Home Blog Page 8

ಸಾಲದ ಬಾಧೆಯಿಂದ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆ..!

0

ಹಗರಿಬೊಮ್ಮನಹಳ್ಳಿ: ಸಾಲದ ಬಾಧೆಯಿಂದ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆಲ್ಕುದ್ರಿ 2ನೇ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಎಸ್. ಶರೀಫ್ ವಲಿ (48) ಎಂದು ಗುರುತಿಸಲಾಗಿದೆ.

ಮೃತ ಶರೀಫ್ ವಲಿ ಸುಮಾರು 3 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದು, ನೀರಾವರಿ ನಿರೀಕ್ಷೆಯೊಂದಿಗೆ ಹತ್ತಾರು ಬೆಳೆಗಳನ್ನು ಬೆಳೆದಿದ್ದರು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಪೂರೈಕೆಯಾಗದೇ, ಬೆಳೆದ ಬೆಳೆಗೆ ಸಮರ್ಪಕ ಬೆಲೆ ಸಿಗದ ಹಿನ್ನೆಲೆಯಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು.

ಮೆಕ್ಕೆಜೋಳ, ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದರೂ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಲಭಿಸದೆ ಅವರು ನಿರಂತರ ಚಿಂತೆಯಲ್ಲಿದ್ದರು. ಇದಲ್ಲದೆ, ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು 3 ಲಕ್ಷ ರೂ. ಸಾಲ ಹಾಗೂ ಕೈಗಡ ಸಾಲವೂ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಮನನೊಂದು ಬುಧವಾರ ಸಂಜೆ ತಮ್ಮದೇ ಹೊಲದಲ್ಲಿ ಶರೀಫ್ ವಲಿ ಕ್ರಿಮಿನಾಶಕ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಅವರನ್ನು ತಕ್ಷಣ ಹಗರಿಬೊಮ್ಮನಹಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ರು ಕೂಡ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಈ ಘಟನೆ ಇಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಜೈಲುಗಳಲ್ಲಿ ರಾಜಾತಿಥ್ಯಕ್ಕೆ ಬ್ರೇಕ್: ಸಿಬ್ಬಂದಿ ವರ್ಗಾವಣೆ ಮೂಲಕ ಅಕ್ರಮ ಜಾಲ ಮುರಿಯಲು ಡಿಜಿಪಿ ಅಲೋಕ್ ಕುಮಾರ್ ಪ್ಲಾನ್

0

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಹಾಗೂ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ವರ್ಷಾನುಗಟ್ಟಲೆ ಒಂದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಜೈಲು ವ್ಯವಸ್ಥೆಯನ್ನು ಶುದ್ಧೀಕರಿಸಲು ಇಲಾಖೆ ಮುಂದಾಗಿದೆ.

ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕ್ಕೆ ಮುಂದಾಗಲಾಗಿದೆ. ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಬೆಳವಣಿಗೆಗಳು ಡಿಜಿಪಿ ಅಲೋಕ್ ಕುಮಾರ್ ಅವರ ಗಮನ ಸೆಳೆದಿವೆ.

ಇದೇ ತಿಂಗಳ 9ರಿಂದ ಕೇಂದ್ರ ಕಾರಾಗೃಹ ಕಚೇರಿಯಲ್ಲಿ ಜೈಲು ಸಿಬ್ಬಂದಿಗೆ ಕೌನ್ಸೆಲಿಂಗ್ ನಡೆಸಿ, ಹಂತ ಹಂತವಾಗಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಮುಹೂರ್ತ ನಿಗದಿಪಡಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವರ್ಷಗಳಿಂದ ಒಂದೇ ಕಡೆ ನಿಯೋಜನೆಗೊಂಡಿರುವ ಸಿಬ್ಬಂದಿಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ.

ಇನ್ನು ಬೇರೆ ಜೈಲುಗಳಿಂದ OOD (ಔಟ್ ಆಫ್ ಡಿಪ್ಯುಟೇಶನ್) ಮೇಲೆ ಬಂದಿರುವ ಅಧಿಕಾರಿಗಳಿಗೂ ವರ್ಗಾವಣೆಯ ಭೀತಿ ಎದುರಾಗುವ ಸಾಧ್ಯತೆ ಇದೆ. ಸಿಬ್ಬಂದಿಗಳನ್ನು ನಿಯಮಿತವಾಗಿ ಬದಲಾವಣೆ ಮಾಡುವುದರಿಂದ ಜೈಲುಗಳ ಒಳಗಿನ ಅಕ್ರಮ ಜಾಲವನ್ನು ಮುರಿಯಬಹುದು ಹಾಗೂ ಶಿಸ್ತಿನ ಆಡಳಿತ ವ್ಯವಸ್ಥೆ ಜಾರಿಗೊಳಿಸಬಹುದು ಎಂಬುದು ಡಿಜಿಪಿ ಅವರ ಉದ್ದೇಶವಾಗಿದೆ.

ಅಲೋಕ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಜೈಲುಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳು ಜಾರಿಯಾಗುತ್ತಿದ್ದು, ಈ ಸರಣಿ ವರ್ಗಾವಣೆಗಳು ಜೈಲು ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ನಿರೀಕ್ಷೆ ಮೂಡಿಸಿದೆ.

Bomb Threat: ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ!

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ಬೆಳಕಿಗೆ ಬಂದಿದೆ. ಹಲಸೂರು ಪ್ರದೇಶದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ.

ಜನವರಿ 30ರಂದು ಈ ಬೆದರಿಕೆ ಇ-ಮೇಲ್ ಬಂದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇ-ಮೇಲ್‌ನಲ್ಲಿ 5 ಆರ್ಡಿಎಕ್ಸ್ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಇಟಾಲಿಯನ್ ಕಾನ್ಸುಲೇಟಿನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಅವರು ಹಲಸೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ರಾಯಭಾರಿ ಕಚೇರಿಯ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಇ-ಮೇಲ್ ಕಳುಹಿಸಿದವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕೆ.ಆರ್. ನಗರ ಮಹಿಳೆ ಅಪಹರಣ ಕೇಸ್: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್

0

ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿದೆ.

ವಿಚಾರಣೆ ವೇಳೆ ಹೆಚ್.ಡಿ.ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ತೊಡಗಿಸಿಕೊಂಡಿರುವ ಕಾರಣವನ್ನು ಉಲ್ಲೇಖಿಸಿ ಮನವಿ ಸಲ್ಲಿಸಲಾಯಿತು. ಆದರೆ, ಈ ಮನವಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಈ ಹಿನ್ನೆಲೆಯಲ್ಲಿ, ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.ಈ ಆದೇಶದಿಂದಾಗಿ ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ  ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್ ಪ್ರೆಸ್ ರೈಲು! ತಪ್ಪಿದ ಅನಾಹುತ

0

ಒಡಿಶಾ: ಒಡಿಶಾದ ಜಾಜ್‌ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಸಮೀಪ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ನಡೆದಿದೆ. ಭುವನೇಶ್ವರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಈ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಭದ್ರಕ್‌ನಿಂದ ರಕ್ಷಣಾ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲಾಗಿದೆ. ಅಧಿಕಾರಿಗಳು ಸ್ಥಳದಲ್ಲೇ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳು ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಜೊತೆಗೆ, ಬೋಗಿಗಳಿಗೆ ಕೂಡ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಘಟನೆಯ ಬಳಿಕ ಹಾನಿಗೊಳಗಾದ ರೈಲು ಮಾರ್ಗದಲ್ಲಿ ಮರುಸ್ಥಾಪನಾ ಕಾರ್ಯವನ್ನು ಆರಂಭಿಸಲಾಗಿದ್ದು, ಹಳಿಗಳನ್ನು ತೆರವುಗೊಳಿಸಿ ರೈಲು ಸಂಚಾರವನ್ನು ಶೀಘ್ರ ಪುನರಾರಂಭಿಸಲು ಎಂಜಿನಿಯರಿಂಗ್ ತಂಡಗಳನ್ನು ನಿಯೋಜಿಸಲಾಗಿದೆ. ರೈಲ್ವೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ರೈಲು ಹಳಿ ತಪ್ಪಲು ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮರುಸ್ಥಾಪನಾ ಕಾರ್ಯಗಳು ಪೂರ್ಣಗೊಂಡು ಸಂಚಾರ ಸಾಮಾನ್ಯ ಸ್ಥಿತಿಗೆ ಬಂದ ಬಳಿಕ, ಈ ಕುರಿತು ವಿವರವಾದ ತನಿಖೆ ನಡೆಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

Cauvery Water: ಮೆಟ್ರೋ ಆಯ್ತು ಈಗ ಕಾವೇರಿ ನೀರಿನ ದರವೂ ಏರಿಕೆ!

0

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಕಾವೇರಿ ನೀರಿನ ದರವೂ ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಶೀಘ್ರವೇ ನೀರಿನ ದರವನ್ನು ಶೇ.3ರಷ್ಟು ಹೆಚ್ಚಿಸುವ ಕುರಿತು ಚಿಂತನೆ ನಡೆಸುತ್ತಿದೆ.

ಪ್ರತಿ ವರ್ಷ ನೀರಿನ ದರವನ್ನು ಪರಿಷ್ಕರಿಸಬೇಕು ಎಂದು ಆಡಳಿತ ಸುಧಾರಣಾ ಸಮಿತಿ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ, ಈ ಶಿಫಾರಸಿನ ಅನುಸಾರವಾಗಿ ನೀರಿನ ದರ ಏರಿಕೆಗೆ BWSSB ಮುಂದಾಗಿದೆ. ಎಲ್ಲವೂ ಯೋಜನೆಯಂತೆ ನಡೆದರೆ, ಏಪ್ರಿಲ್ 1ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ.

ಕಳೆದ ವರ್ಷದ ಏಪ್ರಿಲ್‌ನಲ್ಲಿ ಗೃಹ ಬಳಕೆದಾರರಿಗೆ ಪ್ರತಿ ಲೀಟರ್‌ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆಯವರೆಗೆ ನೀರಿನ ದರ ಹೆಚ್ಚಳ ಮಾಡಲಾಗಿತ್ತು. ವಾಣಿಜ್ಯ ಬಳಕೆಗೆ ಪ್ರತಿ ಲೀಟರ್‌ಗೆ ಗರಿಷ್ಠ 1.90 ಪೈಸೆಯವರೆಗೆ ದರ ಏರಿಕೆ ಜಾರಿಗೆ ಬಂದಿತ್ತು.

ಈ ಬಾರಿ ಕೂಡ ಶೇ.3ರಷ್ಟು ದರ ಏರಿಕೆ ಜಾರಿಯಾದರೆ, ಗೃಹ ಹಾಗೂ ವಾಣಿಜ್ಯ ಬಳಕೆದಾರರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ನೀರಿನ ದರ ಏರಿಕೆ ಕುರಿತು ಅಂತಿಮ ನಿರ್ಧಾರವನ್ನು BWSSB ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

Gold Silver Price: ಏರಿದಷ್ಟೇ ವೇಗವಾಗಿ ಇಳಿದ ಚಿನ್ನ ಮತ್ತು ಬೆಳ್ಳಿ ಬೆಲೆಗಳು! ಇಲ್ಲಿದೆ ಲೇಟೆಸ್ಟ್ ದರ

0

ಬೆಂಗಳೂರು: ಬುಧವಾರ ಚಿನ್ನಬೆಳ್ಳಿ ದರಗಳಲ್ಲಿ ಭಾರೀ ಏರಿಕೆ ಕಂಡು ಜನರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಗುರುವಾರ ದರಗಳಲ್ಲಿ ದೊಡ್ಡ ಮಟ್ಟದ ಇಳಿಕೆ ದಾಖಲಾಗಿದೆ. ಚಿನ್ನದ ಬೆಲೆ ಒಂದೇ ದಿನದಲ್ಲಿ 10 ಗ್ರಾಂಗೆ 5,020 ರೂಪಾಯಿ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯೂ ಕುಸಿತ ಕಂಡಿದೆ.

ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 502 ರೂಪಾಯಿ ಇಳಿಕೆಯಾಗಿದ್ದು, ಇದೀಗ 1 ಗ್ರಾಂ ಚಿನ್ನದ ಬೆಲೆ 15,442 ರೂಪಾಯಿಗೆ ತಲುಪಿದೆ. ಇದರಿಂದ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,54,420 ರೂಪಾಯಿಯಾಗಿದೆ.

ಅದೇ ರೀತಿ, 22 ಕ್ಯಾರೆಟ್ ಚಿನ್ನದ ಬೆಲೆಯೂ ಇಳಿಕೆ ಕಂಡಿದ್ದು, ಪ್ರತಿ ಗ್ರಾಂಗೆ 460 ರೂಪಾಯಿ ಹಾಗೂ 10 ಗ್ರಾಂಗೆ 4,600 ರೂಪಾಯಿ ಕಡಿಮೆಯಾಗಿದೆ. ಪರಿಣಾಮವಾಗಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,41,550 ರೂಪಾಯಿಗೆ ಇಳಿದಿದೆ.

ಬೆಂಗಳೂರು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ದರ 1 ಗ್ರಾಂಗೆ 15,442 ರೂಪಾಯಿ ಇದ್ದು, 10 ಗ್ರಾಂಗೆ 1,54,420 ರೂಪಾಯಿ ಇದೆ. ದರದಲ್ಲಿ ಜಿಎಸ್ಟಿ ಸೇರಿಲ್ಲ. ಹೀಗಾಗಿ ಆಭರಣ ಮಳಿಗೆಗಳಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಇರಲಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದ್ದು, ಪ್ರತಿ ಗ್ರಾಂಗೆ 20 ರೂಪಾಯಿ ಇಳಿಕೆಯಾಗಿ 300 ರೂಪಾಯಿಯಾಗಿದೆ. ಇದರೊಂದಿಗೆ 1 ಕೆಜಿ ಬೆಳ್ಳಿ ಬೆಲೆ 3,00,000 ರೂಪಾಯಿಗೆ ಇಳಿದಿದೆ.

T20 World Cup: ಟಿ20 ವಿಶ್ವಕಪ್ʼ​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್..!

0

ನವದೆಹಲಿ: ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡದ ಆರಂಭಿಕ ಬ್ಯಾಟರ್‌ಗಳು ಯಾರು ಎಂಬ ಪ್ರಶ್ನೆಗೆ ಇದೀಗ ಸ್ಪಷ್ಟ ಉತ್ತರ ದೊರೆತಿದೆ. ವಿಶ್ವಕಪ್ ಆರಂಭಕ್ಕೆ ಕೇವಲ ಎರಡು ದಿನಗಳು ಬಾಕಿಯಿರುವಾಗಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಆರಂಭಿಕ ಜೋಡಿಯನ್ನು ಘೋಷಿಸಿದ್ದಾರೆ.

ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಅಭ್ಯಾಸ ಪಂದ್ಯದಲ್ಲೂ ಈ ಇಬ್ಬರೂ ತಂಡಕ್ಕೆ ಆರಂಭಿಕರಾಗಿ ಕಣಕ್ಕಿಳಿದರು.

ಈ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ 53 ರನ್‌ಗಳ ಭರ್ಜರಿ ಇನಿಂಗ್ಸ್ ಆಡಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡರು. ಇಶಾನ್ ಅವರ ಈ ಫಾರ್ಮ್ ವಿಶ್ವಕಪ್‌ನಲ್ಲಿ ಅವರಿಗೆ ಆರಂಭಿಕ ಸ್ಥಾನ ಖಚಿತವಾಗುವಂತೆ ಮಾಡಿದೆ.

ಇದರಿಂದಾಗಿ ಈ ಬಾರಿಯ ವಿಶ್ವಕಪ್‌ನಲ್ಲೂ ಸಂಜು ಸ್ಯಾಮ್ಸನ್ ಬೆಂಚ್ ಕಾಯುವುದು ಬಹುತೇಕ ಖಚಿತವಾಗಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆರಂಭಿಕನಾಗಿ ಆಡಿದ್ದ ಸ್ಯಾಮ್ಸನ್ ಒಟ್ಟು ಕೇವಲ 46 ರನ್‌ಗಳನ್ನು ಮಾತ್ರ ಗಳಿಸಿದ್ದರು.

ಅದೇ ವೇಳೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಕಿಶನ್ ನಾಲ್ಕು ಪಂದ್ಯಗಳಲ್ಲಿ ಕ್ರಮವಾಗಿ 8, 76, 28 ಮತ್ತು 103 ರನ್‌ಗಳ ಇನಿಂಗ್ಸ್ ಆಡಿದ್ದರು. ಇದೀಗ ನ್ಯೂಝಿಲೆಂಡ್ ಸರಣಿಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ಮೂರನೇ ಕ್ರಮಾಂಕಕ್ಕೆ ಮರಳಿದ್ದಾರೆ.

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಉತ್ತಮ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ಅವರನ್ನು ಅಭಿಷೇಕ್ ಶರ್ಮಾ ಜೊತೆಗೆ ಆರಂಭಿಕರಾಗಿ ಕಣಕ್ಕಿಳಿಸಲು ತಂಡ ನಿರ್ಧರಿಸಿದೆ. ಫೆಬ್ರವರಿ 7ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಈ ಜೋಡಿ ಇನಿಂಗ್ಸ್ ಆರಂಭಿಸುವುದು ಖಚಿತವಾಗಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಹಾಸನ: ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ರೈತ ಆತ್ಮಹತ್ಯೆ

ಹಾಸನ: ಕೊತ್ತನಘಟ್ಟ ಗ್ರಾಮದಲ್ಲಿ ತೀವ್ರ ಮಾನಸಿಕ ಒತ್ತಡದಿಂದ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಗ್ರಾಮದ ಜನರನ್ನು ಭಯಭೀತನಾಗಿಸಿದೆ. ಯೋಗೇಶ್ (50), ಚನ್ನರಾಯಪಟ್ಟಣದ ಫೈನಾನ್ಸ್ ಸಂಸ್ಥೆಯಿಂದ 7 ಲಕ್ಷ ರೂ. ಸಾಲ ಪಡೆದಿದ್ದರು, ಪ್ರತಿದಿನವೂ ಹಣಕಾಸಿನ ಒತ್ತಡದಲ್ಲಿದ್ದರು. ಕಳೆದ ಎರಡು ತಿಂಗಳ ಕಂತನ್ನು ಪಾವತಿಸದ ಕಾರಣ, ಫೆ.4 ರ ರಾತ್ರಿ ಫೈನಾನ್ಸ್ ಸಿಬ್ಬಂದಿಗಳು ಯೋಗೇಶ್ ಮನೆಗೆ ಬಂದು “ಮನೆ ಸೀಜ್ ಮಾಡುತ್ತೇವೆ” ಎಂದು ಬೆದರಿಸಿದರು.

ಈ ನಿರಂತರ ಭೀತಿಯಿಂದ ಯೋಗೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು. ಅವರ ಕುಟುಂಬ ಮತ್ತು ಗ್ರಾಮಸ್ಥರು ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯೋಗೇಶ್‌ ಜೀವನದಿಂದ ಹಿಂತಿರುಗಲು ಬಾಧೆಯಾದ ಈ ಘಟನೆ, ಗ್ರಾಮದಲ್ಲಿ ಫೈನಾನ್ಸ್ ಸಂಸ್ಥೆಗಳ ಕಠಿಣ ನೀತಿ ಮತ್ತು ಸಾಲದ ಬಡ್ಡಿದಾರರ ಹಿಂಸಾತ್ಮಕ ವರ್ತನೆಗೆ ಎಚ್ಚರಿಕೆ ಸೂಚಿಸಿದೆ.

ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾನೂನು ಕ್ರಮ ಕೈಗೊಳ್ಳಲು ತ್ವರಿತ ಕ್ರಮ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ, ರೈತರಿಗೆ ಸುರಕ್ಷಿತ ಹಣಕಾಸಿನ ಮಾರ್ಗದರ್ಶನದ ಅಗತ್ಯವನ್ನು ಮತ್ತೊಮ್ಮೆ ತಿಳಿಸುತ್ತದೆ.

ಗ್ರಾಮಸ್ಥರು ಕಠಿಣ ಕ್ರಮಕ್ಕಾಗಿ ಒತ್ತಾಯಿಸುತ್ತಿರುವುದರಿಂದ, ಸ್ಥಳೀಯ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳ ಗಮನ ಈ ಪ್ರಕರಣಕ್ಕೆ ಸೆಳೆಯಲಾಗಿದೆ.

ಹಗರಿ ಹಳ್ಳದಲ್ಲಿ ಭಾರೀ ಗಾತ್ರದ ಮೊಸಳೆ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು!

0

ಹಗರಿಬೊಮ್ಮನಹಳ್ಳಿ: ತಾಲೂಕಿನ ಬ್ಯಾಲಾಳ ಸಮೀಪದ ಹಗರಿ ಹಳ್ಳದಲ್ಲಿ ಭಾರೀ ಗಾತ್ರದ ಮೊಸಳೆವೊಂದು ಪ್ರತ್ಯಕ್ಷವಾಗಿರುವ ಘಟನೆ ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.

ಕಳೆದ ಮೂರು ತಿಂಗಳಿಂದ ಹಗರಿ ಹಳ್ಳದಲ್ಲಿ ನಿರಂತರವಾಗಿ ನೀರು ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರತಿನಿತ್ಯ ಮೊಸಳೆ ಹಗರಿ ಹಳ್ಳದ ದಂಡೆಯಲ್ಲಿ ಬಂದು ಮಲಗುತ್ತಿರುವುದು ಕುರಿಗಾಹಿಗಳು, ದನ ಕಾಯುವವರು ಹಾಗೂ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಕುರಿ ಮತ್ತು ದನಗಳನ್ನು ಮೇಯಿಸಲು ತೆರಳುವ ವೇಳೆ ಮೊಸಳೆ ಕಾಣಿಸುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಕ್ಷಣ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಕುರಿಗಾಹಿಗಳು ಮತ್ತು ದನ ಕಾಯುವವರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಭದ್ರತೆ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

error: Content is protected !!