Home Blog Page 8

ಮಹಿಳಾ ಸ್ವಾವಲಂಬನೆಗೆ ಮಾಸಿಕ ಸಂತೆ ಆಸರೆ: ಗವಿಸಿದ್ದೇಶ್ವರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಅಭಿವೃದ್ಧಿ ಹೊಂದಲು ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಮಾಸಿಕ ಸಂತೆ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದು ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.

ರೋಣ ತಾಲೂಕಿನ ಸವಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ಆಯೋಜಿಸಿದ್ದ ‘ಮಾಸಿಕ ಸಂತೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಹಾಗೂ ವಿವಿಧ ಸೌಲಭ್ಯಗಳನ್ನು ಪಡೆದಿರುವ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯಂತಹ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಮಹಿಳೆಯರು ತಯಾರಿಸುವ ಗುಣಮಟ್ಟದ ಉತ್ಪನ್ನಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಉತ್ತಮ ಮಾರುಕಟ್ಟೆ ದೊರಕಿಸುವುದು ಅಗತ್ಯವಾಗಿದೆ. ಇಂತಹ ಸಂತೆಯ ಮೂಲಕ ಉತ್ಪಾದಕರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಸಾಧ್ಯವಾಗಲಿದ್ದು, ಮಹಿಳೆಯರು ತಮ್ಮ ಉತ್ಪನ್ನಗಳನ್ನು ಮಧ್ಯವರ್ತಿಗಳ ಅವಲಂಬನೆಯಿಲ್ಲದೆ ನೇರವಾಗಿ ಮಾರಾಟ ಮಾಡಲು ಅವಕಾಶ ದೊರೆಯಲಿದೆ ಎಂದರು.

ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಸೃಷ್ಟಿಸಿ ಅವರ ಆದಾಯ ಹೆಚ್ಚಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕ ಚಟುವಟಿಕೆಗಳಿಗೆ ಇಂತಹ ಕಾರ್ಯಕ್ರಮಗಳು ಮತ್ತಷ್ಟು ಉತ್ತೇಜನ ನೀಡಲಿವೆ ಎಂದು ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಮಾಸಿಕ ಸಂತೆಯಲ್ಲಿ ಭಾಗವಹಿಸಿ, ತಾವು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಸಾಂಪ್ರದಾಯಿಕ ಖಾದ್ಯಗಳು, ಕರಕುಶಲ ವಸ್ತುಗಳು ಸೇರಿದಂತೆ ಹಲವು ಉತ್ಪನ್ನಗಳು ಗ್ರಾಹಕರ ಗಮನ ಸೆಳೆದವು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ, ಒಕ್ಕೂಟದ ಪದಾಧಿಕಾರಿಗಳು, ಗ್ರಾಮದ ಗಣ್ಯರು, ತಾಲೂಕಿನ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು, ಸಂಜೀವಿನಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ 18 ಶಿಕ್ಷಕರ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಗದಗ ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟು 18 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಬಂದಿದ್ದ ಒಟ್ಟು 32 ಪ್ರಸ್ತಾವನೆಗಳನ್ನು ಪರಿಶೀಲಿಸಿದ ಜಿಲ್ಲಾ ಆಯ್ಕೆ ಸಮಿತಿಯು ಅರ್ಹ ಶಿಕ್ಷಕರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಗದಗ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೩ರಂದು ಜಿಲ್ಲಾ ಆಯ್ಕೆ ಸಮಿತಿ ಸಭೆ ನಡೆಯಿತು. ವಿವಿಧ ತಾಲೂಕುಗಳಿಂದ ಜಿಲ್ಲಾ ಹಂತಕ್ಕೆ ಸ್ವೀಕೃತವಾಗಿದ್ದ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಬಳಿಕ, ಗದಗ ಗ್ರಾಮೀಣ, ಗದಗ ನಗರ, ಮುಂಡರಗಿ, ನರಗುಂದ, ರೋಣ ಹಾಗೂ ಶಿರಹಟ್ಟಿ ತಾಲೂಕುಗಳ ಶಿಕ್ಷಕರನ್ನು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಿ ತೀರ್ಮಾನಿಸಲಾಯಿತು.

ಸೆಪ್ಟೆಂಬರ್ 5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಆಯ್ಕೆಯಾದವರಲ್ಲಿ ಮುಖ್ಯೋಪಾಧ್ಯಾಯರು, ಪ್ರಭಾರಿ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಸಹ ಶಿಕ್ಷಕಿಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಚಿತ್ರಕಲಾ ಶಿಕ್ಷಕರು ಸೇರಿದ್ದಾರೆ.

ಗದಗ ಗ್ರಾಮೀಣ ತಾಲೂಕು

ಕಣವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಗಂಡು ಮಕ್ಕಳ ಶಾಲೆಯ ಸಹ ಶಿಕ್ಷಕಿ ಮಾಸಾಬಿ ಗುಡುಸಾಬ ಮಿರ್ಜಿ, ಹಿರೇಹಂದಿಗೋಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಭೀಮರೆಡ್ಡಿ ಹೇಮರೆಡ್ಡಿ ಕಾಲವಾಡ ಹಾಗೂ ಯಲಿಶಿರೂರ ಗ್ರಾಮದ ಶ್ರೀಮತಿ ದಂಡವ್ವ ನಾಗಪ್ಪ ಯಲಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಫಕ್ಕೀರಪ್ಪ ಜೋಗಿನ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಗದಗ ನಗರ ತಾಲೂಕು

ಗದಗ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ. 11ರ ಸಹ ಶಿಕ್ಷಕಿ ಬಿ.ವಿ. ಕುಲಕರ್ಣಿ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ. 04ರ ಸಹ ಶಿಕ್ಷಕಿ ನಸೀಮಾ ಹುಸೇನಸಾಬ ಜಕ್ಕಲಿ ಹಾಗೂ ಸರ್ಕಾರಿ ಉರ್ದು ಪ್ರೌಢಶಾಲೆಯ ಸಹ ಶಿಕ್ಷಕ ಎಂ.ಎಂ. ಮಕಾನದಾರ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮುಂಡರಗಿ ತಾಲೂಕು

ಮುಂಡರಗಿ ಪಟ್ಟಣದ ಹೆಸರೂರ ರಸ್ತೆಯಲ್ಲಿರುವ ಡಾ. ಬಸವರಾಜ ಶಿವಪ್ಪ ಮೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಬಸವರಾಜ ರಾಮಪ್ಪ ಹೆಬ್ಬಳಿ, ಮುಕ್ತುಂಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಕ್ಕಮಹಾದೇವಿ ಆರ್. ಕೊಟ್ಟೂರಶೆಟ್ಟಿ ಹಾಗೂ ಡೋಣಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕ ಎ.ವಿ. ಶಿವನಗೌಡರ ಅವರು ಆಯ್ಕೆಯಾಗಿದ್ದಾರೆ.

ನರಗುಂದ ತಾಲೂಕು

ಜಗಾಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಪ್ರಧಾನ ಗುರು ಎಂ.ಆರ್. ಬಡಿಗೇರ, ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಬಿ.ಬಿ. ಮತ್ತಿಕಟ್ಟಿ ಹಾಗೂ ನರಗುಂದ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಬಿ.ಕೆ. ವಗ್ಗರ್ ಅವರು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರೋಣ ತಾಲೂಕು

ಹುಲ್ಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಂಜುನಾಥ ಎಚ್. ಕಡಿವಾಲ, ರೋಣ ಪಟ್ಟಣದ ವಿದ್ಯಾಚೇತನ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಹಾಂತೇಶ ಶ್ರೀಮಂತ ಹೊಸಮನಿ ಹಾಗೂ ಕೊತಬಾಳ ಗ್ರಾಮದ ಶ್ರೀ ಗುರು ಅಡವಿಸಿದ್ದೇಶ್ವರ ಅನುದಾನಿತ ಪ್ರೌಢಶಾಲೆಯ ಸಹ ಶಿಕ್ಷಕ ಎಸ್.ವಿ. ಡಣಾಪೂರ ಅವರು ಆಯ್ಕೆಯಾಗಿದ್ದಾರೆ.

ಶಿರಹಟ್ಟಿ ತಾಲೂಕು

ರಣತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎಂ. ಗಂಗಮ್ಮ, ಬಟ್ಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಂ.ಎಸ್. ಕಾಳೆ ಹಾಗೂ ಮಜ್ಜೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ.)ಯ ಪ್ರಭಾರಿ ಮುಖ್ಯೋಪಾಧ್ಯಾಯ ಬಸಪ್ಪ ತೆಲಸಂಗ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿರುವ ಕೊಡುಗೆ ಹಾಗೂ ಶಾಲೆಗಳ ಅಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಒಟ್ಟು 32 ಪ್ರಸ್ತಾವನೆಗಳ ಪೈಕಿ 18 ಶಿಕ್ಷಕರನ್ನು ಜಿಲ್ಲಾ ಆಯ್ಕೆ ಸಮಿತಿಯ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿ ತೀರ್ಮಾನಿಸಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಗದಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ನೀಲಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಎಲ್‌ಕೆಜಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಧರಿಸಿ ಎಲ್ಲರ ಗಮನ ಸೆಳೆದರು. ಬಣ್ಣಬಣ್ಣದ ವೇಷಭೂಷಣಗಳಲ್ಲಿ ಕಂಗೊಳಿಸಿದ ಪುಟಾಣಿಗಳ ಸಂಭ್ರಮ ಶಾಲಾ ಆವರಣದಲ್ಲಿ ವಿಶೇಷ ಆಕರ್ಷಣೆಯಾಗಿತ್ತು.

ಗೀತೆ–ಕಾಯಕ ತತ್ವವೇ ಬಲಿಷ್ಠ ರಾಷ್ಟ್ರದ ಅಡಿಗಲ್ಲು: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀಕೃಷ್ಣ ಪರಮಾತ್ಮನ ಭಗವದ್ಗೀತೆಯ ಸಂದೇಶಗಳು ಹಾಗೂ ಜಗಜ್ಯೋತಿ ಬಸವೇಶ್ವರರ ‘ಕಾಯಕವೇ ಕೈಲಾಸ’ ತತ್ವವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮೃದ್ಧ, ಸದೃಢ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.

ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಭಗವಾನ್ ಶ್ರೀಕೃಷ್ಣ ಜಯಂತಿ–೨೦೨೬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ‘ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ’ ಎಂಬ ಸಂದೇಶದ ಮೂಲಕ ಕರ್ತವ್ಯಕ್ಕೆ ಅತ್ಯುನ್ನತ ಸ್ಥಾನ ನೀಡಿದ್ದಾನೆ. ಪ್ರತಿಫಲದ ನಿರೀಕ್ಷೆಯಿಲ್ಲದೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ಬದುಕಿನಲ್ಲಿ ಎಷ್ಟೇ ಸಂಕಷ್ಟಗಳು ಎದುರಾದರೂ ಧೈರ್ಯ ಕಳೆದುಕೊಳ್ಳದೆ ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು.

ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವವೂ ಪ್ರಾಮಾಣಿಕ ಕಾಯಕದ ಮಹತ್ವವನ್ನು ಸಾರುತ್ತದೆ. ಈ ಇಬ್ಬರು ಮಹನೀಯರ ಜೀವನ ಸಂದೇಶಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶ್ರೀಕೃಷ್ಣನ ಆರಾಧಕರು ಬದುಕಿನಲ್ಲಿ ಕೆಲವು ಪ್ರಮುಖ ನಿಯಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಸಂಕನೂರ, ಜೀವಿಗಳ ಮೇಲೆ ಕರುಣೆ ಹಾಗೂ ದಯೆ ಹೊಂದಬೇಕು, ಮದ್ಯಪಾನ ಸೇರಿದಂತೆ ದುಶ್ಚಟಗಳಿಂದ ದೂರವಿರಬೇಕು, ನೈತಿಕ ಮೌಲ್ಯಗಳನ್ನು ಪಾಲಿಸಬೇಕು ಹಾಗೂ ಜೂಜಾಟ ಮತ್ತು ಬೆಟ್ಟಿಂಗ್‌ನಂತಹ ಚಟಗಳಿಗೆ ಬಲಿಯಾಗಬಾರದು ಎಂದರು.

ದುರಾಸೆಗೆ ಒಳಗಾಗದೆ ಸತ್ಯದ ಹಾದಿಯಲ್ಲಿ ಸಾಗಿದರೆ ಮನಸ್ಸಿನ ಶಾಂತಿ ಮತ್ತು ಉತ್ತಮ ಬದುಕು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮಾಜಗಳು ಮುಂಚೂಣಿಗೆ ಬರಬೇಕಾದರೆ ಜ್ಞಾನ ಸಂಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜ್ಞಾನವೇ ಅತ್ಯಂತ ದೊಡ್ಡ ಶಕ್ತಿಯಾಗಿದ್ದು, ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.

ಧರ್ಮದ ಹಾದಿಯಲ್ಲಿ ಸತ್ಯ, ಪ್ರಾಮಾಣಿಕತೆ ಹಾಗೂ ಕಾಯಕದೊಂದಿಗೆ ಮುನ್ನಡೆದರೆ ಯಶಸ್ಸು ಖಚಿತ ಎಂದು ಸಂಕನೂರ ಪ್ರತಿಪಾದಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಶ್ರೀಕೃಷ್ಣನು ತನ್ನ ಜೀವನದಲ್ಲಿ ಯಾವುದೇ ಕಾರ್ಯವನ್ನು ಸ್ವಾರ್ಥಕ್ಕಾಗಿ ಮಾಡಲಿಲ್ಲ. ಆತನ ಪ್ರತಿಯೊಂದು ಹೆಜ್ಜೆಯೂ ಸಮಾಜದ ಹಿತ ಮತ್ತು ಧರ್ಮ ಸಂಸ್ಥಾಪನೆಗಾಗಿ ಇತ್ತು ಎಂದು ಹೇಳಿದರು.

ಮಹಾಭಾರತದ ವಿವಿಧ ಪ್ರಸಂಗಗಳಲ್ಲಿ ಶ್ರೀಕೃಷ್ಣ ತೆಗೆದುಕೊಂಡ ನಿರ್ಧಾರಗಳು ಧರ್ಮದ ಗೆಲುವಿಗಾಗಿ ರೂಪಿಸಿದ ವಿಶಾಲ ಯೋಜನೆಯ ಭಾಗವಾಗಿದ್ದವು. ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು. ತಮಗೆ ತಪ್ಪು ಎಂದು ಅನಿಸುವ ಕೆಲಸವನ್ನು ಮಾಡದಿರುವುದೇ ನಿಜವಾದ ಕರ್ತವ್ಯ ಎಂದು ತಿಳಿಸಿದರು.

ಯಾವುದೇ ಕೆಲಸ ಕೈಗೊಳ್ಳುವ ಮುನ್ನ ಅದರ ಸಾಧಕ–ಬಾಧಕಗಳನ್ನು ಸರಿಯಾಗಿ ವಿಶ್ಲೇಷಿಸಿ ಮುನ್ನಡೆದರೆ ತಪ್ಪುಗಳನ್ನು ಕಡಿಮೆ ಮಾಡಬಹುದು. ಸದಾ ಧನಾತ್ಮಕ ಮನೋಭಾವನೆಯೊಂದಿಗೆ ಸಮಾಜದ ಒಳಿತಿಗಾಗಿ ಶ್ರಮಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಘಟಕ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ ಅವರು ಶ್ರೀಕೃಷ್ಣನ ಜನನ ಹಾಗೂ ಬಾಲಲೀಲೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ದೇವಕಿ ಮತ್ತು ವಸುದೇವರ ಅಷ್ಟಮ ಗರ್ಭದಲ್ಲಿ ಶ್ರೀಕೃಷ್ಣ ಜನಿಸಿದ ಪ್ರಸಂಗದಿಂದ ಹಿಡಿದು, ಕಂಸನ ಅಹಂಕಾರವನ್ನು ಮುರಿಯಲು ಭಗವಂತ ಅವತರಿಸಿದ ಕಥೆಯನ್ನು ವಿವರಿಸಿದರು. ಕತ್ತಲ ರಾತ್ರಿಯಲ್ಲಿ ಮಳೆ–ಬಿರುಗಾಳಿಯ ನಡುವೆಯೂ ವಸುದೇವರು ಮಗುವನ್ನು ಬುಟ್ಟಿಯಲ್ಲಿಟ್ಟು ಯಮುನಾ ನದಿಯನ್ನು ದಾಟಿದಾಗ ನಡೆದ ದೈವಿಕ ಘಟನೆಗಳನ್ನು ಸ್ಮರಿಸಿದರು.

ಗೋಕುಲದಲ್ಲಿ ಯಶೋದೆಯ ಮಡಿಲಲ್ಲಿ ಬೆಳೆದ ಬಾಲಕೃಷ್ಣನ ತುಂಟಾಟಗಳು ಹಾಗೂ ಆತನ ಬಾಲಲೀಲೆಗಳನ್ನು ವಿವರಿಸಿದ ಅವರು, ಇಂದ್ರನ ಅತಿವೃಷ್ಟಿಯಿಂದ ಗೋಕುಲದ ಜನರನ್ನು ರಕ್ಷಿಸಲು ಶ್ರೀಕೃಷ್ಣ ತನ್ನ ಕಿರುಬೆರಳಿನಲ್ಲಿ ಗೋವರ್ಧನ ಗಿರಿಯನ್ನು ಎತ್ತಿಹಿಡಿದ ಪ್ರಸಂಗವು ಪ್ರಕೃತಿ ಹಾಗೂ ಜೀವಜಾಲದ ಸಂರಕ್ಷಣೆಯ ಮಹತ್ವವನ್ನು ಸಾರುತ್ತದೆ ಎಂದರು.

ಇಂದಿನ ಯುವಜನತೆ ಶ್ರೀಕೃಷ್ಣನ ಜೀವನ ಮತ್ತು ಭಗವದ್ಗೀತೆಯ ಸಂದೇಶಗಳನ್ನು ಅರ್ಥಮಾಡಿಕೊಂಡು ದುಶ್ಚಟಗಳಿಂದ ದೂರವಿರಬೇಕು. ಸಮಯವನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ, ಜ್ಞಾನ, ಕೌಶಲ್ಯ ಹಾಗೂ ಉತ್ತಮ ಚಿಂತನೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಂ.ಕೆ. ಲಮಾಣಿ ಸಲಹೆ ನೀಡಿದರು.

ಯುವಜನತೆ ಉತ್ತಮ ದಾರಿಯಲ್ಲಿ ಸಾಗಿದಾಗ ಮಾತ್ರ ಸದೃಢ ಕುಟುಂಬ, ಆರೋಗ್ಯಕರ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿದ್ದು ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಬಾಹುಬಲಿ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಹೊನ್ನವಾಡಗೆ ರಾಜ್ಯ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಪ್ರಕೋಷ್ಟವು ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ–2026ಕ್ಕೆ ಗಜೇಂದ್ರಗಡ ತಾಲೂಕಿನ ಹಾಳಕೆರೆ ಗ್ರಾಮದ ಶಿಕ್ಷಕ ಮಹಾಂತೇಶ ಹೊನ್ನವಾಡ ಆಯ್ಕೆಯಾಗಿದ್ದಾರೆ.

ರೋಣ ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ರಾಜೀವ್ ಗಾಂಧಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅವರ ಶಿಕ್ಷಣ ಕ್ಷೇತ್ರದ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೆ. 5ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಹಕ್ಕುಪತ್ರ ನೀಡಿ 13 ವರ್ಷವಾದರೂ ನಿವೇಶನ ಹಂಚಿಕೆ ಇಲ್ಲ: ಬಡ ಕುಟುಂಬಗಳ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ರೋಣ: ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಹಕ್ಕುಪತ್ರ ಪಡೆದಿದ್ದರೂ ಕಳೆದ ಸುಮಾರು ೧೩ ವರ್ಷಗಳಿಂದ ನಿವೇಶನ ಹಂಚಿಕೆಯಾಗದೆ ನೂರಾರು ಬಡ ಕುಟುಂಬಗಳು ಸಂಕಷ್ಟದಲ್ಲಿದ್ದು, ಕೂಡಲೇ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕೆಂದು ರೋಣ ತಾಲೂಕು ಸ್ಲಂ ಸಮಿತಿ ಆಗ್ರಹಿಸಿದೆ.

ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿಯ ಸಹಕಾರದಲ್ಲಿ ರೋಣ ತಾಲೂಕು ಸ್ಲಂ ಸಮಿತಿ ನೇತೃತ್ವದಲ್ಲಿ ನೂರಾರು ನಿವಾಸಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ರೋಣ ಪಟ್ಟಣದಲ್ಲಿ ೨೦೧೩ರಲ್ಲಿ ನೂರಾರು ಬಡ ಹಾಗೂ ಕೂಲಿ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದವು. ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಅಂದಿನ ತಹಶೀಲ್ದಾರ್ ಅವರು ದಿನಾಂಕ ೭-೨-೨೦೧೩ರಂದು ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ್ದರು. ಆದರೆ ಇಂದಿಗೂ ನಿವೇಶನಗಳನ್ನು ಹಂಚಿಕೆ ಮಾಡಿಲ್ಲ ಎಂದು ಸಮಿತಿ ಮುಖಂಡರು ಆರೋಪಿಸಿದರು.

ಹಕ್ಕುಪತ್ರವಿದೆ; ನಿವೇಶನದ ಜಾಗವೇ ಗೊತ್ತಿಲ್ಲ!

ಹಕ್ಕುಪತ್ರಗಳಲ್ಲಿ ರೋಣ ಪಟ್ಟಣದ ಯಾವ ಸರ್ವೇ ಸಂಖ್ಯೆಯಲ್ಲಿ ನಿವೇಶನ ಮಂಜೂರು ಮಾಡಲಾಗಿದೆ ಎಂಬ ವಿವರ ನಮೂದಿಸದಿರುವುದರಿಂದ ಫಲಾನುಭವಿಗಳು ಗೊಂದಲಕ್ಕೆ ಸಿಲುಕಿದ್ದಾರೆ. ಗುಡಿಸಲು ಪ್ರದೇಶಗಳು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳು ವಸತಿ ಸೌಲಭ್ಯಕ್ಕಾಗಿ ದಶಕಗಳಿಂದ ಕಾಯುತ್ತಿವೆ ಎಂದು ತಾಲೂಕು ಸ್ಲಂ ಸಮಿತಿ ಅಧ್ಯಕ್ಷ ಬಸವರಾಜ ಕುರಿ ತಿಳಿಸಿದರು.

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ರೋಣ ಪಟ್ಟಣದಲ್ಲಿ ಹಲವು ದಶಕಗಳಿಂದ ಸರ್ಕಾರಿ ಹಾಗೂ ಖಾಸಗಿ ಜಾಗಗಳಲ್ಲಿ ಗುಡಿಸಲು ನಿರ್ಮಿಸಿಕೊಂಡು ನೂರಾರು ಕುಟುಂಬಗಳು ವಾಸಿಸುತ್ತಿವೆ. ಈ ಪ್ರದೇಶಗಳನ್ನು ಕರ್ನಾಟಕ ಸ್ಲಂ ಕಾಯ್ದೆ-೧೯೭೩ರ ಅಡಿಯಲ್ಲಿ ಗುರುತಿಸಿ ಅಗತ್ಯ ವಸತಿ ಹಾಗೂ ಮೂಲಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಅರ್ಹ ಕುಟುಂಬಗಳಿಗೂ ಶೀಘ್ರ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ನೂರಾರು ನಿವಾಸಿಗಳೊಂದಿಗೆ ತಹಶೀಲ್ದಾರ್ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿ ಮೂಲಕ ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ಎಂ.ಬಿ. ನದಾಫ್, ಪರವೀನಬಾನು ಹವಾಲ್ದಾರ, ಮೌಲಾಸಾಬ ಗಚ್ಚಿ, ಪುಷ್ಪಾ ಬಿಜಾಪೂರ, ಆರೀಫ್ ಕಾಗದಗಾರ, ಆಯಿಶಾ ನದಾಫ್, ರೆಹಮಾನಬಿ ಕೊಲಕಾರ, ಭಾಗ್ಯಬಾಳವ್ವ ಗುಣ್ಣದ, ಶಮೀದಅಲಿ ಚೌಧರಿ, ಮಾಳಮ್ಮ ಮಾದರ, ಆಶೀಫ್ ನಾಲಬಂದ, ತೌಶೀಫ್ ಮುಲ್ಲಾ ಸೇರಿದಂತೆ ವಿವಿಧ ಸ್ಲಂ ಪ್ರದೇಶಗಳ ನೂರಾರು ನಿವಾಸಿಗಳು ಉಪಸ್ಥಿತರಿದ್ದರು.

ಹಕ್ಕುಪತ್ರ ನೀಡಿ ೧೩ ವರ್ಷಗಳಾದರೂ ನಿವೇಶನ ಹಂಚಿಕೆ ಮಾಡದಿರುವುದು ಬಡ ಕುಟುಂಬಗಳಿಗೆ ಮಾಡಿದ ಅನ್ಯಾಯವಾಗಿದೆ. ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಿ ಅರ್ಹರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು.

– ಇಮ್ತಿಯಾಜ್ ಆರ್. ಮಾನ್ವಿ, ಅಧ್ಯಕ್ಷರು, ಗದಗ ಜಿಲ್ಲಾ ಸ್ಲಂ ಸಮಿತಿ

ಗ್ರಾಹಕರ ವಿಶ್ವಾಸವೇ ಶಿವಸಂಗಮದ ಶಕ್ತಿ : ಜ.ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ: ಚಿಟ್ ಫಂಡ್ ವ್ಯವಹಾರದ ಬಗ್ಗೆ ಹಲವು ಅನುಮಾನಗಳಿರುವ ಇಂದಿನ ಕಾಲಘಟ್ಟದಲ್ಲಿಯೂ ೧೮ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸಿ ರಾಜ್ಯದ ವಿವಿಧೆಡೆ ೨೦ ಶಾಖೆಗಳನ್ನು ವಿಸ್ತರಿಸಿರುವುದು ಶಿವಸಂಗಮ ಸಂಸ್ಥೆಯ ಪಾರದರ್ಶಕ ಹಾಗೂ ವಿಶ್ವಾಸಾರ್ಹ ವ್ಯವಹಾರಕ್ಕೆ ಸಾಕ್ಷಿಯಾಗಿದೆ ಎಂದು ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಪೂಜ್ಯ ಜ.ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

ಗದಗದ ಪ್ರತಿಷ್ಠಿತ ಶಿವಸಂಗಮ ಸಮೂಹ ಸಂಸ್ಥೆಯ ಶಿವಸಂಗಮ ಚಿಟ್ಸ್ (ಪ್ರೈ.) ಲಿಮಿಟೆಡ್‌ನ ೨೦ನೇ ಶಾಖೆಯನ್ನು ಶಿವಮೊಗ್ಗದ ತಿಲಕನಗರದ ನೂತನ ಕಚೇರಿಯಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಚಿಟ್ ಫಂಡ್ ವ್ಯವಹಾರದ ಬಗ್ಗೆ ಜನರಲ್ಲಿ ಸಾಮಾನ್ಯವಾಗಿ ಅನುಮಾನಗಳಿದ್ದರೂ, ೧೮ ವರ್ಷಗಳ ಸುದೀರ್ಘ ಪಯಣದಲ್ಲಿ ೨೦ ಶಾಖೆಗಳನ್ನು ಸ್ಥಾಪಿಸಿರುವುದು ಗ್ರಾಹಕರು ಸಂಸ್ಥೆಯ ಮೇಲೆ ಹೊಂದಿರುವ ಅಪಾರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು ಸಂಸ್ಥೆ ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಸಂಸ್ಥೆಯು ಕೇವಲ ಹಣಕಾಸು ವ್ಯವಹಾರಕ್ಕೆ ಸೀಮಿತವಾಗದೆ ರಕ್ತದಾನ, ನೇತ್ರದಾನ, ಆರೋಗ್ಯ ತಪಾಸಣೆ, ಕ್ಯಾನ್ಸರ್ ರೋಗಿಗಳಿಗೆ ಉಚಿತ ತಪಾಸಣೆ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳು, ಶುದ್ಧ ಕುಡಿಯುವ ನೀರು, ಆಹಾರ ಪದಾರ್ಥಗಳು ಹಾಗೂ ಸೂಪರ್ ಮಾರ್ಕೆಟ್ ಸೇರಿದಂತೆ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಸಂಸ್ಥೆ ತನ್ನ ಚಟುವಟಿಕೆ ವಿಸ್ತರಿಸಿದೆ ಎಂದು ಹೇಳಿದರು.

ಶಿವಮೊಗ್ಗ ಬಸವಕೇಂದ್ರದ ಪೂಜ್ಯ ಡಾ. ಬಸವ ಮರುಳಸಿದ್ಧ ಮಹಾಸ್ವಾಮಿಗಳು ಸಂಸ್ಥೆಯ ಪ್ರಗತಿಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ಯುವರಾಜ ಕೆ., ಗಣ್ಯ ವ್ಯಾಪಾರಿ ದೇವೇಂದ್ರಪ್ಪ, ಹೊಯ್ಸಳ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಂಕರರಾವ್ ಹಾಗೂ ಪೂರ್ಣಪ್ರಜ್ಞ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಪರಮೇಶ್ವರ ಕೆ. ಭಾಗವಹಿಸಿದ್ದರು.

ಅಧ್ಯಕ್ಷತೆ ವಹಿಸಿದ್ದ ಶಿವಸಂಗಮ ಸಮೂಹ ಸಂಸ್ಥೆಯ ಸಂಸ್ಥಾಪಕ ಜಿ.ಎಂ. ಪಲ್ಲೇದ, ಸಂಸ್ಥೆಯ ಬೆಳವಣಿಗೆಯಲ್ಲಿ ಗ್ರಾಹಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನಿರ್ದೇಶಕರು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಸಂಗಮ ಸಹಕಾರಿ ಸಂಘದ ಅಧ್ಯಕ್ಷ ವಿ.ಎಸ್. ಶಿವಕಾಳಿಮಠ, ಉಪಾಧ್ಯಕ್ಷ ಎಂ.ಜಿ. ಗಾಣಿಗೇರ, ನಿರ್ದೇಶಕರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕೋಟ್

೧೮ ವರ್ಷಗಳ ಕಾಲ ಗ್ರಾಹಕರ ವಿಶ್ವಾಸ ಉಳಿಸಿಕೊಂಡು ೨೦ ಶಾಖೆಗಳಿಗೆ ವಿಸ್ತರಿಸಿರುವುದು ಸಣ್ಣ ಸಾಧನೆಯಲ್ಲ. ಪಾರದರ್ಶಕ ವ್ಯವಹಾರ ಮತ್ತು ಜನರ ನಂಬಿಕೆಯೇ ಶಿವಸಂಗಮ ಸಂಸ್ಥೆಯ ನಿಜವಾದ ಶಕ್ತಿಯಾಗಿದೆ.

– ಜ.ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು

ವಚನ ಸಾಹಿತ್ಯಕ್ಕೆ ಕಲಬುರ್ಗಿ ಕೊಡುಗೆ ಅಪಾರ : ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ಸಾಹಿತ್ಯ, ವಚನ ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರು ಸಲ್ಲಿಸಿದ ಸೇವೆ ಅಪಾರ ಮತ್ತು ಅನುಪಮವಾದದ್ದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.

ನಗರದ ತೋಂಟದಾರ್ಯ ಮಠದಲ್ಲಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ 2813ನೇ ಶಿವಾನುಭವ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದ ಅವರು, ಅನೇಕ ಶರಣರ ವಚನಗಳ ಸಂಶೋಧನೆ, ಸಂಪಾದನೆ ಹಾಗೂ ಪ್ರಕಟಣೆಯ ಮೂಲಕ ಡಾ. ಕಲಬುರ್ಗಿ ಅವರು ವಚನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.

ತೋಂಟದಾರ್ಯ ಮಠದ ಪುಸ್ತಕ ಪ್ರಕಟಣೆಯ ಕಾರ್ಯದ ಹಿಂದಿನ ಪ್ರಮುಖ ಶಕ್ತಿಯಾಗಿದ್ದ ಡಾ. ಎಂ.ಎಂ. ಕಲಬುರ್ಗಿ ಅವರು ಸದಾಕಾಲ ಸ್ಮರಣೀಯರು. ಶ್ರೇಷ್ಠ ಶಿಕ್ಷಕ, ಸಂಶೋಧಕ ಹಾಗೂ ಸಮರ್ಥ ಆಡಳಿತಾಧಿಕಾರಿಯಾಗಿದ್ದ ಅವರು ವೈಚಾರಿಕ ಚಿಂತನೆಯ ಪ್ರತಿಪಾದಕರಾಗಿದ್ದರು ಎಂದು ಶ್ರೀಗಳು ಸ್ಮರಿಸಿದರು.

ಶ್ರಾವಣ ಮಾಸವು ಲಿಂಗಾಯತ ಧರ್ಮದಲ್ಲಿ ವಿಶೇಷ ಮಹತ್ವ ಹೊಂದಿದೆ. ಬಸವಾದಿ ಶರಣರ ಆದರ್ಶಗಳು ಮತ್ತು ಮಹಾತ್ಮರ ಸಂದೇಶಗಳನ್ನು ಕೇಳುವುದರೊಂದಿಗೆ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅಷ್ಟಮದ ಆರು ವೈರಿಗಳು ಹಾಗೂ ಸಪ್ತವ್ಯಸನಗಳಿಂದ ದೂರವಾಗಿ ಶರಣರ ಮಾರ್ಗದಲ್ಲಿ ಸಾಗಿದಾಗ ಜೀವನ ಪಾವನವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಡಾ. ಶರಣಬಸವ ವೆಂಕಟಾಪೂರ ಅವರು, ಆಳವಾದ ಅಧ್ಯಯನ, ಹೊಸ ವಿಷಯಗಳ ಹುಡುಕಾಟ ಮತ್ತು ಸಂಶೋಧನೆಯೇ ಡಾ. ಎಂ.ಎಂ. ಕಲಬುರ್ಗಿ ಅವರ ಜೀವನಧ್ಯೇಯವಾಗಿತ್ತು ಎಂದರು. ವಚನ ಸಾಹಿತ್ಯದ ಸಂಶೋಧನೆ, ಸಂಪಾದನೆ ಹಾಗೂ ಪ್ರಕಟಣೆಯಲ್ಲಿ ಅವರು ಮಾಡಿದ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ವಚನ ಸಾಹಿತ್ಯದ ಬೆಳವಣಿಗೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಕಲಬುರ್ಗಿ ಅವರು, ಕರ್ನಾಟಕದಲ್ಲಿ ಉದಯವಾದ ಲಿಂಗಾಯತ ಧರ್ಮವು ತನ್ನ ವಿಶಿಷ್ಟತೆಯೊಂದಿಗೆ ಸ್ವತಂತ್ರವಾಗಿ ಬೆಳೆಯಬೇಕು ಎಂಬ ಆಶಯ ಹೊಂದಿದ್ದರು ಎಂದು ಹೇಳಿದರು.

ನಾರಿ ಸಮ್ಮಾನ ಪುರಸ್ಕೃತರಿಗೆ ಗೌರವ

ಇದೇ ಸಂದರ್ಭದಲ್ಲಿ ನಾರಿ ಸಮ್ಮಾನ ಪುರಸ್ಕೃತರಾದ ಗದುಗಿನ ಶ್ರೀಮತಿ ಸುವರ್ಣ ಸದಾಶಿವಯ್ಯ ಮದರಿಮಠ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಶರಣೆ ಗಿರಿಜಕ್ಕ ಧರ್ಮರಡ್ಡಿ ಅವರು ‘ಶರಣರು ಕಂಡ ಅನಾದಿ ಬಸವಣ್ಣ’ ವಿಷಯ ಕುರಿತು ಪ್ರವಚನ ನೀಡಿದರು. ರೇವಣಸಿದ್ದಯ್ಯ ಮರಿದೇವರಮಠ ಹಾಗೂ ಬಸವರಾಜ ಗಣಪ್ಪನವರ ದಾಸೋಹ ಸೇವೆ ವಹಿಸಿದ್ದರು. ಸೂರಜ ಮರಿಗೌಡರ ಧರ್ಮಗ್ರಂಥ ಪಠಣ ನಡೆಸಿದರೆ, ಕೃತಿಕಾ ಮರಿಗೌಡ ವಚನ ಚಿಂತನ ಮಾಡಿದರು.

ವಿಜಯ ಕಿರೇಸೂರ ನಿರ್ದೇಶನದಲ್ಲಿ ಸ್ವಾತಂತ್ರ್ಯ ಸಂಗ್ರಾಮ ಕುರಿತ ಕೈಗೊಂಬೆ ಆಟವನ್ನು ಕದಾಂಪೂರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ವಿದ್ಯಾ ಗಂಜಾಳ ನಿರೂಪಿಸಿದರು. ಡಾ. ಉಮೇಶ ಪುರದ ಸ್ವಾಗತಿಸಿದರು.

ಶಿವಾನುಭವದಲ್ಲಿ ಸಂಘದ ಉಪಾಧ್ಯಕ್ಷ ಪ್ರಭು ಗಂಜಿಹಾಳ, ಸುರೇಖಾ ಪಿಳ್ಳಿ, ಕಾರ್ಯದರ್ಶಿ ಸಿದ್ಧರಾಮ ಪಟ್ಟೇದ, ಸಹಕಾರ್ಯದರ್ಶಿ ಪ್ರತಿಭಾ ಬಡ್ನಿ, ಕೋಶಾಧ್ಯಕ್ಷ ವೀರಣ್ಣ ಗೋಟಡಕಿ, ಕೆ.ಎಸ್. ಕೋರಿಮಠ, ಸೋಮಶೇಖರ ಪುರಾಣಿಮಠ, ಆದೇಶ ಅಂಗಡಿ ಸೇರಿದಂತೆ ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು.

ವಚನ ಸಾಹಿತ್ಯವನ್ನು ಕೇವಲ ಅಧ್ಯಯನದ ವಿಷಯವಾಗಿ ನೋಡದೆ, ಅದರ ಆಳಕ್ಕೆ ಇಳಿದು ಸಂಶೋಧನೆ, ಸಂಪಾದನೆ ಮತ್ತು ಪ್ರಕಟಣೆಯ ಮೂಲಕ ಮುಂದಿನ ಪೀಳಿಗೆಗೆ ತಲುಪಿಸಿದ ಮಹತ್ವದ ಸಾಧಕರಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರು ಅಗ್ರಗಣ್ಯರು. ಅವರ ಸಾಹಿತ್ಯಿಕ ಮತ್ತು ಸಂಶೋಧನಾ ಸೇವೆ ಸದಾಕಾಲ ಸ್ಮರಣೀಯ.

— ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು

ಶರಣರ ಆದರ್ಶ ದಾಂಪತ್ಯಕ್ಕೆ ದಾರಿದೀಪ: ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ೧೨ನೇ ಶತಮಾನದ ಶರಣರ ತತ್ವಾದರ್ಶಗಳನ್ನು ನೂತನ ದಂಪತಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಗೌರವದಿಂದ ಬದುಕು ಸಾಗಿಸಬೇಕು ಎಂದು ಮುಂಡರಗಿಯ ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು ಹೇಳಿದರು.

ಇಲ್ಲಿನ ಅನ್ನದಾನೀಶ್ವರ ಶಾಖಾ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಶರಣರ ತತ್ವಚಿಂತನೆ ಪ್ರವಚನ, ಮಂಗಲೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಶಾಖಾ ಮಠ ನಿರ್ಮಾಣದ ಸಂದರ್ಭದಲ್ಲಿ ಈ ಸ್ಥಳದಲ್ಲಿ ಮೂವರು ಶರಣರ ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸಂಶೋಧನೆಯಿಂದ ಅವು ಸುಮಾರು ೪೦೦ ವರ್ಷಗಳಷ್ಟು ಹಳೆಯವು ಎಂಬುದು ತಿಳಿದುಬಂದಿದೆ. ಹೀಗಾಗಿ ಲಕ್ಕುಂಡಿಯ ಅನ್ನದಾನೀಶ್ವರ ಶಾಖಾ ಮಠದ ಗದ್ದುಗೆ ವಿಶೇಷ ಮಹತ್ವ ಹೊಂದಿದೆ ಎಂದು ಶ್ರೀಗಳು ತಿಳಿಸಿದರು.

ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠವು ತ್ರಿವಿಧ ದಾಸೋಹ ಪರಂಪರೆಯನ್ನು ಹೊಂದಿದ್ದು, ನಾಡಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಭೂದಾನ ಹಾಗೂ ಧನಸಹಾಯ ನೀಡಿದೆ. ಈ ಹಿನ್ನೆಲೆ ಲಕ್ಕುಂಡಿ ಶಾಖಾ ಮಠದ ಅಭಿವೃದ್ಧಿಗೂ ಜನಪ್ರತಿನಿಧಿಗಳು ಅಗತ್ಯ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಬಿ.ಆರ್. ಯಾವಗಲ್ ಮಾತನಾಡಿ, ನಾಡಿನಲ್ಲಿ ಬರಗಾಲದ ಛಾಯೆ ಆವರಿಸಿರುವ ಸಂದರ್ಭದಲ್ಲಿ ಶರಣರ ತತ್ವಬೋಧನೆಗಳನ್ನು ಸಾರುವ ಪುರಾಣ ಹಾಗೂ ಪ್ರವಚನ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಮಾತನಾಡಿ, ಉತ್ತಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ಶ್ರೀಮಂತಿಕೆಯನ್ನು ಭಾರತ ಹೊಂದಿದೆ. ಅನೇಕ ಶರಣರು ತಾವು ನುಡಿದಂತೆ ನಡೆದು ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಅವರ ತತ್ವಾದರ್ಶಗಳ ಪ್ರವಚನ ಹಾಗೂ ಪುರಾಣಗಳು ಸಮಾಜದಲ್ಲಿನ ಸ್ವಾರ್ಥ ಮತ್ತು ಅಹಂಕಾರವನ್ನು ದೂರ ಮಾಡುವಲ್ಲಿ ಸಹಕಾರಿಯಾಗುತ್ತಿವೆ ಎಂದು ಹೇಳಿದರು.

ಹರ್ಲಾಪುರದ ಡಾ. ಕೊಟ್ಟೂರೇಶ್ವರ ಸ್ವಾಮೀಜಿ ಹಾಗೂ ಕುಕನೂರಿನ ಡಾ. ಮಹಾದೇವ ಸ್ವಾಮೀಜಿ ಮಾತನಾಡಿದರು. ಡಾ. ಗಿರಿಜಾ ಹಸಬಿ, ಷಡಕ್ಷರಯ್ಯ ಬದ್ನಿಮಠ ಹಾಗೂ ವೀರಣ್ಣ ಕರಿಯಲ್ಲಪ್ಪನವರ ಸಂಗೀತ ಸೇವೆ ಸಲ್ಲಿಸಿದರು.

ಶಂಕ್ರಯ್ಯ ಹಿರೇಮಠ, ಯುವ ಧುರೀಣ ವೀರಯ್ಯ ಗಂಧದ, ತಾ.ಪಂ. ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಸ್. ಪೂಜಾರ, ನಿವೃತ್ತ ಶಿಕ್ಷಕ ಅಶೋಕ ಬೂದಿಹಾಳ, ಲಕ್ಕುಂಡಿ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ ಅರಹುಣಶಿ, ನಿಂಗಪ್ಪ ಗುಂಜಳ ಹಾಗೂ ಚನ್ನಪ್ಪ ಹೂಗಾರ ವೇದಿಕೆಯಲ್ಲಿದ್ದರು.

ಪ್ರವಚನ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮುತ್ತಪ್ಪ ನೋಟಗಾರ ಸ್ವಾಗತಿಸಿದರು. ಅಂಬರೀಶ ಕರೆಕಲ್ಲ ನಿರೂಪಿಸಿದರು. ಶಿಕ್ಷಕ ಬಸವರಾಜ ಕಣವಿ ವಂದಿಸಿದರು.

ಶರಣರ ತತ್ವಾದರ್ಶಗಳು ಕೇವಲ ಮಾತಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ವಿಶೇಷವಾಗಿ ನೂತನ ದಂಪತಿಗಳು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದಿಂದ ಜೀವನ ನಡೆಸಿದಾಗ ದಾಂಪತ್ಯ ಬದುಕು ಸುಂದರವಾಗುತ್ತದೆ.

– ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು

ಆಹಾರದ ಅರಿವಿಲ್ಲದಿದ್ದರೆ ದೇಶದ ಭವಿಷ್ಯ ಅಭದ್ರ: ಡಾ. ಸಾವಿತ್ರಿ ಬ್ಯಾಡಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿನ ದಿನಗಳಲ್ಲಿ ಆಹಾರ ಸಂಸ್ಕರಣೆ ಹಾಗೂ ಕಲಬೆರಕೆಯಿಂದ ಆಹಾರ ಪದಾರ್ಥಗಳು ವಿಷಕಾರಿಯಾಗುತ್ತಿರುವ ಆತಂಕಕಾರಿ ಬೆಳವಣಿಗೆ ಕಂಡುಬರುತ್ತಿದೆ. ಯುವಜನರಿಗೆ ಆರೋಗ್ಯಕರ ಆಹಾರದ ಕುರಿತು ಸೂಕ್ತ ಅರಿವು ಇಲ್ಲದಿದ್ದರೆ ದೇಶದ ಭವಿಷ್ಯವೇ ಅಭದ್ರವಾಗುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಆಹಾರ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸಾವಿತ್ರಿ ಬ್ಯಾಡಗಿ ಹೇಳಿದರು.

ನಗರದ ಐ.ಪಿ.ಇ.ಟಿ. ಸಂಸ್ಥೆಯ ಆರ್ಯಭಟ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಆಹಾರ ಸಂಸ್ಕರಣೆ ಹಾಗೂ ಕಲಬೆರಕೆ’ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಹಿಂದಿನ ತಲೆಮಾರಿನವರು ಸಾಂಪ್ರದಾಯಿಕ ಹಾಗೂ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದರು. ಆದರೆ ಇಂದು ಜಂಕ್‌ ಫುಡ್ ಮತ್ತು ಫಾಸ್ಟ್‌ ಫುಡ್‌ನ ಕ್ಷಣಿಕ ರುಚಿ ಹಾಗೂ ಆಕರ್ಷಣೆಗೆ ಮರುಳಾಗಿ ಯುವಜನರು ತಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಭವಿಷ್ಯದ ಬಗ್ಗೆ ಎಷ್ಟೇ ಕನಸುಗಳನ್ನು ಕಟ್ಟಿಕೊಂಡರೂ ಅವುಗಳನ್ನು ಸಾಕಾರಗೊಳಿಸಲು ಆರೋಗ್ಯಕರ ದೇಹ ಅಗತ್ಯ. ರುಚಿಗೆ ದಾಸರಾಗದೆ ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಬೇಕು ಎಂದು ಡಾ. ಸಾವಿತ್ರಿ ಬ್ಯಾಡಗಿ ಕಿವಿಮಾತು ಹೇಳಿದರು.

ನವಧಾನ್ಯಗಳು, ತರಕಾರಿಗಳು ಹಾಗೂ ಹಣ್ಣುಗಳನ್ನು ಆಹಾರದಲ್ಲಿ ಹೆಚ್ಚಾಗಿ ಬಳಸಬೇಕು. ಪಾಶ್ಚಾತ್ಯ ಆಹಾರ ಪದ್ಧತಿಯನ್ನು ಅಂಧಾನುಕರಣ ಮಾಡುವ ಬದಲು ಪ್ರೋಟೀನ್, ಕಬ್ಬಿಣಾಂಶ ಹಾಗೂ ವಿಟಮಿನ್‌ಯುಕ್ತ ಸಮತೋಲಿತ ಆಹಾರ ಸೇವಿಸಬೇಕು ಎಂದರು. ಯಾವುದೇ ಆಹಾರ ಪದಾರ್ಥ ಖರೀದಿಸುವ ಮುನ್ನ ಅದರಲ್ಲಿರುವ ಪದಾರ್ಥಗಳು ಹಾಗೂ ಪೋಷಕಾಂಶಗಳ ವಿವರವನ್ನು ಪರಿಶೀಲಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಐ.ಪಿ.ಇ.ಟಿ. ಸಂಸ್ಥೆಯ ಅಧ್ಯಕ್ಷ ಶರಣ್ ರಡ್ಡೇರ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಸಲಹೆ ನೀಡಿದರು. ಜೀವಶಾಸ್ತ್ರ ಉಪನ್ಯಾಸಕಿ ಮಿಸ್ಬಾ ಶಿರಹಟ್ಟಿ ಆಹಾರ ಸಂಸ್ಕರಣೆ ಕುರಿತು ವಿಶೇಷ ಸ್ಲೈಡ್ ಶೋ ಏರ್ಪಡಿಸಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ವಿವರಣಾತ್ಮಕ ಪ್ರದರ್ಶನಗಳನ್ನು ನೀಡಿದರು.

ಕನ್ನಡ ಉಪನ್ಯಾಸಕ ಚಿದಾನಂದಪ್ಪ ಕೊಪ್ಪಳ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ರಾಚಾರ್ಯ ಸಂಗಮೇಶ ಸಿ.ಕೆ., ಉಪಪ್ರಾಚಾರ್ಯ ಪ್ರಶಾಂತಕುಮಾರ ದೊಡ್ಡಮನಿ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.