Home Blog Page 9

ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರ ಮರುವಿಂಗಡಣೆ ಅಸಲಿ ಉದ್ದೇಶ: ಸೋನಿಯಾ ಗಾಂಧಿ ಆರೋಪ

0

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಮಸೂದೆಗಳ ಹಿಂದಿರುವ ನಿಜವಾದ ಉದ್ದೇಶ ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರಗಳ ಮರುವಿಂಗಡಣೆ ಎಂಬುದಾಗಿ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪವು ಸಂವಿಧಾನದ ಮೇಲೆ ದಾಳಿ ಸಮಾನವಾಗಿದ್ದು, ಅತ್ಯಂತ ಅಪಾಯಕಾರಿ ಎಂದು ಅವರು ಟೀಕಿಸಿದ್ದಾರೆ. ಈ ಕುರಿತು ಅವರು ಬರೆದ ಲೇಖನವನ್ನು ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಅದನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೋಕಸಭೆಯ ಬಲವರ್ಧನೆಗೆ ಸಂಬಂಧಿಸಿದ ಯಾವುದೇ ಗಡಿ ನಿರ್ಣಯವು ಗಣಿತದ ಆಧಾರದಲ್ಲಷ್ಟೇ ಅಲ್ಲ, ರಾಜಕೀಯ ಸಮತೋಲನದ ದೃಷ್ಟಿಯಿಂದಲೂ ಸಮಾನವಾಗಿರಬೇಕು ಎಂದು ಒತ್ತಿ ಹೇಳಿದ್ದಾರೆ.

ಇದೇ ವೇಳೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ತೀವ್ರಗೊಂಡಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಬಯಸಿರುವ ಮಸೂದೆಗಳಿಗೆ ಬೆಂಬಲ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳಿಗೆ ಮನವಿ ಮಾಡುತ್ತಿರುವುದನ್ನು ಅವರು ಉಲ್ಲೇಖಿಸಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ಸಂಸತ್ತಿನಲ್ಲಿ ‘ನಾರಿ ಶಕ್ತಿ ವಂದನ ಅಧಿನಿಯಮ–2023’ನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಈ ಕಾಯ್ದೆಯ ಮೂಲಕ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸಲು ಸಂವಿಧಾನದ 334ಎ ವಿಧಿ ಸೇರಿಸಲಾಗಿದೆ. ಆದರೆ ಈ ಮೀಸಲಾತಿ ಮುಂದಿನ ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆಯ ನಂತರವೇ ಜಾರಿಗೆ ಬರಲಿದೆ.

ವಿಪಕ್ಷಗಳು ಈ ಷರತ್ತನ್ನು ಕೇಳಿರಲಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 2024ರ ಲೋಕಸಭಾ ಚುನಾವಣೆಯಿಂದಲೇ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದರು. ಆದರೆ ಸರ್ಕಾರ ಅದನ್ನು ಒಪ್ಪಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈಗ 2029ರಿಂದ ಮಹಿಳಾ ಮೀಸಲಾತಿ ಜಾರಿಗೆ ತರಲು 334ಎ ವಿಧಿಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ. “ಪ್ರಧಾನಿ ಯೂ-ಟರ್ನ್ ತೆಗೆದುಕೊಳ್ಳಲು 30 ತಿಂಗಳು ಏಕೆ ಬೇಕಾಯಿತು? ವಿಶೇಷ ಅಧಿವೇಶನ ಕರೆಯಲು ಇನ್ನೂ ಕೆಲವು ವಾರ ಕಾಯಬಹುದಿರಲಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್ 29ರಂದು ಪಶ್ಚಿಮ ಬಂಗಾಳದ ಕೊನೆಯ ಹಂತದ ಮತದಾನ ಮುಗಿದ ಬಳಿಕ ಹೊಸ ಪ್ರಸ್ತಾಪಗಳ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ವಿಪಕ್ಷ ನಾಯಕರು ಮೂರು ಬಾರಿ ಪತ್ರ ಬರೆದಿದ್ದರೂ, ಸರ್ಕಾರ ಅದನ್ನು ನಿರಾಕರಿಸಿದೆ ಎಂದು ತಿಳಿಸಿದ್ದಾರೆ.

ಇದರ ಬದಲು ಪ್ರಧಾನಿ ಸಾರ್ವಜನಿಕ ಮನವಿ ಹಾಗೂ ಸಭೆಗಳಲ್ಲಿ ನಿರತರಾಗಿದ್ದು, ಇದು ಏಕಪಕ್ಷೀಯ ನಿರ್ಧಾರಗಳ ಸಂಕೇತವಾಗಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ಇರಾನ್ ಗೆ ದೊಡ್ಡ ಹೊಡೆತ: ಇಂದಿನಿಂದ ಬಂದರುಗಳಿಗೆ ದಿಗ್ಬಂಧನ ವಿಧಿಸಿದ ಅಮೆರಿಕ!

0

ಅಮೆರಿಕ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆಯ ಮೇರೆಗೆ ಇರಾನ್ ಬಂದರುಗಳಿಗೆ ದಿಗ್ಬಂಧನ ಹೇರಲಾಗುತ್ತಿದೆ ಎಂದು ಅಮೆರಿಕ ಸೇನೆ ಘೋಷಿಸಿದೆ. ಈ ನಿರ್ಧಾರದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ.

ಯುನೈಟೆಡ್ ಸ್ಟೇಟ್ಸ್ ಸೆಂಟ್ರಲ್ ಕಮಾಂಡ್ ನೀಡಿದ ಮಾಹಿತಿ ಪ್ರಕಾರ, ಈ ನಿರ್ಬಂಧವು ಇರಾನ್‌ನ ಬಂದರುಗಳು, ಕರಾವಳಿ ಪ್ರದೇಶಗಳು ಹಾಗೂ ಅದರ ಸುತ್ತಮುತ್ತ ಸಂಚರಿಸುವ ಎಲ್ಲಾ ದೇಶಗಳ ಹಡಗುಗಳಿಗೆ ಅನ್ವಯವಾಗುತ್ತದೆ.

ಎಕ್ಸ್ (X) ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಏಪ್ರಿಲ್ 13ರಂದು ಬೆಳಗ್ಗೆ 10 ಗಂಟೆಯಿಂದ ಇರಾನ್ ಬಂದರುಗಳಿಗೆ ಪ್ರವೇಶಿಸುವ ಮತ್ತು ನಿರ್ಗಮಿಸುವ ಎಲ್ಲಾ ಹಡಗುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತದೆ ಎಂದು ತಿಳಿಸಿದೆ.

ಅರೇಬಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯಲ್ಲಿರುವ ಇರಾನ್ ಬಂದರುಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲ ದೇಶಗಳ ಹಡಗುಗಳಿಗೆ ಸಮಾನವಾಗಿ ನಿರ್ಬಂಧ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದೆ. ಆದರೆ, ಹಾರ್ಮುಜ್ ಜಲಸಂಧಿಯಿಂದ ಇರಾನಿನ ಹೊರಗಿನ ಬಂದರುಗಳಿಗೆ ಸಾಗುವ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದಲ್ಲದೆ, ಒಮಾನ್ ಕೊಲ್ಲಿ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಮುತ್ತ ಕಾರ್ಯನಿರ್ವಹಿಸುವ ನೌಕಾಪಡೆಯವರು ಮ್ಯಾರಿನರ್‌ಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಬ್ರಿಡ್ಜ್-ಟು-ಬ್ರಿಡ್ಜ್ ಚಾನೆಲ್ 16 ಮೂಲಕ ಅಮೆರಿಕ ನೌಕಾಪಡೆಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.

ಠಾಣೆಯಲ್ಲೇ ಭ್ರಷ್ಟಾಚಾರ ದಂಧೆ? ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಸಿಬ್ಬಂದಿಗಳ ಪತ್ರ! ಪಿಎಸ್‌ಐ ವಿರುದ್ಧ ಆರೋಪ

ವಿಜಯಪುರ:  ನಗರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಸೀತಾರಾಮ್ ಲಮಾಣಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ.

ಪತ್ರದಲ್ಲಿ, ಪಿಎಸ್‌ಐ ಲಮಾಣಿ ಭ್ರಷ್ಟಾಚಾರ ಹಾಗೂ ಕಿರುಕುಳದಿಂದ ಸಿಬ್ಬಂದಿಗೆ ತೀವ್ರ ಮಾನಸಿಕ ಒತ್ತಡ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆದರ್ಶನಗರ ಠಾಣೆಯಿಂದ ತಿಕೋಟ ಠಾಣೆಗೆ ವರ್ಗಾವಣೆಗಾಗಿ ಹಣ ಸಂಗ್ರಹಿಸಲು ಅವರು ವಿಪರೀತವಾಗಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್ ಹಾಗೂ ದೂರುದಾರರಿಂದ ₹10,000 ರಿಂದ ₹1 ಲಕ್ಷದವರೆಗೆ ಹಣ ವಸೂಲಿ ಮಾಡುವಂತೆ ಸಿಬ್ಬಂದಿಗೆ ಒತ್ತಡ ಹೇರುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕಾಗಿ ‘5.0’ ಎಂದರೆ ₹50,000 ಎಂಬ ಕೋಡ್ ಬಳಸಿ ಹಣ ವಸೂಲಿ ಮಾಡಲು ಸೂಚಿಸುತ್ತಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್, ಮಾವಾ (ತಂಬಾಕು) ಹಾಗೂ ವೇಶ್ಯಾವಾಟಿಕೆ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಿಂದ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ, ಗೃಹಸಚಿವ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಪ್ರಕರಣವು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ರಾಜ್ಯ ರಾಜಕೀಯದಲ್ಲಿ ಹೊಸ ತಿರುವು: ನನಗೂ ಸಚಿವ ಸ್ಥಾನ ಬೇಕು ಎಂದ ರೋಣ ಶಾಸಕ! ಜಿ.ಎಸ್ ಪಾಟೀಲ್ ಹೇಳಿದ್ದೇನು?

0

ಗದಗ/ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದೇನೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿರುವ ನನಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ” ಎಂದು ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟ ಪುನರ್‌ರಚನೆ ಮಾಡುವ ಭರವಸೆ ನೀಡಲಾಗಿತ್ತು ಎಂದು ಅವರು ನೆನಪಿಸಿದರು. ಈಗಾಗಲೇ ಆ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಹಳೆಯ ಸಚಿವರಿಗೆ ಸಂಘಟನೆ ಜವಾಬ್ದಾರಿ ನೀಡಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಬೆಳವಣಿಗೆಯ ಭಾಗವಾಗಿ, ಜಿ.ಎಸ್. ಪಾಟೀಲ್ ಸೇರಿದಂತೆ ಸುಮಾರು 25ರಿಂದ 35 ಮಂದಿ ಹಿರಿಯ ಶಾಸಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮಂಡಿಸಲು ತೀರ್ಮಾನಿಸಿದ್ದಾರೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಸಚಿವ ಸ್ಥಾನ ಹಂಚಿಕೆಯಲ್ಲಿ ಸಮತೋಲನ ಸಾಧಿಸುವುದು ಕಾಂಗ್ರೆಸ್ ನಾಯಕತ್ವಕ್ಕೆ ಸವಾಲಾಗಿದ್ದು, ಪ್ರಾದೇಶಿಕ, ಜಾತಿ ಹಾಗೂ ಅನುಭವದ ಆಧಾರದ ಮೇಲೆ ಒತ್ತಡಗಳು ಹೆಚ್ಚಾಗುತ್ತಿವೆ. ಹಿರಿಯ ಶಾಸಕರು ಒಟ್ಟಾಗಿ ಧ್ವನಿ ಎತ್ತಿರುವುದು ಮುಂದಿನ ದಿನಗಳಲ್ಲಿ ಸಂಪುಟ ಪುನರ್‌ರಚನೆಗೆ ವೇಗ ನೀಡುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸ್ಥಾನಗಳ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗುತ್ತಿದ್ದು, ಈಗ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಿರಿಯ ಶಾಸಕರು ತಮ್ಮ ಹಕ್ಕಿಗಾಗಿ ಮುಂದಾಗಿದ್ದಾರೆ.

ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಐಷಾರಾಮಿ ಕಾರುಗಳು!

ಬೆಂಗಳೂರು:  ನಗರದ ಬೊಮ್ಮನಹಳ್ಳಿ ಸಮೀಪದ ಹೊಂಗಸಂದ್ರ ಪ್ರದೇಶದಲ್ಲಿರುವ ಕಾರು ಗ್ಯಾರೇಜ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವು ಐಷರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಗ್ಯಾರೇಜ್‌ನಲ್ಲಿ ನಿಲುಗಡೆ ಮಾಡಲಾಗಿದ್ದ BMW ಸೇರಿ ನಾಲ್ಕು–ಐದು ಕಾರುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಹೊತ್ತಿಕೊಂಡ ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಕವಾಗಿ ಹರಡಿದ ಪರಿಣಾಮ ವಾಹನಗಳು ಸಂಪೂರ್ಣವಾಗಿ ಕರಕಲಾಗಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕೆಲಕಾಲದ ಪರಿಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು.

ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಈ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೇಸಿಗೆಯಲ್ಲಿ ಬಿಸಿ ನೀರಾ ಅಥವಾ ತಣ್ಣೀರು? ಆರೋಗ್ಯಕ್ಕೆ ಯಾವುದು ಉತ್ತಮ ಎಂಬುದನ್ನು ತಿಳಿದುಕೊಳ್ಳಿ

0

ಬೇಸಿಗೆಯ ಉಷ್ಣತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಹ ಹೈಡ್ರೇಟ್ ಆಗಿರುವುದು ಅತ್ಯಂತ ಮುಖ್ಯವಾಗಿದೆ. ಆದರೆ ಈ ಸಮಯದಲ್ಲಿ ಯಾವ ರೀತಿಯ ನೀರು ಕುಡಿಯಬೇಕು ಎಂಬುದರ ಬಗ್ಗೆ ಆರೋಗ್ಯ ತಜ್ಞರು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

ತಜ್ಞರ ಪ್ರಕಾರ, ತಣ್ಣೀರು ತಕ್ಷಣ ತಂಪು ನೀಡಿದರೂ ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ವಿಶೇಷವಾಗಿ ಊಟದ ನಂತರ ತಣ್ಣೀರು ಕುಡಿದರೆ ಆಹಾರ ಸರಿಯಾಗಿ ಜೀರ್ಣವಾಗದೆ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಇದಕ್ಕೆ ವಿರುದ್ಧವಾಗಿ, ಬಿಸಿ ಅಥವಾ ಉಗುರು ಬೆಚ್ಚಗಿನ ನೀರು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಿದೆ. ಇದು ರಕ್ತಸಂಚಾರವನ್ನು ಹೆಚ್ಚಿಸಿ ದೇಹದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಬೆಚ್ಚಗಿನ ನೀರು ಕುಡಿಯುವುದು ಮೆಟಾಬಾಲಿಸಂ ಹೆಚ್ಚಿಸಲು ಸಹಕಾರಿ ಎಂದು ತಜ್ಞರು ತಿಳಿಸಿದ್ದಾರೆ.

ಆದರೆ, ಬೇಸಿಗೆಯಲ್ಲಿ ತುಂಬಾ ಬಿಸಿ ಅಥವಾ ತುಂಬಾ ತಣ್ಣೀರು ಬದಲು ಸಾಮಾನ್ಯ ತಾಪಮಾನದಲ್ಲಿರುವ ನೀರನ್ನು ಕುಡಿಯುವುದು ಅತ್ಯುತ್ತಮ ಆಯ್ಕೆ ಎಂದು ತಜ್ಞರು ಹೇಳಿದ್ದಾರೆ. ಇದು ದೇಹದ ಸಮತೋಲನವನ್ನು ಕಾಪಾಡಿ ಜೀರ್ಣಕ್ರಿಯೆಯ ಮೇಲೂ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ.

ದೇಹದಲ್ಲಿ ನೀರಿನ ಕೊರತೆ ತಪ್ಪಿಸಲು ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರು ಕುಡಿಯಬೇಕು. ಹೆಚ್ಚು ಬೆವರು ಬರುವವರು ಇನ್ನಷ್ಟು ನೀರು ಸೇವಿಸುವುದು ಅಗತ್ಯ. ಜೊತೆಗೆ ಹಣ್ಣಿನ ರಸ, ಜ್ಯೂಸ್ ಹಾಗೂ ಎಳನೀರು ಸೇವಿಸುವುದೂ ಆರೋಗ್ಯಕ್ಕೆ ಲಾಭಕರವಾಗಿದೆ.

ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು: ವಿವಾಹಿತ ಮಹಿಳೆ ವಿರುದ್ಧ ಆರೋಪ!

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಜಿಮ್ ಟ್ರೈನರ್ ಆಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಬ್ಲಾಕ್‌ಮೇಲ್ ಮತ್ತು ಕಿರುಕುಳ ತಾಳಲಾರದೆ ದಿಲೀಪ್ (28) ಎಂಬ ಯುವಕ ನೇಣಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ವಿವಾಹಿತ ಮಹಿಳೆಯೊಂದಿಗೆ ಪರಿಚಯ ಬೆಳೆದು, ಬಳಿಕ ಅದು ಸಂಬಂಧಕ್ಕೆ ತಿರುಗಿತ್ತು ಎನ್ನಲಾಗಿದೆ. ಈ ವಿಚಾರ ಒಂದು ವರ್ಷದ ಹಿಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಬಳಿಕ ಸಮಾಧಾನಗೊಂಡಿತ್ತು ಎಂದು ತಿಳಿದುಬಂದಿದೆ.

ಆದರೆ, ಬಳಿಕವೂ ಮಹಿಳೆ ದಿಲೀಪ್ ಅವರನ್ನು ಬ್ಲಾಕ್‌ಮೇಲ್ ಮಾಡುತ್ತಾ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮೃತನ ತಂದೆ ರಮೇಶ್ ಗಂಭೀರ ಆರೋಪ ಮಾಡಿದ್ದು, “ನನ್ನ ಮಗನ ಹೆಸರಿನಲ್ಲಿದ್ದ ಮನೆಯನ್ನು ತನ್ನ ಮಗನ ಹೆಸರಿಗೆ ಬರೆಸುವಂತೆ ಒತ್ತಾಯಿಸುತ್ತಿದ್ದಳು. ಈ ಕಾರಣದಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದೂರಿದ್ದಾರೆ.

ಘಟನೆಗೆ ಮುನ್ನ ದಿಲೀಪ್ ಮಹಿಳೆಗೆ ವಿಡಿಯೋ ಕಾಲ್ ಮಾಡಿ ತನ್ನ ನಿರ್ಧಾರ ತಿಳಿಸಿದ್ದಾನೆ ಎನ್ನಲಾಗಿದೆ. ಈ ವಿಷಯ ತಿಳಿದು ಮಹಿಳೆ ದಿಲೀಪ್ ಸಹೋದರಿಗೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ದಿಲೀಪ್ ನೇಣಿನ ಕುಣಿಕೆಯಲ್ಲಿ ತೂಗುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣದ ಮಾಹಿತಿ ಪಡೆದ ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Rain Alert: ರಾಜ್ಯದಲ್ಲಿ ಇಂದು-ನಾಳೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು:  ರಾಜ್ಯದ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ನಡುವೆಯೇ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೆಳಗಾವಿ, ಧಾರವಾಡ, ಮೈಸೂರು ಮತ್ತು ಗದಗ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಪ್ರದೇಶಗಳಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದ್ದು, ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಮಳೆಯ ಸಮಯದಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೂ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ ಮಟ್ಟದಲ್ಲಿರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸುಮಾರು 30% ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

IPL 2026: ಸಾಲ್ಟ್–ಕೊಹ್ಲಿ–ಪಾಟಿದಾರ್ ಅಬ್ಬರ; ಮುಂಬೈ ವಿರುದ್ಧ ಆರ್‌ಸಿಬಿಗೆ 18 ರನ್‌ಗಳ ಜಯ!

0

ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ಪಂದ್ಯ ಅಭಿಮಾನಿಗಳಿಗೆ ರಸದೌತಣ ನೀಡಿತು.

ಉಭಯ ತಂಡಗಳ ಆಕ್ರಮಣಕಾರಿ ಬ್ಯಾಟಿಂಗ್ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್ ಪೇರಿಸಿತು. ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಮೊದಲ ವಿಕೆಟ್‌ಗೆ 120 ರನ್‌ಗಳ ಭರ್ಜರಿ ಜೊತೆಯಾಟ ನೀಡಿದರು. ಸಾಲ್ಟ್ 36 ಎಸೆತಗಳಲ್ಲಿ 78 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಕೊಹ್ಲಿ 50 ರನ್‌ಗಳ ಅರ್ಧಶತಕ ಬಾರಿಸಿದರು.

ಬಳಿಕ ನಾಯಕ ರಜತ್ ಪಾಟಿದಾರ್ ಕೇವಲ 20 ಎಸೆತಗಳಲ್ಲಿ 53 ರನ್‌ಗಳ ಸಿಡಿಲಾಟ ನಡೆಸಿ ಮುಂಬೈ ಬೌಲರ್‌ಗಳನ್ನು ಕಾಡಿದರು. ಅಂತಿಮವಾಗಿ ಟಿಮ್ ಡೇವಿಡ್ ಅಜೇಯ 34 ರನ್‌ಗಳ ಕೊಡುಗೆ ನೀಡಿ ತಂಡದ ಮೊತ್ತವನ್ನು 240ಕ್ಕೆ ಏರಿಸಿದರು.

241 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭ ಪಡೆದರೂ, ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ನಿವೃತ್ತರಾಗಿದ್ದು ತಂಡಕ್ಕೆ ಹಿನ್ನಡೆಯಾಯಿತು. ರಯಾನ್ ರಿಕಲ್ಟನ್ 37 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 33 ರನ್‌ಗಳ ಕೊಡುಗೆ ನೀಡಿದರು.

ನಂತರ ಹಾರ್ದಿಕ್ ಪಾಂಡ್ಯ 40 ರನ್‌ಗಳ ಸ್ಫೋಟಕ ಆಟವಾಡಿದರೂ, ನಿರಂತರ ವಿಕೆಟ್ ನಷ್ಟದಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿತು. ಕೊನೆಯಲ್ಲಿ ಶೆರ್ಫೇನ್ ರುದರ್ಫೋರ್ಡ್ 31 ಎಸೆತಗಳಲ್ಲಿ ಅಜೇಯ 71 ರನ್‌ಗಳ ಹೋರಾಟ ಪ್ರದರ್ಶಿಸಿದರೂ, ತಂಡವನ್ನು ಗೆಲುವಿನ ದಡ ತಲುಪಿಸಲು ಸಾಧ್ಯವಾಗಲಿಲ್ಲ.

ಇದರೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ 18 ರನ್‌ಗಳ ಅಂತರದಲ್ಲಿ ಸೋಲು ಕಂಡಿತು. ಆರ್‌ಸಿಬಿ ಈ ಗೆಲುವಿನೊಂದಿಗೆ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.

ಗುರಪ್ಪನಪಾಳ್ಯದಲ್ಲಿ ಕಸದ ಸಮಸ್ಯೆ: ಜೆಸಿಬಿ ಕರೆಸಿ ತಾವೇ ಕಸ ಎತ್ತಿಸಿದ ಜನ! ಜಿಬಿಎ ನಿರ್ಲಕ್ಷ್ಯಕ್ಕೆ ಆಕ್ರೋಶ

ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಗುರಪ್ಪನಪಾಳ್ಯ ವಾರ್ಡ್‌ನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂ.171ರಲ್ಲಿ ವಾರಗಳಷ್ಟೇ ಅಲ್ಲ, ತಿಂಗಳುಗಳಾದರೂ ಕಸ ತೆರವುಗೊಳಿಸಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ತುಂಬಿಕೊಂಡು ದುರ್ವಾಸನೆ ಬೀರುತ್ತಿದ್ದು, ಸ್ಥಳೀಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳೇ ಸ್ವತಃ ಮುಂದಾಗಿ ಜೆಸಿಬಿ ಹಾಗೂ ಲಾರಿಗಳನ್ನು ಕರೆಸಿ ಕಸ ತೆರವುಗೊಳಿಸಿದ ಘಟನೆ ನಡೆದಿದೆ. ಸಮಾಜಸೇವಕ ಮಾಸ್ತಿ ಜಾಕಿರ್ ಅಲಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಕಾರ್ಯ ಕೈಗೊಂಡು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

“ನಾವು ಬೆಂಗಳೂರಲ್ಲೋ ಅಥವಾ ಕಸದೂರಲ್ಲೋ ವಾಸಿಸುತ್ತಿದ್ದೇವೋ ಗೊತ್ತಾಗುತ್ತಿಲ್ಲ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಹಳೆ ಗುರಪ್ಪನಪಾಳ್ಯ ವೃತ್ತದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿ, ಜಿಬಿಎ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಕಸದ ಸಮಸ್ಯೆಯಿಂದ ಉಂಟಾಗುತ್ತಿರುವ ಆರೋಗ್ಯ ಹಾನಿ ಹಾಗೂ ಅನಾನುಕೂಲಗಳನ್ನು ವಿವರಿಸಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಸವನ್ನು ನಿಯಮಿತವಾಗಿ ತೆರವುಗೊಳಿಸುವುದರ ಜೊತೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. ನಗರದಲ್ಲಿ ಮೂಲಭೂತ ಸಮಸ್ಯೆಗಳಿಗೂ ಜನರೇ ಮುಂದಾಗಿ ಪರಿಹಾರ ಕಂಡುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ವಿಷಾದಕರ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

error: Content is protected !!