Home Blog Page 95

ಯಲಬುರ್ಗಾ: ಹಲ್ಲಿ ಬಿದ್ದ ಬಿಸಿಯೂಟ ಸೇವನೆ: 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

0

ಯಲಬುರ್ಗಾ: ತಾಲ್ಲೂಕಿನ ಚಿಕ್ಕಬನ್ನಿಗೋಳ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಶಾಲೆ ಮುಗಿಸಿ ಮನೆಗೆ ಬಂದ ವಿದ್ಯಾರ್ಥಿಗಳು ಸುಸ್ತಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಲಕರು ವಿಚಾರಿಸಿದಾಗ, ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥತೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಈ ವಿಷಯವನ್ನು ಮನೆಯಲ್ಲಿ ಹೇಳದಂತೆ ಶಿಕ್ಷಕರು ಗದರಿಸಿದ್ದಾರೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಪಾಲಕರ ಮುಂದೆ ಮಾಡಿಕೊಂಡಿದ್ದಾರೆ. ಘಟನೆ ತಿಳಿದ ಬಳಿಕ ವಜ್ರಬಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ಗ್ರಾಮಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ಪರಿಶೀಲನೆ ನಡೆಸಿದೆ. ತೀವ್ರ ಹೊಟ್ಟೆ ನೋವು, ವಾಂತಿ ಹಾಗೂ ಭೇದಿ ಕಾಣಿಸಿಕೊಂಡ 25 ವಿದ್ಯಾರ್ಥಿಗಳನ್ನು ಆಂಬುಲೆನ್ಸ್ ಮೂಲಕ ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸ್ಥಳಕ್ಕೆ ಅಕ್ಷರ ದಾಸೋಹ ಅಧಿಕಾರಿ ಹಾಗೂ ಬಿಆರ್‌ಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಅಸ್ವಸ್ಥತೆಗೆ ಕಾರಣವಾಗಿರುವುದಾಗಿ ಶಂಕಿಸಿರುವ ಬಿಸಿಯೂಟ ಹಾಗೂ ಅಡುಗೆ ವ್ಯವಸ್ಥೆಯ ವಿರುದ್ಧ ಗ್ರಾಮಸ್ಥರು ಮತ್ತು ಪಾಲಕರು ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾತ್ರಿ 10 ಗಂಟೆಯಾದರೂ ಶಾಲೆಯ ಮುಖ್ಯಶಿಕ್ಷಕರು ಗ್ರಾಮಕ್ಕೆ ಆಗಮಿಸದೇ, ದೂರವಾಣಿ ಕರೆಗಳನ್ನು ಸ್ವೀಕರಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಯಿತು. ಈ ಕುರಿತು ಪ್ರತಿಕ್ರಿಯಿಸಿದ ಯಲಬುರ್ಗಾ ಬಿಇಒ ಅಶೋಕ ಗೌಡರ್, “ಚಿಕ್ಕಬನ್ನಿಗೋಳ ಶಾಲೆಯ ಕೆಲವು ಮಕ್ಕಳು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ವೈದ್ಯರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಅಪಾಯ ಇಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡ ರಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ಸುದ್ದಿಯಾಗಿದ್ದ ಕಲ್ಲೇಶ್ ಮನೆ ಮೇಲೆ ಲೋಕಾಯುಕ್ತರ ದಾಳಿ

0

ಕೊಪ್ಪಳ: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ. ಕಲ್ಲೇಶ್ ಗೆ ಸಂಬಂಧಿಸಿದ ಮನೆ ಸೇರಿದಂತೆ ಆರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಬೆಳಗ್ಗೆ 30ಕ್ಕೂ ಹೆಚ್ಚು ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ಏಕಕಾಲದಲ್ಲಿ ದಾಳಿ ನಡೆಸಿದ್ದು, ಭಾಗ್ಯನಗರದ ಯತ್ನಟ್ಟಿ ರಸ್ತೆಯಲ್ಲಿರುವ ನವಚೇತನ ಪಿಯು ವಿಜ್ಞಾನ ಕಾಲೇಜು ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ಹಾವೇರಿ, ರಾಯಚೂರು ಹಾಗೂ ಗದಗ ಜಿಲ್ಲೆಗಳಿಂದ ಏಳು ವಾಹನಗಳಲ್ಲಿ ಲೋಕಾಯುಕ್ತ ತಂಡ ಆಗಮಿಸಿ ದಾಳಿ ನಡೆಸಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ದಾಳಿಯ ವೇಳೆ ಹಣಕಾಸು ದಾಖಲೆಗಳು ಮತ್ತು ಆಸ್ತಿ ಸಂಬಂಧಿತ ಮಾಹಿತಿಯನ್ನು ಪರಿಶೀಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಲುಕಿ ಅಮಾನತುಗೊಂಡಿದ್ದ ಬಿ. ಕಲ್ಲೇಶ್, ತನಿಖೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ತಮ್ಮ ಮೇಲೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿ ಸಂಪಾದನೆ ಸೇರಿ ಹಲವು ಆರೋಪಗಳ ಹಿನ್ನೆಲೆ ಈ ಲೋಕಾಯುಕ್ತ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿ ಮತ್ತು ಪರಿಶೀಲನೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಡಾ. ಸಿ.ಜೆ. ರಾಯ್ ಆತ್ಮಹತ್ಯೆ: ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣು!

0

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇರಳ ಮೂಲದ ಡಾ. ಸಿ.ಜೆ. ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯ ದಲ್ಲಿರುವ ತಮ್ಮ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿದ ಕೂಡಲೇ ಅಶೋಕನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಯ ಹಿಂದಿನ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಡಾ. ರಾಯ್ ಅವರ ಕುಟುಂಬದ ಮೇಲೆ ಪದೇಪದೇ ಆದಾಯ ತೆರಿಗೆ ಇಲಾಖೆ ದಾಳಿಗಳು ನಡೆದಿದ್ದು, ಈ ಹಿನ್ನೆಲೆಯಲ್ಲಿ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಎಲ್ಲ ಅಂಶಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

2005ರಲ್ಲಿ ಆರಂಭವಾದ ಕಾನ್ಫಿಡೆಂಟ್ ಗ್ರೂಪ್ ಇದುವರೆಗೆ 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್‌ಗಳು, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್‌ ಹಾಗೂ ಬೇರೆ ಬೇರೆ ಶೌಚಾಲಯಗಳು ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶ

0

ನವದೆಹಲಿ, ಜನವರಿ 30: ಸುಪ್ರೀಂ ಕೋರ್ಟ್ ಇಂದು ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಮಹತ್ವಪೂರ್ಣ ನಿರ್ದೇಶನ ನೀಡಿದೆ. ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಮಯದಲ್ಲಿ ಬಾಯೋಡಿಗ್ರೇಡಬಲ್ (ವಿಹೀನಪಡಿಸಬಹುದಾದ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕು ಎಂದು ಕೋರ್ಟ್ ಹೇಳಿದೆ.

ನ್ಯಾಯಪೀಠದ ನ್ಯಾಯಮೂರ್ತಿಗಳು ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರು ಎಲ್ಲಾ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದಾರೆ. ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ, ಎಲ್ಲ ಶಾಲೆಗಳಲ್ಲಿ ಅಂಗವಿಕಲ ಸ್ನೇಹಿ ಶೌಚಾಲಯಗಳೂ ಇರಬೇಕು ಎಂದು ಕೋರ್ಟ್ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್ ಪ್ರಕಟಣೆ: “ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ, ಮುಟ್ಟಿನ ಆರೋಗ್ಯವು ಬದುಕು ಹಕ್ಕಿನ ಭಾಗವಾಗಿದೆ. ಖಾಸಗಿ ಶಾಲೆಗಳು ಈ ಹಕ್ಕನ್ನು ಉಲ್ಲಂಘಿಸಿದರೆ ಅವರ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ. ಸಾರ್ವಜನಿಕ ಶಾಲೆಗಳು ವಿಫಲವಾದರೆ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.”

ಈ ಆದೇಶಕ್ಕೆ aanleidingವಾಗಿ, 6ರಿಂದ 12ನೇ ತರಗತಿಯ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳು ಒದಗಿಸಲು ‘ಶಾಲಾ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ’ ಭಾರತದಾದ್ಯಂತ ಜಾರಿಗೆ ತರಬೇಕಾಗಿದೆ.

ರಾಜ್ಯ ಸರ್ಕಾರದಿಂದ ಗ್ಯಾರಂಟಿಯಲ್ಲಿ ಜನರಿಗೆ ಬಹುದೊಡ್ಡ ಮೋಸ: ಮಹೇಶ್ ಟೆಂಗಿನಕಾಯಿ

0

ಬೆಂಗಳೂರು: ರಾಜ್ಯ ಸರ್ಕಾರವು ಗ್ಯಾರಂಟಿ ಎಂದು ಹೇಳುತ್ತ ಹೇಳುತ್ತ ಗ್ಯಾರಂಟಿಯಲ್ಲಿ ಜನರಿಗೆ ಬಹುದೊಡ್ಡ ಮೋಸವನ್ನು ಮಾಡುತ್ತಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪಡಿತರ ಚೀಟಿದಾರರಿಗೆ ಜನವರಿ 2025ರ ಹಣವನ್ನಾದರೂ ಹಾಕಿ ಅಥವಾ ಅಕ್ಕಿಯನ್ನಾದರೂ ಕೊಡಿ ಎಂದು ಆಗ್ರಹಿಸಿದರು. ಒಂದು ಕಡೆ ಗೃಹಲಕ್ಷ್ಮಿಯ 2025ರ ಫೆಬ್ರವರಿ, ಮಾರ್ಚ್ ತಿಂಗಳ 5 ಸಾವಿರ ಕೋಟಿ ಹಣವನ್ನು ಕೊಟ್ಟಿಲ್ಲ ಎಂದು ಟೀಕಿಸಿದರು.

ರಾಜ್ಯ ಸರ್ಕಾರವು ಜನವರಿ 2025ಕ್ಕೆ ಸಂಬಂಧಿಸಿ ಪಡಿತರ ಚೀಟಿದಾರರಿಗೆ 657 ಕೋಟಿ ಹಣವನ್ನಾದರೂ ಹಾಕಲಿ ಅಥವಾ 5 ಕೆಜಿ ಅಕ್ಕಿಯನ್ನಾದರೂ ಮಾರ್ಚ್ ತಿಂಗಳ ಒಳಗೆ ಕೊಡಬೇಕು ಎಂದು ಒತ್ತಾಯಿಸಿದರು. ಇದು ಭಿಕ್ಷೆ ಹಾಕುವುದಲ್ಲ; ಗ್ಯಾರಂಟಿ ಘೋಷಿಸುವಾಗ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ, 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. 5 ಕೆಜಿ ಅಕ್ಕಿಯನ್ನು ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರಕಾರ ಕೊಡುತ್ತಿದೆ ಎಂದು ಗಮನ ಸೆಳೆದರು.

ಆದರೆ, ಜನವರಿ 2025ಕ್ಕೆ ಸಂಬಂಧಿಸಿ ಪಡಿತರ ಚೀಟಿದಾರರಿಗೆ ಅಕ್ಕಿ ಕೊಟ್ಟಿಲ್ಲ; 657 ಕೋಟಿ ಉಳಿತಾಯವೇ? ಹಣಕಾಸಿನ ತೊಂದರೆ ಇದೆಯೇ? ಎಂದು ಕೇಳಿದ ಅವರು, ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸವನ್ನು ಸಚಿವರು ಮಾಡಬೇಕೆಂದು ಆಗ್ರಹಿಸಿದರು. 1 ಕೋಟಿ 27 ಲಕ್ಷ ಜನರಿಗೆ ಅಕ್ಕಿ ಹಾಕುವುದಾಗಲೀ ಅಥವಾ ಹಣ ನೀಡುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಸಚಿವರು ಸದನದಲ್ಲಿ ಉತ್ತರ ಕೊಡುವ ವೇಳೆ ಇದನ್ನು ಕೇಂದ್ರ ಸರಕಾರದ ಮೇಲೆ ಹಾಕುವ ಪ್ರಯತ್ನ ಮಾಡಿದ್ದರು. ಇದರ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ಮಾಹಿತಿ ಪಡೆದಿದ್ದೇನೆ. ದುಡ್ಡು ತುಂಬಿದರೆ ಮಧ್ಯಾಹ್ನದ ಒಳಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದಾರೆ; ಇದರಲ್ಲಿ ಕೇಂದ್ರ ಸರಕಾರದ ಯಾವುದೇ ರೀತಿಯ ಪಾಲಿಲ್ಲ ಎಂದರಲ್ಲದೇ, ರಾಜ್ಯ ಸರಕಾರವೇ ಮೋಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು.

ರಾಜೀವ್ ಗೌಡಗೆ ಷರತ್ತು ಬದ್ಧ ಜಾಮೀನು: ಪಟಾಕಿ ಹಚ್ಚದಂತೆ ಕೋರ್ಟ್ ಸೂಚನೆ

0

ಚಿಕ್ಕಬಳ್ಳಾಪುರ, ಜನವರಿ 30: ಅಮೃತಾ ಗೌಡ ಮೇಲೆ ಬೆದರಿಕೆ ಹಾಕಿದ್ದ ಆರೋಪಿಗಳಲ್ಲಿ ರಾಜೀವ್ ಗೌಡನು ಇಂದು ಮಂಗಳೂರಿನ ನ್ಯಾಯಾಲಯದಲ್ಲಿ ಜಾಮೀನಿನ ಮೂಲಕ ಬಿಡುಗಡೆ ಹೊಂದಿದ್ದಾರೆ.

ಜೆಎಂಎಫ್ಸಿ ಕೋರ್ಟ್ ಅವರು 50 ಸಾವಿರ ರೂ. ಶ್ಯೂರಿಟಿ ಬಾಂಡ್ ಜೊತೆಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಅವರು ಪೋಲೀಸರು ನಡೆಸುತ್ತಿರುವ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕಾಗಿದೆ. ಜಾಮೀನಿನ ಖುಷಿ ವ್ಯಕ್ತಪಡಿಸಿ ಯಾವುದೇ ಪಟಾಕಿ ಅಥವಾ ಸಂಭ್ರಮಾಚರಣೆ ಮಾಡಬಾರದು ಎಂದು ನ್ಯಾಯಮೂರ್ತಿ ಮೊಹಮ್ಮದ್ ರೋಷನ್ ಶಾ ಸೂಚಿಸಿದ್ದಾರೆ.

ಇದರಿಂದ ರಾಜೀವ್ ಗೌಡನ ವಿಚಾರದಲ್ಲಿ ಮುಂದಿನ ತನಿಖೆ ನಿಶ್ಚಿತವಾಗಿಯೇ ಶ್ರದ್ಧೆಯಿಂದ ಮತ್ತು ನಿಯಮ ಪಾಲನೆಯೊಂದಿಗೆ ನಡೆಯಲಿದೆ.

ನಕಲಿ ಕಾಂಗ್ರೆಸ್ ಪಕ್ಷದಿಂದ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ: ಬಿ.ವೈ.ವಿಜಯೇಂದ್ರ

0

ಬೆಂಗಳೂರು: ಹಿಂದೊಮ್ಮೆ 415 ಸಂಸದರ ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಇವತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇವಲ 99 ಸ್ಥಾನಗಳಿಗೆ ತೃಪ್ತಿ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

ವಿಧಾನಸಭೆಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಂಥ ಹೀನಾಯ ಪರಿಸ್ಥಿತಿ ಬಂದಿದೆ ಎಂದು ಒಂದು ಕ್ಷಣ ಯೋಚಿಸಬೇಕಾಗುತ್ತದೆ. ಹಿಂದೆ ಸೀತೆಯನ್ನು ರಾವಣ ಅಪಹರಿಸಿ ಲಂಕೆಗೆ ತೆಗೆದುಕೊಂಡು ಹೋದನೋ, ಅದೇ ರೀತಿ ಕಾಂಗ್ರೆಸ್ಸಿನವರು ಮಹಾತ್ಮ ಗಾಂಧಿಯವರ ಹೆಸರನ್ನು ಬಳಸಿಕೊಂಡಿದೆ. ಈ ನಕಲಿ ಕಾಂಗ್ರೆಸ್ ಪಕ್ಷವು, ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಅಷ್ಟೇ ಅಲ್ಲ; ಬಡತನ ನಿರ್ಮೂಲನೆ ಮಾಡುತ್ತೇವೆ; ಗರೀಬಿ ಹಠಾವೋ ಎಂದು ಹೇಳಿ, ಈ ದೇಶದ ಬಡವರಿಗೂ ಮಕ್ಮಲ್ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಿದ ಪರಿಣಾಮವಾಗಿ ಇಂಥ ಹೀನಾಯ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ದೇಶ ಮತ್ತು ರಾಜ್ಯದಲ್ಲಿ ಬಂದಿದೆ ಎಂದು ನುಡಿದರು.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಇಂಥ ಹೀನಾಯ ಪರಿಸ್ಥಿತಿಗೆ ಇವತ್ತು ಯಾಕೆ ಬಂದಿದೆ ಎಂದು ಬೆಳಕು ಚೆಲ್ಲಬೇಕಾಗಿತ್ತು. ಈ ದೇಶದಲ್ಲಿ 1961ರಲ್ಲಿ ಕಾಂಗ್ರೆಸ್ಸಿನ 364 ಸಂಸದರಿದ್ದು, 1984ರಲ್ಲಿ 415 ಸಂಸದರು ಸಂಸತ್ತಿನಲ್ಲಿದ್ದರು ಎಂದು ಗಮನಕ್ಕೆ ತಂದರು.

ನಮ್ಮ ರಾಜ್ಯದಿಂದ ಜಿಎಸ್‍ಟಿ ತೆರಿಗೆ ಮೂಲಕ ಕೇಂದ್ರಕ್ಕೆ ಎಷ್ಟು ಮೊತ್ತ ಹೋಗಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ ಎಂದ ಅವರು, ಆಡಳಿತ ಪಕ್ಷದವರ ಮಾತನ್ನು ಕೇಳುತ್ತಿದ್ದರೆ ನಮ್ಮ ರಾಜ್ಯದ ತೆರಿಗೆ ಹಣದಿಂದ ಕೇಂದ್ರ ಸರಕಾರವು ಬಹಳ ಭ್ರಷ್ಟಾಚಾರ ಮಾಡಿದೆ; ಲೂಟಿ ಮಾಡಿದೆ; ಈ ದೇಶದಲ್ಲಿ, ರಾಜ್ಯದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂಬ ಅರ್ಥದಲ್ಲಿ ಮಾತನಾಡುತ್ತಿದ್ದಾರೆ. ಇದು ಒಂದು ರೀತಿ ಅರ್ಥಹೀನ ಎಂದು ತಿಳಿಸಿದರು.

ಪಿ.ಟಿ. ಉಷಾ ಪತಿ ವಿ. ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ

0

ನವದೆಹಲಿ: ಪ್ರಸಿದ್ಧ ಅಥ್ಲೀಟ್‌, ರಾಜ್ಯಸಭಾ ಸದಸ್ಯೆ ಹಾಗೂ ಭಾರತೀಯ ಒಲಿಂಪಿಕ್ ಸಂಘದ ಅಧ್ಯಕ್ಷೆ ಪಿ.ಟಿ. ಉಷಾ ಪತಿ ವಿ. ಶ್ರೀನಿವಾಸನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಪಿ.ಟಿ. ಉಷಾ ಅವರನ್ನು ಸಂಪರ್ಕಿಸಿ, ಈ ದುಃಖದ ಸಂದರ್ಭದಲ್ಲಿ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ವಿ. ಶ್ರೀನಿವಾಸನ್ ನಿಧನಕ್ಕೆ ದೇಶಾದ್ಯಂತ ಕ್ರೀಡಾ ಮತ್ತು ರಾಜಕೀಯ ವಲಯದಿಂದ ಸಂತಾಪ ಸಂದೇಶಗಳು ಹರಿದುಬರುತ್ತಿವೆ.

ಶ್ರೀನಿವಾಸನ್ ಅವರು ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ತಮ್ಮ ನಿವಾಸದಲ್ಲಿ ಅಕಸ್ಮಿಕವಾಗಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರ ಪ್ರಯತ್ನದ ಹೊರತಾಗಿಯೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಹೃದಯಾಘಾತದಿಂದ ನಿಧನವಾಗಿರಬಹುದು ಎಂದು ಶಂಕಿಸಲಾಗಿದೆ.

ವಿ. ಶ್ರೀನಿವಾಸನ್ ಅವರು ಮಾಜಿ ಕೇಂದ್ರ ಸರ್ಕಾರಿ ನೌಕರರಾಗಿದ್ದರು. ಪಿ.ಟಿ. ಉಷಾ ಅವರ ದೀರ್ಘಕಾಲದ ಅಥ್ಲೆಟಿಕ್ ವೃತ್ತಿ, ಒಲಿಂಪಿಕ್ ಸಾಧನೆಗಳು, ಕ್ರೀಡಾ ಆಡಳಿತ ಹಾಗೂ ರಾಜಕೀಯ ಪ್ರವೇಶದ ಹಾದಿಯಲ್ಲಿ ಅವರು ಸದಾ ಬೆಂಬಲವಾಗಿ ನಿಂತಿದ್ದರು. ಉಷಾ ಅವರ ಜೀವನದಲ್ಲಿ ಅವರು ‘ರಾಕ್’ ಹಾಗೂ ಪ್ರೇರಣೆಯ ಮೂಲ ಎಂದು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದರು.

ಅಜಿತ್ ಪವಾರ್ ನಿಧನದ ಬಳಿಕ ಕ್ಯಾಬಿನೆಟ್ ಪುನರ್ʼರಚನೆ ಸುಳಿವು: ಸುನೇತ್ರಾ ಪವಾರ್ ಸಚಿವ ಸಂಪುಟ ಸೇರ್ಪಡೆಗೆ ಒತ್ತಡ

0

ಮುಂಬೈ: NCP ನಾಯಕ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ನಂತರ ಪಕ್ಷದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಬೇಕು ಎಂಬ ಆಗ್ರಹ NCP ವಲಯದಲ್ಲಿ ಕೇಳಿಬರುತ್ತಿದೆ.

ಈ ಕುರಿತು ಮಾತನಾಡಿದ ಅಜಿತ್ ಪವಾರ್ ಅವರ ಆಪ್ತ ಹಾಗೂ ಹಿರಿಯ ಎನ್ಸಿಪಿ ನಾಯಕ ನರಹರಿ ಜಿರ್ವಾಲ್, “ಸುನೇತ್ರಾ ಪವಾರ್ ಅವರನ್ನು ಕ್ಯಾಬಿನೆಟ್‌ಗೆ ಸೇರಿಸಬೇಕು ಎಂಬುದು ಕೆಲ ನಾಯಕರ ಅಭಿಪ್ರಾಯ. ಈ ಬಗ್ಗೆ ಪಕ್ಷದ ನಾಯಕತ್ವದೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.

ಬಿಜೆಪಿ ನೇತೃತ್ವದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿರುವ ಎನ್ಸಿಪಿ (ಅಜಿತ್ ಪವಾರ್ ಗುಂಪು)ಗೆ ಸುನೇತ್ರಾ ಪವಾರ್ ನಾಯಕತ್ವ ವಹಿಸಿಕೊಳ್ಳಬೇಕು ಎಂಬುದು ಜನರ ಆಶಯವಾಗಿದೆ ಎಂದು ಜಿರ್ವಾಲ್ ಹೇಳಿದ್ದಾರೆ. ಜೊತೆಗೆ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವುದು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಅಜಿತ್ ಪವಾರ್ ನಿಭಾಯಿಸುತ್ತಿದ್ದ ಖಾತೆಗಳ ಮೇಲೂ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಅಜಿತ್ ಪವಾರ್ ಅವರ ಬಳಿ ಇದ್ದ ಖಾತೆಗಳು ಪಕ್ಷದ ಕೋಟಾದಡಿಯಲ್ಲಿ ಬರುತ್ತಿರುವುದರಿಂದ, ಅವುಗಳನ್ನು ಎನ್ಸಿಪಿಗೆ ಮುಂದುವರಿಸಿ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅಜಿತ್ ಪವಾರ್ ನಿಧನದ ಹಿನ್ನೆಲೆಯಲ್ಲಿ ನಡೆಯುವ ಸಾಧ್ಯತೆ ಇರುವ ಕ್ಯಾಬಿನೆಟ್ ಪುನರ್ ರಚನೆಯಲ್ಲಿ, ಸುನೇತ್ರಾ ಪವಾರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ, ಪಕ್ಷದ ಕೋಟಾದಲ್ಲಿರುವ ಹಣಕಾಸು, ಯೋಜನೆ, ರಾಜ್ಯ ಅಬಕಾರಿ, ಕ್ರೀಡೆ ಮತ್ತು ಯುವಜನ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗಳ ಹೆಚ್ಚುವರಿ ಜವಾಬ್ದಾರಿಗಳನ್ನು ಮುಂದುವರಿಸಬೇಕು ಎಂಬ ಒತ್ತಡವೂ ಹೆಚ್ಚಾಗಿದೆ.

ಕದ್ದು ಮುಚ್ಚಿ ದರ್ಶನ್ ಭೇಟಿ: ಜೈಲು ನಿಯಮ ಉಲ್ಲಂಘನೆಗೆ ವಾರ್ಡನ್ ಎತ್ತಂಗಡಿ, ಪೊಲೀಸ್ ಪೇದೆಗೂ ಶಿಸ್ತು ಕ್ರಮ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಅನಧಿಕೃತವಾಗಿ ಭೇಟಿ ಮಾಡಿದ ಪ್ರಕರಣದಲ್ಲಿ ಜೈಲು ಹಾಗೂ ಪೊಲೀಸ್ ಇಲಾಖೆಯಲ್ಲಿ ಕಠಿಣ ಕ್ರಮ ಜರುಗಿಸಲಾಗಿದೆ. ಯಲಹಂಕ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ಗೆ ದರ್ಶನ್ ಭೇಟಿಗೆ ಅವಕಾಶ ಮಾಡಿಕೊಟ್ಟ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಕ್ರಮ ಕೈಗೊಂಡಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ವೇಳೆ ಕರ್ತವ್ಯಲೋಪ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಪ್ರಭುಶಂಕರ ಚೌಹಾಣ್ ಅವರನ್ನು ಚಾಮರಾಜನಗರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಈ ಘಟನೆಯ ಕುರಿತು ಇಲಾಖಾ ತನಿಖೆಗೂ ಆದೇಶಿಸಲಾಗಿದೆ.

ಜನವರಿ 24ರಂದು ಯಲಹಂಕ ಠಾಣೆಯ ಕಾನ್ಸ್‌ಟೇಬಲ್ ಗಣೇಶ್ ಆರೋಪಿಗಳನ್ನು ಜೈಲಿಗೆ ಬಿಡಲು ಬಂದ ವೇಳೆ, ನಟ ದರ್ಶನ್ ಅವರನ್ನು ನೋಡಲು ಮನವಿ ಮಾಡಿದ್ದಾರೆ. ಈ ಮನವಿಗೆ ಸ್ಪಂದಿಸಿದ ವಾರ್ಡನ್, ಸಿಸಿಟಿವಿ ಕ್ಯಾಮರಾ ತಪ್ಪಿಸಿ ಕಾನ್ಸ್‌ಟೇಬಲ್ ಅವರನ್ನು ದರ್ಶನ್ ಇರುವ ಬ್ಯಾರಕ್ ಸಮೀಪಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯು ಡಿಜಿಪಿ ಅಲೋಕ್ ಕುಮಾರ್ ಅವರ ಗಮನಕ್ಕೆ ಬಂದ ಕೂಡಲೇ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ನಿಯಮ ಉಲ್ಲಂಘಿಸಿ ಜೈಲಿನೊಳಗೆ ಪ್ರವೇಶಿಸಿ ದರ್ಶನ್ ನೋಡಲು ಹೋಗಿದ್ದ ಪೊಲೀಸ್ ಪೇದೆ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವಂತೆ ಈಶಾನ್ಯ ವಿಭಾಗದ ಡಿಸಿಪಿಗೆ ಸೂಚನೆ ನೀಡಲಾಗಿದೆ.

ಈ ಕ್ರಮದ ಮೂಲಕ ಜೈಲಿನೊಳಗಿನ ಭದ್ರತೆ ಹಾಗೂ ನಿಯಮ ಪಾಲನೆಗೆ ಯಾವುದೇ ವಿನಾಯಿತಿ ಇಲ್ಲ ಎಂಬ ಸಂದೇಶವನ್ನು ಜೈಲು ಆಡಳಿತ ರವಾನಿಸಿದೆ.

error: Content is protected !!