Home Blog Page 93

ಇನ್ಸ್‌ಪೆಕ್ಟರ್ ಗೋವಿಂದರಾಜು ಟ್ರಾಪ್ ಪ್ರಕರಣ: ಲೋಕಾಯುಕ್ತ ಪೊಲೀಸರ ವಿರುದ್ಧ ದೂರು

0

ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಿರುದ್ಧ ದೂರು ದಾಖಲಾಗಿದೆ. ಟ್ರಾಪ್ ಕಾರ್ಯಾಚರಣೆ ವೇಳೆ ಲೋಕಾಯುಕ್ತ ಸಿಬ್ಬಂದಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಟ್ರಾಪ್ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಹಿರಿಯ ವಕೀಲ ಪ್ರಶಾಂತ್ ಮೆತಲ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಲಂಚಮುಕ್ತ ಸಮಾಜ ನಿರ್ಮಾಣಕ್ಕೆ ಲೋಕಾಯುಕ್ತ ಮಾಡುತ್ತಿರುವ ಕೆಲಸ ಶ್ಲಾಘನೀಯವಾದರೂ, ಈ ಪ್ರಕರಣದಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಾನೂನು ಪಾಲನೆ ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನಲ್ಲಿ, ಟ್ರಾಪ್ ಕಾರ್ಯಾಚರಣೆ ವೇಳೆ ಹೋಮ್ ಗಾರ್ಡ್ ಒಬ್ಬರು ಸೆಲ್ಫಿ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ರೀತಿ ವಿಡಿಯೋ ಚಿತ್ರೀಕರಣ ಹಾಗೂ ವೈರಲ್ ಮಾಡಲು ಅವರಿಗೆ ಯಾರು ಅನುಮತಿ ನೀಡಿದರು ಎಂಬ ಪ್ರಶ್ನೆಯನ್ನೂ ದೂರಿನಲ್ಲಿ ಎತ್ತಲಾಗಿದೆ.

ವೈರಲ್ ಆದ ವಿಡಿಯೋದಿಂದ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರ ಕುಟುಂಬಕ್ಕೆ ತೀವ್ರ ಮಾನಸಿಕ ನೋವುಂಟಾಗಿದೆ. ಈ ಕಾರಣದಿಂದಾಗಿ ಅವರ ಮಕ್ಕಳು ಶಾಲೆಗೆ ಹೋಗಲು ಸಹ ಸಾಧ್ಯವಾಗುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಗೋವಿಂದರಾಜು ಅವರು ಮಾನನಷ್ಟ (ಡಿಫಮೇಶನ್) ಮೊಕದ್ದಮೆ ಹೂಡಲು ಚಿಂತಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸಬೇಕೆಂದು ದೂರುದಲ್ಲಿ ಆಗ್ರಹಿಸಲಾಗಿದೆ.

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ: SIT ವರದಿಗಾಗಿ ಕಾದು ನೋಡೋಣ – ಸಚಿವ ಪರಮೇಶ್ವರ್

0

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡುವ ವರದಿ ಏನು ಹೇಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ರಾಯ್ ಅವರಿಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯಗಳಿಂದ ಕಿರುಕುಳವಿತ್ತು ಎಂಬ ಅವರ ಆಪ್ತರ ಆರೋಪಗಳ ಕುರಿತು ವಿಧಾನಸೌಧದ ಬಳಿ ಇಂದು ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, “ಪ್ರಕರಣದ ಬಗ್ಗೆ ಅನಗತ್ಯ ಊಹಾಪೋಹಗಳು ನಡೆಯಬಾರದು ಎಂಬ ಕಾರಣದಿಂದಲೇ ತಕ್ಷಣ ಎಸ್‌ಐಟಿ ರಚನೆ ಮಾಡಿದ್ದೇವೆ. ಎಸ್‌ಐಟಿ ತನಿಖಾ ವರದಿ ಏನು ಹೇಳುತ್ತದೆ, ಯಾರ ಪಾತ್ರ ಏನಿದೆ ಎಂಬುದನ್ನು ನೋಡಬೇಕಾಗುತ್ತದೆ” ಎಂದು ಹೇಳಿದರು.

ಇದೀಗ ರಾಯ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಎಸ್‌ಐಟಿ ಅಧಿಕಾರಿಗಳು ಕುಟುಂಬಸ್ಥರ ಹೇಳಿಕೆ ದಾಖಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ರಾಯ್ ಅವರು ತಮ್ಮ ದಿನನಿತ್ಯದ ಆಗುಹೋಗುಗಳು ಹಾಗೂ ವ್ಯವಹಾರಿಕ ನಿರ್ಧಾರಗಳನ್ನು ದಾಖಲಿಸುತ್ತಿದ್ದ ಡೈರಿಯನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಡೈರಿಯಲ್ಲಿ ರಾಯ್ ಅವರ ನಿತ್ಯದ ಭೇಟಿಗಳು ಮತ್ತು ವ್ಯವಹಾರ ಸಂಬಂಧಿತ ವಿಚಾರಗಳು ಉಲ್ಲೇಖವಾಗಿದ್ದರೂ, ಅದನ್ನು ಡೆತ್ ನೋಟ್ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ತಮ್ಮ ಸಾವಿಗೆ ನಿರ್ದಿಷ್ಟ ಕಾರಣ ಅಥವಾ ಅಂತಿಮ ಸಂದೇಶವನ್ನು ರಾಯ್ ಅವರು ಡೈರಿಯಲ್ಲಿ ಉಲ್ಲೇಖಿಸಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಅದು ಸಾಮಾನ್ಯ ದಿನಚರಿಯಾಗಿದ್ದು, ಡೆತ್ ನೋಟ್ ಅಲ್ಲ ಎಂಬ ನಿಲುವನ್ನು ತನಿಖಾಧಿಕಾರಿಗಳು ತೆಗೆದುಕೊಂಡಿದ್ದಾರೆ.

ಇದಲ್ಲದೆ, ರಾಯ್ ಅವರು ಆತ್ಮಹತ್ಯೆಗೆ ಬಳಸಿದ ಪಿಸ್ತೂಲ್‌ನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅದು ಬೆಲ್ಜಿಯಮ್‌ನಲ್ಲಿ ತಯಾರಿಸಲಾದ ಸ್ಮಾರ್ಟ್ ಮಿನಿ ಸೌಂಡ್‌ಲೆಸ್ ಪಿಸ್ತೂಲ್ ಆಗಿದ್ದು, ಮೇಲ್ನೋಟಕ್ಕೆ ಪರವಾನಗಿ ಪಡೆದ ಆಯುಧ ಎಂದು ತಿಳಿದು ಬಂದಿದೆ. ಆದರೆ, ಪಿಸ್ತೂಲ್ ಹಾಗೂ ಬುಲೆಟ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಡಹಗಲೇ ಸಿನಿಮೀಯ ದರೋಡೆ: ಬೈಕ್ ಅಡ್ಡಗಟ್ಟಿ ₹31.38 ಲಕ್ಷ ದೋಚಿದ ಖದೀಮರ ಗ್ಯಾಂಗ್

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖದೀಮರ ಅಟ್ಟಹಾಸ ಮಿತಿಮೀರಿದ್ದು, ಬನ್ನೇರುಘಟ್ಟ ಸಮೀಪ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ನಗರವನ್ನೇ ಬೆಚ್ಚಿಬೀಳಿಸಿದೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ 31 ಲಕ್ಷ 38 ಸಾವಿರ 625 ರೂಪಾಯಿ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.

ಕೈಲಾಸ್ ಎಂಬ ಯುವಕ ರಾಕೇಶ್ ಎಂಬುವವರ ಬಳಿ ಕ್ಯಾಶ್ ಕಲೆಕ್ಟಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಉಡಾನ್ (Udaan) ಕಂಪನಿಯ ವಿವಿಧ ಬ್ರಾಂಚ್‌ಗಳಿಗೆ ಭೇಟಿ ನೀಡಿ ಹಣ ಸಂಗ್ರಹಿಸುವುದು ಈತನ ಕೆಲಸವಾಗಿತ್ತು. ಎಂದಿನಂತೆ ಭಾನುವಾರ ಸಂಜೆ ಕೈಲಾಸ್ ವಿವಿಧ ಬ್ರಾಂಚ್‌ಗಳಿಂದ ಒಟ್ಟು ₹31,38,625 ಹಣವನ್ನು ಕಲೆಕ್ಟ್ ಮಾಡಿದ್ದ.

ಸಂಗ್ರಹಿಸಿದ ಈ ಬೃಹತ್ ಮೊತ್ತದ ಹಣವನ್ನು ಕೈಲಾಸ್ ತನ್ನ ಜುಪಿಟರ್ ಸ್ಕೂಟರ್‌ನ ಡಿಕ್ಕಿಯಲ್ಲಿಟ್ಟು, ಬನ್ನೇರುಘಟ್ಟ ಸಮೀಪದ ಸಕಲವಾರ ರಸ್ತೆಯಲ್ಲಿ ಸಂಚರಿಸುತ್ತಿದ್ದ. ಸಂಜೆ ಸುಮಾರು 4:20ರ ವೇಳೆಗೆ ಸಕಲವಾರ ರಸ್ತೆಯಿಂದ ಬನ್ನೇರುಘಟ್ಟದ ಕಡೆಗೆ ಬರುತ್ತಿದ್ದಾಗ ದರೋಡೆ ನಡೆದಿದೆ.

ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿಕೊಂಡು ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಕೈಲಾಸ್‌ನನ್ನು ಅಡ್ಡಗಟ್ಟಿದ್ದಾರೆ. ಕೈಯಲ್ಲಿದ್ದ ಲಾಂಗ್ (Long) ತೋರಿಸಿ ಬೆದರಿಸಿದ ದರೋಡೆಕೋರರು, ಯುವಕನ ಮೇಲೆ ಹಲ್ಲೆಗೆ ಮುಂದಾಗಿ, ಬೈಕ್ ಸಮೇತ ಅಲ್ಲಿಂದ ಪರಾರಿಯಾಗಿದ್ದಾರೆ.

ದರೋಡೆ ಮಾಡಿದ ಗ್ಯಾಂಗ್ ಸುಮಾರು ಒಂದು ಕಿಲೋಮೀಟರ್ ದೂರದವರೆಗೆ ಕೈಲಾಸ್‌ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗಿದ್ದು, ನಂತರ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ, ಡಿಕ್ಕಿಯಲ್ಲಿದ್ದ ₹31 ಲಕ್ಷಕ್ಕೂ ಅಧಿಕ ಹಣವನ್ನು ತೆಗೆದುಕೊಂಡು ಖಾಲಿ ಬೈಕನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಸಂಬಂಧ ದರೋಡೆ ಪ್ರಕರಣ ದಾಖಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಮನೆಗೆಲಸದವನೇ ಪೈಶಾಚಿಕ: 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ–ಕೊಲೆ, ಬಳಿಕ ಆತ್ಮಹತ್ಯೆ

0

ಬೆಂಗಳೂರು: ನಗರದಲ್ಲಿ ಮಾನವೀಯತೆ ಮರೆತ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. 65 ವರ್ಷದ ವೃದ್ಧ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಕುತ್ತಿಗೆ ಹಿಸುಕಿ ಕೊಲೆ ಮಾಡಿ, ಆರೋಪಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಹಿಳೆಯ ಮನೆಯಲ್ಲಿ ಕಳೆದ ಎಂಟು ವರ್ಷಗಳಿಂದ ಗೃಹಸಹಾಯಕನಾಗಿ ಕೆಲಸ ಮಾಡುತ್ತಿದ್ದ ದೇವರಾಜು (50) ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಹೊಸೂರು ಮೂಲದ ದೇವರಾಜು, ಇದೇ ಕಾಲೋನಿಯ ಇತರ ಮನೆಗಳಲ್ಲಿಯೂ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದಾನೆ. ಮೃತ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿದ್ದು, ಹತ್ಯೆಗೆ ಮುನ್ನ ಅತ್ಯಾಚಾರ ನಡೆದಿದೆಯೇ ಎಂಬುದರ ಬಗ್ಗೆ ಪೊಲೀಸರು ವೈದ್ಯಕೀಯ ಹಾಗೂ ಫಾರೆನ್ಸಿಕ್ ವರದಿ ನಿರೀಕ್ಷಿಸುತ್ತಿದ್ದಾರೆ.

ಅಪರಾಧ ನಡೆದ ಬಳಿಕ ಭಯಗೊಂಡು ಆರೋಪಿ ಮನೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯ ಪತಿ ಖ್ಯಾತ ಕಂಪನಿಯೊಂದರಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲಸದ ನಿಮಿತ್ತ ವಿದೇಶದಲ್ಲಿದ್ದರು. ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ಮನೆಗೆ ಮರಳಿದ ವೇಳೆ ಈ ದಾರುಣ ಘಟನೆ ಬೆಳಕಿಗೆ ಬಂದಿದೆ.

ಮನೆಯ ಬಾಗಿಲು ತೆರೆಯುತ್ತಿದ್ದಂತೆ ಮಲಗುವ ಕೋಣೆಯಲ್ಲಿ ದೇವರಾಜು ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಹಾಗೂ ಪತ್ನಿ ನೆಲದಲ್ಲಿ ಬಿದ್ದಿರುವುದನ್ನು ಕಂಡು ಪತಿ ಕಿರುಚಿಕೊಂಡಿದ್ದಾರೆ. ಅವರ ಶಬ್ದ ಕೇಳಿ ಮೊದಲ ಮಹಡಿಯಲ್ಲಿ ವಾಸವಿದ್ದ 27 ವರ್ಷದ ಪುತ್ರಿ ಕೆಳಗೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಯಶ್‌ ತಾಯಿ ಪುಷ್ಪ ಸೈಟ್‌ ಜಟಾಪಟಿ: ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?

ಹಾಸನದಲ್ಲಿ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಎದುರಿಸುತ್ತಿರುವ ನಿವೇಶನ ವಿವಾದ ಇದೀಗ ಕೇವಲ ಖಾಸಗಿ ಜಗಳವಲ್ಲ, ವ್ಯವಸ್ಥೆಯ ವೈಫಲ್ಯವನ್ನು ಬಹಿರಂಗಪಡಿಸುವ ಪ್ರಕರಣವಾಗಿ ಹೊರಹೊಮ್ಮಿದೆ.

1982ರಿಂದ 2020ರವರೆಗೆ ಸುಮಾರು 44 ವರ್ಷಗಳ ಕಾಲ ಯಾವುದೇ ತಕರಾರು ಇಲ್ಲದೇ ಹಲವು ಮಾಲೀಕರ ಮೂಲಕ ಸಾಗಿದ ನಿವೇಶನದ ಮೇಲೆ, ಇದೀಗ ಏಕಾಏಕಿ ಜಿಪಿಎ ಹೋಲ್ಡರ್ ದೇವರಾಜು ಹಕ್ಕು ಮಂಡಿಸಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಲಕ್ಷ್ಮಮ್ಮ ಎಂಬವರು ಈ ಜಾಗದ ಮಾಲೀಕರು ಎಂದು ಹೇಳಿಕೊಂಡು ದೇವರಾಜು ಜಿಪಿಎ ಪಡೆದು ಕೋರ್ಟ್ ಮೆಟ್ಟಿಲೇರಿದ್ದಾರೆ.

ಪುಷ್ಪಾ ಅವರ ವಾದದ ಪ್ರಕಾರ, 2020ರಲ್ಲಿ ಕಾನೂನುಬದ್ಧವಾಗಿ ನಿವೇಶನ ಖರೀದಿ ಮಾಡಿ ಮೂರು ವರ್ಷಗಳಿಂದ ಸ್ವಾಧೀನದಲ್ಲಿದ್ದು, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ. ಈ ನಡುವೆ ಯಶ್ ಅವರ ಹೆಸರು ಹಾಳು ಮಾಡಲು ಷಡ್ಯಂತ್ರ ನಡೆದಿದೆ ಎಂಬ ಆರೋಪವೂ ಕೇಳಿಬಂದಿದೆ.

ದಾಖಲೆಗಳನ್ನು ಪರಿಶೀಲಿಸಿದಾಗ, ಇ-ಸ್ವತ್ತು ಮಾಡಿಸುವ ವೇಳೆ ಪಿಡಿಓ ಅಥವಾ ಕಾರ್ಯದರ್ಶಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಬೇಕಿದ್ದರೂ, ಕಚೇರಿಯಲ್ಲೇ ಕುಳಿತು ಎರಡೆರಡು ಖಾತೆ, ಸರ್ವೆ ನಂಬರ್ ಹಾಗೂ ಇ-ಸ್ವತ್ತು ಮಾಡಿಕೊಟ್ಟಿರುವುದು ಅಧಿಕಾರಿಗಳ ಗಂಭೀರ ಲೋಪವಾಗಿದೆ ಎಂಬುದು ಸ್ಪಷ್ಟವಾಗಿದೆ.

ಸಬ್‌ರಿಜಿಸ್ಟರ್ ಕಚೇರಿಯಲ್ಲೇ ಮೋಸ ನಡೆದಿದೆಯೇ? ಗ್ರಾಮ ಪಂಚಾಯಿತಿಯಲ್ಲಿ ಎರಡೆರಡು ದಾಖಲೆ ಸೃಷ್ಟಿಯಾಗಿದೆಯೇ? ಎಂಬ ಪ್ರಶ್ನೆಗಳು ಈಗ ಉದ್ಭವಿಸಿದ್ದು, ಈ ಪ್ರಕರಣ ಇಡೀ ಆಡಳಿತ ವ್ಯವಸ್ಥೆಯ ಮೇಲೆಯೇ ಅನುಮಾನ ಮೂಡಿಸಿದೆ.

ಒಟ್ಟಿನಲ್ಲಿ, ಒಂದೇ ನಿವೇಶನಕ್ಕೆ ಎರಡು ಮಾಲೀಕರು ಹಕ್ಕು ಮಂಡಿಸುತ್ತಿರುವ ಈ ಪ್ರಕರಣದ ಅಂತಿಮ ಉತ್ತರ ನ್ಯಾಯಾಲಯದ ತೀರ್ಪಿನ ಮೇಲೆಯೇ ನಿಂತಿದ್ದು, ಸರ್ಕಾರದ ಅಧಿಕಾರಿಗಳ ಯಡವಟ್ಟು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ 18 ಕೋಟಿ ಚಿನ್ನಾಭರಣ ಕಳ್ಳತನ ಕೇಸ್: ನೇಪಾಳಿ ದಂಪತಿಗೆ ಬಲೆ ಬೀಸಿದ ಪೊಲೀಸರು!

0

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಮಾರತ್ ಹಳ್ಳಿ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಸ್ಪೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಈ ಕೃತ್ಯದ ಹಿಂದೆ ದೇಶದ ವಿವಿಧ ಭಾಗಗಳಲ್ಲಿ ಕಳ್ಳತನ ಮಾಡಿರುವ ನೇಪಾಳಿ ದಂಪತಿ ಕೈವಾಡವಿರುವುದು ಪತ್ತೆಯಾಗಿದೆ.

ಆರೋಪಿಗಳು ದಿನೇಶ್ ಹಾಗೂ ಕಮಲ ಎಂಬ ಹೆಸರಿನಲ್ಲಿ ಮನೆಕೆಲಸಕ್ಕೆ ಸೇರಿಕೊಂಡು ಕಳ್ಳತನ ನಡೆಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಇದೇ ಮಾದರಿಯಲ್ಲಿ ಅವರು ಬೆಂಗಳೂರಿನಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಇದಲ್ಲದೆ, 2025ರ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲೂ ಈ ಜೋಡಿ ಕಳ್ಳತನ ನಡೆಸಿದ್ದ ಮಾಹಿತಿ ಲಭ್ಯವಾಗಿದೆ. ಮಹಾರಾಷ್ಟ್ರದ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿನ ಕಳ್ಳತನದ ಕೇವಲ ಎರಡು ತಿಂಗಳೊಳಗೆ ಮತ್ತೆ ಬೆಂಗಳೂರಿನಲ್ಲಿ ಕಳ್ಳತನ ನಡೆಸಿರುವುದು ತನಿಖೆಯಿಂದ ಬಹಿರಂಗವಾಗಿದೆ.

ಪುಣೆಯ ಭಾವ್ಧಾನ್ ನಗರದ ವಿಂಡ್ಮಿಲ್ ಸೊಸೈಟಿಯಲ್ಲಿರುವ ರತ್ನಾದೀಪ್ ರಂಗನಾಥ್ ರಾವ್ ಅವರ ಮನೆಯಲ್ಲಿ ದಿನೇಶ್ ಹಾಗೂ ಸಲೀನಾ ಎಂಬ ಹೆಸರಿನಲ್ಲಿ ಮನೆಕೆಲಸಕ್ಕೆ ಸೇರಿದ್ದ ಆರೋಪಿಗಳು, ಸುಮಾರು ಆರು ತಿಂಗಳ ಬಳಿಕ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮನೆಯವರು ಹೊರಗಿದ್ದ ಸಂದರ್ಭವನ್ನು ಬಳಸಿಕೊಂಡು ರೂಮಿನ ಲಾಕರ್ ಒಡೆದು ಚಿನ್ನಾಭರಣ ಕದ್ದಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಆರೋಪಿಗಳ ಪತ್ತೆಗೆ ಮಾರತ್ ಹಳ್ಳಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದು, ಸುಮಾರು ಏಳು ವಿಶೇಷ ತಂಡಗಳನ್ನು ರಚಿಸಲಾಗಿದೆ. ಮುಂಬೈ, ಕಲ್ಕತ್ತಾ, ನೇಪಾಳ ಸೇರಿದಂತೆ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿದ್ದರೆ ಅವರನ್ನು ಬಂಧಿಸುವುದು ಕಷ್ಟವಾಗಲಿದೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಜನರ ಗ್ಯಾಂಗ್ ಈ ಕಳ್ಳತನದ ಹಿಂದೆ ಇರುವ ಸಾಧ್ಯತೆ ಇದ್ದು, ಸ್ಥಳೀಯವಾಗಿ ಆರೋಪಿಗಳಿಗೆ ಯಾರಾದರೂ ಸಹಕಾರ ನೀಡಿದ್ದಾರೆಯೇ ಎಂಬುದರ ಕುರಿತು ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಾಕ್ ಬಹಿಷ್ಕಾರ ನಡುವೆಯೂ ಭಾರತ ಕೊಲಂಬೋಗೆ ಪ್ರಯಾಣ: ಟಿ20 ವಿಶ್ವಕಪ್ ಪಂದ್ಯಕ್ಕೆ ಸಜ್ಜು

0

ಮುಂಬೈ: ಪಾಕಿಸ್ತಾನ ಕ್ರಿಕೆಟ್ ತಂಡ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದರೂ, ಭಾರತ ಐಸಿಸಿ ಟಿ20 ವಿಶ್ವಕಪ್ ಪಂದ್ಯವಾಡಲು ಶ್ರೀಲಂಕಾಗೆ ತೆರಳಲಿದೆ. ಫೆಬ್ರವರಿ 15ರಂದು ಕೊಲಂಬೋದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿದ್ದು, ಬಿಸಿಸಿಐ (BCCI) ಐಸಿಸಿಯ ಶಿಷ್ಟಾಚಾರದಂತೆ ತನ್ನ ಜವಾಬ್ದಾರಿಗಳನ್ನು ಪೂರೈಸಲು ಸಜ್ಜಾಗಿದೆ.

ಪಾಕಿಸ್ತಾನ ತಂಡ ಕೊಲಂಬೋಗೆ ಆಗಮಿಸಿದರೂ ಭಾರತ ವಿರುದ್ಧ ಆಡದೇ ಇರಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಆದರೆ, ಪಾಕಿಸ್ತಾನ ಸರ್ಕಾರದ ಈ ನಿರ್ಧಾರವನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಇದುವರೆಗೆ ಐಸಿಸಿಗೆ ಅಧಿಕೃತವಾಗಿ ತಿಳಿಸಿಲ್ಲ. ಈ ಹಿನ್ನೆಲೆಯಲ್ಲಿ ಪಂದ್ಯ ನಡೆಯುತ್ತದೆಯೇ ಇಲ್ಲವೇ ಎಂಬ ಬಗ್ಗೆ ಗೊಂದಲ ಉಂಟಾಗಿತ್ತು.

ಪಾಕಿಸ್ತಾನ ಪಂದ್ಯವಾಡದಿದ್ದರೆ ಭಾರತವೂ ಶ್ರೀಲಂಕಾಗೆ ಹೋಗುತ್ತದೆಯೇ ಎಂಬ ಪ್ರಶ್ನೆಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದ್ದು, ಪಾಕ್ ಬಹಿಷ್ಕಾರ ಘೋಷಿಸಿದರೂ ಭಾರತ ತಂಡ ಕೊಲಂಬೋಗೆ ಪ್ರಯಾಣ ಬೆಳೆಸಲಿದೆ ಎಂದು ವರದಿಯಾಗಿದೆ.

ಬಿಸಿಸಿಐ ಮೂಲಗಳ ಪ್ರಕಾರ, ಭಾರತ ತಂಡವು ನಿಗದಿತ ವೇಳಾಪಟ್ಟಿಯಂತೆ ಅಭ್ಯಾಸ ನಡೆಸಲಿದೆ, ಪತ್ರಿಕಾಗೋಷ್ಠಿಗಳಲ್ಲಿ ಭಾಗವಹಿಸಲಿದೆ ಹಾಗೂ ಪಂದ್ಯದ ರೆಫರಿ ಅಧಿಕೃತವಾಗಿ ಪಂದ್ಯ ರದ್ದುಗೊಳಿಸುವವರೆಗೆ ಕಾಯಲಿದೆ. ಐಸಿಸಿಯ ನಿಯಮಾವಳಿಗಳನ್ನು ಸಂಪೂರ್ಣವಾಗಿ ಪಾಲಿಸುವುದು ಭಾರತದ ನಿಲುವಾಗಿದೆ ಎಂದು ತಿಳಿಸಲಾಗಿದೆ.

ಪಾಕಿಸ್ತಾನವು ಈ ಹಿಂದೆ ಏಷ್ಯಾ ಕಪ್ ಟ್ರೋಫಿ ಹಸ್ತಾಂತರ ಸೇರಿದಂತೆ ಹಲವು ವಿಚಾರಗಳಲ್ಲಿ ಹೈಡ್ರಾಮಾ ಸೃಷ್ಟಿಸಿದ್ದನ್ನು ಉಲ್ಲೇಖಿಸಿ, ಭಾರತದ ಪಂದ್ಯಕ್ಕೂ ಮುನ್ನ ಮತ್ತೊಂದು ನಾಟಕ ನಡೆಯುವ ಸಾಧ್ಯತೆಯಿದೆ ಎಂದು ಕ್ರಿಕೆಟ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಭಾರತ ಶ್ರೀಲಂಕಾಗೆ ತೆರಳದೇ ಇದ್ದರೆ, “ನಾವು ಆಡಲು ಸಿದ್ದರಾಗಿದ್ದೇವೆ, ಆದರೆ ಭಾರತ ಬಂದಿಲ್ಲ” ಎಂದು ಹೇಳಿ ಮತ್ತೊಂದು ವಿವಾದ ಹುಟ್ಟುಹಾಕುವ ಸಾಧ್ಯತೆ ಇರುವುದರಿಂದ, ಯಾವುದೇ ಸಂಶಯಕ್ಕೆ ಅವಕಾಶ ಕೊಡದಂತೆ ಭಾರತ ತಂಡ ಲಂಕಾಗೆ ತೆರಳಲು ನಿರ್ಧರಿಸಿದೆ ಎನ್ನಲಾಗಿದೆ.

ಒಂದು ವೇಳೆ ಪಾಕಿಸ್ತಾನ ಭಾರತ ವಿರುದ್ಧದ ಪಂದ್ಯವನ್ನು ಆಡದೇ ಇದ್ದರೆ, ಐಸಿಸಿ ಪಾಕಿಸ್ತಾನ ವಿರುದ್ಧ ಭಾರೀ ದಂಡ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಭಾರತದ ಈ ನಿಲುವಿನ ಬಳಿಕ ಪಾಕಿಸ್ತಾನ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಕುರಿತು ಈಗ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಅಭಿಮಾನವೇ ಅತಿರೇಕವಾದಾಗ… ಮಗು ಕೈಯಲ್ಲಿ ಹಿಡಿದು ಭಯದಿಂದ ನಲುಗಿದ ರಾಮ್ ಚರಣ್

ರಾಮ್ ಚರಣ್ ಅವರ ಜೀವನದ ಅತ್ಯಂತ ಖುಷಿಯ ಕ್ಷಣದಲ್ಲಿ, ಅಭಿಮಾನಿಗಳ ಅತಿರೇಕ ನಡೆ ಆಘಾತಕಾರಿ ಕ್ಷಣಕ್ಕೆ ಕಾರಣವಾಗಿದೆ. ಅವಳಿ ಮಕ್ಕಳಿಗೆ ಪಾಲಕರಾದ ಸಂಭ್ರಮದ ನಡುವೆ, ತಮ್ಮ ಮೊದಲ ಮಗು ಕ್ಲಿನ್ಕಾರಾಳನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಅಭಿಮಾನಿಗಳ ಮುತ್ತಿಗೆಗೆ ಸಿಲುಕಿರುವುದು ಇದೀಗ ಚರ್ಚೆಯ ವಿಷಯವಾಗಿದೆ.

ರಾಮ್ ಚರಣ್ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಸ್ಟಾರ್ ನಟ. ಅವರ ಅಭಿಮಾನಿ ಬಳಗ ದೊಡ್ಡದಾಗಿದ್ದು, ಅವರು ಎಲ್ಲೆ ಹೋದರೂ ಫ್ಯಾನ್ಸ್ ಹಾಜರಿರುತ್ತಾರೆ. ಅದೇ ರೀತಿ ಉಪಾಸನಾ ದಾಖಲಾಗಿರುವ ಆಸ್ಪತ್ರೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಮನೆಯಿಂದ ಆಸ್ಪತ್ರೆಗೆ ಆಗಮಿಸಿದ ವೇಳೆ, ರಾಮ್ ಚರಣ್ ಅವರ ಕೈಯಲ್ಲಿ ಎರಡು ವರ್ಷದ ಮಗು ಇದ್ದುದನ್ನು ಕಂಡರೂ ಅಭಿಮಾನಿಗಳ ಕೂಗಾಟ, ತಳ್ಳಾಟ ನಿಲ್ಲಲಿಲ್ಲ. ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಪ್ರಯತ್ನಿಸಿದರೂ ಜನಸಂದಣಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಮಗು ಜೊತೆ ಸುರಕ್ಷಿತವಾಗಿ ಆಸ್ಪತ್ರೆ ಪ್ರವೇಶಿಸುವುದು ರಾಮ್ ಚರಣ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿತು.

ಈ ವಿಡಿಯೋ ವೈರಲ್ ಆದ ಬಳಿಕ, “ಮಗು ಎಷ್ಟು ಗಾಬರಿ ಆಗಿರಬಹುದು” ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಮೂಡಿದೆ. ಇನ್ನೂ ಹಲವರು, “ಇದು ಅಭಿಮಾನವಲ್ಲ, ಅನಾಗರೀಕತೆ” ಎಂದು ತೀವ್ರವಾಗಿ ಟೀಕಿಸಿದ್ದಾರೆ. ಸ್ಟಾರ್ ಕುಟುಂಬದ ಭದ್ರತೆ, ಅಭಿಮಾನಿಗಳ ಜವಾಬ್ದಾರಿ ಕುರಿತು ಈ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ಸುಂಕ- ವಾಣಿಜ್ಯ ಸಮರಕ್ಕೆ ಎದೆಗುಂದದೆ 2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ: ಬಿ.ವೈ.ವಿಜಯೇಂದ್ರ

0

ಶಿವಮೊಗ್ಗ: ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಆತ್ಮನಿರ್ಭರ, ವಿಕಸಿತ ಭಾರತ ಮತ್ತು ಸ್ವಾವಲಂಬನೆಯನ್ನು ಗುರಿಯಾಗಿ ಇಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾಗಿ ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಅವರು ಮಾತನಾಡಿದರು. ಅಸ್ಪಷ್ಟತೆಯಿಂದ ಸ್ಪಷ್ಟತೆ ಕಡೆಗೆ, ಆಡಂಬರದಿಂದ ಸುಧಾರಣೆಯತ್ತ, ಜನಪ್ರಿಯತೆಗಿಂತ ಜನಹಿತ ಮುಖ್ಯ ಎಂಬುದನ್ನು ನಿನ್ನೆ ಮತ್ತೊಮ್ಮೆ ಅವರು ಋಜುವಾತು ಮಾಡಿದ್ದಾರೆ ಎಂದು ವಿಶ್ಲೇಷಿಸಿದರು. ಜಾಗತಿಕ ಪರಿಸ್ಥಿತಿಯನ್ನೂ ನಾವು, ನೀವೆಲ್ಲರೂ ಗಮನಿಸಬೇಕಿದೆ. ಅಮೆರಿಕ ಅಧ್ಯಕ್ಷ ಟ್ರಂಪ್,

ಭಾರತದ ವಿರುದ್ಧ ಸಾರಿರುವ ಸುಂಕ- ವಾಣಿಜ್ಯ ಸಮರಕ್ಕೆ ಎದೆಗುಂದದೆ 2047ಕ್ಕೆ ವಿಕಸಿತ ಭಾರತ ಆಗಬೇಕೆಂಬ ಪ್ರಧಾನಮಂತ್ರಿಯವರ ಗುರಿಯತ್ತ ಸಾಗುವ ನಿಟ್ಟಿನಲ್ಲಿ ಅನೇಕ ಸುಧಾರಣೆಗಳನ್ನು ಮಾನ್ಯ ಹಣಕಾಸು ಸಚಿವರು ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಕೈಗಾರಿಕೆ, ಪ್ರವಾಸೋದ್ಯಮ, ಸೆಮಿ ಕಂಡಕ್ಟರ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಕೃಷಿ ಕ್ಷೇತ್ರ ಸೇರಿ ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡಿದ್ದಾರೆ. ಆರ್ಥಿಕ ಶಿಸ್ತು ಕಾಪಾಡುವ ಮಹತ್ವದ ಜವಾಬ್ದಾರಿ ಹಣಕಾಸು ಸಚಿವರ ಮೇಲೆ ಇತ್ತು. ಆ ಪ್ರಥಮ ಆದ್ಯತೆ ಇಟ್ಟುಕೊಂಡು, ಹಣಕಾಸು ಕೊರತೆ ಶೇ 4.4ಕ್ಕೆ ತಂದಿರುವುದು ಇದಕ್ಕೆ ಸಾಕ್ಷಿ ಎಂದು ನುಡಿದರು.

ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರು ಸಾವು!

0

ರಾಮನಗರ: ಕನಕಪುರದಲ್ಲಿ ಅಡುಗೆ ಮಾಡುವ ವೇಳೆ ಅನಿಲ ಸೋರಿಕೆಯಿಂದ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮೃತರನ್ನು ಸಿದ್ದರಾಜು (55), ಚಂದ್ರಮ್ಮ (50) ಹಾಗೂ ಪ್ರಶಾಂತ್ (22) ಎಂದು ಗುರುತಿಸಲಾಗಿದೆ. ಕನಕಪುರ ನಗರದ ಅಮರನಾರಾಯಣ ಬ್ಲಾಕ್‌ನಲ್ಲಿ ನಾಲ್ಕು ದಿನಗಳ ಹಿಂದೆ ಗ್ಯಾಸ್ ಸೋರಿಕೆಯಿಂದ ಈ ಅಗ್ನಿ ಅವಘಡ ಸಂಭವಿಸಿತ್ತು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕುಟುಂಬದ ಸದಸ್ಯರನ್ನು ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ತಂದೆ, ತಾಯಿ ಮತ್ತು ಮಗ ಮೂವರೂ ಸಾವನ್ನಪ್ಪಿದ್ದಾರೆ. ಈ ಘಟನೆ ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದು, ಶೋಕದ ವಾತಾವರಣ ಆವರಿಸಿದೆ.

error: Content is protected !!