Home Blog Page 99

ಕಳಪೆ ಆಹಾರ ನೀಡುವ ಹೋಟೆಲ್ʼಗಳಿಗೆ ₹5 ಲಕ್ಷದವರೆಗೆ ದಂಡ: ಅಡುಗೆ ಕೋಣೆಯಲ್ಲಿ ಸಿಸಿಟಿವಿ ಕಡ್ಡಾಯ – ಯು.ಟಿ. ಖಾದರ್ ಎಚ್ಚರಿಕೆ

0

ಬೆಂಗಳೂರು: ಪಿಜಿ ಹಾಗೂ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡುವುದು ಕಂಡುಬಂದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಖಾಸಗಿ ಹಾಸ್ಟೆಲ್‌ಗಳಲ್ಲೂ ಆಹಾರ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಎಚ್ಚರಿಕೆ ನೀಡಿದ್ದಾರೆ.

ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಕರ್ತವ್ಯ ಪ್ರಜ್ಞೆ ಮೆರೆದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಆರೋಗ್ಯ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧಿಕಾರಿಗಳಿಗೆ ಗೌರವ ಸಮರ್ಪಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡಲು ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಪಿಜಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಯುವಜನರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಳಸಿಕೊಂಡು ಹಣ ಗಳಿಸುವ ಪ್ರಯತ್ನ ಮಾಡಬಾರದು. ಪಿಜಿಗಳಲ್ಲಿ ಮತ್ತೆ ಕಳಪೆ ಆಹಾರ ನೀಡುವುದು ಕಂಡುಬಂದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಖಾಸಗಿ ಹಾಸ್ಟೆಲ್‌ಗಳನ್ನೂ ಪರಿಶೀಲನೆ ನಡೆಸಲಾಗುವುದು ಎಂದು ಯು.ಟಿ. ಖಾದರ್‌ ಹೇಳಿದರು.

30 ತಂಡಗಳಿಂದ ಹೋಟೆಲ್‌ಗಳ ತಪಾಸಣೆ

ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುವ ಸ್ಥಳ ಹಾಗೂ ಆಹಾರ ಪದಾರ್ಥಗಳು ಎಲ್ಲಿಂದ ಸರಬರಾಜಾಗುತ್ತವೆ ಎಂಬುದರ ಬಗ್ಗೆಯೂ ತಪಾಸಣೆ ನಡೆಸಲಾಗಿದೆ. ರಾಜ್ಯದಲ್ಲಿ 30 ತಂಡಗಳನ್ನು ರಚಿಸಿ 60ಕ್ಕೂ ಹೆಚ್ಚು ತ್ರೀ-ಸ್ಟಾರ್‌, ಫೈವ್‌-ಸ್ಟಾರ್‌ ಹೋಟೆಲ್‌ಗಳು, 8 ವೇರ್‌ಹೌಸ್‌ಗಳು ಹಾಗೂ 4 ಅಂತಾರಾಷ್ಟ್ರೀಯ ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಈ ವೇಳೆ 30 ಆಹಾರ ಉದ್ದಿಮೆದಾರರಿಗೆ ನೋಟಿಸ್‌ ನೀಡಲಾಗಿದ್ದು, ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಈಗಾಗಲೇ ಕಳಪೆ ಆಹಾರದೊಂದಿಗೆ ಸಿಕ್ಕಿಬಿದ್ದಿರುವ ಹೋಟೆಲ್‌ಗಳಿಗೆ ನೋಟಿಸ್‌ ನೀಡುವುದರ ಜೊತೆಗೆ ₹5 ಲಕ್ಷದವರೆಗೆ ದಂಡ ವಿಧಿಸಲಾಗುವುದು. ದಂಡ ವಿಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರೈಲ್ವೆ ಕ್ಯಾಂಟೀನ್‌, ಮದುವೆ ಮನೆಗಳಲ್ಲೂ ತಪಾಸಣೆ

ಪಿಜಿ ಹಾಗೂ ಖಾಸಗಿ ಹಾಸ್ಟೆಲ್‌ಗಳ ಜೊತೆಗೆ ಬಸ್‌ ನಿಲ್ದಾಣಗಳಲ್ಲಿರುವ ಹೋಟೆಲ್‌ಗಳು, ಮದುವೆ ಮನೆಗಳು ಹಾಗೂ ರೈಲ್ವೆ ಕ್ಯಾಂಟೀನ್‌ಗಳಲ್ಲೂ ಆಹಾರದ ಗುಣಮಟ್ಟ ಪರಿಶೀಲಿಸಲಾಗುವುದು. ವಿಮಾನಗಳಲ್ಲಿ ಪ್ರಯಾಣಿಕರಿಗೆ ನೀಡುವ ಆಹಾರದ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಇದಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಾಕ್ಟೀಸ್‌ ತಂಡವನ್ನು ರಚಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಖಾದರ್‌ ಹೇಳಿದರು.

ಆಹಾರ ಸುರಕ್ಷತಾ ನಿಯಮ ಬದಲಾವಣೆಗೆ ಕೇಂದ್ರಕ್ಕೆ ಮನವಿ

ವಿದೇಶಿ ಕಂಪನಿಗಳ ಚಾಕೊಲೇಟ್‌ಗಳು ಸೇರಿದಂತೆ ಹಲವು ಆಹಾರ ಉತ್ಪನ್ನಗಳು ಭಾರತಕ್ಕೆ ಬರುತ್ತಿವೆ. ಅವುಗಳ ಸಕ್ಕರೆ ಪ್ರಮಾಣ ಸೇರಿದಂತೆ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಕೇಂದ್ರದ ಆಹಾರ ಸುರಕ್ಷತಾ ಕಾಯ್ದೆ ಹಾಗೂ ನಿಯಮಗಳಲ್ಲಿ ಅಗತ್ಯ ಬದಲಾವಣೆ ಮಾಡಬೇಕು. ಈ ಕುರಿತು ಕೇಂದ್ರ ಆಹಾರ ಸಚಿವರಿಗೆ ಮಾಹಿತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಕೂಲ್‌ಡ್ರಿಂಕ್ಸ್‌ಗಳು ಬೇರೆ ದೇಶಗಳಲ್ಲಿ ಒಂದು ರೀತಿಯ ಗುಣಮಟ್ಟ ಹೊಂದಿದ್ದು, ಭಾರತಕ್ಕೆ ಬಂದಾಗ ಅದರ ರುಚಿ ಹಾಗೂ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಬೇರೆ ದೇಶಗಳಲ್ಲಿ ಇರುವ ಗುಣಮಟ್ಟವೇ ಭಾರತದಲ್ಲಿಯೂ ಇರಬೇಕು. ಈ ಕುರಿತು ಚರ್ಚಿಸಲು ಅಂತಾರಾಷ್ಟ್ರೀಯ ಆಲ್‌ ಇಂಡಿಯಾ ಫುಡ್‌ ಸೇಫ್ಟಿ ಕಾನ್ಕ್ಲೇವ್‌ ಆಯೋಜಿಸಲಾಗುವುದು ಎಂದು ಹೇಳಿದರು.

ಹೋಟೆಲ್‌ಗಳ ಮುಂದೆ ಕ್ಯೂಆರ್‌ ಕೋಡ್‌

ಹೋಟೆಲ್‌ಗಳಲ್ಲಿ ಕಂಡುಬರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ಮುಕ್ತವಾಗಿ ದೂರು ನೀಡಲು ಪ್ರತಿ ಹೋಟೆಲ್‌ ಹಾಗೂ ಮೆಡಿಕಲ್‌ ಶಾಪ್‌ಗಳ ಮುಂದೆ ಕ್ಯೂಆರ್‌ ಕೋಡ್‌ ಅಳವಡಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೋಟೆಲ್‌ಗಳಿಗಾಗಿ ಟೋಲ್‌ ಫ್ರೀ ನಂಬರ್‌ ಕೂಡ ಬಿಡುಗಡೆ ಮಾಡಲಾಗುವುದು ಎಂದು ಯು.ಟಿ. ಖಾದರ್‌ ಹೇಳಿದರು. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಯ ವತಿಯಿಂದ ಕ್ಯೂಆರ್‌ ಕೋಡ್‌ ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಯಿತು.

ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ

ಅಡುಗೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದಂತೆ ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸಲಾಗುವುದು. ಹೋಟೆಲ್‌ಗಳ ಅಡುಗೆ ಕೋಣೆಗಳಲ್ಲಿ ಸಿಸಿಟಿವಿ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಈ ಕುರಿತು ಶೀಘ್ರದಲ್ಲೇ ಸೂಚನೆ ನೀಡಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದರು.

ಬಿಜೆಪಿ ಪಕ್ಷಕ್ಕೆ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಗುಡ್ ಬೈ!

0

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನವಾಲಾ ಅವರು ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಪರಿಸ್ಥಿತಿ ಹಾಗೂ ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಟೆಲಿವಿಷನ್‌ ಚರ್ಚೆಗಳಲ್ಲಿ ಬಿಜೆಪಿಯ ಪ್ರಮುಖ ಹಾಗೂ ಹೆಚ್ಚು ಕಾಣಿಸಿಕೊಳ್ಳುವ ವಕ್ತಾರರಲ್ಲೊಬ್ಬರಾಗಿದ್ದ ಶೆಹಜಾದ್‌ ಪೂನವಾಲಾ, ಜುಲೈ 30ರಂದು ಮೊದಲ ಬಾರಿಗೆ ರಾಜೀನಾಮೆ ಪತ್ರವನ್ನು ಪಕ್ಷಕ್ಕೆ ಕಳುಹಿಸಿದ್ದರು. ಆದರೆ, ಬಿಜೆಪಿ ಅವರ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಕ್ಷದ ವತಿಯಿಂದ ಸಲಹೆ ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ದೀರ್ಘ ಹಾಗೂ ಕಠಿಣ ಚಿಂತನೆಯ ಬಳಿಕ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿರುವುದಾಗಿ ಶೆಹಜಾದ್‌ ಪೂನವಾಲಾ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ನಿತಿನ್‌ ನಬಿನ್‌ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ, ರಾಷ್ಟ್ರೀಯ ವಕ್ತಾರ ಸ್ಥಾನ ಹಾಗೂ ಬಿಜೆಪಿಯ ಸಕ್ರಿಯ ಪ್ರಾಥಮಿಕ ಸದಸ್ಯತ್ವದಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ತಮ್ಮ ರಾಜೀನಾಮೆ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ನಿತಿನ್‌ ನಬಿನ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌. ಸಂತೋಷ್‌ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಶೆಹಜಾದ್‌ ಪೂನವಾಲಾ ಕೃತಜ್ಞತೆ ಸಲ್ಲಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಪಕ್ಷ ನೀಡಿದ ವೇದಿಕೆ ಹಾಗೂ ಅವಕಾಶಗಳಿಗಾಗಿ ಬಿಜೆಪಿ ನಾಯಕರಿಗೆ ಧನ್ಯವಾದ ಅರ್ಪಿಸಿರುವ ಅವರು, ಪ್ರೀತಿ, ವಾತ್ಸಲ್ಯ ಹಾಗೂ ಅತ್ಯುನ್ನತ ಗೌರವದ ಭಾವನೆಯೊಂದಿಗೆ ಪಕ್ಷಕ್ಕೆ ಆಭಾರಿಯಾಗಿರುವುದಾಗಿ ತಿಳಿಸಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಶೆಹಜಾದ್‌ ಪೂನವಾಲಾ ಅವರು ತಮ್ಮ ರಾಜಕೀಯ ಪ್ರಯಾಣವನ್ನು ಕಾಂಗ್ರೆಸ್‌ನೊಂದಿಗೆ ಆರಂಭಿಸಿದ್ದರು. ಬಳಿಕ ಬಿಜೆಪಿ ಸೇರ್ಪಡೆಯಾಗಿ ಪಕ್ಷದ ಪ್ರಮುಖ ರಾಷ್ಟ್ರೀಯ ವಕ್ತಾರರಾಗಿ ಗುರುತಿಸಿಕೊಂಡಿದ್ದರು. ಇದೀಗ ಬಿಜೆಪಿಗೆ ರಾಜೀನಾಮೆ ನೀಡಿರುವ ಅವರ ಮುಂದಿನ ರಾಜಕೀಯ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

0

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಅಭಿನವ್‌ (38) ಹಾಗೂ ಅವರ ಪುತ್ರ ಯದುವೀರ್‌ (5) ಎಂದು ಗುರುತಿಸಲಾಗಿದೆ.

ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಘಟನೆ ನಡೆದ ಸಂದರ್ಭದಲ್ಲಿ ಮೃತ ಅಭಿನವ್‌ ಅವರ ಪತ್ನಿ ಪಕ್ಕದ ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಈ ವಿಚಾರವೂ ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಪೊಲೀಸರು ಮೃತರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣವಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ತಂದೆ-ಮಗನ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್‌ ತನಿಖೆಯಿಂದ ತಿಳಿದುಬರಬೇಕಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಸಾವಿನ ಹಿಂದಿನ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ತನಿಖೆಯ ಬಳಿಕ ಹೊರಬರಬೇಕಿದೆ.

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

0

ಬೆಂಗಳೂರು: ಚಿನ್ನದ ಬೆಲೆ ಏರಿಕೆ ಆಗಸ್ಟ್ ಮೂರನೇ ವಾರದಲ್ಲೂ ಮುಂದುವರಿದಿದೆ. ಡಾಲರ್ ಮೌಲ್ಯ ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚಾಗಿದ್ದು, ಸತತ ಮೂರನೇ ದಿನವೂ ಚಿನ್ನದ ದರ ಏರಿಕೆಯಾಗಿದೆ. ಗುಡ್‌ರಿಟರ್ನ್ಸ್ ವರದಿ ಮಾಡಿರುವ ದರದ ಪ್ರಕಾರ, ಸೋಮವಾರ, ಆಗಸ್ಟ್ 17, 2026ರಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ದಾಖಲಾಗಿದೆ.

24 ಕ್ಯಾರೆಟ್ ಚಿನ್ನದ 1 ಗ್ರಾಂ ದರದಲ್ಲಿ ₹53 ಏರಿಕೆಯಾಗಿದ್ದು, ಇದೀಗ ₹15,566ಕ್ಕೆ ತಲುಪಿದೆ. 10 ಗ್ರಾಂ ಚಿನ್ನದ ಬೆಲೆ ₹530 ಹೆಚ್ಚಳವಾಗಿದ್ದು, ₹1,55,660ಕ್ಕೆ ಏರಿಕೆಯಾಗಿದೆ.

ಇನ್ನು 22 ಕ್ಯಾರೆಟ್ ಚಿನ್ನದ 1 ಗ್ರಾಂ ದರದಲ್ಲಿ ₹50 ಏರಿಕೆಯಾಗಿದ್ದು, ಪ್ರಸ್ತುತ ₹14,270ಕ್ಕೆ ತಲುಪಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹500 ಹೆಚ್ಚಳವಾಗಿ ₹1,42,700ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ 1 ಗ್ರಾಂ ಬೆಲೆ ₹15,566 ಇದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ಗ್ರಾಂ ಬೆಳ್ಳಿ ₹250ರಷ್ಟಿದ್ದು, ಒಂದು ಕೆ.ಜಿ. ಬೆಳ್ಳಿಯ ಬೆಲೆ ₹2,50,000 ಇದೆ.

ಡಾಲರ್ ಮೌಲ್ಯ ಇಳಿಕೆಯಾಗಿರುವುದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಖರೀದಿದಾರರಿಗೆ ತುಸು ಅಗ್ಗವಾಗಿದ್ದು, ಬೇಡಿಕೆ ಹೆಚ್ಚಾಗಿದೆ. ಇದರಿಂದ ಚಿನ್ನದ ದರ ಏರಿಕೆಗೆ ಮತ್ತಷ್ಟು ಬೆಂಬಲ ಸಿಕ್ಕಿದೆ.

ಇದರ ಜೊತೆಗೆ ಅಂತರರಾಷ್ಟ್ರೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಣದುಬ್ಬರದ ಭೀತಿ ತಗ್ಗಿರುವುದು ಹಾಗೂ ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಿಸುವ ಸಾಧ್ಯತೆ ಕಡಿಮೆಯಾಗಿರುವ ನಿರೀಕ್ಷೆಯೂ ಚಿನ್ನದ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.

ಅಮೆರಿಕ-ಇರಾನ್ ನಡುವಿನ ಒಪ್ಪಂದ ಅಂತಿಮವಾಗದ ಹಿನ್ನೆಲೆಯಲ್ಲಿ ಮುಂದುವರಿದಿರುವ ಅನಿಶ್ಚಿತತೆಯೂ ಹೂಡಿಕೆದಾರರನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸಲಾಗುವ ಚಿನ್ನದತ್ತ ಆಕರ್ಷಿಸುತ್ತಿದೆ. ಈ ಎಲ್ಲ ಅಂಶಗಳಿಂದಾಗಿ ಚಿನ್ನದ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ.

ತಾರಾಪೀಠ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ನಿದ್ದೆಯಲ್ಲಿದ್ದ 7 ಮಂದಿ ಸಜೀವ ದಹನ

0

ಕೋಲ್ಕತ್ತ: ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ಪ್ರಸಿದ್ಧ ತಾರಾಪೀಠದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರಾವಣ ಮಾಸದ ಸೋಮವಾರದ ಹಿನ್ನೆಲೆಯಲ್ಲಿ ದೇವಾಲಯ ಪಟ್ಟಣದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ಹೋಟೆಲ್‌ನಲ್ಲಿ ಜನಸಂದಣಿ ಹೆಚ್ಚಾಗಿತ್ತು.

ತಾರಾಪೀಠ ಪೊಲೀಸ್ ಠಾಣೆಯಿಂದ ಕೆಲವೇ ಅಂತರದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್ ಬಿದೇಶಿನಿಯ ನೆಲಮಹಡಿಯಲ್ಲಿ ಬೆಳಗ್ಗೆ ಸುಮಾರು 5 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ವೇಳೆ ಬಹುತೇಕ ಅತಿಥಿಗಳು ಗಾಢ ನಿದ್ದೆಯಲ್ಲಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಅತಿಥಿಗಳು ಹೊರಬರಲು ಪರದಾಡಿದ್ದಾರೆ.

ದಟ್ಟ ಹೊಗೆಯಿಂದ ಉಸಿರಾಟಕ್ಕೂ ತೊಂದರೆ:

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ರಾಂಪುರಹಾಟ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಅಗ್ನಿ ಅವಘಡದಿಂದ ಪಾರಾದ ಅತಿಥಿಯೊಬ್ಬರು, ಕ್ಷಣಾರ್ಧದಲ್ಲಿ ಇಡೀ ಹೋಟೆಲ್ ಹೊಗೆಯಿಂದ ತುಂಬಿಕೊಂಡಿತ್ತು. ಉಸಿರಾಡಲು ಸಾಧ್ಯವಾಗದೆ ಹೊರಹೋಗುವ ದಾರಿ ಹುಡುಕಲು ಪರದಾಡಬೇಕಾಯಿತು ಎಂದು ತಿಳಿಸಿದ್ದಾರೆ.

ಹೋಟೆಲ್ ಆಡಳಿತದ ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಆದರೆ ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಘಟನೆ ಬಳಿಕ ಸ್ಥಳೀಯರು, ಸ್ವಯಂಸೇವಕರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಳೆಯ ಕಾರಣ ಬಹುತೇಕ ಅತಿಥಿಗಳು ನಿದ್ದೆಯಲ್ಲಿದ್ದರಿಂದ ಆರಂಭದಲ್ಲಿ ಬೆಂಕಿಯ ತೀವ್ರತೆ ಅರಿವಾಗಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಹಾರದ ಶಿವ ದೇವಾಲಯದಲ್ಲಿ ಭೀಕರ ಕಾಲ್ತುಳಿತ: ಬ್ಯಾರಿಕೇಡ್ ಮುರಿದು 7 ಭಕ್ತರು ಬಲಿ

0

ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯ ಪ್ರಸಿದ್ಧ ಅಶೋಕ ಧಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೂರನೇ ಸೋಮವಾರದಂದು ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 7 ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಶಿವನಿಗೆ ಜಲಾಭಿಷೇಕ ಸಲ್ಲಿಸಲು ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವಾಲಯದತ್ತ ಹರಿದು ಬಂದಿದ್ದರು. ಬೆಳಗ್ಗೆ 6.30ರಿಂದ 6.45ರ ನಡುವೆ ಸಮೀಪದ ರೈಲು ನಿಲ್ದಾಣಕ್ಕೆ ಎರಡು ರೈಲುಗಳು ಬಂದ ಬಳಿಕ ಭಕ್ತರ ಸಂಖ್ಯೆ ಏಕಾಏಕಿ ಹೆಚ್ಚಾಗಿ, ಸುಮಾರು 50 ಸಾವಿರಕ್ಕೂ ಹೆಚ್ಚು ಜನ ದೇವಾಲಯದ ಆವರಣದಲ್ಲಿ ಸೇರಿದ್ದರು.

ಜನದಟ್ಟಣೆ ಹೆಚ್ಚಿದ ಪರಿಣಾಮ ದೇವಾಲಯದ ಬ್ಯಾರಿಕೇಡ್‌ನ ಒಂದು ಭಾಗ ಮುರಿದು ಬಿದ್ದಿದೆ. ಇದರಿಂದ ಭಕ್ತರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಕ್ಷಣಾರ್ಧದಲ್ಲೇ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಲಖಿಸರಾಯ್ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಘಟನೆಯ ವೇಳೆ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಿದ್ದಿದ್ದು, ಅದರಲ್ಲಿ ವಿದ್ಯುತ್ ಹರಿಯುತ್ತಿದೆ ಎಂಬ ವದಂತಿ ಹರಡಿತ್ತು. ಈ ಸುದ್ದಿ ಕೇಳಿ ಭಕ್ತರು ದಿಕ್ಕಾಪಾಲಾಗಿ ಓಡತೊಡಗಿದ್ದು, ಹಲವರು ಕೆಳಗೆ ಬಿದ್ದು ತುಳಿತಕ್ಕೆ ಸಿಲುಕಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ, ದುರಂತಕ್ಕೆ ನಿಖರ ಕಾರಣ ಏನು ಎಂಬುದನ್ನು ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ.

ಗಾಯಗೊಂಡವರನ್ನು ಲಖಿಸರಾಯ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರಲ್ಲಿ ಹಾಗೂ ಗಾಯಾಳುಗಳಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಘಟನೆ ಬಳಿಕ ಪೊಲೀಸರು, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

2019ರಲ್ಲೂ ನಡೆದಿತ್ತು ಕಾಲ್ತುಳಿತ:

ಅಶೋಕ ಧಾಮ ದೇವಾಲಯವು ಶ್ರಾವಣ ಮಾಸದಲ್ಲಿ ಲಕ್ಷಾಂತರ ಭಕ್ತರನ್ನು ಸೆಳೆಯುವ ಪ್ರಮುಖ ಶಿವ ಕ್ಷೇತ್ರವಾಗಿದೆ. ಇದೇ ದೇವಾಲಯದಲ್ಲಿ 2019ರಲ್ಲೂ ಅತಿಯಾದ ಜನದಟ್ಟಣೆಯಿಂದ ಕಾಲ್ತುಳಿತ ಸಂಭವಿಸಿ ಓರ್ವ ಭಕ್ತ ಮೃತಪಟ್ಟಿದ್ದರೆ, ಹಲವರು ಗಾಯಗೊಂಡಿದ್ದರು.

ವಿಜಯ್ ಸರ್ಕಾರದಲ್ಲಿ 2%–4% ಕಮಿಷನ್ ವಸೂಲಿ: ತಮಿಳುನಾಡು ಸಚಿವರ ವಿರುದ್ಧ ಅಣ್ಣಾಮಲೈ ಬಾಂಬ್!

0

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಗಂಭೀರ ಆರೋಪ ಮಾಡಿದ್ದಾರೆ.

ಸರ್ಕಾರದ ಕೆಲ ಸಚಿವರು ಸರ್ಕಾರಿ ಟೆಂಡರ್‌ಗಳಲ್ಲಿ ಗುತ್ತಿಗೆದಾರರಿಂದ 2% ರಿಂದ 4% ವರೆಗೆ ಕಮಿಷನ್ ಕೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ‘ವೀ ದಿ ಲೀಡರ್ಸ್’ ಸಂಘಟನೆ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅಣ್ಣಾಮಲೈ, ಮುಖ್ಯಮಂತ್ರಿ ವಿಜಯ್ ಭ್ರಷ್ಟಾಚಾರದ ವಿರುದ್ಧ ನಿಲುವು ಹೊಂದಿದ್ದಾರೆ ಎಂದು ಹೇಳಿಕೊಂಡರೂ, ಅವರ ಸಂಪುಟದ ಕೆಲ ಸಚಿವರ ನಡೆ ಅದಕ್ಕೆ ವಿರುದ್ಧವಾಗಿದೆ ಎಂದು ಟೀಕಿಸಿದರು.

‘ಈಗ ಕಮಿಷನ್ ಕೇಳಲು ಆರಂಭಿಸಿದ್ದಾರೆ’:

ಈ ಹಿಂದೆ ಪ್ರಮುಖ ಸರ್ಕಾರಿ ಟೆಂಡರ್‌ಗಳಲ್ಲಿ ಕಿಕ್‌ಬ್ಯಾಕ್ ಪಡೆಯುವ ಪದ್ಧತಿ ಇರಲಿಲ್ಲ. ಆದರೆ ಈಗ ಕೆಲ ಸಚಿವರು ಗುತ್ತಿಗೆದಾರರಿಂದ 2% ರಿಂದ 4% ವರೆಗೆ ಕಮಿಷನ್ ಕೇಳಲು ಆರಂಭಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದರು.

ಭ್ರಷ್ಟಾಚಾರದ ವಿರುದ್ಧ ಮುಖ್ಯಮಂತ್ರಿ ನಿಲುವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಸರ್ಕಾರದೊಳಗಿನ ಕೆಲ ಸಚಿವರ ನಡೆ ಬೇರೆ ಚಿತ್ರಣವನ್ನು ತೋರಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಅಣ್ಣಾಮಲೈ ಅವರ ಈ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅವರ ಆರೋಪಗಳಿಗೆ ಸರ್ಕಾರದಿಂದ ಅಧಿಕೃತ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ಮನೆಯೊಳಗೆ ನುಗ್ಗಿ ಬೆದರಿಸಿ ದರೋಡೆ: ಹಾಸನದಲ್ಲಿ 8 ಮಂದಿಯನ್ನು ಬಂಧಿಸಿದ ಪೊಲೀಸರು!

0

ಹಾಸನ: ಜನರು ಮನೆಯಲ್ಲಿದ್ದಾಗಲೇ ಬೆದರಿಸಿ ದರೋಡೆ ನಡೆಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ದರೋಡೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡ ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆಗಳ ಜಾಡು ಹಿಡಿದು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದೆ.

ಪೊಲೀಸರ ಮಾಹಿತಿ ಪ್ರಕಾರ, ಜೂನ್ 2ರಂದು ಆಲೂರು ತಾಲೂಕಿನ ಮಣಿಪುರ ಗ್ರಾಮದ ನಿವೃತ್ತ ನೌಕರ ಚಂದ್ರಶೇಖರಯ್ಯ ಅವರ ಮನೆಯಲ್ಲಿ ಮೊದಲ ದರೋಡೆ ನಡೆದಿತ್ತು. ಬಳಿಕ ಜುಲೈ 22ರಂದು ಈಶ್ವರಹಳ್ಳಿ ಕೂಡುಗೆ ಗ್ರಾಮದ ಮಂಜೆಗೌಡ ಅವರ ಮನೆಯಲ್ಲಿ ಮತ್ತೊಂದು ದರೋಡೆ ನಡೆದಿತ್ತು.

ಎರಡೂ ಪ್ರಕರಣಗಳಲ್ಲಿ ಸುಮಾರು 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಲಾಗಿತ್ತು. ಆರೋಪಿಗಳು ರಾಷ್ಟ್ರೀಯ ಹೆದ್ದಾರಿ-75ರ ಪಕ್ಕದಲ್ಲಿರುವ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಿಸಿಟಿವಿ, ಮೊಬೈಲ್ ಜಾಡು ಹಿಡಿದು ಕಾರ್ಯಾಚರಣೆ:

ಪ್ರಕರಣದ ಗಂಭೀರತೆ ಅರಿತ ಎಸ್‌ಪಿ ಶುಭಾನ್ವಿತ ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಆಗಸ್ಟ್ 7ರಂದು ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ದಕ್ಷಿಣ ಕನ್ನಡದ ಅಶ್ರಫ್, ಇಬ್ರಾಹಿಂ, ಹಾವೇರಿಯ ಈರಣ್ಣ, ಹಮೀದ್, ಸಂಕೇತ್, ರಘು, ಹಾಗೂ ಹಾಸನ ಮೂಲದ ಸುಲೈಮಾನ್ ಮತ್ತು ಭರತ್ ಎಂದು ಗುರುತಿಸಲಾಗಿದೆ.

ಬಂಧಿತ ಇಬ್ರಾಹಿಂ ಮತ್ತು ಈರಣ್ಣ ವಿರುದ್ಧ ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ನಾಗರ ಪಂಚಮಿ 2026: ಕರಾವಳಿಯಲ್ಲಿ ಈ ಹಬ್ಬ ಏಕೆ ಇಷ್ಟು ವಿಶೇಷ? ಇಲ್ಲಿದೆ ಅಪರೂಪದ ಸಂಪ್ರದಾಯ!

0

ಶ್ರಾವಣ ಮಾಸದ ಪಂಚಮಿ ತಿಥಿಯಂದು ಆಚರಿಸುವ ನಾಗರ ಪಂಚಮಿ ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ.

ನಾಗದೇವರ ಆರಾಧನೆಗೆ ಮೀಸಲಾದ ಈ ಹಬ್ಬವನ್ನು ಕರ್ನಾಟಕದಾದ್ಯಂತ ಆಚರಿಸಿದರೂ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಕರಾವಳಿ ಭಾಗದಲ್ಲಿ ವಿಶಿಷ್ಟ ಸಂಪ್ರದಾಯಗಳೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತದೆ.

ಕರಾವಳಿಯ ನಾಗಬನಗಳು, ನಾಗಸ್ಥಾನಗಳು ಹಾಗೂ ಪುರಾತನ ದೇವಾಲಯಗಳಲ್ಲಿ ಬೆಳಗಿನ ಜಾವದಿಂದಲೇ ಸಾವಿರಾರು ಭಕ್ತರು ಸೇರಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಅಕ್ಕಿ, ಹಾಲು, ಎಳನೀರು, ತೆಂಗಿನಕಾಯಿ, ಅರಿಶಿನ, ಹೂವು, ಜೇನುತುಪ್ಪ ಸೇರಿದಂತೆ ವಿವಿಧ ಕಾಣಿಕೆಗಳನ್ನು ಅರ್ಪಿಸಿ ಆಶೀರ್ವಾದ ಪಡೆಯುತ್ತಾರೆ.

ಪರಶುರಾಮ ಮತ್ತು ನಾಗದೇವರ ಪೌರಾಣಿಕ ಕಥೆ:

ತುಳುನಾಡಿನಲ್ಲಿ ಪ್ರಸಿದ್ಧವಾಗಿರುವ ನಂಬಿಕೆಯ ಪ್ರಕಾರ, ಪರಶುರಾಮನು ಸಮುದ್ರದಿಂದ ಪಡೆದ ಭೂಮಿಯನ್ನು ಫಲವತ್ತಾಗಿಸಲು ನಾಗರಾಜನನ್ನು ಬೇಡಿಕೊಂಡನು. ನಾಗಗಳು ಪಾತಾಳದಿಂದ ಸಿಹಿನೀರು ಹಾಗೂ ಫಲವತ್ತಾದ ಮಣ್ಣನ್ನು ತಂದು ತುಳುನಾಡನ್ನು ಸಮೃದ್ಧಗೊಳಿಸಿದವು. ಈ ವೇಳೆ ಅವುಗಳಿಗೆ ಗಾಯಗಳಾದ ಕಾರಣ ತುಳುವರು ಅರಿಶಿನ ಹಚ್ಚಿ ಆರೈಕೆ ಮಾಡಿ, ನಾಗದೇವರನ್ನು ಕುಲದೇವರಾಗಿ ಪೂಜಿಸುವ ಸಂಪ್ರದಾಯ ಬೆಳೆಸಿದರು ಎನ್ನಲಾಗಿದೆ.

ನಾಗಬನಗಳಲ್ಲಿ ವಿಶೇಷ ಪೂಜೆ:

ಕರಾವಳಿಯ ನಾಗಬನಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ, ಪರಿಸರ ಸಂರಕ್ಷಣೆಯ ಪ್ರತೀಕಗಳಾಗಿವೆ. ಈ ಪವಿತ್ರ ವನಗಳಲ್ಲಿ ಮರಗಳನ್ನು ಕಡಿಯದೆ ಜೀವವೈವಿಧ್ಯತೆಯನ್ನು ಕಾಪಾಡುವ ಸಂಪ್ರದಾಯ ಇಂದಿಗೂ ಮುಂದುವರಿದಿದೆ. ಪಂಚಮಿಯಂದು ಸೂರ್ಯೋದಯಕ್ಕೂ ಮುನ್ನವೇ ಭಕ್ತರು ನಾಗರಕಲ್ಲಿಗೆ ಹಾಲು, ಎಳನೀರು, ಜೇನುತುಪ್ಪ, ಅರಿಶಿನ ಹಾಗೂ ಹೂವುಗಳನ್ನು ಅರ್ಪಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ಅರಿಶಿನ ಎಲೆ ಸಿಹಿ ಕಡುಬು ವಿಶೇಷ:

ನಾಗರ ಪಂಚಮಿಯಂದು ಕರಾವಳಿಯಲ್ಲಿ ಆಹಾರಕ್ಕೂ ವಿಶೇಷ ಸ್ಥಾನವಿದೆ. ಈ ದಿನ ಕರಿದ ಅಥವಾ ಉಪ್ಪಿನ ತಿನಿಸುಗಳನ್ನು ಮಾಡುವುದಿಲ್ಲ. ಬದಲಾಗಿ ಎಳ್ಳುಂಡೆ ಹಾಗೂ ಅರಿಶಿನ ಎಲೆ ಸಿಹಿ ಕಡುಬು ತಯಾರಿಸಿ ದೇವರಿಗೆ ನೈವೇದ್ಯ ಅರ್ಪಿಸಲಾಗುತ್ತದೆ. ತುಳುನಾಡಿನಲ್ಲಿ ಅರಿಶಿನ ಎಲೆ ಕಡುಬು ಈ ಹಬ್ಬದ ಪ್ರಮುಖ ವಿಶೇಷತೆಯಾಗಿ ಪರಿಗಣಿಸಲಾಗಿದೆ.

ಮೂಲ ನಾಗದೇವರ ದರ್ಶನದ ಸಂಪ್ರದಾಯ:

ನಗರಗಳಲ್ಲಿ ನೆಲೆಸಿರುವ ಕರಾವಳಿ ಮೂಲದ ಕುಟುಂಬಗಳು ನಾಗರ ಪಂಚಮಿಯಂದು ತಮ್ಮ ಊರಿಗೆ ತೆರಳಿ ಮೂಲ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಇಂದಿಗೂ ಪಾಲಿಸುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ಅನೇಕ ದೇವಾಲಯಗಳಲ್ಲಿ ಈ ದಿನ ನಾಗಾರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತದೆ.

ಶಾಲೆ ಪಕ್ಕದಲ್ಲೇ ಬಂಡೆ ಒಡೆಯಲು ಅಕ್ರಮ ಸ್ಫೋಟ? ಬೆಂಗಳೂರಿನಲ್ಲಿ 800 ಕೆಜಿಗೂ ಹೆಚ್ಚು ಜಿಲೆಟಿನ್ ಸೀಜ್

0

ಬೆಂಗಳೂರು: ನಗರದ ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಯಲ್ಲಿ ಅಕ್ರಮವಾಗಿ ಜಿಲೆಟಿನ್ ಬಳಸಿ ಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂದೂರು ಪೊಲೀಸರು ಕಾರ್ಯಾಚರಣೆ ನಡೆಸಿ 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಭೋಗನಹಳ್ಳಿಯಲ್ಲಿ ಆದರ್ಶ ಕಂಪನಿಯ ಕಟ್ಟಡ ಕಾಮಗಾರಿ ನಡೆಯುತ್ತಿರುವ ವೇಳೆ ಸ್ಥಳದಲ್ಲಿ ದೊಡ್ಡ ಕಲ್ಲಿನ ಬಂಡೆಗಳು ಪತ್ತೆಯಾಗಿದ್ದವು. ಅವುಗಳನ್ನು ತೆರವುಗೊಳಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್ ನಡೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಿರ್ಮಾಣ ಸ್ಥಳದ ಸಮೀಪದಲ್ಲೇ ಶಾಲೆ ಇರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ರಾತ್ರಿ 12 ಗಂಟೆಯ ಬಳಿಕ ಸ್ಫೋಟ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ನಿವಾಸಿಗಳು, ಮಕ್ಕಳ ಸುರಕ್ಷತೆಗೂ ಅಪಾಯ ಉಂಟಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಹಲವು ಬಾರಿ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದರೂ ಸೂಕ್ತ ಕ್ರಮವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಅರ್ಥ್‌ವರ್ಕ್ ಕೆಲಸ ಮಾಡುವ ಸತೀಶ್ ನಾಯಕ್, ಶ್ರೀನಿವಾಸ ಅರ್ಥ್ ಮೂವರ್ಸ್ ಮಾಲೀಕ ಅರುಣ್ ಕುಮಾರ್ ತಮ್ಮನ್ನು ಭೋಗನಹಳ್ಳಿಯ ವಿವಿಧ ಸರ್ವೆ ನಂಬರಿನ ಕಾಮಗಾರಿಗೆ ನೇಮಿಸಿದ್ದಾಗಿ ತಿಳಿಸಿದ್ದಾರೆ.

ಕಾಮಗಾರಿ ವೇಳೆ ದೊಡ್ಡ ಬಂಡೆಗಳು ಪತ್ತೆಯಾಗಿದ್ದರಿಂದ ಅವುಗಳನ್ನು ತೆರವುಗೊಳಿಸಲು ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಬಳಸುವಂತೆ ಒತ್ತಡ ಹೇರಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಕೆಲಸದಿಂದ ದೂರವಿಟ್ಟು, ಹಣ ನೀಡದೆ ಪ್ರಾಣ ಬೆದರಿಕೆ ಹಾಕಲಾಗಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀನಿವಾಸ ಅರ್ಥ್ ಮೂವರ್ಸ್ ಮಾಲೀಕ, ಸೈಟ್ ಇನ್‌ಚಾರ್ಜ್, ಸೈಟ್ ಎಂಜಿನಿಯರ್, ಆದರ್ಶ ಡೆವಲಪರ್ಸ್‌ನ ಮಾಲೀಕರು ಹಾಗೂ ಗುತ್ತಿಗೆದಾರರು ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಬಳಸುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಸ್ಥಳೀಯರ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಳ್ಳಂದೂರು ಪೊಲೀಸರು ಕಾರ್ಯಾಚರಣೆ ನಡೆಸಿ 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ. ನಿರ್ಮಾಣ ಸ್ಥಳದಲ್ಲಿ ಸ್ಫೋಟಕ ವಸ್ತುಗಳನ್ನು ಯಾವ ರೀತಿಯಲ್ಲಿ ಸಂಗ್ರಹಿಸಲಾಗಿತ್ತು, ಅವುಗಳ ಬಳಕೆಗೆ ಅಗತ್ಯ ಅನುಮತಿ ಇತ್ತೇ ಹಾಗೂ ನಿಜವಾಗಿಯೂ ಬ್ಲಾಸ್ಟಿಂಗ್ ನಡೆಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.