Home Blog Page 99

ಜೋಳಿಗೆ ಹಿಡಿದು ವ್ಯಸನ ಭಿಕ್ಷೆ ಬೇಡಿದ ಮಹಾನ್ ಸಂತ!

0

ಮಾಜವನ್ನು ಬದಲಾಯಿಸಲು ಕಾನೂನು, ಶಿಕ್ಷೆ ಅಥವಾ ಭಯಕ್ಕಿಂತಲೂ ಮನಪರಿವರ್ತನೆಯೇ ಅತ್ಯಂತ ದೊಡ್ಡ ಅಸ್ತ್ರ ಎಂಬುದನ್ನು ತಮ್ಮ ಬದುಕಿನ ಮೂಲಕ ಸಾಬೀತುಪಡಿಸಿದ ಮಹಾನ್ ಸಮಾಜ ಸುಧಾರಕರಲ್ಲಿ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಅಜ್ಜನವರು ಅಗ್ರಗಣ್ಯರು.

ಕೈಯಲ್ಲಿ ಕೆಂಪು ಬಣ್ಣದ ಜೋಳಿಗೆ, ಹೃದಯದಲ್ಲಿ ಸಮಾಜದ ನೋವು, ತುಟಿಗಳಲ್ಲಿ ಜಾಗೃತಿಯ ಸಂದೇಶ ಹೊತ್ತು ದೇಶ-ವಿದೇಶಗಳಲ್ಲಿ ಸಂಚರಿಸಿದ ಅವರು, ಲಕ್ಷಾಂತರ ಜನರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದರು. ಜನರಿಂದ ಹಣವಲ್ಲ, ಮದ್ಯ, ತಂಬಾಕು, ಗುಟ್ಕಾ, ಬೀಡಿ, ಸಿಗರೇಟ್ ಸೇರಿದಂತೆ ತಮ್ಮ ದುಷ್ಚಟಗಳನ್ನೇ ಜೋಳಿಗೆಗೆ ಹಾಕುವಂತೆ ಭಿಕ್ಷೆ ಬೇಡಿದ ಅವರ ಅಪರೂಪದ ಅಭಿಯಾನ ವಿಶ್ವದಲ್ಲೇ ವಿಶಿಷ್ಟ ಸಾಮಾಜಿಕ ಜಾಗೃತಿ ಚಳವಳಿಯಾಗಿ ಗುರುತಿಸಿಕೊಂಡಿದೆ.

ಅವರ ಈ ಅಪೂರ್ವ ಸೇವೆಯನ್ನು ಗೌರವಿಸಿ ಕರ್ನಾಟಕ ಸರ್ಕಾರವು ಪ್ರತಿವರ್ಷ ಆಗಸ್ಟ್ 1ರಂದು ‘ವ್ಯಸನ ಮುಕ್ತ ದಿನಾಚರಣೆ’ಯನ್ನು ರಾಜ್ಯಾದ್ಯಂತ ಆಚರಿಸುತ್ತಿದೆ. ಯುವಜನತೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನಕ್ಕೆ ವಿಶೇಷ ಮಹತ್ವ ನೀಡಲಾಗಿದೆ.

ಬಾಲ್ಯದಲ್ಲೇ ಸನ್ಯಾಸ, ಸಮಾಜ ಸೇವೆಯತ್ತ ಪಯಣ

1930ರ ಆಗಸ್ಟ್ 1ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜನಿಸಿದ ಡಾ. ಮಹಾಂತ ಶಿವಯೋಗಿಗಳು ಬಾಲ್ಯದಲ್ಲಿಯೇ ಆಧ್ಯಾತ್ಮಿಕ ಬದುಕಿನತ್ತ ಆಕರ್ಷಿತರಾದರು. ಕೇವಲ 10ನೇ ವಯಸ್ಸಿನಲ್ಲೇ ಸನ್ಯಾಸ ಸ್ವೀಕರಿಸಿ ಸವದಿಯ ವಿರಕ್ತ ಮಠದ ಚಿಕ್ಕ ಸ್ವಾಮೀಜಿಗಳಾದರು.

ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತ ಹಾಗೂ ಆಧ್ಯಾತ್ಮಿಕ ವಿದ್ಯೆಗಳಲ್ಲಿ ಉನ್ನತ ಶಿಕ್ಷಣ ಪಡೆದ ಅವರು, ತಮ್ಮ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸುವ ಸಂಕಲ್ಪ ಕೈಗೊಂಡರು. 1970ರಲ್ಲಿ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧಿಪತಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಸಮಾಜಮುಖಿ ಕಾರ್ಯಗಳಿಗೆ ಹೊಸ ದಿಕ್ಕು ನೀಡಿದರು.

ಒಂದು ಕುಟುಂಬದ ದುರಂತದಿಂದ ಹುಟ್ಟಿದ ಮಹಾನ್ ಚಳವಳಿ

ಅತಿಯಾದ ಮದ್ಯಪಾನದಿಂದ ಮೃತಪಟ್ಟ ಯುವಕನ ಮನೆಗೆ ಸಾಂತ್ವನ ಹೇಳಲು ತೆರಳಿದಾಗ ಕಂಡ ದೃಶ್ಯ ಶ್ರೀಗಳ ಬದುಕಿನ ದಿಕ್ಕನ್ನೇ ಬದಲಿಸಿತು. ಗಂಡನನ್ನು ಕಳೆದುಕೊಂಡ ಪತ್ನಿ, ಹಸಿವಿನಿಂದ ಕಣ್ಣೀರು ಸುರಿಸುತ್ತಿದ್ದ ಮಕ್ಕಳು, ದಿಕ್ಕಿಲ್ಲದೆ ನಿಂತ ಕುಟುಂಬವನ್ನು ಕಂಡ ಅವರು, ಇದು ಕೇವಲ ಒಂದು ಕುಟುಂಬದ ದುಃಖವಲ್ಲ, ಸಾವಿರಾರು ಮನೆಗಳ ವಾಸ್ತವ ಎಂದು ಅರಿತುಕೊಂಡರು.

ಈ ಅನುಭವವೇ 1975ರಲ್ಲಿ ‘ಮಹಾಂತ ಜೋಳಿಗೆ’ ಅಭಿಯಾನಕ್ಕೆ ಕಾರಣವಾಯಿತು.

ಹಣವಲ್ಲ, ದುಷ್ಚಟಗಳನ್ನೇ ಜೋಳಿಗೆಗೆ ಹಾಕಿ!

ಕೈಯಲ್ಲಿ ಕೆಂಪು ಜೋಳಿಗೆ ಹಿಡಿದು ಮನೆ-ಮನೆಗೆ ತೆರಳುತ್ತಿದ್ದ ಶ್ರೀಗಳು,

“ಮದ್ಯ, ತಂಬಾಕು, ಗುಟ್ಕಾ, ಬೀಡಿ, ಸಿಗರೇಟ್ ಹಾಗೂ ಎಲ್ಲ ರೀತಿಯ ದುಷ್ಚಟಗಳನ್ನು ಈ ಜೋಳಿಗೆಗೆ ಹಾಕಿ… ಇನ್ನು ಮುಂದೆ ಅವುಗಳಿಂದ ದೂರವಿರಿ” ಎಂದು ಮನವಿ ಮಾಡುತ್ತಿದ್ದರು.

ಅವರ ಮಾತಿನಲ್ಲಿ ಭಯ ಇರಲಿಲ್ಲ; ಪ್ರೀತಿ, ಕಾಳಜಿ ಹಾಗೂ ಬದುಕಿನ ಮೌಲ್ಯಗಳಿದ್ದವು. ಪರಿಣಾಮ ಸಾವಿರಾರು ಜನರು ವ್ಯಸನ ತೊರೆದು ಹೊಸ ಬದುಕು ಆರಂಭಿಸಿದರು.

ಸುಮಾರು 42 ವರ್ಷಗಳ ಕಾಲ ದೇಶದ ಮೂಲೆಮೂಲೆಗೂ ಹಾಗೂ ಇಂಗ್ಲೆಂಡ್ ಸೇರಿದಂತೆ ವಿದೇಶಗಳಿಗೂ ತೆರಳಿ ವ್ಯಸನ ಮುಕ್ತ ಸಮಾಜಕ್ಕಾಗಿ ಅವರು ನಿರಂತರ ಜನಜಾಗೃತಿ ಮೂಡಿಸಿದರು.

ವ್ಯಸನ ನಿರ್ಮೂಲನೆ ಮಾತ್ರವಲ್ಲ… ಸಮಾಜ ಸುಧಾರಣೆಯ ಮಹಾಯಜ್ಞ

ಡಾ. ಮಹಾಂತ ಶಿವಯೋಗಿ ಅಜ್ಜನವರ ಸೇವೆ ವ್ಯಸನ ನಿರ್ಮೂಲನೆಗೆ ಮಾತ್ರ ಸೀಮಿತವಾಗಿರಲಿಲ್ಲ.

ಅವರು ನಿರಂತರ ಅನ್ನದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಚಳವಳಿ, ದೇವದಾಸಿಯರ ಮಕ್ಕಳಿಗಾಗಿ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳು ಹಾಗೂ ವಿಧವೆಯರಿಗಾಗಿ ‘ಕಾಯಕ ಸಂಜೀವಿನಿ’ ಸಂಸ್ಥೆ, ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರಗಳು, ಪರಿಶಿಷ್ಟ ಜಾತಿ ಹಾಗೂ ಪಂಗಡದ ಯುವಕರಿಗೆ ಧರ್ಮ ಸಂಸ್ಕಾರ, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಪತಿಗಳನ್ನಾಗಿ ಮಾಡುವುದು, ಮಠದ ಜಮೀನಿನಲ್ಲಿ ರೈತರಿಗೆ ಕೃಷಿಗೆ ಅವಕಾಶ ಕಲ್ಪಿಸುವುದು ಹಾಗೂ ಬರಗಾಲದ ಸಂದರ್ಭದಲ್ಲಿ ಗಂಜಿ ಕೇಂದ್ರಗಳನ್ನು ಆರಂಭಿಸುವ ಮೂಲಕ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದರು.

ಸಮಾಜ ಸೇವೆಗೆ ಸಂದ ಅನೇಕ ಗೌರವಗಳು

ಅವರ ಅಪೂರ್ವ ಸೇವೆಗಾಗಿ ‘ಅಭಿನವ ಚನ್ನಬಸವಣ್ಣ’, ‘ಕಾಯಕನಿಷ್ಠ ಶಿವಯೋಗಿ’, ‘ಪ್ರವಚನ ಪ್ರವೀಣ’, ‘ಕಾಯಕಯೋಗಿ’, ‘ಸಮಾಜ ಸುಧಾರಕ’, ‘ದಲಿತೋದ್ಧಾರ ಮಹಾಂತ’, ‘ಸ್ಪಂದನ ಪ್ರಶಸ್ತಿ’, ‘ಗಣಾಚಾರ ಪ್ರಶಸ್ತಿ’, ‘ಕನಕಶ್ರೀ ಪ್ರಶಸ್ತಿ’, ‘ನಾಡಿನ ಪುಣ್ಯದ ಶಿವಯೋಗಿ ಪ್ರಶಸ್ತಿ’, ‘ಯೋಗರತ್ನ ಪ್ರಶಸ್ತಿ’ ಸೇರಿದಂತೆ ಹಲವಾರು ಪ್ರತಿಷ್ಠಿತ ಗೌರವಗಳು ಅವರಿಗೆ ಲಭಿಸಿವೆ.

ಸಂದೇಶ ಇಂದಿಗೂ ಜೀವಂತ

2018ರಲ್ಲಿ ಡಾ. ಮಹಾಂತ ಶಿವಯೋಗಿ ಅಜ್ಜನವರು ಶಿವೈಕ್ಯರಾದರೂ, ಅವರು ಬಿತ್ತಿದ ವ್ಯಸನ ಮುಕ್ತ ಸಮಾಜದ ಕನಸು ಇಂದಿಗೂ ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ.

ಇಂದಿನ ದಿನಗಳಲ್ಲಿ ಯುವಜನತೆ ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿರುವ ಸಂದರ್ಭದಲ್ಲಿ, ಅವರ ‘ಮಹಾಂತ ಜೋಳಿಗೆ’ ಚಳವಳಿ ಇನ್ನಷ್ಟು ಪ್ರಸ್ತುತವಾಗಿದೆ. ಆರೋಗ್ಯವಂತ ವ್ಯಕ್ತಿ, ಸುಖೀ ಕುಟುಂಬ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಅವರ ಆದರ್ಶಗಳು ಇಂದಿಗೂ ದಾರಿದೀಪವಾಗಿವೆ.

“ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಅಜ್ಜನವರು ಆರಂಭಿಸಿದ ‘ಮಹಾಂತ ಜೋಳಿಗೆ’ ಅಭಿಯಾನವು ಕೇವಲ ವ್ಯಸನ ವಿರೋಧಿ ಚಳವಳಿಯಲ್ಲ; ಅದು ಸಮಾಜದ ಮನಪರಿವರ್ತನೆಯ ಮಹತ್ವದ ಆಂದೋಲನವಾಗಿದೆ. ಪ್ರತಿಯೊಬ್ಬ ಯುವಕ-ಯುವತಿಯೂ ಮಾದಕ ವಸ್ತುಗಳು ಹಾಗೂ ದುಷ್ಚಟಗಳಿಂದ ದೂರವಿದ್ದು ಆರೋಗ್ಯಯುತ ಜೀವನ ನಡೆಸಬೇಕು. ಆಗಸ್ಟ್ 1ರ ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ಕುಟುಂಬ, ಸ್ನೇಹಿತರು ಹಾಗೂ ಸಮಾಜದಲ್ಲಿ ವ್ಯಸನ ವಿರೋಧಿ ಜಾಗೃತಿ ಮೂಡಿಸುವ ಸಂಕಲ್ಪ ಮಾಡಬೇಕು. ವ್ಯಸನ ಮುಕ್ತ ವ್ಯಕ್ತಿ, ವ್ಯಸನ ಮುಕ್ತ ಕುಟುಂಬ ಮತ್ತು ವ್ಯಸನ ಮುಕ್ತ ಗ್ರಾಮಗಳ ನಿರ್ಮಾಣವೇ ಡಾ. ಮಹಾಂತ ಶಿವಯೋಗಿ ಅಜ್ಜನವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಪ್ರಮುಖಾಂಶಗಳು

  • 1930ರ ಆಗಸ್ಟ್ 1ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜನನ.
  • ಕೇವಲ 10ನೇ ವಯಸ್ಸಿನಲ್ಲೇ ಸನ್ಯಾಸ ಸ್ವೀಕರಿಸಿ ಸವದಿಯ ವಿರಕ್ತ ಮಠದ ಚಿಕ್ಕ ಸ್ವಾಮೀಜಿಗಳಾದರು.
  • ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತ ಹಾಗೂ ಆಧ್ಯಾತ್ಮಿಕ ವಿದ್ಯೆಗಳಲ್ಲಿ ಪರಿಣತಿ ಪಡೆದರು.
  • 1970ರಲ್ಲಿ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧಿಪತಿಗಳಾಗಿ ಅಧಿಕಾರ ವಹಿಸಿಕೊಂಡರು.
  • 1975ರಲ್ಲಿ ಐತಿಹಾಸಿಕ ‘ಮಹಾಂತ ಜೋಳಿಗೆ’ ವ್ಯಸನ ವಿರೋಧಿ ಅಭಿಯಾನ ಆರಂಭಿಸಿದರು.
  • 42 ವರ್ಷಗಳ ಕಾಲ ದೇಶ-ವಿದೇಶಗಳಲ್ಲಿ ಸಂಚರಿಸಿ ವ್ಯಸನ ಮುಕ್ತ ಸಮಾಜಕ್ಕಾಗಿ ಜನಜಾಗೃತಿ ಮೂಡಿಸಿದರು.
  • ಅನ್ನದಾಸೋಹ, ದೇವದಾಸಿ ವಿಮೋಚನೆ, ಯೋಗ-ನಿಸರ್ಗ ಚಿಕಿತ್ಸೆ, ಮಹಿಳಾ ಸಬಲೀಕರಣ, ರೈತರಿಗೆ ನೆರವು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು.
  • ಸಮಾಜ ಸೇವೆಗಾಗಿ ‘ಅಭಿನವ ಚನ್ನಬಸವಣ್ಣ’, ‘ಸಮಾಜ ಸುಧಾರಕ’, ‘ಕಾಯಕಯೋಗಿ’, ‘ಯೋಗರತ್ನ’ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾದರು.
  • 2018ರಲ್ಲಿ ಶಿವೈಕ್ಯರಾದರೂ ಅವರ ವ್ಯಸನ ಮುಕ್ತ ಸಮಾಜದ ಸಂದೇಶ ಇಂದಿಗೂ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದೆ.
  • ಅವರ ಅಪೂರ್ವ ಸಮಾಜ ಸೇವೆಯನ್ನು ಗೌರವಿಸಿ ಕರ್ನಾಟಕ ಸರ್ಕಾರವು ಪ್ರತಿವರ್ಷ ಆಗಸ್ಟ್ 1 ಅನ್ನು ‘ವ್ಯಸನ ಮುಕ್ತ ದಿನಾಚರಣೆ’ಯಾಗಿ ಆಚರಿಸುತ್ತಿದೆ.

ವಸಂತ ಬಿ. ಮಡ್ಲೂರ, ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗದಗ.

ಬಾಕಿ ಕಡತಗಳ ತ್ವರಿತ ವಿಲೇವಾರಿಗೆ ಸೂಚನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಸೇವೆ ಹಾಗೂ ಬಾಕಿ ಕಡತಗಳ ವಿಲೇವಾರಿಯಲ್ಲಿ ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ ಮಾಡಬಾರದು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಆಡಳಿತ ಹಾಗೂ ಇಲಾಖಾ ಕಾರ್ಯಕಲಾಪಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಆಡಳಿತಾತ್ಮಕ ಕಡತಗಳು, ಸಾರ್ವಜನಿಕ ಅರ್ಜಿಗಳು ಹಾಗೂ ಭೂ-ಕಂದಾಯ ಸಂಬಂಧಿತ ಪ್ರಸ್ತಾವನೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಹಲವು ತಿಂಗಳುಗಳಿಂದ ಹಾಗೂ ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳನ್ನು ನಿಯಮಾನುಸಾರ ತಕ್ಷಣ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಡತಗಳ ಪರಿಶೀಲನೆ ವೇಳೆ ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಿಸಬೇಕು. ಆಡಳಿತಾತ್ಮಕ ಅಥವಾ ತಾಂತ್ರಿಕ ಲೋಪಗಳಿದ್ದರೆ ತಕ್ಷಣವೇ ಸರಿಪಡಿಸಬೇಕು. ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಹಾಗೂ ಮೇಲ್ಮನವಿಗಳಿಗೆ ನಿಗದಿತ ಅವಧಿಯೊಳಗೆ ನಿಖರ ಮಾಹಿತಿ ನೀಡಬೇಕು. ಅರ್ಜಿಗಳನ್ನು ಅನಗತ್ಯವಾಗಿ ಮುಂದೂಡುವ ಪ್ರವೃತ್ತಿ ಸಲ್ಲದು ಎಂದು ತಿಳಿಸಿದರು.

ಅಧಿಕಾರಿಗಳು ಕಚೇರಿ ಕೆಲಸಕ್ಕೆ ಮಾತ್ರ ಸೀಮಿತವಾಗದೆ ಅಗತ್ಯವಿದ್ದಲ್ಲಿ ಸ್ಥಳ ಪರಿಶೀಲನೆ ನಡೆಸಬೇಕು. ಉಪವಿಭಾಗ ಮಟ್ಟದಲ್ಲಿ ನಿಯಮಿತ ಸಭೆಗಳನ್ನು ನಡೆಸಿ ಕಂದಾಯ ಇಲಾಖೆಯ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.

ಮುಜರಾಯಿ ದೇವಾಲಯಗಳಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸೇವೆ ಒದಗಿಸಬೇಕು. ದೇವಾಲಯಗಳ ಸುರಕ್ಷತೆಗಾಗಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಆದಾಯ, ಹುಂಡಿ ಎಣಿಕೆ ಹಾಗೂ ವೆಚ್ಚದ ಲೆಕ್ಕಪತ್ರಗಳನ್ನು ನಿಯಮಿತವಾಗಿ ಪರಿಶೀಲಿಸಿ ಪಾರದರ್ಶಕತೆ ಕಾಪಾಡಬೇಕು ಎಂದು ಸೂಚಿಸಿದರು.

ಅರ್ಚಕರು ಹಾಗೂ ದೇವಾಲಯಗಳ ಆಸ್ತಿ-ಪಾಸ್ತಿಗೆ ಸಂಬಂಧಿಸಿದ ಆಧಾರ್ ಮತ್ತು ಆರ್‌ಟಿಸಿ (RTC) ದಾಖಲೆಗಳನ್ನು ನವೀಕರಿಸುವಂತೆ ಹಾಗೂ ತಹಶೀಲ್ದಾರರು ದೇವಾಲಯಗಳ ಆಡಳಿತವನ್ನು ಖುದ್ದು ಪರಿಶೀಲಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ತಾಲೂಕು ಮಟ್ಟದಲ್ಲಿ ಭೂ ಕಂದಾಯ ಪ್ರಕರಣಗಳು, ಆಕಾರ್‌ಬಂಧ್ ತಿದ್ದುಪಡಿ, ಖಾತೆ ಬದಲಾವಣೆ ಹಾಗೂ ಸಾರ್ವಜನಿಕ ಅರ್ಜಿಗಳ ತ್ವರಿತ ವಿಲೇವಾರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧ ಮುಜರಾಯಿ ದೇವಾಲಯಗಳಲ್ಲಿ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಾದೇಶಿಕ ಆಯುಕ್ತರು ನೀಡಿರುವ ಎಲ್ಲ ಸೂಚನೆಗಳನ್ನು ಶೀಘ್ರ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು, ವಿವಿಧ ತಾಲೂಕುಗಳ ತಹಶೀಲ್ದಾರರು, ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಸಾರ್ವಜನಿಕ ಸೇವೆ ಮತ್ತು ಬಾಕಿ ಕಡತಗಳ ವಿಲೇವಾರಿಯಲ್ಲಿ ವಿಳಂಬಕ್ಕೆ ಅವಕಾಶವಿಲ್ಲ. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ, ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು.”
– ಜಾನಕಿ ಕೆ.ಎಂ., ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ

ಶ್ರೀಮಂತರಿಗೊಂದು ಕಾನೂನು… ಬಡವರಿಗೊಂದು ಕಾನೂನಾ?

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಗಂಗಿಮಡಿ ಬಡಾವಣೆಯ ಲೀಡ್ಕರ್ ಕಾಲೋನಿಯಲ್ಲಿ ನಗರಸಭೆ ನಡೆಸಿದ ಅತಿಕ್ರಮಣ ತೆರವು ಕಾರ್ಯಾಚರಣೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಗುರುವಾರ ಮುಂಜಾನೆ ಜೆಸಿಬಿಗಳ ಮೂಲಕ ಹತ್ತಕ್ಕೂ ಹೆಚ್ಚು ಮನೆಗಳ ಕಂಪೌಂಡ್‌ಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ನಗರಸಭೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರ ನೀಡಿರುವ ಮನೆಗಳಲ್ಲಿ ಹಲವು ವರ್ಷಗಳಿಂದ ವಾಸವಿರುವ ಬಡ ಕುಟುಂಬಗಳು ತಮ್ಮ ಖರ್ಚಿನಲ್ಲಿ ಕಂಪೌಂಡ್ ನಿರ್ಮಿಸಿಕೊಂಡಿದ್ದವು. ಯಾವುದೇ ಸಾರ್ವಜನಿಕರಿಗೆ ಅಥವಾ ವಾಹನ ಸಂಚಾರಕ್ಕೆ ತೊಂದರೆಯಾಗದಿದ್ದರೂ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ನಿವಾಸಿಗಳು ಆರೋಪಿಸಿದರು.

ಅವಳಿ ನಗರದ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್ ಅತಿಕ್ರಮಿಸಿ ನಿರ್ಮಿಸಿರುವ ಬೃಹತ್ ವಾಣಿಜ್ಯ ಕಟ್ಟಡಗಳ ವಿರುದ್ಧ ನಗರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಬಡವರ ಮನೆಗಳ ಮೇಲೆ ಮಾತ್ರ ಬುಲ್ಡೋಜರ್ ಚಲಾಯಿಸಲಾಗಿದೆ ಎಂದು ಮಹಿಳೆಯರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನೊಂದಿಗೆ ಆಗಮಿಸಿ ಕಂಪೌಂಡ್ ತೆರವು ಕಾರ್ಯಾಚರಣೆ ನಡೆಸಿದ ವೇಳೆ ಸ್ಥಳೀಯ ಮಹಿಳೆಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೂ ಕಾರ್ಯಾಚರಣೆ ಮುಂದುವರಿದಿದ್ದು, ಹಲವು ಮನೆಗಳ ಕಂಪೌಂಡ್‌ಗಳು ನೆಲಸಮಗೊಂಡವು.

ಈ ಕುರಿತು ಪ್ರತಿಕ್ರಿಯಿಸಿದ ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಕ್ಷ್ಮಣ ಜೋಗದಂಡಕರ, ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ನಿಯಮಾನುಸಾರ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯರು, ಬಡವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳದೆ, ಅವಳಿ ನಗರದಲ್ಲಿ ಫುಟ್‌ಪಾತ್ ಹಾಗೂ ರಸ್ತೆ ಅತಿಕ್ರಮಿಸಿ ನಿರ್ಮಿಸಿರುವ ಪ್ರಭಾವಿಗಳ ಕಟ್ಟಡಗಳ ವಿರುದ್ಧವೂ ನಗರಸಭೆ ಇದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಡಪದ ಅಪ್ಪಣ್ಣರ ಆದರ್ಶಗಳು ಇಂದಿಗೂ ಪ್ರಸ್ತುತ: ಶಾಕೀರ್ ಸನದಿ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಶಿವಶರಣ ಹಡಪದ ಅಪ್ಪಣ್ಣ ಅವರು ಮಾನವ ಸೇವೆ, ಸಮಾನತೆ ಮತ್ತು ಸೌಹಾರ್ದತೆಯ ಬದುಕನ್ನು ಪ್ರತಿಪಾದಿಸಿದ ಮಹಾನ್ ಶಿವಶರಣರಾಗಿದ್ದು, ಅವರ ತತ್ವಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದು ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಬುಧವಾರ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಸಾಮಾಜಿಕ ಕ್ರಾಂತಿಗೆ ಹಡಪದ ಅಪ್ಪಣ್ಣ ಅವರು ಅಪಾರ ಕೊಡುಗೆ ನೀಡಿದ್ದು, ಶರಣರ ವಚನಗಳ ಮೂಲಕ ಸಮಾನತೆ, ಮಾನವೀಯತೆ ಮತ್ತು ಸತ್ಯದ ಬದುಕಿನ ಸಂದೇಶವನ್ನು ಜನರಲ್ಲಿ ಬಿತ್ತಿದರು. ವಿದ್ಯಾರ್ಥಿಗಳಲ್ಲಿ ಬಸವ ತತ್ವಗಳು, ಶರಣರ ವಚನಗಳು ಮತ್ತು ದೇಶದ ಇತಿಹಾಸದ ಕುರಿತು ಅರಿವು ಮೂಡಿಸಿದರೆ ಅವರ ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೂ ಸಹಕಾರಿಯಾಗಲಿದೆ ಎಂದು ಹೇಳಿದರು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ ಮಾತನಾಡಿ, ಹಡಪದ ಅಪ್ಪಣ್ಣ ಅವರು ಶ್ರದ್ಧೆ, ಭಕ್ತಿ ಹಾಗೂ ಪ್ರಾಮಾಣಿಕ ಕಾಯಕದ ಮೂಲಕ ಮಾದರಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಈರಣ್ಣ ಇಂಜಗನೇರಿ ಅವರು ಶಿವಶರಣ ಹಡಪದ ಅಪ್ಪಣ್ಣ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಜಿಲ್ಲಾ ಪ್ರತಿನಿಧಿ ಫಕೀರೇಶ ಅಡಿವೆಪ್ಪ ಹಡಪದ, ಜಿಲ್ಲಾ ಹಡಪದ ನೌಕರರ ಸಂಘದ ಪ್ರಮುಖರಾದ ಮಹಾರುದ್ರಪ್ಪ ಪಡೆಸೂರ, ನಿಂಗರಾಜ ಹಡಪದ, ಶಂಕರ ಹಡಪದ, ಮಂಜುಳಾ ಪಡೆಸೂರ, ಕಿರಣ ಹಡಪದ, ಮಾರುತಿ ಹಡಪದ, ಶಿವಕುಮಾರ ಅಣ್ಣಿಗೇರಿ, ನಾಗರಾಜ ಅಂಗಡಿ, ಈರಣ್ಣ ಹಡಪದ, ಸಂಗಮೇಶ ಬೂದಿಹಾಳ, ಫಕೀರಪ್ಪ ಮೂಲಿಮನಿ, ಮಲ್ಲಪ್ಪ ಹಡಪದ ಹಾಗೂ ಶಾಂತವ್ವ ಹಡಪದ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

“ಶರಣರ ವಚನಗಳು ಮಾನವೀಯತೆ, ಸಹಬಾಳ್ವೆ ಮತ್ತು ಸತ್ಯದ ಬದುಕಿಗೆ ದಾರಿದೀಪ. ಯುವಜನತೆ ಮಹನೀಯರ ಆದರ್ಶಗಳನ್ನು ಅಳವಡಿಸಿಕೊಂಡಾಗ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ.”
— ಶಾಕೀರ್ ಸನದಿ, ಅಧ್ಯಕ್ಷರು, ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ

ಮಾಧ್ಯಮ ಕ್ರಿಕೆಟ್ ಲೀಗ್‌ಗೆ ರೂರಲ್ ಕಿಂಗ್ಸ್ ಸಜ್ಜು

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾ ಘಟಕವು ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಮಾಧ್ಯಮ ಕ್ರಿಕೆಟ್ ಲೀಗ್ ಹಿನ್ನೆಲೆಯಲ್ಲಿ ರೂರಲ್ ಕಿಂಗ್ಸ್ ತಂಡದ ಲೋಗೋ, ಪ್ರೋಮೋ ಹಾಗೂ ಜರ್ಸಿಯನ್ನು ಗುರುವಾರ ನಗರದ ಪತ್ರಿಕಾ ಭವನದಲ್ಲಿ ಅನಾವರಣಗೊಳಿಸಲಾಯಿತು.

ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ, ಪತ್ರಕರ್ತರು ನಿರಂತರ ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಕ್ರೀಡಾಕೂಟಗಳು ಮಾನಸಿಕ ನೆಮ್ಮದಿ ನೀಡುವ ಜತೆಗೆ ಪರಸ್ಪರ ಬಾಂಧವ್ಯವನ್ನು ಬೆಳೆಸುವ ವೇದಿಕೆಯಾಗುತ್ತವೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಹಾಗೂ ವಿನ್ನರ್ಸ್ ತಂಡದ ಮಾಲೀಕ ಅನಂತ ಕಾರ್ಕಳ ಮಾತನಾಡಿ, ಕ್ರೀಡೆಗಳು ಮಾನಸಿಕ ಒತ್ತಡ ನಿವಾರಿಸುವ ಜೊತೆಗೆ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತವೆ. ಜಿಲ್ಲೆಯ ವಿವಿಧ ಭಾಗಗಳ ಪತ್ರಕರ್ತರು ಒಂದೇ ವೇದಿಕೆಯಲ್ಲಿ ಸೇರುವುದರಿಂದ ಆತ್ಮೀಯತೆ ಮತ್ತು ಸ್ನೇಹ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿ, ಪತ್ರಿಕಾ ದಿನಾಚರಣೆ ಅಂಗವಾಗಿ ಈ ವರ್ಷ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವು ಸಮಾಜಮುಖಿ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಗದಗದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಮಾಧ್ಯಮ ಕ್ರಿಕೆಟ್ ಲೀಗ್ ಆಯೋಜಿಸಿರುವುದು ವಿಶೇಷವಾಗಿದ್ದು, ಎಲ್ಲಾ ತಂಡಗಳ ಆಟಗಾರರು ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡು ಮಾದರಿಯಾಗಬೇಕು ಎಂದರು.

ನೈಟ್ ರೈಡರ್ಸ್ ತಂಡದ ಮಾಲೀಕ ಆನಂದಯ್ಯ ವಿರಕ್ತಮಠ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಎಚ್.ಎಂ. ಶರೀಫನವರ, ದೇವಪ್ಪ ಲಿಂಗದಾಳ, ಸುನೀಲ ತೆಂಬದಮನಿ, ರವಿಕಾಂತ ಅಂಗಡಿ, ಟಿ.ಎನ್. ಭಾಂಡಗೆ, ಶರಣು ದೊಡ್ಡೂರ, ಅರುಣಕುಮಾರ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಮಾಧ್ಯಮ ಕ್ರಿಕೆಟ್ ಲೀಗ್‌ನಂತಹ ಕಾರ್ಯಕ್ರಮಗಳಿಂದ ಜಿಲ್ಲೆಯ ಪತ್ರಕರ್ತರೆಲ್ಲರೂ ಒಂದೇ ವೇದಿಕೆಯಲ್ಲಿ ಸೇರುವ ಅವಕಾಶ ದೊರೆಯುತ್ತದೆ. ನಿತ್ಯದ ಒತ್ತಡದ ನಡುವೆ ಇಂತಹ ವಿನೂತನ ಕಾರ್ಯಕ್ರಮಗಳು ಅಗತ್ಯ. ಮುಂದೆಯೂ ಇಂತಹ ಕಾರ್ಯಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ.”
– ಜಗದೀಶ್ ಎಸ್.ಪಿ., ಸಂಪಾದಕರು, ರತ್ನಾಕರವಾಣಿ ಕನ್ನಡ ದಿನಪತ್ರಿಕೆ ಹಾಗೂ ರೂರಲ್ ಕಿಂಗ್ಸ್ ತಂಡದ ಮಾಲೀಕರು

ಕುಡಿಯುವ ನೀರಿಗೆ ಕೊರತೆ ಇದೆ, ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಒತ್ತಾಯ

ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ಲಭ್ಯವಿರುವ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಸಾಕಾಗುವ ಪರಿಸ್ಥಿತಿ ಇರುವುದರಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ವಿವಾದದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಹಾಗೂ ಕಾವೇರಿ ಸಂಬಂಧಿತ ಪ್ರಾಧಿಕಾರಗಳಲ್ಲಿನ ರಾಜ್ಯದ ಪ್ರಾತಿನಿಧ್ಯ ಸಮರ್ಪಕವಾಗಿಲ್ಲ ಎಂದು ಟೀಕಿಸಿದರು.

“ರಾಜ್ಯದ ಜಲಾಶಯಗಳಲ್ಲಿ ಇರುವ ನೀರು ಕರ್ನಾಟಕದ ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ಸಾಕಾಗುತ್ತದೆ. ಈ ಕಾರಣದಿಂದಲೇ ಬೇರೆ ಉದ್ದೇಶಗಳಿಗೆ ನೀರನ್ನು ಬಳಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡು ನೀರು ಬಿಡುಗಡೆ ಮಾಡುವಂತೆ ಒತ್ತಡ ಹೇರುತ್ತಿರುವುದು ಸಮಂಜಸವಲ್ಲ” ಎಂದು ಬೊಮ್ಮಾಯಿ ಹೇಳಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಕರ್ನಾಟಕದ ನೈಜ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸುವಲ್ಲಿ ರಾಜ್ಯದ ಪ್ರತಿನಿಧಿಗಳು ವಿಫಲರಾಗಿರುವುದರಿಂದಲೇ ತಮಿಳುನಾಡು ಪದೇಪದೇ ನೀರಿಗಾಗಿ ಒತ್ತಡ ಹೇರುತ್ತಿದೆ ಎಂದು ಅವರು ಆರೋಪಿಸಿದರು.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದ ಬೊಮ್ಮಾಯಿ, ರಾಜ್ಯದ ಪರವಾಗಿ ಬಲಿಷ್ಠವಾಗಿ ವಾದ ಮಂಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯಕ್ಕೆ ಅವರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಈಗಾಗಲೇ ರೈತರು ಕಾವೇರಿ ನೀರಿನ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹಿತಾಸಕ್ತಿ ಮತ್ತು ರಾಜ್ಯದ ಕುಡಿಯುವ ನೀರಿನ ಭದ್ರತೆಯನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದು ಅವರು ಹೇಳಿದರು.

“ನಮ್ಮ ಸರ್ಕಾರದ ಅವಧಿಯಲ್ಲೂ ಇಂತಹ ಆದೇಶಗಳು ಬಂದಿದ್ದವು. ಆಗ ನಾವು ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ದೃಢ ನಿಲುವು ತಾಳಿ ನೀರು ಬಿಡುಗಡೆ ಮಾಡಿರಲಿಲ್ಲ. ಈಗಿನ ಸರ್ಕಾರವೂ ಅದೇ ರೀತಿಯ ದೃಢ ನಿರ್ಧಾರ ತೆಗೆದುಕೊಂಡು ರೈತರ ಹಿತ ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಕಾಪಾಡುವ ಜೊತೆಗೆ ಕಾನೂನು ಹೋರಾಟವನ್ನು ಮುಂದುವರಿಸಬೇಕು” ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು.

ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ಕರ್ನಾಟಕ ಕಾಂಗ್ರೆಸ್ ನಾಯಕರ ಬದಲು ದೆಹಲಿ ಸರ್ಕಾರವನ್ನು ಭೇಟಿ ಮಾಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ಡಿಎಂಕೆ ನಾಯಕ ಅನ್ಬುಮಣಿ ಸಲಹೆ ನೀಡಿರುವ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ನಮಗೆ ಪರಸ್ಪರ ಕಿತ್ತಾಟ ಮಾಡಲು ಇಷ್ಟವಿಲ್ಲ. ನೆಲದ ಕಾನೂನು ಇದೆ. ನಾವು ಪರಸ್ಪರ ಗೌರವಿಸಬೇಕು. ಇಡೀ ದೇಶ ಒಂದಾಗಿ ಕೆಲಸ ಮಾಡಬೇಕು” ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಯಡಿಯೂರಪ್ಪನವರು ಕೂಡ ಸಚಿವ ಸಂಪುಟ ರಚನೆ ಮಾಡದೇ ಅಧಿಕಾರ ಮಾಡಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರವನ್ನು ಅನುಭವಿಸಲಿಲ್ಲವೇ?” ಎಂದು ಮರುಪ್ರಶ್ನಿಸಿದರು.

ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡಲು CWMA ಸೂಚನೆ

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿತ್ತು.

ಆದರೆ, ಕರ್ನಾಟಕದ ಮನವಿಯನ್ನು ಪರಿಶೀಲಿಸಿದ ಬಳಿಕ ಪ್ರಾಧಿಕಾರವು CWRC ನೀಡಿದ್ದ ಆದೇಶವನ್ನೇ ಎತ್ತಿಹಿಡಿದು, ತಮಿಳುನಾಡಿಗೆ ನಿಗದಿತ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ದೆಹಲಿ‌ನಲ್ಲಿ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಭಾಗವಹಿಸಿ, ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ, ಮಳೆಯ ಅಭಾವ ಹಾಗೂ ಕುಡಿಯುವ ನೀರಿನ ಅಗತ್ಯದ ಕುರಿತು ಪ್ರಾಧಿಕಾರದ ಗಮನಕ್ಕೆ ತಂದರು.

ಇನ್ನೊಂದೆಡೆ, ತಮಿಳುನಾಡು ಸರ್ಕಾರದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡು ತಮ್ಮ ವಾದ ಮಂಡಿಸಿದರು.

CWMA ನಿರ್ಧಾರದಿಂದ ಕಾವೇರಿ ನೀರಿನ ಹಂಚಿಕೆ ವಿಚಾರ ಮತ್ತೆ ರಾಜಕೀಯ ಹಾಗೂ ರೈತ ಸಂಘಟನೆಗಳ ನಡುವೆ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮದತ್ತ ಎಲ್ಲರ ಗಮನ ನೆಟ್ಟಿದೆ.

IND vs SL: ಶ್ರೀಲಂಕಾ ಟೆಸ್ಟ್ ಸರಣಿಗೆ ಭಾರತ ತಂಡದ ಬಗ್ಗೆ ಎಬಿ ಡಿವಿಲಿಯರ್ಸ್ ಹೇಳಿದ್ದೇನು..?

0

ಶ್ರೀಲಂಕಾ ವಿರುದ್ಧ ಆಗಸ್ಟ್ 15ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಈಗಾಗಲೇ ಬಿಸಿಸಿಐ ಪ್ರಕಟಿಸಿದ್ದು, ತಂಡದ ಆಯ್ಕೆ ಬಗ್ಗೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಹಾಗೂ ಸ್ಫೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್ ಪ್ರತಿಕ್ರಿಯೆ ನೀಡಿದ್ದಾರೆ. ವಿಶೇಷವಾಗಿ ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆ ತಮ್ಮಲ್ಲಿ ಅಚ್ಚರಿ ಮೂಡಿಸಿದೆ ಎಂದು ಎಬಿಡಿ ಹೇಳಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಎಬಿ ಡಿವಿಲಿಯರ್ಸ್, “ರಿಷಭ್ ಪಂತ್ ಭಾರತ ತಂಡಕ್ಕೆ ಆಯ್ಕೆಯಾಗಿರುವುದು ನನಗೆ ನಿಜಕ್ಕೂ ಅಚ್ಚರಿ ಮೂಡಿಸಿತು. ಅವರ ಫಿಟ್‌ನೆಸ್ ಬಗ್ಗೆ ಎಲ್ಲರಿಗೂ ಗೊತ್ತಿದೆ. ಐಪಿಎಲ್ ವೇಳೆ ಅವರು ಆತ್ಮವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿದ್ದರು.

ಆದರೆ ಭಾರತದ ಪರ ಆಡಬೇಕಾದರೆ ಅವರು ಸಂಪೂರ್ಣ ವಿಭಿನ್ನ ಆಟಗಾರನಾಗಿ ಹೊರಹೊಮ್ಮುತ್ತಾರೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅವರು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾತರದಿಂದ ಕಾಯುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ತಂಡಕ್ಕೆ ಮರಳಿರುವುದನ್ನು ಎಬಿಡಿ ಸ್ವಾಗತಿಸಿದ್ದಾರೆ. “ಜಡೇಜಾ ತಂಡದಲ್ಲಿರುವುದು ಭಾರತಕ್ಕೆ ದೊಡ್ಡ ಬಲ. ಅವರು ಯಾವಾಗ ಆಡುತ್ತಾರೆ, ಯಾವಾಗ ವಿಶ್ರಾಂತಿ ಪಡೆಯುತ್ತಾರೆ ಎನ್ನುವುದು ಇತ್ತೀಚೆಗೆ ಸ್ಪಷ್ಟವಾಗುತ್ತಿರಲಿಲ್ಲ. ಈಗ ಅವರು ಮರಳಿರುವುದು ಉತ್ತಮ ಬೆಳವಣಿಗೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ತಂಡಕ್ಕೆ ಕಂಬ್ಯಾಕ್ ಮಾಡಿರುವುದರ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಬುಮ್ರಾ ವಿಶ್ವದ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರು. ಅವರು ತಂಡದಲ್ಲಿದ್ದರೆ ಎದುರಾಳಿ ಬ್ಯಾಟರ್‌ಗಳು ಸಹಜವಾಗಿಯೇ ಹೆಚ್ಚಿನ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಶುಭ್‌ಮನ್ ಗಿಲ್ ನಾಯಕತ್ವದ ಭಾರತ ತಂಡ ಆಗಸ್ಟ್ 15ರಿಂದ ಗಾಲೆಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡಲಿದ್ದು, ಎರಡನೇ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲಿ ಭಾರತ ಪ್ರಸ್ತುತ ಐದನೇ ಸ್ಥಾನದಲ್ಲಿದ್ದು, ಫೈನಲ್ ಪ್ರವೇಶದ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವುದು ಅನಿವಾರ್ಯವಾಗಿದೆ.

ಇನ್ನೊಂದೆಡೆ ತವರಿನ ಲಾಭ ಪಡೆಯಲು ಸಜ್ಜಾಗಿರುವ ಶ್ರೀಲಂಕಾ ತಂಡವೂ ಭಾರತಕ್ಕೆ ಕಠಿಣ ಸವಾಲು ಒಡ್ಡುವ ನಿರೀಕ್ಷೆಯಲ್ಲಿದೆ. ಹೀಗಾಗಿ ಈ ಸರಣಿ ಎರಡೂ ತಂಡಗಳ ಪಾಲಿಗೆ ಮಹತ್ವದ ಹಣಾಹಣಿಯಾಗಲಿದೆ.

Amendment Bill-2026 ಲೋಕಸಭೆಯಲ್ಲಿ ಅಂಗೀಕಾರ: ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಗೆ ಮಹತ್ವದ ಹೆಜ್ಜೆ ಎಂದ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ Amendment Bill-2026 ಅನ್ನು ಲೋಕಸಭೆ ಅಂಗೀಕರಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ನೂತನ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ತಿದ್ದುಪಡಿ ಮಸೂದೆ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಚೌಕಟ್ಟನ್ನು ಒದಗಿಸಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ನಿಯಮಗಳನ್ನು ಇದರಲ್ಲಿ ಅಳವಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯಗಳ ಸ್ಥಾಪನೆಯೂ ಮಹತ್ವದ ಕ್ರಮವಾಗಿದ್ದು, ಇದರಿಂದ ಪ್ರಕರಣಗಳ ವಿಚಾರಣೆ ವೇಗವಾಗಿ ಪೂರ್ಣಗೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ತಿದ್ದುಪಡಿ ಮಸೂದೆ ಜಾರಿಯಿಂದ ದೇಶದಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ವಿಶ್ವಾಸಾರ್ಹತೆ ಮತ್ತಷ್ಟು ಬಲಗೊಳ್ಳಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಕೇಂದ್ರ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.