ ದಿಕ್ಕಿನಲ್ಲಿ ಮುನ್ನಡೆಯಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಈ ಮಹತ್ವದ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಂಡಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಇದೇ ವೇಳೆ, ಭಾರತ–ಅಮೆರಿಕ ನಡುವಿನ ಈ ಒಪ್ಪಂದವು ದೇಶದ ರೈತರು, ಸಣ್ಣ ಕೈಗಾರಿಕೆಗಳು, ನವೋದ್ಯಮಿಗಳು ಹಾಗೂ ಕೌಶಲ್ಯ ಹೊಂದಿರುವ ಕಾರ್ಮಿಕರಿಗೆ ವಿಶ್ವಮಟ್ಟದಲ್ಲಿ ತಂತ್ರಜ್ಞಾನ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಭಾಗವಹಿಸಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್ ವೇಯಲ್ಲಿ ಬೀದಿ ನಾಯಿಗಳ ಓಡಾಟ, ತಪ್ಪಿದ ಭಾರೀ ಅನಾಹುತ

0

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪದ ಘಟನೆ ಬೆಳಕಿಗೆ ಬಂದಿದೆ. ವಿಮಾನ ನಿಲ್ದಾಣದ ಟರ್ಮಿನಲ್–2ರ ಹೊಸ ರನ್‌ವೇಯಲ್ಲಿ ಎರಡು ಬೀದಿ ನಾಯಿಗಳು ಓಡಾಡಿರುವುದು ಕೆಲಕಾಲ ಆತಂಕಕ್ಕೆ ಕಾರಣವಾಯಿತು.

ರನ್‌ವೇ ಪ್ರದೇಶದಲ್ಲಿ ನಾಯಿಗಳು ಸುತ್ತಾಡುವುದಷ್ಟೇ ಅಲ್ಲದೆ, ನಿಲ್ಲಿಸಿದ್ದ ವಿಮಾನಗಳ ಬಳಿಗೂ ತೆರಳಿರುವುದು ಕಂಡುಬಂದಿದೆ. ಈ ವೇಳೆ ರನ್‌ವೇಯಲ್ಲಿ ವಿಮಾನಗಳ ಸಂಚಾರ ಇರದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.

ಘಟನೆ ಗಮನಿಸಿದ ತಕ್ಷಣವೇ ಎಚ್ಚೆತ್ತ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಹರಸಾಹಸಪಟ್ಟು ಬೀದಿ ನಾಯಿಗಳನ್ನು ಸೆರೆ ಹಿಡಿದರು. ಈ ಘಟನೆಯಿಂದ ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

error: Content is protected !!