Home Blog Page 99

KPSC ಅಧ್ಯಕ್ಷರ ಅಮಾನತು ವಿವಾದ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಯತ್ನಾಳ್ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ನಕಲಿ ಆದಾಯ ಪ್ರಮಾಣ ಪತ್ರ ಹಾಗೂ ನೇಮಕಾತಿ ಅಕ್ರಮ ಆರೋಪಗಳ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಈ ಸಂಬಂಧ ರಾಜ್ಯಪಾಲರು ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿರುವ ಕ್ರಮದ ವಿರುದ್ಧ ಅವರು ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಮುಂದುವರಿಸಿರುವ ಬೆನ್ನಲ್ಲೇ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಯತ್ನಾಳ್, ರಾಜ್ಯದ ಅತ್ಯುನ್ನತ ನೇಮಕಾತಿ ಸಂಸ್ಥೆಯ ಮುಖ್ಯಸ್ಥರ ಮೇಲೆಯೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಆತಂಕಕಾರಿ ಎಂದು ಹೇಳಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರು ರಾಜ್ಯಪಾಲರ ಅಮಾನತು ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ಪೋಸ್ಟ್‌ನಲ್ಲಿ ಯತ್ನಾಳ್, ಕೆಪಿಎಸ್‌ಸಿ ಅಧ್ಯಕ್ಷರಿಗೆ ವೇತನ, ಭತ್ಯೆ ಹಾಗೂ ಇತರ ಸೌಲಭ್ಯಗಳನ್ನು ಸೇರಿಸಿ ತಿಂಗಳಿಗೆ ಸುಮಾರು 2.25 ಲಕ್ಷ ರೂಪಾಯಿ, ವಾರ್ಷಿಕವಾಗಿ ಸುಮಾರು 27 ಲಕ್ಷ ರೂಪಾಯಿ ಆದಾಯ ದೊರೆಯುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಇಷ್ಟೊಂದು ಆದಾಯ ಹೊಂದಿದ್ದರೂ, ತಮ್ಮ ಪುತ್ರಿಗೆ ಹಿಂದುಳಿದ ವರ್ಗಗಳ ಮೀಸಲಾತಿ ಅಥವಾ ಸೌಲಭ್ಯ ದೊರೆಯುವ ಉದ್ದೇಶದಿಂದ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂಪಾಯಿ ಎಂದು ನಮೂದಿಸಿದ ಪ್ರಮಾಣ ಪತ್ರ ಸಲ್ಲಿಸಲಾಗಿದೆ ಎಂಬ ಆರೋಪ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಇದು ಕೇವಲ ಕಾನೂನು ಉಲ್ಲಂಘನೆಯಷ್ಟೇ ಅಲ್ಲ, ಸ್ವಜನಪಕ್ಷಪಾತದ ಸ್ಪಷ್ಟ ಉದಾಹರಣೆ ಎಂದು ಆರೋಪಿಸಿರುವ ಅವರು, ಸರ್ಕಾರಿ ಉದ್ಯೋಗಕ್ಕಾಗಿ ಲಕ್ಷಾಂತರ ಯುವಕರು ಹಗಲು-ರಾತ್ರಿ ಶ್ರಮಿಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಅಂತಹ ಸಂದರ್ಭದಲ್ಲಿ ನೇಮಕಾತಿ ಸಂಸ್ಥೆಯ ಮುಖ್ಯಸ್ಥರ ಮೇಲೆಯೇ ಇಂತಹ ಆರೋಪಗಳು ಕೇಳಿಬಂದರೆ ಅರ್ಹ ಅಭ್ಯರ್ಥಿಗಳ ವಿಶ್ವಾಸಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಶ್ನೆಪತ್ರ ಸೋರಿಕೆ, ನೇಮಕಾತಿ ಅಕ್ರಮ ಹಾಗೂ ಸ್ವಜನಪಕ್ಷಪಾತದಂತಹ ಪ್ರಕರಣಗಳಿಂದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಆಡಳಿತ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತಿದೆ ಎಂದು ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ವಿರುದ್ಧದ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದ ಲಕ್ಷಾಂತರ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ) ಗೆ ವಹಿಸಬೇಕು. ನೇಮಕಾತಿ ಅಕ್ರಮಗಳ ವಿಚಾರದಲ್ಲಿ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

0

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ ಲಿಫ್ಟ್‌ನ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತನನ್ನು ಧಾರವಾಡ ಮೂಲದ ರಾಜೇಶ್ (22) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 8:30ರ ವೇಳೆಗೆ ದಕ್ಷಿಣ ಉಪಹಾರ ಹೋಟೆಲ್‌ನಲ್ಲಿ ಈ ಅವಘಡ ಸಂಭವಿಸಿದೆ.

ರಾಜೇಶ್ ಹೋಟೆಲ್ ಮಾಲೀಕ ಅವಿನಾಶ್ ಅವರ ಸ್ನೇಹಿತನಾಗಿದ್ದು, ಸ್ವತಃ ಹೊಸ ಹೋಟೆಲ್ ಆರಂಭಿಸುವ ಉದ್ದೇಶದಿಂದ ಹೋಟೆಲ್ ನಿರ್ವಹಣೆ ಹಾಗೂ ಕೆಲಸದ ಅನುಭವ ಪಡೆಯಲು ಅಲ್ಲಿಗೆ ಬಂದಿದ್ದನು.

ಈ ವೇಳೆ ಸರಕು ಸಾಗಿಸುವ ಲಿಫ್ಟ್ ಬಳಸುತ್ತಿದ್ದಾಗ, ಲಿಫ್ಟ್ ಬಾಗಿಲಿನ ಹೊರಭಾಗಕ್ಕೆ ತಲೆ ಹಾಕಿದ್ದ ಸಂದರ್ಭದಲ್ಲಿ ಬಾಗಿಲಿನಲ್ಲಿ ತಲೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಯ ಬಳಿಕ ಹೋಟೆಲ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಮಾಹಿತಿ ತಿಳಿದು ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಿಫ್ಟ್ ಸುರಕ್ಷತಾ ಕ್ರಮಗಳು ಹಾಗೂ ಅವಘಡಕ್ಕೆ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಮೆರಿಕ ಮಹಿಳೆ ಅತ್ಯಾಚಾರ ಪ್ರಕರಣ: ಅಕ್ರಮ ಬಂಧನಕ್ಕೆ ಮಾಲೀಕರಿಗೆ ₹5 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಕೊಡಗಿನ ಹೋಂಸ್ಟೇಯೊಂದರಲ್ಲಿ ಅಮೆರಿಕದ ಮಹಿಳಾ ಪ್ರವಾಸಿಯ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಂಸ್ಟೇ ಮಾಲೀಕರನ್ನು ಅಕ್ರಮವಾಗಿ ಬಂಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಅವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೋಂಸ್ಟೇ ಮಾಲೀಕ ಪಿ. ಪೊನ್ನಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಆದರೆ, ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿರುವ ಕಾರಣ ಈ ಹಂತದಲ್ಲಿ ಎಫ್‌ಐಆರ್ ರದ್ದುಪಡಿಸಲು ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣದ ತನಿಖೆಯಲ್ಲಿ ಈಗಲೇ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ತನಿಖೆ ಮುಂದುವರಿಯಬೇಕೆಂದು ಸ್ಪಷ್ಟಪಡಿಸಿದೆ. ಆದರೆ, ಅರ್ಜಿದಾರರ ಬಂಧನ ಕಾನೂನುಬಾಹಿರವಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಅವರು ಪರಿಹಾರ ಪಡೆಯಲು ಅರ್ಹರು ಎಂದು ಹೇಳಿದೆ.

ನ್ಯಾಯಾಲಯದ ಆದೇಶದಂತೆ, ಅಕ್ರಮ ಬಂಧನಕ್ಕೆ ಪರಿಹಾರವಾಗಿ 5 ಲಕ್ಷ ರೂಪಾಯಿಯನ್ನು ನಾಲ್ಕು ವಾರಗಳೊಳಗೆ ಪಿ. ಪೊನ್ನಪ್ಪ ಅವರಿಗೆ ರಾಜ್ಯ ಸರ್ಕಾರ ಪಾವತಿಸಬೇಕು ಎಂದು ನಿರ್ದೇಶಿಸಲಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಮ್ಮ ಕಕ್ಷಿದಾರರು ಯಾವುದೇ ಅತ್ಯಾಚಾರ ಎಸಗಿಲ್ಲ. ಎಫ್‌ಐಆರ್‌ನಲ್ಲಿ ಅವರ ವಿರುದ್ಧ ಅಂತಹ ಆರೋಪವಿಲ್ಲದಿದ್ದರೂ, ನಂತರದ ಹಂತದಲ್ಲಿ ‘ಸಾಮಾನ್ಯ ಉದ್ದೇಶ’ ಎಂಬ ಅಂಶವನ್ನು ಸೇರಿಸಿ ಬಂಧಿಸಲಾಗಿದೆ ಎಂದು ವಾದಿಸಿದರು. ಅಲ್ಲದೆ, ಘಟನೆ ನಡೆದ ವೇಳೆ ಪೊನ್ನಪ್ಪ ಹೋಂಸ್ಟೇಯಲ್ಲೇ ಇರಲಿಲ್ಲ ಎಂಬುದಕ್ಕೆ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಸಾಕ್ಷ್ಯಗಳನ್ನು ಸಲ್ಲಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, ಹೋಂಸ್ಟೇ ಮಾಲೀಕರು ಸಂತ್ರಸ್ತ ಮಹಿಳೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ದಿನ ಅಲ್ಲೇ ಉಳಿಯುವಂತೆ ಒತ್ತಾಯಿಸಿದ್ದು, ಹೊರಗಿನವರೊಂದಿಗೆ ಸಂಪರ್ಕ ಸಾಧಿಸದಂತೆ ನಿರ್ಬಂಧಿಸಿದ್ದರೆಂಬ ಆರೋಪಗಳಿವೆ ಎಂದು ಪೀಠದ ಗಮನಕ್ಕೆ ತಂದರು.

ಪ್ರಕರಣದ ಹಿನ್ನೆಲೆ

ಏಪ್ರಿಲ್ 12ರಂದು ಅಮೆರಿಕದ ಮಹಿಳಾ ಪ್ರವಾಸಿ ಕೊಡಗಿನ ಹೋಂಸ್ಟೇಗೆ ಬಂದಿದ್ದ ವೇಳೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಹೋಂಸ್ಟೇ ಸಿಬ್ಬಂದಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು. ಬಳಿಕ ಹೋಂಸ್ಟೇ ಮಾಲೀಕನ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 64(1) (ಅತ್ಯಾಚಾರ), 351(2) (ಕ್ರಿಮಿನಲ್ ಬೆದರಿಕೆ), 238 ಹಾಗೂ 239 (ಅಪರಾಧಕ್ಕೆ ಸಂಬಂಧಿಸಿದ ಮಾಹಿತಿ ಮರೆಮಾಚುವುದು ಮತ್ತು ಸುಳ್ಳು ಮಾಹಿತಿ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ಏಪ್ರಿಲ್ 19ರಂದು ಪಿ. ಪೊನ್ನಪ್ಪ ಅವರನ್ನು ಬಂಧಿಸಲಾಗಿತ್ತು. ತಮ್ಮ ಬಂಧನ ಅಕ್ರಮವಾಗಿದ್ದು, ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿದ ಅವರು, ಎಫ್‌ಐಆರ್ ರದ್ದುಪಡಿಸುವುದರ ಜೊತೆಗೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಅವರ ಬಂಧನವನ್ನು ಅಕ್ರಮ ಎಂದು ಘೋಷಿಸಿ, 5 ಲಕ್ಷ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಅಪ್ಪನ ನೆನಪಿನೊಂದಿಗೆ ಹೊಸ ಪಯಣ: ಪುನೀತ್ ಪುತ್ರಿ ವಂದಿತಾ ಹೊಸ ಬ್ಯುಸಿನೆಸ್‌ ಆರಂಭ

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ವಂದಿತಾ ರಾಜ್‌ಕುಮಾರ್ ಇದೀಗ ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಗುರುತು ಮೂಡಿಸಲು ಮುಂದಾಗಿದ್ದಾರೆ. ಬೇಕಿಂಗ್ ಮೇಲಿನ ತಮ್ಮ ಆಸಕ್ತಿಯನ್ನು ಬ್ಯುಸಿನೆಸ್ ಆಗಿ ಪರಿವರ್ತಿಸಿರುವ ಅವರು, ತಂದೆ ಪ್ರೀತಿಯಿಂದ ಕರೆಯುತ್ತಿದ್ದ ‘ನುಕಾ’ ಹೆಸರಿನಲ್ಲೇ ‘ನುಕಾಸ್ ಕೆಫೆ’ ಆರಂಭಿಸಿದ್ದಾರೆ.

ವಂದಿತಾ ಅವರಿಗೆ ಬೇಕಿಂಗ್ ಒಂದು ಹವ್ಯಾಸವಾಗಿತ್ತು. ಕುಟುಂಬದ ಕಾರ್ಯಕ್ರಮಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಕೇಕ್‌ಗಳನ್ನು ತಯಾರಿಸುತ್ತಿದ್ದ ಅವರು, ಇದೀಗ ಅದನ್ನೇ ವೃತ್ತಿಪರವಾಗಿ ಆರಂಭಿಸಿದ್ದಾರೆ.

ಇತ್ತೀಚೆಗೆ ಸಹೋದರ ವಿನಯ್ ರಾಜ್‌ಕುಮಾರ್ ಅವರ ‘ಗ್ರಾಮಾಯಣ’ ಸಿನಿಮಾದ ಸಂದರ್ಭದಲ್ಲಿ ವಂದಿತಾ ವಿಶೇಷ ಕೇಕ್ ತಯಾರಿಸಿ ಗಮನ ಸೆಳೆದಿದ್ದರು. ಅದರ ಮೇಲೂ ‘ಗ್ರಾಮಾಯಣ’ ಎಂದು ಬರೆದು ಸಹೋದರನಿಗೆ ಶುಭ ಹಾರೈಸಿದ್ದರು.

ಈಗ ತಮ್ಮ ಪ್ರತಿಭೆ ಮತ್ತು ಆಸಕ್ತಿಗೆ ಹೊಸ ರೂಪ ನೀಡಿರುವ ವಂದಿತಾ, ಮನೆಯಲ್ಲಿ ತಯಾರಿಸಿದ ವಿವಿಧ ಬೇಕರಿ ಉತ್ಪನ್ನಗಳನ್ನು ಗ್ರಾಹಕರಿಗೆ ಪೂರೈಸುತ್ತಿದ್ದಾರೆ.

ತಿರಮಿಸು, ವಿವಿಧ ಬಗೆಯ ಕೇಕ್‌ಗಳು, ಕುಕೀಸ್, ಬ್ರೆಡ್, ಬ್ರೌನಿ, ಚೀಸ್ ಕೇಕ್ ಹಾಗೂ ಕಪ್ ಕೇಕ್‌ಗಳು ‘ನುಕಾಸ್ ಕೆಫೆ’ಯ ಪ್ರಮುಖ ಉತ್ಪನ್ನಗಳಾಗಿವೆ.

ಅಪ್ಪು ಅವರ ನೆನಪನ್ನು ಜೊತೆಯಲ್ಲಿಟ್ಟುಕೊಂಡು ಆರಂಭಿಸಿರುವ ಈ ಹೊಸ ಉದ್ಯಮಕ್ಕೆ ಅಭಿಮಾನಿಗಳು ಹಾಗೂ ಸಿನಿಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಉಪಸಭಾಪತಿ ಪ್ರಾಣೇಶ್ʼಗೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್: ವಿಧಾನ ಪರಿಷತ್ ಸದಸ್ಯತ್ವ ರದ್ದು

0

ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ ದೊಡ್ಡ ಹಿನ್ನಡೆ ನೀಡಿದ್ದು, ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸುವ ಮೂಲಕ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಈ ತೀರ್ಪಿನೊಂದಿಗೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಕಾನೂನು ಹೋರಾಟದಲ್ಲಿ ಮೇಲುಗೈ ದೊರೆತಿದೆ.

2021ರ ಡಿಸೆಂಬರ್‌ನಲ್ಲಿ ನಡೆದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಒಟ್ಟು 2,410 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 39 ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು. ಪ್ರಾಣೇಶ್ 1,188 ಮತಗಳನ್ನು, ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದಿದ್ದು, ಕೇವಲ ಆರು ಮತಗಳ ಅಂತರದಿಂದ ಪ್ರಾಣೇಶ್ ಗೆಲುವು ಸಾಧಿಸಿದ್ದರು.

ಆದರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿರುವುದು ಕಾನೂನುಬಾಹಿರ ಎಂದು ಆರೋಪಿಸಿ ಗಾಯತ್ರಿ ಶಾಂತೇಗೌಡ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಅದೇ ತೀರ್ಪನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದ್ದು, ಪ್ರಾಣೇಶ್ ಅವರ ಸದಸ್ಯತ್ವ ರದ್ದಾಗಿದೆ.

ನಕಲಿ ದಾಖಲೆ ಪಡೆದು ಭಾರತದಲ್ಲಿ ವಾಸ: ಬಾಂಗ್ಲಾದೇಶಿ ಪ್ರಜೆಗೆ 3 ವರ್ಷ ಜೈಲು

0

ರಾಯಚೂರು: ಭಾರತೀಯ ಪ್ರಜೆ ಎಂಬಂತೆ ನಕಲಿ ದಾಖಲೆಗಳನ್ನು ಪಡೆದು ಹಲವು ವರ್ಷಗಳಿಂದ ವಾಸವಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನಿಗೆ ಸಿಂಧನೂರು ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪಾಸ್‌ಪೋರ್ಟ್ ಪಡೆದಿದ್ದರೂ ಇಮಿಗ್ರೇಷನ್ ಪರಿಶೀಲನೆಯ ವೇಳೆ ಸಿಕ್ಕಿಬಿದ್ದಿದ್ದ ಆರೋಪಿಗೆ ಇದೀಗ ಶಿಕ್ಷೆ ಪ್ರಕಟವಾಗಿದೆ.

ಶೋರನಜೀತ್ ಮಂಡಲ್ ಎಂಬಾತ ಅಕ್ರಮವಾಗಿ ಭಾರತ ಪ್ರವೇಶಿಸಿ ಸಿಂಧನೂರು ತಾಲೂಕಿನ ನಿರಾಶ್ರಿತರ ಕೇಂದ್ರದ ವ್ಯಾಪ್ತಿಯಲ್ಲಿ ವಾಸವಾಗಿದ್ದ. ಆಧಾರ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಸೇರಿದಂತೆ ಹಲವು ದಾಖಲೆಗಳನ್ನು ಪಡೆದು ಭಾರತೀಯ ಪ್ರಜೆಯಂತೆ ಬದುಕುತ್ತಿದ್ದನು.

ಈ ದಾಖಲೆಗಳ ಆಧಾರದಲ್ಲಿ ಪಾಸ್‌ಪೋರ್ಟ್ ಕೂಡ ಪಡೆದಿದ್ದ ಆತ, 2018ರಲ್ಲಿ ಬಾಂಗ್ಲಾದೇಶಕ್ಕೆ ತೆರಳುವ ವೇಳೆ ಇಮಿಗ್ರೇಷನ್ ಅಧಿಕಾರಿಗಳ ತಪಾಸಣೆಯಲ್ಲಿ ಸಿಕ್ಕಿಬಿದ್ದಿದ್ದ. ನಂತರ ಆತನ ವಿರುದ್ಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ಆರೋಪಿಗೆ ಮೂರು ವರ್ಷಗಳ ಸಜೆ ಹಾಗೂ ₹5,000 ದಂಡ ವಿಧಿಸಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಪೊಲೀಸ್ ಕಾರ್ಯಾಚರಣೆಗಳು ತೀವ್ರಗೊಂಡಿದ್ದು, ಮಂಗಳೂರು ಮತ್ತು ಸುರತ್ಕಲ್‌ನಲ್ಲಿ ನಡೆದ ಕಾರ್ಯಾಚರಣೆಗಳಲ್ಲೂ ಹಲವು ವಲಸಿಗರನ್ನು ಬಂಧಿಸಿರುವುದು ಗಮನಾರ್ಹವಾಗಿದೆ.

ಮೆಸ್ಸಿ ಮ್ಯಾಜಿಕ್ʼಗೆ ಮಣಿದ ಇಂಗ್ಲೆಂಡ್: ಸತತ ಎರಡನೇ ವಿಶ್ವಕಪ್ ಪ್ರಶಸ್ತಿಯ ಕನಸಿನೊಂದಿಗೆ ಫೈನಲ್ʼಗೆ ಅರ್ಜೆಂಟೀನಾ

0

ನ್ಯೂಯಾರ್ಕ್: 2026ರ ಫಿಫಾ ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ಮತ್ತೊಮ್ಮೆ ಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿಗಾಗಿ ಸ್ಪೇನ್ ತಂಡವನ್ನು ಎದುರಿಸಲಿದೆ. ಅಟ್ಲಾಂಟಾದಲ್ಲಿ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ, ಇಂಗ್ಲೆಂಡ್ ವಿರುದ್ಧ 2-1 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ತಮ್ಮ ಅನುಭವ ಮತ್ತು ಅದ್ಭುತ ಆಟದ ಮೂಲಕ ತಂಡದ ಗೆಲುವಿನ ರೂವಾರಿಯಾಗಿದ್ದರು. ಎರಡು ಮಹತ್ವದ ಅಸಿಸ್ಟ್‌ಗಳನ್ನು ನೀಡಿದ ಅವರು, ಎಂಜೊ ಫೆರ್ನಾಂಡಿಸ್ ಮತ್ತು ಲೌಟಾರೊ ಮಾರ್ಟಿನೆಜ್ ಗಳಿಸಿದ ಗೋಲುಗಳಿಗೆ ಕಾರಣರಾದರು.

ಸೆಮಿಫೈನಲ್‌ನ ಮೊದಲಾರ್ಧದಲ್ಲಿ ಉಭಯ ತಂಡಗಳು ಹಲವು ಅವಕಾಶಗಳನ್ನು ಸೃಷ್ಟಿಸಿಕೊಂಡರೂ ಗೋಲು ದಾಖಲಿಸಲು ವಿಫಲವಾದವು. ಪರಿಣಾಮ ಮೊದಲ 45 ನಿಮಿಷಗಳು ಗೋಲುರಹಿತವಾಗಿ ಅಂತ್ಯಗೊಂಡವು.

ದ್ವಿತೀಯಾರ್ಧದ 55ನೇ ನಿಮಿಷದಲ್ಲಿ ಇಂಗ್ಲೆಂಡ್ ಮುನ್ನಡೆ ಸಾಧಿಸಿತು. ಹ್ಯಾರಿ ಕೇನ್ ನೀಡಿದ ಅದ್ಭುತ ಅಸಿಸ್ಟ್ ಅನ್ನು ಆಂಥೋನಿ ಗಾರ್ಡನ್ ಗೋಲಾಗಿ ಪರಿವರ್ತಿಸಿ ಇಂಗ್ಲೆಂಡ್‌ಗೆ 1-0 ಮುನ್ನಡೆ ತಂದುಕೊಟ್ಟರು.

ಒಂದು ಗೋಲಿನ ಹಿನ್ನಡೆಯಲ್ಲಿದ್ದ ಅರ್ಜೆಂಟೀನಾ ಪಂದ್ಯದ ಕೊನೆಯ ಕ್ಷಣಗಳವರೆಗೆ ಸಮಬಲದ ಗೋಲಿಗಾಗಿ ಹೋರಾಟ ನಡೆಸಿತು. ಅಂತಿಮವಾಗಿ 85ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ನೀಡಿದ ನಿಖರ ಪಾಸ್ ಅನ್ನು ಎಂಜೊ ಫೆರ್ನಾಂಡಿಸ್ ಗೋಲಾಗಿ ಪರಿವರ್ತಿಸಿ ಪಂದ್ಯವನ್ನು 1-1ರ ಸಮಬಲಕ್ಕೆ ತಂದರು.

ಸಮಬಲದ ಗೋಲಿನ ಸಂಭ್ರಮ ತಣಿಯುವ ಮುನ್ನವೇ ಅರ್ಜೆಂಟೀನಾ ಮತ್ತೊಂದು ನಿರ್ಣಾಯಕ ಹೊಡೆತ ನೀಡಿತು. ಮೆಸ್ಸಿ ನೀಡಿದ ಮತ್ತೊಂದು ಅದ್ಭುತ ಅಸಿಸ್ಟ್ ಅನ್ನು ಲೌಟಾರೊ ಮಾರ್ಟಿನೆಜ್ ಗೋಲಾಗಿ ಪರಿವರ್ತಿಸಿ ತಂಡಕ್ಕೆ 2-1ರ ಮುನ್ನಡೆ ತಂದುಕೊಟ್ಟರು. ಕೇವಲ ಮೂರು ನಿಮಿಷಗಳ ಅಂತರದಲ್ಲಿ ಎರಡು ಗೋಲುಗಳನ್ನು ಗಳಿಸಿದ ಅರ್ಜೆಂಟೀನಾ, ಇಂಗ್ಲೆಂಡ್‌ನ ಫೈನಲ್ ಕನಸಿಗೆ ತೆರೆ ಎಳೆದು ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯಿತು.

ಇದೀಗ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ, ವಿಶ್ವಕಪ್ ಪ್ರಶಸ್ತಿಗಾಗಿ ಫೈನಲ್‌ನಲ್ಲಿ ಸ್ಪೇನ್ ತಂಡವನ್ನು ಎದುರಿಸಲಿದ್ದು, ಸತತ ಎರಡನೇ ಬಾರಿ ವಿಶ್ವಕಪ್ ಟ್ರೋಫಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

0

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ ಐದನೇ ತರಗತಿ ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 10ರಂದು ನಡೆದ ಈ ಘಟನೆಯಲ್ಲಿ 12 ವರ್ಷದ ಅರ್ಹನ್ ಪಾಷಾ ಮೃತಪಟ್ಟಿದ್ದಾನೆ.

ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಬಾಲಕ ತನಗೆ ಸುಸ್ತಾಗುತ್ತಿದೆ ಎಂದು ಶಿಕ್ಷಕಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಳಿಕ ತರಗತಿಗೆ ಬಂದು ಬೆಂಚ್ ಮೇಲೆ ಕುಳಿತ ಕೆಲವೇ ಕ್ಷಣಗಳಲ್ಲಿ ಕುಸಿದುಬಿದ್ದಿದ್ದಾನೆ. ಆದರೆ, ಬಾಲಕನ ಆರೋಗ್ಯ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸದೆ ಶಾಲಾ ಸಿಬ್ಬಂದಿ ಹಾಗೂ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕುಸಿದುಬಿದ್ದ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಬದಲು ಸುಮಾರು 45 ನಿಮಿಷಗಳ ಕಾಲ ತರಗತಿ ಕೊಠಡಿಯಲ್ಲೇ ಇರಿಸಿಕೊಂಡಿದ್ದರು ಎಂದು ಪೋಷಕರು ಆರೋಪಿಸಿದ್ದು, ಈ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ನಂತರ ಶಾಲಾ ಆಡಳಿತವು ಕುಟುಂಬಸ್ಥರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಪೋಷಕರು ಶಾಲೆಗೆ ಧಾವಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತಿದ್ದರೆ ಮಗುವಿನ ಜೀವ ಉಳಿಯಬಹುದಿತ್ತು ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೆರಿಕ-ಇರಾನ್ ಉದ್ವಿಗ್ನತೆ ನಡುವೆ ಬಂಗಾರ ದರದಲ್ಲಿ ಇಳಿಕೆ! ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು?

ಬೆಂಗಳೂರು: ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಜಾಗತಿಕ ಆರ್ಥಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನದ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಳಿತ ಮುಂದುವರಿದಿದೆ. ಬುಧವಾರ ಏರಿಕೆ ಕಂಡಿದ್ದ ಚಿನ್ನದ ದರ, ಗುರುವಾರ (ಜುಲೈ 16) ಮತ್ತೆ ಇಳಿಕೆಯಾಗಿದೆ ಎಂದು ಗುಡ್‌ರಿಟರ್ನ್ಸ್ ವರದಿ ತಿಳಿಸಿದೆ.

ಇಂದಿನ ದರದ ಪ್ರಕಾರ, 24 ಕ್ಯಾರೆಟ್ ಚಿನ್ನದ ಒಂದು ಗ್ರಾಂಗೆ 28 ರೂಪಾಯಿ ಇಳಿಕೆಯಾಗಿದ್ದು, ಪ್ರತಿ ಗ್ರಾಂ ಬೆಲೆ 14,329 ರೂಪಾಯಿಗೆ ತಲುಪಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ 280 ರೂಪಾಯಿ ಕುಸಿದು 1,43,290 ರೂಪಾಯಿಯಾಗಿದೆ.

ಇದೇ ವೇಳೆ, 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆ ದಾಖಲಾಗಿದೆ. ಒಂದು ಗ್ರಾಂಗೆ 25 ರೂಪಾಯಿ ಕಡಿಮೆಯಾಗಿದ್ದು, ಪ್ರಸ್ತುತ ಪ್ರತಿ ಗ್ರಾಂ 13,135 ರೂಪಾಯಿಗೆ ಮಾರಾಟವಾಗುತ್ತಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 250 ರೂಪಾಯಿ ಇಳಿದು 1,31,350 ರೂಪಾಯಿಗೆ ತಲುಪಿದೆ.

ಬೆಂಗಳೂರುದಲ್ಲಿ ಇಂದಿನ ದರ

ಬೆಂಗಳೂರು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಪ್ರತಿ ಗ್ರಾಂ ಬೆಲೆ 14,329 ರೂಪಾಯಿಯಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರತಿ ಗ್ರಾಂ ಬೆಳ್ಳಿ 235 ರೂಪಾಯಿಯಲ್ಲೇ ಸ್ಥಿರವಾಗಿದ್ದು, ಪ್ರತಿ ಕೆ.ಜಿ. ಬೆಳ್ಳಿ ಬೆಲೆ 2,35,000 ರೂಪಾಯಿಯಾಗಿದೆ.

ಜುಲೈ ತಿಂಗಳ ಆರಂಭದಲ್ಲಿ 24 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಬೆಲೆ 14,078 ರೂಪಾಯಿಯಷ್ಟಿದ್ದರೆ, ತಿಂಗಳ ಮಧ್ಯಭಾಗದಲ್ಲಿ ಅದು 14,700 ರೂಪಾಯಿವರೆಗೆ ಏರಿಕೆ ಕಂಡಿತ್ತು. ಬಳಿಕ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡು, ಇದೀಗ 14,329 ರೂಪಾಯಿಗೆ ತಲುಪಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ, ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಕೆ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿನ ಏರಿಳಿತ ಚಿನ್ನದ ದರದ ಮೇಲೆ ಪರಿಣಾಮ ಬೀರುತ್ತಿದೆ.

ಹಾರ್ಮುಜ್ ಜಲಸಂಧಿಗೆ ಸಂಬಂಧಿಸಿದ ಸುಂಕದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹೇಳಿಕೆಯಲ್ಲಿ ಬದಲಾವಣೆ ಮಾಡಿದ ಬಳಿಕ ಜಾಗತಿಕ ಷೇರುಪೇಟೆಯಲ್ಲಿ ಅಲ್ಪ ಮಟ್ಟಿನ ಚೇತರಿಕೆ ಕಂಡುಬಂದಿತ್ತು. ಇದರ ಪರಿಣಾಮವಾಗಿ ಚಿನ್ನದ ದರದಲ್ಲೂ ಏರಿಳಿತ ಮುಂದುವರಿದಿದ್ದು, ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದರೆ, ಬೆಳ್ಳಿ ದರ ಸ್ಥಿರವಾಗಿದೆ.

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

0

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.

ಜುಲೈ 9ರಂದು ರೆಸ್ಟೋ ಬಾರ್‌ಗೆ ತೆರಳಿದ್ದ ಮಂಜು ಹಾಗೂ ಅವರ ಸ್ನೇಹಿತರು ಊಟ ಮತ್ತು ಮದ್ಯ ಸೇವಿಸಿದ ಬಳಿಕ ಬಿಲ್ ಪಾವತಿಸುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಹೊರಡುವಾಗ ಅವರನ್ನು ತಡೆದು ಸೆಲ್ಫಿ ಕೇಳಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯಲ್ಲಿ ಮಧ್ಯಪ್ರವೇಶಿಸಿದ ಪಬ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸುತ್ತಿದ್ದಾರೆ.