Home Blog Page 7

ಸೆ.1ರಂದು ಗದಗಕ್ಕೆ ಮುಖ್ಯಮಂತ್ರಿ ಭೇಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸೆಪ್ಟೆಂಬರ್ 1ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಗದಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮಹತ್ವದ ಅವಲೋಕನ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಮುಖ್ಯಮಂತ್ರಿಗಳು ಸೆ.1ರಂದು ಹುಬ್ಬಳ್ಳಿಯಿಂದ ಗದಗಕ್ಕೆ ಆಗಮಿಸಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಬರಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಿದ್ದು, ನಂತರ ಲಕ್ಷ್ಮೇಶ್ವರಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸದ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಅಗತ್ಯ ಮಾಹಿತಿ ಮತ್ತು ದಾಖಲೆಗಳೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನಿರ್ದೇಶನ ನೀಡಿದರು.

ಬರ ಪರಿಸ್ಥಿತಿ ಅವಲೋಕನ ಸಭೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ಕೃಷಿ, ಬೆಳೆ ಹಾನಿ, ಬರ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂಪೂರ್ಣ ಹಾಗೂ ನಿಖರ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಯಾವುದೇ ಇಲಾಖೆಯ ಮಾಹಿತಿಯಲ್ಲಿ ಲೋಪವಾಗದಂತೆ ಅಧಿಕಾರಿಗಳು ಅಗತ್ಯ ದಾಖಲೆಗಳೊಂದಿಗೆ ಸಜ್ಜಾಗಬೇಕು ಎಂದು ಸೂಚಿಸಿದರು.

ಅಲ್ಲದೆ, ಭಾರತ್ ಜೋಡೋ ಯುವ ಸಂಘಗಳು, ಪ್ರಜಾ ಸೇವೆ ಹಾಗೂ ಪ್ರತಿ ಶನಿವಾರ ನಡೆಯುವ ಜನಸ್ಪಂದನ ಸಭೆಗಳಿಗೆ ಸಂಬಂಧಿಸಿದ ಮಾಹಿತಿಯನ್ನೂ ಸಂಬಂಧಿಸಿದ ಅಧಿಕಾರಿಗಳು ಸಿದ್ಧಪಡಿಸಿಕೊಂಡು ಬರಬೇಕು ಎಂದು ತಿಳಿಸಿದರು.

ಶಿಷ್ಟಾಚಾರ, ಸಂಚಾರ ವ್ಯವಸ್ಥೆಗೆ ಆದ್ಯತೆ

ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಖ್ಯಮಂತ್ರಿಗಳು ಗದಗ ಜಿಲ್ಲೆಯ ಪ್ರವಾಸ ಪೂರ್ಣಗೊಳಿಸಿ ತೆರಳುವವರೆಗೆ ಯಾವುದೇ ರೀತಿಯ ಸಂಚಾರ ವ್ಯತ್ಯಯ ಉಂಟಾಗದಂತೆ ಸಂಬಂಧಿತ ಇಲಾಖೆಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮುಖ್ಯಮಂತ್ರಿಗಳ ಪ್ರವಾಸದ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆಗೆ ಪ್ರಮುಖ ಆದ್ಯತೆ ನೀಡಲಾಗುವುದು. ಸಂಚಾರ ವ್ಯವಸ್ಥೆ ಸುಗಮವಾಗಿರುವಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಅವರು ಮುಖ್ಯಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಎಲ್‌ಆರ್ ಜಿ.ಜೆ. ರುದ್ರಣ್ಣಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ, ಡಿಡಿಪಿಐ ಆರ್.ಎಸ್. ಬುರಡಿ, ಆರ್‌ಟಿಒ ವಿಶಾಲ್, ರಾಜಾರಾಮ ಪವಾರ್, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ, ಶರಣು ಗೊಗೇರಿ, ಡಾ. ಎಚ್.ಬಿ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಬರ ಪರಿಸ್ಥಿತಿ ಅವಲೋಕನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಹಾಗೂ ನಿಖರ ಮಾಹಿತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಕಡ್ಡಾಯವಾಗಿ ಹಾಜರಾಗಬೇಕು. ಪ್ರವಾಸದ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಗದಗದಲ್ಲಿ ಶೇ.34 ಮಳೆ ಕೊರತೆ: ಬರ ನಿರ್ವಹಣೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಮಳೆ ಪ್ರಮಾಣ, ಬರ ಪರಿಸ್ಥಿತಿ, ಬೆಳೆ ಸ್ಥಿತಿ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಸಮಗ್ರ ಮಾಹಿತಿ ಪಡೆದು ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದು, ವಿಶೇಷವಾಗಿ ಗಜೇಂದ್ರಗಡ ತಾಲೂಕಿನಲ್ಲಿ ವಾಡಿಕೆಗಿಂತ ಶೇ.45ರಷ್ಟು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ತಿಳಿಸಲಾಯಿತು. ಈ ಹಿನ್ನೆಲೆಯಲ್ಲಿ ಬರ ನಿರ್ವಹಣಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಡಾ. ವೆಂಕಟೇಶ ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ನಿರಂತರ ನಿಗಾ ವಹಿಸಬೇಕು. ಯಾವುದೇ ಪ್ರದೇಶದಲ್ಲಿ ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಪರ್ಯಾಯ ವ್ಯವಸ್ಥೆ ಮೂಲಕ ಸಮರ್ಪಕ ನೀರು ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸುಮಾರು 37 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇರುವ ಕುರಿತು ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿಯೂ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಬರ ನಿರ್ವಹಣಾ ಕಾರ್ಯಗಳಿಗೆ ವಿಬಿಜಿ ರಾಮ್‌ಜಿ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪರಿಶೀಲನೆ ನಡೆಸಲಾಯಿತು. ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.

ಅಂಗನವಾಡಿ ಕಟ್ಟಡಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಡಾ. ವೆಂಕಟೇಶ, ಅಗತ್ಯವಿರುವ ಕಟ್ಟಡಗಳನ್ನು ಹೊಸ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ಧಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಾಲೆಗಳು ಹಾಗೂ ವಿವಿಧ ವಸತಿ ನಿಲಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಉತ್ತಮ ಶಿಕ್ಷಣ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಖಾತರಿಪಡಿಸಬೇಕು ಎಂದರು.

ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹಾರ ಒದಗಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು ಎಂದು ಅವರು ಸೂಚಿಸಿದರು. ಸ್ಥಳೀಯ ಜನಪ್ರತಿನಿಧಿಗಳನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸಿ ಸಾರ್ವಜನಿಕರ ಅಹವಾಲುಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಬೇಕು ಎಂದರು.

ಸರ್ಕಾರದ ‘ಪ್ರಜಾಸೇವೆ’ ನೂತನ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಜೂನ್ 1ರಿಂದ ಆಗಸ್ಟ್ 28ರವರೆಗೆ ಗದಗ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.34ರಷ್ಟು ಮಳೆ ಕೊರತೆ ದಾಖಲಾಗಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 229.3 ಮಿ.ಮೀ. ಮಳೆಯಾಗಬೇಕಾಗಿದ್ದರೆ, ಕೇವಲ 152.2 ಮಿ.ಮೀ. ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ತಾಲೂಕುವಾರು ಗಮನಿಸಿದರೆ ಗದಗ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿ ತಲಾ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದೆ. ರೋಣ ಮತ್ತು ಮುಂಡರಗಿಯಲ್ಲಿ ತಲಾ ಶೇ.39, ಶಿರಹಟ್ಟಿಯಲ್ಲಿ ಶೇ.31 ಹಾಗೂ ಲಕ್ಷ್ಮೇಶ್ವರದಲ್ಲಿ ಶೇ.20ರಷ್ಟು ಮಳೆ ಕೊರತೆಯಾಗಿದೆ. ನರಗುಂದ ತಾಲೂಕಿನಲ್ಲಿ ಮಾತ್ರ ಶೇ.10ರಷ್ಟು ಅಧಿಕ ಮಳೆ ದಾಖಲಾಗಿದೆ.

ಆಗಸ್ಟ್ 1ರಿಂದ 28ರವರೆಗಿನ ಅವಧಿಯಲ್ಲಿಯೂ ಜಿಲ್ಲೆಯಲ್ಲಿ ವಾಡಿಕೆಯ 73.1 ಮಿ.ಮೀ. ಮಳೆಗೆ ಕೇವಲ 44.6 ಮಿ.ಮೀ. ಮಳೆ ದಾಖಲಾಗಿದ್ದು, ಶೇ.39ರಷ್ಟು ಕೊರತೆ ಕಂಡುಬಂದಿದೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನೀಡಿರುವ ಎಲ್ಲ ನಿರ್ದೇಶನಗಳನ್ನು ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಸಾಧಿಸುವಂತೆ ಹಾಗೂ ವಿಶೇಷವಾಗಿ ಕಂದಾಯ ಇಲಾಖೆಯ ಬಾಕಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಡಿಎಸ್‌ಸಿ ಆರ್. ಮುಂಡರಗಿ, ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.

ಬರ ನಿರ್ವಹಣೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ಪ್ರತಿಯೊಂದು ಪ್ರದೇಶದ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಗಮನಿಸಿ, ಸಮಸ್ಯೆ ಕಂಡುಬಂದ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು.

ಡಾ. ಎಂ.ವಿ. ವೆಂಕಟೇಶ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

11 ವರ್ಷಗಳ ಅಕ್ಕ–ತಮ್ಮನ ಬಾಂಧವ್ಯಕ್ಕೆ ರಾಖಿಯ ಬೆಸುಗೆ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರೀತಿ, ವಿಶ್ವಾಸ ಹಾಗೂ ಅಕ್ಕ–ತಮ್ಮನ ಬಾಂಧವ್ಯದ ಪ್ರತೀಕವಾದ ರಕ್ಷಾ ಬಂಧನ ಹಬ್ಬವನ್ನು ಗದಗದ ಹುಯಿಲಗೋಳ ಆಸ್ಪತ್ರೆಯ ವೈದ್ಯರಾದ ಡಾ. ಸಂತೋಷ ಹುಯಿಲಗೋಳ ಹಾಗೂ ಡಾ. ರೂಪಾ ಹುಯಿಲಗೋಳ ಅವರ ಸುಪುತ್ರ ಸಕ್ಷಮ್ ಮತ್ತು ರಾಧಾ ಕಡ್ಲಿಮಟ್ಟಿ ಅವರು ವಿಶೇಷವಾಗಿ ಆಚರಿಸಿದರು.

ರಾಧಾ ಕಡ್ಲಿಮಟ್ಟಿ ಅವರು ಸಕ್ಷಮ್‌ಗೆ ರಾಖಿ ಕಟ್ಟಿ, ಸಿಹಿ ಹಂಚುವ ಮೂಲಕ ರಕ್ಷಾ ಬಂಧನದ ಸಂಭ್ರಮವನ್ನು ಆಚರಿಸಿದರು. ಕಳೆದ 11 ವರ್ಷಗಳಿಂದ ಪ್ರೀತಿಯ ಅಕ್ಕ–ತಮ್ಮನಂತೆ ಬಾಂಧವ್ಯ ಹೊಂದಿರುವ ರಾಧಾ ಮತ್ತು ಸಕ್ಷಮ್ ಅವರು ಪ್ರತಿವರ್ಷವೂ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದ್ದಾರೆ.

ರಕ್ತಸಂಬಂಧಕ್ಕಿಂತಲೂ ಮಿಗಿಲಾದ ಪ್ರೀತಿ, ವಿಶ್ವಾಸ ಹಾಗೂ ಆತ್ಮೀಯತೆಯ ಬಂಧಕ್ಕೆ ಈ ರಕ್ಷಾ ಬಂಧನ ಸಾಕ್ಷಿಯಾಗಿದ್ದು, ಅವರ 11 ವರ್ಷಗಳ ಅಕ್ಕ–ತಮ್ಮನ ಬಾಂಧವ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಗದಗ ಜಿಪಂ ಸಿಇಒ ಆಗಿ ಮುಕುಲ್ ಜೈನ್ ವರ್ಗಾವಣೆ..!

0

ಗದಗ: ರಾಜ್ಯ ಸರ್ಕಾರ ಆಡಳಿತಾತ್ಮಕ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೀದರ್ ನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್ ಜೈನ್, ಐಎಎಸ್ ಅವರನ್ನು ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಈ ಆದೇಶದಲ್ಲಿ ಐಎಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳಿಗೆ ವಿವಿಧ ಹುದ್ದೆಗಳಿಗೆ ವರ್ಗಾವಣೆ ಮತ್ತು ನೇಮಕಾತಿ ಮಾಡಲಾಗಿದೆ.

2022ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮುಕುಲ್ ಜೈನ್ ಅವರು ಇದುವರೆಗೆ ಬೀದರ್ ನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಗದಗ ಜಿಲ್ಲಾ ಪಂಚಾಯತಿಯ ಸಿಇಒ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನಿರ್ವಹಿಸುತ್ತಿದ್ದ ಸಿ.ಎನ್. ಶ್ರೀಧರ, ಐಎಎಸ್ ಅವರನ್ನು ಈ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ. ನೂತನ ಸಿಇಒ ಆಗಿ ಮುಕುಲ್ ಜೈನ್ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಪಂಚಾಯತಿಗೆ ಪೂರ್ಣಾವಧಿಯ ಆಡಳಿತಾತ್ಮಕ ಸಾರಥಿ ದೊರೆತಂತಾಗಿದೆ.

ಈ ವರ್ಗಾವಣೆ ಆದೇಶದೊಂದಿಗೆ ಗದಗ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲೂ ಮಹತ್ವದ ಬದಲಾವಣೆಯಾಗಿದ್ದು, ಮುಕುಲ್ ಜೈನ್ ಅವರು ನೂತನ ಜಿಪಂ ಸಿಇಒ ಆಗಿ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.

ಶಿರಹಟ್ಟಿ ತಾಲೂಕನ್ನು ಬರಪೀಡಿತ ಘೋಷಿಸಿ: ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಪದಾಧಿಕಾರಿಗಳು ಶನಿವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ ಹುಬ್ಬಳ್ಳಿ ಮಾತನಾಡಿ, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಹಾಗೂ ರೈತ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರ ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಆದರೆ ಶಿರಹಟ್ಟಿ ತಾಲೂಕನ್ನು ಈ ಪಟ್ಟಿಯಲ್ಲಿ ಸೇರಿಸದಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ಬರದ ಪರಿಸ್ಥಿತಿ ಇದ್ದರೂ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದರಿಂದ ರೈತರಿಗೆ ಸರ್ಕಾರದ ಪರಿಹಾರ ಮತ್ತು ಸೌಲಭ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಮತ್ತು ನೆರವು ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಢಾಕಪ್ಪ ಲಮಾಣಿ, ಮಹಮ್ಮದ್ ಅಜರುದ್ದೀನ್ ಹೆಸರೂರ, ಲಿಂಬಣ್ಣ ಲಮಾಣಿ, ಪರಶುರಾಮ ಹುಬ್ಬಳ್ಳಿ, ಪವನ ಹುಬ್ಬಳ್ಳಿ, ರವಿ ಲಮಾಣಿ, ಅವಿನಾಳ ಲಮಾಣಿ ಹಾಗೂ ಸುಭಾಸ ಅಂಬಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಅಂತರರಾಷ್ಟ್ರೀಯ ನ್ಯಾಯಾಧೀಶ ಲಿಯೋನಾರ್ಡೋ ಬ್ರಾಂಟ್‌ಗೆ ಜಿ.ಎಸ್. ಪಾಟೀಲ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಹೇಗ್‌ನ ಅಂತರರಾಷ್ಟ್ರೀಯ ನ್ಯಾಯಾಲಯದ ಪ್ರಮುಖ ನ್ಯಾಯಾಧೀಶ ಲಿಯೋನಾರ್ಡೋ ಬ್ರಾಂಟ್ ಅವರು ಶನಿವಾರ ವಿಧಾನಸೌಧಕ್ಕೆ ಭೇಟಿ ನೀಡಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರನ್ನು ಭೇಟಿಯಾದರು.

ವಿಧಾನಸೌಧದಲ್ಲಿರುವ ತಮ್ಮ ಅಧಿಕೃತ ಕಚೇರಿಯಲ್ಲಿ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರು ನ್ಯಾಯಾಧೀಶ ಲಿಯೋನಾರ್ಡೋ ಬ್ರಾಂಟ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ಗಣ್ಯರ ನಡುವೆ ವಿವಿಧ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಯಿತು.

ಜಾಗತಿಕ ಮಟ್ಟದ ಕಾನೂನು ವ್ಯವಸ್ಥೆ, ನ್ಯಾಯ ವಿತರಣೆ ಹಾಗೂ ಅಂತರರಾಷ್ಟ್ರೀಯ ನ್ಯಾಯಾಲಯದ ಕಾರ್ಯವೈಖರಿ ಕುರಿತು ಲಿಯೋನಾರ್ಡೋ ಬ್ರಾಂಟ್ ಮಾಹಿತಿ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕರ್ನಾಟಕ ಶಾಸನಸಭೆಯ ಪರಂಪರೆ, ಶಾಸನ ರಚನೆ ಪ್ರಕ್ರಿಯೆ ಹಾಗೂ ಪ್ರಜಾಸತ್ತಾತ್ಮಕ ಕಾರ್ಯಕಲಾಪಗಳ ಕುರಿತು ಸಭಾಧ್ಯಕ್ಷ ಜಿ.ಎಸ್. ಪಾಟೀಲ ವಿವರಿಸಿದರು.

ಬಳಿಕ ಸಭಾಧ್ಯಕ್ಷರು ಲಿಯೋನಾರ್ಡೋ ಬ್ರಾಂಟ್ ಅವರಿಗೆ ಮೈಸೂರು ಪೇಟ ತೊಡಿಸಿ, ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಗಣಿತದ ಭಯ ಗೆದ್ದರೆ ಭವಿಷ್ಯದ ಸವಾಲೂ ಗೆಲ್ಲಬಹುದು: ಕೃಷ್ಣಗೌಡ ಎಚ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಗಣಿತವೆಂದರೆ ಭಯಪಡುವ ವಿಷಯವಲ್ಲ, ಅದು ಕುತೂಹಲ, ಚಿಂತನೆ ಹಾಗೂ ಹೊಸ ಸಾಧ್ಯತೆಗಳ ಜಗತ್ತು ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಗಣಿತ ಬಾಲ ಭಾಸ್ಕರ’ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಯುವ ಮುಖಂಡ ಕೃಷ್ಣಗೌಡ ಎಚ್. ಪಾಟೀಲ ಹೇಳಿದರು.

ನಗರದ ಭೀಮಸೇನ ಜೋಶಿ ರಂಗಮಂದಿರದಲ್ಲಿ ನಡೆದ ‘ಗಣಿತ ಬಾಲ ಭಾಸ್ಕರ’ ಸೆಮಿಫೈನಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಚ್.ಕೆ. ಪಾಟೀಲ ಪ್ರತಿಷ್ಠಾನ, ಜಿ.ಎನ್.ಟಿ.ಟಿ.ಎಫ್ ಹಾಗೂ ಜಿ.ಸಿ.ಐ.ಇ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸ್ಪರ್ಧಾತ್ಮಕ ವೇದಿಕೆ ಕಲ್ಪಿಸುತ್ತಿದೆ ಎಂದು ಹೇಳಿದರು.

ಗಣಿತದ ಮೇಲಿನ ಭಯವನ್ನು ದೂರ ಮಾಡಿ, ವಿಷಯದ ಬಗ್ಗೆ ಆಸಕ್ತಿ ಮತ್ತು ಪ್ರೀತಿ ಬೆಳೆಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಕೌಶಲ್ಯ ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ವೃದ್ಧಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಗೆಲುವು-ಸೋಲಿಗಿಂತ ಅನುಭವ ಮುಖ್ಯ

ಎಚ್.ಕೆ. ಪಾಟೀಲ ಪ್ರತಿಷ್ಠಾನದ ನಿರ್ದೇಶಕ ಆನಂದ ಪೋತ್ನಿಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗೆಲ್ಲುವುದು ಅಥವಾ ಸೋಲುವುದು ಮಾತ್ರ ಮುಖ್ಯವಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಪಡೆಯುವ ಹೊಸ ಅನುಭವ ಮತ್ತು ಕಲಿಕೆಯೇ ಅತ್ಯಂತ ಮಹತ್ವದ್ದು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ಗದಗ ಜಿಲ್ಲಾ ಶಿಕ್ಷಣ ಇಲಾಖೆ, ಗ್ರಾಮೀಣ ವೈದ್ಯಕೀಯ ಸೇವಾ ಸಂಸ್ಥೆ ಹಾಗೂ ಜೇಸಿ ಪ್ರೌಢಶಾಲೆಗಳ ಸಹಕಾರ ದೊರೆಯುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಸಹಜ ಪ್ರತಿಭೆ ಮತ್ತು ಕೌಶಲ್ಯ ಅಡಗಿರುತ್ತದೆ. ಸೂಕ್ತ ಅವಕಾಶ ದೊರೆತಾಗ ಆ ಪ್ರತಿಭೆಯನ್ನು ಗುರುತಿಸಿ ಹೊರತರಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜೇಸಿ ಪ್ರೌಢಶಾಲೆಯ ಅಧ್ಯಕ್ಷ ವಾಸಣ್ಣ ಕುರುಡಗಿ, ಜಿ.ಎನ್.ಟಿ.ಟಿ.ಎಫ್ ಉಪಾಧ್ಯಕ್ಷ ಪ್ರಭು ದಂಡಾವತಿಮಠ, ಆರ್.ಆರ್. ಓದುಗೌಡರ ಸೇರಿದಂತೆ ಜಿ.ಎನ್.ಟಿ.ಟಿ.ಎಫ್ ಹಾಗೂ ಜಿ.ಸಿ.ಐ.ಇ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸೌಮ್ಯಾ ಪಾಟೀಲ ನಿರೂಪಿಸಿದರು. ಮಧುಸೂಧನ ಪುಣೇಕರ ವಂದಿಸಿದರು.

ಗಣಿತದ ಭಯವನ್ನು ಬಿಟ್ಟು ಗಣಿತದೊಂದಿಗೆ ಸ್ನೇಹ ಬೆಳೆಸೋಣ. ಇಂದಿನ ಆತ್ಮವಿಶ್ವಾಸವೇ ನಾಳಿನ ಯಶಸ್ಸಿನ ಮೆಟ್ಟಿಲಾಗಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಪ್ರತಿಯೊಂದು ಅವಕಾಶವನ್ನೂ ಬಳಸಿಕೊಂಡು ಸ್ಪರ್ಧಾತ್ಮಕ ಭವಿಷ್ಯದತ್ತ ಹೆಜ್ಜೆ ಹಾಕಬೇಕು.

— ಕೃಷ್ಣಗೌಡ ಎಚ್. ಪಾಟೀಲ

6 ಕಿ.ಮೀ. ರಸ್ತೆ, 45 ನಿಮಿಷದ ನರಕಯಾತನೆ: ನರೇಗಲ್ಲ–ತೊಂಡಿಹಾಳ ಮಾರ್ಗ ಹದಗೆಟ್ಟು ಹೈರಾಣು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕೇವಲ ಆರು ಕಿಲೋಮೀಟರ್ ರಸ್ತೆ ಕ್ರಮಿಸಲು ಮುಕ್ಕಾಲು ಗಂಟೆ ಬೇಕು ಎಂದರೆ ಆ ರಸ್ತೆಯ ದುಸ್ಥಿತಿ ಎಷ್ಟಿರಬಹುದು? ನರೇಗಲ್ಲ–ತೊಂಡಿಹಾಳ ನಡುವಿನ ಪ್ರಮುಖ ಸಂಪರ್ಕ ರಸ್ತೆ ಇದೀಗ ಇದೇ ದುಸ್ಥಿತಿಗೆ ಸಾಕ್ಷಿಯಾಗಿದೆ. ಸಂಪೂರ್ಣ ಹದಗೆಟ್ಟ ರಸ್ತೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪ್ರತಿದಿನ ನರಕಯಾತನೆ ಅನುಭವಿಸುವಂತಾಗಿದೆ.

ನರೇಗಲ್ಲ–ತೊಂಡಿಹಾಳ ನಡುವಿನ ಸುಮಾರು 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ತುಂಬೆಲ್ಲ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಮಳೆ ಬಂದಾಗ ಈ ಗುಂಡಿಗಳಲ್ಲಿ ನೀರು ನಿಂತು ರಸ್ತೆ ಯಾವುದು, ಗುಂಡಿ ಯಾವುದು ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವ ಬದಲು ರಸ್ತೆಯನ್ನೇ ಹುಡುಕಿಕೊಂಡು ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಅಪಘಾತದ ಭೀತಿಯಲ್ಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ಸಣ್ಣ ವಾಹನಗಳ ಚಾಲಕರಿಗೂ ರಸ್ತೆ ಸಂಚಾರ ದೊಡ್ಡ ಸವಾಲಾಗಿ ಪರಿಣಮಿಸಿದೆ.

ನರೇಗಲ್ಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ತೊಂಡಿಹಾಳ ಮಾರ್ಗವು ಅತ್ಯಂತ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈ ರಸ್ತೆ ಮುಂದಿನ ಪ್ರದೇಶಗಳನ್ನು ಹೈದರಾಬಾದ್–ಕರ್ನಾಟಕ ಭಾಗದೊಂದಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದರೂ, ರಸ್ತೆ ಅಭಿವೃದ್ಧಿ ಹಾಗೂ ದುರಸ್ತಿ ವಿಚಾರದಲ್ಲಿ ಸಂಬಂಧಿಸಿದ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಆಂಬ್ಯುಲೆನ್ಸ್‌ಗೂ ಸಂಕಷ್ಟ… ಶಾಲಾ ವಾಹನಗಳಿಗೂ ತೊಂದರೆ

ರಸ್ತೆ ಹದಗೆಟ್ಟಿರುವ ಪರಿಣಾಮ ವಾಹನಗಳ ನಿರ್ವಹಣಾ ವೆಚ್ಚವೂ ಹೆಚ್ಚುತ್ತಿದೆ. ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಳು ವೇಗವಾಗಿ ಸಂಚರಿಸುವುದಕ್ಕೂ ಅಡ್ಡಿಯಾಗುತ್ತಿದೆ. ಶಾಲಾ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೂ ರಸ್ತೆ ದುಸ್ಥಿತಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು, ರೈತರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಹಲವು ವರ್ಷಗಳಿಂದ ರಸ್ತೆ ದುರಸ್ತಿಗೆ ಒತ್ತಾಯಿಸುತ್ತಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹದಗೆಟ್ಟ ರಸ್ತೆಯಿಂದ ಕೆಲವೇ ಕಿಲೋಮೀಟರ್ ಪ್ರಯಾಣಕ್ಕೂ ಮುಕ್ಕಾಲು ಗಂಟೆ ಸಮಯ ವ್ಯಯವಾಗುತ್ತಿದೆ. ಅಭಿವೃದ್ಧಿಯ ಮಾತುಗಳು ಕೇಳಿಬರುತ್ತಿದ್ದರೂ, ಪ್ರಮುಖ ಸಂಪರ್ಕ ರಸ್ತೆಯ ಈ ದುಸ್ಥಿತಿ ಮಾತ್ರ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ರಸ್ತೆ ದುರಸ್ತಿ ಕಾರ್ಯ ಕೈಗೊಂಡು ಅಗತ್ಯವಿದ್ದರೆ ಸಂಪೂರ್ಣವಾಗಿ ನವೀಕರಣ ಮಾಡಬೇಕು. ಇಲ್ಲವಾದಲ್ಲಿ ಸಾರ್ವಜನಿಕರನ್ನು ಸಂಘಟಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ನರೇಗಲ್ಲ–ತೊಂಡಿಹಾಳ ರಸ್ತೆ ಈ ಭಾಗದ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಆದರೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೇವಲ 6 ಕಿ.ಮೀ. ಪ್ರಯಾಣಕ್ಕೂ ಮುಕ್ಕಾಲು ಗಂಟೆ ಬೇಕಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.

ಸ್ಥಳೀಯ ಸಾರ್ವಜನಿಕರು

ಹಗರಿಬೊಮ್ಮನಹಳ್ಳಿಗೆ ಡೆಮು ರೈಲು ಎಂಟ್ರಿ; ಸಂಭ್ರಮದ ಸ್ವಾಗತ..!

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಬಹುದಿನಗಳ ನಿರೀಕ್ಷೆ, ನಿರಂತರ ಹೋರಾಟ ಹಾಗೂ ಜನರ ಒಗ್ಗಟ್ಟಿನ ಫಲವಾಗಿ ಹೊಸಪೇಟೆ–ಅರಸೀಕೆರೆ ನಡುವೆ ಸಂಚರಿಸುವ ಡೆಮು ರೈಲು ಹಗರಿಬೊಮ್ಮನಹಳ್ಳಿ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಸಂಭ್ರಮ ಮನೆ ಮಾಡಿತು. ಸಾರ್ವಜನಿಕರು, ರೈಲ್ವೆ ಪ್ರಯಾಣಿಕರು, ಹೋರಾಟಗಾರರು ಹಾಗೂ ವಿವಿಧ ಸಂಘ–ಸಂಸ್ಥೆಗಳ ಮುಖಂಡರು ರೈಲಿಗೆ ಭವ್ಯ ಸ್ವಾಗತ ಕೋರಿದರು.

ಬೆಳಿಗ್ಗೆ ಸುಮಾರು 7.30ಕ್ಕೆ ರೈಲು ಹಗರಿಬೊಮ್ಮನಹಳ್ಳಿ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನಿಲ್ದಾಣದಲ್ಲಿ ಹರ್ಷೋದ್ಗಾರ ಮೊಳಗಿತು. ಬಹುನಿರೀಕ್ಷಿತ ರೈಲು ಸೇವೆ ಆರಂಭವಾಗಿರುವುದು ಈ ಭಾಗದ ಜನತೆಗೆ ಹೊಸ ಸಂಚಾರದ ಆಶಾಭಾವನೆ ಮೂಡಿಸಿದೆ.

ನಂದಿಪುರದ ಪರಮಪೂಜ್ಯ ಡಾ. ಮಹೇಶ್ವರ ಮಹಾಸ್ವಾಮಿಗಳು ಪುಷ್ಪನಮನ ಸಲ್ಲಿಸುವ ಮೂಲಕ ನೂತನ ರೈಲು ಸೇವೆಯನ್ನು ಸ್ವಾಗತಿಸಿದರು. ಇಂದಿನ ರೈಲ್ವೆ ಸೌಲಭ್ಯದ ಹಿಂದೆ ಅನೇಕ ಜನರ ಶ್ರಮ, ಹೋರಾಟ ಹಾಗೂ ಸಹಕಾರ ಅಡಗಿದೆ ಎಂದು ಅವರು ಸ್ಮರಿಸಿದರು.

ರೈಲ್ವೆ ಸಂಪರ್ಕಕ್ಕಾಗಿ ನಡೆದ ಹೋರಾಟದ ಪ್ರತಿಯೊಂದು ಹಂತದಲ್ಲೂ ಸಾರ್ವಜನಿಕರು ತಮ್ಮ ಸಮಯ, ಶ್ರಮ ಹಾಗೂ ಸಹಕಾರ ನೀಡಿದ್ದಾರೆ. ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಗುರು–ಹಿರಿಯರು, ವಿವಿಧ ಸಂಘ–ಸಂಸ್ಥೆಗಳು, ಯುವಕರು ಹಾಗೂ ಪತ್ರಕರ್ತರು ಮತ್ತು ಮಾಧ್ಯಮ ಮಿತ್ರರ ಸಹಕಾರದಿಂದಲೇ ಈ ಯಶಸ್ಸು ಸಾಧ್ಯವಾಗಿದೆ ಎಂದು ತಿಳಿಸಿದರು.

ರೈಲ್ವೆ ಹೋರಾಟ ಸಮಿತಿಯ ಸಂಚಾಲಕ ಕೊಟ್ರೇಶ್ ಶೆಟ್ಟರ್ ಮಾತನಾಡಿ, ಹೊಸಪೇಟೆ–ಅರಸೀಕೆರೆ ಡೆಮು ರೈಲು ಆರಂಭವಾಗಿರುವುದು ಈ ಭಾಗದ ನಾಗರಿಕರಿಗೆ ಅತ್ಯಂತ ಅನುಕೂಲಕರವಾಗಿದೆ ಎಂದರು.

ತುಮಕೂರು ಹಾಗೂ ಬೆಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸುವಂತೆ ಬಹುಕಾಲದಿಂದ ಬೇಡಿಕೆ ಸಲ್ಲಿಸಲಾಗುತ್ತಿತ್ತು. ಸದ್ಯ ಅರಸೀಕೆರೆವರೆಗೆ ಸಂಪರ್ಕ ದೊರೆತಿದ್ದು, ಮುಂದಿನ ಹಂತದಲ್ಲಿ ಮೈಸೂರು ಸೇರಿದಂತೆ ಇನ್ನಷ್ಟು ಪ್ರಮುಖ ನಗರಗಳಿಗೆ ನೇರ ರೈಲು ಸಂಪರ್ಕ ಕಲ್ಪಿಸುವಂತೆ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಸತ್ಸಂಗ ಸಮಿತಿಯ ಹಿರಿಯ ನಾಗರಿಕ ಜಿ. ಲಕ್ಷ್ಮೀಪತಿ ಮಾತನಾಡಿ, ಇಂದಿನ ರೈಲ್ವೆ ಸೌಲಭ್ಯಗಳ ಹಿಂದೆ ರೈಲ್ವೆ ಹೋರಾಟ ಸಮಿತಿಯ ನಿರಂತರ ಶ್ರಮವಿದೆ. ಅಧಿಕಾರಿಗಳನ್ನು ಸಂಪರ್ಕಿಸಿ ನಿರಂತರವಾಗಿ ಬೇಡಿಕೆಗಳನ್ನು ಮುಂದಿಟ್ಟ ಪರಿಣಾಮ ಹಲವು ರೈಲ್ವೆ ಸೌಲಭ್ಯಗಳು ದೊರೆತಿವೆ ಎಂದು ತಿಳಿಸಿದರು.

ವಿಜಯನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾದಾಮಿ ಮೃತ್ಯುಂಜಯ ಮಾತನಾಡಿ, ಹೊಸಪೇಟೆ–ಅರಸೀಕೆರೆ ರೈಲು ಸೇವೆಯಿಂದ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು ಸೇರಿದಂತೆ ಪ್ರಮುಖ ನಗರಗಳಿಗೆ ನೇರ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು ಎಂದು ಒತ್ತಾಯಿಸಿದರು.

ಡಿಶ್ ಮಂಜುನಾಥ್ ಮಾತನಾಡಿ, ಬಹುದಿನಗಳ ಕನಸು ಇಂದು ನನಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಮನಸಿ ದೇವರಾಜ್ ರೈಲು ಸೇವೆ ಉಳಿಸಿಕೊಳ್ಳಲು ಈ ಹಿಂದೆ ನಡೆದ ಹೋರಾಟಗಳನ್ನು ಸ್ಮರಿಸಿದರು.

ನ್ಯಾರೋ ಗೇಜ್ ರೈಲು ಸೇವೆ ರದ್ದಾದ ಸಂದರ್ಭದಲ್ಲಿ ರೈಲು ಮಾರ್ಗ ಉಳಿಸುವ ವಿಚಾರವಾಗಿ ಹೋರಾಟ ನಡೆದಿತ್ತು. ನಂದಿಪುರದ ಪೂಜ್ಯ ಶ್ರೀರಂತಪ್ಪಜ್ಜ ಸ್ವಾಮೀಜಿ ಸೇರಿದಂತೆ ಅನೇಕ ನಾಗರಿಕರು ಹೋರಾಟಕ್ಕೆ ಧುಮುಕಿದ್ದರು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲ ಸತ್ಯನಾರಾಯಣ, ರೈಲ್ವೆ ಹೋರಾಟಗಾರರ ಸಮಿತಿಯ ಸದಸ್ಯರು, ಆಟೋ ಸಂಘದ ಕೈಲಾಸ್ ಹಾಗೂ ಸತೀಶ್ ಪಾಟೀಲ್ ಸೇರಿದಂತೆ ಹಲವರು ಮಾತನಾಡಿ, ಮುಂದಿನ ದಿನಗಳಲ್ಲಿ ಧರ್ಮಸ್ಥಳ, ಶಿವಮೊಗ್ಗ, ಮೈಸೂರು ಸೇರಿದಂತೆ ಪ್ರಮುಖ ಸ್ಥಳಗಳಿಗೆ ರೈಲು ಸಂಪರ್ಕ ವಿಸ್ತರಿಸಿದರೆ ಸಾರ್ವಜನಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ವೈ. ಮಲ್ಲಿಕಾರ್ಜುನ್, ಕೆ. ಮೈಲಾರಪ್ಪ, ಆಡಿಟರ್ ನಟರಾಜ್, ಅಕ್ಕಿ ಶಿವಣ್ಣ, ನೀಲಕಂಠಪ್ಪ, ವಿರೂಪಾಕ್ಷಪ್ಪ, ಹೊನ್ನೂರಪ್ಪ, ಚಿನ್ನಪ್ಪ ಮಲ್ಕಿ ಒಡೆಯರ್ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ರೈಲ್ವೆ ಹೋರಾಟ ಸಮಿತಿಯ ಸದಸ್ಯರು, ಪತ್ರಕರ್ತರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಡೆಮು ರೈಲಿನಲ್ಲಿ ಪ್ರಯಾಣಿಸಿದರೆ ಈ ಸೇವೆ ಮತ್ತಷ್ಟು ಬಲಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಡಬಲ್ ಲೈನ್, ವಿದ್ಯುದೀಕರಣ ಹಾಗೂ ಕಡಿಮೆ ಸಮಯದಲ್ಲಿ ವೇಗವಾಗಿ ಪ್ರಯಾಣಿಸುವಂತಹ ರೈಲು ಸೌಲಭ್ಯಗಳು ಈ ಭಾಗಕ್ಕೆ ದೊರೆಯಬೇಕು.

— ಡಾ. ಮಹೇಶ್ವರ ಮಹಾಸ್ವಾಮಿಗಳು

ಗದಗ ಎಸ್‌ಪಿ ರೋಹನ್ ಜಗದೀಶ್ ರಾಮನಗರಕ್ಕೆ ವರ್ಗಾವಣೆ; ಮಿಥುನ್ ಎಚ್.ಎನ್. ನೂತನ SP

0

ಗದಗ: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ ನಡೆಸಿದ್ದು, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಐಪಿಎಸ್ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ಕಾರ್ಯನಿರ್ವಹಿಸುತ್ತಿದ್ದ ಮಿಥುನ್ ಎಚ್.ಎನ್., ಐಪಿಎಸ್ ಅವರನ್ನು ಗದಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ರೋಹನ್ ಜಗದೀಶ್ ಅವರು ತಮ್ಮ ವಿಶಿಷ್ಟ ಕಾರ್ಯವೈಖರಿ ಹಾಗೂ ಖಡಕ್ ಕ್ರಮಗಳಿಂದ ಗಮನ ಸೆಳೆದಿದ್ದರು. ವಿಶೇಷವಾಗಿ ರೌಡಿ ಶೀಟರ್‌ಗಳು ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದವರಿಗೆ ಸಿಂಹಸ್ವಪ್ನವಾಗಿದ್ದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರು.

ಅಪರಾಧಿಗಳ ವಿರುದ್ಧ ಖಡಕ್ ನಿಲುವು ತಳೆದಿದ್ದ ರೋಹನ್ ಜಗದೀಶ್ ಅವರು, ಸಾರ್ವಜನಿಕರೊಂದಿಗೆ ಮಾತ್ರ ಅತ್ಯಂತ ಆತ್ಮೀಯ ಹಾಗೂ ಸ್ನೇಹಪರವಾಗಿ ವರ್ತಿಸುತ್ತಿದ್ದರು. ಯಾವಾಗಲೂ ನಗುಮೊಗದಿಂದ, ಹಸನ್ಮುಖಿಯಾಗಿ ಸಾರ್ವಜನಿಕರನ್ನು ಎದುರಿಸುತ್ತಿದ್ದ ಅವರ ಸರಳ ನಡೆ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನವನ್ನೂ ಅವರು ನಡೆಸಿದ್ದರು.

ಒಂದೆಡೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮ, ಮತ್ತೊಂದೆಡೆ ಸಾರ್ವಜನಿಕರೊಂದಿಗೆ ಸ್ನೇಹಪರ ನಡೆ—ಈ ಎರಡು ವಿಭಿನ್ನ ಮುಖಗಳ ಕಾರ್ಯವೈಖರಿಯಿಂದ ರೋಹನ್ ಜಗದೀಶ್ ಅವರು ಗದಗ ಜಿಲ್ಲೆಯ ಜನತೆಯ ಗಮನ ಸೆಳೆದಿದ್ದರು.

ಇದೀಗ ಸರ್ಕಾರದ ವರ್ಗಾವಣೆ ಆದೇಶದಂತೆ ಅವರು ರಾಮನಗರದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇನ್ನು ಗದಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿರುವ ಮಿಥುನ್ ಎಚ್.ಎನ್. ಅವರು 2020ರ ಬ್ಯಾಚ್‌ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ವಿವಿಧ ಪೊಲೀಸ್ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಸಕಲೇಶಪುರದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಿಥುನ್ ಎಚ್.ಎನ್. ಅವರನ್ನು ಇದೀಗ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ರೌಡಿ ಶೀಟರ್‌ಗಳಿಗೆ ಸಿಂಹಸ್ವಪ್ನವಾಗಿದ್ದರೂ, ಸಾರ್ವಜನಿಕರೊಂದಿಗೆ ನಗುಮೊಗದ ಹಸನ್ಮುಖಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ರೋಹನ್ ಜಗದೀಶ್ ಅವರ ವರ್ಗಾವಣೆಯೊಂದಿಗೆ ಗದಗ ಜಿಲ್ಲೆಗೆ ನೂತನ ಪೊಲೀಸ್ ಸಾರಥಿಯಾಗಿ ಮಿಥುನ್ ಎಚ್.ಎನ್. ಆಗಮಿಸುತ್ತಿದ್ದು, ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.